Homeಕರ್ನಾಟಕಕಾಂಗ್ರೆಸ್ಸಿನ ಬೆಳಗಾವಿ ಮಹಾಧಿವೇಶನಕ್ಕೆ 100ರ ಸಂಭ್ರಮ: ಕುವೆಂಪು ಆತ್ಮಕತೆಯಲ್ಲಿದೆ ಇದರ ಕುರಿತ ಲೇಖನ

ಕಾಂಗ್ರೆಸ್ಸಿನ ಬೆಳಗಾವಿ ಮಹಾಧಿವೇಶನಕ್ಕೆ 100ರ ಸಂಭ್ರಮ: ಕುವೆಂಪು ಆತ್ಮಕತೆಯಲ್ಲಿದೆ ಇದರ ಕುರಿತ ಲೇಖನ

- Advertisement -
- Advertisement -

ನೆನಪಿನ ದೋಣಿಯಲ್ಲಿಕುವೆಂಪುರವರ ಆತ್ಮಕಥೆ. ಇದು ಕುವೆಂಪು ಬೆಳೆದು ಬಂದ ದಾರಿಯನ್ನು ಒಳಗೊಂಡಿದೆ.  ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸಮಾರಂಭ ಇಂದು (ಡಿ.26) ಬೆಳಗಾವಿಯಲ್ಲಿ ನಡೆಯುತ್ತಿದೆ. ಸುಮಾರು 100 ವರ್ಷಗಳ ಹಿಂದೆ ಅಂದರೆ 26-12-1924ರಂದು ಮಹಾತ್ಮ ಗಾಂಧಿ ಅಧ್ಯಕ್ಷತೆ ವಹಿಸಿದ್ದ ಅವರ ಏಕೈಕ ಕಾಂಗ್ರೆಸ್ಸಿನ ಅಧಿವೇಶನದಲ್ಲಿ ಆಗಿನ್ನೂ 20ರ ಹರೆಯದ ಪ್ರಥಮ ಬಿ.ಎ. ವಿದ್ಯಾರ್ಥಿ ಕುವೆಂಪು ಅವರು ಭಾಗವಹಿಸಿದ್ದರು. ಈ ಕುರಿತ ಲೇಖನವನ್ನು ಈ ಆತ್ಮಕಥೆ ಒಳಗೊಂಡಿದೆ.

……………………………………………………………………………..

ನಾನು ಮೊದಲನೇ ವರ್ಷದ ಬಿ.ಎ. ತರಗತಿಯಲ್ಲಿ ಓದುತ್ತಿದ್ದಾಗ 1924ನೆಯ ಡಿಸೆಂಬರ್ ತಿಂಗಳ ಉತ್ತಾರಾರ್ಧದಲ್ಲಿ ಬೆಳಗಾಂನಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನ ನಡೆಯುತ್ತದೆಂದು ಗೊತ್ತಾಯಿತು. ಶಸ್ತ್ರ ಚಿಕಿತ್ಸೆಯ ಅನಂತರ ಆಗತಾನೆ ಸೆರೆಮನೆಯಿಂದ ಬಿಡುಗಡೆಯಾಗಿದ್ದ ಮಹಾತ್ಮಾ ಗಾಂಧಿಯವರು ಆ ಅಧಿವೇಶನದ ಅಧ್ಯಕ್ಷತೆ ವಹಿಸುತ್ತಾರೆ ಎಂಬ ವಾರ್ತೆ ನಮ್ಮನ್ನೆಲ್ಲ ಆಕರ್ಷಿಸಿತು. ಭರತಖಂಡದ ಬದುಕನ್ನೆಲ್ಲ ತುಂಬಿಕೊಂಡಿದ್ದರು ಗಾಂಧೀಜಿ. ಅವರಿಗೆ ಶಿಕ್ಷೆಯಾಗಿದ್ದು, ಶಸ್ತ್ರ ಚಿಕಿತ್ಸೆಯಾಗಿದ್ದು ಸೆರೆಯ ಅವಧಿ ಮುಗಿಯುವ ಮುನ್ನವೆ ಅವರು ಬಿಡುಗಡೆ ಹೊಂದಿ ಹೊರಗೆ ಬಂದದ್ದು ಎಲ್ಲವೂ ಪತ್ರಿಕೆಗಳಲ್ಲಿ ದಿನವೂ ಅನೇಕ ತಿಂಗಳುಗಳಿಂದ ದಪ್ಪಕ್ಷರದ ಮೊದಲನೆಯ ಪುಟದ ವಾರ್ತೆಗಳಾಗಿ, ಜನತೆಯ ಹೃದಯ ಸಮುದ್ರ ಕಡೆದಂತಾಗಿ, ದೇಶದ ಬದುಕು ವಿಕ್ಷುಬ್ಧವಾಗಿತ್ತು. ಕಾಂಗ್ರೆಸ್ ಅಧಿವೇಶನದ ಸಮಯಕ್ಕೆ ಸರಿಯಾಗಿ ಕ್ರಿಸ್‌ಮಸ್ ರಜವೂ ಪ್ರಾರಂಭವಾಗುತ್ತಿತ್ತಾದ್ದರಿಂದ ನಾವು ಕೆಲವರು ವಿದ್ಯಾರ್ಥಿ ಮಿತ್ರರು ಬೆಳಗಾವಿಗೆ ಹೋಗಲು ನಿಶ್ಚಯಿಸಿದೆವು.

