ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ ವಿಜಯೇಂದ್ರ ಮತ್ತು ಮೊಮ್ಮಗ ಶಶಿಧರ ಮರಡಿಯವರ ವಿರುದ್ಧ ಸುಲಿಗೆ ಮತ್ತು ವಸೂಲಿ ದಂಧೆ ನಡೆಸಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ದೂರು ದಾಖಲಿಸಲಾಗಿದೆ.
ಜನಾಧಿಕಾರ ಸಂಘರ್ಷ ಪರಿಷತ್ನ ಪದಾಧಿಕಾರಿಗಳಾದ ಆದರ್ಶ್ ಆರ್ ಅಯ್ಯರ್, ಪ್ರಕಾಶ್ ಬಾಬು ಬಿ.ಕೆ, ವಿಶ್ವನಾಥ್ ಬಿ.ವಿಯವರು ದೂರು ನೀಡಿದ್ದು, ಪೊಲೀಸ್ ಮಹಾ ನಿರ್ದೇಶಕರು, ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೂ ಸಹ ದೂರು ನೀಡಲಾಗಿದೆ.
ಬಿ.ವೈ ವಿಜಯೇಂದ್ರ ಮತ್ತು ಶಶಿಧರ ಮರಡಿಯವರು ರಾಮಲಿಂಗಂ ಕನ್ಸ್ಸ್ಟ್ರಕ್ಸನ್ ಎಂಬುವವರಿಂದ ಹಣ ನೀಡದಿದ್ದರೆ ನಿಮ್ಮ ಬಿಡಿಎ ಪ್ರಾಜೆಕ್ಟ್ ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿ ಆರ್ಟಿಜಿಎಸ್ ಮೂಲಕ ಅಪಾರ ಪ್ರಮಾಣದ (17 ಕೋಟಿ ರೂಗಳು) ಹಣವನ್ನು ಸುಲಿಗೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಇದು 1860 ರ ಭಾರತೀಯ ದಂಡ ಸಂಹಿತೆಯ 120 ಬಿ, ಸುಲಿಗೆ u/ss 384 r / w 34ರ ಅನ್ವಯ ಸುಲಿಗೆ ಮಾಡುವ ಗಂಭೀರ ಅಪರಾಧವಾಗಿದೆ. ಹಾಗಾಗಿ 1973 ರ ಕ್ರಿಮಿನಲ್ ಅಪರಾಧಗಳ ಆಧಾರದಲ್ಲಿ ದೂರು ನೀಡಿದ್ದೇವೆ ಎಂದು ಜನಾಧಿಕಾರ ಸಂಘರ್ಷ ಪರಿಷತ್ನ ಪದಾಧಿಕಾರಿಗಳಾದ ಆದರ್ಶ್ ಆರ್ ಅಯ್ಯರ್ ತಿಳಿಸಿದ್ದಾರೆ.
ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು “ನಮ್ಮ ರಾಜ್ಯದಲ್ಲಿ ಭ್ರಷ್ಟ ರಾಜಕಾರಣವು ನಡೆಯುತ್ತಿದೆಯೆಂದು ಎಲ್ಲರಿಗೂ ತಿಳಿದೇ ಇದೆ. ಇತ್ತೀಚಿಗೆ ಖಾಸಗಿ ಮಾಧ್ಯಮವೊಂದು ಸಿಎಂ ಪುತ್ರ ಬಿ.ವೈ ವಿಜಯೇಂದ್ರ ಮತ್ತು ಮೊಮ್ಮಗ ಶಶಿಧರ್ ಮರಡಿಯವರು ವಸೂಲಿ ಮತ್ತು ಸುಲಿಗೆ ದಂಧೆಯನ್ನು ಖುಲ್ಲಂ ಖುಲ್ಲ ಮಾಡುತ್ತಿರುವುದನ್ನು ಬಿಚ್ಚಿಟ್ಟಿದೆ. ಇಂತಹ ಭಾರೀ ಭ್ರಷ್ಟಾಚಾರ ನಡೆಯುತ್ತಿರುವುದು ತಿಳಿದು ಸಹ ನಮ್ಮ ಜನಾಧಿಕಾರ ಸಂಘರ್ಷ ಪರಿಷತ್ ಕೈಕಟ್ಟಿ ಕೂರಬಾರದೆಂದು 25-09-2020 ರಂದು ಪೊಲೀಸ್ ಮಹಾನಿರ್ದೇಶಕರು, ಪೊಲೀಸ್ ಆಯುಕ್ತರು ಹಾಗೂ ಶೇಷಾದ್ರಿಪುರಂ ಠಾಣಾಧಿಕಾರಿಗೆ ದೂರು ನೀಡಿದ್ದೇವೆ. ಈ ತರಹದ ವಸೂಲಿ ಧಂಧೆಯನ್ನು ಬಿಜೆಪಿ ಸರ್ಕಾರವು ನೇರ ನೇರಾ ಮಾಡುತ್ತಿದ್ದರೂ ಅದನ್ನು ತಡೆಯದ ಪ್ರಧಾನಿ ಮೋದಿಯವರು ಮಾತ್ರ ‘ನಾ ಖಾವುಂಗಾ ನಾ ಖಾನೆ ದೂಂಗಾ’ ಎಂದು ಹೇಳುವುದು ಡೋಂಗಿತನವಲ್ಲದೇ ಬೇರೆನೂ ಅಲ್ಲ” ಎಂದಿದ್ದಾರೆ.
ಇನ್ನೊಂದೆಡೆ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಈ ಭ್ರಷ್ಟಾಚಾರದ ಕುರಿತು ವಿಶೇಷ ತನಿಖಾ ದಳದ ಮೂಲಕ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. “ಮಗ, ಮೊಮ್ಮಗ ಸೇರಿದಂತೆ ತನ್ನ ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಕ್ಷಣ ರಾಜೀನಾಮೆ ನೀಡಬೇಕು. ಈ ಇಡೀ ಹಗರಣದ ಬಗ್ಗೆ ನ್ಯಾಯಾಲಯದ ನಿಗಾದಲ್ಲಿ ತನಿಖೆಗೆ ವಿಶೇಷ ತನಿಖಾದಳವನ್ನು ರಚಿಸಬೇಕು” ಆಗ್ರಹಿಸಿದ್ದಾರೆ.
”‘ನಾ ಖಾವುಂಗಾ ನಾ ಖಾನೆ ದೂಂಗಾ’ ಎನ್ನುತ್ತಲೇ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು ಈ ಘೋಷಣೆಯನ್ನು ‘ಮೈ ಖಾವುಂಗಾ ಔರ್ ಖಾನೆ ದೂಂಗಾ’ ಎಂದು ತಕ್ಷಣ ಬದಲಾಯಿಸಿಕೊಳ್ಳುವುದು ಒಳಿತು. ಈ ಭ್ರಷ್ಟಾಚಾರದ ಹಣದಲ್ಲಿ ತನ್ನ ಪಾಲೆಷ್ಟು ಎನ್ನುವುದನ್ನು ಕೂಡಾ ನರೇಂದ್ರ ಮೋದಿಯವರು ತಿಳಿಸಬೇಕು” ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಯಡಿಯೂರಪ್ಪ: ಸಿದ್ದರಾಮಯ್ಯ