Homeರಾಜಕೀಯಮೈತ್ರಿ ಸರಕಾರದ ಗೋಜಲು ಸಂದೇಶಗಳು

ಮೈತ್ರಿ ಸರಕಾರದ ಗೋಜಲು ಸಂದೇಶಗಳು

- Advertisement -
- Advertisement -
  • ಎ. ನಾರಾಯಣ |

ಎಲ್ಲಾ ಮೈತ್ರಿ ಸರಕಾರಗಳೂ ಅವಕಾಶವಾದದ ಶಿಶುಗಳೇ ಆಗಿರುತ್ತವೆ. ಹಾಗಿರುವಾಗ ಕರ್ನಾಟಕದಲ್ಲಿ 2018ರ ಚುನಾವಣೆಯ ನಂತರ ರೂಪುಗೊಂಡ ಜನತಾದಳ (ಜಾತ್ಯತೀತ) ಮತ್ತು ಕಾಂಗ್ರೆsಸ್ ಪಕ್ಷಗಳ ಮೈತ್ರಿ ಸರಕಾರವನ್ನು ಕೆಲವರು ಅಪವಿತ್ರ ಅಂತಲೂ ಅನೈತಿಕ ಅಂತಲೂ ಟೀಕಿಸುತ್ತಿರುವುದು ವಿಚಿತ್ರವಾಗಿದೆ. ಭಾರತದ ಪ್ರಜಾತಾಂತ್ರಿಕ ರಾಜಕೀಯವೇ ಒಂದು ರೀತಿಯ ಅಪವಿತ್ರ ಮತ್ತು ಅನೈತಿಕ ಆಯ್ಕೆಗಳ ಸರಮಾಲೆ. ಇರುವುದರಲ್ಲಿ ಕಡಿಮೆ ಅಪವಿತ್ರ ಮತ್ತು ಅನೈತಿಕವಾದ ಆಯ್ಕೆಗಳನ್ನು ಮಾಡುವುದೇ ಇಲ್ಲಿ ಪರಮಪವಿತ್ರ ಪೌರ ಕೈಂಕರ್ಯ. ಅದು ಚುನಾವಣೆಯಾದರೂ ಅಷ್ಟೇ. ಆಡಳಿತವಾದರೂ ಅಷ್ಟೇ, ಸಂಸದೀಯ ವ್ಯವಹಾರಗಳಾದರೂ ಅಷ್ಟೇ .

ಆದುದರಿಂದ ಕರ್ನಾಟಕದಲ್ಲಿ ನಡೆದ ಚುನಾವಣೋತ್ತರ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕೇಳಬಹುದಾಗಿದ್ದ ಪ್ರಶ್ನೆ ಬಹಳ ಸರಳವಾಗಿತ್ತು. ಯಾವುದು ಕಡಿಮೆ ಅಪವಿತ್ರ ಮತ್ತು ಅನೈತಿಕ? ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿಯು ಸರಳ ಬಹುಮತಕ್ಕೆ ಬೇಕಾಗಿದ್ದ ಸಂಖ್ಯೆಗಳನ್ನು ಹೊಂದಿಸಲು ಇತರ ಪಕ್ಷಗಳ ಶಾಸಕರನ್ನು ಅಪ್ಪಟ ಹರಾಜಿನಲ್ಲಿ ವಿಕ್ರಯಿಸಿ ಸರಕಾರ ರಚಿಸುವುದೇ? ಅಥವಾ ಚುನಾವಣೆಯಲ್ಲಿ ಎಲ್ಲರೂ ಸೋತ ಹಿನ್ನೆಲೆಯಲ್ಲಿ ಸೋತ ಎರಡು ಪಕ್ಷಗಳು ಸೇರಿ ಕಾನೂನುಬದ್ಧವಾಗಿ ಸರಕಾರ ನಡೆಸುವುದೇ? ಈ ಪ್ರಶ್ನೆಗೆ ಉತ್ತರ ಹುಡುಕಲು ಕೋರ್ಟು-ಕಚೇರಿ ಅಲೆಯಬೇಕಾಗಿಲ್ಲ, ರಾಜ್ಯಪಾಲರ ಬಳಿ ಬಿನ್ನವತ್ತಲೆ ಸಮರ್ಪಿಸಿ ಕಾಯಬೇಕಾಗಿಲ್ಲ, ಮಾಧ್ಯಮಗಳ ಚರ್ಚಾ ರಂಪಾಟದ ಅಗತ್ಯವಿಲ್ಲ. ನಿಷ್ಪಕ್ಷಪಾತವಾಗಿ ಯೋಚಿಸಬಲ್ಲ ಮೂರ್ಖನಿಗೂ ಇವೆರಡರ ನಡುವೆ ಕಡಿಮೆ ಅಪವಿತ್ರ ಮತ್ತು ಅನೈತಿಕವಾದ ಆಯ್ಕೆ ಯಾವುದು ಎಂದು ತಿಳಿದಿರುತ್ತದೆ. ಹಾಗಂತ ಕರ್ನಾಟಕದಲ್ಲಿ ಆಗಿ ಹೋದದ್ದೆಲ್ಲ ಬಹಳ ಅಪೇಕ್ಷಣೀಯ ಮತ್ತು ಆದರ್ಶಪ್ರಾಯ ಬೆಳವಣಿಗೆಗಳು ಎನ್ನುವ ಹಾಗಿಲ್ಲ. ಕಾನೂನುಬದ್ಧವಾದ ಎಲ್ಲವೂ ಆದರ್ಶಪ್ರಾಯವಾಗಿರುವುದಿಲ್ಲ. ಹಾಗಂತ ಅವು ಕಾನೂನು ವಿರೋಧಿ ಕೃತ್ಯಗಳಿಗಿಂತ ಅಪೇಕ್ಷಣೀಯ. ಮುಂದೊಂದು ದಿನ ಅತೀ ಹೆಚ್ಚು ಸ್ಥಾನಗಳು ಬಂದ ಪಕ್ಷದ ಜತೆ ಸಣ್ಣಪಕ್ಷಗಳು ಸೇರಿಕೊಳ್ಳಬೇಕು ಎಂಬ ಕಾನೂನೇ ಬಂದರೆ ಅದು ಬೇರೆ ಪ್ರಶ್ನೆ. ಹಾಗೊಂದು ಕಾನೂನು ತಂದು ರಾಜಕೀಯ ಪಕ್ಷಗಳ ಸ್ವಾತಂತ್ರ್ಯಹರಣ ಮಾಡಲು ಸಾಧ್ಯವೇ ಎನ್ನುವ ಪ್ರಶ್ನೆಯೂ ಮೂಡುತ್ತದೆ.

ಬಿಜೆಪಿಗೆ ಸಹಜವಾಗಿಯೇ ಬಹಳ ಕೋಪ ಬಂದಿದೆ. ಅದರ ಕೋಪ ಕೂಡಾ ಅರ್ಥವಾಗುವಂತಾದ್ದೆ. ಅದರ ಬಳಿ ಸಾಕಷ್ಟು ಸಂಖ್ಯೆಗಳಿಲ್ಲದೆ ಇರಬಹುದು. ಆದರೆ ಇರುವ ಮೂರು ಪಕ್ಷಗಳ ಪೈಕಿ ಅದು ಅತೀಹೆಚ್ಚು ಸ್ಥಾನಗಳನ್ನು ಗೆದ್ದುಕೊಂಡಿದೆ. ಆದುದರಿಂದ ಅತೀ ಕಡಿಮೆ ಸಂಖ್ಯೆ ಹೊಂದಿದ ಜೆಡಿ(ಎಸ್) ತನ್ನೊಂದಿಗೆ ಬಾರದೆ ಕಾಂಗ್ರೆಸ್ ಜೊತೆಗೆ ಸೇರಿದ್ದಕ್ಕೆ ಅದು ಕುದಿಯುತ್ತಿದೆ. ಆದರೆ ಯಾರ ಜತೆ ಸೇರಿಕೊಳ್ಳಬೇಕೆನ್ನುವುದು ಜೆಡಿ(ಎಸ್)ನ ಆಯ್ಕೆ. ತನಗೆ ಬೇಕಾದ ಪಕ್ಷದೊಂದಿಗೆ ಕಾನೂನಿನ ಪರಿಧಿಯೊಳಗೆ ಅದು ಮೈತ್ರಿ ಮಾಡಿಕೊಂಡಿದೆ. ಕಾಂಗ್ರೆಸ್, ಬಿಜೆಪಿಗಿಂತ ಮೊದಲು ಅದರ ಬಳಿ ಬಂದು ಪ್ರಸ್ತಾಪ ಮಂಡಿಸಿತು ಎನ್ನುವುದು ಕೇವಲ ಸಾಂದರ್ಭಿಕ. ಜೆಡಿ(ಎಸ್)ಗೆ ಕಾಂಗ್ರೆಸ್ಸಿನ ಜತೆ ಹೋಗುವುದು ಇಷ್ಟವಿರಲಿಲ್ಲ ಎಂದಾದರೆ ಬಿಜೆಪಿಯ ಜತೆ ಹೋಗುವ ರಾಜಮಾರ್ಗ ತೆರೆದೇ ಇತ್ತು. ಬಹುಶಃ ಬಿಜೆಪಿಯ ಜತೆ ಸೇರಿಕೊಂಡಿದ್ದರೆ ಅದಕ್ಕೆ ಮುಖ್ಯಮಂತ್ರಿ ಸ್ಥಾನ ಸಿಗುತ್ತಿರಲಿಲ್ಲವೋ ಏನೋ. ಜೆಡಿ(ಎಸ್) ಮುಖ್ಯಮಂತ್ರಿ ಪಟ್ಟ ತನಗೆ ಅನಾಯಾಸವಾಗಿ ದೊರಕಿತು ಎಂದು ಕಾಂಗ್ರೆಸ್ಸಿನೊಂದಿಗೆ ಸೇರಿಕೊಂಡಿತೇ? ಅಥವಾ ಅದರ ಬಳಿ ಉಳಿದಿರಬಹುದಾದ ಅಲ್ಪಸ್ವಲ್ಪ ಜಾತ್ಯತೀತತೆಯ ಬದ್ಧತೆಯಿಂದ ಬಿಜೆಪಿಯನ್ನು ದೂರವಿಸಿ ಕಾಂಗ್ರೆಸ್ಸನ್ನು ಅಪ್ಪಿಕೊಂಡಿತೇ? ಅಥವಾ ಜಾತ್ಯತೀತತೆಗೆ ಬದ್ಧರಾಗಿರುವ ಮತ್ತು ಬದ್ಧರಾಗಿರದ ತಮ್ಮ ಶಾಸಕರು ಬೇರೆಬೇರೆ ದಾರಿ ಹಿಡಿಯುವ ಮೂಲಕ ಪಕ್ಷ ಇಬ್ಭಾಗವಾಗಿ ಬಿಜೆಪಿಗೆ ಸರಕಾರ ರಚಿಸಲು ಸಾಧ್ಯವಾಗುವ ಸನ್ನಿವೇಶ ತಪ್ಪಿಸಲು ಕಾಂಗ್ರೆಸ್ಸಿನ ಪ್ರಸ್ತಾಪ ಒಪ್ಪಿಕೊಂಡಿತೇ? ಈ ಎಲ್ಲಾ ಪ್ರಶ್ನೆಗಳಿಗೆ ಸದ್ಯಕ್ಕೆ ಉತ್ತರ ಸ್ಪಷ್ಟವಾಗಿ ದೊರಕಲಾರದು.

