Homeಮುಖಪುಟಗಾಂಧಿ ಅಂದಿಗೂ ಇಂದಿಗೂ ಒಬ್ಬಂಟಿ. ಗೋಡ್ಸೆ ಅಂದಿಗೂ ಒಬ್ಬಂಟಿಯಲ್ಲ, ಇಂದಿಗೂ..

ಗಾಂಧಿ ಅಂದಿಗೂ ಇಂದಿಗೂ ಒಬ್ಬಂಟಿ. ಗೋಡ್ಸೆ ಅಂದಿಗೂ ಒಬ್ಬಂಟಿಯಲ್ಲ, ಇಂದಿಗೂ..

- Advertisement -
- Advertisement -

ಮಹಾತ್ಮಾ ಗಾಂಧಿ ಎಂಬ ಮನುಷ್ಯನನ್ನು ನಾಥುರಾಮ್ ಗೋಡ್ಸೆ ಎಂಬ ಹಿಂದೂ ಒಬ್ಬ ಕೊಲೆಮಾಡಿ (ಜನವರಿ 30, 1948) 73 ವರ್ಷಗಳಾಗಿವೆ. ಎಪ್ಪತ್ತೊಂಭತ್ತು ವರ್ಷತುಂಬಿದ್ದ ಹಣ್ಣು ಮುದುಕ ಗಾಂಧೀಜಿಯವರ ಎದೆಗೆ ಗುಂಡಿಕ್ಕುವ ಮುನ್ನ ಮೂವತ್ತೆಂಟರ ಹರೆಯದ ನಾಥೂರಾಮ್ ವಿನಾಯಕ ಗೋಡ್ಸೆ ಒಮ್ಮೆ ಅವರ ಕಾಲುಮುಟ್ಟಿ ನಮಸ್ಕರಿಸಿದ್ದನಂತೆ. ಅದು ನಟನೆಯಲ್ಲ, ನಿಜವಾದ ಗೌರವ ಸಲ್ಲಿಕೆ ಅಂತ ಗೋಡ್ಸೆ ತನ್ನ ’ನಾನೇಕೆ ಗಾಂಧಿಯನ್ನು ಕೊಂದೆ’ ಎಂಬ ಹೇಳಿಕೆಯಲ್ಲಿ ದಾಖಲಿಸುತ್ತಾನೆ. ಗುಂಡೇಟು ತಿಂದು ಕುಸಿಯುವ ಮುನ್ನ ಗಾಂಧಿ “ಹೇ ರಾಮ್ ಅಂತ ಉದ್ಗರಿಸಿದ್ದರಂತೆ. ಆ ಕುರಿತು ಭಿನ್ನಾಭಿಪ್ರಾಯಗಳಿವೆ. ಕೆಲವರ ಪ್ರಕಾರ ಗಾಂಧಿ ಮೌನವಾಗಿಯೇ ನೆಲಕ್ಕೆ ಕುಸಿದಿದ್ದರು. ಏನೇ ಇರಲಿ. ಒಂದು ವೇಳೆ ಅವರು ಹೇ ರಾಮ್ ಅಂತ ಹೇಳಿದ್ದು ನಿಜವೇ ಆಗಿದ್ದರೆ, ಗುಂಡು ಹಾರಿಸಿ ಕೈಚೆಲ್ಲಿ ನಿಂತಿದ್ದ ಗೋಡ್ಸೆಗೆ ಅದು ಗಾಂಧೀಜಿ ತನ್ನ ಹೆಸರು ಹಿಡಿದು ಪ್ರೀತಿಯಿಂದ ಕರೆದಂತೆ ಕೇಳಿಸಿರಬಹುದು.

