Homeಕರ್ನಾಟಕರಾಹುಲ್ ಗಾಂಧಿ ಹೋರಾಟವನ್ನು ಮಣ್ಣುಗೂಡಿಸಿದ ರಾಜ್ಯ ಸರ್ಕಾರ! ಕಾರಣ ಜೆಡಿಎಸ್ಸೋ? ಕಾಂಗ್ರೆಸ್ಸೋ?

ರಾಹುಲ್ ಗಾಂಧಿ ಹೋರಾಟವನ್ನು ಮಣ್ಣುಗೂಡಿಸಿದ ರಾಜ್ಯ ಸರ್ಕಾರ! ಕಾರಣ ಜೆಡಿಎಸ್ಸೋ? ಕಾಂಗ್ರೆಸ್ಸೋ?

- Advertisement -
- Advertisement -

| ನೀಲಗಾರ |

ಯಾವುದನ್ನು ರಾಹುಲ್ ಗಾಂಧಿ ಕಾಯ್ದೆ ಎಂದು ಹೇಳಲಾಗುತ್ತದೋ, ಯಾವುದನ್ನು ಮುಂದಿಟ್ಟುಕೊಂಡು ದೇಶಾದ್ಯಂತ ರೈತರು ಹೋರಾಟ ಮಾಡಿ ನರೇಂದ್ರ ಮೋದಿ ಸರ್ಕಾರವನ್ನು ಮಣಿಸಿದ್ದರೋ, ಆ ವಿಚಾರದಲ್ಲಿ ರಾಹುಲ್ ಗಾಂಧಿ ಪ್ರತಿಪಾದಿಸಿದ ಆಶಯವನ್ನೇ ರಾಜ್ಯ ಸರ್ಕಾರವು ಮಣ್ಣುಗೂಡಿಸಿದೆ. ಇನ್ನೂ ಆಶ್ಚರ್ಯದ ಸಂಗತಿಯೆಂದರೆ, ಸಮ್ಮಿಶ್ರ ಸರ್ಕಾರದ ಎರಡೂ ಅಂಗಪಕ್ಷಗಳ ವಕ್ತಾರರನ್ನು ‘ಪತ್ರಿಕೆ’ಯು ಮಾತನಾಡಿಸಿತು. ಕಾಂಗ್ರೆಸ್‍ನ ವಕ್ತಾರರಿಗೆ ಇಂತಹದೊಂದು ಬೆಳವಣಿಗೆ ಆಗಿರುವುದರ ಕುರಿತು ಮಾಹಿತಿಯೇ ಇಲ್ಲ! ಮಾಹಿತಿ ಹೊಂದಿರುವ ಜೆಡಿಎಸ್‍ನ ವಕ್ತಾರರು, ಸಮಸ್ಯೆಯನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಕಂದಾಯ ಮಂತ್ರಿ ದೇಶಪಾಂಡೆಯ ಮೇಲೆ ದೋಷ ಹೊರಿಸಿದರು.

ಸ್ವತಃ ತಮ್ಮ ಮೈತ್ರಿಕೂಟದ ನೀತಿಗಳಿಗೇ ಬದ್ಧರಾಗಿರದ ಈ ಪಕ್ಷಗಳ ಸ್ಥಳೀಯ ನಾಯಕರುಗಳು ಬಿಜೆಪಿಯ ನೀತಿಗಳ ವಿರುದ್ಧ ಕಾಟಾಚಾರಕ್ಕೆ ಮಾತ್ರ ಪ್ರತಿಭಟನೆ ಮಾಡುತ್ತಾರೆಂಬುದಕ್ಕೆ ಇದೇ ಸಾಕ್ಷಿ. ಏಕೆಂದರೆ, ಈ ಎರಡೂ ಪಕ್ಷಗಳ ಸ್ಥಳೀಯ ನಾಯಕರುಗಳು ಈ ಹಿಂದೆ ಮೋದಿ ಸರ್ಕಾರದ ಸದರಿ ತಿದ್ದುಪಡಿಯ ವಿರುದ್ಧ ಕರ್ನಾಟಕದಲ್ಲೂ ಪ್ರತಿಭಟನೆ ನಡೆಸಿದ್ದರು!! ಇದೀಗ ಅದನ್ನೇ ತಾವೂ ಜಾರಿಗೆ ತರಲು ಹೊರಟಿದ್ದಾರೆ.

