Homeಸಾಮಾಜಿಕಉಸಿರು ಕಟ್ಟಿಸುವ ಹೊಗೆ: ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ

ಉಸಿರು ಕಟ್ಟಿಸುವ ಹೊಗೆ: ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ

- Advertisement -
- Advertisement -

ಡಾ.ಎಚ್.ಎಸ್.ಅನುಪಮ |

೨೦೧೮ರ ನವೆಂಬರ್ ಕೊನೆಯ ವಾರ ಭಾರತಕ್ಕೆ ಬಂದಿದ್ದ ಟ್ವಿಟರ್ ಸಿಇಒ ಜಾಕ್ ಡಾರ್ಸ್ ‘ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ನಾಶವಾಗಲಿ’ (ಸ್ಮಾಷ್ ಬ್ರಾಹ್ಮಿನಿಕಲ್ ಪೇಟ್ರಿಯಾರ್ಕಿ) ಎಂಬ ಪೋಸ್ಟರನ್ನು ಕೈಲಿ ಹಿಡಿದು ಕೆಲವು ಭಾರತೀಯ ಪತ್ರಕರ್ತೆಯರ ಜೊತೆ ಫೋಟೋಗೆ ನಿಂತರು. ಈ ನೆಲದ ಎಲ್ಲ ವಿಕಾರ-ವಿಪರ್ಯಾಸಗಳ ಮೂಲಕಾರಣವಾಗಿರುವ, ವಿಶ್ವದ ಯಾವ ಸಮಾಜವೂ ಕೇಳರಿಯದಷ್ಟು ಅನಿರ್ಬಂಧಿತ, ಏಕಮುಖಿ ಅಧಿಕಾರ-ಸುಖಸವಲತ್ತನ್ನು ಬ್ರಾಹ್ಮಣರಿಗೆ, ಎಲ್ಲ ಪುರುಷರಿಗೆ ನೀಡಿರುವ ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ಕುರಿತು ಜಾಕ್‌ಗೆ ಗೊತ್ತಿತ್ತೋ ಇಲ್ಲವೋ, ಆದರೆ ಪೋಸ್ಟರ್ ಹಿಡಿದು ನಿಂತ ಫೋಟೋ ನೋಡಿದ್ದೇ ತಡ, ದಾರವಂತರು ಕೆರಳಿಹೋದರು. ಅಂಕಣಕಾರ್ತಿ ಸ್ಮಿತಾ ಬರೂವಾ, ಮಣಿಪಾಲ ಸಮೂಹ ಸಂಸ್ಥೆಗಳ ಮೋಹನದಾಸ ಪೈ, ಬಾಲಿವುಡ್ ಚಿತ್ರಕತೆಗಾರರಾದ ಅದ್ವೈತ್ ಕಲಾ, ರಿಪಬ್ಲಿಕ್ ಟಿವಿಯ ಚಿತ್ರಾ ಸುಬ್ರಹ್ಮಣಿಯನ್, ಲೇಖಕ ಹಿಂದೋಳ್ ಸೇನ್‌ಗುಪ್ತ ಮೊದಲಾದವರು ಈ ಘಟನೆಯನ್ನು ‘ಜನಾಂಗ ದ್ವೇಷ’, ‘ಜಾತಿ ನಿಂದನೆ’ ಎನ್ನುವಂತೆ ಬಿಂಬಿಸಿದರು. ಭಾರತೀಯ ಪತ್ರಿಕೋದ್ಯಮದ 49% ಉಚ್ಛ ಸ್ಥಾನಗಳನ್ನು ತುಂಬಿರುವ ‘ಅಲ್ಪಸಂಖ್ಯಾತ’ ಬ್ರಾಹ್ಮಣರು ಹಾಗೂ ಅನಿವಾಸಿ ಜಾಲಿಗ ಬ್ರಾಹ್ಮಣರು ಟ್ವಿಟರಿನಲ್ಲಿ ಧೂಳೆಬ್ಬಿಸಿ, ‘ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ’ ಎನ್ನುವುದೆಲ್ಲ ಸ್ತ್ರೀವಾದಿಗಳ ಕುತರ್ಕ, ಎಲ್ಲಿದೆ ಅವೆಲ್ಲ? ಎಂದು ಬೊಬ್ಬೆ ಹಾಕಿದರು.

