Homeಮುಖಪುಟತೆರಿಗೆ ಹೆಸರಲ್ಲಿ ಮೋದಿ ಸರ್ಕಾರದ ಸುಲಿಗೆ

ತೆರಿಗೆ ಹೆಸರಲ್ಲಿ ಮೋದಿ ಸರ್ಕಾರದ ಸುಲಿಗೆ

- Advertisement -
- Advertisement -
  • ವಿಕಾಸ್ ಆರ್. ಮೌರ್ಯ |

2012ರ ಯುಪಿಎ ಸರ್ಕಾರದ ಅವಧಿಯಲ್ಲಿ ರಾಜ್ಯಸಭೆ ಚುನಾವಣೆ ಆದತಕ್ಷಣ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಗನಕ್ಕೇರಿದ್ದವು. ಬಿಜೆಪಿ ಮತ್ತು ಎಡಪಕ್ಷಗಳು ಬೀದಿಗಿಳಿದು ಯುಪಿಎ ಸರ್ಕಾರದ ವಿರುದ್ಧ ಹೋರಾಡಿದ್ದವು. ಜನರು ಸಹ ಬೇಸತ್ತುಹೋಗಿದ್ದರು. ಮಾಧ್ಯಮಗಳಂತೂ ದಿನಗಟ್ಟಲೆ ಬೆಲೆ ಏರಿಕೆಯ ವಿರುದ್ಧದ ಹೋರಾಟವನ್ನು ಪ್ರಸಾರ ಮಾಡಿದ್ದವು, ಜೊತೆಗೆ ತೈಲಬೆಲೆ ಏರಿಕೆಯನ್ನು ಪ್ರಧಾನ ವಿಚಾರವಾಗಿ ಚರ್ಚಿಸಿದ್ದರು. ಅಂತಾರಾಷ್ಟ್ರೀಯ ಕಚ್ಚಾತೈಲ ಬೆಲೆ ಬ್ಯಾರೆಲ್ಲಿಗೆ 113 ಡಾಲರ್ ಇದ್ದದ್ದನ್ನು ಮುಂದು ಮಾಡಿ ಯುಪಿಎ ಸರ್ಕಾರ ಸಮರ್ಥಿಸಿಕೊಳ್ಳುವ ಪ್ರಯತ್ನ ಮಾಡಿತ್ತು. ಜೊತೆಗೆ ರಾಜ್ಯ ಸರ್ಕಾರಗಳಿಗೆ ತಮ್ಮ ಪಾಲಿನ ತೆರಿಗೆಯನ್ನು ಕಡಿಮೆ ಮಾಡಿಕೊಳ್ಳಲು ತಿಳಿಸಿತ್ತು. ಇಂತಹ ಪರಿಸ್ಥಿತಿಯಲ್ಲೂ ಮನಮೋಹನ್ ಸಿಂಗ್ ಅವರ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕ್ರಮವಾಗಿ ರೂ. 73 ಮತ್ತು ರೂ. 64 ರೂಪಾಯಿಗಳಿತ್ತು. ಪೆಟ್ರೋಲ್ ಗರಿಷ್ಠ ರೂ. 76 ಮುಟ್ಟಿತ್ತು. ಆದರೆ ಅಂದು ಯುಪಿಎ ಸರ್ಕಾರದ ತೈಲ ಬೆಲೆ ಏರಿಕೆ ವಿರುದ್ಧ ಬೀದಿಗಿಳಿದು ಬೊಬ್ಬಿರಿದಿದ್ದ ಬಿಜೆಪಿಯವರು ತಮ್ಮದೇ ಆಡಳಿತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ರೂ. 84 ಮತ್ತು ರೂ. 68 ಆಗಿರುವುದಕ್ಕೆ ತುಟಿ ಬಿಚ್ಚುತ್ತಿಲ್ಲ. ಬದಲಾಗಿ ಈ ಹಿಂದೆ ಯುಪಿಎ ಸರ್ಕಾರ ರಾಜ್ಯಗಳಿಗೆ ತಾಕೀತು ಮಾಡಿದಂತೆ ರಾಜ್ಯ ತೆರಿಗೆ ಕಡಿಮೆ ಮಾಡುವಂತೆ ಒತ್ತಾಯಿಸುತ್ತಿದೆ.