ನಿನ್ನೆ (ಜೂನ್ 10ರಂದು) ರಾಜ್ಯದ ವಿವಿಧ ಭಾಗಗಳಲ್ಲಿ ರೈತಸಂಘವು ಇದನ್ನು ಖಂಡಿಸಿ ಹೆದ್ದಾರಿ ತಡೆಯನ್ನು ಹಮ್ಮಿಕೊಂಡಿತ್ತು. ಈ ಪ್ರತಿಭಟನೆಯು ರಾಜ್ಯ ಸರ್ಕಾರದ ವಿರುದ್ಧ ಆಗಿದ್ದರಿಂದ ಮಾಧ್ಯಮಗಳು ದೊಡ್ಡ ಸುದ್ದಿ ಮಾಡಬೇಕಿತ್ತು. ಆದರೆ, ಅದರ ಹಿಂದೆ ನರೇಂದ್ರ ಮೋದಿ ಸರ್ಕಾರದ ನಿಲುವನ್ನೂ ವಿರೋಧ ಮಾಡುವುದರಿಂದ ಯಾವ ಟಿವಿ ಚಾನೆಲ್‍ಗೂ ಅದೊಂದು ದೊಡ್ಡ ಸುದ್ದಿ ಎನಿಸಲಿಲ್ಲ. ಅದರ ಜೊತೆಗೆ ಗಿರೀಶ್ ಕಾರ್ನಾಡರ ನಿಧನದ ಕಾರಣಕ್ಕೂ ಮಾಧ್ಯಮಗಳು ಅದರ ಕಡೆಗೆ ಗಮನ ಕೊಡಲಿಲ್ಲ. ಆದರೆ, ರಾಜ್ಯದ ಸಮ್ಮಿಶ್ರ ಸರ್ಕಾರದ ಅತೀ ದೊಡ್ಡ ತಪ್ಪು ನೀತಿಯ ವಿರುದ್ಧ ನಡೆದ ಮಹತ್ವದ ಪ್ರತಿಭಟನೆ ಇದಾಗಿದೆ.

2014ರಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ದೇಶಾದ್ಯಂತ ಅದು ರೈತರ ಪ್ರತಿಭಟನೆಯನ್ನು ಎದುರಿಸಬೇಕಾಗಿ ಬಂದಿತ್ತು. ಅದಕ್ಕೆ ಕಾರಣ ಭೂಸ್ವಾಧೀನ ಕಾಯ್ದೆಗೆ ಸುಗ್ರೀವಾಜ್ಞೆಯ ಮೂಲಕ ತಂದ ತಿದ್ದುಪಡಿ. ಈ ಭೂಸ್ವಾಧೀನ ಕಾಯ್ದೆಯು ಯುಪಿಎ ಸರ್ಕಾರದಲ್ಲಿ ಜಾರಿಗೆ ಬಂದಿತ್ತು. ವಾಸ್ತವದಲ್ಲಿ ಭಾರತದಲ್ಲಿ ರೈತರ ಭೂಮಿಯನ್ನು ವಿವಿಧ ಯೋಜನೆಗಳಿಗಾಗಿ ಸರ್ಕಾರವು ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳಬೇಕೆಂದರೆ 1894ರಲ್ಲಿ ಬ್ರಿಟಿಷರು ಜಾರಿಗೆ ತಂದಿದ್ದ ಭೂಸ್ವಾಧೀನ ಕಾಯ್ದೆಯನ್ನೇ ಬಳಸಲಾಗುತ್ತಿತ್ತು. ಅದು ಏಕಪಕ್ಷೀಯವಾಗಿದ್ದು, ರೈತವಿರೋಧಿಯಾಗಿತ್ತು.

