Homeಅಂಕಣಗಳುವಿಜ್ಞಾನದ ದಾರಿಯ ಹೆಣ್ಣು ಹೆಜ್ಜೆಗುರುತು ಕಮಲಾ ಸೊಹೊನಿ

ವಿಜ್ಞಾನದ ದಾರಿಯ ಹೆಣ್ಣು ಹೆಜ್ಜೆಗುರುತು ಕಮಲಾ ಸೊಹೊನಿ

- Advertisement -
- Advertisement -

ಬೆಂಗಳೂರು ಈಗ ಐಟಿಬಿಟಿ ನಗರವಾಗಿರಬಹುದು. ಆದರೆ ಈ ಕಿರೀಟ ಧರಿಸುವುದಕ್ಕಿಂತ ಮುನ್ನ ಅದು ಬೌದ್ಧಿಕತೆಯ ಕೇಂದ್ರವಾಗಿ, ವೈಜ್ಞಾನಿಕ ಸಂಶೋಧನೆಗಳ ನೆಲೆಯಾಗಿ ಗಮನ ಸೆಳೆದಿತ್ತು. ಬೆಂಗಳೂರು ವಿಶ್ವ ಭೂಪಟದಲ್ಲಿ ಗುರುತಿಸಿಕೊಳ್ಳುವಂತೆ ಮಾಡಿದ ಪ್ರತಿಷ್ಠಿತ ಸಂಸ್ಥೆಗಳು ಅಲ್ಲಿದ್ದವು. ಅಂಥ `ಬೆಂಗಳೂರು ರತ್ನ’ಗಳಲ್ಲಿ 1909ರಲ್ಲಿ ಶುರುವಾದ ಭಾರತೀಯ ವಿಜ್ಞಾನ ಸಂಸ್ಥೆ (ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಸೈನ್ಸ್ – ಐಐಎಸ್‍ಸಿ) ಕೂಡಾ ಒಂದು.
ವಿವೇಕಾನಂದರೊಡನೆ ಹಡಗುಪ್ರಯಾಣ ಮಾಡುವಾಗ ನಡೆದ ಸಂಭಾಷಣೆಯಿಂದ ಪ್ರೇರಿತರಾದ ಜಮ್‍ಶೆಟ್‍ಜಿ ಟಾಟಾ ಹಾಗೂ ಮೈಸೂರು ಮಹಾರಾಜರಾಗಿದ್ದ ಕೃಷ್ಣರಾಜ ಒಡೆಯರ್ ಅವರು ಐಐಎಸ್‍ಸಿ (ಜನರ ಬಾಯಲ್ಲಿ ಟಾಟಾ ಇನ್‍ಸ್ಟಿಟ್ಯೂಟ್) ಅನ್ನು 1909ರಲ್ಲಿ ಶುರುಮಾಡಿದರು. ಭಾರತದ ಪ್ರತಿಷ್ಠಿತ, ಮೇಧಾವಿ ವಿಜ್ಞಾನಿಗಳನ್ನು ರೂಪುಗೊಳಿಸಿದ ಹೆಮ್ಮೆ ಆ ಸಂಸ್ಥೆಗಿದೆ. ಇವತ್ತಿಗೂ ಅದು ದೇಶದ ಅತ್ಯುಚ್ಛ ಸಂಶೋಧನಾ ಸಂಸ್ಥೆಯಾಗಿದೆ. ಏಷ್ಯಾದಲ್ಲೇ ವಿಜ್ಞಾನಕ್ಕೆ ನೊಬೆಲ್ ಬಹುಮಾನ ಪಡೆದ ಪ್ರಥಮ ಭೌತವಿಜ್ಞಾನಿ ಸರ್ ಸಿ.ವಿ.ರಾಮನ್ ಸೇರಿದಂತೆ ಹಲವರು ಸಂಸ್ಥೆಯನ್ನು ಬೆಳೆಸಿದ್ದಾರೆ.
