Homeಕರ್ನಾಟಕಕಾಂಗ್ರೆಸ್ಸಿನ ಬೆಳಗಾವಿ ಮಹಾಧಿವೇಶನಕ್ಕೆ 100ರ ಸಂಭ್ರಮ: ಕುವೆಂಪು ಆತ್ಮಕತೆಯಲ್ಲಿದೆ ಇದರ ಕುರಿತ ಲೇಖನ

ಕಾಂಗ್ರೆಸ್ಸಿನ ಬೆಳಗಾವಿ ಮಹಾಧಿವೇಶನಕ್ಕೆ 100ರ ಸಂಭ್ರಮ: ಕುವೆಂಪು ಆತ್ಮಕತೆಯಲ್ಲಿದೆ ಇದರ ಕುರಿತ ಲೇಖನ

- Advertisement -
- Advertisement -

ನೆನಪಿನ ದೋಣಿಯಲ್ಲಿಕುವೆಂಪುರವರ ಆತ್ಮಕಥೆ. ಇದು ಕುವೆಂಪು ಬೆಳೆದು ಬಂದ ದಾರಿಯನ್ನು ಒಳಗೊಂಡಿದೆ.  ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸಮಾರಂಭ ಇಂದು (ಡಿ.26) ಬೆಳಗಾವಿಯಲ್ಲಿ ನಡೆಯುತ್ತಿದೆ. ಸುಮಾರು 100 ವರ್ಷಗಳ ಹಿಂದೆ ಅಂದರೆ 26-12-1924ರಂದು ಮಹಾತ್ಮ ಗಾಂಧಿ ಅಧ್ಯಕ್ಷತೆ ವಹಿಸಿದ್ದ ಅವರ ಏಕೈಕ ಕಾಂಗ್ರೆಸ್ಸಿನ ಅಧಿವೇಶನದಲ್ಲಿ ಆಗಿನ್ನೂ 20ರ ಹರೆಯದ ಪ್ರಥಮ ಬಿ.ಎ. ವಿದ್ಯಾರ್ಥಿ ಕುವೆಂಪು ಅವರು ಭಾಗವಹಿಸಿದ್ದರು. ಈ ಕುರಿತ ಲೇಖನವನ್ನು ಈ ಆತ್ಮಕಥೆ ಒಳಗೊಂಡಿದೆ.

……………………………………………………………………………..

ನಾನು ಮೊದಲನೇ ವರ್ಷದ ಬಿ.ಎ. ತರಗತಿಯಲ್ಲಿ ಓದುತ್ತಿದ್ದಾಗ 1924ನೆಯ ಡಿಸೆಂಬರ್ ತಿಂಗಳ ಉತ್ತಾರಾರ್ಧದಲ್ಲಿ ಬೆಳಗಾಂನಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನ ನಡೆಯುತ್ತದೆಂದು ಗೊತ್ತಾಯಿತು. ಶಸ್ತ್ರ ಚಿಕಿತ್ಸೆಯ ಅನಂತರ ಆಗತಾನೆ ಸೆರೆಮನೆಯಿಂದ ಬಿಡುಗಡೆಯಾಗಿದ್ದ ಮಹಾತ್ಮಾ ಗಾಂಧಿಯವರು ಆ ಅಧಿವೇಶನದ ಅಧ್ಯಕ್ಷತೆ ವಹಿಸುತ್ತಾರೆ ಎಂಬ ವಾರ್ತೆ ನಮ್ಮನ್ನೆಲ್ಲ ಆಕರ್ಷಿಸಿತು. ಭರತಖಂಡದ ಬದುಕನ್ನೆಲ್ಲ ತುಂಬಿಕೊಂಡಿದ್ದರು ಗಾಂಧೀಜಿ. ಅವರಿಗೆ ಶಿಕ್ಷೆಯಾಗಿದ್ದು, ಶಸ್ತ್ರ ಚಿಕಿತ್ಸೆಯಾಗಿದ್ದು ಸೆರೆಯ ಅವಧಿ ಮುಗಿಯುವ ಮುನ್ನವೆ ಅವರು ಬಿಡುಗಡೆ ಹೊಂದಿ ಹೊರಗೆ ಬಂದದ್ದು ಎಲ್ಲವೂ ಪತ್ರಿಕೆಗಳಲ್ಲಿ ದಿನವೂ ಅನೇಕ ತಿಂಗಳುಗಳಿಂದ ದಪ್ಪಕ್ಷರದ ಮೊದಲನೆಯ ಪುಟದ ವಾರ್ತೆಗಳಾಗಿ, ಜನತೆಯ ಹೃದಯ ಸಮುದ್ರ ಕಡೆದಂತಾಗಿ, ದೇಶದ ಬದುಕು ವಿಕ್ಷುಬ್ಧವಾಗಿತ್ತು. ಕಾಂಗ್ರೆಸ್ ಅಧಿವೇಶನದ ಸಮಯಕ್ಕೆ ಸರಿಯಾಗಿ ಕ್ರಿಸ್‌ಮಸ್ ರಜವೂ ಪ್ರಾರಂಭವಾಗುತ್ತಿತ್ತಾದ್ದರಿಂದ ನಾವು ಕೆಲವರು ವಿದ್ಯಾರ್ಥಿ ಮಿತ್ರರು ಬೆಳಗಾವಿಗೆ ಹೋಗಲು ನಿಶ್ಚಯಿಸಿದೆವು.

