Homeಸಾಮಾಜಿಕಅಲೆಮಾರಿ ಹಕ್ಕಿಪಿಕ್ಕಿಗಳ ಮೇಲೆ ಸರ್ಕಾರದ ಪರಾಕ್ರಮ!

ಅಲೆಮಾರಿ ಹಕ್ಕಿಪಿಕ್ಕಿಗಳ ಮೇಲೆ ಸರ್ಕಾರದ ಪರಾಕ್ರಮ!

- Advertisement -
- Advertisement -

ಶಿವಮೊಗ್ಗದ ಆಯನೂರು ಹೋಬಳಿಗೆ ಸೇರುವ ವೀರಣ್ಣನ ಬೆನವಳ್ಳಿ ಗ್ರಾಮದ ಸುಮಾರು 50ಕ್ಕೂ ಹೆಚ್ಚು ಹಕ್ಕಿಪಿಕ್ಕಿ ಕುಟುಂಬಗಳಿಗೆ ಮೊನ್ನೆ ಗತಿಸಿಹೋದ ಶನಿವಾರ ಎಂದಿನಂತಿರಲಿಲ್ಲ. ಆಸರೆ ಕೊಡಬೇಕಿದ್ದ ಸರ್ಕಾರವೇ ತಮ್ಮ ಬದುಕನ್ನು ಬೀದಿಗೆ ತಂದು ಎಸೆಯುತ್ತದೆ ಎಂಬ ಯಾವ ಅನುಮಾನವೂ ಇರದೆ ಎಂದಿನಂತೆ ತಮ್ಮ ಕೆಲಸದಲ್ಲಿ ನಿರತರಾಗಿದ್ದರು. ಆದರೆ ಪೊಲೀಸ್ ಸರ್ಪಗಾವಲು, ಜೆಸಿಬಿ ಯಂತ್ರಗಳ ಸಮೇತ ಅವರ ಮೇಲೆ ದಾಳಿ ಮಾಡಿದ ಜಿಲ್ಲಾಡಳಿತ ಅವರ ಟೆಂಟುಗಳಂತಹ ಮನೆಗಳನ್ನು ಕಿತ್ತುಹಾಕಿ, ಹೆಂಗಸರು ಮಕ್ಕಳನ್ನು ಎಳೆದಾಡಿ, ಕಸ ತುಂಬಿದಂತೆ ಅವರು ಮತ್ತು ಅವರ ಸರಂಜಾಮುಗಳನ್ನೆಲ್ಲ ತುಂಬಿಕೊಂಡು ಬೇರೊಂದು ಜಾಗದಲ್ಲಿ ಸುರಿದುಹೋಗಿದೆ! ತನ್ನದೇ ನಾಗರಿಕರ ಜೊತೆ ನಮ್ಮ ಸರ್ಕಾರಗಳು ವರ್ತಿಸುವ ಪರಿ ಇದು. ಅದೂ, ಒಂದು ಅಲೆಮಾರಿ ಸಮುದಾಯದ ಮೇಲೆ!!
ಕಳೆದ ಹತ್ತು ವರ್ಷಗಳಿಂದ ಬೆನವಳ್ಳಿ ಗ್ರಾಮಕ್ಕೆ ಸೇರಿದ ಸರ್ವೆ ನಂಬರ್78ರಲ್ಲಿ ಹಕ್ಕಿಪಿಕ್ಕಿ ಜನಾಂಗದವರು ಟೆಂಟು ನಿರ್ಮಿಸಿಕೊಂಡು ನೆಲೆಸಿದ್ದರು. ಅದು ಸರ್ಕಾರಿ ಸ್ವಾಮ್ಯದ ಜಾಗ. ಈ ನಿವೇಶನರಹಿತರಿಗೆ ಆಸರೆಯಾಗಲು ಹಿಂದಿನ ಸಿಎಂ ಸಿದ್ದರಾಮಯ್ಯನವರ ಸರ್ಕಾರ 2016ರಲ್ಲಿ ಆ 4 ಎಕರೆ ಭೂಮಿಯನ್ನು ಮಂಜೂರು ಮಾಡಿ ಕಾಯ್ದಿರಿಸಿತ್ತು. ಆದರೆ ನಿವೇಶನ ಹಂಚಿಕೆಗೆ ಜಿಲ್ಲಾಡಳಿತ ಇದುವರೆಗೆ ಮುಂದಾಗಿರಲಿಲ್ಲ. ಆದರೆ ಇದ್ದಕ್ಕಿದ್ದಂತೆ ಅದ್ಯಾವ ಪ್ರಭಾವಿ ಕೈಗಳು ಕೆಲಸ ಮಾಡಿದವೋ ಗೊತ್ತಿಲ್ಲ, ಜುಲೈ 28ರ ಶನಿವಾರ ಸಂಜೆ ಹೊತ್ತಿಗೆ ಆವೇಶ ಮೈದಳೆದ ಜಿಲ್ಲಾಡಳಿತ ಭದ್ರಾವತಿ ಎಂಪಿಎಂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ತಹಸೀಲ್ದಾರ್ ನೇತೃತ್ವದಲ್ಲಿ ಅವರ ಬದುಕನ್ನೇ ಧ್ವಂಸ ಮಾಡಿದೆ.