ಅದರ ಪರಿಣಾಮವಾಗಿ ದೇಶದ ವಿವಿಧ ಭಾಗಗಳಲ್ಲಿ ‘ಅಭಿವೃದ್ಧಿಯ ಹೆಸರಿನಲ್ಲಿ’ ಸರ್ಕಾರಗಳು ಭೂಸ್ವಾಧೀನಕ್ಕೆ ಮುಂದಾದಾಗಲೆಲ್ಲಾ ಭಾರೀ ಪ್ರತಿಭಟನೆಗಳನ್ನು ಎದುರಿಸಬೇಕಾಗುತ್ತಿತ್ತು. ದಿನೇ ದಿನೇ ಅವುಗಳ ತೀವ್ರತೆ ಮತ್ತು ಪ್ರಮಾಣ ಹೆಚ್ಚಾಗುತ್ತಲೆ ಬಂದಿತ್ತು. ಒರಿಸ್ಸಾದ ಕಾಶೀಪುರ, ನಿಯಮಗಿರಿ, ಕಳಿಂಗ ಇತ್ಯಾದಿಗಳೆಡೆ ನಡೆದ ಪ್ರತಿಭಟನೆಗಳು ಮತ್ತು ಪಶ್ಚಿಮ ಬಂಗಾಳದ ಸಿಂಗೂರು ಮತ್ತು ನಂದಿಗ್ರಾಮಗಳಲ್ಲಿ ನಡೆದ ಪ್ರತಿಭಟನೆಗಳು ಹಿಂಸಾರೂಪವನ್ನು ತಳೆದಿದ್ದವು. ಏಕೆಂದರೆ, ಅದೇನೇ ಆದರೂ ಭೂಮಿಯನ್ನು ವಶಪಡಿಸಿಕೊಂಡೇ ತೀರುತ್ತೇವೆಂದು ಸರ್ಕಾರಗಳು ಹೊರಟು, ಅನಿವಾರ್ಯವಾಗಿ ರೈತರು ತಿರುಗಿಬಿದ್ದಿದ್ದರು.

ಇವುಗಳ ಪರಿಣಾಮವಾಗಿ ಭೂಸ್ವಾಧೀನದಲ್ಲಿನ ಸಮಸ್ಯೆಗಳಿಂದಾಗಿ ಹಲವಾರು ಯೋಜನೆಗಳು ನೆನೆಗುದಿಗೆ ಬಿದ್ದಿದ್ದವು. ಯುಪಿಎ -2ರ ಸಂದರ್ಭದಲ್ಲಿ ಇದನ್ನು ಪರಿಶೀಲಿಸಿದ ಸರ್ಕಾರವು ಭೂಸ್ವಾಧೀನ ಕಾಯ್ದೆಗೆ ಕೆಲವು ತಿದ್ದುಪಡಿಗಳನ್ನು ತರಲು ಹೊರಟಿತು. ಆಗ ಕಾಂಗ್ರೆಸ್ ಉಪಾಧ್ಯಕ್ಷರಾಗಿದ್ದ ರಾಹುಲ್‍ಗಾಂಧಿ ಅದರಲ್ಲಿ ನೇರವಾಗಿ ಮಧ್ಯಪ್ರವೇಶಿಸಿದರು. ಊಹೆಗೆ ನಿಲುಕದಷ್ಟು ಪ್ರಮಾಣದಲ್ಲಿ ಸದರಿ ಕಾಯ್ದೆಯನ್ನು ರೈತಪರವಾಗಿಸಲಾಯಿತು. ಅಂತಿಮವಾಗಿ ಭೂಸ್ವಾಧೀನ ಕಾಯ್ದೆ ಎಂಬ ಹೆಸರನ್ನೇ ಬದಲಿಸುವಷ್ಟು ಮಟ್ಟಿಗೆ ಅದು ಜನಪರವಾಗಿತ್ತು. ಅದರ ಹೊಸ ಹೆಸರು ‘ಭೂಸ್ವಾಧೀನ ಮಾಡಿಕೊಳ್ಳುವಾಗ ನ್ಯಾಯಯುತವಾದ ಪರಿಹಾರ ನೀಡುವುದು ಮತ್ತು ಪಾರದರ್ಶಕತೆ ಕಾಪಾಡಿಕೊಳ್ಳುವ ಕಾಯ್ದೆ’ ಎಂದಾಗಿತ್ತು! ಹಾಗಾಗಿಯೇ ಇದನ್ನು ರಾಹುಲ್‍ಗಾಂಧಿ ಕಾಯ್ದೆ ಎಂದೂ ಕೆಲವು ಕಾಂಗ್ರೆಸ್ ನಾಯಕರು ಹೇಳುತ್ತಿದ್ದುದುಂಟು.

