Homeಕರ್ನಾಟಕಭ್ರಮಗಳಲ್ಲಿ ಬದುಕದೆ, ಭ್ರಮನಿರಸನಕ್ಕೂ ಗುರಿಯಾಗದೆ ಮುಂದಡಿ ಇಡಬೇಕಾದ ಕಾಲ

ಭ್ರಮಗಳಲ್ಲಿ ಬದುಕದೆ, ಭ್ರಮನಿರಸನಕ್ಕೂ ಗುರಿಯಾಗದೆ ಮುಂದಡಿ ಇಡಬೇಕಾದ ಕಾಲ

ಬದುಕು ಭ್ರಮೆಗಳ ಮೇಲೆ ನಡೆಯುವುದಿಲ್ಲ. ಕೃಷಿ ಬಿಕ್ಕಟ್ಟು ಭ್ರಮೆಯಲ್ಲ, ನಿರುದ್ಯೋಗ ಭ್ರಮೆಯಲ್ಲ, ವೇತನಗಳ ಕಡಿತ, ದಮನಿತರ ಮೇಲಿನ ದಾಳಿ, ಮಹಿಳೆಯರ ಮೇಲೆ ಹೆಚ್ಚುತ್ತಿರುವ ಅತ್ಯಾಚಾರಗಳು, ಕುಡಿತ, ಬೆಲೆ ಏರಿಕೆ, ಮೊಟಕುಗೊಳ್ಳುತ್ತಿರುವ ಸಂವಿಧಾನಾತ್ಮಕ ಹಕ್ಕುಗಳು ಯಾವುದೂ ಭ್ರಮೆಯಲ್ಲ.

- Advertisement -
- Advertisement -

|ನ್ಯಾಯಪಥ ಸಂಪಾದಕೀಯ|

“ಭ್ರಮೆಗಳಿಗೂ ಒಳಗಾಗದೆ ಭ್ರಮನಿರಸನಕ್ಕೂ ಗುರಿಯಾಗದೆ ಮುನ್ನಡೆಯಬೇಕಿರುವುದೇ ಇಂದಿನ ಸಮಾಜದ ಮುಂದಿರುವ ಅತಿದೊಡ್ಡ ಸವಾಲು” – ಇಟಲಿಯ ಸರ್ವಾಧಿಕಾರಿ ಆಳ್ವಿಕೆಯಡಿ ಜೈಲುಪಾಲಾಗಿ 1937ರಲ್ಲಿ ಜೈಲಲ್ಲೇ ಮರಣ ಹೊಂದಿದ ದಿಟ್ಟ ಹೋರಾಟಗಾರ, ಅಚ್ಚರಿಯ ಚಿಂತಕ ಆಂಟೋನಿಯೋ ಗ್ರಾಮ್ಷಿ ತಮ್ಮ ಜೈಲು ನೋಟ್ ಬುಕ್ಕಿನಲ್ಲಿ ಬರೆದ ಮಾತಿದು.

‘ಬಂಡವಾಳಶಾಹಿ ವ್ಯವಸ್ಥೆ ಸೃಷ್ಟಿಸಿರುವ ಸಮೂಹ ಉನ್ಮಾದಿ ಫ್ಯಾಸಿಸಂ ಅನ್ನು ಬೇಗನೇ ಸೋಲಿಸಿಬಿಡಬಹುದೆಂಬ ಭ್ರಮೆಗಳಿಗೂ ಒಳಗಾಗಬಾರದು. ಫ್ಯಾಸಿಸ್ಟ್ ಶಕ್ತಿಯನ್ನು ಮಣಿಸಲು ಸಾಧ್ಯವೇ ಇಲ್ಲ ಎಂಬ ಭ್ರಮನಿರಸನಕ್ಕೂ ಗುರಿಯಾಗದೆ ತಾಳ್ಮೆ, ವಿವೇಕ ಮತ್ತು ದೃಢ ಸಂಕಲ್ಪದ ಜೊತೆ ಕೆಲಸ ಮಾಡಬೇಕಾದ ಸಂದರ್ಭವಿದು’ ಎಂಬುದು ಅವರ ಮಾತಿನ ಅರ್ಥ. ಗ್ರಾಮ್ಷಿ ಹೇಳಿದಂತೆ ಅಂತಿಮವಾಗಿ ಫ್ಯಾಸಿಸಂ ಸೋತಿತು.