ರೈಲು ಪ್ರಯಾಣವೂ ಒಂದು ಸಾಹಸವೇ ಆಗಿತ್ತು. ಗಾಂಧೀಜಿ ಅಧ್ಯಕ್ಷತೆ ವಹಿಸುವ ಕಾಂಗ್ರೆಸ್ ಅಧಿವೇಶನಕ್ಕೆ ಹೊರಟ ಅಕ್ಷರಶಃ ಲಕ್ಷಾಂತರ ಜನರ ನೂಕುನುಗ್ಗಲು ಉಸಿರುಕಟ್ಟಿಸುತ್ತಿತ್ತು. ಚಳಿಗಾಲವಾಗಿದ್ದರೂ ಕಾಂಪಾರ್ಟುಮೆಂಟಿನ ಒಳಗೆ ಕುದಿಯುವ ಸೆಕೆ! ಪ್ರತಿಯೊಂದು ನಿಲ್ದಾಣದಲ್ಲಿಯೂ ಆಗಲೆ ಕಿಕ್ಕಿರಿದಿದ್ದ ಗಾಡಿಗೆ ಹತ್ತಲು ಪ್ರಯತ್ನಿಸುವವರ ಮತ್ತು ಮೊದಲೇ ಹತ್ತಿ ನಿಲ್ಲಲು ಕೂಡ ಜಾಗವಿಲ್ಲದೆ ಜೋತುಬಿದ್ದವರ ನಡುವೆ ಜಗಳ, ಬೈಗುಳ, ಗುದ್ದಾಟ, ಆ ಕಿಕ್ಕಿರಿಕೆ, ನುಗ್ಗಾಟ, ಕೆಟ್ಟ ಉಸಿರಿನ ಬೆವರಿನ ಕೊಳಕುವಾಸನೆ ಇವುಗಳನ್ನು ತಡೆಯಲಾರದೆ, ರೈಲನ್ನು ಹೊರಡಲು ಬಿಡದಂತೆ ಸರಪಣಿ ಎಳೆದದ್ದೂ ಎಳೆದದ್ದೆ! ನಮ್ಮ ಗುಂಪಿನವರೆ ಮೂರು ನಾಲ್ಕು ಸಲ ಹಾಗೆ ಮಾಡಬೇಕಾಯ್ತು. ಕಡೆಗೆ ಗಾರ್ಡು-ಸ್ಟೇಷನ್ ಮಾಸ್ಟರು ಬಂದು ಕೇಳಿಕೊಂಡ ಮೇಲೆಯೇ, ದಾಕ್ಷಿಣ್ಯಕ್ಕೆ, ಸರಪಣಿ ಎಳೆಯುವುದನ್ನು ನಿಲ್ಲಿಸಿದೆವು. ಹೂಜಿಗಳಲ್ಲಿ ರೈಲು ತುಂಬಿಗೆಗಳಲ್ಲಿ ಇದ್ದ ನೀರೆಲ್ಲ ಖಾಲಿಯಾಗಿ ದಗೆಗೆ ಮೂರ್ಛೆ ಹೋಗುವುದೊಂದು ಬಾಕಿ! ಅಂತೂ ಹೋಗಿ ಇಳಿದೆವು ಬೆಳಗಾವಿ ಸ್ಟೇಷನ್ನಿನಲ್ಲಿ: ಭೂಪಾಳಂ ಚಂದ್ರಶೇಖರಯ್ಯ, ಎಸ್.ವಿ.ಕನಕಶೆಟ್ಟಿ, ರಾಮಚಂದ್ರಶೆಟ್ಟಿ, ನಾನು, ಇನ್ನೂ ಕೆಲವರ-ಹೆಸರು ನೆನಪಿಗೆ ಬಾರದು.\