ಆದರೆ ಆ ವಿಜ್ಞಾನ ದೇಗುಲಕ್ಕೆ ಬಹುಕಾಲದವರೆಗೂ ಮಹಿಳೆಯರಿಗೆ ಪ್ರವೇಶವಿರಲಿಲ್ಲ! ಈಗಲೂ ಮೇಲ್ಮಟ್ಟದ ಬೌದ್ಧಿಕತೆಯನ್ನು ಬಯಸುವ ಸಂಶೋಧನಾ ವಿಜ್ಞಾನ ಸಂಸ್ಥೆಯಲ್ಲಿ ಬೆರಳೆಣಿಕೆಯಷ್ಟು ಮಹಿಳೆಯರಿದ್ದಾರೆ. ಶತಮಾನೋತ್ಸವ ಆಚರಿಸಿರುವ ಆ ಸಂಸ್ಥೆಯಲ್ಲಿ ಮಹಿಳಾ ಡೀನುಗಳು ಅತಿ ಕಡಿಮೆ. ಕೋರ್ಟ್ ಮತ್ತು ಕೌನ್ಸಿಲ್‍ನಂತಹ ನಿರ್ಧಾರಕ ಸ್ಥಾನಗಳಲ್ಲಿ ಮಹಿಳೆಯರು ಅತಿ ಕಡಿಮೆ. ಇದುವರೆಗು ಮಹಿಳೆಯೊಬ್ಬಳು ಸಂಸ್ಥೆಯ ನಿರ್ದೇಶಕ ಸ್ಥಾನಕ್ಕೆ ಬಂದಿಲ್ಲ. ಡೀನ್ ಇರಲಿ, ಮೆಟಲರ್ಜಿಯಂತಹ ವಿಭಾಗಗಳಲ್ಲಿ ಇವತ್ತಿನವರೆಗೂ ಒಬ್ಬ ಮಹಿಳೆಯೂ ಬಂದಿಲ್ಲ. 2017-18ರಲ್ಲಿ ಸಂಸ್ಥೆ ಸೇರಿದ 42 ಫ್ಯಾಕಲ್ಟಿ ಸದಸ್ಯರಲ್ಲಿ ನಾಲ್ವರಷ್ಟೇ ಮಹಿಳೆಯರು.
ಇಂಥ ಪ್ರತಿಕೂಲ ವಾತಾವರಣದಲ್ಲಿ ಭಾರತದ ಮೊತ್ತಮೊದಲ ಪಿಎಚ್‍ಡಿ ಪಡೆದ ಮಹಿಳಾ ವಿಜ್ಞಾನಿ ಕಮಲಾ ಸೊಹೊನಿ 1933ರಲ್ಲಿ ಐಐಎಸ್‍ಸಿಗೆ ಪ್ರವೇಶ ಗಿಟ್ಟಿಸಿದರು. ಕಮಲಾ ನಡೆಸಿದ ಸಂಶೋಧನೆಯದು ಒಂದು ತೂಕವಾದರೆ ಅವರು ವಿಜ್ಞಾನಿಯಾದ ಕಥೆ ಏಳು ತೂಕದ್ದಾಗಿದೆ.
`ಇಲ್ಲ, ಇಲ್ಲ..’