ರೈಲು ಪ್ರಯಾಣವೂ ಒಂದು ಸಾಹಸವೇ ಆಗಿತ್ತು. ಗಾಂಧೀಜಿ ಅಧ್ಯಕ್ಷತೆ ವಹಿಸುವ ಕಾಂಗ್ರೆಸ್ ಅಧಿವೇಶನಕ್ಕೆ ಹೊರಟ ಅಕ್ಷರಶಃ ಲಕ್ಷಾಂತರ ಜನರ ನೂಕುನುಗ್ಗಲು ಉಸಿರುಕಟ್ಟಿಸುತ್ತಿತ್ತು. ಚಳಿಗಾಲವಾಗಿದ್ದರೂ ಕಾಂಪಾರ್ಟುಮೆಂಟಿನ ಒಳಗೆ ಕುದಿಯುವ ಸೆಕೆ! ಪ್ರತಿಯೊಂದು ನಿಲ್ದಾಣದಲ್ಲಿಯೂ ಆಗಲೆ ಕಿಕ್ಕಿರಿದಿದ್ದ ಗಾಡಿಗೆ ಹತ್ತಲು ಪ್ರಯತ್ನಿಸುವವರ ಮತ್ತು ಮೊದಲೇ ಹತ್ತಿ ನಿಲ್ಲಲು ಕೂಡ ಜಾಗವಿಲ್ಲದೆ ಜೋತುಬಿದ್ದವರ ನಡುವೆ ಜಗಳ, ಬೈಗುಳ, ಗುದ್ದಾಟ, ಆ ಕಿಕ್ಕಿರಿಕೆ, ನುಗ್ಗಾಟ, ಕೆಟ್ಟ ಉಸಿರಿನ ಬೆವರಿನ ಕೊಳಕುವಾಸನೆ ಇವುಗಳನ್ನು ತಡೆಯಲಾರದೆ, ರೈಲನ್ನು ಹೊರಡಲು ಬಿಡದಂತೆ ಸರಪಣಿ ಎಳೆದದ್ದೂ ಎಳೆದದ್ದೆ! ನಮ್ಮ ಗುಂಪಿನವರೆ ಮೂರು ನಾಲ್ಕು ಸಲ ಹಾಗೆ ಮಾಡಬೇಕಾಯ್ತು. ಕಡೆಗೆ ಗಾರ್ಡು-ಸ್ಟೇಷನ್ ಮಾಸ್ಟರು ಬಂದು ಕೇಳಿಕೊಂಡ ಮೇಲೆಯೇ, ದಾಕ್ಷಿಣ್ಯಕ್ಕೆ, ಸರಪಣಿ ಎಳೆಯುವುದನ್ನು ನಿಲ್ಲಿಸಿದೆವು. ಹೂಜಿಗಳಲ್ಲಿ ರೈಲು ತುಂಬಿಗೆಗಳಲ್ಲಿ ಇದ್ದ ನೀರೆಲ್ಲ ಖಾಲಿಯಾಗಿ ದಗೆಗೆ ಮೂರ್ಛೆ ಹೋಗುವುದೊಂದು ಬಾಕಿ! ಅಂತೂ ಹೋಗಿ ಇಳಿದೆವು ಬೆಳಗಾವಿ ಸ್ಟೇಷನ್ನಿನಲ್ಲಿ: ಭೂಪಾಳಂ ಚಂದ್ರಶೇಖರಯ್ಯ, ಎಸ್.ವಿ.ಕನಕಶೆಟ್ಟಿ, ರಾಮಚಂದ್ರಶೆಟ್ಟಿ, ನಾನು, ಇನ್ನೂ ಕೆಲವರ-ಹೆಸರು ನೆನಪಿಗೆ ಬಾರದು.\