ಅಧಿವೇಶನದ ಜಾಗಕ್ಕೆ ಸ್ವಲ್ಪ ದೂರವಾಗಿದ್ದ ಬೆಳಗಾವಿಯ ಊರಿನಲ್ಲಿ ಮಿತ್ರರೊಬ್ಬರ ಬಂಧುಗಳ ಮನೆಯಲ್ಲಿಯೆ ನಾವೆಲ್ಲ ಇಳಿದುಕೊಳ್ಳುವಂತೆ ಏರ್ಪಾಡಾಗಿತ್ತು. ಅಲ್ಲಿ ಸ್ನಾನಗೀನ ಮುಗಿಸುತ್ತಿದ್ದೆವು; ಊಟಗೀಟಕ್ಕೆಲ್ಲ ಅಧಿವೇಶನದ ಮಹಾಬೃಹತ್ ಭೋಜನ ಶಾಲೆಗೆ ಹೋಗುತ್ತಿದ್ದೆವು. ಅಧಿವೇಶನದ ಭಾಷಣದ ವೇದಿಕೆಯ ಸುವಿಸ್ತೃತವಾದ ಪ್ರಧಾನ ಮಂಟಪದಷ್ಟೆ ಭವ್ಯವಾಗಿತ್ತು ಆ ಭೋಜನ ಶಾಲೆ. ನನಗಂತೂ ಈ ಊಟ ತಿಂಡಿಯ ಔತಣವನ್ನು ಕಂಡು ಬೆರಗು ಬಡಿದಿತ್ತು. ಕೇಳಿದಷ್ಟು ಸಿಹಿ, ಕೇಳಿದಷ್ಟು ಹಾಲು, ತುಪ್ಪ, ಚಪಾತಿ, ಶ್ರೀಖಂಡ ಮತ್ತು ಏನೇನೊ ನಾನಾ ಪ್ರಾಂತಗಳ ತರತರದ ಭಕ್ಷ್ಯಭೋಜ್ಯಗಳು: ನನ್ನ ಗ್ರಾಮೀಣತೆ ತತ್ತರಿಸಿತ್ತು! ನಾನಾ ಪ್ರಾಂತಗಳ ನಾನಾ ರೀತಿಯ ಜನರ ಪರಿಚಯ ಅಧಿವೇಶನದ ಮುಖ್ಯಸ್ಥಾನದಲ್ಲಿ ಆಗುವುದಕ್ಕಿಂತಲೂ ಅತಿಶಯವಾಗಿ ಈ ಭೋಜನಶಾಲೆಯಲ್ಲಿ ನಮಗೆ ಅತಿನಿಕಟವಾಗಿ ಲಭಿಸಿತು. ನಮ್ಮ ಎದುರು ಪಂಕ್ತಿಯಲ್ಲಿಯೆ ಕುಳಿತು ಉಣ್ಣುತ್ತಿದ್ದ ಉತ್ತರದ ಕಡೆಯ ಜನರ ಭೀಮಾಕಾರ, ಭೀಮೋದರ, ಭೀಮಾಭಿರುಚಿ, ಭೋಜನದಲ್ಲಿ ಅವರಿಗಿದ್ದ ಭೀಮೋತ್ಸಾಹ ಇವುಗಳನ್ನೆಲ್ಲ ಬೆಕ್ಕಸ ಬೆರಗಾಗಿ ನೋಡುತ್ತಿದ್ದೆವು ನಾವು! ನಾವು ಆ ಬಲಿಷ್ಠವಾಗಿರುತ್ತಿದ್ದ ಚಪಾತಿಗಳಲ್ಲಿ ಒಂದನ್ನೆ ತಿಂದು, ಹೊಟ್ಟೆ ತುಂಬಿಹೋಗಿ, ಮುಂದೆ ಅದಕ್ಕಿಂತಲೂ ರುಚಿ ರುಚಿಯಾಗಿರುತ್ತಿದ್ದ ಉಣಿಸುಗಳನ್ನು ತಿನ್ನಲಾರದೆ ಎದುರಿಗಿದ್ದವರನ್ನು ಕರುಬಿನಿಂದ ನೋಡುತ್ತಿದ್ದರೆ, ಅವರು ಒಂದಲ್ಲ ಎರಡಲ್ಲ ಏಳೆಂಟು ಚಪಾತಿಗಳನ್ನೂ ಲೀಲಾಜಾಲವಾಗಿ ತಿಂದು, ಹಾಲು ತುಪ್ಪ ಶ್ರೀಖಂಡಗಳನ್ನು ಯಥೇಚ್ಛವಾಗಿ ಸೇವಿಸಿ, ಮತ್ತೂ ತರತರದ ಅನ್ನ ಪಾಯಸಾದಿಗಳನ್ನು ಬಡಿಸಿಕೊಂಡು ತಿನ್ನುತ್ತಿದ್ದರು! ಮತ್ತೆ, ಅವರೇನು ಊಟಕ್ಕೆ ಹೆಚ್ಚು ದುಡ್ಡ ಕೊಡುತ್ತಿರಲಿಲ್ಲ. ನಾವು ಕೊಟ್ಟಷ್ಟೆ, ಒಂದೆ ರೂಪಾಯಿ! ಬಡಕಲಾಗಿದ್ದು ತಿನ್ನಲಾರದ ಸಣಕಲು ಹೊಟ್ಟೆಯ ನಮಗೆ ಆಗುತ್ತಿದ್ದ ನಷ್ಟವನ್ನು ನೆನೆದಾಗ ನಮಗೆ ಲಭಿಸುತ್ತಿದ್ದ ಲಾಭ ಬರಿಯ ಹೊಟ್ಟೆಯ ಕಿಚ್ಚು! ಪರಿಣಾಮ: ಅವರಿಗೆ ತಿಳಿಯದಿದ್ದ ಕನ್ನಡದಲ್ಲಿ ನಾವು ಅವರ ಲೋಭ ಬುದ್ಧಿಯನ್ನೂ ಹೊಟ್ಟೆಬಾಕತನವನ್ನೂ ಗಜವರಾಹ ಗಾತ್ರವನ್ನೂ ಖಂಡಿಸುತ್ತಾ ಟೀಕಿಸುತ್ತಾ ಲೇವಡಿ ಮಾಡಿ ನಗುತ್ತಾ ಪ್ರತೀಕಾರವೆಸಗಿದೆವೆಂದು ಭಾವಿಸಿ ತೃಪ್ತರಾಗುವುದೆಷ್ಟೊ ಅಷ್ಟೆ!

ಆ ಅಧಿವೇಶನದಲ್ಲಿ ರಾಷ್ಟ್ರದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿ ಸುಪ್ರಸಿದ್ಧರಾಗಿದ್ದ ಅನೇಕ ವ್ಯಕ್ತಿಗಳು ನೆರೆದಿದ್ದರು. ಆದರೆ ನಮಗಿದ್ದುದು ಮುಖ್ಯವಾಗಿ ಒಂದೇ ಲಕ್ಷ್ಯ: ಗಾಂಧೀಜಿಯ ದರ್ಶನ! ಆದರೆ ಅದೇನು ಸುಲಭ ಸಾಧ್ಯವಾಗಿತ್ತೇ? ಆ ಜನಜಂಗುಳಿಯ ನೂಕುನುಗ್ಗಲಲ್ಲಿ? ಅಧಿವೇಶನದ ವೇದಿಕೆಯ ಮೇಲೆ ಅವರನ್ನೇನೋ ನೋಡಬಹುದಾಗಿತ್ತು. ಆದರೆ ಅದು ನಾವು ಕೊಂಡಿದ್ದ ಟಿಕೆಟ್ಟಿನ ಸ್ಥಳಕ್ಕೆ ಬಹುಬಹುದೂರವಾಗಿತ್ತು. ಅಲ್ಲಿಂದ ಗಾಂಧೀಜಿ ಸಣ್ಣದೊಂದು ಪುತ್ತಲಿಯ ಗೊಂಬೆಯಷ್ಟೆ ಆಕಾರದಲ್ಲಿ ಕಾಣಿಸುತ್ತಿದ್ದರು. ಅದಕ್ಕಾಗಿ ನಾವು ಅವರು ಅಧಿವೇಶನಕ್ಕೆ ಬರುವ ಹೊತ್ತನ್ನೂ ಅವರು ಪ್ರವೇಶಿಸುವ ಮಹಾದ್ವಾರವನ್ನೂ ಪತ್ತೆಹಚ್ಚಿ ಬಿಸಿಲಿನಲ್ಲಿ ಕಾದೆವು.

