Homeಅಂಕಣಗಳುಪತ್ರಕರ್ತರೇ ಕಳ್ಳ ಜ್ಯೋತಿಷಿಗಳಾದಾಗ!

ಪತ್ರಕರ್ತರೇ ಕಳ್ಳ ಜ್ಯೋತಿಷಿಗಳಾದಾಗ!

- Advertisement -
- Advertisement -

ಮೂಢನಂಬಿಕೆಗಳೆಂದರೆ ಸಿಡಿಯುತ್ತಿದ್ದ ‘ಮುಂಗಾರು’ ಪತ್ರಿಕೆ ಬಿಟ್ಟ ಮೇಲೆ ನಾನು ಕೆಲವು ಸಂಜೆ ಪತ್ರಿಕೆಗಳಲ್ಲೂ ಕೆಲಸ ಮಾಡಿದ್ದೆ. ಇವೆಲ್ಲವೂ ದಿನ ಭವಿಷ್ಯ ಪ್ರಕಟಿಸುತ್ತಿದ್ದವು. ಆದರೆ, ಲೇವಡಿಯ ಹೊರತು ನಾವೇನೂ ಮಾಡುವಂತಿರಲಿಲ್ಲ!
ಈ ಭವಿಷ್ಯಗಳು ಹಿಂದೆ ಹವಾಮಾನ ಇಲಾಖೆಯ ಭವಿಷ್ಯಗಳಂತೆ ಇರುತ್ತಿದ್ದವು- ‘ರಾಜ್ಯದ ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಲಿದೆ’. ಒಂದೆರಡು ಹಳ್ಳಿಗಳಲ್ಲಿ ನಾಲ್ಕು ಹನಿ ಬಿದ್ದರೂ ಭವಿಷ್ಯ ನಿಜವಾಗುತ್ತದೆ!
ಮನೆಯಲ್ಲಿ ಮನಸ್ತಾಪ, ಹೆಂಡತಿ ಜೊತೆ ಜಗಳ, ಹಣದ ಮುಗ್ಗಟ್ಟು, ಸಹೋದ್ಯೋಗಿಗಳಿಂದ ಕಿರುಕುಳ, ಮೇಲಧಿಕಾರಿಗಳಿಂದ ದಬ್ಬಾಳಿಕೆ, ಸಾಲಗಾರರಿಂದ ತೊಂದರೆ ಇತ್ಯಾದಿಗಳೂ, ಲಾಟರಿಯಲ್ಲಿ ಅದೃಷ್ಟ, ಮಕ್ಕಳಿಂದ ಮನಸ್ಸಿಗೆ ಉಲ್ಲಾಸ, ಸದ್ಯವೇ ಭಡ್ತಿ ಯೋಗ ಇತ್ಯಾದಿಗಳೂ ಇರುತ್ತಿದ್ದವು! ನಾವು ತಮಾಷೆಗೆ ಮಿತ್ರನಿಂದ ಪುತ್ರಭಾಗ್ಯ ಇತ್ಯಾದಿಯಾಗಿ ಲೇವಡಿಯನ್ನೂ ಮಾಡುತ್ತಿದ್ದೆವು. ಇವೆಲ್ಲಾ ಪ್ರತಿಯೊಬ್ಬರ ಜೀವನದಲ್ಲಿ ಸಾಮಾನ್ಯವಾಗಿರುವುದರಿಂದ ಓದುಗರಿಗೆ ಹೇಗೋ ಒಂದೊಂದು ರೀತಿಯಲ್ಲಿ ಹೊಂದಾಣಿಕೆಯಾಗುತ್ತಿದ್ದವು.
ಒಂದು ಪತ್ರಿಕೆಯಲ್ಲಿ ಒಬ್ಬರು ಜ್ಯೋತಿಷಿ ವಾರಕ್ಕೊಮ್ಮೆ ಬಂದು ಇಡೀ ವಾರದ ಭವಿಷ್ಯ ಬರೆದು ತಂದುಕೊಟ್ಟು ಹೋಗುತ್ತಿದ್ದರು! ಸುಮ್ಮನೇ ಹೋಗುತ್ತಿರಲಿಲ್ಲ- ಜ್ಯೋತಿಷ್ಯದ ಬಗ್ಗೆ ಕೊರೆದೇ ಹೋಗುತ್ತಿದ್ದರು! ಇದರಿಂದ ಈ ಮಹಾನ್ ಬುರುಡೆ ಶಾಸ್ತ್ರದ ನನ್ನ ಜ್ಞಾನ ಅಪಾರ ಅಭಿವೃದ್ಧಿಯಾಯಿತು!
