Homeಕರ್ನಾಟಕ8 ತಿಂಗಳ ಅವಧಿಯ ಬೊಮ್ಮಾಯಿ ಆಡಳಿತದಲ್ಲಿ ಕರ್ನಾಟಕ ಕಂಡ 7 ಕೋಮುದ್ವೇಷ ಪ್ರಕರಣಗಳು

8 ತಿಂಗಳ ಅವಧಿಯ ಬೊಮ್ಮಾಯಿ ಆಡಳಿತದಲ್ಲಿ ಕರ್ನಾಟಕ ಕಂಡ 7 ಕೋಮುದ್ವೇಷ ಪ್ರಕರಣಗಳು

ಕರ್ನಾಟಕದಲ್ಲಿ ಬಸವರಾಜ ಬೊಮ್ಮಾಯಿಯವರು ಅಧಿಕಾರಕ್ಕೆ ಬಂದ ಬಳಿಕ ರಾಜ್ಯ ಕಂಡ ಪ್ರಮುಖ ಏಳು ಕೋಮುವಾದಿ ಪ್ರಕರಣಗಳಿವು...

- Advertisement -
- Advertisement -

ಬಿ.ಎಸ್ ಯಡಿಯೂರಪ್ಪನವರ ರಾಜೀನಾಮೆ ನಂತರ ಜುಲೈ 28, 2021ರಂದು ಬಸವರಾಜ ಬೊಮ್ಮಾಯಿಯವರು ಪ್ರಮಾಣ ವಚನ ಸ್ವೀಕರಿಸಿ ಕರ್ನಾಟಕ ರಾಜ್ಯದ 23ನೇ ಮುಖ್ಯಮಂತ್ರಿಯಾದರು. ಆಗ ಸಮಾಜವಾದಿ ಹಿನ್ನಲೆಯ ಬೊಮ್ಮಾಯಿಯವರು ಯಡಿಯೂರಪ್ಪನವರ ಮತ್ತೊಂದು ಮುಖವೇ ಹೊರತು, ನಿಜವಾದ ಸಿಎಂ ಯಡಿಯೂರಪ್ಪನವರೇ ಎಂಬ ವಿಶ್ಲೇಷಣೆಗಳು ಬಂದವು.‌

ಬೊಮ್ಮಾಯಿಯವರ ಎಂಟು ತಿಂಗಳ ಅಧಿಕಾರವಧಿಯನ್ನು ಹಿಂತಿರುಗಿ ನೋಡಿದರೆ, “ಯಡಿಯೂರಪ್ಪನವರೇ ಪರವಾಗಿರಲಿಲ್ಲ ಎನ್ನುವಂತೆ ಕನ್ನಡಿಗರು ಹೇಳುವಂತಾಗಿರುವುದು ಬೊಮ್ಮಾಯಿಯವರ ನಿಜವಾದ ಸಾಧನೆ” ಎನ್ನದೆ ವಿಧಿಯಿಲ್ಲ.‌ ಈ ಎಂಟು ತಿಂಗಳ ಅವಧಿಯಲ್ಲಿ ಬೊಮ್ಮಾಯಿಯವರ ಆಡಳಿತವನ್ನು ನೋಡುತ್ತಿದ್ದರೆ, ಕರ್ನಾಟಕ ರಾಜ್ಯ ಜೂನಿಯರ್ ಉತ್ತರ ಪ್ರದೇಶದಂತೆ ಭಾಸವಾಗುತ್ತಿದೆ. ಮತೀಯ ರಾಜಕಾರಣ ಎಲ್ಲೆ ಮೀರಿದೆ. ಬೊಮ್ಮಾಯಿಯವರು ಯಾರೂ ಊಹಿಸಲಾಗಷ್ಟು ಕೋಮು ರಾಜಕಾರಣ ಮಾಡುತ್ತಿರುವುದು‌ ಢಾಳಾಗಿ ಕಾಣುತ್ತಿದೆ.‌ “ನಮಗಿಂತ ಹೆಚ್ಚು ಬೊಮ್ಮಾಯಿ RSS ಆಗಿ ಬದಲಾಗಿದ್ದಾರೆ” ಎಂದು ಬಿಜೆಪಿಯ ನಾಯಕ, ಸಚಿವ ಆರ್.ಅಶೋಕ್ ಅವರೇ ಸದನದಲ್ಲಿ ಹೇಳಿದ್ದರು. ಅಂದರೆ ಬೊಮ್ಮಾಯಿಯವರು ತಮ್ಮ ಕುರ್ಚಿ ಉಳಿಸಿಕೊಳ್ಳುವುದಕ್ಕಾಗಿ ರಾಜ್ಯವನ್ನು ಕೋಮು ದಳ್ಳುರಿಗೆ ತಳ್ಳುತ್ತಿದ್ದಾರೆ ಎಂದು ಪ್ರಜ್ಞಾವಂತರು ಆರೋಪಿಸುತ್ತಿದ್ದಾರೆ.