ಅಧಿವೇಶನದ ಜಾಗಕ್ಕೆ ಸ್ವಲ್ಪ ದೂರವಾಗಿದ್ದ ಬೆಳಗಾವಿಯ ಊರಿನಲ್ಲಿ ಮಿತ್ರರೊಬ್ಬರ ಬಂಧುಗಳ ಮನೆಯಲ್ಲಿಯೆ ನಾವೆಲ್ಲ ಇಳಿದುಕೊಳ್ಳುವಂತೆ ಏರ್ಪಾಡಾಗಿತ್ತು. ಅಲ್ಲಿ ಸ್ನಾನಗೀನ ಮುಗಿಸುತ್ತಿದ್ದೆವು; ಊಟಗೀಟಕ್ಕೆಲ್ಲ ಅಧಿವೇಶನದ ಮಹಾಬೃಹತ್ ಭೋಜನ ಶಾಲೆಗೆ ಹೋಗುತ್ತಿದ್ದೆವು. ಅಧಿವೇಶನದ ಭಾಷಣದ ವೇದಿಕೆಯ ಸುವಿಸ್ತೃತವಾದ ಪ್ರಧಾನ ಮಂಟಪದಷ್ಟೆ ಭವ್ಯವಾಗಿತ್ತು ಆ ಭೋಜನ ಶಾಲೆ. ನನಗಂತೂ ಈ ಊಟ ತಿಂಡಿಯ ಔತಣವನ್ನು ಕಂಡು ಬೆರಗು ಬಡಿದಿತ್ತು. ಕೇಳಿದಷ್ಟು ಸಿಹಿ, ಕೇಳಿದಷ್ಟು ಹಾಲು, ತುಪ್ಪ, ಚಪಾತಿ, ಶ್ರೀಖಂಡ ಮತ್ತು ಏನೇನೊ ನಾನಾ ಪ್ರಾಂತಗಳ ತರತರದ ಭಕ್ಷ್ಯಭೋಜ್ಯಗಳು: ನನ್ನ ಗ್ರಾಮೀಣತೆ ತತ್ತರಿಸಿತ್ತು! ನಾನಾ ಪ್ರಾಂತಗಳ ನಾನಾ ರೀತಿಯ ಜನರ ಪರಿಚಯ ಅಧಿವೇಶನದ ಮುಖ್ಯಸ್ಥಾನದಲ್ಲಿ ಆಗುವುದಕ್ಕಿಂತಲೂ ಅತಿಶಯವಾಗಿ ಈ ಭೋಜನಶಾಲೆಯಲ್ಲಿ ನಮಗೆ ಅತಿನಿಕಟವಾಗಿ ಲಭಿಸಿತು. ನಮ್ಮ ಎದುರು ಪಂಕ್ತಿಯಲ್ಲಿಯೆ ಕುಳಿತು ಉಣ್ಣುತ್ತಿದ್ದ ಉತ್ತರದ ಕಡೆಯ ಜನರ ಭೀಮಾಕಾರ, ಭೀಮೋದರ, ಭೀಮಾಭಿರುಚಿ, ಭೋಜನದಲ್ಲಿ ಅವರಿಗಿದ್ದ ಭೀಮೋತ್ಸಾಹ ಇವುಗಳನ್ನೆಲ್ಲ ಬೆಕ್ಕಸ ಬೆರಗಾಗಿ ನೋಡುತ್ತಿದ್ದೆವು ನಾವು! ನಾವು ಆ ಬಲಿಷ್ಠವಾಗಿರುತ್ತಿದ್ದ ಚಪಾತಿಗಳಲ್ಲಿ ಒಂದನ್ನೆ ತಿಂದು, ಹೊಟ್ಟೆ ತುಂಬಿಹೋಗಿ, ಮುಂದೆ ಅದಕ್ಕಿಂತಲೂ ರುಚಿ ರುಚಿಯಾಗಿರುತ್ತಿದ್ದ ಉಣಿಸುಗಳನ್ನು ತಿನ್ನಲಾರದೆ ಎದುರಿಗಿದ್ದವರನ್ನು ಕರುಬಿನಿಂದ ನೋಡುತ್ತಿದ್ದರೆ, ಅವರು ಒಂದಲ್ಲ ಎರಡಲ್ಲ ಏಳೆಂಟು ಚಪಾತಿಗಳನ್ನೂ ಲೀಲಾಜಾಲವಾಗಿ ತಿಂದು, ಹಾಲು ತುಪ್ಪ ಶ್ರೀಖಂಡಗಳನ್ನು ಯಥೇಚ್ಛವಾಗಿ ಸೇವಿಸಿ, ಮತ್ತೂ ತರತರದ ಅನ್ನ ಪಾಯಸಾದಿಗಳನ್ನು ಬಡಿಸಿಕೊಂಡು ತಿನ್ನುತ್ತಿದ್ದರು! ಮತ್ತೆ, ಅವರೇನು ಊಟಕ್ಕೆ ಹೆಚ್ಚು ದುಡ್ಡ ಕೊಡುತ್ತಿರಲಿಲ್ಲ. ನಾವು ಕೊಟ್ಟಷ್ಟೆ, ಒಂದೆ ರೂಪಾಯಿ! ಬಡಕಲಾಗಿದ್ದು ತಿನ್ನಲಾರದ ಸಣಕಲು ಹೊಟ್ಟೆಯ ನಮಗೆ ಆಗುತ್ತಿದ್ದ ನಷ್ಟವನ್ನು ನೆನೆದಾಗ ನಮಗೆ ಲಭಿಸುತ್ತಿದ್ದ ಲಾಭ ಬರಿಯ ಹೊಟ್ಟೆಯ ಕಿಚ್ಚು! ಪರಿಣಾಮ: ಅವರಿಗೆ ತಿಳಿಯದಿದ್ದ ಕನ್ನಡದಲ್ಲಿ ನಾವು ಅವರ ಲೋಭ ಬುದ್ಧಿಯನ್ನೂ ಹೊಟ್ಟೆಬಾಕತನವನ್ನೂ ಗಜವರಾಹ ಗಾತ್ರವನ್ನೂ ಖಂಡಿಸುತ್ತಾ ಟೀಕಿಸುತ್ತಾ ಲೇವಡಿ ಮಾಡಿ ನಗುತ್ತಾ ಪ್ರತೀಕಾರವೆಸಗಿದೆವೆಂದು ಭಾವಿಸಿ ತೃಪ್ತರಾಗುವುದೆಷ್ಟೊ ಅಷ್ಟೆ!