ಕುಮಾರಸ್ವಾಮಿಯವರ ಪದಗ್ರಹಣ ಸಮಾರಂಭಕ್ಕೆ ಬಂದ ವಿರೋಧ ಪಕ್ಷಗಳ ರಾಷ್ಟ್ರ ನಾಯಕರುಗಳಿಗೆ ಬಿಜೆಪಿಯೇತರ ಪಕ್ಷಗಳನ್ನು ಒಗ್ಗೂಡಿಸುವಲ್ಲಿ ತಮ್ಮ ಸ್ವಹಿತಾಸಕ್ತಿ ಇತ್ತು. ಆದರೆ ಕರ್ನಾಟಕದಾಚೆಗೆ ದೊಡ್ಡಮಟ್ಟದ ಅಸ್ತಿತ್ವ ಇಲ್ಲದ ಜೆಡಿ(ಎಸ್)ಗೆ ಇಂತಹದ್ದೊಂದು ಸ್ವಹಿತಾಸಕ್ತಿಯ ಪ್ರಶ್ನೆ ಪ್ರೇರಣೆಯಾಗಿರುವ ಸಾಧ್ಯತೆ ಕಡಿಮೆ. ದಕ್ಷಿಣ ಕರ್ನಾಟಕದಲ್ಲಿ ಒಂದು ಜಾತಿಯ ಬೆಂಬಲದಲ್ಲಿ ಅಸ್ತಿತ್ವ ಕಂಡುಕೊಂಡಿರುವ ಜೆಡಿ(ಎಸ್) ಪಕ್ಷವನ್ನು ಬಿಜೆಪಿ ಇಡಿಯಾಗಿ ನುಂಗಿಬಿಡುವ ಸಾಧ್ಯತೆ ಇಲ್ಲ. ಜೆಡಿ(ಎಸ್)ಗೆ ಕಂಟಕ ಇರುವುದು ಮತ್ತು ಬರುವುದು ಕಾಂಗ್ರೆಸ್ಸಿನಿಂದ. ಸದ್ಯದಲ್ಲೇ ಬರಲಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ಸಿನೊಂದಿಗೆ ಹೊಂದಾಣಿಕೆ ಮಾಡಿಕೊಂಡರೂ ಮಾಡದೆ ಉಳಿದರೂ ಜೆಡಿ(ಎಸ್) ಸಂಕಟವನ್ನು ಅನುಭವಿಸಬೇಕು. ಈ ಸಂಕಟಕ್ಕೆ ಅದು ಸಿದ್ಧವಾಗಿದ್ದರೆ ರಾಜ್ಯಮಟ್ಟದಲ್ಲಿ ಮಾಡಿಕೊಂಡ ಮೈತ್ರಿ ಸರಕಾರಕ್ಕೆ ಕಂಟಕ ಇಲ್ಲ. ಆದರೆ ಆರಂಭದಲ್ಲಿ ಬೇಷರತ್ ಬೆಂಬಲ ಅಂತ ಹೇಳಿಕೊಂಡಿದ್ದ ಕಾಂಗ್ರೆಸ್ ಈಗ ಷರತ್ತುಗಳ ಮೇಲೆ ಷರತ್ತುಗಳನ್ನು ವಿಧಿಸುತ್ತಿದೆ ಎನ್ನುವ ವರ್ತಮಾನವಿದೆ. ಇದನ್ನೆಲ್ಲಾ ನೋಡುತಿದ್ದರೆ ಕಾಂಗ್ರೆಸ್ಸಿನ ಬದ್ಧತೆ ಜಾತ್ಯತೀತತೆಗೊ ಅಥವಾ ಸೋತರೂ ಅಧಿಕಾರದಲ್ಲಿ ಮುಂದುವರಿಯುವುದಕ್ಕೋ ಎನ್ನುವ ಸಂಶಯ ಬರುತ್ತಿದೆ.