ಒಂದು ಸಲ ಅವರು ಬರಬೇಕಾದ ದಿನ ಬರಲಿಲ್ಲ. ಏನು ಮಾಡುವುದು ಎಂದು ಉಪಸಂಪಾದಕನಿಗೆ ತಲೆಬಿಸಿ! ‘ತಲೆಬಿಸಿ ಎಂತಕ್ಕೆ? ಹಿಂದಿನದ್ದೇ ಒಂದು ಹಾಕು!’ ಎಂದೆ ನಾನು. ಇದು ಓದುಗರಿಗೆ ಮೋಸ ಎಂದು ನನಗೆ ಅನಿಸಲಿಲ್ಲ! ಮೊದಲೇ ಸುಳ್ಳು! ಆ ಸುಳ್ಳಿನಲ್ಲಿ ಮತ್ತೆ ಮೋಸ ಎಂತದ್ದು!? ಅವರು ಮರುದಿನವೂ ಬರಲಿಲ್ಲ! ಈ ಪರಿಪಾಠ ಮುಂದುವರಿಯಿತು. ಕೆಲವು ದಿನಗಳ ನಂತರ ಅತಂಕದಿಂದಲೇ ಬಂದರು- ಬರೆಯುವ ಅವಕಾಶ ತಪ್ಪಿ ಹೋಯಿತೆ ಎಂದು. ಯಾಕೆಂದರೆ, ಪತ್ರಿಕೆಯಲ್ಲಿ ಪ್ರತೀದಿನ ಹೆಸರು ಪ್ರಕಟವಾಗುತ್ತಿದ್ದುದರಿಂದ ಅವರಿಗೆ ಉಚಿತ ಜಾಹೀರಾತು! ಇದರಿಂದ ಕುರಿಗಳ- ಕ್ಷಮಿಸಿ, ಗಿರಾಕಿಗಳ ಸಂಖ್ಯೆ ಹೆಚ್ಚುತ್ತಿತ್ತು!.
ಬಂದವರೇ, ”ನನಗೆ ಹುಷಾರಿರಲಿಲ್ಲ ಮಾರಾಯ್ರೆ! ಮಲೇರಿಯಾ! ನನ್ನ ಬದಲು ಭವಿಷ್ಯ ಯಾರು ಬರೆಯುತ್ತಿದ್ದುದು?” ಎಂದು ಕೇಳಿದರು. ಪಾಪ! ಎಲ್ಲರ ಸಮಸ್ಯೆಗಳನ್ನು ಮುಂಚಿತವಾಗಿ ಹೇಳುವ ಅವರಿಗೆ ತನಗೆ ಮಲೇರಿಯಾ ಬರಲಿದೆ ಎಂದು ಗೊತ್ತಿರಲಿಲ್ಲ! ಗೊತ್ತಿದ್ದರೆ ಮುಂಚಿತವಾಗಿ ಒಂದು ತಿಂಗಳದ್ದು ಬರೆದುಕೊಟ್ಟು ಹೋಗುತ್ತಿರಲಿಲ್ಲವೆ!?
ನಮ್ಮ ಸಂಪಾದಕರು ಸ್ವತಃ ಈ ಜ್ಯೋತಿಷ್ಯದ ಹುಚ್ಚನಾಗಿದ್ದರೂ ಮಹಾ ಕಿಡಿಗೇಡಿ!- (ಈಗ ಅವರಿಲ್ಲ!; ಅವರ ಆತ್ಮಕ್ಕೆ ಶಾಂತಿ ಸಿಗಲಿ!) ಯಾರೋ ಪ್ರಸಿದ್ಧ ಜ್ಯೋತಿಷಿಯ ಹೆಸರು ಹೇಳಿ ಬುರುಡೆಬಿಟ್ಟರು!