ಈ ರೀತಿಯಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಳ್ಳುತ್ತಿದ್ದು ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿವೆ. ಸತ್ಯವೆಂದರೆ ತೈಲ ಬೆಲೆ ಏರಿಕೆಯ ಹಿಂದೆ ಕೇಂದ್ರ ಸರ್ಕಾರದ ಹೆಚ್ಚು ಪಾಲಿದೆಯಾದರೂ ರಾಜ್ಯದ ಪಾಲನ್ನು ಕಡೆಗಣಿಸುವಂತಿಲ್ಲ. ಜೊತೆಗೆ ಸರ್ಕಾರಗಳ ನೀತಿಗಳ ಮೇಲೆ ನಿಯಂತ್ರಣ ಹೊಂದಿರುವ ಖಾಸಗಿ ತೈಲ ಕಂಪೆನಿಗಳ ದಂಧೆಯ ಪಾಲನ್ನೂ ಕಡೆಗಣಿಸುವಂತಿಲ್ಲ.

ತೈಲಬೆಲೆ ಏರಿಕೆಯ ಮೂಲ 90ರ ದಶಕದಲ್ಲಿ ಹಂತಹಂತವಾಗಿ ಭಾರತದಲ್ಲಿ ಜಾರಿಯಾದ ಮುಕ್ತ ಮಾರುಕಟ್ಟೆ ನೀತಿಯಲ್ಲಿದೆ. ಎಲ್.ಪಿ.ಜಿ (ಉದಾರಿಕರಣ, ಖಾಸಗೀಕರಣ, ಜಾಗತೀಕರಣ) ಯಿಂದಾಗಿ ಭಾರತ ‘ಮುಕ್ತ ಮಾರುಕಟ್ಟೆ’ಗೆ ತೆರೆದುಕೊಳ್ಳುತ್ತಾ ಹೋಯಿತು. ಇದರ ಪರಿಣಾಮವಾಗಿ ಖಾಸಗಿ ಕಂಪೆನಿ ಲೂಟಿಕೋರರು ಸರ್ಕಾರದ ನೀತಿಗಳ ಮೇಲೆ ನಿಯಂತ್ರಣ ಸಾಧಿಸುತ್ತಾ ಹೋದರು. ಕ್ರಮೇಣ ಸಾರ್ವಜನಿಕ ವಲಯಕ್ಕೆ ಸರ್ಕಾರಗಳು ನೀಡುತ್ತಿದ್ದ ‘ಸಬ್ಸಿಡಿ’ ಗಳ ಮೇಲೆ ಕಣ್ಣಿಟ್ಟ ಖಾಸಗಿ ಕುಳಗಳು ‘ಸಬ್ಸಿಡಿ’ ಗಳನ್ನು ಕಡಿತಗೊಳಿಸಲು ಸರ್ಕಾರದ ಮೇಲೆ ಒತ್ತಡ ಹೇರಿದವು. ಬಂಡವಾಳಶಾಹಿಗಳ ಮೇಲೆ ಅವಲಂಬಿತವಾದ ಸರ್ಕಾರಗಳು ಅವರಿಗೆ ರತ್ನಗಂಬಳಿ ಹಾಸುತ್ತಾ ಬಂದು ಇಂದು ಭಾರತ ದೇಶವನ್ನು ಈ ಸ್ಥಿತಿಯಲ್ಲಿಟ್ಟಿವೆ. ಈ ಬೆಳವಣಿಗೆ ಮೋದಿ ಸರ್ಕಾರದಲ್ಲಿ ಇನ್ನಿಲ್ಲದಷ್ಟು ಹದ್ದು ಮೀರಿದೆ.