ಬೊಮ್ಮಾಯಿಯವರು ಅಧಿಕಾರಕ್ಕೆ ಬಂದ ಮೇಲೆ ಮತೀಯವಾದಿ ಗೂಂಡಾಗಿರಿಗಳು ಎಲ್ಲೆ ಮೀರಿವೆ. ಕ್ರಿಯೆಗೆ ಪ್ರತಿಕ್ರಿಯೆ ಇದ್ದೆ ಇರುತ್ತದೆ ಎಂದು ಹೇಳಿಕೆ ನೀಡುವ ಮೂಲಕ ಬೊಮ್ಮಾಯಿಯವರು ಅದಕ್ಕೆ ಸಮರ್ಥನೆ ನೀಡಿದ್ದರು. ಆದಾದ ಈ ಎಂಟು ತಿಂಗಳ ಅವಧಿಯಲ್ಲಿ ರಾಜ್ಯ ಕ್ರಮಿಸಿರುವ ಹಾದಿಯನ್ನು ಅವಲೋಕಿಸಿದರೆ ಸಾಕು ನಾವು ಯಾವ ದಿಕ್ಕಿನಲ್ಲಿ‌ ಸಾಗುತ್ತಿದ್ದೇವೆ ಎಂಬುದು ಸ್ಪಷ್ಟವಾಗುತ್ತದೆ. ಅವುಗಳ ಪಟ್ಟಿ ಇಲ್ಲಿದೆ.

1. ಮತೀಯ ಗೂಂಡಾಗಿರಿಯ ಸಮರ್ಥನೆ

ಕರಾವಳಿ ಹಾಗೂ ರಾಜ್ಯದ ವಿವಿಧ ಭಾಗಗಳಲ್ಲಿ ಮತೀಯ ಗೂಂಡಾಗಿರಿ (ಮಾರಲ್ ಪೊಲೀಸಿಂಗ್) ಹೆಚ್ಚಾಗುತ್ತಿರುವಾಗ ರಾಜ್ಯದ ಸಿಎಂ ಅವುಗಳಿಗೆ ಕಡಿವಾಣ ಹಾಕಲು‌ ಯತ್ನಿಸಬೇಕಿತ್ತು.‌ ಆದರೆ ಅವರು ಮತೀಯ ಗೂಂಡಾಗಿರಿಯನ್ನು ಸಮರ್ಥಿಸಿ ಆತಂಕ ಮೂಡಿಸಿದರು.‌ “ನೈತಿಕತೆ ಇರಬೇಕು.‌ ಕ್ರಿಯೆಗೆ ಪ್ರತಿಕ್ರಿಯೆ ಇರುತ್ತದೆ” ಎಂದು ಹೇಳುವ ಮೂಲಕ ಮತೀಯ ಗೂಂಡಾಗಿರಿಗೆ ಒಪ್ಪಿಗೆಯ ಮುದ್ರೆಯೊತ್ತಿದರು.‌ ಬೊಮ್ಮಾಯಿ ಹೇಳಿಕೆಯನ್ನು ಸಂಘಪರಿವಾರದ ಮುಖಂಡರು ಪುನರುಚ್ಚರಿಸಿದರು. ಅಲ್ಲಿಂದ ಶುರುವಾದ ಮತಾಂಧತೆಯ ನಾಗಾಲೋಟ ಮುಂದುವರಿಯುತ್ತಲೇ ಇದೆ. ಈಗ ಟಾಪ್ ಗೇರ್ ನಲ್ಲಿ ಚಲಿಸುತ್ತಿದೆ.