“ಹೋ! ಹೌದೆ? ನೋಡುವಾಗಲೇ ಅಂದಾಜಾಯಿತು- ಯಾರೋ ದೊಡ್ಡಜನ ಬರೆದದ್ದು ಅಂತ! ಸರೀಯಾಗಿತ್ತು!” ಎಂದು ಒತ್ತಿಹೇಳಿ, ಮುಂದಿನ ವಾರದ ಭವಿಷ್ಯ ಕೊಟ್ಟು ಹೋದರು. ಒಂದು ವೇಳೆ ಸಂಪಾದಕರು ಯಾವುದೋ ಕಾಂಜಿಪೀಂಜಿ ಹೆಸರು ಹೇಳಿರುತ್ತಿದ್ದರೆ, “ಛೇ! ಏನೇನೂ ಸರಿಯಿರಲಿಲ್ಲ!! ಮೂರನೇ ಮನೆಯಲ್ಲಿ ಕುಜ ಇರುವಾಗ….” ಎಂದೆಲ್ಲಾ ಕೊರೆಯುತ್ತಿದ್ದರು.
ನಂತರ ನಾನು ಸೇರಿದ ಸಂಜೆ ಪತ್ರಿಕೆ ಮಾಲಕರು ಪಕ್ಕಾ ವ್ಯಾಪಾರಿ. ಪತ್ರಿಕೆ ಅರಂಭವಾಗುವ ಮೊದಲೇ ಸೇರಿದ್ದ ನಾನು ಭವಿಷ್ಯ ಬೇಡವೆಂದರೂ ಕೇಳಲಿಲ್ಲ! ‘ಹೇ! ನಿಮಗೆ ಗೊತ್ತಿಲ್ಲ! ಅದಕ್ಕೇ ಓದುಗರಿದ್ದಾರೆ. ಭವಿಷ್ಯ ಬೇಕೇಬೇಕು. ದಿನ ಭವಿಷ್ಯದ ಜೊತೆಗೆ ವಾರಭವಿಷ್ಯವೂ ಬೇಕು’ ಎಂದರು. ಸರಿ ಡೆಸ್ಕಿನಲ್ಲೇ ಒಂದಷ್ಟು ಭವಿಷ್ಯ ಬರೆಯಲಾಯಿತು! ಅದನ್ನು ಡಿಟಿಪಿಯವರ ಕೈಗೆ ಒಪ್ಪಿಸಲಾಯಿತು! ಅವರೇ ಲಾಟರಿ ತೆಗೆದಂತೆ ತಿರುಗಿಸಿ ತಿರುಗಿಸಿ, ಒಂದೊಂದು ರಾಶಿಗೆ ಒಂದೊಂದು ಹಾಕುತ್ತಿದ್ದರು! ಇದರಲ್ಲಿ ಮೋಸವೇನೂ ಇಲ್ಲ! ಭವಿಷ್ಯ ಎಂದರೆ ‘ಅದೃಷ್ಟದ ಆಟ’ವಲ್ಲವೆ!!? ಗಿಣಿಶಾಸ್ತ್ರದಂತೆ ಗಿಣಿಯ ಬದಲು ಮನುಷ್ಯರು ಚೀಟಿ ಹೆಕ್ಕಿದಂತೆ ಆಯಿತಷ್ಟೇ!
ಇದನ್ನು ಓದಿದ ಮೇಲೆ, ನೀವೂ ನಿಮ್ಮ ಪತ್ರಿಕೆಗಳಲ್ಲಿ ಬರುವ ದಿನಭವಿಷ್ಯ ತಪ್ಪದೇ ಓದಿ ಮಾರ್ಗದರ್ಶನ ಪಡೆಯಿರಿ!
ಇದನ್ನು ಬರೆಯಲು ಕಾರಣವೆಂದರೆ, ಈ ರೀತಿ ಮಾಡದ ಪತ್ರಿಕೆಗಳೇ ಕಡಿಮೆ ಎಂದು ಹಳೆಯ ಪತ್ರಕರ್ತರನ್ನು ಕೇಳಿದರೆ ಸಾಕ್ಷಿ ಹೇಳುತ್ತಾರೆ. ನಾವು ಹಿಂದೆ ಮಾಡಿದ್ದು, ಮಹಾ ಅನೈತಿಕ ಅನಿಸಿದರೂ ಮಹಾ ಮೋಸವೆಂದು ನನಗನಿಸಿಲ್ಲ! ಇದರಿಂದ ನಮಗೇನೂ ಲಾಭವಿರಲಿಲ್ಲ! ಆದರೀಗ ಮಹಾಮೋಸಗಾರರ ಕದೀಮ ದಂಡೇ ಪತ್ರಿಕಾ ಮತ್ತು ದೃಶ್ಯ ಮಾಧ್ಯಮಗಳಲ್ಲಿ ವಕ್ಕರಿಸಿ ವಿಜ್ಞಾನದ ಕಪಾಳಕ್ಕೆ ಹೊಡೆಯುವಂತಹ ಸಂಶೋಧನೆಗಳನ್ನು ಯಾವುದೇ ನಾಚಿಕೆ ಅಥವಾ ಹಿಂಜರಿಕೆ ಇಲ್ಲದೇ ಬೊಗಳುತ್ತವೆ.