ಆ ಅಧಿವೇಶನದಲ್ಲಿ ರಾಷ್ಟ್ರದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿ ಸುಪ್ರಸಿದ್ಧರಾಗಿದ್ದ ಅನೇಕ ವ್ಯಕ್ತಿಗಳು ನೆರೆದಿದ್ದರು. ಆದರೆ ನಮಗಿದ್ದುದು ಮುಖ್ಯವಾಗಿ ಒಂದೇ ಲಕ್ಷ್ಯ: ಗಾಂಧೀಜಿಯ ದರ್ಶನ! ಆದರೆ ಅದೇನು ಸುಲಭ ಸಾಧ್ಯವಾಗಿತ್ತೇ? ಆ ಜನಜಂಗುಳಿಯ ನೂಕುನುಗ್ಗಲಲ್ಲಿ? ಅಧಿವೇಶನದ ವೇದಿಕೆಯ ಮೇಲೆ ಅವರನ್ನೇನೋ ನೋಡಬಹುದಾಗಿತ್ತು. ಆದರೆ ಅದು ನಾವು ಕೊಂಡಿದ್ದ ಟಿಕೆಟ್ಟಿನ ಸ್ಥಳಕ್ಕೆ ಬಹುಬಹುದೂರವಾಗಿತ್ತು. ಅಲ್ಲಿಂದ ಗಾಂಧೀಜಿ ಸಣ್ಣದೊಂದು ಪುತ್ತಲಿಯ ಗೊಂಬೆಯಷ್ಟೆ ಆಕಾರದಲ್ಲಿ ಕಾಣಿಸುತ್ತಿದ್ದರು. ಅದಕ್ಕಾಗಿ ನಾವು ಅವರು ಅಧಿವೇಶನಕ್ಕೆ ಬರುವ ಹೊತ್ತನ್ನೂ ಅವರು ಪ್ರವೇಶಿಸುವ ಮಹಾದ್ವಾರವನ್ನೂ ಪತ್ತೆಹಚ್ಚಿ ಬಿಸಿಲಿನಲ್ಲಿ ಕಾದೆವು.