ಬೆಂಗಳೂರಿನಲ್ಲಿ ಹಿಂದೂ ಹುಡುಗನೊಬ್ಬ ತನ್ನ ಮುಸ್ಲಿಂ ಸಹೋದ್ಯೋಗಿಗೆ ಬೈಕ್‌ನಲ್ಲಿ ಮನೆಗೆ ಡ್ರಾಪ್ ಕೊಡುತ್ತಿದ್ದ. ಆಗ ಕೆಲ ಮುಸ್ಲಿಂ ಕೋಮುವಾದಿಗಳು ಬೈಕ್ ತಡೆದು ಅಶ್ಲೀಲವಾಗಿ ನಿಂದಿಸಿ, ಹುಡುಗಿಯನ್ನು ಆಟೋ ಹತ್ತಿಸಿ ಮನಗೆ ಕಳಿಸಿದ್ದರು. ಅದರ ವಿಡಿಯೋ ಮಾಡಿ ಹರಿಯಬಿಟ್ಟಿದ್ದರು. ಇದನ್ನು ಉಗ್ರವಾಗಿ ಖಂಡಿಸಿದ ಸಿಎಂ ಬೊಮ್ಮಾಯಿಯವರು 24 ಗಂಟೆಗಳಲ್ಲಿ ಆರೋಪಿಗಳ ಬಂಧನವಾಗುವಂತೆ ಮಾಡಿದ್ದರು. ಇದಕ್ಕೆ ರಾಜ್ಯವೇ ಅವರಿಗೆ ಶಬ್ಭಾಸ್‌ಗಿರಿ ನೀಡಿತ್ತು. ಅದಾದ ನಂತರ ಬೆಳಗಾವಿಯಲ್ಲಿ ಪಾರ್ಕ್‌ಗೆ ಹೊರಟಿದ್ದ ಹುಡುಗ-ಹುಡುಗಿಗೆ ಥಳಿಸಲಾಯಿತು. ಮಂಗಳೂರಿನಲ್ಲಿ ಹೋಟೆಲ್‌ಗೆ ನುಗ್ಗಿ ಜೋಡಿಗೆ ಹಲ್ಲೆ ನಡೆಸಲಾಯಿತು. ಅದೇ ಮಂಗಳೂರಿನಲ್ಲಿ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಯುವನಕ ಮೇಲೆ ಹಲ್ಲೆ ನಡೆಸಿ ಮತೀಯ ಗೂಂಡಾಗಿರಿ ಮೆರಯಲಾಯಿತು. ಪುತ್ತೂರಿನಲ್ಲಿ ಬಸ್‌ನಲ್ಲಿ ವಿಭಿನ್ನ ಧರ್ಮದ ಹುಡುಗ ಹುಡುಗಿ ತೆರಳುತ್ತಿದ್ದಾರೆ ಎಂದು ಆರೋಪಿಸಿ ಅವರಿಗೆ ಕಿರುಕುಳ ನೀಡಲಾಯಿತು.  ಒಂದೇ ಕಾರಿನಲ್ಲಿ ಹಿಂದೂ ಮುಸ್ಲಿಮರು ತೆರಳುತ್ತಿದ್ದಾಗ ಅದನ್ನು ತಡೆದು ಹಿಂಸೆ ನೀಡಲಾಗಿತ್ತು. ಮುಸ್ಲಿಂ ಸಹೋದ್ಯೋಗಿಯೊಂದಿಗೆ ಹೋಟೆಲ್‌ನಲ್ಲಿ ಆಹಾರ ಸೇವಿಸುತ್ತಿದ್ದ ಮಹಿಳೆಗೆ ಬೆದರಿಕೆ ಹಾಕಲಾಯ್ತು. ಈ ರೀತಿಯ ಹತ್ತಾರು ಮಾರೆಲ್ ಪೊಲೀಸಿಂಗ್ ಘಟನೆಗಳು ಎರಡು ತಿಂಗಳಲ್ಲಿ ವರದಿಯಾದವು. ಆದರೆ ಬೊಮ್ಮಾಯಿಯವರು ತುಟಿ ಬಿಚ್ಚಲಿಲ್ಲ. ಏಕೆಂದರೆ ಇಲ್ಲಿ ಆರೋಪಿಗಳು ಹಿಂದೂ ಬಹುಸಂಖ್ಯಾತರಾಗಿದ್ದರು.

2. ಮತಾಂತರ ನಿಷೇಧ ಮಸೂದೆ

ಅಲ್ಪಸಂಖ್ಯಾತ ಸಮುದಾಯವನ್ನು ಟಾರ್ಗೆಟ್ ಮಾಡುವುದು ಮುಂದುವರಿಯಿತು. ಕ್ರಿಶ್ಚಿಯನ್ನರ ಪ್ರಾರ್ಥನಾ ಮಂದಿರಗಳ ಮೇಲೆ ದಾಳಿಗಳಾಗುತ್ತಿರುವುದು ಕಂಡು ಬಂದರೂ ಸರ್ಕಾರ ನಿಷ್ಕ್ರಿಯವಾಗಿತ್ತು.‌‌ ಬಲವಂತವಾಗಿ, ಆಮಿಷವೊಡ್ಡಿ ದಲಿತರನ್ನು ಮತಾಂತರ ಮಾಡಲಾಗುತ್ತಿದೆ ಎಂಬ ವಾದವನ್ನು ತೇಲಿಬಿಡಲಾಯಿತು.‌ ದಲಿತರು ಅನುಭವಿಸುತ್ತಿರುವ ಅಸ್ಪೃಶ್ಯತೆಯ ನೋವು, ಸರ್ವರ್ಣೀಯರಿಂದ ಆಗುತ್ತಿರುವ ದೌರ್ಜನ್ಯಗಳ ಕುರಿತ ಪ್ರಶ್ನೆಗಳಿಗೆ ಈಗಲೂ ಬಿಜೆಪಿ ಹಾಗೂ ಸಂಘಪರಿವಾರದಿಂದ ಉತ್ತರವಿಲ್ಲ.‌‌ ಇದರ ನಡುವೆ ಮತಾಂತರ ನಿಷೇಧ ಮಸೂದೆಯನ್ನು ಜಾರಿಗೊಳಿಸಿ, ಶ್ರೇಣೀಕೃತ ಸಮಾಜದ‌ ಯಥಾಸ್ಥಿತಿಗೆ‌ ಸರ್ಕಾರ ಪ್ರಯತ್ನಿಸಿತು.‌ ಆದರೆ ಕೊನೆ ಕ್ಷಣದ ಹಿನ್ನಡೆಯಿಂದ ಮಸೂದೆ ವಾಪಸ್ ಪಡೆದರು. ಮುಂದಿನ‌ ದಿನಗಳಲ್ಲಿ ಮತಾಂತರ ನಿಷೇಧ ಚರ್ಚೆ ಮತ್ತೆ ಮುನ್ನಲೆಗೆ ಬರಬಹುದು!

