Homeಮುಖಪುಟಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ.

ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್ ಲಾಮಾ ಅವರನ್ನು ಬೆಂಬಲಿಸಿ ಸಿಲಿಗುರಿಯ ಮತಿಗರಾದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, “2021ರ ವಿಧಾನಸಭಾ ಚುನಾವಣೆಯಲ್ಲಿ ಎಂಟು ಹಂತಗಳಲ್ಲಿ ಮತದಾನ ನಡೆದಾಗ ಇದೇ ರೀತಿಯ ಘಟನೆ ಸಂಭವಿಸಿದೆ. ಅದರ ನಂತರ, ರಾಜ್ಯದಲ್ಲಿ ಸಾಂಕ್ರಾಮಿಕ ರೋಗದ ಹೊಸ ಅಲೆ ಅಪ್ಪಳಿಸಿತು” ಎಂದರು.

“2021ರಲ್ಲಿ ಉಲ್ಬಣಗೊಳ್ಳುತ್ತಿದ್ದ ಸಾಂಕ್ರಾಮಿಕ ರೋಗದಿಂದ ಉಂಟಾಗುವ ಅಪಾಯಗಳನ್ನೂ ಪರಿಗಣಿಸದೆ, ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳ ವಿಧಾನಸಭಾ ಚುನಾವಣೆಯನ್ನು ನಡೆಸಲು ಚುನಾವಣಾ ಆಯೋಗವನ್ನು ಒತ್ತಾಯಿಸಿತು. ನಂತರ ಏನಾಯಿತು ಎಂಬುದು ನಿಮಗೆಲ್ಲರಿಗೂ ತಿಳಿದಿದೆ; ಮತ್ತೊಂದು ಅಲೆ ಬಂದು ಅನೇಕ ಜೀವಗಳನ್ನು ಬಲಿ ತೆಗೆದುಕೊಂಡಿತು, ಈ ಜೀವಹಾನಿಗೆ ಹೊಣೆ ಯಾರು” ಎಂದು ಅಭಿಷೇಕ್ ಪ್ರಶ್ನಿಸಿದರು.

“ಬಿಜೆಪಿಯ ಆಜ್ಞೆಯ ಮೇರೆಗೆ ಚುನಾವಣಾ ಆಯೋಗವು ಈ ಬಾರಿ ಏಳು ಹಂತಗಳ ಚುನಾವಣೆಯನ್ನು ಆಯೋಜಿಸಿದೆ. ಇದರಿಂದಾಗಿ ದೆಹಲಿಯ ಬಿಜೆಪಿ ನಾಯಕರು ಪ್ರಚಾರದಲ್ಲಿ ಭಾಗವಹಿಸಲು ಸಾಧ್ಯವಾಗುತ್ತದೆ. ಏಳು ಹಂತದ ಚುನಾವಣೆಗಳು ನಡೆಯುತ್ತಿವೆ, ಇದರಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಪ್ರತಿ ಹಂತದ ಮೊದಲು ಪ್ರಚಾರ ಮಾಡಬಹುದು. ಆದರೆ, ಅವರ ಸುಳ್ಳನ್ನು ಜನರು ತಿರಸ್ಕರಿಸುತ್ತಾರೆ” ಎಂದು ಅವರು ಹೇಳಿದರು.

ತಮ್ಮ ಪಕ್ಷಕ್ಕೆ ಸತತ ನಾಲ್ಕನೇ ಅವಧಿಗೆ ಸ್ಥಾನವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಹಾಲಿ ಬಿಜೆಪಿ ಸಂಸದ ರಾಜು ಬಿಸ್ತಾ ವಿರುದ್ಧ ಟಿಎಂಸಿ ಲಾಮಾ ಅವರನ್ನು ಕಣಕ್ಕಿಳಿಸಿದೆ. ಲಾಮಾ ಅವರನ್ನು “ಭೂಮಿಪುತ್ರ” ಅಥವಾ ಮಣ್ಣಿನ ಮಗ ಎಂದು ಬಣ್ಣಿಸಿದ ಬ್ಯಾನರ್ಜಿ, ಬಿಸ್ತಾರನ್ನು “ವಲಸೆ ಹಕ್ಕಿ” ಎಂದು ಕರೆದರು.