ಕಾದೆವು ಎಂದರೆ ಎರಡು ಅರ್ಥದಲ್ಲಿಯೂ: ಬಹಳ ಹೊತ್ತು ಕಾದೆವು ಎಂಬುದು ಗೌಣಾರ್ಥ. ಆದರೆ ಬಿಸಿಲಿನಲ್ಲಿ ಕಾದೆವು ಎಂದರೆ, ಕಾದು ಕೆಂಪಾದೆವು! ಅಕ್ಷರಶಃ ಮುಖಕ್ಕೆ ರಕ್ತವೇರಿ ಕೆಂಪಾದದ್ದು ಮಾತ್ರವೆ ಅಲ್ಲ. ಬಟ್ಟೆ ಬರೆ ಎಲ್ಲವೂ ಕೆಂಪು ಬಣ್ಣಕ್ಕೆ ತಿರುಗಿದುವು. ಮೈಸೂರಿನಿಂದ ಹೊರಡುವಾಗ ಬೆಳ್ಳಗೆ ಮಡಿಮಾಡಿದ್ದ ಖಾದಿ ಉಡುಪು ಧರಿಸಿ, ದಿನವೂ ಸ್ನಾನ ಮಾಡಿದ ಮೇಲೆ ಬಟ್ಟೆ ಬದಲಾಯಿಸುವುದಕ್ಕಾಗಿ ಒಂದೆರಡು ಜೊತೆ ಪಂಚೆ ಷರ್ಟುಗಳನ್ನು ಬೆಳ್ಳಗೆ ಬೆಣ್ಣೆಮಡಿ ಮಾಡಿಸಿಕೊಂಡು ಒಯ್ದಿದ್ದೆವು. ಬೆಳಗಾವಿ ತಲುಪುವಷ್ಟರಲ್ಲಿ ನಮ್ಮ ಉಡುಪು ಮುಸುರೆ ತಿಕ್ಕಿದಂತಾಗಿತ್ತು. ರೈಲಿನ ಪ್ರಯಾಣದಲ್ಲಿ ಎಂಜನ್ನಿನ ಹೊಗೆಯ ಹುಡಿ ಕೂತು ನೂಕುನುಗ್ಗಲಿನ ಬೆವರು ಹತ್ತಿ ಹಾಗಾಗುವುದರಲ್ಲಿ ಅಚ್ಚರಿಯಿಲ್ಲ ಎಂದುಕೊಂಡೆವು. ಮರುದಿನ ಬೆಳಿಗ್ಗೆ ಮಿಂದು, ಉಟ್ಟ ಬಟ್ಟೆಗಳನ್ನೆಲ್ಲ ಚೆನ್ನಾಗಿ ಒಗೆದು ಹರಡಿ, ಮೈಸೂರಿನಿಂದ ತಂದಿದ್ದ ಬಿಳಿಮಡಿಯ ಬಟ್ಟೆ ಧರಿಸಿ, ಸ್ವದೇಶೀ ವಸ್ತ್ರದ ಶ್ವೇತಾಂಬರದಿಂದ ಶೋಭಿಸುತ್ತಾ ಅಧಿವೇಶನಕ್ಕೆ ಹೋದೆವು.