3. ಈಶ್ವರಪ್ಪನವರ ‘ಭಗವಾದ್ವಜ’ ಪ್ರಕರಣ

ಕೆಂಪು ಕೋಟೆಯ ಮೇಲೆ ಕೇಸರಿ ಧ್ವಜ ಒಂದಲ್ಲ‌ ಒಂದು ದಿನ‌ ಹಾರಿಸುತ್ತೇವೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ರಾಷ್ಟ್ರಧ್ವಜಕ್ಕೆ ಅವಮಾನ ಮಾಡಲಾಗಿದೆ ಎಂದು ಕಾಂಗ್ರೆಸ್ ಧ್ವನಿ ಎತ್ತಿತು. ಸದನದಲ್ಲಿ‌ ತ್ರಿವರ್ಣ ಧ್ವಜ ಹಿಡಿದು ಕಾಂಗ್ರೆಸ್ ಶಾಸಕರು ಪ್ರತಿಭಟಿಸಿದರು.‌ ಈಶ್ವರಪ್ಪನವರ ಹೇಳಿಕೆಯನ್ನು ಸದನದಲ್ಲಿಯೇ ಬಿಜೆಪಿ ನಾಯಕರು ಸಮರ್ಥಿಸಲು ಯತ್ನಿಸಿದರು. ಇಷ್ಟೇ ಅಲ್ಲದೆ, ಇತ್ತೀಚೆಗೆ ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ಟ ಅವರು ಕೇಸರಿ ಧ್ವಜವನ್ನು‌ ಕೆಂಪು ಕೋಟೆಯಲ್ಲಿ‌ ಹಾರಿಸುವ ಸಂಘ ಪರಿವಾರದ‌ ಇಂಗಿತವನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಮತ್ತೊಂದು ಗಮನಾರ್ಹ ಸಂಗತಿ ಏನೆಂದರೆ, 2021, ಜನವರಿ 26ರಂದು ದೆಹಲಿಯಲ್ಲಿ ರೈತರು ಟ್ರಾಕ್ಟರ್ ರ್ಯಾಲಿ ನಡೆಸಿದಾಗ ಕೆಲವು ಕಿಡಿಗೇಡಿಗಳು ಕೆಂಪುಕೋಟೆಗೆ ನುಗ್ಗಿ ಬೇರೊಂದು ಧ್ವಜ ಹಾರಿಸಿದ್ದನ್ನು ದೊಡ್ಡ ಮಟ್ಟದಲ್ಲಿ ಪ್ರಶ್ನಿಸಿದ್ದ ಮುಖ್ಯವಾಹಿನಿ ಮಾಧ್ಯಮಗಳೂ ಈಗ ಮೌನವಹಿಸಿವೆ. ರೈತರನ್ನು ಖಲಿಸ್ತಾನಿಗಳು, ಪ್ರತ್ಯೇಕತಾವಾದಿಗಳು ಎಂದಿದ್ದವರು ಇಂದು ತುಟಿಬಿಚ್ಚುತ್ತಿಲ್ಲ!