ಈ ಸರ್ಕಾರಿ ಜನರ ದೌರ್ಜನ್ಯಕ್ಕೆ ಪ್ರತಿರೋಧ ತೋರಲು ಮುಂದಾದಾಗ ಪೊಲೀಸರು ಮಕ್ಕಳು, ವೃದ್ಧರು, ಗರ್ಭಿಣಿಯರು, ಹೆಂಗಸು-ಗಂಡಸರನ್ನೆದೆ ಪ್ರಾಣಿಗಳಿಗಿಂತ ಕಡೆಯಾಗಿ ಎಳೆದಾಡಿದ್ದಾರೆ. ಕೆಲ ಮಹಿಳೆಯರ ಸೀರೆ ಎಳೆದು ಅರೆಬೆತ್ತಲೆ ಮಾಡಲು ಮುಂದಾಗಿದ್ದರು. ಇದನ್ನೆಲ್ಲಾ ವೀಡಿಯೋ ಮಾಡಿಕೊಳ್ಳುತ್ತಿದ್ದ ಹಕ್ಕಿಪಿಕ್ಕಿಯವರ ಮೊಬೈಲ್‍ಗಳನ್ನು ಕಿತ್ತು ಜಜ್ಜಿಹಾಕಿದ್ದಾರೆ. ತಮ್ಮ ದೌರ್ಜನ್ಯದ ಯಾವ ಸಾಕ್ಷ್ಯವೂ ಉಳಿಯದಂತೆ ಜಿಲ್ಲಾಡಳಿತ ದಬ್ಬಾಳಿಕೆ ನಡೆಸುತ್ತಿದ್ದರೆ, ಅತ್ತ ಜೆಸಿಬಿ ಯಂತ್ರಗಳು ಕ್ಷಣಾರ್ಧದಲ್ಲಿ ಅವರ ತಲೆಮೇಲಿನ ಸೂರುಗಳನ್ನು ನೆಲಸಮ ಮಾಡಿ ಮುಗಿಸಿದ್ದವು.
ನಂತರ ಟ್ರ್ಯಾಕ್ಟರ್‍ಗಳಲ್ಲಿ ಅವರನ್ನು ತುಂಬಿತಂದು, ಶ್ರೀರಾಂಪುರದ ಬಳಿ ಇರುವ ಖಾಲಿ ಜಾಗಕ್ಕೆ ಬಿಸಾಕಿದ್ದಾರೆ. ಟೆಂಟ್ ಬಿಟ್ಟು ಕೆಲಸಕ್ಕೆ ಹೋಗಿದ್ದವರು ಪುನಃ ಬಂದು ನೋಡಿದರೆ ಟೆಂಟ್‍ಗಳೇ ಮಾಯವಾಗಿದ್ದವು. ಅಧಿಕಾರಿಗಳನ್ನು ವಿಚಾರಿಸಿದರೆ ಅಲ್ಲೆಲ್ಲೋ ಹಾಕಿದ್ದೇವೆ ಹೋಗಿ ಎಂಬ ಉಡಾಫೆಯ ಉತ್ತರ ಕೊಟ್ಟಿದ್ದರು.