ಕಾದೆವು ಎಂದರೆ ಎರಡು ಅರ್ಥದಲ್ಲಿಯೂ: ಬಹಳ ಹೊತ್ತು ಕಾದೆವು ಎಂಬುದು ಗೌಣಾರ್ಥ. ಆದರೆ ಬಿಸಿಲಿನಲ್ಲಿ ಕಾದೆವು ಎಂದರೆ, ಕಾದು ಕೆಂಪಾದೆವು! ಅಕ್ಷರಶಃ ಮುಖಕ್ಕೆ ರಕ್ತವೇರಿ ಕೆಂಪಾದದ್ದು ಮಾತ್ರವೆ ಅಲ್ಲ. ಬಟ್ಟೆ ಬರೆ ಎಲ್ಲವೂ ಕೆಂಪು ಬಣ್ಣಕ್ಕೆ ತಿರುಗಿದುವು. ಮೈಸೂರಿನಿಂದ ಹೊರಡುವಾಗ ಬೆಳ್ಳಗೆ ಮಡಿಮಾಡಿದ್ದ ಖಾದಿ ಉಡುಪು ಧರಿಸಿ, ದಿನವೂ ಸ್ನಾನ ಮಾಡಿದ ಮೇಲೆ ಬಟ್ಟೆ ಬದಲಾಯಿಸುವುದಕ್ಕಾಗಿ ಒಂದೆರಡು ಜೊತೆ ಪಂಚೆ ಷರ್ಟುಗಳನ್ನು ಬೆಳ್ಳಗೆ ಬೆಣ್ಣೆಮಡಿ ಮಾಡಿಸಿಕೊಂಡು ಒಯ್ದಿದ್ದೆವು. ಬೆಳಗಾವಿ ತಲುಪುವಷ್ಟರಲ್ಲಿ ನಮ್ಮ ಉಡುಪು ಮುಸುರೆ ತಿಕ್ಕಿದಂತಾಗಿತ್ತು. ರೈಲಿನ ಪ್ರಯಾಣದಲ್ಲಿ ಎಂಜನ್ನಿನ ಹೊಗೆಯ ಹುಡಿ ಕೂತು ನೂಕುನುಗ್ಗಲಿನ ಬೆವರು ಹತ್ತಿ ಹಾಗಾಗುವುದರಲ್ಲಿ ಅಚ್ಚರಿಯಿಲ್ಲ ಎಂದುಕೊಂಡೆವು. ಮರುದಿನ ಬೆಳಿಗ್ಗೆ ಮಿಂದು, ಉಟ್ಟ ಬಟ್ಟೆಗಳನ್ನೆಲ್ಲ ಚೆನ್ನಾಗಿ ಒಗೆದು ಹರಡಿ, ಮೈಸೂರಿನಿಂದ ತಂದಿದ್ದ ಬಿಳಿಮಡಿಯ ಬಟ್ಟೆ ಧರಿಸಿ, ಸ್ವದೇಶೀ ವಸ್ತ್ರದ ಶ್ವೇತಾಂಬರದಿಂದ ಶೋಭಿಸುತ್ತಾ ಅಧಿವೇಶನಕ್ಕೆ ಹೋದೆವು.