ಇಂತಹ ಹಲವಾರು ಜನಪರ ಕ್ರಮಗಳಂತೆ, ಇದರ ಬಗ್ಗೆಯೂ ಯುಪಿಎ ಸರ್ಕಾರವು ಹೆಚ್ಚೇನೂ ಪ್ರಚಾರ ಮಾಡಿಕೊಳ್ಳಲಿಲ್ಲ. ಇದರ ಬಗ್ಗೆ ಜನರಿಗೆ ಗೊತ್ತಾಗಿದ್ದು, ಯುಪಿಎ ಸೋತು ಎನ್‍ಡಿಎ ಅಧಿಕಾರಕ್ಕೆ ಬಂದ ಮೇಲೆ. ಈ ಕಾಯ್ದೆಯಿದ್ದರೆ ಭೂಸ್ವಾಧೀನ ಸಾಧ್ಯವೇ ಇಲ್ಲ ಎಂದು ಬಗೆದ ಮೋದಿ ಸರ್ಕಾರವು 2014ರಲ್ಲೇ ಸದರಿ ಕಾಯ್ದೆಗೆ ಗಂಭೀರ ತಿದ್ದುಪಡಿಗಳನ್ನು ಸುಗ್ರೀವಾಜ್ಞೆಯ ಮೂಲಕ ತರಲು ಹೊರಟಿತು. ಇದಕ್ಕೆ ದೇಶದ ಎಲ್ಲೆಡೆ ತೀವ್ರವಾದ ಪ್ರತಿಭಟನೆಗಳು ಶುರುವಾದವು. ಸ್ವತಃ ಬಿಜೆಪಿಯ ರೈತ ವಿಭಾಗವಾದ ಭಾರತೀಯ ಕಿಸಾನ್ ಸಂಘವೂ ವಿರೋಧಿಸಿತು. ಸುಗ್ರೀವಾಜ್ಞೆಯ ಅವಧಿ ಮುಗಿಯುತ್ತಾ ಬಂದಂತೆ, ಅದರ ನವೀಕರಣವಾಗುವ ಹೊತ್ತಿಗೆ ಪ್ರತಿಭಟನೆಗಳು ತಾರಕಕ್ಕೇರಿದವು. ತನ್ನ ಹಲವು ನಾಯಕರನ್ನು ವಿವಿಧ ಕಡೆಗೆ ಕಳಿಸಿ, ಜಿಲ್ಲಾ ಮಟ್ಟದಲ್ಲಿ ರೈತರೊಂದಿಗೆ ಸಂವಾದ ಕಾರ್ಯಕ್ರಮವನ್ನು ಬಿಜೆಪಿಯು ಹಮ್ಮಿಕೊಂಡಿತು. ಆದರೂ ವಿರೋಧ ಕಡಿಮೆಯಾಗಲಿಲ್ಲ.

ಅಂತಿಮವಾಗಿ ಮೋದಿ ಸರ್ಕಾರವು ಸದರಿ ತಿದ್ದುಪಡಿಯ ಪ್ರಯತ್ನವನ್ನು ಕೈಬಿಟ್ಟಿತು. ‘ರಾಜ್ಯ ಸರ್ಕಾರಗಳು ತಮಗೆ ಬೇಕಾದ ರೀತಿಯಲ್ಲಿ ಮಾಡಿಕೊಳ್ಳಲಿ’ ಎಂದು ಕೇಂದ್ರವು ಹೇಳಿತು. ಆದರೆ, ಕೆಲವು ಬಿಜೆಪಿ ಆಡಳಿತದ ಸರ್ಕಾರಗಳೂ ಒಳಗೊಂಡಂತೆ, ಬಿಜೆಪಿಯೇತರ ಪಕ್ಷಗಳಿದ್ದ ಸರ್ಕಾರಗಳು ಅಂತಹ ತಿದ್ದುಪಡಿಗಳನ್ನು ತಂದಿರಲಿಲ್ಲ. ಆದರೆ, ಕರ್ನಾಟಕದಲ್ಲಿ ಅಂತಹ ಪ್ರಯತ್ನಕ್ಕೆ ಮುಂದಾಗಲಾಗಿದೆ. ಅದೂ ಸ್ವತಃ ಕಾಂಗ್ರೆಸ್ ಮತ್ತು ಅದರ ಮೈತ್ರಿಪಕ್ಷ ಜೆಡಿಎಸ್ ಅಧಿಕಾರದಲ್ಲಿದ್ದಾಗ!

