ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ವಿಶ್ವವಿದ್ಯಾಲಯ ಮತ್ತು ಇತರ ಕೇಂದ್ರೀಯ ವಿಶ್ವವಿದ್ಯಾಲಯಗಳ ಮುಂಬರುವ ಅಂತಿಮ ವರ್ಷದ ಪರೀಕ್ಷೆಯನ್ನು ನಮ್ಮ ಯುವಕರ ಹಿತದೃಷ್ಟಿಯಿಂದ ಮತ್ತು ಭವಿಷ್ಯದ ದೃಷ್ಟಿಯಿಂದ ತಾವೇ ವೈಯಕ್ತಿಕವಾಗಿ ಮಧ್ಯಪ್ರವೇಶಿಸಿ ರದ್ದುಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕೋರಿದ್ದಾರೆ.
ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಎಲ್ಲಾ ರಾಜ್ಯ ವಿಶ್ವವಿದ್ಯಾಲಯ ಪರೀಕ್ಷೆಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ ಕೆಲವೇ ಗಂಟೆಗಳ ನಂತರ ಈ ಕುರಿತು ಟ್ವೀಟ್ ಮಾಡಿರುವ ಕೇಜ್ರಿವಾಲ್ ತಮ್ಮ ಮನವಿಯನ್ನು ಸಲ್ಲಿಸಿದ್ದಾರೆ.
ವಿಶ್ವವಿದ್ಯಾಲಯಗಳು ನಿರ್ಧರಿಸಿದ ಮೌಲ್ಯಮಾಪನ ಮತ್ತು ನಿಯತಾಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ಪದವಿ ನೀಡಲಾಗುವುದು ಎಂದು ಸಿಸೋಡಿಯ ಹೇಳಿದರು.
“ಕೊರೊನಾ ಸಾಂಕ್ರಾಮಿಕದಿಂದ ಉಂಟಾದ ಪ್ರಮುಖ ಅಡೆತಡೆಗಳ ದೃಷ್ಟಿಯಲ್ಲಿ, ದೆಹಲಿ ಸರ್ಕಾರವು ಅಂತಿಮ ಪರೀಕ್ಷೆಗಳು ಸೇರಿದಂತೆ ಎಲ್ಲಾ ದೆಹಲಿ ರಾಜ್ಯ ವಿಶ್ವವಿದ್ಯಾಲಯ ಪರೀಕ್ಷೆಗಳನ್ನು ರದ್ದುಗೊಳಿಸಲು ನಿರ್ಧರಿಸಿದೆ” ಎಂದು ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ. ದೆಹಲಿಯಾದ್ಯಂತ ವಿವಿಧ ರಾಜ್ಯ ವಿಶ್ವವಿದ್ಯಾಲಯಗಳಲ್ಲಿ ಸೆಮಿಸ್ಟರ್ ಮತ್ತು ಟರ್ಮಿನಲ್ ಪರೀಕ್ಷೆಗಳಿಗೆ ಈ ಕ್ರಮ ಅನ್ವಯವಾಗುತ್ತದೆ.
ಪತ್ರಿಕಾಗೋಷ್ಠಿಯಲ್ಲಿ, ದೆಹಲಿಯ ಶಿಕ್ಷಣ ಸಚಿವಾಲಯವನ್ನು ಸಹ ನಿರ್ವಹಿಸುವ ಸಿಸೋಡಿಯಾ, ಕೊರೊನಾ ಬಿಕ್ಕಟ್ಟಿನ ಮಧ್ಯೆ ಶಾಲೆಗಳು ಮತ್ತು ಕಾಲೇಜುಗಳನ್ನು ಮುಚ್ಚಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ: ಸೆಪ್ಟಂಬರ್ನಲ್ಲಿ ಸ್ನಾತಕೋತ್ತರ ಹಾಗೂ ಪದವಿ ಪರೀಕ್ಷೆಗಳು: ಯುಜಿಸಿ