ಮೂಢನಂಬಿಕೆಗಳನ್ನು ನಿವಾರಿಸಬೇಕಾದ ಮಾಧ್ಯಮಗಳೇ ಅವುಗಳಿಗೆ ಪ್ರೋತ್ಸಾಹ ನೀಡಿ ಧನಲಾಭ ಮಾಡಿಕೊಳ್ಳುತ್ತಿವೆ. ಪತ್ರಿಕೆಗಳಲ್ಲಿ ಕೇವಲ ದಿನ, ವಾರ ಭವಿಷ್ಯಗಳೇ ಅಲ್ಲದೆ, ಮಹಾನ್ ಸಂಶೋಧನಾ ಲೇಖನಗಳೂ ಬರುತ್ತಿವೆ! ಪ್ರಳಯವಾಗುತ್ತದೆ ಎಂದು ಸಾವಿರಾರು ಜನರನ್ನು ಹೆದರಿಸಿದ ದಂಡಪಿಂಡ ಇಂದಿಗೂ ತನ್ನ ಬ್ರಹ್ಮಾಂಡ ಹೊಟ್ಟೆಯನ್ನು ಹೊತ್ತುಕೊಂಡು ಒದರುತ್ತಾ ಹೊಟ್ಟೆಹೊರೆದುಕೊಳ್ಳುತ್ತಿದ್ದಾನೆ!
ಕೇವಲ ಉದಾಹರಣೆಗಾಗಿ ಕೆಲವು ಪ್ರಸಿದ್ಧ ಪತ್ರಿಕೆಗಳಲ್ಲಿ ಬಂದ ಲೇಖನಗಳಿಂದಲೇ ನಾನು ಪಡೆದುಕೊಂಡ ಜ್ಞಾನವನ್ನು ಇಲ್ಲಿ ಹಂಚಿಕೊಳ್ಳುತ್ತಿದ್ದೇನೆ.
“ಕೆಲವರಿಗೆ ಎಷ್ಟು ಹುಡುಕಾಡಿದರೂ ಸರಿಯಾದ ಸಂಗಾತಿ ಸಿಗದೆ ಇರುವುದರಿಂದ ಮದುವೆ ವಿಳಂಬವಾಗಿರುತ್ತದೆ. ಇದಕ್ಕೆ ಜ್ಯೋತಿಷ್ಯದ ಪ್ರಕಾರ ಪಿತೃದೋಷ ಅಥವಾ ಸರ್ಪದೋಷವೆಂದು ಕರೆಯಲಾಗುತ್ತದೆ. ಆದರೆ ಈ ದೋಷಗಳನ್ನು ನಿವಾರಣೆ ಮಾಡಲು ಆಧ್ಯಾತ್ಮಿಕ ಪರಿಹಾರಗಳು ಇವೆ! ಇದನ್ನು ಪಾಲಿಸಿಕೊಂಡು ಹೋದರೆ ಮುಂದೆ ಸಂಗಾತಿ ಸಿಗುವುದರಲ್ಲಿ ಯಾವುದೇ ಸಂಶಯವಿಲ್ಲ!” ಇದು ಜೋಯಿಸರುಗಳ ಒಂದು ಸಾಮಾನ್ಯ ಬುರುಡೆ. ಪರಿಹಾರ ಇದೆ! ಲಾಭ ಗ್ಯಾರಂಟಿ- ಜೋಯಿಸರಿಗೆ!
ಎಂತಹ ವಿಚಿತ್ರ ನೋಡಿ! ‘ನನ್ನ ತಂಗಿಗೊಂದು ಗಂಡು ಕೊಡಿ’ ಎಂಬ ನಾಟಕವನ್ನೇ ಪಿ.ಲಂಕೇಶರು ಬರೆದಿದ್ದಾರೆ! ಬಹುತೇಕ ಜನರಿಗೆ ಈ ಸಮಸ್ಯೆ ಇದೆ! ಜಾತಿ, ಉಪಜಾತಿ, ಕುಲ, ಜಾತಕ, ನಕ್ಷತ್ರ, ಐಶ್ವರ್ಯ, ಅಂತಸ್ತು, ರೂಪ, ಬಣ್ಣ, ಗುಣ, ಎತ್ತರ, ವಿದ್ಯೆ…ಮಣ್ಣು ಮಸಣ ಎಂದು ಹೆಣಗಾಡುವುದರಿಂದ ಈ ಸಮಸ್ಯೆ ಉಂಟಾಗುವುದಿಲ್ಲ! ಇದಕ್ಕೆ ಪಿತೃದೋಷ, ಶನಿದೋಷ, ನಾಗದೋಷಗಳೇ ಕಾರಣ!
