ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಮಾಣಿಕ್ಪುರದಲ್ಲಿ ಮೂವರು ಪುರುಷರಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಅಪ್ರಾಪ್ತೆ, 15 ವರ್ಷದ ದಲಿತ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಚಿತ್ರಕೂಟ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅಂಕಿತ್ ಮಿತ್ತಲ್ ಘಟನೆಯನ್ನು ಖಚಿತಪಡಿಸಿ, ಅಪ್ರಾಪ್ತೆ ಮಂಗಳವಾರ ಮಾಣಿಕ್ಪುರದಲ್ಲಿ ಪ್ರದೇಶದ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ’ಅಕ್ಟೋಬರ್ 8 ರಂದು ಅರಣ್ಯ ಪ್ರದೇಶದಲ್ಲಿ ಮೂವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆಕೆಯ ಕುಟುಂಬ ಸದಸ್ಯರು ಆರೋಪಿಸಿದ್ದಾರೆ’ ಎಂದು ಎಸ್ಪಿ ಅಂಕಿತ್ ಮಿತ್ತಲ್ ತಿಳಿಸಿದ್ದಾರೆ.
ಸಂತ್ರಸ್ತ ಬಾಲಕಿಯ ಕುಟುಂಬ ಸದಸ್ಯರ ದೂರಿನ ಆಧಾರದ ಮೇಲೆ, ಗ್ರಾಮದ ಮಾಜಿ ಮುಖಂಡರ ಮಗ ಕಿಶನ್ ಉಪಾಧ್ಯಾಯ, ಆಶಿಶ್ ಮತ್ತು ಸತೀಶ್ ಎಂಬುವರ ವಿರುದ್ಧ ಭಾರತೀಯ ದಂಡ ಸಂಹಿತೆ ಪ್ರಕಾರ ಎಸ್.ಸಿ/ಎಸ್.ಟಿ ದೌರ್ಜನ್ಯ ತಡೆ ಕಾಯ್ದೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ ) ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಮಿತ್ತಲ್ ತಿಳಿಸಿದ್ದಾರೆ.
ಇದನ್ನೂ ಓದಿ: ಉತ್ತರ ಪ್ರದೇಶ: ಮೂವರು ಅಪ್ರಾಪ್ತ ದಲಿತ ಸಹೋದರಿಯರ ಮೇಲೆ ಕೆಮಿಕಲ್ ದಾಳಿ!
ಮಗಳ ಮೇಲೆ ಅತ್ಯಾಚಾರ ಮಾಡಿದ ನಂತರ ಆರೋಪಿಗಳು ಆಕೆಯ ಕೈ ಕಾಲುಗಳನ್ನು ಕಟ್ಟಿದ್ದರು. ಪೊಲೀಸರೇ ಮಗಳನ್ನು ಮನೆಗೆ ಕರೆತಂದರು. ಆದರೆ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲಿಲ್ಲ. ದೂರು ದಾಖಲಿಸದ ಹಿನ್ನೆಲೆ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸಂತ್ರಸ್ತೆಯ ತಂದೆ ಆರೋಪಿಸಿದ್ದಾರೆ.
ಆದರೆ ಆರೋಪ ನಿರಾಕರಿಸಿರುವ ಪೊಲೀಸರು, ಸಂತ್ರಸ್ತ ಬಾಲಕಿ, ಬಾಲಕಿಯ ಕುಟುಂಬದವರು ಯಾರು ಎಫ್ಐಆರ್ ದಾಖಲಿಸಲು ಯಾವುದೇ ಅರ್ಜಿಯನ್ನು ನೀಡಿಲ್ಲ ಎಂದು ಹೇಳಿದ್ದಾರೆ.
ಮರಣೋತ್ತರ ಪರೀಕ್ಷೆಯು ಅತ್ಯಾಚಾರವನ್ನು ದೃಢಿಕರಿಸಿಲ್ಲ. ಮಾದರಿಗಳನ್ನು ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್ಎಸ್ಎಲ್) ಕಳುಹಿಸಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ. ಗ್ರಾಮದಲ್ಲಿ ಬುಧವಾರ ಬಾಲಕಿಯ ಅಂತ್ಯಕ್ರಿಯೆ ನಡೆಯಲಿದ್ದು, ಸೂಕ್ತ ಭದ್ರತಾ ವ್ಯವಸ್ಥೆ ಮಾಡಲಾಗಿದೆ.
ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಾಲ್ವರು ಮೇಲ್ಜಾತಿಯ ಪುರುಷರು 19 ವರ್ಷದ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯ ಸಾವಿಗೆ ಕಾರಣರಾದ ಘಟನೆ ಇನ್ನು ಜನರ ಮನಸ್ಸಿನಲ್ಲಿ ಜೀವಂತವಾಗಿರುವಾಗಲೇ ಉತ್ತರ ಪ್ರದೇಶದಲ್ಲಿ ಮತ್ತೆ ಮತ್ತೆ ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿವೆ.
ನಿನ್ನೆಯಷ್ಟೇ ಮೂವರು ಅಪ್ರಾಪ್ತ ಬಾಲಕಿಯರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ರಾಸಾಯನಿಕ ಸುರಿದು ಓಡಿಹೋಗಿದ್ದ. ಮೂವರು ಬಾಲಕಿಯರು ಆಸ್ಪತ್ರೆಯಲ್ಲಿ ಸುಟ್ಟಗಾಯಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರತಿ ದಿನ ಒಂದಲ್ಲ ಒಂದು ಘಟನೆಗಳು ರಾಜ್ಯದಲ್ಲಿ ವರದಿಯಾಗುತ್ತಲೇ ಇವೆ. ಆದರೂ ರಾಜ್ಯ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ ಎಂದು ವಿಪಕ್ಷಗಳು, ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ.
ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:
ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ
ಕರ್ನಾಟಕ ಆರೋಗ್ಯ ಸಹಾಯವಾಣಿ – 104