4. ಹಿಜಾಬ್ v/s ಕೇಸರಿ ಶಾಲು ವಿವಾದ

ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ಸಂಕೇತಗಳನ್ನು‌ ಧರಿಸಬಾರದು, ಏಕರೂಪತೆ ಪಾಲಿಸಬೇಕೆಂದು‌ ಆರಂಭವಾದ ಪ್ರಕರಣ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದು, ಹೈಕೋರ್ಟ್ ಮೆಟ್ಟಿಲೇರಿ ಈಗ ಸುಪ್ರೀಂಕೋರ್ಟ್ ವರೆಗೆ ಹೋಗಿದೆ.‌ ಹಿಜಾಬ್ ಧರಿಸುವುದು ಇಸ್ಲಾಂನಲ್ಲಿ ಕಡ್ಡಾಯ‌‌ ಆಚರಣೆಯಲ್ಲ ಎಂದಿರುವ ಕರ್ನಾಟಕ ಹೈಕೋರ್ಟ್ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿದೆ. ತಲೆಯ ಮೇಲೆ ಧರಿಸುವ ಬಟ್ಟೆಯೊಂದನ್ನು ವಿರೋಧಿಸಿ, ಅದಕ್ಕೆ ಪ್ರತಿಯಾಗಿ ಕೇಸರಿ ಶಾಲು ಧರಿಸುತ್ತೇವೆಂದು ಉಡುಪಿಯ ಕಾಲೇಜೊಂದರಲ್ಲಿ ಆರಂಭವಾದ ವಿವಾದ ಇಡೀ ರಾಜ್ಯವನ್ನು ವ್ಯಾಪಿಸಿದೆ.

ಹಿಜಾಬ್ ವಿಚಾರಣೆ ನಡೆಯುವಾಗ ಮಧ್ಯಂತರ ಆದೇಶವಿದ್ದಾಗಲಂತೂ ಮಕ್ಕಳ ಹಕ್ಕುಗಳ ಉಲ್ಲಂಘನೆಯಾದವು.‌ ಯಾವುದೇ ಸ್ಪಷ್ಟೀಕರಣ ನೀಡದೆ ಶಿಕ್ಷಣ ಇಲಾಖೆ ಮೌನವಹಿಸಿತ್ತು.‌ ಈಗ ಹಿಜಾಬ್ ನೆಪದಲ್ಲಿ ವಿದ್ಯಾರ್ಥಿನಿಯರ ಶಿಕ್ಷಣವನ್ನೇ ವಂಚಿಸಲಾಗುತ್ತಿದೆ. ಶಿಕ್ಷಣ ಮೂಲಭೂತ ಹಕ್ಕೆಂಬುದನ್ನು ಸರ್ಕಾರ ಮರೆತಿದೆ. ಹಿಜಾಬ್ ಪ್ರಕರಣ ಮುನ್ನಲೆಗೆ ಬಂದಾಗ ಹೊರಗಿನ ಶಕ್ತಿಗಳು ವಿದ್ಯಾರ್ಥಿಗಳನ್ನು ಪ್ರಚೋದಿಸಿ ಕೇಸರಿ ಶಾಲು ನೀಡಿದ್ದು ದಾಖಲೆ ಸಮೇತ ವರದಿಯಾದರೂ ಸರ್ಕಾರ‌ ಮೆಜಾರಿಟೇರಿಯನ್ ನಿಲುವಿಗೆ ಅಂಟಿ ಕುಳಿತಿದೆ. ಪ್ರಜೆಗಳೆಲ್ಲ ಒಂದೇ ಎಂಬುದನ್ನು ಸರ್ಕಾರ ಮರೆತಿದೆ. ಇಲ್ಲಿಯವರೆಗೆ ಇರದಿದ್ದ ಹಿಜಾಬ್ ಸಮಸ್ಯೆಯನ್ನು ಬೇಕಂತಲೇ ಸೃಷ್ಟಿಸಿದ್ದು ಬೊಮ್ಮಾಯಿ ಸರ್ಕಾರದ ಮಹಾನ್ ಸಾಧನೆ.