‘ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ’ ಎಲ್ಲಿದೆಯೆ! ಅಹಹ, ಹೊಗೆ ದೆಹಲಿಯನ್ನು ಆವರಿಸಿರುವಂತೆ ಈ ದೇಶದ ಜೀವಜಂತುಗಳ ಉಸಿರುಕಟ್ಟಿಸಿರುವುದೇ ಬ್ರಾಹ್ಮಣೀಯ ಪಿತೃಪ್ರಾಧಾನ್ಯ. ಮತ್ತೇನೂ ಬೇಡ, ತಮ್ಮದೇ ಜಾತಿಯ ನಿಷ್ಪಾಪಿ ವಿಧವೆಯರು, ಪರಿತ್ಯಕ್ತೆಯರು, ಅಡುಗೆ ಕೋಣೆಯಲ್ಲಿ ಬೇಯುವ ತಾಯಂದಿರನ್ನು ನೆನಪಿಸಿಕೊಂಡಿದ್ದರೂ ಸಾಕಿತ್ತು, ‘ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ’ ಎಲ್ಲಿದೆ ಎಂದು ಗೊತ್ತಾಗುತ್ತಿತ್ತು. ಆದರೆ ಜಾತಿ ಅಭಿಮಾನ ಅವರನ್ನು ಎಷ್ಟು ಕುರುಡಾಗಿಸಿತು ಎಂದರೆ ತಮ್ಮ ಜಾತಿಯ ಹೆಣ್ಣುಗಳನ್ನೂ ಸೇರಿದಂತೆ ಬಾಧಿಸುತ್ತಿರುವ ಒಂದು ಕೇಡನ್ನು ಕಣ್ಣು ತೆರೆದು ನೋಡುವುದೂ ಅಸಾಧ್ಯವಾಯಿತು.

ಏನಿದು ಬ್ರಾಹ್ಮಣೀಯ ಪಿತೃಪ್ರಧಾನತೆ?

ಜೈವಿಕವಾಗಿ ಗಂಡುಹೆಣ್ಣುಗಳ ನಡುವೆ ಕೆಲವು ಭಿನ್ನತೆಗಳಿವೆ, ಹಾಗೆಯೇ ಅನನ್ಯತೆಗಳಿವೆ. ದೈಹಿಕ ಭಿನ್ನತೆಯನ್ನೇ ಮುಂದಿಟ್ಟುಕೊಂಡು ಸಮಾನತೆ, ಸ್ವಾತಂತ್ರ್ಯ, ಪೌರ ಹಕ್ಕುಗಳಿಂದ ಹೆಣ್ಣನ್ನು ವಂಚಿಸುವ ವ್ಯವಸ್ಥೆ ಪಿತೃಪ್ರಾಧಾನ್ಯತೆ. ಹೊಸ ಜೀವವನ್ನು ಹೆರುವ ಶಕ್ತಿಯಿರುವ, ಜೀವ ಪೊರೆವ ಆಹಾರವಾಗಿ ಮೊಲೆಹಾಲು ಸ್ರವಿಸಬಲ್ಲ ಹೆಣ್ಣೆಂಬ ಅದ್ಭುತವನ್ನು ತನ್ನ ಅಂಕೆಯಲ್ಲಿಟ್ಟುಕೊಳ್ಳಲು ಯತ್ನಿಸದ ಗಂಡು ಸಮುದಾಯವೇ ಇಲ್ಲ. ಹೆಣ್ಣನ್ನು ಅಂಕೆಯಲ್ಲಿಟ್ಟುಕೊಳ್ಳುವ ಪ್ರಯತ್ನಗಳಿಗೆ ಮನ್ನಣೆ ಪಡೆಯುವ ಸಲುವಾಗಿ, ಅದಕ್ಕೆ ಧಾರ್ಮಿಕ ಸಮ್ಮತಿ ಇದೆ ಎಂಬಂತೆ ಬಿಂಬಿಸುವ ಹುನ್ನಾರವಾಗಿ ಮೊದಲು ಅವಳ ಧಾರ್ಮಿಕ ಹಕ್ಕುಗಳನ್ನು ಮೊಟಕುಗೊಳಿಸಲಾಯಿತು. ಅದಕ್ಕಾಗಿ ಪುರಾಣ, ಕಟ್ಟುಕತೆ, ಐತಿಹ್ಯಗಳ ಸೃಷ್ಟಿಸಲಾಯಿತು. ನಂತರ ಸಾಮಾಜಿಕ, ರಾಜಕೀಯ ಅವಕಾಶಗಳನ್ನು ಕಡಿತಗೊಳಿಸಲಾಯ್ತು. ಕಾಲಕಾಲಕ್ಕೆ ಹೊಸಪ್ರಶ್ನೆಗಳು ಏಳತೊಡಗಿದಾಗ ಅವುಗಳನ್ನು ಹತ್ತಿಕ್ಕಲು ಹೊಸಹೊಸ ಆಚರಣೆಗಳ ಜಾರಿಗೊಳಿಸಲಾಯ್ತು.

