ರಾಜ್ಯದಲ್ಲಿ ಸೋಮವಾರದಿಂದ ಶಾಲಾ-ಕಾಲೇಜು ತೆರೆಯಲಿದ್ದು, ಆದರೆ ತರಗತಿಗಳು ಆರಂಭವಾಗುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದರು. ಆದರೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಹಿಂಪಡೆಯಲಾಗಿದೆ. ಕೇಂದ್ರ ಸರ್ಕಾರದಿಂದ ಮುಂದಿನ ಆದೇಶ ಬರುವವರೆಗೂ ಶಾಲೆ ತೆರೆಯುವುದಿಲ್ಲ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
“ಸೆಪ್ಟೆಂಬರ್ 21 ರಿಂದ ಶಿಕ್ಷಕರು ಮತ್ತು ಪಿಯುಸಿ ಉಪನ್ಯಾಸಕರು ಶಾಲೆ, ಕಾಲೇಜುಗಳಲ್ಲಿ ಹಾಜರಿರುತ್ತಾರೆ. 9, 10 ನೇ ತರಗತಿ ವಿದ್ಯಾರ್ಥಿಗಳು, ಪಿಯುಸಿ ವಿದ್ಯಾರ್ಥಿಗಳು ಅವರ ಅಧ್ಯಯನಕ್ಕೆ ಸಂಬಂಧಿಸಿದ ಅನುಮಾನಗಳು ಇದ್ದರೆ ಶಾಲೆಗೆ ಹೋಗಿ ನಿವಾರಿಸಿಕೊಳ್ಳಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮೈಸೂರಿನಲ್ಲಿ ಹೇಳಿದ್ದರು.
ಇದನ್ನೂ ಓದಿ: ರಾಜ್ಯದಲ್ಲಿ ಸೋಮವಾರದಿಂದ ಶಾಲೆಗಳು ಓಪನ್: ಆದರೆ ತರಗತಿಯಿಲ್ಲ…
ಕೇಂದ್ರದಿಂದ ಗ್ರೀನ್ ಸಿಗ್ನಲ್ ಬರುವವರೆಗೂ ರೆಗ್ಯುಲರ್ ತರಗತಿಗಳು ಪ್ರಾರಂಭವಾಗುವುದಿಲ್ಲ. ತರಗತಿಗಳಿಗೆ ಬರಲು ವಿದ್ಯಾರ್ಥಿಗಳು ಉತ್ಸುಕರಾಗಿದ್ದಾರೆ. ಆದರೆ ಶಾಲೆಗಳನ್ನು ಪುನಃ ತೆರೆಯುವ ಬಗ್ಗೆ ಪೋಷಕರು ಕಳವಳ ವ್ಯಕ್ತಪಡಿಸಿದ್ದಾರೆ. ಆನ್ಲೈನ್ ತರಗತಿಗಳೇ ಆರಾಮದಾಯಕವೆಂದು ಪೋಷಕರು ಹೇಳುತ್ತಾರೆ. ಇಲ್ಲಿ ಪೋಷಕರಿಗೆ ತಮ್ಮ ಮಕ್ಕಳ ಬಗ್ಗೆ ಇರುವ ಕಾಳಜಿ ಅರ್ಥ ಮಾಡಿಕೊಳ್ಳಬೇಕು ಎಂದು ಸುರೇಶ್ ಕುಮಾರ್ ಹೇಳಿದ್ದರು.
ಜೊತೆಗೆ, ಕೇಂದ್ರದಿಂದ ತರಗತಿಗಳ ಪ್ರಾರಂಭಕ್ಕೆ ಒಪ್ಪಿಗೆ ದೊರೆತ ಬಳಿಕ, ಪೋಷಕರಿಂದ ಒಪ್ಪಿಗೆ ಪತ್ರಗಳನ್ನು ಪಡೆಯುವುದನ್ನು ಕಡ್ಡಾಯಗೊಳಿಸುವ ಬಗ್ಗೆ ನಾವು ಯೋಚಿಸುತ್ತಿದ್ದೇವೆ ಎಂದಿದ್ದರು.
ಇದನ್ನೂ ಓದಿ: 59.7% ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಕಾಲ್ನಡಿಗೆಯಲ್ಲಿ ಶಾಲೆಗೆ ಹೋಗುತ್ತಾರೆ: NSO
ಆದರೆ, “ನಿನ್ನೆ ಕೇಂದ್ರ ಸರ್ಕಾರ ನೀಡಿದ ಸೂಚನೆಯ ಮೇರೆಗೆ, ಸೆಪ್ಟಂಬರ್ 21ರಿಂದ ಶಾಲೆಗಳನ್ನು ತೆರೆಯುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಬಿಟ್ಟಿದ್ದು, ವಿದ್ಯಾರ್ಥಿಗಳು ಶಾಲೆ, ಕಾಲೇಜುಗಳಿಗೆ ಭೇಟಿ ನೀಡಲು ಅನುಮತಿಯನ್ನು ನಿರಾಕರಿಸಲಾಗಿದೆ. ಪರಿಸ್ಥಿತಿ ಅವಲೋಕಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ತಿಳಿಸಿದ್ದಾರೆ.
ಈ ಹಿಂದೆ ಕೇಂದ್ರ ಸರ್ಕಾರವೇ, 9-12ನೇ ತರಗತಿಯವರೆಗೆ ಶಾಲೆ ತೆರೆದು, ಮಾರ್ಗದರ್ಶನ ನೀಡಲು ಅವಕಾಶ ಕಲ್ಪಿಸಿಕೊಡುವಂತೆ ಸೂಚಿಸಿತ್ತು. ಆದರೆ ರಾಜ್ಯದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ-ಕಾಲೇಜು ತೆರೆಯಲು ಅವಕಾಶ ನೀಡಲು ಸಾಧ್ಯವಿಲ್ಲವೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ನಿರ್ಧರಿಸಿದೆ.
ಇದನ್ನೂ ಓದಿ: ಮಕ್ಕಳಿರುವಲ್ಲೇ ಶಾಲೆ!: ಛತ್ತಿಸ್ಘಡ ಶಿಕ್ಷಕನ ಮನಮೆಚ್ಚುವ ಕಾರ್ಯ