ಕಾಂಗ್ರೆಸ್, ಜೆಡಿಎಸ್‍ಗೆ ಬೆಂಬಲ ನೀಡಿದ್ದು ಜಾತ್ಯತೀತತೆಗಿಂತ ಹೆಚ್ಚಾಗಿ ತನ್ನನ್ನು ನಿರ್ನಾಮ ಮಾಡಲು ಹೊರಟಿರುವ ಬಿಜೆಪಿಯನ್ನು ಕರ್ನಾಟಕದ ಮಟ್ಟಿಗೆ ಅಧಿಕಾರದಿಂದ ಹೊರಗಿಡಲು ಎನ್ನುವುದು ಹೆಚ್ಚು ಸೂಕ್ತ. ಜಾತ್ಯತೀತತೆಯ ಕುರಿತ ಬದ್ಧತೆ ಮತ್ತು ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡುವುದು, ಇವೆರಡೂ ಒಂದೇ ಎಂದು ಕಾಂಗ್ರೆಸ್ ವಾದಿಸಬಹುದು. ವಾಸ್ತವದಲ್ಲಿ ಇವೆರಡು ಬೇರೆಬೇರೆ. ಅದೇನೇ ಇರಲಿ, ಈ ಮೈತ್ರಿ ಒಂದು ಸಂದೇಶವನ್ನಂತೂ ನೀಡಿದೆ. ಅದು ಈ ಕಾಲಕ್ಕೆ ತುಂಬಾ ಅಗತ್ಯವಾಗಿದ್ದ ಸಂದೇಶ. ಪ್ರಧಾನಮಂತ್ರಿ ನರೇಂದ್ರಮೋದಿ ಮತ್ತು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಜೋಡಿ ರಾಜ್ಯಗಳ ಚುನಾವಣೆಯಲ್ಲಿ ಗೆದ್ದರೂ, ಗೆಲ್ಲದೇ ಅತಂತ್ರಸ್ಥಿತಿ ನಿರ್ಮಾಣವಾದರೂ ಬಿಜೆಪಿಯನ್ನು ಅಧಿಕಾರಕ್ಕೆ ತಂದೇ ವಿರಮಿಸುವುದು ಎನ್ನುವುದು ಎಲ್ಲಾ ಕಾಲದಲ್ಲೂ ಎಲ್ಲಾ ರಾಜ್ಯಗಳಲ್ಲೂ ಸಾಧ್ಯವಾಗಬೇಕಿಲ್ಲ ಎನ್ನುವುದೇ ಆ ಸಂದೇಶ. ಈ ಸಂದೇಶದ ಪ್ರಸ್ತುತತೆ ಮೈತ್ರಿ ಸರಕಾರ ಉಳಿದಷ್ಟು ಕಾಲ ಮಾತ್ರ. ಇದರ ಜತೆಗೆ ಕಾಂಗ್ರೆಸ್, ಬಿಜೆಪಿಯೇತರ ಪಕ್ಷಗಳನ್ನು ಒಗ್ಗೂಡಿಸುವ ಸಲುವಾಗಿ ಬೇಕಾದರೆ ಒಂದಷ್ಟು ತ್ಯಾಗಗಳಿಗೂ ಸಿದ್ಧವಾಗಿದೆ ಎನ್ನುವ ಒಂದು ಸಂದೇಶವೂ ಆರಂಭದಲ್ಲಿ ಕಾಣಿಸಿಕೊಂಡಿತ್ತು. ಆದರೆ ಈಗ ಮಂತ್ರಿಮಂಡಲ ರಚಿಸುವಲ್ಲಿ ಕಾಂಗ್ರೆಸ್ ನಡೆÀಸುತ್ತಿರುವ ಮೇಲಾಟ, ಜತೆಗೆ ಐದು ವರ್ಷಗಳ ಕಾಲ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿರುತ್ತಾರೋ ಇಲ್ಲವೋ ಎನ್ನುವ ಕುರಿತ ನಿಲುವಿನಲ್ಲಿ ಅದು ತೋರುತ್ತಿರುವ ಅಸ್ಪಷ್ಟತೆ ಇತ್ಯಾದಿಗಳನ್ನು ನೋಡಿದರೆ ಆ ಸಂದೇಶ ಕೇವಲ ಕಣ್ಣುಕಟ್ಟು ಅನ್ನಿಸುತ್ತದೆ. ಮುಂದೇನೋ? ಊಹಿಸುವುದು ಕಷ್ಟ.