5. ಹರ್ಷ ಕೊಲೆ ಪ್ರಕರಣ

ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೆಲವು ಮುಸ್ಲಿಂ ಯುವಕರಿಂದ ಕೊಲೆಯಾದ ಬಳಿಕ ಹೆಣದ ರಾಜಕಾರಣಕ್ಕೆ ರಾಜ್ಯ ಸಾಕ್ಷಿಯಾಯಿತು.‌ ಕೊಲೆಗೆ ಕಾರಣ ಬಹಿರಂಗವಾಗಿಲ್ಲ.‌ ಆದರೆ ಹೆಣವನ್ನು ಇಟ್ಟುಕೊಂಡು ಮಾಡಿದ ರಾಜಕಾರಣವನ್ನು ಮಾತ್ರ ಮರೆಯಲಾಗದು.‌ ಕೋಮುಸೂಕ್ಷ್ಮತೆ ಬಲ್ಲವರು ಸರ್ಕಾರದ ನಡೆಯನ್ನು ಕಟುವಾಗಿ ಟೀಕಿಸುತ್ತಿದ್ದಾರೆ. ಯಾರೂ ಇಂತಹ ಪ್ರಕರಣದ ಸಂದರ್ಭದಲ್ಲಿ ಹೆಣದ ಮೆರವಣಿಗೆಗೆ ಅವಕಾಶ ನೀಡುವುದಿಲ್ಲ. ಆದರೆ‌ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ. ವಿಜಯೇಂದ್ರ ಅವರೇ ಮೆರವಣಿಗೆಗೆ ನೇತೃತ್ವ ವಹಿಸಿದ್ದರು.‌ ಅದರಲ್ಲೂ ನಿಷೇದಾಜ್ಞೆಯ ನಡುವೆ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿತ್ತು.‌‌ ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ಮೆರವಣಿಗೆ ಸಾಗಿತು.‌ ಮುಸ್ಲಿಂ ಮನೆಗಳನ್ನು, ಮದ್ರಾಸಾಗಳನ್ನು‌ ಗುರಿಯಾಗಿಸಿಕೊಂಡು ಕಲ್ಲು ತೂರಾಟ ನಡೆಸಿದರು.‌ ನಿರಪರಾಧಿ ಮುಸ್ಲಿಮರು ಗಾಯಗೊಂಡರು. ಸಾರ್ವಜನಿಕ ಆಸ್ತಿ ಹಾನಿ ಮಾಡಲಾಯಿತು. ಅಲ್ಲಲ್ಲಿ ಬೆಂಕಿ ಹಚ್ಚಲಾಯಿತು‌. ಪೊಲೀಸರ ಎದುರೇ ಈ ದೌರ್ಜನ್ಯಗಳು ನಡೆದವು. ಈಶ್ವರಪ್ಪ, ಸಿ.ಟಿ.ರವಿಯಂಥವರು ಎಂದಿನಂತೆ ವಿಷ ಉಗುಳುವ, ಮನಸ್ಸುಗಳನ್ನು ಒಡೆಯುವ ಮಾತುಗಳನ್ನು ಮುಂದುವರಿಸಿದ್ದರು.

ಹರ್ಷನ ಮೇಲೆಯೂ ಪ್ರಕರಣಗಳಿದ್ದವು.‌ ಆತನ ಕೊಲೆ ಪ್ರಕರಣ ತನಿಖೆಯಾಗುತ್ತಿದೆ. ಸ್ಥಿತಿ ಹೀಗಿರುವಾಗ ಮುಖ್ಯಮಂತ್ರಿ ಬೊಮ್ಮಾಯಿಯವರು‌ ಸಿಎಂ ನಿಧಿಯಿಂದ ಹರ್ಷ ಕುಟುಂಬಕ್ಕೆ 25 ಲಕ್ಷ ರೂ. ನೀಡಿದ್ದಾರೆ. ಇದೇ ಸಮಯದಲ್ಲಿ ಕೋಮು ಕಾರಣಕ್ಕೆ, ಬಜರಂಗದಳ ಯುವಕರಿಂದ ಕೊಲೆಯಾದ ನರಗುಂದದ ಸಮೀರ್ ಶಹಾಪುರನನ್ನು ಕಳೆದುಕೊಂಡ ಮುಸ್ಲಿಂ ಕುಟುಂಬ ದುಃಖಿಸುತ್ತಿದೆ.‌ ಸರ್ಕಾರ ಈ ಕುಟುಂಬದತ್ತ ಕಣ್ಣೆತ್ತಿಯೂ ನೋಡಲಿಲ್ಲ. ಅಷ್ಟೇ ಏಕೆ, ಧರ್ಮಸ್ಥಳದ ಕನ್ಯಾಡಿಯಲ್ಲಿ ದಲಿತ ಯುವಕ ದಿನೇಶ್ ಅವರನ್ನು ಬಜರಂಗದ ಮುಖಂಡ ಕೃಷ್ಣ ಎಂಬಾತ ಕೊಂದು ಹಾಕಿದ. ಆದರೆ ದಿನೇಶ್ ಜೀವಕ್ಕೆ ಯಾವ ಬೆಲೆಯೂ ಇಲ್ಲವಾಗಿತ್ತು.

