ಈ ವರ್ಷ ರಾಜ್ಯ ವಿಶ್ವವಿದ್ಯಾಲಯಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ನಡೆಸದಿರಲು ರಾಜಸ್ಥಾನ ಸರ್ಕಾರ ನಿರ್ಧರಿಸಲಾಗಿದೆ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಿಳಿಸಿದ್ದಾರೆ.
ತಮ್ಮ ನಿವಾಸದಲ್ಲಿ ಉನ್ನತ ಮಟ್ಟದ ಸಭೆಯ ನಂತರ ಮಾತನಾಡಿದ ಅವರು ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ದೃಷ್ಟಿಯಿಂದ, ಈ ವರ್ಷ ಎಲ್ಲಾ ವಿಶ್ವವಿದ್ಯಾಲಯ ಪರೀಕ್ಷೆಗಳನ್ನು ರದ್ದುಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ನಿರ್ಧಾರವು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು, ಕಾಲೇಜುಗಳು ಮತ್ತು ತಾಂತ್ರಿಕ ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ ಎಂದಿದ್ದಾರೆ.
ಈ ಎಲ್ಲಾ ವಿದ್ಯಾರ್ಥಿಗಳಿಗೆ ಪರೀಕ್ಷೆಯಿಲ್ಲದೆ ಬಡ್ತಿ ನೀಡಲಾಗುವುದು ಮತ್ತು ಮುಂದಿನ ಕೆಲವು ದಿನಗಳಲ್ಲಿ ನೀಡಲಾಗುವ ಶಿಕ್ಷಣ ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ ಅವರಿಗೆ ಅಂಕಗಳನ್ನು ನೀಡಲಾಗುವುದು ಎಂದು ಅವರು ಟ್ವೀಟ್ ಮಾಡಿದ್ದಾರೆ.
“ಎಲ್ಲಾ ವಿದ್ಯಾರ್ಥಿಗಳಿಗೆ ಪರೀಕ್ಷೆಗಳಿಲ್ಲದೆ ಮುಂದಿನ ವರ್ಷಕ್ಕೆ ಬಡ್ತಿ ನೀಡಲಾಗುವುದು. ಬಡ್ತಿ ಪಡೆಯುವ ವಿದ್ಯಾರ್ಥಿಗಳ ಅಂಕಗಳನ್ನು ನಿರ್ಧರಿಸಲು, ಮುಂದಿನ ಕೆಲವೇ ದಿನಗಳಲ್ಲಿ ಮಾರ್ಗಸೂಚಿಗಳನ್ನು ಅಧ್ಯಯನ ಮಾಡಿದ ನಂತರ ಭಾರತ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ” ಎಂದು ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ.
ಜೈಪುರದ ರಾಜಸ್ಥಾನ್ ವಿಶ್ವವಿದ್ಯಾಲಯವು ಯುಜಿ ಮತ್ತು ಪಿಜಿ ಪರೀಕ್ಷೆಗಳನ್ನು ಜುಲೈ 15 ರಿಂದ ಆಗಸ್ಟ್ 18, 2020 ರವರೆಗೆ ನಡೆಸಲಾಗುವುದು ಎಂದು ಘೋಷಿಸಿದ ಕೆಲವೇ ದಿನಗಳಲ್ಲಿ ಸರ್ಕಾರ ಈ ನಿರ್ಧಾರ ಘೋಷಿಸಿದೆ.
ರಾಜಸ್ಥಾನದಲ್ಲಿ ಭಾನುವಾರ ಆರು ಕೋವಿಡ್-19 ಸಾವುಗಳು ಮತ್ತು 224 ಹೊಸ ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಒಟ್ಟು 19,756 ಪ್ರಕರಣಗಳು ದಾಖಲಾಗಿವೆ.
ರಾಜಸ್ಥಾನ ಆರೋಗ್ಯ ಸಚಿವ ಡಾ.ರಘು ಶರ್ಮಾ ಅವರು ತಮ್ಮ ಕೋವಿಡ್ -19 ಪರೀಕ್ಷಾ ಸಾಮರ್ಥ್ಯವನ್ನು ದಿನಕ್ಕೆ 41,000 ಮಾದರಿಗಳಿಗೆ ಏರಿಸಿದ್ದು, ಶೀಘ್ರದಲ್ಲೇ ಅದನ್ನು 50,000 ಕ್ಕೆ ಹೆಚ್ಚಿಸಲಾಗುವುದು ಎಂದು ಹೇಳಿದ್ದಾರೆ. COVID-19 ಪರೀಕ್ಷೆಗಳನ್ನು 20 ಜಿಲ್ಲೆಗಳಲ್ಲಿ ಪ್ರಾರಂಭಿಸಲಾಗಿದ್ದು, ಶೀಘ್ರದಲ್ಲೇ ರಾಜ್ಯದ ಉಳಿದ 13 ಜಿಲ್ಲೆಗಳಿಗೆ ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಕೊರೊನಾ ರೋಗಿಗಳನ್ನು ದಾಖಲಿಸಿಕೊಳ್ಳದ ಆಸ್ಪತ್ರೆಗಳ ಮೇಲೆ ಕ್ರಿಮಿನಲ್ ಕೇಸ್: ಸಚಿವ ಸುಧಾಕರ್