ಎಸೆದುಹೋದ ಸ್ಥಳದಲ್ಲಿ ಕನಿಷ್ಠ ಪುನರ್ವಸತಿ ಸೌಲಭ್ಯವನ್ನೂ ಜಿಲ್ಲಾಡಳಿತ ಕಲ್ಪಿಸಿಲ್ಲ. ಟೆಂಟ್ ನಿರ್ಮಿಸಿಕೊಳ್ಳಲು ಇಟ್ಟುಕೊಂಡಿದ್ದ ಟಾರ್ಪಲ್‍ಗಳು ಪೊಲೀಸರ ದಾಳಿಗೆ ಹರಿದು ಚಿಂದಿಯಾಗಿವೆ. ಪಾತ್ರೆಪಗಡಗಳು ಎಲ್ಲೆಂದರಲ್ಲಿ ಚಲ್ಲಾಪಿಲ್ಲಿಯಾಗಿದ್ದವು. ಹಾಲು ಕುಡಿವ ಕಂದಮ್ಮಗಳು, ಮಕ್ಕಳು ಹಸಿವು ತಾಳದೆ ಗೋಳಿಡುತ್ತಿರುವ ದೃಶ್ಯ ಸರ್ಕಾರಿ ಮನಸ್ಸುಗಳನ್ನು ಕಿಂಚಿತ್ತೂ ಕದಡಿದಂತೆ ಕಾಣಲಿಲ್ಲ.
ಈ ಹಕ್ಕಿಪಿಕ್ಕಿಗಳಿಗೆ ತಕ್ಷಣದಲ್ಲಿ ಯಾವುದೇ ಕಾನೂನಾತ್ಮಕವಾದ ನೆರವು ಸಿಗದಂತೆ ನೋಡಿಕೊಳ್ಳಲು ರಜಾದಿನದಂದೇ ಒಕ್ಕಲೆಬ್ಬಿಸುವಂತಹ ವ್ಯವಸ್ಥಿತ ಷಡ್ಯಂತ್ರವನ್ನು ಅಧಿಕಾರಿಗಳು ಮಾಡಿರುವುದು ಮೇಲ್ನೋಟಕ್ಕೆ ಕಾಣುತ್ತದೆ. ಇನ್ನು ಅಂತವರಿಂದ ಮನುಷ್ಯತ್ವವನ್ನು ನಿರೀಕ್ಷಿಸುವುದೇ ಅಪರಾಧ!
ಸರ್ಕಾರವೇ ಮಂಜೂರು ಮಾಡಿದ್ದ ಭೂಮಿಯಲ್ಲಿ ವಾಸವಿದ್ದ ಹಕ್ಕಿಪಿಕ್ಕಿಯವರನ್ನು ಒಕ್ಕಲೆಬ್ಬಿಸುವಂತೆ ಸ್ಥಳೀಯರೊಬ್ಬರು ಹೈಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಅರ್ಜಿಯನ್ನು ಪರಿಶೀಲಿಸಿ ಸರ್ವೆ ನಂಬರ್ 78ರಲ್ಲಿ ವಾಸವಿದ್ದ ಹಕ್ಕಿಪಿಕ್ಕಿ ಸಮುದಾಯವರನ್ನು ಸ್ಥಳಾಂತರಿಸುವಂತೆ ಆದೇಶ ನೀಡಿದೆ. ಆದ್ದರಿಂದಾಗಿ ಒಕ್ಕಲೆಬ್ಬಿಸುತ್ತಿದ್ದೇವೆ ಎಂದು ಅಧಿಕಾರಿಗಳು ಸಬೂಬು ಹೇಳುತ್ತಾರೆ.
ಆದರೆ ಅದೇ ಕಾನೂನಿನ ಪ್ರಕಾರ ಹೀಗೆ ಒಕ್ಕಲೆಬ್ಬಿಸುವ ಮುನ್ನ ವಾಸವಿದ್ದವರಿಗೆ ತಿಳಿವಳಿಕೆ ಪತ್ರ ನೀಡಬೇಕು, ತಾತ್ಕಾಲಿಕವಾಗಿಯಾದರೂ ಪುನರ್ವಸತಿ ವ್ಯವಸ್ಥೆ ಕಲ್ಪಿಸಬೇಕು. ಆದರೆ ಜಿಲ್ಲಾಡಳಿತಕ್ಕೆ ಕಾನೂನಿನ ಆ ಅಧ್ಯಾಯಗಳು ಬೇಡವಾಗಿದ್ದವು. ಅಲೆಮಾರಿ ಬದುಕುಗಳನ್ನು ಒಕ್ಕಲೆಬ್ಬಿಸುವ ಒಕ್ಕಣೆಯಷ್ಟೇ ಅವರಿಗೆ ಸಾಕಾಗಿತ್ತು!