ಮಧ್ಯಪ್ರದೇಶದ ಇಂದೋರಿನಲ್ಲಿ 1912ರಲ್ಲಿ ಹುಟ್ಟಿದ ಕಮಲಾರ ತಂದೆ ನಾರಾಯಣ ಭಾಗವತ್ ಹಾಗೂ ದೊಡ್ಡಪ್ಪ ಬೆಂಗಳೂರಿನ ಟಾಟಾ ವಿಜ್ಞಾನ ಸಂಸ್ಥೆಯಲ್ಲಿ ಕಲಿತ ರಸಾಯನಶಾಸ್ತ್ರಜ್ಞರು. ಎಳವೆಯಿಂದಲೇ ವಿಜ್ಞಾನ ಕುತೂಹಲಿಯಾಗಿದ್ದ ಕಮಲಾ ಮನೆತನದ ಪರಂಪರೆಯಂತೆ ತಾನೂ ಭೌತಶಾಸ್ತ್ರ, ರಸಾಯನಶಾಸ್ತ್ರ ಬಿಎಸ್ಸಿಯನ್ನು ಮುಂಬಯಿ ವಿವಿಯಲ್ಲಿ ಮಾಡಿದರು. ಪಾರಿತೋಷಕಗಳೊಂದಿಗೆ ಪದವಿ ಪಡೆದು ಬೆಂಗಳೂರಿನ ಐಐಎಸ್‍ಸಿನಲ್ಲಿ ರಿಸರ್ಚ್ ಫೆಲೋಶಿಪ್‍ಗೆ ಸೀಟು ಸಿಗಬಹುದೆಂದು ಭಾವಿಸಿದ್ದರು. ಆದರೆ 22 ವರುಷದ ತರುಣಳು ಅರ್ಹಳಾಗಿದ್ದರೂ ಪ್ರವೇಶ ನಿರಾಕರಿಸಲಾಯ್ತು. ಪ್ರವೇಶಾವಕಾಶವನ್ನು ತಡೆಹಿಡಿದವರು ಬೇರಾರೂ ಅಲ್ಲ, ಸಂಸ್ಥೆಯ ನಿರ್ದೇಶಕರಾಗಿದ್ದ ಸರ್ ಸಿ. ವಿ. ರಾಮನ್!
ಮಹಿಳಾ ಶಿಕ್ಷಣ ಅಗತ್ಯವೆಂದು ಸಾರ್ವಜನಿಕವಾಗಿ ಪ್ರತಿಪಾದಿಸುತ್ತಿದ್ದ ರಾಮನ್, ಸಂಸ್ಥೆಯ ಹಳೆಯ ವಿದ್ಯಾರ್ಥಿಗಳಾಗಿದ್ದ ಕಮಲಾ ಕುಟುಂಬದವರು ವಿನಂತಿಸಿದರೂ ಪ್ರವೇಶ ನಿರಾಕರಿಸಿದರು. ಕೊನೆಗೆ ನಿರ್ದೇಶಕರ ಕಚೇರಿಯೆದುರು ಕಮಲಾ ಸತ್ಯಾಗ್ರಹ ಹೂಡಿ ಯಾಕೆ ಪ್ರವೇಶ ನೀಡುವುದಿಲ್ಲವೆಂದು ಲಿಖಿತವಾಗಿ ತಿಳಿಸಬೇಕೆಂದು ಕೇಳಿದರು. ದಾರಿಯಿಲ್ಲದೆ ರಾಮನ್ 1. ಮೊದಲ ವರ್ಷ ಪ್ರೊಬೇಷನ್‍ನಲ್ಲಿ (ರೆಗ್ಯುಲರ್ ಕ್ಯಾಂಡಿಡೇಟ್ ಆಗಿ ಅಲ್ಲ,) ಪೂರೈಸಬೇಕು 2. ಗೈಡ್ ಹೇಳಿದಲ್ಲಿ ರಾತ್ರಿಯೂ ಕೆಲಸ ಮಾಡಬೇಕು 3. ವಿದ್ಯಾರ್ಥಿಗಳ ಏಕತೆಗೆ ಭಂಗತರುವಂತೆ ನಡೆದುಕೊಳ್ಳಬಾರದು ಎಂಬ ಮೂರು ಷರತ್ತುಗಳೊಂದಿಗೆ ಪ್ರವೇಶ ನೀಡಿದರು.