2019ರ ಫೆಬ್ರವರಿಯಲ್ಲಿ ರೈತರ ಪಾಲಿಗೆ ಕರಾಳ ಶಾಸನವಾಗಿರುವ ದೊಡ್ಡ ಬಂಡವಾಳದಾರರು, ಬಹುರಾಷ್ಟ್ರೀಯ ಸಂಸ್ಥೆಗಳ ಲೂಟಿಗೆ ನೆರವಾಗುವ ಈ ಕಾಯ್ದೆಯನ್ನು ರಾಜ್ಯ ಸರ್ಕಾರವು ತಂದಿತು. ‘ಭೂ ಸ್ವಾಧೀನ, ಪುನರ್ವಸತಿ ಹಾಗೂ ಪುನರ್ ವ್ಯವಸ್ಥೆಯಲ್ಲಿ ನ್ಯಾಯಯುತ ಪರಿಹಾರ ಮತ್ತು ಪಾರದರ್ಶಕ ಹಕ್ಕು ಕರ್ನಾಟಕ ತಿದ್ದುಪಡಿ ಮಸೂದೆ -2019’ ಯನ್ನು ವಿಧಾನಸಭೆಯು ಅಂಗೀಕರಿಸಿತು.

ಫೆಬ್ರವರಿ 6 ರಿಂದ 13 ರವರೆಗೆ ನಡೆದ ವಿಧಾನಸಭಾ ಅಧಿವೇಶನದಲ್ಲಿ ಏನೊಂದು ಚರ್ಚೆ ಮಾಡದೇ, ಬಿಜೆಪಿಯ ಸಭಾತ್ಯಾಗದಿಂದುಂಟಾದ ಪರಿಸ್ಥಿತಿಯನ್ನು ವಿಧಾನಸಭೆಯಲ್ಲಿ ದುರುಪಯೋಗಪಡಿಸಿಕೊಂಡು ಸರ್ಕಾರ ಈ ಮಸೂದೆ ಅಂಗೀಕರಿಸಿತು. ರೈತರ ಮತ್ತು ರೈತಸಂಘಗಳ ಜೊತೆ ಚರ್ಚೆ ನಡೆಸುವ ಸೌಜನ್ಯವನ್ನು ಸಹಾ ಸರಕಾರ ತೋರದಿರುವುದು ದುರಾದೃಷ್ಟಕರವಾಗಿದೆ.

ಏನೇನು ತಿದ್ದುಪಡಿಗಳಿವೆ?
ರೈತರ ಜಮೀನುಗಳನ್ನು ಯಾವುದೇ ಒಪ್ಪಿಗೆಯಿಲ್ಲದೇ ಭೂಮಿ ಪಡೆಯಬಹುದು. ಭೂಸ್ವಾಧೀನದಿಂದ ಸಮಾಜ ಹಾಗೂ ಪರಿಸರದ ಮೇಲಾಗುವ ಪರಿಣಾಮಗಳನ್ನಾಗಲೀ ಮತ್ತು ದೇಶದ, ರಾಜ್ಯದ ಆಹಾರ ಭದ್ರತೆ ಹಾಗೂ ಆಹಾರದ ಸ್ವಾವಲಂಬನೆಯ ಮೇಲಾಗುವ ದುಷ್ಪರಿಣಾಮಗಳನ್ನಾಗಲೀ ಪರಿಗಣಿಸದೇ, ಪುನರ್ವಸತಿ ಕ್ರಮಗಳನ್ನು ದುರ್ಬಲಗೊಳಿಸುವ ಹಾಗೂ ಬೇಕಾಬಿಟ್ಟಿ ದರಕ್ಕೆ ಸ್ವಾಧೀನ ಮಾಡುವ ದುರುದ್ದೇಶವನ್ನು ಹೊಂದಿದೆ. ಇದು ಈ ಹಿಂದೆ ಕೇಂದ್ರದ ನರೇಂದ್ರ ಮೋದಿ ಸರಕಾರ ಮೂರು ಬಾರಿ ಸುಗ್ರೀವಾಜ್ಞೆಯ ಮೂಲಕ ತಿದ್ದುಪಡಿ ಮಾಡಲು ಯತ್ನಿಸಿದುದರ ಪಡಿಯಚ್ಚಾಗಿದೆ.