ತೈಲಬೆಲೆ ಏರಿಕೆಯಲ್ಲೂ ಇದೇ ‘ಮುಕ್ತಬೆಲೆ ನೀತಿ’ ಪ್ರಮುಖ ಪಾತ್ರ ವಹಿಸಿದೆ. ಇಂಧನ ಬೆಲೆಯನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಬೆಲೆ ನೀತಿಗೊಳಪಡಿಸಬೇಕೆಂದು ಮೊದಲು ತೀರ್ಮಾನಿಸಿದ್ದು 1997 ರ ಯುನೈಟೆಡ್ ಫ್ರಂಟ್‌ನ ದೇವೇಗೌಡರ ಸರ್ಕಾರ. ಆದರೆ ಆ ಸರ್ಕಾರ ಅಲ್ಪಾಯುಷಿಯಾಗಿದ್ದುದರಿಂದ 2002 ರಲ್ಲಿ ಬಿಜೆಪಿಯ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರ ತೈಲಬೆಲೆಯನ್ನು ಮುಕ್ತಬೆಲೆ ನೀತಿಗಳವಡಿಸುವ ಖಚಿತ ನಿರ್ಧಾರ ತೆಗೆದುಕೊಂಡಿತು. ಆದರೆ ವಿರೋಧ ಪಕ್ಷಗಳ ವಿರೋಧದಿಂದ ಅದು ಜಾರಿಗೊಳ್ಳಲಿಲ್ಲ. ಈ ಬೆಳವಣಿಗೆ ಭಾರತದ ಖಾಸಗಿ ತೈಲ ಸಂಸ್ಕರಣೆ ಮತ್ತು ವಿತರಣೆ ಕಂಪೆನಿಗಳಾದ ಶೆಲ್, ರಿಲಯನ್ಸ್ ಮತ್ತು ಎಸ್ಸಾರ್‌ಗಳಿಗೆ ಹಲವು ತೊಡಕುಂಟುಮಾಡಿತು. ಕೇಂದ್ರ ಸರ್ಕಾರದ ಸಬ್ಸಿಡಿಯಿಂದಾಗಿ ಸಾರ್ವಜನಿಕ ಸಂಸ್ಥೆಗಳ ಬಂಕ್‌ಗಳು ಪೆಟ್ರೋಲ್ ಮತ್ತು ಡೀಸೆಲ್‌ಗಳನ್ನು ರಿಲಯನ್ಸ್ನಂತ ಖಾಸಗಿ ಬಂಕ್‌ಗಳಿಗಿಂತ ಕಡಿಮೆ ಬೆಲೆಯಲ್ಲಿ ಮಾರುತ್ತಿದ್ದವು. ಈ ಕಾರಣಕ್ಕಾಗಿಯೇ 2004 ರಿಂದ ಯುಪಿಎ ಸರ್ಕಾರದ ಮೇಲೆ ಖಾಸಗಿ ತೈಲ ಕಂಪೆನಿಗಳು ತೈಲಗಳ ಮೇಲಿನ ಸಬ್ಸಿಡಿಯನ್ನು ಹಿಂದೆಗೆದುಕೊಳ್ಳುವಂತೆ ಒತ್ತಾಯಿಸಿದವು. ಇದರ ಭಾಗವಾಗಿಯೇ 2012 ರಲ್ಲಿ ರಚನೆಯಾದದ್ದು ಕೇತನ್ ಪಾರೆಖ್ ಸಮಿತಿ. ಚಿಂತಕ ಶಿವಸುಂದರ್ ಗುರುತಿಸುವಂತೆ ಪಾರೆಖ್ ಸಮಿತಿಯು ‘ಇಂಧನ ಸಬ್ಸಿಡಿ ಹೊರೆಯನ್ನು ಸರ್ಕಾರವಾಗಲೀ, ಸಾರ್ವಜನಿಕ ಇಂಧನ ಕಂಪೆನಿಗಳಾಗಲೀ ಹೊರಲು ಸಾಧ್ಯವಿಲ್ಲವೆಂದೂ ಸರ್ಕಾರ ಪೆಟ್ರೋಲ್, ಡೀಸೆಲ್, ಸೀಮೆಎಣ್ಣೆ ಮತ್ತು ಅಡುಗೆ ಅನಿಲಗಳಿಗೆ ಕೊಡುತ್ತಿರುವ ಎಲ್ಲಾ ಸಬ್ಸಿಡಿಯನ್ನೂ ವಾಪಸ್ ತೆಗೆದುಕೊಳ್ಳಬೇಕೆಂದೂ, ಬೆಲೆ ನಿಗದಿಯ ಪರಮಾಧಿಕಾರವನ್ನು ಮಾರುಕಟ್ಟೆಗೆ ಬಿಟ್ಟುಕೊಡಬೇಕೆಂದೂ ಶಿಫಾರಸ್ಸು ಮಾಡಿತು’. ಬಿಜೆಪಿಯ ಆರ್ಥಿಕ ವ್ಯವಹಾರಗಳ ಸೆಲ್ ಸಹ ಪಾರೆಖ್ ವರದಿಯನ್ನು ಜಾರಿಗೊಳಿಸಬೇಕೆಂದು ಆಗ್ರಹಿಸಿತ್ತು!