ಅವಮಾನವೆನಿಸಿದರೂ ಷರತ್ತಿಗೆ ಒಪ್ಪಿ 1933ರಲ್ಲಿ ಕಮಲಾ ಬಯೋಕೆಮಿಸ್ಟ್ರಿ ವಿಭಾಗಕ್ಕೆ ಸೇರಿದಾಗ ಐಐಎಸ್‍ಸಿ ಸೇರಿದ ಮೊದಲ ಮಹಿಳೆಯಾದರು. ಮುಂದೊಮ್ಮೆ ಭಾರತೀಯ ಮಹಿಳಾ ವಿಜ್ಞಾನಿಗಳ ಸಂಘದಲ್ಲಿ, `ರಾಮನ್ ಮಹಾನ್ ವಿಜ್ಞಾನಿಯಾದರೂ ಸಣ್ಣಬುದ್ಧಿಯವರು. ಹೆಣ್ಣೆಂಬ ಕಾರಣಕ್ಕೆ ನನ್ನನ್ನು ನಡೆಸಿಕೊಂಡ ರೀತಿಯನ್ನು ಎಂದೂ ಮರೆಯಲಾರೆ. ನನ್ನನ್ನು ರೆಗ್ಯುಲರ್ ಸ್ಟೂಡೆಂಟ್ ಆಗಿ ತೆಗೆದುಕೊಳ್ಳದಿರುವುದು ದೊಡ್ಡ ಅವಮಾನ. ಆ ಕಾಲದಲ್ಲಿ ಮಹಿಳೆಯರ ಕುರಿತ ಪೂರ್ವಗ್ರಹ ಹಾಗಿತ್ತು. ನೊಬೆಲ್ ವಿಜೇತರೇ ಹಾಗಾದ ಮೇಲೆ ಉಳಿದವರಿಂದ ಇನ್ನೇನು ನಿರೀಕ್ಷಿಸುವುದು?’ ಎಂದು ನೆನಪಿಸಿಕೊಂಡಿದ್ದರು.
ಕಮಲಾರ ಗೈಡ್ ಪ್ರೊ. ಶ್ರೀನಿವಾಸಯ್ಯ ಕಟ್ಟುನಿಟ್ಟಿನ ವ್ಯಕ್ತಿ. ಕಮಲಾರ ಅಧ್ಯಯನಶಿಸ್ತು ರೂಪುಗೊಳ್ಳಲು ಸಹಾಯ ಮಾಡಿದರು. ಅವರ ಮಾರ್ಗದರ್ಶನದಲ್ಲಿ ಹಾಲು, ದವಸಧಾನ್ಯಗಳಲ್ಲಿರುವ ಪ್ರೊಟೀನ್ ಕುರಿತು ಕಮಲಾ ಸಂಶೋಧನೆ ನಡೆಸಿದರು. 1936ರಲ್ಲಿ ಡಿಸ್ಟಿಂಕ್ಷನ್‍ನೊಂದಿಗೆ ಎಂಎಸ್ಸಿ ಮುಗಿಸಿದರು. ಅವರ ಪರಿಶ್ರಮದಿಂದ ತೃಪ್ತಿಯಾದ ಸಿ.ವಿ.ರಾಮನ್ ಒಂದಷ್ಟು ವಿದ್ಯಾರ್ಥಿನಿಯರಿಗೆ ಅವಕಾಶ ನೀಡಿದರು. ತಮ್ಮದೇ ವಿಭಾಗದಲ್ಲಿ ಮೂವರು ಹುಡುಗಿಯರಿಗೆ ಅವಕಾಶ ಕೊಟ್ಟರು.