ಸಾಂಕ್ರಾಮಿಕ ಸಮಯದಲ್ಲಿ ಬಿಸ್ತಾ ಜನರಿಗೆ ಸಹಾಯ ಮಾಡಲಿಲ್ಲ ಮತ್ತು ದೆಹಲಿಯಲ್ಲಿಯೇ ಇದ್ದರು. ಆದರೆ, ಆ ಸಮಯದಲ್ಲಿ ಟಿಎಂಸಿ ಕಾರ್ಯಕರ್ತರು ಸಾಧ್ಯವಿರುವ ಎಲ್ಲ ರೀತಿಯಲ್ಲಿ ಜನರನ್ನು ಬೆಂಬಲಿಸಿದರು ಎಂದರು.

11 ಗೂರ್ಖಾ ಜನಾಂಗಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಭರವಸೆಯನ್ನು ಬಿಜೆಪಿ ಈಡೇರಿಸಿಲ್ಲ ಎಂದು ಆರೋಪಿಸಿದರು.

ಮೊದಲ ಹಂತದ ಚುನಾವಣೆಗಳಲ್ಲಿ ಬಿಜೆಪಿಯ ಸಾಧನೆ ಕಳಪೆಯಾಗಿತ್ತು ಮತ್ತು ನಂತರದ ಹಂತಗಳಲ್ಲಿ ಅದು ಭಿನ್ನವಾಗಿರುವುದಿಲ್ಲ ಎಂದು ಬ್ಯಾನರ್ಜಿ ಹೇಳಿದ್ದಾರೆ.

ನಂತರ, ಮಾಲ್ಡಾದ ಬೈಸ್ನಾಬ್‌ನಗರದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, ಮಾಲ್ಡಾ ದಕ್ಷಿಣದ ಕಾಂಗ್ರೆಸ್ ಸಂಸದರಾಗಲೀ ಅಥವಾ ಮಾಲ್ಡಾ ಉತ್ತರದ ಬಿಜೆಪಿ ಸಂಸದರಾಗಲೀ ಕೇಂದ್ರದೊಂದಿಗೆ ಎಂಜಿಎನ್‌ಆರ್‌ಇಜಿಎ ಬಾಕಿಯ ವಿಷಯವನ್ನು ಪ್ರಸ್ತಾಪಿಸಲಿಲ್ಲ ಎಂದು ಆರೋಪ ಮಾಡಿದರು.

ಕಾಂಗ್ರೆಸ್‌ನ ಬಹರಂಪುರ ಸಂಸದ ಅಧೀರ್ ರಂಜನ್ ಚೌಧರಿ ಅವರು ರಾಜ್ಯದಲ್ಲಿ ಟಿಎಂಸಿ ಸರ್ಕಾರವನ್ನು ಅಪಖ್ಯಾತಿಗೊಳಿಸಲು ಬಿಜೆಪಿಯೊಂದಿಗೆ ಕೈಜೋಡಿಸಿದ್ದಾರೆ. ಕೇಂದ್ರೀಯ ಸಂಸ್ಥೆಗಳಿಂದ ಟಿಎಂಸಿ ನಾಯಕರಿಗೆ ಕಿರುಕುಳ ನೀಡುವ ಬಿಜೆಪಿಯ ಕಾರ್ಯಸೂಚಿಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಬೆಂಬಲಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

2021ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಟಿಎಂಸಿಯನ್ನು ವಿಭಜಿಸಲು ಬಿಜೆಪಿ ಪಿತೂರಿ ನಡೆಸಿದೆ. ಆದರೆ, ಪ್ರಯತ್ನಗಳನ್ನು ವಿಫಲಗೊಳಿಸಲಾಯಿತು ಎಂದರು.

ಇದನ್ನೂ ಓದಿ; ಸೊರೇನ್ ಜಾಮೀನು ಅರ್ಜಿಗೆ ಉತ್ತರಿಸಲು ಇಡಿಗೆ ಕಾಲಾವಕಾಶ ನೀಡಿದ ಕೋರ್ಟ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...