ಗ್ರಾಮ್ಷಿಯಂಥ ಸಹಸ್ರಾರು ಹೋರಾಟಗಾರರನ್ನು ಕೊಂದಿದ್ದ, ಫ್ಯಾಸಿಸಂ ಎಂಬ ಸಾಮಾಜಿಕ ಸರ್ವಾಧಿಕಾರಿ ವಿದ್ಯಮಾನಕ್ಕೆ ಚಾಲನೆ ನೀಡಿದ, ಹಿಟ್ಲರನ ವಿನಾಶಕಾರಿ ಚಿಂತನೆಗಳಿಗೆ ಸ್ಫೂರ್ತಿಯ ಸೆಲೆಯಾಗಿದ್ದ ಸರ್ವಾಧಿಕಾರಿ ಮುಸಲೋನಿ ಕೊನೆಯಲ್ಲಿ ತನ್ನ ಜನರ ಕೈಯಲ್ಲೇ ಕಲ್ಲಲ್ಲಿ ಹೊಡೆಸಿಕೊಂಡು ಸತ್ತ. ಆದರೆ ಫ್ಯಾಸಿಸಂ ಸುಲಭಕ್ಕೇನೂ ನಾಶವಾಗಿರಲಿಲ್ಲ. ಜನಾಂಗೀಯ ಹತ್ಯೆ ಹಾಗೂ ಪ್ರಪಂಚ ಯುದ್ಧದ ರೂಪದಲ್ಲಿ ವಿವರಿಸಲು ಅಸಾಧ್ಯವಾದ ನಷ್ಟಗಳಿಗೆ ಜಗತ್ತನ್ನು ಗುರಿಮಾಡಿತು. ಹೋರಾಟನಿರತ ಜನ ಧೀರ ಹಾಗೂ ದೀರ್ಘ ಸಂಘರ್ಷದ ಮೂಲಕ ಫ್ಯಾಸಿಸಂಅನ್ನು ಮಣಿಸಿ ಹಿಮ್ಮೆಟ್ಟಿಸುವಲ್ಲಿ ಅಂತಿಮವಾಗಿ ಯಶಸ್ವಿಯಾದರು. ಗ್ರಾಮ್ಷಿಯ ಮಾತನ್ನು ಮತ್ತೊಮ್ಮೆ ನೆನಪಿಸಿಕೊಳ್ಳಬೇಕಾದ, ಅನ್ವಯಿಸಿಕೊಳ್ಳಬೇಕಾದ ಸಂದರ್ಭ ನಮ್ಮ ಮುಂದಿದೆ.

2019ರ ಚುನಾವಣಾ ಫಲಿತಾಂಶ 2014ರ ಚುನಾವಣಾ ಫಲಿತಾಂಶಕ್ಕಿಂತಲೂ ಘೋರ ಚಿತ್ರಣವನ್ನು ನಮ್ಮ ಮುಂದೆ ತೆರೆದಿಟ್ಟಿದೆ. ಸುಳ್ಳುಗಳ ಸರಮಾಲೆ, ಹಣದ ಹೊಳೆ, ಎಲೆಕ್ಷನ್ ಕಮಿಷನ್ನಿನ ದುರ್ಬಳಕೆ, ಪುಲ್ವಾಮ ದಾಳಿಯ ದುರ್ಬಳಕೆ, ಧ್ಯಾನದ ನಾಟಕ, ಇವಿಯಂ ತಿರುಚುವಿಕೆಯ ಸಾಧ್ಯತೆ ಈ ಎಲ್ಲಾ ಕಳ್ಳ ಮಾರ್ಗಗಳನ್ನು ಬಿಜೆಪಿ ಮತ್ತು ಸಂಘಪರಿವಾರ ಈ ಚುನಾವಣೆಯಲ್ಲಿ ಯಥೇಚ್ಛವಾಗಿ ಬಳಸಿದೆ. ಆದರೆ ಅದರಿಂದಲೇ ಅದು ಗೆದ್ದಿದೆ ಎಂದುಕೊಂಡರೆ ನಾವು ನಮ್ಮ ದೇಶದಲ್ಲಿ ರೂಪಗೊಳ್ಳುತ್ತಿರುವ ಅಪಾಯಕಾರಿ ಸಾಮಾಜಿಕ-ಆರ್ಥಿಕ-ರಾಜಕೀಯ ವಿದ್ಯಮಾನವನ್ನು ಅರ್ಥಮಾಡಿಕೊಳ್ಳುವಲ್ಲಿ ವಿಫಲಗೊಳ್ಳುತ್ತೇವೆ. ಸರ್ವಾಧಿಕಾರಿ ಮೌಲ್ಯ, ಮನಸ್ಥಿತಿ ಹಾಗೂ ಶಕ್ತಿ ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ವ್ಯವಸ್ಥಿತವಾಗಿ ಹರಡಿ ಬೆಳೆದಿರುವುದನ್ನು ಮತ್ತು ಬೆಳೆಯುತ್ತಿರುವುದನ್ನು ಚುನಾವಣಾ ಫಲಿತಾಂಶಗಳು ತೋರಿಸುತ್ತಿವೆ.

