ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಫುಲ್ಬರಿ ಪ್ರದೇಶದಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 18 ಜನರು ಸಾವನ್ನಪ್ಪಿದ್ದು, 5 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶನಿವಾರ ರಾತ್ರಿ ಉತ್ತರ 24 ಪರಗಣದ ಬಗ್ಡಾದಿಂದ ಮೃತದೇಹದ ಅಂತ್ಯಸಂಸ್ಕಾರ ಮಾಡಲು ನಬದೀಪ್ ಸ್ಮಶಾನಕ್ಕೆ ತೆರಳುತ್ತಿದ್ದ ಮೆಟಾಡೋರ್ ವ್ಯಾನ್ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಲ್ಲುಗಳನ್ನು ತುಂಬಿದ ಲಾರಿಯೊಂದಕ್ಕೆ ಡಿಕ್ಕಿ ಹೊಡೆದಿದ್ದು, 18 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಹಂಸ್ಖಾಲಿ ಪೊಲೀಸ್ ಠಾಣೆ ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಗೊಂಡವರನ್ನು ಶಕ್ತಿನಗರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ದಟ್ಟವಾದ ಮಂಜು ಮತ್ತು ವಾಹನದ ಅತಿವೇಗದಿಂದ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ.
ಇದನ್ನೂ ಓದಿ: ರಾಜಸ್ಥಾನ: ಅಪಘಾತಕ್ಕೀಡಾದವರಿಗೆ ಸಹಾಯ ಮಾಡಿದರೆ 5000 ರೂ ಬಹುಮಾನ
ಘಟನೆಗೆ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನ್ಖರ್ ಸಂತಾಪ ಸೂಚಿಸಿದ್ದಾರೆ.
ನಾಡಿಯಾ ಜಿಲ್ಲೆಯಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್ಗೆ ವ್ಯಾನ್ ಡಿಕ್ಕಿ ಹೊಡೆದು 18 ಜನರು ಸಾವನ್ನಪ್ಪಿದ್ದಾರೆ. ಐವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದ್ದು, ಅವರ ಕುಟುಂಬಕಕೆ ಸಂತಾಪ ಸೂಚಿಸುತ್ತೇನೆ ಎಂದಿರುವ ರಾಜ್ಯಪಾಲರು, ಮೃತರು ಮತ್ತು ಗಾಯಾಳುಗಳ ಕುಟುಂಬಕ್ಕೆ ಎಲ್ಲಾ ರೀತಿಯ ಸೌಲಭ್ಯ ಒದಗಿಸಿ, ರಸ್ತೆ ಸುರಕ್ಷತೆ ಬಗ್ಗೆ ಗಮನ ಹರಿಸಿ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಸೂಚಿಸಿದ್ದಾರೆ.