1949ರ ನವಂಬರ್ ತಿಂಗಳ 15ನೇ ತಾರೀಖಿನಂದು ಅಂಬಾಲ ಜೈಲಿನಲ್ಲಿ ಗೋಡ್ಸೆ ಯಾವ ಭಾವ ವಿಕಾರವೂ ಇಲ್ಲದೆ ನೇಣುಗಂಬ ಏರಿದ್ದ ಅಂತ ಚರಿತ್ರೆ ದಾಖಲಿಸುತ್ತದೆ. ಗಾಂಧಿ ನಾವೆಲ್ಲ ಅಂದುಕೊಂಡಿರುವ ಗಾಂಧೀಜಿಯೇ ಆಗಿದ್ದಿದ್ದರೆ ಆ ದಿನ ಅವರ ಆತ್ಮ ಗೋರಿಯೊಳಗೆ ವಿಚಿತ್ರವಾಗಿ ಚಡಪಡಿಸಿರುತಿತ್ತು. ಗೋಡ್ಸೆಯನ್ನು ನೇಣಿಗೇರಿಸಬಾರದಿತ್ತು. ಆತನನ್ನು ಕೊಂದದ್ದು ಗಾಂಧೀಜಿಗೆ ಸಮ್ಮತವಾಗಿರುತ್ತಿರಲಿಲ್ಲ ಎನ್ನುವುದು ಅದಕ್ಕೆ ಒಂದು ಕಾರಣ. ಅದಕ್ಕಿಂತ ಮುಖ್ಯವಾದ ಇನ್ನೊಂದು ಕಾರಣವಿದೆ. ತನ್ನ ಕೊನೆಯ ಹೇಳಿಕೆಯಲ್ಲಿ ಗೋಡ್ಸೆ ಹೇಳುತ್ತಾನೆ: “ನಾನು ಗಾಂಧೀಜಿಯನ್ನು ಕೊಂದದ್ದು ಒಂದು ಉದಾತ್ತವಾದ ಉದ್ದೇಶದಿಂದ. ಅದು ಏನೆಂದರೆ ಗಾಂಧೀಜಿ ಇಲ್ಲದ ಭಾರತದ ರಾಜಕೀಯ ಪ್ರಾಯೋಗಿಕವಾಗಿರುತ್ತದೆ, ಗಾಂಧೀಜಿ ಇಲ್ಲದ ಭಾರತದ ರಾಜಕೀಯಕ್ಕೆ ವೈರಿಗಳಿಗೆ ತಿರುಗೇಟು ನೀಡುವ ಶಕ್ತಿ ಬರುತ್ತದೆ. ಗಾಂಧೀಜಿ ಇಲ್ಲದ ಭಾರತ ತನ್ನ ಸೇನಾಬಲದಿಂದ ಸದೃಢವಾಗಿರುತ್ತದೆ. ಗಾಂಧೀಜಿ ಇಲ್ಲದ ಭಾರತದ ಜನ ಹೆಚ್ಚು ವಿವೇಕದಿಂದಲೂ, ವಿವೇಚನೆಯಿಂದಲೂ ವರ್ತಿಸುತ್ತಾರೆ ಎನ್ನುವ ಭರವಸೆ ನನಗಿದೆ.. ಅದಕ್ಕಾಗಿ ಗಾಂಧೀಜಿಯನ್ನು ಕೊಂದೆ..”. ಗೋಡ್ಸೆ ಬದುಕಿ ಗಾಂಧೀಜಿಯ ನಂತರದ ಭಾರತದಲ್ಲಿ ರಾಜಕೀಯ ತೋರಿದ ಪ್ರಾಯೋಗಿಕತೆ, ವಿವೇಕ, ವಿವೇಚನೆ ಇತ್ಯಾದಿಗಳನ್ನು ಕಣ್ಣಾರೆ ಕಾಣಬೇಕಿತ್ತು ಎನ್ನುವ ಕಾರಣಕ್ಕೆ ಆತನನ್ನು ನೇಣಿಗೇರಿಸಬಾರದಿತ್ತು.. ಗಾಂಧೀಜಿ ಇನ್ನೊಂದಷ್ಟು ದಿನ ಬದುಕಿ ಉಳಿದಿದ್ದರೂ ಭಾರತದಲ್ಲಿ ಮುಂದೆ ಏನೇನಾದವೋ ಅವೆಲ್ಲಾ ಆಗುತ್ತಿದ್ದವು. ಅದು ಬೇರೆ ವಿಚಾರ.