2014ರ ಚುನಾವಣೆಗಿಂತ 2019ರ ಚುನಾವಣೆಯಲ್ಲಿ ಅತಿ ದುಷ್ಟ ಪಕ್ಷವಾದ ಬಿಜೆಪಿಯ ಸೀಟುಗಳ ಸಂಖ್ಯೆ ಹಾಗೂ ಓಟುಗಳ ಸಂಖ್ಯೆ ಎರಡೂ ಹೆಚ್ಚಾಗಿವೆ. ಬಿಜೆಪಿಯಲ್ಲೇ ಅತಿಉಗ್ರ ಸ್ವರೂಪದ ಚಿಂತನೆಗಳನ್ನು ಹೊಂದಿದ್ದ ಸಾಕ್ಷಿ ಮಹಾರಾಜ್, ಪ್ರಗ್ಯಾ ಸಿಂಗ್, ಕಟೀಲ್, ಹೆಗ್ಡೆ, ತೇಜಸ್ವಿ ಸೂರ್ಯರಂಥವರಿಗೆ ಟಿಕೆಟ್ ನೀಡಿದ್ದಲ್ಲದೆ ಅವರೆಲ್ಲರೂ ಹೆಚ್ಚಿನ ಅಂತರದಿಂದ ಗೆದ್ದಿದ್ದಾರೆ. ವಿರೋಧ ಪಕ್ಷವಾದ ಕಾಂಗ್ರೆಸ್ ರಾಷ್ಟ್ರೀಯ ಸ್ವರೂಪವನ್ನೇ ಕಳೆದುಕೊಂಡಿದೆ. 22 ರಾಜ್ಯಗಳಲ್ಲಿ ಕಾಂಗ್ರೆಸ್ ಕೊಚ್ಚಿಹೋಗಿದೆ. ದೇಶಕ್ಕೇ ಮಾದರಿ ಎಂದು ಕರೆಯಲಾದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ನೆಲೆಕಚ್ಚಿದ್ದಷ್ಟೇ ಅಲ್ಲದೆ ಈ ಎರಡೂ ಪಕ್ಷದ ಗಮನಾರ್ಹ ಓಟುಗಳು ಬಿಜೆಪಿ ಕಡೆ ದೃವೀಕರಣಗೊಂಡಿವೆ.

ತಮಿಳುನಾಡು ಹಾಗೂ ಒರಿಸ್ಸಾಗಳನ್ನು ಹೊರತುಪಡಿಸಿದರೆ ಪ್ರಾಂತೀಯ ಪಕ್ಷಗಳು ಬಿಜೆಪಿಯ ಆರ್ಭಟದಿಂದ ತತ್ತರಿಸಿವೆ. ಕಮ್ಯುನಿಸ್ಟ್ ಭದ್ರಕೋಟೆಯಾಗಿದ್ದ, ಆಮೇಲೆ ದೀದಿಯ ಬಿಗಿಮುಷ್ಠಿಯಲ್ಲಿದ್ದ ಬೆಂಗಾಲದ ಕೋಟೆಯನ್ನು ಬಿಜೆಪಿ ಬೇಧಿಸಿದೆ. ತಮಿಳುನಾಡು, ಕೇರಳಗಳಲ್ಲೂ ತನ್ನ ಅಸ್ತಿತ್ವವನ್ನು ಹೆಚ್ಚಿಸಿಕೊಂಡಿದೆ. ದೇವೇಗೌಡರಂಥ ದಿಗ್ಗಜರೇ ಸೋತಿದ್ದಾರೆ. ರಾಹುಲ್ ಗಾಂಧಿ ತಮ್ಮ ಪಾರಂಪರಿಕ ಕ್ಷೇತ್ರವಾದ ಅಮೇಥಿಯಲ್ಲಿ ಸೋತಿದ್ದಾರೆ. ಮಲ್ಲಿಕಾರ್ಜುನರಂಥ ಹಿರಿಯ ನಾಯಕರೇ ಸ್ವಕ್ಷೇತ್ರದಲ್ಲಿ ಸೋತಿದ್ದಾರೆ. ಪರ್ಯಾಯ ಶಕ್ತಿಗಳಾಗಿ ಗಮನ ಸೆಳೆದಿದ್ದ ಪ್ರಕಾಶ್ ರೈ, ಕನ್ಹಯ್ಯ ಕುಮಾರ್, ಪ್ರಕಾಶ್ ಅಂಬೇಡ್ಕರ್ ಮುಂತಾದ ಅಭ್ಯರ್ಥಿಗಳೆಲ್ಲರೂ ಸೋತಿದ್ದಾರೆ.

