ದಲಿತ ಮಹಿಳೆಯ ಬರ್ಬರ ಹತ್ಯೆ ಪ್ರಕರಣದಲ್ಲಿ 21 ಮಂದಿ ಅಪರಾಧಿಗಳು ಎಂದು ತುಮಕೂರಿನ ಜಿಲ್ಲಾ ಮೂರನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಬುಧವಾರ (ನ.20) ಮಹತ್ವದ ತೀರ್ಪು ನೀಡಿದೆ.
ಪ್ರಕರಣದ ಒಟ್ಟು 27 ಆರೋಪಿಗಳಲ್ಲಿ 6 ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 21 ಮಂದಿ ಅಪರಾಧಿಗಳು ಎಂದು ನ್ಯಾಯಾಲಯ ಘೋಷಿಸಿದೆ. ಶಿಕ್ಷೆಯ ಪ್ರಮಾಣ ಇಂದು (ನ.21) ಪ್ರಕಟಿಸಲಿದೆ ಎಂದು ತಿಳಿದು ಬಂದಿದೆ.
ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕು ಹಂದನಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಲಪುರ ಗ್ರಾಮದಲ್ಲಿ 2010ರಲ್ಲಿ ದಲಿತ ಸಮುದಾಯದ ಹೊನ್ನಮ್ಮ ಎಂಬವರ ಕೊಲೆ ನಡೆದಿತ್ತು. ಸುದೀರ್ಘ ಒಂದೂವರೆ ದಶಕಗಳ ಕಾಲ ಈ ಪ್ರಕರಣದ ತನಿಖೆ, ವಿಚಾರಣೆ ನಡೆದು, ಇದೀಗ ಅಪರಾಧ ಸಾಬೀತಾಗಿದೆ ಎಂದು ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ.ಎಸ್ ಜ್ಯೋತಿ ಹೇಳಿದ್ದಾಗಿ ವರದಿಯಾಗಿದೆ.
ಗೋಪಾಲಪುರದ ಹೊನ್ನಮ್ಮ ಅವರು ಡಾಬಾ ನಡೆಸುತ್ತಿದ್ದರು. ಗ್ರಾಮದಲ್ಲಿ ದೇವಸ್ಥಾನ ನಿರ್ಮಿಸಲು ಮರದ ತುಂಡುಗಳನ್ನು ಸಂಗ್ರಹಿಸಿ ಇಟ್ಟಿದ್ದರು. ಅವುಗಳನ್ನು ಗ್ರಾಮದ ಕೆಲವರು ಕಳವು ಮಾಡಿದ್ದರು. ಈ ಸಂಬಂಧ ಹೊನ್ನಮ್ಮ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದರಿಂದಾಗಿ ಗ್ರಾಮದ ಜನರು ಹಾಗೂ ಹೊನ್ನಮ್ಮ ನಡುವೆ ದ್ವೇಷ ಉಂಟಾಗಿತ್ತು. ಸದಾ ಒಂದಲ್ಲೊಂದು ರೀತಿಯ ಜಗಳ ನಡೆಯುತ್ತಿತ್ತು. ಹೊನ್ನಮ್ಮ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವುದು ಮುಂದುವರೆದಿತ್ತು. ಕೊನೆಗೆ ಹೊನ್ನಮ್ಮ ಅವರನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.
2010ರಲ್ಲಿ ನಡೆದ ಈ ಕೊಲೆ ಸಂಬಂಧ ಭಾರತೀಯ ದಂಡ ಸಂಹಿತೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈಗ 2014ರಲ್ಲಿ ತೀರ್ಪು ಪ್ರಕಟಗೊಂಡಿದೆ.
ಪ್ರಕರಣ ಆರೋಪಿಗಳಾಗಿದ್ದ ರಂಗನಾಥ, ಮಂಜುಳ, ತಿಮ್ಮರಾಜು, ರಾಜು (ದೇವರಾಜು), ಶ್ರೀನಿವಾಸ್, ಆನಂದ (ಆನಂದಸ್ವಾಮಿ), ವೆಂಕಟಸ್ವಾಮಿ, ವೆಂಕಟೇಶ್, ನಾಗರಾಜು, ರಾಜಪ್ಪ, ಮೀಸೆ ಹನುಮಂತಯ್ಯ, ಗಂಗಾಧರ (ಗಂಗಣ್ಣ), ನಂಜುಂಡಯ್ಯ (ಪರಿಶಿಷ್ಟ ಜಾತಿ), ಸತ್ಯಪ್ಪ-ಸತೀಶ (ಪರಿಶಿಷ್ಟ ಜಾತಿ), ಚಂದ್ರಶೇಖರ (ಚಂದ್ರಯ್ಯ), ರಂಗಯ್ಯ (ರಾಮಯ್ಯ), ಉಮೇಶ್, ಚನ್ನಮ್ಮ, ಮಂಜಣ್ಣ, ಮಂಜು, ಸ್ವಾಮಿ (ಮೋಹನ್ ಕುಮಾರ್) ಅವರನ್ನು ಅಪರಾಧಿಗಳೆಂದು ಘೋಷಿಸಿದ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಪ್ರಕರಣ ಇತರ 6 ಆರೋಪಿಗಳಾಗಿದ್ದ ಹನುಮಂತಯ್ಯ (ಪರಿಶಿಷ್ಟ ಜಾತಿ), ವೆಂಕಟೇಶ್, ರಾಮಯ್ಯ ,ರಾಮಯ್ಯ, ದಾಸಪ್ಪ, ಬುಳ್ಳೆ ಹನುಮಂತಯ್ಯ ಈಗಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮರಕುಂಬಿಯಲ್ಲಿ 2014ರಲ್ಲಿ ನಡೆದಿದ್ದ ದಲಿತ ದೌರ್ಜನ್ಯ ಪ್ರಕರಣದಲ್ಲಿ 98 ಮಂದಿಯನ್ನು ಜಿಲ್ಲಾ ನ್ಯಾಯಾಲಯ ಅಪರಾಧಿಗಳು ಎಂದು ಘೋಷಿಸಿ, ಜೀವಾವಧಿ ಶಿಕ್ಷೆ ವಿಧಿಸಿದ ಬೆನ್ನಲ್ಲೇ, ತುಮಕೂರು ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.
ಇದನ್ನೂ ಓದಿ : ಐಐಎಂ ಬೆಂಗಳೂರು | ಜಾತಿ ಆಧಾರಿತ ತಾರತಮ್ಯದ ವಿರುದ್ಧ ಪ್ರತಿಭಟನೆ