ಇದುವೆ ಪಿತೃಪ್ರಾಧಾನ್ಯ ಅಥವಾ ಗಂಡು ಮೇಲರಿಮೆ. ಪಿತೃಪ್ರಾಧಾನ್ಯ ವಿಶ್ವದ ಬಹುತೇಕ ಸಮಾಜಗಳಲ್ಲಿ ಚಾಲ್ತಿಯಲ್ಲಿದೆ. ಇದು ಜಾಕ್ ಪ್ರತಿನಿಧಿಸುವ ಸಮಾಜಕ್ಕೂ, ಅವರು ಪ್ರತಿನಿಧಿಸುವ ಸಂಸ್ಥೆಗೂ ಅನ್ವಯಿಸುತ್ತದೆ. ಮುಂದುವರಿದ ಪಾಶ್ಚಾತ್ಯ ಸಮಾಜಗಳಲ್ಲೂ ನಾನಾ ಲಿಂಗಾಧಾರಿತ ತಾರತಮ್ಯಗಳು ಇವತ್ತಿಗೂ ಚಾಲ್ತಿಯಲ್ಲಿವೆ. ಬಹುಪಾಲು ಬಹುರಾಷ್ಟ್ರೀಯ ಕಂಪನಿಗಳಲ್ಲಿ ಲಿಂಗಾಧಾರಿತ ಉದ್ಯೋಗ ತಾರತಮ್ಯ, ವೇತನ ತಾರತಮ್ಯ ಮುಂದುವರೆದಿದೆ. ಹಾಗಾಗಿ ಜಾಕ್ ಆ ಪೋಸ್ಟರ್ ಹಿಡಿಯುವ ಮೂಲಕ ತಮ್ಮ ಸಮಾಜ-ಕಂಪನಿಯ ಪಿತೃಪ್ರಾಧಾನ್ಯ ಕೊನೆಗೊಳಿಸಲು ಮುಂದಾಗುವ ಇಚ್ಛೆ ಹೊಂದಿದ್ದಲ್ಲಿ ಅದು ಸ್ವಾಗತಾರ್ಹ ಎನ್ನಬಹುದು.