ಸರ್ವಾಧಿಕಾರಿ ಶಕ್ತಿಗಳು ನಮ್ಮ ದೇಶದ ಜನರ ಮಾನಸಿಕತೆಯ ಮೇಲೆ, ನಮ್ಮ ದೇಶದ ಸಾಮಾಜಿಕ ರಚನೆಯ ಮೇಲೆ, ನಮ್ಮ ದೇಶದ ಸಾಂಸ್ಥಿಕ ರಚನೆಗಳ ಮೇಲೆ, ಎಲ್ಲದಕ್ಕಿಂತ ಹೆಚ್ಚಾಗಿ ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಜಯ ಸಾಧಿಸಿವೆ. ದೇಶದ ಪ್ರಮುಖ ಕಾರ್ಪೊರೇಟ್ ಶಕ್ತಿಗಳು ಬಿಜೆಪಿಯ ಜೊತೆ ಬಲವಾಗಿ ಕೈಗೂಡಿಸಿದ್ದಾರೆ. ಇವರಿಬ್ಬರ ಅಕ್ರಮ ಸಂತಾನವಾದ ಮಾಧ್ಯಮ ಭ್ರಮಾಲೋಕವನ್ನು ಸೃಷ್ಟಿಸುತ್ತಿದೆ. ಆಳಲು ಬೇಕಾದ ಅಭಿಪ್ರಾಯಗಳನ್ನು, ಓಟುಗಳನ್ನು, ಸೀಟುಗಳನ್ನು ಉತ್ಪಾದಿಸುವ ಸುಸ್ಥಿತ ಸ್ಥಿತಿಯಲ್ಲಿ ಅವರಿದ್ದಾರೆ. ಮತ್ತೊಂದೆಡೆ ಅದನ್ನು ಎದುರಿಸಬಲ್ಲ ರಾಜಕೀಯ ಪರ್ಯಾಯ ಈ ದೇಶಕ್ಕೆ ಇಲ್ಲವಾಗಿದೆ. ಜನರ ವಿಶ್ವಾಸವನ್ನು ಗೆಲ್ಲಬಲ್ಲ, ಜನರಿಗೆ ವಿಶ್ವಾಸ ಬರುವಂಥ ಪರಿಹಾರಗಳನ್ನು ಮುಂದಿಡುವಂಥ, ಜನರು ವಿಶ್ವಾಸ ಇಡುವಂಥ ರೀತಿಯಲ್ಲಿ ನಡೆದುಕೊಳ್ಳಬಲ್ಲ, ಜನರ ಸಂಕಷ್ಟಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವಂತಹ ನಿಜವಾದ ಪರ್ಯಾಯ ರಾಜಕೀಯ ಶಕ್ತಿ ಇಲ್ಲವಾಗಿದೆ.

ಜನರ ವಿಶ್ವಾಸವನ್ನು ಗಳಿಸಿಕೊಳ್ಳುವುದರಲ್ಲಿ ಕಾಂಗ್ರೆಸ್ಸಿನಿಂದ ಹಿಡಿದು ಎಲ್ಲಾ ರಾಜಕೀಯ ಪಕ್ಷಗಳು ವಿಫಲಗೊಂಡಿವೆ. ದುರ್ಬಲ ವಿಪಕ್ಷಗಳಿಗಿಂತ ದೇಶ ಹಾಗೂ ಧರ್ಮದ ಬಗ್ಗೆ ಮಾತನಾಡುವ ಬಲಿಷ್ಟ ಪಕ್ಷ ಬಿಜೆಪಿ ಮತ್ತು ಮೋದಿ ಹೆಚ್ಚು ಆಕರ್ಷಿತರಾಗಿ ಕಾಣುತ್ತಿದ್ದಾರೆ. ಈ ಎಲ್ಲಾ ಆಳುವವರ ಬಣ್ಣವನ್ನು ಬಯಲುಗೊಳಿಸುವಂತಹ, ಜನರ ನಿಜವಾದ ಸಮಸ್ಯೆಗಳನ್ನು ಮುನ್ನೆಲೆಗೆ ತಂದು ದೇಶದ ರಾಜಕಾರಣದ ಕೇಂದ್ರವನ್ನಾಗಿ ಮಾಡಬಲ್ಲಂಥ ಚಳವಳಿಗಳ ಅಲೆಯೂ ಇಲ್ಲವಾಗಿದೆ. ಈ ನಿರ್ವಾತ ಬಿಜೆಪಿಯ ಸಮೂಹ ಸನ್ನಿ ರಾಜಕಾರಣಕ್ಕೆ ವಿಪುಲ ಅವಕಾಶಗಳನ್ನು ಒದಗಿಸುತ್ತಿದೆ.

ಮೇಲ್ಕಂಡ ಕಠೋರ ವಾಸ್ತವವನ್ನು ಯಾವ ಮುಚ್ಚುಮರೆಯೂ ಇಲ್ಲದೆ ಕಣ್ಣು ತೆರೆದು ನಾವು ನೋಡಬೇಕಿದೆ. ವಿಚಲಿತಗೊಳ್ಳುವುದಲ್ಲ, ಚಿವುಟಿಕೊಂಡು ಮಂಪರಿಂದ ಹೊರಬರಬೇಕಿದೆ. ಹೆದರುವುದಲ್ಲ ವಾಸ್ತವವನ್ನು ಎದುರಿಸಲು ಸಿದ್ಧರಾಗಬೇಕಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಎಂದು ಕರೆಯಲಾಗುವ ಈ ಬಲಾಢ್ಯರ ವ್ಯವಸ್ಥೆಯಲ್ಲಿ ದುಡಿಯುವವರು, ಬಡವರು, ಜನಪರರು ಗೆದ್ದು ಬರುವುದೇ ಕಷ್ಟ. ಇಡೀ ಸಮಾಜ, ಸರ್ಕಾರ, ಸಂಪತ್ತು, ಮಾಧ್ಯಮ ಅವರ ಕೈಯಲ್ಲಿರುವಾಗ ಚುನಾವಣೆಗಳಲ್ಲಿ ಬಿಜೆಪಿಯನ್ನು ಸೋಲಿಸುವುದು ಸುಲಭ ಸಾಧ್ಯವಿಲ್ಲ. ಒಂದು ವೇಳೆ ಚುನಾವಣೆಯಲ್ಲಿ ಸೋತರೂ ಸಮಾಜವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿರುವ ವಿಕೃತ ಸಂತಾನ ಸೋತುಬಿಡುವುದಿಲ್ಲ. ಬೆನ್ನು ಮೂಳೆ ಇಲ್ಲದ, ಪರ್ಯಾಯ ಸತ್ವವಿಲ್ಲದ ರಾಜಕೀಯ ವಿಪಕ್ಷಗಳನ್ನು ನಂಬಿ ಕೂತರೂ ಈ ಕೆಲಸ ಆಗುವುದಿಲ್ಲ. ಪರ್ಯಾಯ ಪ್ರಜ್ಞೆಯನ್ನು ಜನರಲ್ಲಿ ಉದ್ದೀಪನಗೊಳಿಸಬಲ್ಲ ಪ್ರಬಲ ಚಳವಳಿಯನ್ನೂ ಕಟ್ಟದೆ ಪರ್ಯಾಯ ಅಭ್ಯರ್ಥಿಗಳಾಗಿ ನಿಲ್ಲುವ ಪ್ರಯತ್ನಗಳು ಯಾವ ಪ್ರಯೋಜನಕ್ಕೂ ಬರುವುದಿಲ್ಲ. ಹಾಗಿದ್ದರೆ ಮಾಡಬೇಕಾದುದೇನು?

