ಬಾವಿಗೆ ಬಿದ್ದ ಬಾಲಕನನ್ನು ರಕ್ಷಿಸುವ ಸಂದರ್ಭದಲ್ಲಿ ಮಣ್ಣು ಕುಸಿದು ಬಾವಿ ಬಳಿ ನಿಂತಿದ್ದ 30 ಕ್ಕೂ ಹೆಚ್ಚು ಗ್ರಾಮಸ್ಥರು ಬಾವಿಗೆ ಬಿದ್ದು ಮೂವರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶದ ವಿದಿಶಾ ಜಿಲ್ಲೆಯ ಗಂಜ್ ಬಸೋದಾದಲ್ಲಿ ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಸುಮಾರು 30 ಗ್ರಾಮಸ್ಥರು ಬಾವಿಗೆ ಬಿದ್ದು ಮೂವರು ಮೃತಪಟ್ಟಿದ್ದಾರೆ. ಹತ್ತೊಂಬತ್ತು ಜನರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಗಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
50 ಅಡಿ ಆಳದ ಬಾವಿಗೆ ಬಿದ್ದ ಬಾಲಕನನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದ ವೇಳೆ, ರಕ್ಷಣಾ ಕಾರ್ಯಾಚರಣೆ ನೋಡಲು ಅಧಿಕ ಸಂಖ್ಯೆಯಲ್ಲಿ ಜನರು ಬಾವಿಯ ಸುತ್ತಲು ನಿಂತುಕೊಂಡಿದ್ದರು. ಈ ವೇಳೆ ಬಾವಿ ಪ್ಯಾರಪೆಟ್ ಗೋಡೆ ಕುಸಿದ ಪರಿಣಾಮ ಸುಮಾರು 30 ಗ್ರಾಮಸ್ಥರು ಏಕಾಏಕಿ ಬಾವಿಗೆ ಬಿದ್ದಿದ್ದಾರೆ. ಬಾವಿಯಲ್ಲಿ ಸುಮಾರು 20 ಅಡಿಗಳಷ್ಟು ನೀರಿದೆ.
ಇದನ್ನೂ ಓದಿ: ತೆಲಂಗಾಣ: ಸೆಲ್ಫಿ ತೆಗೆಯಲು ಹೋಗಿ ಕೆರೆಗೆ ಬಿದ್ದು ಮೂವರು ಅಪ್ರಾಪ್ತೆಯರ ದುರ್ಮರಣ
ಘಟನೆ ಕುರಿತು ಮಾತನಾಡಿರುವ ಮುಖ್ಯಮಂತ್ರಿ ಶಿವರಾಜ್ ಚೌಹಾನ್ ಅವರು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿದ್ದೇನೆ ಎಂದಿದ್ದಾರೆ.
“ಘಟನಾ ಸ್ಥಳದಲ್ಲಿರುವ ಅಧಿಕಾರಿಗಳೊಂದಿಗೆ ನಾನು ನಿರಂತರವಾಗಿ ಸಂಪರ್ಕದಲ್ಲಿದ್ದೇನೆ. ರಕ್ಷಣಾ ಕಾರ್ಯಾಚರಣೆಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇನೆ. ಬಾವಿಗೆ ಬಿದ್ದಿರುವ ಜನರನ್ನು ರಕ್ಷಿಸುವಲ್ಲಿ ರಕ್ಷಣಾ ತಂಡಗಳು ತೊಡಗಿವೆ “ಎಂದು ರಾತ್ರಿಯಿಡೀ ಸ್ಥಳದಲ್ಲಿದ್ದ ವಿದಿಶಾ ಜಿಲ್ಲಾ ಉಸ್ತುವಾರಿ ಸಚಿವ ವಿಶ್ವಸ್ ಸಾರಂಗ್ ಹೇಳಿದ್ದಾರೆ.
ಘಟನೆಯಲ್ಲಿ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ 50,000 ಪರಿಹಾರ ನೀಡಿ, ಉಚಿತ ಚಿಕಿತ್ಸಾ ಸೌಲಭ್ಯ ನೀಡಲಾಗುವುದು ಎಂದು ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ಘೋಷಿಸಿದ್ದಾರೆ.
ಇದನ್ನೂ ಓದಿ: ಬಂಗಾಳ ಚುನಾವಣೋತ್ತರ ಹಿಂಸಾಚಾರ: ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಿದ ಮಾನವ ಹಕ್ಕುಗಳ ಆಯೋಗ