ಈ ರೀತಿ ಇಂಧನಗಳಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ಸಬ್ಸಿಡಿ ನಿಂತಿತು. ಮಾರುಕಟ್ಟೆ ಮುಕ್ತ ನೀತಿಗೆ ಒಳಪಟ್ಟ ಇಂಧನಗಳ ಬೆಲೆಯನ್ನು ಖಾಸಗಿ ತೈಲ ಕಂಪೆನಿಗಳು ನಿರ್ಧರಿಸುವಂತಾಯಿತು. ರಿಲಯನ್ಸ್ ಬಂಕ್‌ಗಳು ಸಾರ್ವಜನಿಕ ಬಂಕ್‌ಗಳಿಗಿಂತ ಒಂದು ರೂಪಾಯಿ ಕಡಿಮೆ ಬೆಲೆಗೆ ಪೆಟ್ರೋಲ್ ಡೀಸೆಲ್ ಮಾರುವಂತಾಯಿತು. ಶೆಲ್ ಪೆಟ್ರೋಲ್ ಬಂಕ್‌ಗಳು ಹೆಚ್ಚು ಸಂಸ್ಕರಿತ ಮತ್ತು ಕಡಿಮೆ ಸಂಸ್ಕರಿತವೆಂಬ ಹೆಸರಲ್ಲಿ ಹಣ ಸುಲಿಯಲು ಆರಂಭಿಸಿದವು. ಇಂದಿನ ಈ ಸ್ಥಿತಿಗೆ ಹಿಂದಿನ ಎಲ್ಲಾ ಸರ್ಕಾರಗಳು ಕಾರಣವಾದರೂ, ಯುಪಿಎ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು ಅಧಿಕಾರ ಹಿಡಿದ ಬಿಜೆಪಿ ಸರ್ಕಾರದಲ್ಲಿ ಯಾವ ವ್ಯತ್ಯಾಸಗಳೂ ಕಾಣಲಿಲ್ಲ. ಬದಲಾಗಿ ಯುಪಿಎ ಸರ್ಕಾರಕ್ಕಿಂತ ಹೆಚ್ಚು ಮೋದಿ ಸರ್ಕಾರ ಜನರ ಮೇಲೆ ತೆರಿಗೆಯ ಹೊರೆ ಏರಿದೆ.

ಆಶ್ಚರ್ಯವೆಂದರೆ ಭಾರತದಿಂದ ತೈಲವನ್ನು ಖರೀದಿಸುವ ಶ್ರೀಲಂಕ, ನೇಪಾಳ, ಬಾಂಗ್ಲಾದೇಶ ಮತ್ತು ಪಾಕಿಸ್ತಾನ ಭಾರತಕ್ಕಿಂತಲೂ ಕಡಿಮೆ ಬೆಲೆಯಲ್ಲಿ ತಮ್ಮ ಪ್ರಜೆಗಳಿಗೆ ಇಂಧನವನ್ನು ನೀಡುತ್ತಿವೆ. ಆದರೆ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಕಡಿಮೆಯಾದರೂ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರಿತು. ಇದಕ್ಕೆ ಮೋದಿ ಸರ್ಕಾರದ ತುಘಲಕ್ ತೆರಿಗೆ ನೀತಿಯೇ ಕಾರಣವಾಗಿದೆ.