6. ಕಾಶ್ಮೀರ್ ಫೈಲ್ಸ್ ಗೆ ತೆರಿಗೆ ವಿನಾಯಿತಿ

ಬಿಜೆಪಿ ಪ್ರೊಪಗಾಂಡಕ್ಕೆ ಅವಕಾಶ ನೀಡಿರುವ, ಕಾಶ್ಮೀರಿ ಪಂಡಿತರ ಕೊಲೆ ಹಾಗೂ ವಲಸೆಗೆ ಸಂಬಂಧಿಸಿದಂತೆ ಅರ್ಧ ಸತ್ಯವನ್ನು ಹೇಳುವ ‘ಕಾಶ್ಮೀರ್ ಫೈಲ್ಸ್’ ಸಿನಿಮಾಕ್ಕೆ ಆರು ತಿಂಗಳ ತೆರಿಗೆ ವಿನಾಯಿತಿಯನ್ನು ಬೊಮ್ಮಾಯಿ ಘೋಷಿಸಿದ್ದಾರೆ. ಇಡೀ ಮುಸ್ಲಿಂ ಸಮುದಾಯವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ, ಕಾಶ್ಮೀರಿಯತ್ (ಬಹುತ್ವವನ್ನು ಸಾರುವ ಕಾಶ್ಮೀರಿ ಅಸ್ಮಿತೆ) ನಿರ್ಲಕ್ಷಿಸುವ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ಈ ಸಿನಿಮಾಕ್ಕೆ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ತೆರಿಗೆ ವಿನಾಯಿತಿ ನೀಡಲಾಗಿದೆ. ಬೊಮ್ಮಾಯಿ ಒಂದು ಹೆಜ್ಜೆ ಮುಂದೆ ಹೋಗಿ ಆರು ತಿಂಗಳ ವಿನಾಯಿತಿ ಘೋಷಿಸಿದ್ದಾರೆ.‌‌‌ ದ್ವೇಷ ಬಿತ್ತುವ ಸಿನಿಮಾಕ್ಕೆ ಈ ಪರಿಯ ಪ್ರಚಾರವನ್ನು ನೀಡಿದ್ದು ಏಕೆ ಎಂಬುದು‌ ಚರ್ಚೆಯ ವಿಷಯವಾಗಿದೆ.

7. ಮುಸ್ಲಿಂ ಸಮುದಾಯಗಳನ್ನು ವ್ಯಾಪಾರದಿಂದ ಹೊರಗಿಡುವ ಪ್ರವೃತ್ತಿ

ಹಿಜಾಬ್ ತೀರ್ಪು ವಿರೋಧಿಸಿ ಮುಸ್ಲಿಂ ವ್ಯಾಪಾರಿಗಳು ತಮ್ಮ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಒಂದು ದಿನದ ಬಂದ್ ಆಚರಿಸಿದರು.‌ ಕರಾವಳಿ ಭಾಗದಲ್ಲಿ ಯಶಸ್ವಿ ಕೂಡ ಆಗಿತ್ತು. ಪ್ರತಿಭಟನೆ ನಡೆಸುವುದು ಎಲ್ಲರ ಸಾಂವಿಧಾನಿಕ ಹಕ್ಕು ಕೂಡ. ಹಿಜಾಬ್ ಪ್ರಕರಣ ಸುಪ್ರೀಂನಲ್ಲಿದೆ.‌ ಹೀಗಾಗಿ‌ ಹೈಕೋರ್ಟ್ ತೀರ್ಪು ಅಂತಿಮವೇನಲ್ಲ.‌ ಸುಪ್ರೀಂ ಕೋರ್ಟ್ ಶಬರಿಮಲೆಗೆ ಮಹಿಳೆಯರ ಪ್ರವೇಶ ಸಂಬಂಧ ತೀರ್ಪು ನೀಡಿದಾಗ ಸಂಘ ಪರಿವಾರ ಪ್ರತಿಭಟಿಸಿತ್ತು. ಆದರೆ‌ ಹಿಜಾಬ್ ನಿಷೇಧ ವಿರೋಧಿಸಿ ಮುಸ್ಲಿಂ ವರ್ತಕರು ಪ್ರತಿಭಟನೆ ಮಾಡಿದರೆಂಬ ಒಂದೇ ಕಾರಣಕ್ಕೆ ಹಿಂದೂಗಳ ಜಾತ್ರೆ, ಉತ್ಸವಗಳಲ್ಲಿ ಮುಸ್ಲಿಂ ವರ್ತಕರು ಭಾಗವಹಿಸುವಂತಿಲ್ಲ‌ ಎಂದು ನಿರ್ಬಂಧ ಹೇರುತ್ತಿರುವುದು ಕಂಡುಬರುತ್ತಿವೆ.‌ ಇದನ್ನೂ ಬಿಜೆಪಿ ಸರ್ಕಾರ ಸಮರ್ಥನೆ ಮಾಡಿಕೊಂಡಿದೆ. ಹಿಂದೂ ದೇವಾಲಯಗಳ ಪ್ರಾಂಗಣದಲ್ಲಿ ಬೇರೆ ಧರ್ಮಿಯರ ವ್ಯಾಪಾರವನ್ನು ಈ ಹಿಂದೆಯೇ ನಿಷೇಧಿಸಲಾಗಿದೆ ಎಂದು ಬೊಮ್ಮಾಯಿ ಸರ್ಕಾರ ಹೇಳಿದೆ.‌ 2021 ಡಿಸೆಂಬರ್ ತಿಂಗಳಲ್ಲಿ ಸುಪ್ರೀಂ ಈ ವಿಚಾರವಾಗಿ ತೀರ್ಪು ನೀಡಿದ್ದು, ದೇವಾಲಯ ಸಮೀಪ ಇತರ ಧರ್ಮದವರಿಗೆ ಅವಕಾಶ ನಿರಾಕರಿಸಬಾರದು ಎಂದು‌ ಆದೇಶಿಸಿರುವುದು ಗಮನಾರ್ಹ.