ಅಧಿವೇಶನದ ವಲಯವನ್ನು ಸಮೀಪಿಸುತ್ತಿರುವಾಗಲೆ ಒಂದು ಧೂಳೀಧೂಸರವಾದ ಆಕಾಶಮಂಡಲ ಕಾಣಿಸುವುದರ ಜೊತೆಗೆ ಜನಸ್ತೋಮದ ಚಲನವಲನದಿಂದ ಹೊಮ್ಮಿದ ತುಮುಲ ಶಬ್ದಮಂಡಲವೂ ಕರ್ಣಗೋಚರವಾಯಿತು. ತುಸು ಹೊತ್ತು ನನ್ನ ಮಿತ್ರರೊಬ್ಬರು ಇದ್ದಕ್ಕಿದ್ದಂತೆ ಸಂನ್ಯಾಸಿಯಾದಂತೆ ಕಾವಿಧಾರಿಯಾಗಿದ್ದಾರೆ! ಅಚ್ಚರಿಯಿಂದ ನೋಡುತ್ತೇನೆ: ಮತ್ತೂ ಒಬ್ಬರು ಹಾಗೆಯೆ ಬಣ್ಣ ಬದಲಾಯಿಸಿದ್ದಾರೆ! ನೋಡಿಕೊಳ್ಳುತ್ತೇನೆ: ನನ್ನ ಉಡುಪೂ ಕೆಮ್ಮಣ್ಣು ಬಣ್ಣಕ್ಕೆ ತಿರುಗಿದೆ! ಕಡೆಗೆ ಗೊತ್ತಾಯಿತು, ಅಲ್ಲಿನ ಮಣ್ಣಿನ ಬಣ್ಣವೇ ಕೆಂಪು ಎಂದು; ಅಲ್ಲಿ ಬಿಳಿಬಟ್ಟೆ ಹಾಕಿಕೊಂಡು ಶುಚಿಯಾಗಿ ಕಾಣುವುದೇ ಅಸಾಧ್ಯ ಎಂದು. ಒಂದೆರಡು ದಿನವೇನೋ ಬೆಳ್ಳಗೆ ಮಡಿಯಾಗಿರಲು ಪ್ರಯತ್ನಪಟ್ಟೆವು. ಏನೇನೋ ಪ್ರಯೋಜನವಾಗಲಿಲ್ಲ. ಶುಚಿತ್ವವನ್ನೇ ಕೈಬಿಟ್ಟೆವು, ಮೈಸೂರಿಗೆ ಮತ್ತೆ ಬರುವವರೆಗೆ!

ಮೈಗೆಂಪಾಗಿ ಬಟ್ಟೆಗೆಂಪಾಗಿ ಒಂದು ಮಹಾದ್ವಾರದೆಡೆ ನೂಕು ನುಗ್ಗಲಿನಲ್ಲಿ ನಿಂತು ನೋಡುತ್ತಿದ್ದೆವು, ನೆರೆದ ಜಾತ್ರೆಯ ಜನಜಂಗುಳಿಯ ನಡುವೆ ಆನೆಯೊಂದು ನಡೆದು ಬರುತ್ತಿದ್ದರೆ ಹೇಗೆ ಮೇಲೆದ್ದು ಕಾಣಿಸುವುದೊ ಹಾಗೆ ಜನಸಮುದ್ರದಲ್ಲಿ ತೇಲಿ ಬರುವ ಹಡಗುಗಳಂತೆ ಇಬ್ಬರು ಬೃಹದ್ ವ್ಯಕ್ತಿಗಳು ಬರುತ್ತಿದ್ದುದು ಕಾಣಿಸಿತು. ಗುಸುಗುಸು ಹಬ್ಬಿತು, ಗಾಂಧೀಜಿ ಬರುತ್ತಿದ್ದಾರೆ ಎಂದು. ಕತ್ತು ನಿಕ್ಕುಳಿಸಿ ನೋಡಿದೆ. ಗಾಂಧೀಜಿ ಎಲ್ಲಿ?

ಪಕ್ಕದಲ್ಲಿದ್ದವರು ಹೇಳಿದರು: ‘ಮೇಲೆದ್ದು ಕಾಣಿಸುತ್ತಾ ಬರುತ್ತಿದ್ದಾರಲ್ಲಾ ಅವರಿಬ್ಬರು ಆಲಿ ಸಹೋದರರು ಕಣ್ರೀ! ಅವರ ಮಧ್ಯೆ ನಡೆದು ಬರುತ್ತಿದ್ದಾರೆ ಗಾಂಧೀಜಿ.’