ನಾನಾಗಲೇ ತಿಳಿಸಿದಂತೆ 2012 ರಲ್ಲೂ ಸಹ ಯುಪಿಎ ಸರ್ಕಾರ ಇನ್ನಿಲ್ಲದಂತೆ ತೈಲ ಬೆಲೆ ಏರಿಸಿತ್ತು. ಅದರ ಹಿಂದೆಯೂ ಖಾಸಗಿ ತೈಲ ಕಂಪೆನಿಗಳ ಕೈವಾಡವಿತ್ತು. ಜೊತೆಗೆ ಅಂತಾರಾಷ್ಟ್ರೀಯ ತೈಲ ಬೆಲೆಯೂ ಹೆಚ್ಚಾಗಿತ್ತು. ಅಂತಾರಾಷ್ಟ್ರೀಯ ಕಚ್ಛಾತೈಲ ಬೆಲೆ ಬ್ಯಾರೆಲ್‌ಗೆ 113 ಡಾಲರ್ ಇದ್ದಾಗಲೂ ಮನಮೋಹನ್ ಸಿಂಗ್ ಅವರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ರೂ.73 ಮತ್ತು ರೂ.64ಕ್ಕೆ ನೀಡುತ್ತಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ಸ್ವೀಕರಿಸಿದ ಕೆಲವೇ ತಿಂಗಳಲ್ಲಿ, ಅಂದರೆ ಜನವರಿ, 2015 ರಷ್ಟೊತ್ತಿಗೆ ಪ್ರತಿ ಬ್ಯಾರೆಲ್ ಕಚ್ಚಾ ತೈಲದ ಬೆಲೆ 50 ಡಾಲರ್‌ಗೆ ಕುಸಿಯಿತು. ಸ್ವತಃ ಮೋದಿಯವರೇ ಇದನ್ನು ಅದೃಷ್ಟವೆಂದು ಹೇಳಿಕೊಂಡಿದ್ದರು. ಈ ಅದೃಷ್ಟ ಮುಂದುವರಿದು ಜನವರಿ, 2016 ರಷ್ಟೊತ್ತಿಗೆ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ 29 ಡಾಲರ್‌ಗೆ ಕುಸಿಯಿತು. ಆದರೆ ಮೋದಿಯವರ ಸರ್ಕಾರ ಜನತೆಯ ಮೇಲೆ ಹೊರೆ ಇಳಿಸಲೇ ಇಲ್ಲ. ಪೆಟ್ರೋಲ್ ಬೆಲೆ ಆಗಲೂ ಪ್ರತಿ ಲೀಟರ್‌ಗೆ ರೂ.60 ಇತ್ತು. ಮನಮೋಹನ್ ಸಿಂಗ್ ಸರ್ಕಾರದಲ್ಲಿ ಕಚ್ಚಾ ತೈಲ 113 ಡಾಲರ್ ಇದ್ದಾಗ ರೂ.73 ಕ್ಕೆ ಪೆಟ್ರೋಲ್ ದೊರಕುತ್ತಿತ್ತು. ಆದರೆ ಮೋದಿಯವರ ಸರ್ಕಾರದಲ್ಲಿ ಕಚ್ಚಾ ತೈಲ ರೂ.29 ಇದ್ದಾಗಲೂ ಪೆಟ್ರೊಲ್ ರೂ.60 ರಲ್ಲೆ ಏಕೆ ಉಳಿಯಿತು. ಈಗ 72 ಡಾಲರ್ ಇದ್ದಾಗಲೂ ಪ್ರತಿ ಲೀಟರ್‌ಗೆ ರೂ.84 ರಷ್ಟು ಹೆಚ್ಚಾಗಿದ್ದು ಹೇಗೆ? ಉತ್ತರ ಒಂದೇ ಸುಲಿಗೆ. ತೆರಿಗೆ ಎಂಬ ಹೆಸರಿನಲ್ಲಿ ಜನತೆಯ ಸುಲಿಗೆ.

