ಲಡಾಕ್ ಗಡಿ ಸಂಘರ್ಷಕ್ಕೆ ಸಂಬಂಧಿಸಿದ ಬಿಕ್ಕಟ್ಟನ್ನು ಶಮನಗೊಳಿಸಲು ಚೀನಾದೊಂದಿಗೆ ರಾಜತಾಂತ್ರಿಕ ಮಾತುಕತೆ ಸಾದ್ಯವಾಗುವುದಾದರೆ, ಪಾಕಿಸ್ತಾನದೊಂದಿಗೆ ಯಾಕೆ ಸಾಧ್ಯವಾಗುವುದಿಲ್ಲ ಎಂದು ಸಂಸದ ಫಾರೂಕ್ ಅಬ್ದುಲ್ಲಾ ಪ್ರಶ್ನಿಸಿದ್ದಾರೆ.
ಲಡಾಖ್ ಗಡಿಯಲ್ಲಿ ಉದ್ಭವವಾಗಿರುವ ಗಡಿ ತಕರಾರನ್ನು ಬಗೆಹರಿಸಲು ಭಾರತ-ಚೀನಾ ನಡುವೆ ರಾಜತಾಂತ್ರಿಕ ಮಾತುಕತೆಗಳು ನಡೆಯುತ್ತಿವೆ. ಆದರೆ ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿನ ಸಮಸ್ಯೆಗಳನ್ನೂ ಬಗೆಹರಿಸಲು ಭಾರತ-ಪಾಕ್ ನಡುವೆ ರಾಜತಾಂತ್ರಿಕ ಮಾತುಕತೆಗಳು ನಡೆಯಬೇಕು ಎಂದು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಲೋಕಸಭೆಯಲ್ಲಿ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಕಾಶ್ಮೀರದಲ್ಲಿ ಯಾರನ್ನೂ ಗೃಹಬಂಧನದಲ್ಲಿಟ್ಟಿಲ್ಲ ಎಂದು ಅಮಿತ್ ಶಾ ಸುಳ್ಳು ಹೇಳಿದ್ದಾರೆ: ಪ್ರೊ.ಸೈಫುದ್ದೀನ್ ಸೋಜ್
ಭಾರತ-ಪಾಕ್ ಗಡಿಯಲ್ಲಿ ನಡೆಯುತ್ತಿರುವ ನಿರಂತರ ಕಾದಾಟದಿಂದ ಜನಸಾಮಾನ್ಯರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಜನಸಾಮಾನ್ಯರ ಜೀವ ಉಳಿಸಲು ಪಾಕ್ ಕದನ ವಿರಾಮ ಉಲ್ಲಂಘನೆಯನ್ನು ನಿಲ್ಲಿಸಬೇಕಿದೆ. ಅದು ರಾಜತಾಂತ್ರಿಕ ಮಾತುಕತೆಗಳಿಂದ ಮಾತ್ರ ಸಾಧ್ಯ ಎಂದು ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.
ಆದರೆ, ಪಾಕಿಸ್ತಾನ ಗಡಿಯಾಚೆಗಿನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿದ್ದು, ಅದನ್ನು ನಿಲ್ಲಿಸುವವರೆಗೂ ಪಾಕ್ ಜೊತೆಗೆ ರಾಜತಾಂತ್ರಿಕ ಮಾತುಕತೆ ಸಾಧ್ಯವಿಲ್ಲ ಎಂದು ಭಾರತ ಸರ್ಕಾರ ಈ ಹಿಂದೆ ಹೇಳಿತ್ತು.
ಜಮ್ಮು ಕಾಶ್ಮೀರದ ಪ್ರಾದೇಶಿಕ ಪಕ್ಷವಾಗಿರುವ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖ್ಯಸ್ಥ ಮತ್ತು ಸಂಸದರಾಗಿರುವ ಫಾರುಕ್ ಅಬ್ದುಲ್ಲಾ ಅವರನ್ನು ಕೇಂದ್ರ ಸರ್ಕಾರ ಕಳೆದ ವರ್ಷ ಜಮ್ಮುಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ಆರ್ಟಿಕಲ್ 370 ನ್ನು ರದ್ದುಗೊಳಿಸಿದ ನಂತರ ಗೃಹ ಬಂಧನದಲ್ಲಿ ಇಡಲಾಗಿತ್ತು. ತಿಂಗಳ ಹಿಂದೆ ಅವರನ್ನು ಗೃಹ ಬಂಧನದಿಂದ ಮುಕ್ತಗೊಳಿಸಲಾಗಿತ್ತು.
ಇದನ್ನೂ ಓದಿ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಒಂದುಗೂಡಿದ ಆರು ಪಕ್ಷಗಳು