ಇತ್ತೀಚೆಗೆ ನಡೆದ ಪಂಚರಾಜ್ಯ ವಿಧಾನಸಭಾ ಚುನಾವಣೆಗಳಿಗೆ ಸ್ಪರ್ಧಿಸಿ ಗೆದ್ದಿರುವ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಹತ್ತು ಸಂಸದರು ತಮ್ಮ ಸಂಸತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಎಎನ್ಐ ಪ್ರಕಾರ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮಧ್ಯಪ್ರದೇಶದ ಚುನಾವಣೆಯಲ್ಲಿ ಗೆದ್ದಿರುವ ಸಂಸದರಾದ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಸಿಂಗ್ ಪಟೇಲ್, ರಾಕೇಶ್ ಸಿಂಗ್, ಉದಯ್ ಪ್ರತಾಪ್ ಮತ್ತು ರಿತಿ ಪಾಠಕ್ ರಾಜೀನಾಮೆ ನೀಡಿದ್ದಾರೆ.
ಛತ್ತೀಸ್ಗಢ ವಿಧಾನಸಭೆಗೆ ಆಯ್ಕೆಯಾದ ಅರುಣ್ ಸಾವೊ ಮತ್ತು ಗೋಮತಿ ಸಾಯಿ ಹಾಗೂ ರಾಜಸ್ಥಾನ ವಿಧಾನಸಭೆಗೆ ಆಯ್ಕೆಯಾದ ರಾಜ್ಯವರ್ಧನ್ ಸಿಂಗ್ ರಾಥೋಡ್, ದಿಯಾ ಕುಮಾರಿ ಮತ್ತು ಕಿರೋಡಿ ಲಾಲ್ ಮೀನಾ ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢ ಮತ್ತು ಮಿಜೋರಾಂ ರಾಜ್ಯಗಳ ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ 21 ಬಿಜೆಪಿ ಸಂಸದರು ಸ್ಪರ್ಧಿಸಿದ್ದರು. ಈ ಪೈಕಿ ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಸಿಂಗ್ ಪಟೇಲ್ ಮತ್ತು ಫಗ್ಗನ್ ಸಿಂಗ್ ಕುಲಸ್ತೆ ಸೇರಿದಂತೆ, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ತಲಾ ಏಳು, ಛತ್ತೀಸ್ಗಢದಲ್ಲಿ ನಾಲ್ವರು ಮತ್ತು ತೆಲಂಗಾಣದಲ್ಲಿ ಮೂವರನ್ನು ಬಿಜೆಪಿ ಕಣಕ್ಕಿಳಿಸಿತ್ತು.
ಪಂಚರಾಜ್ಯ ಚುನಾವಣೆ ಫಲಿತಾಂಶ ಹೊರ ಬಿದ್ದಾಗ 21 ಸಂಸದರ ಪೈಕಿ 12 ಮಂದಿ ಜಯಗಳಿಸಿದ್ದರು. ಉಳಿದ ಒಂಬತ್ತು ಮಂದಿ ಸೋತಿದ್ದಾರೆ ಎಂದು ಚುನಾವಣಾ ಆಯೋಗದ ವೆಬ್ಸೈಟ್ನಲ್ಲಿ ಮಾಹಿತಿ ಲಭ್ಯವಾಗಿದೆ. ಸೋತವರಲ್ಲಿ ಮಧ್ಯಪ್ರದೇಶದ ನಿವಾಸ್ನಿಂದ ಸ್ಪರ್ಧಿಸಿದ್ದ ಕೇಂದ್ರ ಸಚಿವ ಫಗ್ಗನ್ ಸಿಂಗ್ ಕುಲಸ್ತೆ ಸೇರಿದ್ದಾರೆ.
ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡದಿದ್ದರೆ ಏನಾಗುತ್ತದೆ?
ಸಂವಿಧಾನದ 101 ನೇ ವಿಧಿಯ ಅಡಿಯಲ್ಲಿ 1950 ರಲ್ಲಿ ರಾಷ್ಟ್ರಪತಿ ಅಂಕಿತ ಹಾಕಿದ ಸದಸ್ಯತ್ವ ನಿಯಮದ ಪ್ರಕಾರ, ಸಂಸದರು ವಿಧಾನಸಭೆಗೆ ಆಯ್ಕೆಯಾದರೆ ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲದಿದ್ದೆ 14 ದಿನಗಳಲ್ಲಿ ಅವರ ಸಂಸತ್ ಸದಸ್ಯತ್ವ ರದ್ದಾಗಲಿದೆ ಎಂದು ಸಂವಿಧಾನ ತಜ್ಞ ಮತ್ತು ಮಾಜಿ ಲೋಕಸಭೆಯ ಕಾರ್ಯದರ್ಶಿ ಪಿಡಿಟಿ ಆಚಾರಿ ಅವರನ್ನು ಉಲ್ಲೇಖಿಸಿ ಝೀ ಬ್ಯುಸಿನೆಸ್ ವರದಿ ಮಾಡಿದೆ.
ಇದನ್ನೂ ಓದಿ : ರಾಜಸ್ಥಾನ: ಗೆದ್ದ ಮರುದಿನವೇ ಮಾಂಸದಂಗಡಿಗಳನ್ನು ಬಲವಂತವಾಗಿ ಮುಚ್ಚಿಸಿದ ಬಿಜೆಪಿ ಶಾಸಕ