20, ಮೇ 2018 ರಂದು ಅಂತಾರಾಷ್ಟ್ರೀಯ ಕಚ್ಚಾ ತೈಲದ ಬೆಲೆ ಬ್ಯಾರೆಲ್ಲಿಗೆ 72.5 ಡಾಲರ್ ಅಂದರೆ 4930 ರೂಪಾಯಿಗಳು. ಒಂದು ಬ್ಯಾರೆಲ್‌ನಲ್ಲಿ ಸುಮಾರು 159 ಲೀಟರ್ ಇರುತ್ತದೆ. ಅಲ್ಲಿಗೆ ಒಂದು ಲೀಟರ್ ಕಚ್ಚಾ ತೈಲದ ಬೆಲೆ 31 ರೂಪಾಯಿಗಳಾಗುತ್ತದೆ. ಈ ಕಚ್ಚಾ ತೈಲದಿಂದ ಪೆಟ್ರೋಲನ್ನು ಸಂಸ್ಕರಿಸಲು ಪ್ರತಿ ಲೀಟರಿಗೆ 2.62 ರೂಪಾಯಿ ಮತ್ತು ಡೀಸಲ್‌ಗೆ 5.91 ರೂಪಾಯಿ ತಗಲುತ್ತದೆ. ಸರಬರಾಜು ಮತ್ತು ವಿತರಣೆಗೆ ಪೆಟ್ರೋಲ್ ಗೆ 3.31 ರೂಪಾಯಿ ಮತ್ತು ಡೀಸೆಲ್‌ಗೆ 2.87 ರೂಪಾಯಿ ಖರ್ಚಾಗುತ್ತದೆ. ಇವೆರಡನ್ನೂ ಸೇರಿಸಿದ ನಂತರ ಒಂದು ಲೀಟರ್ ಪೆಟ್ರೋಲ್ ಬೆಲೆ ರೂ.36.93 ಮತ್ತು ಡೀಸೆಲ್ ರೂ.39.78 ಆಗುತ್ತದೆ. ಇದು ಪೆಟ್ರೋಲ್ ಮತ್ತು ಡೀಸೆಲ್ ಅಸಲಿ ಬೆಲೆ. ಈ ಬೆಲೆಗೆ ಕೇಂದ್ರ ಸರ್ಕಾರ ಎಕ್ಸೈಜ್ ತೆರಿಗೆ ಮತ್ತು ರೋಡ್ ಟ್ಯಾಕ್ಸ್ ಎಂದು ಪ್ರತಿ ಲೀಟರ್ ಪೆಟ್ರೋಲಿಗೆ ರೂ.19.48 ಮತ್ತು ಡೀಸೆಲ್‌ಗೆ ರೂ.15.33 ಸೇರಿಸುತ್ತದೆ. ರಾಜ್ಯ ಸರ್ಕಾರಗಳು ಇದಕ್ಕೆ ಕ್ರಮವಾಗಿ ವ್ಯಾಟ್ ತೆರಿಗೆ ರೂ.16.21 ಮತ್ತು ರೂ.9.91 ಜೊತೆಗೆ 25 ಪೈಸೆ ಪರಿಸರ ಸೆಸ್ ಸೇರಿಸುತ್ತದೆ. ನಂತರ ಬಂಕ್‌ಗಳು ಕ್ರಮವಾಗಿ ರೂ.3.62 ಮತ್ತು ರೂ.2.52 ಕಮಿಷನ್ ಸೇರಿಸಿ 76.24 ಮತ್ತು 67.54 ಆಗಿದೆ. ಈ ಪರಿಣಾಮದಿಂದಾಗಿಯೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ಐತಿಹಾಸಿಕ ರೂ.84 ಮತ್ತು ರೂ.70 ಮುಟ್ಟಿದೆ.

