Homeಸಾಮಾಜಿಕಉಸಿರು ಕಟ್ಟಿಸುವ ಹೊಗೆ: ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ

ಉಸಿರು ಕಟ್ಟಿಸುವ ಹೊಗೆ: ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ

- Advertisement -
- Advertisement -

ಡಾ.ಎಚ್.ಎಸ್.ಅನುಪಮ |

೨೦೧೮ರ ನವೆಂಬರ್ ಕೊನೆಯ ವಾರ ಭಾರತಕ್ಕೆ ಬಂದಿದ್ದ ಟ್ವಿಟರ್ ಸಿಇಒ ಜಾಕ್ ಡಾರ್ಸ್ ‘ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ನಾಶವಾಗಲಿ’ (ಸ್ಮಾಷ್ ಬ್ರಾಹ್ಮಿನಿಕಲ್ ಪೇಟ್ರಿಯಾರ್ಕಿ) ಎಂಬ ಪೋಸ್ಟರನ್ನು ಕೈಲಿ ಹಿಡಿದು ಕೆಲವು ಭಾರತೀಯ ಪತ್ರಕರ್ತೆಯರ ಜೊತೆ ಫೋಟೋಗೆ ನಿಂತರು. ಈ ನೆಲದ ಎಲ್ಲ ವಿಕಾರ-ವಿಪರ್ಯಾಸಗಳ ಮೂಲಕಾರಣವಾಗಿರುವ, ವಿಶ್ವದ ಯಾವ ಸಮಾಜವೂ ಕೇಳರಿಯದಷ್ಟು ಅನಿರ್ಬಂಧಿತ, ಏಕಮುಖಿ ಅಧಿಕಾರ-ಸುಖಸವಲತ್ತನ್ನು ಬ್ರಾಹ್ಮಣರಿಗೆ, ಎಲ್ಲ ಪುರುಷರಿಗೆ ನೀಡಿರುವ ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ಕುರಿತು ಜಾಕ್‌ಗೆ ಗೊತ್ತಿತ್ತೋ ಇಲ್ಲವೋ, ಆದರೆ ಪೋಸ್ಟರ್ ಹಿಡಿದು ನಿಂತ ಫೋಟೋ ನೋಡಿದ್ದೇ ತಡ, ದಾರವಂತರು ಕೆರಳಿಹೋದರು. ಅಂಕಣಕಾರ್ತಿ ಸ್ಮಿತಾ ಬರೂವಾ, ಮಣಿಪಾಲ ಸಮೂಹ ಸಂಸ್ಥೆಗಳ ಮೋಹನದಾಸ ಪೈ, ಬಾಲಿವುಡ್ ಚಿತ್ರಕತೆಗಾರರಾದ ಅದ್ವೈತ್ ಕಲಾ, ರಿಪಬ್ಲಿಕ್ ಟಿವಿಯ ಚಿತ್ರಾ ಸುಬ್ರಹ್ಮಣಿಯನ್, ಲೇಖಕ ಹಿಂದೋಳ್ ಸೇನ್‌ಗುಪ್ತ ಮೊದಲಾದವರು ಈ ಘಟನೆಯನ್ನು ‘ಜನಾಂಗ ದ್ವೇಷ’, ‘ಜಾತಿ ನಿಂದನೆ’ ಎನ್ನುವಂತೆ ಬಿಂಬಿಸಿದರು. ಭಾರತೀಯ ಪತ್ರಿಕೋದ್ಯಮದ 49% ಉಚ್ಛ ಸ್ಥಾನಗಳನ್ನು ತುಂಬಿರುವ ‘ಅಲ್ಪಸಂಖ್ಯಾತ’ ಬ್ರಾಹ್ಮಣರು ಹಾಗೂ ಅನಿವಾಸಿ ಜಾಲಿಗ ಬ್ರಾಹ್ಮಣರು ಟ್ವಿಟರಿನಲ್ಲಿ ಧೂಳೆಬ್ಬಿಸಿ, ‘ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ’ ಎನ್ನುವುದೆಲ್ಲ ಸ್ತ್ರೀವಾದಿಗಳ ಕುತರ್ಕ, ಎಲ್ಲಿದೆ ಅವೆಲ್ಲ? ಎಂದು ಬೊಬ್ಬೆ ಹಾಕಿದರು.