ನಂತರ ಕೇಂಬ್ರಿಜ್ ವಿವಿ ಸೇರಿದ ಕಮಲಾ ಡೆರೆಕ್ ರಿಕ್ಟರ್, ರಾಬಿನ್ ಹಿಲ್‍ರ ಪ್ರಯೋಗಾಲಯಗಳಲ್ಲಿ ಕೆಲಸ ಮಾಡಿದರು. ಸಸ್ಯ ಅಂಗಾಂಶಗಳ ಬಗೆಗೆ ಅಭ್ಯಸಿಸಿದರು. ಅವರ ಅಧ್ಯಯನಾಸಕ್ತಿ ಕಂಡ ಸಹೋದ್ಯೋಗಿಗಳು ಫ್ರೆಡರಿಕ್ ಹಾಪ್ಕಿನ್ಸ್ ಸಂಶೋಧನಾಲಯದ ಫೆಲೋಶಿಪ್‍ಗೆ ಅರ್ಜಿ ಸಲ್ಲಿಸುವಂತೆ ಸೂಚಿಸಿದರು. ಆಹಾರದಲ್ಲಿ ವಿಟಮಿನ್ನುಗಳ ಪ್ರಾಮುಖ್ಯತೆ ಬಗ್ಗೆ ಸಂಶೋಧಿಸಿ ನೊಬೆಲ್ ಪಡೆದಿದ್ದ ವಿಜ್ಞಾನಿ ಹಾಫ್ಕಿನ್ಸ್ ಅವರ ಪ್ರಯೋಗಾಲಯದಲ್ಲಿ ಫೆಲೋಶಿಪ್ ಸಿಕ್ಕಿತು. ಹಾಫ್ಕಿನ್ಸ್ ಅವರಿಂದಲೇ ಉತ್ತೇಜನ ಪಡೆಯುತ್ತಾ, ಆಲೂಗೆಡ್ಡೆಯ ಮೇಲೆ ಸಂಶೋಧನೆ ನಡೆಸುತ್ತಿದ್ದಾಗ ಅದರಲ್ಲಿರುವ ಸೈಟೋಕ್ರೋಮ್ ಸಿ ಎಂಬ ಕಿಣ್ವವನ್ನು ಪತ್ತೆ ಹಚ್ಚಿದರು. ಈ ಕಿಣ್ವ ಎಲ್ಲ ಸಸ್ಯ, ಪ್ರಾಣಿ, ಮನುಷ್ಯರಲ್ಲಿ `ಶಕ್ತಿಸಂಚಯ’ಕ್ಕಾಗಿ ಇರುವುದೆಂದು ಸಾಧಿಸಲ್ಪಟ್ಟಾಗ ಅದು ಮಹತ್ವದ ಸಂಶೋಧನೆಯೆ ನಿಸಿಕೊಂಡಿತು.
ಅವರು ಸಂಶೋಧನೆಯನ್ನು ಬರಿಯ 14 ತಿಂಗಳಲ್ಲಿ ಮುಗಿಸಿದ್ದರು. ನೂರಾರು, ಸಾವಿರಾರು ಪುಟ ಪ್ರಬಂಧ ಸಲ್ಲಿಸುವ ಕಾಲದಲ್ಲಿ ಕೇವಲ 40 ಪುಟಗಳ ಪ್ರಬಂಧ ಮಂಡಿಸಿ 1939ರಲ್ಲಿ ಪಿಎಚ್‍ಡಿ ಪಡೆದ ಮೊದಲ ಭಾರತೀಯ ಮಹಿಳೆಯಾದರು.
ಅಮೆರಿಕವೂ ಸೇರಿದಂತೆ ವಿದೇಶದ ಫಾರ್ಮಾ ಕಂಪನಿಗಳಿಂದ ಉದ್ಯೋಗಾವಕಾಶ ಅರಸಿ ಬಂತು. ಗಾಂಧಿ ವಿಚಾರಗಳಿಂದ ಪ್ರಭಾವಿತರಾಗಿದ್ದ ಕಮಲಾ 1939ರಲ್ಲಿ ಭಾರತಕ್ಕೆ ಬಂದರು. ಲೇಡಿ ಹಾರ್ಡಿಂಜ್ ಮೆಡಿಕಲ್ ಕಾಲೇಜಿನ ಬಯೋಕೆಮಿಸ್ಟ್ರಿ ವಿಭಾಗದ ಮುಖ್ಯಸ್ಥರಾದರು. 1947ರಲ್ಲಿ ವಿಮಾತಜ್ಞರಾಗಿದ್ದ ಎಂ. ವಿ. ಸೊಹೊನಿಯವರನ್ನು ಮದುವೆಯಾಗಿ ನಂತರ ಮುಂಬಯಿಗೆ ಹೋದರು.