ಇದು ಇಂಧನ ಬೆಲೆ ಏರಿಕೆಯ ಅಸಲಿಯತ್ತು. ಮೋದಿ ಸರ್ಕಾರ ಬಂದನಂತರ ಇಂಧನ ತೈಲಗಳ ಮೇಲೆ 12 ಬಾರಿ ಎಕ್ಸೈಸ್ ತೆರಿಗೆಯನ್ನು ಏರಿಸಲಾಗಿದೆ. ಅಂದರೆ ಪೆಟ್ರೋಲ್ ಮೇಲೆ ಶೇ.54 ರಷ್ಟು, ಡೀಸೆಲ್ ಮೇಲೆ ಶೇ.154 ರಷ್ಟು ಪೆಟ್ರೋಲ್ ತೆರಿಗೆಯನ್ನೂ, ಶೇ.46 ರಷ್ಟು ವ್ಯಾಟ್ ತೆರಿಗೆಯನ್ನೂ, ಶೇ.73 ರಷ್ಟು ಡೀಲರ್‌ಗಳ ಕಮಿಷನ್ ಏರಿಸಲಾಗಿದೆ. ಒಂದು ಕಡೆ ಕಚ್ಚಾತೈಲ ಬೆಲೆ ಕುಸಿಯುತ್ತಿದ್ದರೆ ಮತ್ತೊಂದು ಕಡೆ ಮೋದಿಯವರು ಜನತೆಯ ಮೇಲೆ ತೈಲ ಬೆಲೆ ಹೆಚ್ಚು ಮಾಡುತ್ತಾ ಹೋದರು. ಇದರಿಂದಾಗಿ ಮೋದಿ ಸರ್ಕಾರ ತನ್ನ ಖಜಾನೆಯನ್ನು ಜನಸಾಮಾನ್ಯರು ಬೆವರು ಸುರಿಸಿ ಸಂಪಾದಿಸಿದ ಹಣದಿಂದ ತುಂಬಿಸಿಕೊಂಡಿದೆ. 2014-15 ನೇ ಸಾಲಿನಲ್ಲಿ ತೈಲ ತೆರಿಗೆಗಳಿಂದ 99 ಸಾವಿರ ಕೋಟಿ ಖಜಾನೆ ಸೇರಿತ್ತು. ಆದರೆ 2016-17ನೇ ಸಾಲಿನಲ್ಲಿ ಬರೋಬ್ಬರಿ 2.42 ಲಕ್ಷ ಕೋಟಿ ಖಜಾನೆ ಸೇರಿದೆ! ಇದು ಜನರಿಂದ ಮೋದಿಯವರು ಸುಲಿದಿರುವ ಹಣವಲ್ಲದೆ ಬೇರೇನಲ್ಲ.

ಕೊನೆಯದಾಗಿ, ಮತ್ತೊಂದು ಕಡೆ ಮೋದಿಯವರ ಆಡಳಿತದಲ್ಲಿ ಸಾರ್ವಜನಿಕ ಬ್ಯಾಂಕ್‌ಗಳು ಶ್ರೀಮಂತ ಉದ್ಯಮಿಗಳ 2.42 ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡಿವೆ. ಇದರ ಅರ್ಥ ಇಷ್ಟೆ. ಜನರಿಂದ ಸುಲಿಗೆ ಮಾಡಿದ ಹಣವನ್ನು ಸರ್ಕಾರಗಳು ಜನಕಲ್ಯಾಣ ಕಾರ್ಯಗಳಿಗೆ ಬಳಸಲಾರವು. ಬದಲಾಗಿ ಉದ್ಯಮಿಗಳ ಸಾಲಮನ್ನಾ ಮಾಡಲು ಬಳಸಿಕೊಳ್ಳುತ್ತದೆ. ಈ ಶ್ರೀಮಂತರಿಂದ ಸರ್ಕಾರ ನ್ಯಾಯಬದ್ಧವಾಗಿ ಸಾಲ ಮರುಪಾವತಿ ಮಾಡಿಸಿಕೊಂಡಿದ್ದರೆ ಇಂದು ಪೆಟ್ರೋಲ್ ಮತ್ತು ಡೀಸಲ್ ಪ್ರತಿ ಲೀಟರ್‌ಗೆ ಕೇವಲ ರೂ. 30 ಕ್ಕೆ ದೊರಕುತ್ತಿತ್ತು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...