‘ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ’ ಎಲ್ಲಿದೆಯೆ! ಅಹಹ, ಹೊಗೆ ದೆಹಲಿಯನ್ನು ಆವರಿಸಿರುವಂತೆ ಈ ದೇಶದ ಜೀವಜಂತುಗಳ ಉಸಿರುಕಟ್ಟಿಸಿರುವುದೇ ಬ್ರಾಹ್ಮಣೀಯ ಪಿತೃಪ್ರಾಧಾನ್ಯ. ಮತ್ತೇನೂ ಬೇಡ, ತಮ್ಮದೇ ಜಾತಿಯ ನಿಷ್ಪಾಪಿ ವಿಧವೆಯರು, ಪರಿತ್ಯಕ್ತೆಯರು, ಅಡುಗೆ ಕೋಣೆಯಲ್ಲಿ ಬೇಯುವ ತಾಯಂದಿರನ್ನು ನೆನಪಿಸಿಕೊಂಡಿದ್ದರೂ ಸಾಕಿತ್ತು, ‘ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ’ ಎಲ್ಲಿದೆ ಎಂದು ಗೊತ್ತಾಗುತ್ತಿತ್ತು. ಆದರೆ ಜಾತಿ ಅಭಿಮಾನ ಅವರನ್ನು ಎಷ್ಟು ಕುರುಡಾಗಿಸಿತು ಎಂದರೆ ತಮ್ಮ ಜಾತಿಯ ಹೆಣ್ಣುಗಳನ್ನೂ ಸೇರಿದಂತೆ ಬಾಧಿಸುತ್ತಿರುವ ಒಂದು ಕೇಡನ್ನು ಕಣ್ಣು ತೆರೆದು ನೋಡುವುದೂ ಅಸಾಧ್ಯವಾಯಿತು.

ಏನಿದು ಬ್ರಾಹ್ಮಣೀಯ ಪಿತೃಪ್ರಧಾನತೆ?

ಜೈವಿಕವಾಗಿ ಗಂಡುಹೆಣ್ಣುಗಳ ನಡುವೆ ಕೆಲವು ಭಿನ್ನತೆಗಳಿವೆ, ಹಾಗೆಯೇ ಅನನ್ಯತೆಗಳಿವೆ. ದೈಹಿಕ ಭಿನ್ನತೆಯನ್ನೇ ಮುಂದಿಟ್ಟುಕೊಂಡು ಸಮಾನತೆ, ಸ್ವಾತಂತ್ರ್ಯ, ಪೌರ ಹಕ್ಕುಗಳಿಂದ ಹೆಣ್ಣನ್ನು ವಂಚಿಸುವ ವ್ಯವಸ್ಥೆ ಪಿತೃಪ್ರಾಧಾನ್ಯತೆ. ಹೊಸ ಜೀವವನ್ನು ಹೆರುವ ಶಕ್ತಿಯಿರುವ, ಜೀವ ಪೊರೆವ ಆಹಾರವಾಗಿ ಮೊಲೆಹಾಲು ಸ್ರವಿಸಬಲ್ಲ ಹೆಣ್ಣೆಂಬ ಅದ್ಭುತವನ್ನು ತನ್ನ ಅಂಕೆಯಲ್ಲಿಟ್ಟುಕೊಳ್ಳಲು ಯತ್ನಿಸದ ಗಂಡು ಸಮುದಾಯವೇ ಇಲ್ಲ. ಹೆಣ್ಣನ್ನು ಅಂಕೆಯಲ್ಲಿಟ್ಟುಕೊಳ್ಳುವ ಪ್ರಯತ್ನಗಳಿಗೆ ಮನ್ನಣೆ ಪಡೆಯುವ ಸಲುವಾಗಿ, ಅದಕ್ಕೆ ಧಾರ್ಮಿಕ ಸಮ್ಮತಿ ಇದೆ ಎಂಬಂತೆ ಬಿಂಬಿಸುವ ಹುನ್ನಾರವಾಗಿ ಮೊದಲು ಅವಳ ಧಾರ್ಮಿಕ ಹಕ್ಕುಗಳನ್ನು ಮೊಟಕುಗೊಳಿಸಲಾಯಿತು. ಅದಕ್ಕಾಗಿ ಪುರಾಣ, ಕಟ್ಟುಕತೆ, ಐತಿಹ್ಯಗಳ ಸೃಷ್ಟಿಸಲಾಯಿತು. ನಂತರ ಸಾಮಾಜಿಕ, ರಾಜಕೀಯ ಅವಕಾಶಗಳನ್ನು ಕಡಿತಗೊಳಿಸಲಾಯ್ತು. ಕಾಲಕಾಲಕ್ಕೆ ಹೊಸಪ್ರಶ್ನೆಗಳು ಏಳತೊಡಗಿದಾಗ ಅವುಗಳನ್ನು ಹತ್ತಿಕ್ಕಲು ಹೊಸಹೊಸ ಆಚರಣೆಗಳ ಜಾರಿಗೊಳಿಸಲಾಯ್ತು.