ಆದರೆ ಅವರ ಪೋಸ್ಟರು ಕೆಲವು ಭಾರತೀಯರನ್ನು ಕೆರಳಿಸಲು ಕಾರಣ ಅದರಲ್ಲಿದ್ದ ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ಎಂಬ ಪದ. ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡಂತೆ, ಒಂದು ಶೋಷಕ ಮನಸ್ಥಿತಿಯ ಪ್ರತೀಕವಾದ ಪದದ ಮೊದಲೆರೆಡು ಅಕ್ಷರಗಳನ್ನು ತಮ್ಮ ಜಾತಿಯ ಹೆಸರಲ್ಲಿಟ್ಟುಕೊಂಡವರು ತಮ್ಮನ್ನೇ ನಿಂದಿಸಿದಂತೆ ಕೆರಳಿದರು. ಆ ಬ್ರಹ್ಮಜ್ಞಾನಿಗಳಿಗೆ ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ಎನ್ನುವುದು ಬ್ರಾಹ್ಮಣ ಜಾತಿಯಲ್ಲಿ ಹುಟ್ಟಿದವರನ್ನು ಬೈಯಲು ರೂಪಿಸಿದ ಪದವಲ್ಲ, ಬದಲಾಗಿ ಅದೊಂದು ಮನಸ್ಥಿತಿ; ಈ ದೇಶದ ಹೆಣ್ಣುಗಳನ್ನು, ಅಧಿಕಾರಹೀನರನ್ನು ತುಳಿಯಲು ಮಾಡಿಕೊಂಡ ಒಂದು ದುಷ್ಟ ಚೌಕಟ್ಟು ಎಂದು ಅರ್ಥವೇ ಆಗಲಿಲ್ಲ. ದಾರವಂತರು ತಿಳಿಯಲಿ: ಜಾತಿ-ಲಿಂಗದ ಕಾರಣವಾಗಿ ಮನುಷ್ಯರನ್ನು ಕೀಳಾಗಿ ನಡೆಸಿಕೊಳ್ಳುವುದು, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವವನ್ನು ನಿರಾಕರಿಸುವುದು, ತಾನು ಶ್ರೇಷ್ಠ ಎಂಬ ಜಾತಿ/ಲಿಂಗ ಮೇಲರಿಮೆಯನ್ನು ಉಳಿದವರ ಮೇಲೆ ಹೇರುವುದು ಬ್ರಾಹ್ಮಣೀಯ ಪಿತೃಪ್ರಾಧಾನ್ಯ. ಅದು ಈ ನೆಲದ, ಸಂವಿಧಾನದ ಆಶಯಗಳಿಗೆ ವಿರುದ್ಧ. ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆಯ ನಾಶ ಎಂದರೆ ಬ್ರಾಹ್ಮಣರ ನಾಶವಲ್ಲ; ಜಾತಿ ಮೇಲರಿಮೆಯ ನಾಶ.