ಕಮಲಾರ ಆಸಕ್ತಿಯ ಕ್ಷೇತ್ರ ಆಹಾರದ ಪೌಷ್ಟಿಕ ಮೌಲ್ಯ ಕುರಿತಾಗಿತ್ತು. ಆಹಾರ ವಿಜ್ಞಾನದ ಕುರಿತು ನಿರಂತರ ಸಂಶೋಧನೆ, ಬರಹ ನಡೆಸಿದರು. ಕೂನೂರಿನ ನ್ಯೂಟ್ರಿಷನ್ ರಿಸರ್ಚ್ ಇನ್ಸ್‍ಟಿಟ್ಯೂಟಿನ ನಿರ್ದೇಶಕರಾದರು. ಬಡಭಾರತೀಯರು ಸೇವಿಸುವ ಆಹಾರವನ್ನು ಸುಲಭವಾಗಿ, ಸರಳವಾಗಿ ಪೌಷ್ಟಿಕಗೊಳಿಸಲು ಸಂಶೋಧನೆ ನಡೆಸಿದರು. ವಿಶೇಷವಾಗಿ ಸಾಮಾನ್ಯವಾಗಿ ಬಳಕೆಯಲ್ಲಿರುವ ದವಸಗಳು ಮತ್ತು ತಾಳೆಮರದಿಂದ ಇಳಿಸುವ ನೀರಾದ ಪೌಷ್ಟಿಕಾಂಶ ಕುರಿತು ಸಂಶೋಧನೆ ನಡೆಯಿತು. ಜನರು ಶಕ್ತಿಕರವೆಂದು ಹೇಳುತ್ತಿದ್ದರೂ ಜನಪ್ರಿಯ ಪೇಯ ನೀರಾದ ಪೌಷ್ಟಿಕಾಂಶದ ಬಗೆಗೆ ವೈಜ್ಞಾನಿಕ ಸಂಶೋಧನೆ ಆಗಿರಲಿಲ್ಲ. ನೀರಾದಲ್ಲಿ ವಿಟಮಿನ್ ಎ, ಸಿ ಮತ್ತು ಕಬ್ಬಿಣಾಂಶ ಇದೆಯೆಂದು, ತಾಳೆಬೆಲ್ಲ ಮತ್ತು ಕಾಕಂಬಿ ಆದಮೇಲೂ ನೀರಾದ ವಿಟಮಿನ್ ಸಿ ಉಳಿದುಕೊಂಡು ಬರುವುದೆಂದು ಕಮಲಾ ಪತ್ತೆಮಾಡಿದರು. ಅವರಿಗೆ ರಾಷ್ಟ್ರಪತಿ ಪದಕ ತಂದುಕೊಟ್ಟ ಸಂಶೋಧನೆ ಅದು.
ಕಮಲಾ ಬರಹಗಾರ್ತಿಯೂ ಆಗಿದ್ದರು. ಯುವ ಮನಸುಗಳಿಗೆ ವಿಜ್ಞಾನ ವಿಷಯಗಳ ಕುರಿತು ಬರೆಯುತ್ತಿದ್ದರು. ಮರಾಠಿಯಲ್ಲು ಸಾಕಷ್ಟು ಪುಸ್ತಕ, ಬರಹ ಬರೆದಿದ್ದಾರೆ. ಒಂಭತ್ತು ಮಹಿಳೆಯರು ಸೇರಿ ಹುಟ್ಟುಹಾಕಿದ ಕನ್‍ಸ್ಯೂಮರ್ ಗೈಡೆನ್ಸ್ ಸೊಸೈಟಿ ಆಫ್ ಇಂಡಿಯಾದ ಸ್ಥಾಪಕ ಸದಸ್ಯೆ ಅವರು. ಕೊನೆಯ ದಿನಗಳವರೆಗೂ ಅಧ್ಯಯನ ನಿರತರಾಗಿದ್ದರು.