ಕಾಯ್ದೆಯಲ್ಲಿ ಈ ಮೊದಲು ಭೂಸ್ವಾಧೀನಕ್ಕೆ ಶೇ.80 ರಷ್ಟು ರೈತರ ಒಪ್ಪಿಗೆ ಪಡೆಯಬೇಕಿತ್ತು, ಕೈಗಾರಿಕಾ ಪ್ರದೇಶಾಭಿವೃದ್ಧಿ, ನಗರೀಕರಣ, ರಸ್ತೆಗೆ ಸೇರಿದಂತೆ 6 ಅಂಶಗಳಿಗೆ ಮಾತ್ರ ಭೂಸ್ವಾಧೀನಕ್ಕೆ ಅವಕಾಶ ಇತ್ತು. ಆದರೀಗ ಉದ್ದೇಶಿತ ತಿದ್ದುಪಡಿ ಈ 6 ಅಂಶಗಳನ್ನು ಸೇರಿಸಿಲ್ಲ. ಅಂದರೆ, ಯಾವುದಕ್ಕೆ ಬೇಕಾದರೂ ಸ್ವಾಧೀನ ಮಾಡಬಹುದು ಎಂದರ್ಥ.

ದುರಂತವೆಂದರೆ, ಕಾಂಗ್ರೆಸ್ ವಕ್ತಾರರನ್ನು ಈ ಕುರಿತು ಮಾತನಾಡಿಸಿದಾಗ ಅವರಿಗೆ ಇದರ ಅರಿವಿದ್ದಂತಿರಲಿಲ್ಲ. ಇನ್ನು ಜೆಡಿಎಸ್ ವಕ್ತಾರರು ಸಮಸ್ಯೆ ತಮ್ಮ ಪಕ್ಷದ್ದಲ್ಲವೆಂತಲೂ, ತಾನು ವ್ಯಕ್ತಿಗತವಾಗಿ ವಿರೋಧಿಸುತ್ತೇನೆಂದೂ ಹೇಳಿದರು. ರಮೇಶ್ ಬಾಬು ಅವರ ವ್ಯಕ್ತಿಗತ ನಿಲುವನ್ನು ನಾವು ಸ್ವಾಗತಿಸಬಹುದಾದರೂ, ಅವರ ಪಕ್ಷ ಜವಾಬ್ದಾರಿಯಿಂದ ನುಣುಚಿಕೊಳ್ಳಲಾಗದು. (ಬಾಕ್ಸ್‍ಗಳನ್ನು ನೋಡಿ).
ಇಂತಹ ಸರ್ಕಾರದಿಂದ ಏನು ನಿರೀಕ್ಷಿಸಬಹುದು ಎಂಬುದು ಓದುಗರ ನಿರ್ಧಾರಕ್ಕೆ ಬಿಟ್ಟಿದ್ದು.