ಅಧಿವೇಶನದ ವಲಯವನ್ನು ಸಮೀಪಿಸುತ್ತಿರುವಾಗಲೆ ಒಂದು ಧೂಳೀಧೂಸರವಾದ ಆಕಾಶಮಂಡಲ ಕಾಣಿಸುವುದರ ಜೊತೆಗೆ ಜನಸ್ತೋಮದ ಚಲನವಲನದಿಂದ ಹೊಮ್ಮಿದ ತುಮುಲ ಶಬ್ದಮಂಡಲವೂ ಕರ್ಣಗೋಚರವಾಯಿತು. ತುಸು ಹೊತ್ತು ನನ್ನ ಮಿತ್ರರೊಬ್ಬರು ಇದ್ದಕ್ಕಿದ್ದಂತೆ ಸಂನ್ಯಾಸಿಯಾದಂತೆ ಕಾವಿಧಾರಿಯಾಗಿದ್ದಾರೆ! ಅಚ್ಚರಿಯಿಂದ ನೋಡುತ್ತೇನೆ: ಮತ್ತೂ ಒಬ್ಬರು ಹಾಗೆಯೆ ಬಣ್ಣ ಬದಲಾಯಿಸಿದ್ದಾರೆ! ನೋಡಿಕೊಳ್ಳುತ್ತೇನೆ: ನನ್ನ ಉಡುಪೂ ಕೆಮ್ಮಣ್ಣು ಬಣ್ಣಕ್ಕೆ ತಿರುಗಿದೆ! ಕಡೆಗೆ ಗೊತ್ತಾಯಿತು, ಅಲ್ಲಿನ ಮಣ್ಣಿನ ಬಣ್ಣವೇ ಕೆಂಪು ಎಂದು; ಅಲ್ಲಿ ಬಿಳಿಬಟ್ಟೆ ಹಾಕಿಕೊಂಡು ಶುಚಿಯಾಗಿ ಕಾಣುವುದೇ ಅಸಾಧ್ಯ ಎಂದು. ಒಂದೆರಡು ದಿನವೇನೋ ಬೆಳ್ಳಗೆ ಮಡಿಯಾಗಿರಲು ಪ್ರಯತ್ನಪಟ್ಟೆವು. ಏನೇನೋ ಪ್ರಯೋಜನವಾಗಲಿಲ್ಲ. ಶುಚಿತ್ವವನ್ನೇ ಕೈಬಿಟ್ಟೆವು, ಮೈಸೂರಿಗೆ ಮತ್ತೆ ಬರುವವರೆಗೆ!

ಮೈಗೆಂಪಾಗಿ ಬಟ್ಟೆಗೆಂಪಾಗಿ ಒಂದು ಮಹಾದ್ವಾರದೆಡೆ ನೂಕು ನುಗ್ಗಲಿನಲ್ಲಿ ನಿಂತು ನೋಡುತ್ತಿದ್ದೆವು, ನೆರೆದ ಜಾತ್ರೆಯ ಜನಜಂಗುಳಿಯ ನಡುವೆ ಆನೆಯೊಂದು ನಡೆದು ಬರುತ್ತಿದ್ದರೆ ಹೇಗೆ ಮೇಲೆದ್ದು ಕಾಣಿಸುವುದೊ ಹಾಗೆ ಜನಸಮುದ್ರದಲ್ಲಿ ತೇಲಿ ಬರುವ ಹಡಗುಗಳಂತೆ ಇಬ್ಬರು ಬೃಹದ್ ವ್ಯಕ್ತಿಗಳು ಬರುತ್ತಿದ್ದುದು ಕಾಣಿಸಿತು. ಗುಸುಗುಸು ಹಬ್ಬಿತು, ಗಾಂಧೀಜಿ ಬರುತ್ತಿದ್ದಾರೆ ಎಂದು. ಕತ್ತು ನಿಕ್ಕುಳಿಸಿ ನೋಡಿದೆ. ಗಾಂಧೀಜಿ ಎಲ್ಲಿ?

ಪಕ್ಕದಲ್ಲಿದ್ದವರು ಹೇಳಿದರು: ‘ಮೇಲೆದ್ದು ಕಾಣಿಸುತ್ತಾ ಬರುತ್ತಿದ್ದಾರಲ್ಲಾ ಅವರಿಬ್ಬರು ಆಲಿ ಸಹೋದರರು ಕಣ್ರೀ! ಅವರ ಮಧ್ಯೆ ನಡೆದು ಬರುತ್ತಿದ್ದಾರೆ ಗಾಂಧೀಜಿ.’