ಅನುಗಾಲದಿಂದ ಸೂಕ್ತ ಅವಕಾಶ, ಸೂಕ್ತ ಪ್ರತಿನಿಧಿತ್ವ, ಸೂಕ್ತ ವೇತನ ಇಲ್ಲದಿರುವುದು ಮಹಿಳಾ ವಾಸ್ತವವಾಗಿದೆ. ಈ ಸನ್ನಿವೇಶ ವರ್ತಮಾನದ ಅತ್ಯುಚ್ಛ ಶೈಕ್ಷಣಿಕೆ, ಬೌದ್ಧಿಕ ವಲಯದಲ್ಲೂ ಜೀವಂತವಾಗಿದೆ ಎನ್ನುವುದು ಕಾಲದ ಕೇಡಿಗೆ ಸಾಕ್ಷಿಯಾಗಿದೆ. ಹೆಣ್ಣಿನ ಜೈವಿಕ ಅನನ್ಯತೆಯನ್ನು ಗುರುತಿಸುವ ಬದಲು ಮೂದಲಿಸಿ ಮೂಲೆ ಹಿಡಿಸುವ ಸಮಾಜದ ಕೇಡುಗಳನ್ನು ಹಂತಹಂತವಾಗಿ ದಾಟಿಬಂದ ಕೆಲವೇ ಮಹಿಳೆಯರಲ್ಲಿ ಕಮಲಾ ಸೊಹೊನಿ ಒಬ್ಬರಾಗಿದ್ದಾರೆ.
ಐಐಎಸ್‍ಸಿಯು ವಿದ್ಯಾರ್ಥಿಗಳಿಗೆ 1911ರಲ್ಲಿ ತೆರೆದುಕೊಂಡಿತು. ಆಗ ಪುರುಷರಿಗೆ ಮಾತ್ರ ಹಾಸ್ಟೆಲ್ ಇತ್ತು. ಮಹಿಳೆಯರಿಗೆ ಹಾಸ್ಟೆಲ್ ರೂಪುಗೊಳ್ಳಲು 1942 ಬರಬೇಕಾಯ್ತು. 1951ರಲ್ಲಿ ವಿಜ್ಞಾನಿ ಮಹಿಳೆ ವಯಲೆಟ್ ಬಜಾಜ್ ನೆನಪಿಸಿಕೊಂಡಂತೆ ಪುರುಷರಿಗೆ ಅಯ್ಯರ್ ಮೆಸ್, ಅಯ್ಯಂಗಾರ್ ಮೆಸ್ ಎಂಬ ಎರಡು ಆಯ್ಕೆಗಳಿದ್ದರೆ, ವಿದ್ಯಾರ್ಥಿನಿಯರು ತಾವೇ ಅಡುಗೆ, ಸ್ವಚ್ಛತೆಯ ಕೆಲಸ ಮಾಡಿಕೊಳ್ಳಬೇಕಿತ್ತು. 1967ರಲ್ಲಿ ಅಲ್ಲಿದ್ದ ಇನಾರ್ಗ್ಯಾನಿಕ್ ಅಂಡ್ ಫಿಸಿಕಲ್ ಕೆಮಿಸ್ಟ್ರಿ ವಿದ್ಯಾರ್ಥಿನಿ ಡಿ. ಕೆ. ಪದ್ಮಾರ ಅನುಭವ ಕುತೂಹಲಕರವಾಗಿದೆ. ಆಕೆಯ ವಿಭಾಗದ ಮುಖ್ಯಸ್ಥರು ಅಡ್ಮಿಷನ್ನಿಗೆ ಮೊದಲು ಗಂಡನನ್ನು ಕರೆತರುವಂತೆ ಹೇಳಿದರು. ನಂತರ `ಒಬ್ಬ ವಿದ್ಯಾರ್ಥಿಯ ಭವಿಷ್ಯ ಮೊಟಕುಗೊಳಿಸಿ ನಿನಗೆ ಸೀಟು