ಮಹಾತಾಮಸ ಮತ್ತು ಮಹಾರಾಜಸಗಳ ಮಧ್ಯೆ ನಡೆದುಬರುವ ಮಹಾಸಾತ್ವಿಕದಂತೆ ಕಾಣಿಸಿಕೊಂಡರು ಗಾಂಧೀಜಿ. ಮೌಲಾನಾ ಮಹಮ್ಮದಾಲಿ ಮತ್ತು ಮೌಲಾನಾ ಷೌಕತಾಲಿ ಇಬ್ಬರೂ ಪ್ರಾಚೀನ ಪೌರಾಣಿಕ ಅಸುರರಂತೆ ದೈತ್ಯ ಗಾತ್ರರಾಗಿದ್ದರು. ಅಸುರೀ ಸ್ವಭಾವಕ್ಕೆ ತಕ್ಕಂತೆ ಅವರ ಉಡುಪೂ ವಿರಾಜಿಸುತ್ತಿತ್ತು. ಚಂದ್ರ-ನಕ್ಷತ್ರ ಸಂಕೇತದಿಂದ ಶೋಭಿಸುತ್ತಿತ್ತು. ಅವರ ತಲೆಯುಡೆ. ಹೇರೊಡಲನ್ನು ಸುತ್ತಿತ್ತು ನೇಲುತ್ತಾ ಜೋಲುತ್ತಾ ನೆಲ ಗುಡಿಸುವಂತಿದ್ದ ಅವರ ನಿಲುವಂಗಿ. ಅವರ ಹೊಟ್ಟೆಯ ಸುತ್ತಳತೆಯಲ್ಲಿಯೆ ನಾಲ್ಕಾರು ಗಾಂಧಿಗಳು ಆಶ್ರಯ ಪಡೆಯಬಹುದಾಗಿತ್ತೇನೋ!

ತದ್ವಿರುದ್ಧವಾಗಿತ್ತು ಅಣುರೂಪಿ ಗಾಂಧೀಜಿಯ ಆಕೃತಿ, ಅವರಿಬ್ಬರ ನಡುವೆ. ನಮ್ಮ ಗೌರವಸಮಸ್ತವೂ ಸಾಷ್ಟಾಂಗವೆರಗಿತ್ತು ಅವರ ಪದತಲದಲ್ಲಿ: ‘ವಂದೇ ಮಾತರಂ! ಭಾರತ ಮಾತಾಕೀ ಜೈ! ಮಹಾತ್ಮಾ ಗಾಂಧೀ ಕೀ ಜೈ!’ ಮೊದಲಾದ ಘೋಷಗಳು ಕಿವಿ ಬಿರಿಯುವಂತೆ ಗಗನದೇಶವನ್ನೆಲ್ಲ ತುಂಬಿದುವು. ಆ ಉತ್ಸಾಹ ಸಾಗರಕ್ಕೆ ನನ್ನ ಕೀಚು ಕೊರಳೂ ತನ್ನ ದನಿಹನಿಯ ನೈವೇದ್ಯವನ್ನು ನೀಡಿ ಧನ್ಯವಾಗಿತ್ತು!

ಮೂರು ನಾಲ್ಕು ದಿನಗಳ ಅಧಿವೇಶನದಲ್ಲಿ ನಾವು ಪ್ರೇಕ್ಷಕ ಭಾಗಿಗಳಾಗಿದ್ದೆವು. ನನ್ನ ನೆನಪಿನಲ್ಲಿ ಆ ಸ್ವಾರಸ್ಯದ ವಿವರಗಳಾವುವೂ ಇಲ್ಲ. ಆದರೆ ಸ್ವಾತಂತ್ರ್ಯದೀಕ್ಷೆಯನ್ನು ತೊಟ್ಟು ಸ್ವಾತಂತ್ರ್ಯ ಸಂಗ್ರಾಮಕ್ಕೆ ಧುಮ್ಮಿಕ್ಕುವ ಭಾರತೀಯ ಸಮಷ್ಟಿ ಚೈತನ್ಯದ ಅಗ್ನಿಸ್ಪರ್ಶ ನನ್ನ ಕವಿಚೇತನಕ್ಕೂ ತಗುಲಿತ್ತು. ತತ್ಕಾಲದಲ್ಲಿ ರಚಿಸಿದ ಕೆಲವು ಇಂಗ್ಲಿಷ್ ಕವನಗಳೂ, ತರುವಾಯ ರಚಿತವಾಗಿ ಸುಪ್ರಸಿದ್ಧವಾಗಿರುವ ಕನ್ನಡ ಕವನಗಳೂ ಆ ದೀಕ್ಷೆಗೆ ಸಾಕ್ಷಿ ನಿಂತಿವೆ.

(ಅಕರ: ಕುವೆಂಪು – ನೆನಪಿನ ದೋಣಿಯಲ್ಲಿ)

ಮಲಯಾಳಂ ಸಾಹಿತ್ಯ ದಿಗ್ಗಜ ಎಂ.ಟಿ. ವಾಸುದೇವನ್ ನಾಯರ್ (91) ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ BJP ಗೆಲುವು SIR ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...