ವಾಸ್ತವದಲ್ಲಿ, ಕಾಂಗ್ರೆಸ್ಸಿಗೆ ಸೆಕ್ಯುಲರಿಸಂ ಕುರಿತಾದ ತನ್ನ ಬದ್ಧತೆಯನ್ನು ಪ್ರದರ್ಶಿಸುವ ಮತ್ತು ಬಿಜೆಪಿಯ ವಿರುದ್ಧ ಎಲ್ಲಾ ವಿರೋಧ ಪಕ್ಷಗಳನ್ನು ಒಂದಾಗಿಸಲು ಒಂದು ಪ್ರೇರಕಶಕ್ತಿಯಾಗಿ ಕೆಲಸ ಮಾಡುವ ಉದ್ದೇಶಗಳೇ ಇದ್ದಿದ್ದರೆ ಅದು ಕುಮಾರಸ್ವಾಮಿ ಸರಕಾರಕ್ಕೆ ಬಾಹ್ಯ ಬೆಂಬಲ ನೀಡಬೇಕಿತ್ತು. ಒಂದುವೇಳೆ ಸರಕಾರದಲ್ಲಿ ಪಾಲ್ಗೊಳ್ಳಲೇಬೇಕು ಎಂದಿದ್ದಲ್ಲಿ ಮಂತ್ರಿಮಂಡಲದಲ್ಲಿ ಕೇವಲ ಸಾಂಕೇತಿಕ ಪ್ರಾತಿನಿಧಿತ್ವ ಸಾಕು ಎನ್ನಬೇಕಿತ್ತು. ಆಗ ಅದು ನೈತಿಕವಾಗಿ ಹಲವು ಮೆಟ್ಟಿಲು ಮೇಲೇರುತ್ತಿತ್ತು. ಬಿಜೆಪಿಯ ವಿಷಯಕ್ಕೆ ಬಂದರೆ ಆ ಪಕ್ಷದಲ್ಲಿ ಇಲ್ಲದ ನೈತಿಕತೆ ಅದಕ್ಕಿದೆ ಅಂತ ಜನ ಭಾವಿಸುತ್ತಾರೆ. ಅದೇವೇಳೆ ಕಾಂಗ್ರೆಸ್ ವಾಸ್ತವದಲ್ಲಿ ಎಷ್ಟು ನೈತಿಕ ಅಧಃಪತನ ಕಂಡಿದೆಯೋ ಅದಕ್ಕಿಂತ ಹೆಚ್ಚಿನ ಪತನವನ್ನು ಜನ ಅದರ ಮೇಲೆ ಆರೋಪಿಸುತ್ತಿದ್ದಾರೆ. ಸುದೀರ್ಘ ಕಾಲ ಆಡಳಿತದಲ್ಲಿದ್ದ ಪಕ್ಷವಾದ ಕಾರಣ ಕಾಂಗ್ರೆಸ್ ಇಂತಹ ಟೀಕೆಗಳನ್ನು ಎದುರಿಸುವುದು ಸಹಜ. ಜತೆಗೆ ಜನ ಕಾಂಗ್ರೆಸ್ಸನ್ನು ಈ ರೀತಿ ಕಾಣಲು ಬೇಕಾದ ಎಲ್ಲಾ ರೀತಿಯ ಪ್ರಚಾರವನ್ನು ಬಿಜೆಪಿ ಬಹಳ ವ್ಯವಸ್ಥಿತವಾಗಿ ಮಾಡುತ್ತಿದೆ. ಇದನ್ನು ಮೆಟ್ಟಿನಿಂತು ತನ್ನ ಪರವಾಗಿ ಜನಾಭಿಪ್ರಾಯ ಮತ್ತೆ ರೂಪುಗೊಳ್ಳುವಂತೆ ಮಾಡಬೇಕಾದರೆ ಕಾಂಗ್ರೆಸ್ ಗಟ್ಟಿಯಾದ ಕೆಲ ನೈತಿಕ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಸೋತರೂ ಅಧಿಕಾರ ಬಿಡಲೊಪ್ಪದ ಭಂಡಪಕ್ಷ ಈ ಕಾಂಗ್ರೆಸ್ ಎನ್ನುವ ರೀತಿಯಲ್ಲಿ ಜನ ಯೋಚಿಸಲು ಅನುವಾಗುವಂತೆ ಆ ಪಕ್ಷದ ನಡವಳಿಕೆ ಸಾಗಿದರೆ ಮುಂದಿನ ದಾರಿ ಅದಕ್ಕೆ ಇನ್ನೂ ದುರ್ಗಮವಾದೀತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...