ಕೊಡುತ್ತಿರುವೆ, ಐದಾರು ವರ್ಷದಲ್ಲಿ ಸಂಶೋಧನೆ ಮುಗಿಸಲೇಬೇಕು, ಅಲ್ಲಿಯವರೆಗು ಮಕ್ಕಳನ್ನು ಹೆರಬಾರದು’ ಎಂದು ಷರತ್ತು ಹಾಕಿದ್ದರು! ಮಾಲಿಕ್ಯುಲಾರ್ ಬಯೋಫಿಸಿಕ್ಸ್ ಕಲಿತ ರೇವತಿ ನಾರಾಯಣ್ ಎಂಬಾಕೆಗೆ ಅವರ ವಿಭಾಗ ಮುಖ್ಯಸ್ಥರು, `ಓಹ್, ನಿನಗೆ ಮದುವೆಯಾಗಿದೆಯೆ? ಇನ್ನೊಂದು ವರ್ಷದಲ್ಲಿ ಬಿಟ್ಟು ಹೋಗುತ್ತೀ ಬಿಡು’ ಎಂದಿದ್ದರಂತೆ.
ಇವತ್ತಿಗೂ ಸಾಹಿತ್ಯ, ಕಲೆ, ಸಂಗೀತ, ಶಿಕ್ಷಣ, ರಾಜಕಾರಣ ಮೊದಲಾದ ಕ್ಷೇತ್ರಗಳಿಗಿಂತ ವಿಜ್ಞಾನ ಕ್ಷೇತ್ರದಲ್ಲಿ ತಮ್ಮ ಛಾಪು ಮೂಡಿಸಲು ಮಹಿಳೆಯರು ಹೆಣಗುತ್ತಿದ್ದಾರೆ. ಇದಕ್ಕೇನು ಕಾರಣ? ಅರ್ಹ ಮಹಿಳೆಯರೇ ತಯಾರಾಗುತ್ತಿಲ್ಲವೋ? ಅಥವಾ ಮಹಿಳೆಯರ ಅರ್ಹತೆ ಸಮಾಜಕ್ಕೆ ಕಾಣುತ್ತಿಲ್ಲವೋ? ಬೌದ್ಧಿಕ ಕಸರತ್ತು ಇರುವ ಕಡೆ ಮಹಿಳೆಯರನ್ನು ಕಡೆಗಣಿಸಿ, ನಿರಂತರ ದೈಹಿಕ ಶ್ರಮ ಇರುವ ಅದೃಶ್ಯ ಕೆಲಸಗಳನ್ನಷ್ಟೆ ಹೆಣ್ಮಕ್ಕಳ ಹೆಗಲಿಗೆ ಹೇರಿದುದರ ಪರಿಣಾಮ ಇದಾಗಿರಬಹುದೆ? ಭಾರತವು ವೈಜ್ಞಾನಿಕ ಮನೋಭಾವ ಮತ್ತು ಲಿಂಗಸೂಕ್ಷ್ಮತೆಯನ್ನು ಒಟ್ಟೊಟ್ಟಿಗೆ ಕಳೆದುಕೊಂಡಿತೆ?
ಇಂಥವೆಲ್ಲ ಪ್ರಶ್ನೆಗಳಿಗೆ ಉತ್ತರ ಹುಡುಕುತ್ತ ಹೋದಾಗ ಚರಿತ್ರೆಯ ಕೆಲವು ಪುಟಗಳು ಕಣ್ಣಿಗೆ ಬೀಳುತ್ತವೆ. ಕಮಲಾ ಅಂಥ ಒಂದು ಸ್ಮರಣೀಯ ಪುಟವಾಗಿದ್ದಾರೆ.

– ಡಾ.ಎಚ್.ಎಸ್.ಅನುಪಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...