ಮಹಾತಾಮಸ ಮತ್ತು ಮಹಾರಾಜಸಗಳ ಮಧ್ಯೆ ನಡೆದುಬರುವ ಮಹಾಸಾತ್ವಿಕದಂತೆ ಕಾಣಿಸಿಕೊಂಡರು ಗಾಂಧೀಜಿ. ಮೌಲಾನಾ ಮಹಮ್ಮದಾಲಿ ಮತ್ತು ಮೌಲಾನಾ ಷೌಕತಾಲಿ ಇಬ್ಬರೂ ಪ್ರಾಚೀನ ಪೌರಾಣಿಕ ಅಸುರರಂತೆ ದೈತ್ಯ ಗಾತ್ರರಾಗಿದ್ದರು. ಅಸುರೀ ಸ್ವಭಾವಕ್ಕೆ ತಕ್ಕಂತೆ ಅವರ ಉಡುಪೂ ವಿರಾಜಿಸುತ್ತಿತ್ತು. ಚಂದ್ರ-ನಕ್ಷತ್ರ ಸಂಕೇತದಿಂದ ಶೋಭಿಸುತ್ತಿತ್ತು. ಅವರ ತಲೆಯುಡೆ. ಹೇರೊಡಲನ್ನು ಸುತ್ತಿತ್ತು ನೇಲುತ್ತಾ ಜೋಲುತ್ತಾ ನೆಲ ಗುಡಿಸುವಂತಿದ್ದ ಅವರ ನಿಲುವಂಗಿ. ಅವರ ಹೊಟ್ಟೆಯ ಸುತ್ತಳತೆಯಲ್ಲಿಯೆ ನಾಲ್ಕಾರು ಗಾಂಧಿಗಳು ಆಶ್ರಯ ಪಡೆಯಬಹುದಾಗಿತ್ತೇನೋ!

ತದ್ವಿರುದ್ಧವಾಗಿತ್ತು ಅಣುರೂಪಿ ಗಾಂಧೀಜಿಯ ಆಕೃತಿ, ಅವರಿಬ್ಬರ ನಡುವೆ. ನಮ್ಮ ಗೌರವಸಮಸ್ತವೂ ಸಾಷ್ಟಾಂಗವೆರಗಿತ್ತು ಅವರ ಪದತಲದಲ್ಲಿ: ‘ವಂದೇ ಮಾತರಂ! ಭಾರತ ಮಾತಾಕೀ ಜೈ! ಮಹಾತ್ಮಾ ಗಾಂಧೀ ಕೀ ಜೈ!’ ಮೊದಲಾದ ಘೋಷಗಳು ಕಿವಿ ಬಿರಿಯುವಂತೆ ಗಗನದೇಶವನ್ನೆಲ್ಲ ತುಂಬಿದುವು. ಆ ಉತ್ಸಾಹ ಸಾಗರಕ್ಕೆ ನನ್ನ ಕೀಚು ಕೊರಳೂ ತನ್ನ ದನಿಹನಿಯ ನೈವೇದ್ಯವನ್ನು ನೀಡಿ ಧನ್ಯವಾಗಿತ್ತು!

ಮೂರು ನಾಲ್ಕು ದಿನಗಳ ಅಧಿವೇಶನದಲ್ಲಿ ನಾವು ಪ್ರೇಕ್ಷಕ ಭಾಗಿಗಳಾಗಿದ್ದೆವು. ನನ್ನ ನೆನಪಿನಲ್ಲಿ ಆ ಸ್ವಾರಸ್ಯದ ವಿವರಗಳಾವುವೂ ಇಲ್ಲ. ಆದರೆ ಸ್ವಾತಂತ್ರ್ಯದೀಕ್ಷೆಯನ್ನು ತೊಟ್ಟು ಸ್ವಾತಂತ್ರ್ಯ ಸಂಗ್ರಾಮಕ್ಕೆ ಧುಮ್ಮಿಕ್ಕುವ ಭಾರತೀಯ ಸಮಷ್ಟಿ ಚೈತನ್ಯದ ಅಗ್ನಿಸ್ಪರ್ಶ ನನ್ನ ಕವಿಚೇತನಕ್ಕೂ ತಗುಲಿತ್ತು. ತತ್ಕಾಲದಲ್ಲಿ ರಚಿಸಿದ ಕೆಲವು ಇಂಗ್ಲಿಷ್ ಕವನಗಳೂ, ತರುವಾಯ ರಚಿತವಾಗಿ ಸುಪ್ರಸಿದ್ಧವಾಗಿರುವ ಕನ್ನಡ ಕವನಗಳೂ ಆ ದೀಕ್ಷೆಗೆ ಸಾಕ್ಷಿ ನಿಂತಿವೆ.

(ಅಕರ: ಕುವೆಂಪು – ನೆನಪಿನ ದೋಣಿಯಲ್ಲಿ)

ಮಲಯಾಳಂ ಸಾಹಿತ್ಯ ದಿಗ್ಗಜ ಎಂ.ಟಿ. ವಾಸುದೇವನ್ ನಾಯರ್ (91) ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...