ಇದುವೆ ಪಿತೃಪ್ರಾಧಾನ್ಯ ಅಥವಾ ಗಂಡು ಮೇಲರಿಮೆ. ಪಿತೃಪ್ರಾಧಾನ್ಯ ವಿಶ್ವದ ಬಹುತೇಕ ಸಮಾಜಗಳಲ್ಲಿ ಚಾಲ್ತಿಯಲ್ಲಿದೆ. ಇದು ಜಾಕ್ ಪ್ರತಿನಿಧಿಸುವ ಸಮಾಜಕ್ಕೂ, ಅವರು ಪ್ರತಿನಿಧಿಸುವ ಸಂಸ್ಥೆಗೂ ಅನ್ವಯಿಸುತ್ತದೆ. ಮುಂದುವರಿದ ಪಾಶ್ಚಾತ್ಯ ಸಮಾಜಗಳಲ್ಲೂ ನಾನಾ ಲಿಂಗಾಧಾರಿತ ತಾರತಮ್ಯಗಳು ಇವತ್ತಿಗೂ ಚಾಲ್ತಿಯಲ್ಲಿವೆ. ಬಹುಪಾಲು ಬಹುರಾಷ್ಟ್ರೀಯ ಕಂಪನಿಗಳಲ್ಲಿ ಲಿಂಗಾಧಾರಿತ ಉದ್ಯೋಗ ತಾರತಮ್ಯ, ವೇತನ ತಾರತಮ್ಯ ಮುಂದುವರೆದಿದೆ. ಹಾಗಾಗಿ ಜಾಕ್ ಆ ಪೋಸ್ಟರ್ ಹಿಡಿಯುವ ಮೂಲಕ ತಮ್ಮ ಸಮಾಜ-ಕಂಪನಿಯ ಪಿತೃಪ್ರಾಧಾನ್ಯ ಕೊನೆಗೊಳಿಸಲು ಮುಂದಾಗುವ ಇಚ್ಛೆ ಹೊಂದಿದ್ದಲ್ಲಿ ಅದು ಸ್ವಾಗತಾರ್ಹ ಎನ್ನಬಹುದು.