ನಾವು ತುರ್ತಾಗಿ ಮಾಡಬೇಕಾದ್ದು, ಮಾಡಿಕೊಳ್ಳಬೇಕಾದದ್ದು ನಿಷ್ಠುರ ಆತ್ಮಾವಲೋಕನ. ಸರ್ವಾಧಿಕಾರಿ ಶಕ್ತಿಗಳನ್ನು ಮಣಿಸಬೇಕೆಂದು ಬಯಸಿದ, ಪ್ರಯತ್ನಿಸಿದ ನಾವೆಲ್ಲರೂ ನಮ್ಮ ಇದುವರೆಗಿನ ಪ್ರಯತ್ನಗಳನ್ನು ಬಿಚ್ಚು ಮನಸ್ಸಿನಿಂದ ತಿರುಗಿ ನೋಡಿಕೊಳ್ಳಬೇಕಾದ ಸಂದರ್ಭವಿದು. ಸತ್ವರಹಿತ ವಿಪಕ್ಷಗಳು ಸರ್ವಾಧಿಕಾರಿ ಶಕ್ತಿಗಳನ್ನು ಮಣಿಸುತ್ತವೆ ಎಂಬ ಭ್ರಮೆಯನ್ನು ಬೆಳೆಸಿಕೊಳ್ಳದೆ, ಕೂಡಲೇ ಚುನಾವಣೆಗೆ ನಿಂತು ಗೆಲ್ಲಬೇಕೆಂಬ ಶಾರ್ಟ್‍ಕಟ್ ಮಾರ್ಗಗಳನ್ನು ಹುಡುಕದೆ ತಾಳ್ಮೆಯ, ಯೋಜಿತ, ದೀರ್ಘಕಾಲೀನ ಹೋರಾಟಕ್ಕೆ ರಂಗ ಸಜ್ಜುಗೊಳಿಸಿಕೊಳ್ಳುವ ಕಾಲವಿದು.

ಸುಳ್ಳು ಮೇಲ್ಗೈ ಸಾಧಿಸಿದೆ, ಆದರೆ ನಮ್ಮ ದೇಶದಲ್ಲಿ ಸತ್ಯವಿನ್ನು ಸತ್ತಿಲ್ಲ. ಸರ್ವಾಧಿಕಾರಿ ಶಕ್ತಿಗಳು ಹೂಂಕರಿಸುತ್ತಿವೆ ಆದರೆ ಈ ನೆಲದೊಳಗಿನ ಪ್ರಜಾಪ್ರಭುತ್ವದ ಮೌಲ್ಯಗಳು ಮುರುಟಿಲ್ಲ. ಎಲ್ಲಾ ಸತ್ವಶಾಲಿ ಮನಸ್ಸುಗಳನ್ನು, ಶಕ್ತಿಶಾಲಿ ಹೋರಾಟದ ಸೆಲೆಗಳನ್ನು ಒಂದುಗೂಡಿಸಿಕೊಂಡಲ್ಲಿ, ಸರಿಯಾದ ಸಮಗ್ರವಾದ ಯೋಜನೆ ಜೊತೆ, ತಾಳ್ಮೆಯಿಂದ ಕೆಲಸ ಮಾಡಿದಲ್ಲಿ ಇಡೀ ದೇಶ ನಿದ್ದೆಯಿಂದ ಮೈಕೊಡವಿ ಏಳುವಂಥ ಚಳವಳಿಯನ್ನು ದೇಶದ ಹೋರಾಟಗಾರರೆಲ್ಲರೂ ಸೇರಿ ಹುಟ್ಟುಹಾಕಬಹುದು.