ಇದಕ್ಕೆ ಪರಿಹಾರ ನೋಡಿ! “ಹಾಲು, ಮೊಸರು, ಎಳನೀರು, ಹೂ, ಜೇನುತುಪ್ಪ, ಕಬ್ಬಿನ ಹಾಲು ಇತ್ಯಾದಿಯಿಂದ ಶಿವನ ಲಿಂಗಕ್ಕೆ ಅಭಿಷೇಕ ಮಾಡಬೇಕು.” (ಇದನ್ನೇ ಮಕ್ಕಳಿಗಾಗಲೀ, ಹಸಿದವರಿಗಾಗಲೀ ಕೊಟ್ಟರೆ ಫಲವಿಲ್ಲ!)
ಸೋಮವಾರ ಅಥವಾ ಶನಿವಾರದಂದೇ ಈ ಕಾರ್ಯಗಳನ್ನು ಮಾಡಬೇಕು. (ಬೇರೆ ದಿನಗಳಲ್ಲಿ ಇವುಗಳನ್ನು ಸೇವಿಸುವುದಿಲ್ಲ ಎಂದು ಟೈಮ್‍ಟೇಬಲ್ ಹಾಕಿರುವ ದೇವರು ಅದನ್ನು ಸೀಕ್ರೆಟಾಗಿ ಈ ಜೋಯಿಸರಿಗೆ ತಿಳಿಸಿರುತ್ತಾನೆ!)
“ಪಿತೃದೋಷ ಅಥವಾ ಶಿಕ್ಷೆಯನ್ನು ನಿವಾರಣೆ ಮಾಡುವ ಸಲುವಾಗಿ ಶನಿದೇವರನ್ನು ಒಲಿಸಿಕೊಳ್ಳಲು ಹನುಮಂತನಿಗೆ ಹರಕೆ ಒಪ್ಪಿಸಬೇಕು! ಅಥವಾ ಓಂ ಶಂ ಶನೈಶ್ಚರಾಯ ನಮಃ ಮಂತ್ರವನ್ನು ಪಠಿಸಬೇಕು.” ಇದೆಂತಹ ಲಾಜಿಕ್ ಎಂದು ಅರ್ಥವಾಗುವುದಿಲ್ಲ. ಈಗ ಬೆಂಗಳೂರು ಮತ್ತಿತರ ನಗರಗಳಲ್ಲಿ ಶನಿದೇವರು ಜೀಪು ರಥದಲ್ಲಿ ಪ್ರದಕ್ಷಿಣೆ ಬಂದು ಕಲೆಕ್ಷನ್ ಮಾಡುವುದರಿಂದ ಮತ್ತು ಹಳ್ಳಿಹಳ್ಳಿಗಳಲ್ಲಿ ಸಾಮೂಹಿಕ ಶನಿಪೂಜೆಗಳು ನಡೆಯುತ್ತಿರುವುದರಿಂದ ಆತನ ವಿಷಯದಲ್ಲಿ ಹನುಮಂತನಿಗೇನು ಕೆಲಸ? ಇದು ಅನ್‍ಫೇರ್ ಟ್ರೇಡ್ ಪ್ರ್ಯಾಕ್ಟೀಸ್ ಆಗುವುದಿಲ್ಲವೇ!?
ಇದೇ ರೀತಿಯಲ್ಲಿ ಪಿತೃದೋಷ, ಶನಿದೋಷ, ನಾಗದೋಷ, ಗ್ರಹದೋಷಗಳಿಂದ ನಿಮಗೆ ಆಗುವ ಅನಾಹುತಗಳನ್ನೂ, ಅದರಿಂದ ಜೋಯಿಸರಿಗೆ ಆಗುವ ಲಾಭಗಳನ್ನು ಮುಂದೆ ನೋಡೋಣ!

– ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...