ವೈಯಕ್ತಿಕ ವಿರೋಧವಿದೆ, ಮುಖ್ಯಮಂತ್ರಿಯವರ ಗಮನಕ್ಕೂ ತರುತ್ತೇನೆ

ರಮೇಶ್ ಬಾಬು, ಜೆಡಿಎಸ್ ವಕ್ತಾರರು

2013ರಲ್ಲಿ ಯುಪಿಎ ಸರ್ಕಾರ ಭೂಸ್ವಾಧೀನ ಕಾಯ್ದೆ ತಂದಿತ್ತು. ಅದು ರೈತರ ಹಿತದೃಷ್ಟಿಯಿಂದ ಬಹಳ ಒಳ್ಳೆಯ ಕಾಯ್ದೆ, ಅದನ್ನು ಸ್ವಾಗತಿಸಲೇಬೇಕು. ಆದರೆ ಸರ್ಕಾರದ ಖಜಾನೆಯ ಹಣವೆಲ್ಲವೂ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳಲು ಕೊಡಬೇಕಾಗುತ್ತದೆ ಎಂಬ ಭಾವನೆಯಲ್ಲಿ ಕರ್ನಾಟಕದಲ್ಲಿ ಅಧಿಕಾರಿಗಳು ಪರಿಹಾರ ಕೊಡುವ ವಿಷಯದಲ್ಲಿ ಸರ್ಕಾರಕ್ಕೆ ತಪ್ಪು ಮಾಹಿತಿ ಕೊಟ್ಟಿದ್ದಾರೆ. ಇದರಿಂದಾಗಿ ಸಮ್ಮಿಶ್ರ ಸರ್ಕಾರವಿದ್ದರೂ ಸಹ ದೇಶಪಾಂಡೆಯವರು ಕಂದಾಯ ಸಚಿವರಾಗಿ ತಿದ್ದುಪಡಿ ತಂದಿದ್ದಾರೆ. ದುರಂತವೆಂದರೆ ಸದನದಲ್ಲಿ ಚರ್ಚೆಯಾಗದೆ ತಿದ್ದುಪಡಿ ಅಂಗೀಕಾರ ಮಾಡಿದ್ದಾರೆ. ಹಾಗಾಗಿ ಅಧಿಕಾರದಲ್ಲಿರುವ ಎರಡೂ ಪಕ್ಷಗಳು ಅದರ ಜವಾಬ್ದಾರಿ ಹೊತ್ತುಕೊಳ್ಳಬೇಕು. ಈ ತಿದ್ದುಪಡಿ ರೈತರ ಹಿತಕ್ಕೆ ಮಾರಕವಾಗಿದ್ದು, ಅದನ್ನು ವೈಯಕ್ತಿಕವಾಗಿ ನಾನು ವಿರೋಧಿಸುತ್ತೇನೆ. ಈ ಬಗ್ಗೆ ಮುಖ್ಯಮಂತ್ರಿಯವರ ಗಮನಕ್ಕೆ ತರುವ ಪ್ರಯತ್ನ ಮಾಡುತ್ತೇನೆ.
– ರಮೇಶ್ ಬಾಬು, ಜೆಡಿಎಸ್ ವಕ್ತಾರರು.

ಈ ಕಾಯ್ದೆಯ ಹಿಂದೆ ದೊಡ್ಡ ಉದ್ದಿಮೆಪತಿಗಳಿದ್ದಾರೆ

ಕೋಡಿಹಳ್ಳಿ ಚಂದ್ರಶೇಖರ್, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ

ಮಣ್ಣಿನ ಮಕ್ಕಳೆಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಕುಮಾರಸ್ವಾಮಿ ರೈತರ ಬಾಯಿಗೆ ಮಣ್ಣಾಕುವ ಸಂಚು ಹೆಣೆದಿದ್ದಾರೆ. ಅವರ ಹಿಂದೆ ದೊಡ್ಡ ದೊಡ್ಡ ಉದ್ಯಮಪತಿಗಳು ನಿಂತಿದ್ದಾರೆ. ಅವರ ಹಿತಕ್ಕಾಗಿ ರೈತ ಪರಿಹಾರ ಕಾಯ್ದೆಯನ್ನು ತಿರುಚಿ ರೈತರ ಹಕ್ಕುಗಳನ್ನು ಕಿತ್ತುಕೊಳ್ಳಲು ಮುಂದಾಗಿದ್ದಾರೆ. ಕಂದಾಯ ಸಚಿವ ದೇಶಪಾಂಡೆ, ಹಿಂದಿನ ಸರ್ಕಾರದಲ್ಲಿ ಕೈಗಾರಿಕಾ ಸಚಿವರಾಗಿದ್ದರು. ಅವರಿಗೆ ಬಂಡವಾಳಿಗರ ಸ್ನೇಹ ಚೆನ್ನಾಗಿದೆ. ಅವರ ಹಿತಕ್ಕಾಗಿ ಡಿಕೆಶಿ ಜೊತೆಸೇರಿ ಈ ತಿದ್ದುಪಡಿಯನ್ನು ಜಾರಿಗೆ ತಂದಿದ್ದಾರೆ. ರೈತರ ಮರಣ ಶಾಸನವನ್ನು ಜಾರಿ ಮಾಡಿದ್ದೇ ಆದರೆ ರೈತರು ಅವರನ್ನು ರಾಜಕೀಯವಾಗಿ ಮಣಿಸುತ್ತಾರೆ ಎಂದು ರಾಜ್ಯ ಸರ್ಕಾರವನ್ನು ಎಚ್ಚರಿಸುತ್ತೇವೆ.
ಸದರಿ ಕಾಯ್ದೆಯು ಎರಡೂ ಸದನಗಳಲ್ಲಿ ಅಂಗೀಕೃತವಾಗಿ ರಾಜ್ಯಪಾಲರ ಅನುಮೋದನೆಗೆ ಹೋಗಿದೆ. ಅದು ಇನ್ನೂ ಸದನದಲ್ಲಿ ಚರ್ಚೆಗೆ ಬಂದಿಲ್ಲ ಎನ್ನುವ ಕಾಂಗ್ರೆಸ್ ವಕ್ತಾರರು ಬಹುಶಃ ಎಲ್ಲಿದ್ದಾರೋ ಗೊತ್ತಿಲ್ಲ.
ಕೋಡಿಹಳ್ಳಿ ಚಂದ್ರಶೇಖರ್,
ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ.