ಒಂದಷ್ಟು ವರ್ಷ ಭಾವುಕ ಹಾಗೂ ಭ್ರಾಮಕ ರಾಜಕಾರಣದ ಮೇಲೆ ಜನರನ್ನು ತೇಲಿಸಿಕೊಂಡು ಹೋಗಬಹುದು. ಆದರೆ ಬದುಕು ಭ್ರಮೆಗಳ ಮೇಲೆ ನಡೆಯುವುದಿಲ್ಲ. ಕೃಷಿ ಬಿಕ್ಕಟ್ಟು ಭ್ರಮೆಯಲ್ಲ, ನಿರುದ್ಯೋಗ ಭ್ರಮೆಯಲ್ಲ, ವೇತನಗಳ ಕಡಿತ, ದಮನಿತರ ಮೇಲಿನ ದಾಳಿ, ಮಹಿಳೆಯರ ಮೇಲೆ ಹೆಚ್ಚುತ್ತಿರುವ ಅತ್ಯಾಚಾರಗಳು, ಕುಡಿತ, ಬೆಲೆ ಏರಿಕೆ, ಮೊಟಕುಗೊಳ್ಳುತ್ತಿರುವ ಸಂವಿಧಾನಾತ್ಮಕ ಹಕ್ಕುಗಳು ಯಾವುದೂ ಭ್ರಮೆಯಲ್ಲ. ಎಲ್ಲವೂ ವರ್ಷವರ್ಷಕ್ಕೂ ಗಂಭೀರ ಸ್ವರೂಪ ತಾಳುತ್ತಿರುವ, ಜನರ ಬದುಕನ್ನು ಸುಡುತ್ತಿರುವ ಜೀವಂತ ವಾಸ್ತವಗಳು. ಜನರ ಈ ಜೀವಂತ ಸಮಸ್ಯೆಗಳ ಮೇಲೆ ನಮ್ಮ ಗಮನ ಕೇಂದ್ರೀಕರಿಸಿ, ಆಯಾ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಶಕ್ತಿಗಳನ್ನೆಲ್ಲಾ ಒಂದುಗೂಡಿಸಿ, ಜನರ ಜೊತೆ ನಿಂತು ಕೆಲಸ ಮಾಡುವ ಶಕ್ತಿಗಳು ಕ್ರಿಯಾಶೀಲರಾಗಬೇಕು. ಹಾಗೆ ಮಾಡಿದಾಗ ಮುಂದಿನ ಕೆಲವು ವರ್ಷಗಳಲ್ಲಿ ವಿವಿಧ ಜನ ಸಮುದಾಯಗಳ ಹೋರಾಟದ ಧಾರೆಗಳು ಈ ನೆಲದಲ್ಲಿ ಹರಿಯತೊಡಗುವುದರಲ್ಲಿ ಯಾವ ಸಂಶಯವೂ ಇಲ್ಲ. ಈ ಎಲ್ಲಾ ಧಾರೆಗಳು ಸಾಮಾನ್ಯ ಅಜೆಂಡಾದ ಮೇಲೆ ಎದ್ದು ನಿಂತಲ್ಲಿ ಅದು ಜನರ ಸಂಯುಕ್ತ ಶಕ್ತಿಯಾಗಿ ಹೊರಹೊಮ್ಮುತ್ತದೆ. ನೈಜ ಹಾಗೂ ಅತ್ಯಗತ್ಯ ಹಕ್ಕುಗಳಿಗಾಗಿ ಮೂಡಿಬರುವ ಇಂತಹ ಪ್ರಬಲ ಜನರ ಶಕ್ತಿಯೇ ಸರ್ವಾಧಿಕಾರಿ ಶಕ್ತಿಗಳನ್ನು ಎದುರಿಸಬಲ್ಲದು, ವಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡು ಜನರ ಅಜೆಂಡ ದೇಶದ ಅಜೆಂಡ ಆಗುವಂತೆ ಮಾಡಬಲ್ಲದು. ಇದಕ್ಕಾಗಿ ರಾಜ್ಯದ, ದೇಶದ ಹೋರಾಟನಿರತ ಶಕ್ತಿ ಒಗ್ಗೂಡಬೇಕು, ಹಂತಹಂತವಾಗಿ ಸರ್ವಾಧಿಕಾರಿಗಳನ್ನು ಮಣಿಸಬಲ್ಲಂಥ ಯುಕ್ತಿ ರೂಪುಗೊಳ್ಳಬೇಕು.