ಆದರೆ ಅವರ ಪೋಸ್ಟರು ಕೆಲವು ಭಾರತೀಯರನ್ನು ಕೆರಳಿಸಲು ಕಾರಣ ಅದರಲ್ಲಿದ್ದ ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ಎಂಬ ಪದ. ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡಂತೆ, ಒಂದು ಶೋಷಕ ಮನಸ್ಥಿತಿಯ ಪ್ರತೀಕವಾದ ಪದದ ಮೊದಲೆರೆಡು ಅಕ್ಷರಗಳನ್ನು ತಮ್ಮ ಜಾತಿಯ ಹೆಸರಲ್ಲಿಟ್ಟುಕೊಂಡವರು ತಮ್ಮನ್ನೇ ನಿಂದಿಸಿದಂತೆ ಕೆರಳಿದರು. ಆ ಬ್ರಹ್ಮಜ್ಞಾನಿಗಳಿಗೆ ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ಎನ್ನುವುದು ಬ್ರಾಹ್ಮಣ ಜಾತಿಯಲ್ಲಿ ಹುಟ್ಟಿದವರನ್ನು ಬೈಯಲು ರೂಪಿಸಿದ ಪದವಲ್ಲ, ಬದಲಾಗಿ ಅದೊಂದು ಮನಸ್ಥಿತಿ; ಈ ದೇಶದ ಹೆಣ್ಣುಗಳನ್ನು, ಅಧಿಕಾರಹೀನರನ್ನು ತುಳಿಯಲು ಮಾಡಿಕೊಂಡ ಒಂದು ದುಷ್ಟ ಚೌಕಟ್ಟು ಎಂದು ಅರ್ಥವೇ ಆಗಲಿಲ್ಲ. ದಾರವಂತರು ತಿಳಿಯಲಿ: ಜಾತಿ-ಲಿಂಗದ ಕಾರಣವಾಗಿ ಮನುಷ್ಯರನ್ನು ಕೀಳಾಗಿ ನಡೆಸಿಕೊಳ್ಳುವುದು, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವವನ್ನು ನಿರಾಕರಿಸುವುದು, ತಾನು ಶ್ರೇಷ್ಠ ಎಂಬ ಜಾತಿ/ಲಿಂಗ ಮೇಲರಿಮೆಯನ್ನು ಉಳಿದವರ ಮೇಲೆ ಹೇರುವುದು ಬ್ರಾಹ್ಮಣೀಯ ಪಿತೃಪ್ರಾಧಾನ್ಯ. ಅದು ಈ ನೆಲದ, ಸಂವಿಧಾನದ ಆಶಯಗಳಿಗೆ ವಿರುದ್ಧ. ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆಯ ನಾಶ ಎಂದರೆ ಬ್ರಾಹ್ಮಣರ ನಾಶವಲ್ಲ; ಜಾತಿ ಮೇಲರಿಮೆಯ ನಾಶ.