ಭಾರತದ ಪಿತೃಪ್ರಾಧಾನ್ಯತೆಯನ್ನು ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ಎನ್ನಲು ಕಾರಣಗಳಿವೆ. ಪಿತೃಪ್ರಾಧಾನ್ಯವನ್ನು ಭಾರತದಲ್ಲಿ ಮತ್ತಷ್ಟು ಅಸಹನೀಯಗೊಳಿಸಿರುವುದು ಮತ್ತು ದುಷ್ಟಗೊಳಿಸಿರುವುದು ಇಲ್ಲಿನ ಜಾತಿವ್ಯವಸ್ಥೆ. ಅದು ಎರಡಲಗಿನ ಕತ್ತಿಯಾಗಿ ಈ ದೇಶದ ಹೆಣ್ಣುಗಳ ಘನತೆಯ ಬದುಕಿಗೆ ಎರವಾಗಿದೆ. ಭಾರತದ ಜಾತಿಪದ್ಧತಿಯು ನಡತೆ, ವ್ಯಕ್ತಿತ್ವ, ಸಾಧನೆ, ಉದಾತ್ತತೆ ಮುಂತಾದ ಗುಣಗಳಿಂದ ಅಲ್ಲ; ಹುಟ್ಟಿನಿಂದ ಬ್ರಾಹ್ಮಣರನ್ನು ಶ್ರೇಷ್ಠರೆಂದು ವರ್ಗೀಕರಿಸಿದೆ. ಅವರಿಗೆ ಎಲ್ಲ ವಿಶೇಷ ಸವಲತ್ತು, ಮೀಸಲಾತಿಗಳನ್ನು ಪ್ರಶ್ನಾತೀತವಾಗಿ ಕೊಟ್ಟಿದೆ. ಹುಟ್ಟಿನಿಂದಲೇ ಯಾವುದಾದರೂ ಮೇಲು ಅಥವಾ ಕೀಳೆಂದು ನಿರ್ಧಾರ ಮಾಡುವುದು ಪ್ರಕೃತಿ ವಿರೋಧಿ ತತ್ವ. ಆದರೆ ಜಾತಿಹೆಮ್ಮೆ, ಜಾತಿಪ್ರಜ್ಞೆ, ಜಾತಿ ಶ್ರೇಷ್ಠತೆಯ ವ್ಯಸನಗಳು ಬ್ರಾಹ್ಮಣರ ನಂತರದವೆಂದು ಗುರುತಿಸಲ್ಪಟ್ಟ ಸಾವಿರಾರು ಜಾತಿಗಳಿಗೂ ಹಾಗೇ ಸೋಸಿಕೊಂಡು ಇಳಿಯಿತು. ಅಂಬೇಡ್ಕರ್ ಮನೋಜ್ಞವಾಗಿ ವಿಶ್ಲೇಷಿಸಿರುವಂತೆ ಭಾರತದ ಪ್ರತಿಜಾತಿಯೂ ತಾನು ಮತ್ತೊಂದು ಜಾತಿಗಿಂತ ಶ್ರೇಷ್ಠ ಎಂಬ ಹಿರಿಮೆಯಲ್ಲಿ ಕೆಳಗಿನ ಜಾತಿಯನ್ನು ತುಳಿಯುವುದರಲ್ಲಿ ಮೇಲಿನ ಜಾತಿಯ ತುಳಿತವನ್ನು ಮರೆಯುತ್ತದೆ. ಹೀಗೆ ಬ್ರಾಹ್ಮಣ್ಯವು – ಎಂದರೆ ಅಸಮಾನತೆಯ ಉತ್ಸಾಹ, ಜಾತಿ ಮೇಲರಿಮೆ, ಜನ್ಮಜಾತ ಜಾತಿಅಸ್ಮಿತೆಗಳು – ಪ್ರತಿಜಾತಿಗೂ ಸೋಸಿಕೊಂಡು ಇಳಿದಿವೆ. ಬ್ರಾಹ್ಮಣ್ಯ ಮತ್ತು ಪಿತೃಪ್ರಾಧಾನ್ಯ ಸೇರಿ ಪ್ರತಿ ಜಾತಿಯ ಹೆಣ್ಣುಗಳನ್ನೂ ಬಾಧಿಸುತ್ತಿರುವುದು ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ಎನಿಸಿಕೊಂಡಿದೆ. ಭಾರತದ ಪ್ರತಿಜಾತಿಯಲ್ಲೂ, ಪ್ರತಿಧರ್ಮದಲ್ಲೂ ಪಿತೃಪ್ರಾಧಾನ್ಯವಿದೆ; ಪಿತೃಪ್ರಾಧಾನ್ಯತೆ ಅಷ್ಟೇ ಅಲ್ಲ, ಬ್ರಾಹ್ಮಣೀಯ ಪಿತೃಪ್ರಾಧಾನ್ಯವಿದೆ.