ಆದರೆ ಇದನ್ನು ಮಾಡುವುದು ಹೇಗೆ? ಸಾಧಿಸುವುದು ಹೇಗೆ? ಈ ಪ್ರಶ್ನೆಗೆ ಉತ್ತರ ನಮ್ಮ ಆತ್ಮಾವಲೋಕನದಿಂದ ಹುಟ್ಟಬೇಕು, ನಮ್ಮೊಳಗಿನ ಪ್ರಾಮಾಣಿಕ ಮತ್ತು ಆಳವಾದ ಮಂಥನದಿಂದ ಹುಟ್ಟಬೇಕು. ಈ ಅತ್ಯಗತ್ಯ ತುರ್ತು ಕರ್ತವ್ಯಕ್ಕೆ ನಮ್ಮನ್ನು ನಾವು ಒಡ್ಡಿಕೊಂಡಲ್ಲಿ, ಹೊಸ ಬಯಲಿಗೆ ನಮ್ಮನ್ನು ತೆರೆದುಕೊಂಡಲ್ಲಿ ಹೊಸ ಹಾದಿ ಖಂಡಿತ ಗೋಚರಿಸುತ್ತದೆ. ಕಗ್ಗತ್ತಲಿನೊಳಗಿಂದಲೇ ಬೆಳಕು ಹುಟ್ಟುತ್ತದೆ. ಇಂದಿನ ಸಂದಿಗ್ಧ, ಸಂಕಷ್ಟಮಯ ಪರಿಸ್ಥಿತಿಯೇ ಹೊಸ ಹಾದಿಯ ಹುಟ್ಟಿಗೆ ಕಾರಣವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಯಾಣಿಕರಿಗೆ 200, 500 ರೂಪಾಯಿ ಮುಖಬೆಲೆಯ ಭಾರತೀಯ ನೋಟು ಕೊಂಡೊಯ್ಯಲು ಅನುಮತಿಸಿದ ನೇಪಾಳ

ಗಡಿಯಾಚೆಗಿನ ಪ್ರಯಾಣ ಮತ್ತು ವ್ಯಾಪಾರವನ್ನು ಸರಾಗಗೊಳಿಸುವ ಸಲುವಾಗಿ, ನೇಪಾಳ ಸರ್ಕಾರವು ರೂ.200 ಮತ್ತು ರೂ.500 ಮೌಲ್ಯದ ಭಾರತೀಯ ಕರೆನ್ಸಿ ನೋಟುಗಳನ್ನು ಹೊಂದುವ ಮೇಲಿದ್ದ ನಿರ್ಬಂಧಗಳನ್ನು ತೆಗೆದುಹಾಕಿದೆ. ಸೋಮವಾರ ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರವು,...

ಮತದಾರರ ತೀರ್ಪಿನೊಂದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ಬರಲು ಬಿಡುತ್ತೇವೆ; ಕಾಂಗ್ರೆಸ್‌ ಜೊತೆಗೆ ಮೈತ್ರಿ ಇಲ್ಲ: ಕೇರಳ ಸಿಪಿಐ(ಎಂ) ಮುಖ್ಯಸ್ಥ

ಕೇರಳದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಒಂದು ಕಾರ್ಪೊರೇಷನ್ ಮತ್ತು ಪುರಸಭೆಯಲ್ಲಿ ಬಿಜೆಪಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರಿಂದ, ಎರಡು ಪ್ರತಿಸ್ಪರ್ಧಿ ರಂಗಗಳಾದ ಯುಡಿಎಫ್ ಮತ್ತು ಎಲ್‌ಡಿಎಫ್ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು...

ಕೊಂದವರು ಯಾರು: ಧರ್ಮಸ್ಥಳದಲ್ಲಿ ನಡೆದಿರುವ ಎಲ್ಲಾ ಹತ್ಯೆಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು: ಮಲ್ಲಿಗೆ ಸಿರಿಮನೆ

“ನಾವು ಕೊಂದವರು ಯಾರು’ ಆಂದೋಲನದಿಂದ ‘ಮಹಿಳಾ ನ್ಯಾಯ ಸಮಾವೇಶ’ವನ್ನು ಬೆಳ್ತಂಗಡಿಯಲ್ಲಿ ಹಮ್ಮಿಕೊಳ್ಳಬೇಕು ಎಂದುಕೊಂಡಾಗ ನೂರಾರು ಪ್ರಶ್ನೆಗಳು, ನೂರಾರು ಆಪಾದನೆಗಳು, ಆರೋಪಗಳು ಬಂದವು. ಯಾಕೆ ಇಲ್ಲಿಗೆ ಬರುತ್ತಿದ್ದಾರೆ, ಇಲ್ಲಿಗೇ ಬಂದು ಏನು ಮಾಡುತ್ತಾರೆ ಅನ್ನುವ...

ಸರ್ಕಾರಿ ಕಾರ್ಯಕ್ರಮದಲ್ಲಿ ಮಹಿಳಾ ವೈದ್ಯೆಯ ಹಿಜಾಬ್ ತೆಗೆಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್

ಬಿಹಾರ ರಾಜಧಾನಿ ಪಾಟ್ನಾದಲ್ಲಿ ಸೋಮವಾರ (ಡಿ.15) ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇಮಕಾತಿ ಪತ್ರಗಳನ್ನು ಹಸ್ತಾಂತರಿದ್ದು, ಇದೇ ಸಂದರ್ಭದಲ್ಲಿ ಮಹಿಳಾ ವೈದ್ಯೆಯೊಬ್ಬರ ಹಿಜಾಬ್ ಅನ್ನು ತೆಗೆದಿರುವ ವಿಡಿಯೋವೊಂದು ವೈರಲ್...