ಹಕ್ಕಿಪಿಕ್ಕಿ ಜನರ ವಸತಿಗಾಗಿ ಮೀಸಲಿಟ್ಟಿದ್ದ 4 ಎಕರೆ ಭೂಮಿಯಲ್ಲಿ ಎಂಪಿಎಂ ಕಾರ್ಖಾನೆಯ ನೆಡುತೋಪು ಇರುವ ಕಾರಣ ಈವರೆಗೂ ನಿವೇಶನ ನಿರ್ಮಾಣ ಕಾರ್ಯ ಆರಂಭವಾಗಿಲ್ಲ. ಈ ಹಿಂದೆಯೂ ಇಲ್ಲಿರುವ ಮರಗಳು ಕಟಾವು ಆದ ನಂತರ ಆಯನೂರು ಪಂಚಾಯಿತಿ ನಿವೇಶನಗಳನ್ನು ನಿರ್ಮಿಸಿ, ಅರ್ಹ ಹಕ್ಕಿಪಿಕ್ಕಿ ಫಲಾನುಭವಿಗಳ ಪಟ್ಟಿಯನ್ನು ಜಿಲ್ಲಾಡಳಿತಕ್ಕೆ ನೀಡುತ್ತೆ, ಆಗ ನೀವು ಬಂದು ನೆಲೆಸಬಹುದು ಎಂದು ಇದೇ ಅಧಿಕಾರಿಗಳು ಆಶ್ವಾಸನೆಯನ್ನು ಕೊಟ್ಟಿದ್ದರು. ಇದಕ್ಕೆ ಒಪ್ಪಿದ ಹಕ್ಕಿಪಿಕ್ಕಿಗಳು ಬೇರೆಡೆಗೆ ಸ್ಥಳಾಂತರವಾಗಲು ಒಪ್ಪಿದ್ದರು. ಆದರೆ ಜಿಲ್ಲಾಡಳಿತ ಕೊಟ್ಟ ಮಾತು ಉಳಿಸಿಕೊಳ್ಳುವ ಯಾವ ಲಕ್ಷಣವನ್ನೂ ತೋರದಿದ್ದಾಗ, ಹಾಗೆ ಹೋಗಿದ್ದವರೆಲ್ಲ ವಾಪಾಸು ಬಂದು ಆ ಜಾಗದಲ್ಲಿ ಟೆಂಟ್ ಹಾಕಿಕೊಂಡು ವಾಸ ಮಾಡುತ್ತಿದ್ದರು. ಅವರಿಗೆ ಕನಿಷ್ಟ ಮಟ್ಟದ ಮೂಲಸೌಕರ್ಯಗಳೂ ಇರಲಿಲ್ಲ. ಇಂತಹ ಪರಿಸ್ಥಿತಿಯಲ್ಲಿ ವಾಸವಿದ್ದವರನ್ನು ಒಕ್ಕಲೆಬ್ಬಿಸಿದ್ದು ಸರ್ಕಾರದ ಕ್ರೌರ್ಯವೆನ್ನದೇ ಇರಲಾಗದು.
ಇದನ್ನು ಖಂಡಿಸಿ ಕಾಂಗ್ರೆಸ್ ಪರಿಶಿಷ್ಟ ವಿಭಾಗದ ಸದಸ್ಯರು ಈ ಸಮುದಾಯದವರೊಂದಿಗೆ ಜುಲೈ 30ರಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ಅವರ ಕಚೇರಿಗೆ ಬಂದು ಸುಮಾರು ಎರಡು ಗಂಟೆ ಧರಣಿ ಕೂತರು ಯಾವೊಬ್ಬ ಅಧಿಕಾರಿಯೂ ಇವರನ್ನು ಕ್ಯಾರೇ ಅನ್ನಲಿಲ್ಲ. ಕೊನೆಗೆ ಡಿಸಿ ಸಾಹೇಬರ ಸಹಾಯಕ ಅಧಿಕಾರಿಯೊಬ್ಬ ಬಂದು ಕಾಟಾಚಾರಕ್ಕೆ ಮನವಿ ಸ್ವೀಕರಿಸಲು ಮುಂದಾಗಿದ್ದ. ಜಿಲ್ಲಾಧಿಕಾರಿಗಳೇ ಬರಲಿ ಅಂತ ಅವರೆಲ್ಲ ಪಟ್ಟು ಹಿಡಿದಾಗ `ಜಿಲ್ಲಾಧಿಕಾರಿಗಳು ಊರಲ್ಲಿಲ್ಲ, ಎರಡು ದಿವಸ ಅವರು ಬರುವುದಿಲ್ಲ. ಹೆಚ್ಚುವರಿ ಜಿಲ್ಲಾಧಿಕಾರಿಗಳೂ ಕಚೇರಿಯಲ್ಲಿ ಇಲ್ಲ’ ಎಂಬ ಉತ್ತರ ಕೊಟ್ಟಿದ್ದ. ಅದನ್ನು ನಂಬಿದ ಆ ಅಲೆಮಾರಿಗಳು ಮನವಿ ಕೊಟ್ಟು ವಾಪಾಸು ಬರುತ್ತಿದ್ದಂತೆಯೇ ಜಿಲ್ಲಾಧಿಕಾರಿಗಳು ಕಚೇರಿ ಆವರಣದಲ್ಲೇ ಕಾಣಿಸಿಕೊಂಡಿದ್ದರು! ಅರೆ, ಭೇಟಿಯಾಗಿ ಮನವಿ ಕೊಡಲು ಬಂದ ತಮ್ಮನ್ನು ಹೀಗೆ ಸುಳ್ಳಿನ ಮೂಲಕ ಸಾಗಹಾಕಲು ನಾವೇನು ತಾಲಿಬಾನಿ ಉಗ್ರರಾ ಅಂತ ಆ ಅಲೆಮಾರಿಗಳು ಕೇಳುವ ಪ್ರಶ್ನೆ ಇಡೀ ಸರ್ಕಾರವನ್ನು ಅಣಕಿಸುವಂತಿತ್ತು.
ಸಾಮಾನ್ಯವಾಗಿ ಆಯಾ ಜಿಲ್ಲಾಧಿಕಾರಿಗಳೇ ‘ಜಿಲ್ಲಾ ಪರಿಶಿಷ್ಟ ಜಾತಿ, ಅಲೆಮಾರಿ, ಅರೆಅಲೆಮಾರಿ ಮತ್ತು ಅತೀ ಸೂಕ್ಷ್ಮ ಸಮುದಾಯದ ಅಭಿವೃದ್ಧಿ ಕೋಶ’ದ ಅಧ್ಯಕ್ಷರೂ ಆಗಿರುತ್ತಾರೆ. ಅವರೇ ಇಂಥಾ ಸಮುದಾಯಗಳ ಮೇಲೆ ದಾಳಿ ಮಾಡಿದರೆ ಏನಾಗಬೇಕು? ಈ ರೀತಿಯ ಸಮುದಾಯಗಳಿಗೆ ಪುನರ್ವಸತಿ ಕಲ್ಪಿಸಲು ಸಿದ್ದರಾಮಯ್ಯ ಸರ್ಕಾರ 320 ಕೋಟಿ ಬಿಡುಗಡೆ ಮಾಡಿತ್ತು. ಅಶಕ್ತ ಸಮುದಾಯದವರಿಗೆ ಮನೆ ಕಟ್ಟಿಕೊಳ್ಳಲು ನೆರವು ನೀಡುವುದು ಆ ಅನುದಾನದ ಇರಾದೆ. ಆದರೆ ಅದು ಖಜಾನೆಯಲ್ಲಿ ಖರ್ಚಾಗದೆ ಹಾಗೇ ಉಳಿದಿದೆ. ಪುನರ್ವಸತಿ ಸಮಿತಿಯ ಸದಸ್ಯರಾದ ಜಾವಡೆ ಲೋಕೇಶ್ ಮೊದಲಾದವರು ಜುಲೈ 16ರಂದು ನಡೆದ ಸಭೆಯೊಂದರಲ್ಲಿ ಈ ಜಾಗದ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ನಿವೇಶನವನ್ನು ಗುರುತಿಸಿಕೊಡಬೇಕೆಂದು ಕೇಳಿಕೊಂಡ ನಂತರವೂ ಜಿಲ್ಲಾಡಳಿತ ಹೀಗೆ ವರ್ತಿಸುತ್ತಿದೆಯೆಂದರೆ ಇದರ ಹಿಂದೆ ಬಲಾಢ್ಯ ಜನಪ್ರತಿನಿಧಿಗಳು ರಿಯಲ್ ಎಸ್ಟೇಟ್ ಹುನ್ನಾರ ಇರಬಹುದೆನ್ನುವ ಗುಮಾನಿ ಮೂಡುತ್ತಿದೆ.

– ರವಿ ಸಿದ್ಲಿಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...