**

ಇಷ್ಟೆಲ್ಲ‌ ದ್ವೇಷಕಾರುವ ಪ್ರವೃತ್ತಿ ಹೆಚ್ಚಾಗುತ್ತಿದ್ದರೂ ಪೊಲೀಸ್ ಇಲಾಖೆ ಮೌನ ವಹಿಸಿದೆ.‌ ಏಕೆಂದರೆ ಸರ್ಕಾರದ ನಿರ್ದೇಶನವಿದೆ. ಬೊಮ್ಮಾಯಿ ಮತ ರಾಜಕಾರಣದ ಲೆಕ್ಕಾಚಾರ ಹಾಕುತ್ತ ರಾಜ್ಯದ ಅಭಿವೃದ್ದಿಯನ್ನು ಮರೆತ್ತಿದ್ದಾರೆ. ಮುಸ್ಲಿಂ ದ್ವೇಷದ ರಾಜಕಾರಣಕ್ಕೆ ಗೊಬ್ಬರ, ನೀರು ಎರೆಯುತ್ತಿದ್ದಾರೆ…

ಇಲ್ಲಿ ಮುಖ್ಯವಾದ ಘಟನೆಗಳನ್ನು ಮಾತ್ರ ಪಟ್ಟಿ ಮಾಡಲಾಗಿದೆಯಷ್ಟೇ… ಸರ್ಕಾರದ ವಿವಿಧ ಕಾರ್ಯಕ್ರಮಗಳಲ್ಲಿ ‌ಹೇಗೆ ಕೋಮುದ್ವೇಷ ಹೊಗೆಯಾಡುತ್ತಿದೆ ಎಂಬುದನ್ನು ಬರೆಯುತ್ತಾ ಹೋದರೆ ಇದು ಮುಗಿಯದ ಪುರಾಣವಾಗುತ್ತದೆ…‌ ಇಷ್ಟು ಬರೆಯುವ ಹೊತ್ತಿಗೆ ‘ಭಗವದ್ಗೀತೆ’ಯು ಕೋಮು ರಾಜಕಾರಣದ ಅಂಕಕ್ಕೆ ಪ್ರವೇಶಿಸಿದೆ. ಬೆಲೆ ಏರಿಕೆ, ನೀಟ್, ಎನ್ಇಪಿಯಿಂದ ವಿದ್ಯಾರ್ಥಿಗಳ ಹೈರಾಣು, ಶಿಕ್ಷಣ, ನಿರುದ್ಯೋಗ, ಬಡತನ, ಹಸಿವು, ದಲಿತ, ರೈತ, ಅಲ್ಪಸಂಖ್ಯಾತ, ಹಿಂದುಳಿದ ಸಮುದಾಯದಗಳ ನಿಜದ ನೋವು- ಎಲ್ಲವೂ ಸಪ್ಪೆಸಪ್ಪೆಯಾದ ಸಂಗತಿಯಾಗಿಬಿಟ್ಟಿವೆ! ಸರ್ಕಾರಕ್ಕೆ ಅಂತಹ ಯಾವುದೇ ಕಾಳಜಿಯೂ ಇಲ್ಲ ಎಂಬುದು ಸ್ಪಷ್ಟವಾಗತೊಡಗಿದೆ.


ಇದನ್ನೂ ಓದಿ: ಹುಸಿ ಕಾಳಜಿಯ, ಪಕ್ಷಪಾತ ಧೋರಣೆಯ, ದ್ವೇಷದ ಅಜೆಂಡಾವುಳ್ಳ ’ದ ಕಾಶ್ಮೀರ್ ಫೈಲ್ಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮತಾಂಧ ಕೋರರಿಗೆ ಇದು ಕೋಮು ದ್ವೇಷ ಆಗಲೇ ಬೇಕು ಬಿಡಿ,ಅದೇ ಈ ನೆಲದ ಕಾನೂನನ್ನು ಗೌರವಿಸದ ಅಯೋಗ್ಯರಿಗೆ ಬೊಮ್ಮಾಯಿ ಸರ್ಕಾರದಿಂದ ಎಚ್ಚರಿಕೆ ಸಂದೇಶ ರವಾನೆ ಆಗ್ತಿದೆ ,ನೆಲದ ಕಾನೂನು ಗೌರವಿಸದ ಯಾರೇ ಆಗಲಿ ಇಲ್ಲಿ ಜೀವಿಸಲು ಅನರ್ಹ ಅನ್ನೋದೆ ಈ ಸರಕಾರದ ಎಚ್ಚರಿಕೆ.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...