ಎಸ್‌ಐಆರ್ ಬಳಿಕ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿ ಪ್ರಕಟ : 58 ಲಕ್ಷ ಹೆಸರು ಡಿಲೀಟ್!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ಮಂಗಳವಾರ (ಡಿಸೆಂಬರ್ 16) ಚುನಾವಣಾ ಆಯೋಗ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಸಾವು, ವಲಸೆ ಮತ್ತು ಎಣಿಕೆ ನಮೂನೆಗಳನ್ನು ಸಲ್ಲಿಸದಿರುವುದು...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ-ರಾಹುಲ್ ಗಾಂಧಿ ವಿರುದ್ಧದ ಇಡಿ ದೂರು ಪರಿಗಣಿಸಲು ದೆಹಲಿ ಕೋರ್ಟ್ ನಕಾರ

ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಭಾಗಿಯಾಗಿದ್ದಾರೆ ಎನ್ನಲಾದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಹಣ ಅಕ್ರಮ ವರ್ಗಾವಣೆ ದೂರನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

ಕಾನೂನುಗಳಿಗೆ ಹಿಂದಿ ಬಳಸುವುದರಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ಪಿ.ಚಿದಂಬರಂ

ಸಂಸತ್ತಿನಲ್ಲಿ ಮಂಡಿಸಲಾದ ಮಸೂದೆಗಳ ಶೀರ್ಷಿಕೆಗಳಲ್ಲಿ ಇಂಗ್ಲಿಷ್ ಲಿಪಿಯಲ್ಲಿ ಬರೆಯಲಾದ ಹಿಂದಿ ಪದಗಳನ್ನು ಬಳಸುವ ಅಭ್ಯಾಸ ಹೆಚ್ಚುತ್ತಿದೆ. ಈ ಪ್ರವೃತ್ತಿಯಿಂದ ಹಿಂದಿ ಮಾತನಾಡದ ನಾಗರಿಕರು ಮತ್ತು ರಾಜ್ಯಗಳಿಗೆ ಅನ್ಯಾಯವಾಗಿದೆ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಹೇಳಿದರು. ಈ...

ಸಿಡ್ನಿ ಶೂಟೌಟ್‌: ಭಾರತೀಯ ಪಾಸ್‌ಪೋರ್ಟ್‌ ಬಳಸಿ ಫಿಲಿಪೈನ್ಸ್‌ಗೆ ಪ್ರಯಾಣಿಸಿದ್ದ ತಂದೆ-ಮಗ?

ಸಿಡ್ನಿಯಲ್ಲಿ ಹದಿನೈದು ಜನರನ್ನು ಗುಂಡಿಕ್ಕಿ ಕೊಂದ ತಂದೆ ಮತ್ತು ಮಗನನ್ನು ಪಾಕಿಸ್ತಾನಿ ಪ್ರಜೆಗಳು ಎಂದು ಈಗಾಗಲೇ ಗುರುತಿಸಲಾಗಿದೆ ಎಂಬ ಹಿಂದಿನ ವರದಿಗಳಿಗೆ ವಿರುದ್ಧವಾಗಿ, ಇಬ್ಬರೂ ಕಳೆದ ತಿಂಗಳು ನವೆಂಬರ್‌ನಲ್ಲಿ ಭಾರತೀಯ ಪಾಸ್‌ಪೋರ್ಟ್‌ಗಳನ್ನು ಬಳಸಿ...

ವರದಕ್ಷಿಣೆ ನಿರ್ಮೂಲನೆ ತುರ್ತು ಸಾಂವಿಧಾನಿಕ, ಸಾಮಾಜಿಕ ಅಗತ್ಯ: ಸುಪ್ರೀಂ ಕೋರ್ಟ್

ನವದೆಹಲಿ: ವರದಕ್ಷಿಣೆ ನಿರ್ಮೂಲನೆ ತುರ್ತು ಸಾಂವಿಧಾನಿಕ ಮತ್ತು ಸಾಮಾಜಿಕ ಅಗತ್ಯವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಸ್ತಿತ್ವದಲ್ಲಿರುವ ಕಾನೂನುಗಳು "ನಿಷ್ಪರಿಣಾಮಕಾರಿತ್ವ" ಮತ್ತು "ದುರುಪಯೋಗ" ಎರಡರಿಂದಲೂ ಬಳಲುತ್ತಿವೆ ಮತ್ತು ದುಷ್ಟ ಪದ್ಧತಿ ಇನ್ನೂ ವ್ಯಾಪಕವಾಗಿ...

ಕೇರಳ ಚಲನಚಿತ್ರೋತ್ಸವ : ಪ್ಯಾಲೆಸ್ತೀನ್ ಕುರಿತ 4 ಸಿನಿಮಾಗಳು ಸೇರಿ 19 ಚಲನಚಿತ್ರಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದ ಕೇಂದ್ರ

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ 2025ರ ಕೇರಳ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ 19 ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದೆ ಎಂದು ರಾಜ್ಯದ ಆಡಳಿತಾರೂಢ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಮರಿಯನ್...