ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ಮಂಗಳವಾರ ಬಾಂಬ್ ಬೆದರಿಕೆಯ ಇ-ಮೇಲ್ ಸ್ವೀಕರಿಸಿದ್ದು, ಅದರಲ್ಲಿ ಆರ್ಬಿಐ, ಹೆಚ್ಡಿಎಫ್ಸಿ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕ್ ಕಚೇರಿಗಳ ಮೇಲೆ ದಾಳಿ ನಡೆಸುವುದಾಗಿ ಹೇಳಲಾಗಿತ್ತು. ಬೆದರಿಕೆ ಮೇಲ್ ಕಳುಹಿಸಿದವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ರಾಜೀನಾಮೆಗೆ ಒತ್ತಾಯಿಸಿದ್ದಾರೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಮಧ್ಯಾಹ್ನ 1:30ಕ್ಕೆ ಮುಂಬೈನ 11 ಸ್ಥಳಗಳಲ್ಲಿ ಒಟ್ಟು 11 ಬಾಂಬ್ ದಾಳಿಗಳು ಸಂಭವಿಸಲಿವೆ ಎಂದು ಇ- ಮೇಲ್ ಮೂಲಕ ಬೆದರಿಕೆ ಹಾಕಲಾಗಿತ್ತು. ತನಿಖೆಗಾಗಿ ಮೇಲ್ನಲ್ಲಿ ಉಲ್ಲೇಖಿಸಲಾದ ಎಲ್ಲಾ ಸ್ಥಳಗಳಿಗೆ ಹೋಗಿದ್ದೇವೆ. ಆದರೆ, ಏನೂ ಕಂಡುಬಂದಿಲ್ಲ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.
ಇ-ಮೇಲ್ ವಿಳಾಸವು ‘ಖಿಲಾಫತ್ ಇಂಡಿಯಾ’ ಎಂಬ ಬಳಕೆದಾರ ಹೆಸರನ್ನು ಹೊಂದಿತ್ತು. ಮುಂಬೈನ ಎಂಆರ್ಎ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ನವೆಂಬರ್ 2023 ರಲ್ಲಿ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಲಾಗಿತ್ತು. ಅಧಿಕಾರಿಗಳು ನಮ್ಮ ಬೇಡಿಕೆಗಳನ್ನುಈಡೇರಿಸದಿದ್ದಲ್ಲಿ ವಿಮಾನ ನಿಲ್ದಾಣದ ಟರ್ಮಿನಲ್ 2 ಅನ್ನು ಸ್ಫೋಟಿಸುವುದಾಗಿ ಹೇಳಲಾಗಿತ್ತು.
ಇದನ್ನೂ ಓದಿ : ಯಡಿಯೂರಪ್ಪ ಸಿಎಂ ಆಗಿದ್ದಾಗ ಕೋವಿಡ್ ಹೆಸರಿನಲ್ಲಿ ₹40 ಸಾವಿರ ಕೋಟಿ ಅವ್ಯವಹಾರ: ಶಾಸಕ ಯತ್ನಾಳ್ ಗಂಭೀರ ಆರೋಪ