ಅಂಬೇಡ್ಕರರು ಹೇಳಿದ್ದು 

ಅಂಬೇಡ್ಕರರು ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆದ ಜಿಐಪಿ ರೈಲ್ವೇ ವರ್ಕ್‌ಮೆನ್ಸ್ ಕಾನ್ಫರೆನ್ಸ್‌ನಲ್ಲಿ ಇಂಡಿಪೆಂಡೆಂಟ್ ಲೇಬರ್ ಪಾರ್ಟಿ ಅಧ್ಯಕ್ಷರಾಗಿ ಹಾಗೂ ಸಮ್ಮೇಳನದ ಅಧ್ಯಕ್ಷರಾಗಿ ಮಾತನಾಡುತ್ತ ೧೯೩೮ರಲ್ಲಿ ಮನೋಜ್ಞವಾಗಿ ಹೇಳಿದ್ದು ಗಮನಾರ್ಹವಾಗಿದೆ:

” ‘ಬ್ರಾಹ್ಮಣಿಕೆಯು ಪರಿಗಣಿಸಲೇಬೇಕಾದ ಶತ್ರು’ ಎಂಬ ನನ್ನ ಹೇಳಿಕೆ ಅಪಾರ್ಥಕ್ಕೊಳಗಾಗುವುದು ನನಗಿಷ್ಟವಿಲ್ಲ. ಬ್ರಾಹ್ಮಣಿಕೆಯೆಂದರೆ ಒಂದು ಸಮುದಾಯವಾಗಿ ಬ್ರಾಹ್ಮಣರ ಶಕ್ತಿ, ಅಧಿಕಾರ, ಅವಕಾಶ, ಆಸಕ್ತಿಯೆಂದಷ್ಟೇ ನಾನು ತಿಳಿಯುವುದಿಲ್ಲ. ಬ್ರಾಹ್ಮಣಿಕೆಯೆಂದರೆ ಸ್ವಾತಂತ್ರ್ಯ, ಸೋದರತೆ, ಸಮಾನತೆಯನ್ನು ನಾಶ ಮಾಡುವ ಶಕ್ತಿ. ಈ ಅರ್ಥದಲ್ಲಿ ಎಲ್ಲ ಜಾತಿ-ವರ್ಗಗಳಲ್ಲೂ ಬ್ರಾಹ್ಮಣಿಕೆಯಿದೆ ಮತ್ತು ಇದನ್ನು ಹುಟ್ಟುಹಾಕಿದವರು ಬ್ರಾಹ್ಮಣರಾದರೂ ಅವರಿಗಷ್ಟೇ ಇದು ಸೀಮಿತವಾಗಿಲ್ಲ. ಎಲ್ಲ ಕಡೆ ಕಾಣುವ, ಎಲ್ಲರ ಯೋಚನೆ-ಕ್ರಿಯೆಯನ್ನು ಹಿಡಿತದಲ್ಲಿಟ್ಟುಕೊಂಡಿರುವುದು ಇದೇ ಬ್ರಾಹ್ಮಣಿಕೆಯೆಂಬುದು ಅವಿವಾದಿತ ಸತ್ಯ. ಇದು ಕೆಲವರಿಗಷ್ಟೇ ಹೆಚ್ಚು ಅವಕಾಶ ಮಾಡಿಕೊಡುತ್ತದೆಂಬುದೂ ವಿವಾದಾತೀತ ಸಂಗತಿ. ಕೆಲ ವರ್ಗಗಳಿಗೆ ಇದು ಅವಕಾಶಗಳಲ್ಲಿ ಸಮಾನತೆಯನ್ನು ನಿರಾಕರಿಸುತ್ತದೆ. ಬ್ರಾಹ್ಮಣಿಕೆಯು ಅಂತರ್ಜಾತಿ ಭೋಜನ, ಅಂತರ್ಜಾತಿ ವಿವಾಹಗಳಂಥ ಸಾಮಾಜಿಕ ಹಕ್ಕುಗಳನ್ನು ತಡೆಯುವುದಕ್ಕಷ್ಟೇ ಸೀಮಿತವಾಗಿಲ್ಲ. ಅದು ಪೌರ ಹಕ್ಕುಗಳಿಗೂ ವಿಸ್ತರಿಸುತ್ತದೆ… ಕೋಟಿಗಟ್ಟಲೆ ಜನರಿಗೆ ಪೌರ ಹಕ್ಕುಗಳನ್ನು ನಿರಾಕರಿಸಲಾಗಿದೆ. ಸಾವಿರಾರು ವರ್ಷಗಳಿಂದ ಆಚರಣೆಯಲ್ಲಿರುವ, ಈಗಲೂ ಉರಿಯುವ ಕೊಳ್ಳಿಯಂತೆ ಜೀವಂತವಾಗಿರುವ ಬ್ರಾಹ್ಮಣಿಕೆಯೇ ಇಂದಿನ ಸಮಸ್ಯೆಗಳಿಗೆ ಕಾರಣವೆಂಬುದನ್ನು ಯಾರಾದರೂ ಸಂಶಯಿಸಲು ಸಾಧ್ಯವೆ?

ಬ್ರಾಹ್ಮಣಿಕೆ ಎಂದರೆ ಅಸಮಾನತೆಯ ಉತ್ಸಾಹ.. ಬ್ರಾಹ್ಮಣ್ಯವು ಜೀವಂತ ಶಕ್ತಿಯಾಗಿರುವ ತನಕ, ಅದು ಕೊಡುವ ಸವಲತ್ತಿಗಾಗಿ ಕೆಲವರು ಬ್ರಾಹ್ಮಣ್ಯಕ್ಕೆ ಅಂಟಿಕೊಂಡಿರುವ ತನಕ ಅದರಿಂದ ತೊಂದರೆಗೊಳಗಾದವರು ಸಂಘಟಿತರಾಗಲೇಬೇಕಾಗಿದೆ. ಹಾಗೆ ಅದರ ವಿರುದ್ಧ ಸಂಘಟಿತರಾಗುವುದರಲ್ಲಿ ತಪ್ಪೇನಿದೆ?”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...