ಭಾರತದ ಪಿತೃಪ್ರಾಧಾನ್ಯತೆಯನ್ನು ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ಎನ್ನಲು ಕಾರಣಗಳಿವೆ. ಪಿತೃಪ್ರಾಧಾನ್ಯವನ್ನು ಭಾರತದಲ್ಲಿ ಮತ್ತಷ್ಟು ಅಸಹನೀಯಗೊಳಿಸಿರುವುದು ಮತ್ತು ದುಷ್ಟಗೊಳಿಸಿರುವುದು ಇಲ್ಲಿನ ಜಾತಿವ್ಯವಸ್ಥೆ. ಅದು ಎರಡಲಗಿನ ಕತ್ತಿಯಾಗಿ ಈ ದೇಶದ ಹೆಣ್ಣುಗಳ ಘನತೆಯ ಬದುಕಿಗೆ ಎರವಾಗಿದೆ. ಭಾರತದ ಜಾತಿಪದ್ಧತಿಯು ನಡತೆ, ವ್ಯಕ್ತಿತ್ವ, ಸಾಧನೆ, ಉದಾತ್ತತೆ ಮುಂತಾದ ಗುಣಗಳಿಂದ ಅಲ್ಲ; ಹುಟ್ಟಿನಿಂದ ಬ್ರಾಹ್ಮಣರನ್ನು ಶ್ರೇಷ್ಠರೆಂದು ವರ್ಗೀಕರಿಸಿದೆ. ಅವರಿಗೆ ಎಲ್ಲ ವಿಶೇಷ ಸವಲತ್ತು, ಮೀಸಲಾತಿಗಳನ್ನು ಪ್ರಶ್ನಾತೀತವಾಗಿ ಕೊಟ್ಟಿದೆ. ಹುಟ್ಟಿನಿಂದಲೇ ಯಾವುದಾದರೂ ಮೇಲು ಅಥವಾ ಕೀಳೆಂದು ನಿರ್ಧಾರ ಮಾಡುವುದು ಪ್ರಕೃತಿ ವಿರೋಧಿ ತತ್ವ. ಆದರೆ ಜಾತಿಹೆಮ್ಮೆ, ಜಾತಿಪ್ರಜ್ಞೆ, ಜಾತಿ ಶ್ರೇಷ್ಠತೆಯ ವ್ಯಸನಗಳು ಬ್ರಾಹ್ಮಣರ ನಂತರದವೆಂದು ಗುರುತಿಸಲ್ಪಟ್ಟ ಸಾವಿರಾರು ಜಾತಿಗಳಿಗೂ ಹಾಗೇ ಸೋಸಿಕೊಂಡು ಇಳಿಯಿತು. ಅಂಬೇಡ್ಕರ್ ಮನೋಜ್ಞವಾಗಿ ವಿಶ್ಲೇಷಿಸಿರುವಂತೆ ಭಾರತದ ಪ್ರತಿಜಾತಿಯೂ ತಾನು ಮತ್ತೊಂದು ಜಾತಿಗಿಂತ ಶ್ರೇಷ್ಠ ಎಂಬ ಹಿರಿಮೆಯಲ್ಲಿ ಕೆಳಗಿನ ಜಾತಿಯನ್ನು ತುಳಿಯುವುದರಲ್ಲಿ ಮೇಲಿನ ಜಾತಿಯ ತುಳಿತವನ್ನು ಮರೆಯುತ್ತದೆ. ಹೀಗೆ ಬ್ರಾಹ್ಮಣ್ಯವು – ಎಂದರೆ ಅಸಮಾನತೆಯ ಉತ್ಸಾಹ, ಜಾತಿ ಮೇಲರಿಮೆ, ಜನ್ಮಜಾತ ಜಾತಿಅಸ್ಮಿತೆಗಳು – ಪ್ರತಿಜಾತಿಗೂ ಸೋಸಿಕೊಂಡು ಇಳಿದಿವೆ. ಬ್ರಾಹ್ಮಣ್ಯ ಮತ್ತು ಪಿತೃಪ್ರಾಧಾನ್ಯ ಸೇರಿ ಪ್ರತಿ ಜಾತಿಯ ಹೆಣ್ಣುಗಳನ್ನೂ ಬಾಧಿಸುತ್ತಿರುವುದು ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ಎನಿಸಿಕೊಂಡಿದೆ. ಭಾರತದ ಪ್ರತಿಜಾತಿಯಲ್ಲೂ, ಪ್ರತಿಧರ್ಮದಲ್ಲೂ ಪಿತೃಪ್ರಾಧಾನ್ಯವಿದೆ; ಪಿತೃಪ್ರಾಧಾನ್ಯತೆ ಅಷ್ಟೇ ಅಲ್ಲ, ಬ್ರಾಹ್ಮಣೀಯ ಪಿತೃಪ್ರಾಧಾನ್ಯವಿದೆ.

