ಇತ್ತೀಚಿಗಷ್ಟೆ ಸರ್ಕಾರಿ ಶಾಲಾ ಪೋಷಕರಿಂದ ಮಾಸಿಕ 100 ರೂ ದೇಣಿಗೆ ಪಡೆಯುವುದಾಗಿ ಘೋಷಿಸಿ ವ್ಯಾಪಕ ಪ್ರತಿರೋಧದ ನಂತರ ಯೋಜನೆ ಹಿಂಪಡೆದಿದ್ದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ರವರು ಮತ್ತೊಂದು ಹೊಸ ಯೋಜನೆ ಘೋಷಿಸಿದ್ದಾರೆ. ಇನ್ನು ಮುಂದೆ ಶಾಲೆಗಳಲ್ಲಿ ನಿತ್ಯ 10 ನಿಮಿಷ ಧ್ಯಾನ ಮಾಡುವುದು ಕಡ್ಡಾಯ ಎಂದು ಸುತ್ತೋಲೆ ಹೊರಡಿಸಿದ್ದಾರೆ.
“ರಾಜ್ಯದಲ್ಲಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಲ್ಲಿ ದೃಢತೆ, ಏಕಾಗ್ರತೆ, ಆರೋಗ್ಯ ವೃದ್ಧಿ, ದೈಹಿಕ ಮತ್ತು ಮಾನಸಿಕ ಒತ್ತಡ ಕಡಿಮೆಯಾಗಲು ಸಹಕಾರಿಯಾಗುವಂತೆ ಶಾಲೆಗಳಲ್ಲಿ ಪ್ರತಿದಿನ ಧ್ಯಾನವನ್ನು ಮಾಡಿಸುವುದು ಅಗತ್ಯವಾಗಿರುತ್ತದೆ. ಇದರಿಂದಾಗಿ ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಸ್ಪಂದನೆ, ಒಳ್ಳೆಯ ಹವ್ಯಾಸ ಬೆಳೆಸಿಕೊಂಡು ಉತ್ತಮ ಪ್ರಜೆಯಾಗಲು ಸಹಕಾರಿಯಾಗುತ್ತದೆ” ಎಂದು ಸಚಿವರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಈಗಾಗಲೇ ಕೆಲವು ಜಿಲ್ಲೆಗಳ ಶಾಲೆಗಳಲ್ಲಿ ಧ್ಯಾನವನ್ನು ಮಾಡಿಸಲಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಎಲ್ಲಾ ಪ್ರಾಥಮಿಕ ಶಾಲೆಗಳಲ್ಲಿ ಪ್ರತಿದಿನ 10 ನಿಮಿಷಗಳ ಕಾಲ ಧ್ಯಾನವನ್ನು ಮಾಡಿಸಲು ಅವಕಾಶ ಕಲ್ಪಿಸುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಣ ಸಂಘದ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಕೋರಿದ್ದ ಹಿನ್ನೆಲೆಯಲ್ಲಿ ಈ ಸುತ್ತೋಲೆ ಹೊರಡಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ವಿದ್ಯಾರ್ಥಿಗಳಿಗೆ ಪ್ರತಿದಿನ ನಿಯಮಿತವಾಗಿ ಧ್ಯಾನ ಮಾಡಿಸುವುದು ಸೂಕ್ತವಾಗಿರುತ್ತದೆ. ರಾಜ್ಯದಲ್ಲಿನ ಎಲ್ಲಾ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ ಮಾಡಿಸಲು ಸಮಯ ನಿಗದಿಪಡಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ ಎಂದು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ತಿಳಿಸಿದ್ದಾರೆ.
ಬಿ.ಸಿ ನಾಗೇಶ್ರವರು ಶಿಕ್ಷಣ ಸಚಿವರಾದಾಗಿನಿಂದ ಹಲವಾರು ಆಕ್ಷೇಪಗಳು ಕೇಳಿಬರುತ್ತಿವೆ. ಆರಂಭದಲ್ಲಿ ಭಗವದ್ಗೀತೆ ಬೋಧಿಸಲಾಗುವುದು ಎಂದು ವಿವಾದ ಉಂಟು ಮಾಡಿದ್ದರು. ಆನಂತರ ಪಠ್ಯ ಪರಿಷ್ಕರಣೆ ಮತ್ತು ಕನ್ನಡದ ಮೇರು ಚಿಂತಕರಿಗೆ ಅವಮಾನವಾಗಿದ್ದು ದೊಡ್ಡ ಕೋಲಾಹಲಕ್ಕೆ ಕಾರಣವಾಗಿತ್ತು. ವೇದಗಣಿತ ಕಲಿಸಲು ಮುಂದಾಗಿ ವಿರೋಧ ವ್ಯಕ್ತವಾದ ನಂತರ ಹಿಂತೆಗೆದುಕೊಳ್ಳಲಾಗಿತ್ತು. ಸರ್ಕಾರ ಶಾಲಾ ಮಕ್ಕಳ ಪೋಷಕರಿಂದ ದೇಣಿಗೆ ವಸೂಲಿಗೆ ಆಕ್ಷೇಪ ವ್ಯಕ್ತವಾಗಿತ್ತು. ಈಗ ಸಚಿವರು ನಿತ್ಯ ಧ್ಯಾನ ಮಾಡುವುದು ಕಡ್ಡಾಯಗೊಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಧ್ಯಾನದಿಂದ ಸಚಿವರು ಹೇಳಿದ ಗುಣಗಳು ಬೆಳೆಯುತ್ತವೆ ಎಂಬುದಕ್ಕೆ ಯಾವುದೇ ವೈಜ್ಞಾನಿಕ ಆಧಾರವಿಲ್ಲ ಎಂಬ ಪ್ರಶ್ನೆಗಳು ಕೇಳಿ ಬಂದಿವೆ.
ಇದನ್ನೂಓದಿ; ಬೆಂಗಳೂರು: ದೇವಾಲಯಗಳಲ್ಲಿ ಚಪ್ಪಲಿ ಕಾಯುವ ಕೆಲಸ ಪರಿಶಿಷ್ಟರಿಗೆ ಮೀಸಲು; ವಿರೋಧದ ಬಳಿಕ ಟೆಂಡರ್ ರದ್ದು