ಕಾಯ್ದೆಯಿನ್ನೂ ಸದನದಲ್ಲಿ ಚರ್ಚೆಗೇ ಬಂದಿಲ್ಲ; ತಿದ್ದುಪಡಿ ಮಾಡುವುದಾದರೆ ಅದು ದೇಶಪಾಂಡೆ ಅವರ ವ್ಯಕ್ತಿಗತ ಅಭಿಪ್ರಾಯ

ನಟರಾಜ್ ಗೌಡ, ಕಾಂಗ್ರೆಸ್ ವಕ್ತಾರರು

2013ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ರೈತರಿಗೆ ಪರಿಹಾರ ನೀಡುವ ಉದ್ದೇಶದಿಂದ ಜಾರಿಗೆ ತಂದ ಕಾಯಿದೆ ಭೂಸ್ವಾಧೀನ ಪರಿಹಾರ ಕಾಯಿದೆ. ಇದನ್ನು ಹಾಗೆಯೇ ಉಳಿಸಿಕೊಳ್ಳುವುದು ಕಾಂಗ್ರೆಸ್‍ನ ಜವಾಬ್ದಾರಿಯೂ ಕೂಡ. ರಸ್ತೆ ಅಗಲೀಕರಣ, ವಿದ್ಯುತ್ ವ್ಯವಸ್ಥೆ ಮತ್ತು ಅಣೆಕಟ್ಟು ನಿರ್ಮಾಣ ಈ ಮೂರು ವಿಷಯಗಳಲ್ಲಿ ರೈತರಿಂದ ಭೂಮಿಯನ್ನು ಅವರ ಅನುಮತಿ ಇಲ್ಲದೆ, ನಿರ್ದಿಷ್ಟ ಪರಿಹಾರ ಕೊಟ್ಟು ಭೂಮಿಯನ್ನು ಪಡೆದುಕೊಳ್ಳಬಹುದು. ಇನ್ನಾವುದೇ ಉದ್ದೇಶಕ್ಕೆ ಅನುಮತಿ ಇಲ್ಲದೆ ಪಡೆದುಕೊಳ್ಳಲು ಸಾಧ್ಯವಿಲ್ಲ. ಇಂದು ಚರ್ಚೆಯಾಗುತ್ತಿರುವ ತಿದ್ದುಪಡಿಯ ವಿಚಾರ ದೇಶಪಾಂಡೆಯವರ ಅಭಿಪ್ರಾಯವಿರಬಹುದೇ ಹೊರತು, ಅದು ಸರ್ಕಾರದ್ದಾಗಲು ಸಾಧ್ಯವಿಲ್ಲ. ಆ ವಿಚಾರ ಇನ್ನೂ ಸದನದಲ್ಲಿ ಚರ್ಚೆಯೂ ಆಗಿಲ್ಲ. ಒಂದು ವೇಳೆ ರೈತರಿಗೆ ತೊಂದರೆ ಕೊಡುವಂತಹ ತಿದ್ದುಪಡಿಗಳೊಂದಿಗೆ ಸದನದಲ್ಲಿ ಚರ್ಚೆಗೆ ಬಂದರೆ ಈ ತಿದ್ದುಪಡಿಯನ್ನು ಕಾಂಗ್ರೆಸ್ ಖಂಡಿಸುತ್ತದೆ. ಈ ಕಾಯ್ದೆಯಿಂದ ರೈತರಿಗೆ ತೊಂದರೆಯಾಗಲು ನಾವು ಬಿಡುವುದಿಲ್ಲ.
– ನಟರಾಜ್ ಗೌಡ, ಕಾಂಗ್ರೆಸ್ ವಕ್ತಾರರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...