ಅಂಬೇಡ್ಕರರು ಹೇಳಿದ್ದು 

ಅಂಬೇಡ್ಕರರು ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆದ ಜಿಐಪಿ ರೈಲ್ವೇ ವರ್ಕ್‌ಮೆನ್ಸ್ ಕಾನ್ಫರೆನ್ಸ್‌ನಲ್ಲಿ ಇಂಡಿಪೆಂಡೆಂಟ್ ಲೇಬರ್ ಪಾರ್ಟಿ ಅಧ್ಯಕ್ಷರಾಗಿ ಹಾಗೂ ಸಮ್ಮೇಳನದ ಅಧ್ಯಕ್ಷರಾಗಿ ಮಾತನಾಡುತ್ತ ೧೯೩೮ರಲ್ಲಿ ಮನೋಜ್ಞವಾಗಿ ಹೇಳಿದ್ದು ಗಮನಾರ್ಹವಾಗಿದೆ:

” ‘ಬ್ರಾಹ್ಮಣಿಕೆಯು ಪರಿಗಣಿಸಲೇಬೇಕಾದ ಶತ್ರು’ ಎಂಬ ನನ್ನ ಹೇಳಿಕೆ ಅಪಾರ್ಥಕ್ಕೊಳಗಾಗುವುದು ನನಗಿಷ್ಟವಿಲ್ಲ. ಬ್ರಾಹ್ಮಣಿಕೆಯೆಂದರೆ ಒಂದು ಸಮುದಾಯವಾಗಿ ಬ್ರಾಹ್ಮಣರ ಶಕ್ತಿ, ಅಧಿಕಾರ, ಅವಕಾಶ, ಆಸಕ್ತಿಯೆಂದಷ್ಟೇ ನಾನು ತಿಳಿಯುವುದಿಲ್ಲ. ಬ್ರಾಹ್ಮಣಿಕೆಯೆಂದರೆ ಸ್ವಾತಂತ್ರ್ಯ, ಸೋದರತೆ, ಸಮಾನತೆಯನ್ನು ನಾಶ ಮಾಡುವ ಶಕ್ತಿ. ಈ ಅರ್ಥದಲ್ಲಿ ಎಲ್ಲ ಜಾತಿ-ವರ್ಗಗಳಲ್ಲೂ ಬ್ರಾಹ್ಮಣಿಕೆಯಿದೆ ಮತ್ತು ಇದನ್ನು ಹುಟ್ಟುಹಾಕಿದವರು ಬ್ರಾಹ್ಮಣರಾದರೂ ಅವರಿಗಷ್ಟೇ ಇದು ಸೀಮಿತವಾಗಿಲ್ಲ. ಎಲ್ಲ ಕಡೆ ಕಾಣುವ, ಎಲ್ಲರ ಯೋಚನೆ-ಕ್ರಿಯೆಯನ್ನು ಹಿಡಿತದಲ್ಲಿಟ್ಟುಕೊಂಡಿರುವುದು ಇದೇ ಬ್ರಾಹ್ಮಣಿಕೆಯೆಂಬುದು ಅವಿವಾದಿತ ಸತ್ಯ. ಇದು ಕೆಲವರಿಗಷ್ಟೇ ಹೆಚ್ಚು ಅವಕಾಶ ಮಾಡಿಕೊಡುತ್ತದೆಂಬುದೂ ವಿವಾದಾತೀತ ಸಂಗತಿ. ಕೆಲ ವರ್ಗಗಳಿಗೆ ಇದು ಅವಕಾಶಗಳಲ್ಲಿ ಸಮಾನತೆಯನ್ನು ನಿರಾಕರಿಸುತ್ತದೆ. ಬ್ರಾಹ್ಮಣಿಕೆಯು ಅಂತರ್ಜಾತಿ ಭೋಜನ, ಅಂತರ್ಜಾತಿ ವಿವಾಹಗಳಂಥ ಸಾಮಾಜಿಕ ಹಕ್ಕುಗಳನ್ನು ತಡೆಯುವುದಕ್ಕಷ್ಟೇ ಸೀಮಿತವಾಗಿಲ್ಲ. ಅದು ಪೌರ ಹಕ್ಕುಗಳಿಗೂ ವಿಸ್ತರಿಸುತ್ತದೆ… ಕೋಟಿಗಟ್ಟಲೆ ಜನರಿಗೆ ಪೌರ ಹಕ್ಕುಗಳನ್ನು ನಿರಾಕರಿಸಲಾಗಿದೆ. ಸಾವಿರಾರು ವರ್ಷಗಳಿಂದ ಆಚರಣೆಯಲ್ಲಿರುವ, ಈಗಲೂ ಉರಿಯುವ ಕೊಳ್ಳಿಯಂತೆ ಜೀವಂತವಾಗಿರುವ ಬ್ರಾಹ್ಮಣಿಕೆಯೇ ಇಂದಿನ ಸಮಸ್ಯೆಗಳಿಗೆ ಕಾರಣವೆಂಬುದನ್ನು ಯಾರಾದರೂ ಸಂಶಯಿಸಲು ಸಾಧ್ಯವೆ?

ಬ್ರಾಹ್ಮಣಿಕೆ ಎಂದರೆ ಅಸಮಾನತೆಯ ಉತ್ಸಾಹ.. ಬ್ರಾಹ್ಮಣ್ಯವು ಜೀವಂತ ಶಕ್ತಿಯಾಗಿರುವ ತನಕ, ಅದು ಕೊಡುವ ಸವಲತ್ತಿಗಾಗಿ ಕೆಲವರು ಬ್ರಾಹ್ಮಣ್ಯಕ್ಕೆ ಅಂಟಿಕೊಂಡಿರುವ ತನಕ ಅದರಿಂದ ತೊಂದರೆಗೊಳಗಾದವರು ಸಂಘಟಿತರಾಗಲೇಬೇಕಾಗಿದೆ. ಹಾಗೆ ಅದರ ವಿರುದ್ಧ ಸಂಘಟಿತರಾಗುವುದರಲ್ಲಿ ತಪ್ಪೇನಿದೆ?”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...