ಗಾಂಧೀಜಿಯವರನ್ನು ಕೊಂದ ನಂತರ ಸ್ವತಃ ಗೊಡ್ಸೆಗೆ ಬದುಕುವಾಸೆ ಇರಲಿಲ್ಲ. ಜೈಲಿನ ಬಾಗಿಲು ತೆರೆದಿರಿಸಿದ್ದರೂ ಆತ ಓಡಿ ಹೋಗುತ್ತಿರಲಿಲ್ಲ. ಗಾಂಧೀಜಿಯನ್ನು ನೆನೆದು, ಗಾಂಧೀವಾದಿಗಳ ಒತ್ತಾಯಕ್ಕೆ ಮಣಿದು ತನ್ನನ್ನು ಎಲ್ಲಿ ಕ್ಷಮಿಸಿಬಿಡುತ್ತಾರೋ ಎನ್ನುವ ಆತಂಕ ಗೋಡ್ಸೆಯನ್ನು ಕೊನೆಯತನಕವೂ ಕಾಡಿತ್ತಂತೆ. ಗಾಂಧೀಜಿಗೆ ನಾನು ತೋರದ ಕರುಣೆಯನ್ನು ಸರಕಾರದಿಂದ ನಾನು ಬಯಸುವುದಿಲ್ಲ ಅಂತ ಆತ ಸ್ಪಷ್ಟವಾಗಿ ಹೇಳಿದ್ದ. ಗಾಂಧೀಜಿಯವರ ಕೊಲೆಗಾರ ಎನ್ನುವ ಅವಮಾನವನ್ನು ಹೊತ್ತು ಬದುಕುವುದಕ್ಕಿಂತ ಸಾವು ಎಷ್ಟೋ ಮೇಲು ಅಂತ ಆತ ಗಾಂಧೀಜಿ ನೆಲಕ್ಕುರುಳಿದಾಕ್ಷಣ ನಿರ್ಧರಿಸಿದ್ದ. ಅಷ್ಟೇ ಆಸಕ್ತಿಯ ವಿಚಾರವೆಂದರೆ ಕೊನೆಯ ದಿನಗಳಲ್ಲಿ ಗಾಂಧೀಜಿ ಕೂಡಾ ಜೀವನದಲ್ಲಿ ಆಸಕ್ತಿ ಕಳೆದುಕೊಂಡಿದ್ದರು.

ಒಂದು ಕಾಲದಲ್ಲಿ ತಾನು 125 ವರ್ಷ ಬದುಕಬೇಕೆಂದು ಹೇಳಿದ್ದ ಗಾಂಧೀಜಿಗೆ ದೇಶ ವಿಭಜನೆಯಾಗುತ್ತಲೇ ಇನ್ನು ಶಾಶ್ವತವಾಗಿ ಹೊರಟುಬಿಡಬೇಕು ಎಂಬ ಮನೋಭಾವ ಆವರಿಕೊಂಡಿತ್ತು ಅಂತ ಆ ದಿನಗಳಲ್ಲಿ ಅವರ ಹತ್ತಿರವಿದ್ದ ಅನುಯಾಯಿಗಳು ದಾಖಲಿಸಿದ್ದಾರೆ. ಆದರೆ ಖಾಯಿಲೆ ಬಿದ್ದು ಸಾಯುವುದಕ್ಕಿಂತ ಕೊಲೆಯಾಗುವುದು ಮೇಲು ಎನ್ನುವುದಾಗಿತ್ತಂತೆ ಅವರ ನಿರ್ಧಾರ. “ಇಷ್ಟೆಲ್ಲಾ ಆಗಿ ಕಾಯಿಲೆಯಿಂದ ಸತ್ತರೆ ನಾನ್ಯಾವ ಸೀಮೆಯ ಮಹಾತ್ಮ? ಸತ್ತರೆ ಕೊಲೆಗಾರನ ಧಾಳಿಗೆ ಎದೆಯೊಡ್ಡಿ ರಾಮನಾಮ ಪಠಿಸುತ್ತಾ ಸಾಯಬೇಕು” ಅಂತ ತನ್ನ ಮೊಮ್ಮಗಳಾದ ಮನುಬೆನ್‌ಗೆ ಹೇಳಿದ್ದರಂತೆ. ಹಾಗೆಯೇ ಆಯಿತು. ಹೇಗೂ ಸಾಯಲು ತಯಾರಾಗಿದ್ದ ಗಾಂಧೀಜಿಯನ್ನು ಗೋಡ್ಸೆ ಕೊಂದ. ಜೀವಂತವಾಗಿ ಅಪ್ರಸ್ತುತನಾದ ತಾನು ಸತ್ತು ಪ್ರಸ್ತುತನಾಗಬೇಕೆಂದುಕೊಂಡಿರಬೇಕು ಗಾಂಧೀಜಿ – ಏಸುಕ್ರಿಸ್ತನಂತೆ, ಸಾಕ್ರೆಟಿಸನಂತೆ. ಅದನ್ನು ಪೂರೈಸಿಕೊಟ್ಟದ್ದು ಗೋಡ್ಸೆ.

PC : StarsUnfolded

ದೇಶ ವಿಭಜನೆಗೆ ಗಾಂಧೀಜಿ ಕಾರಣ ಎನ್ನುವುದಕ್ಕೋಸ್ಕರ ಕೊಂದೆ ಎನ್ನುತ್ತಾನೆ ಗೋಡ್ಸೆ. ಆದರೆ ಗಾಂಧೀಜಿಯ ಹತ್ಯೆಯ ಪ್ರಯತ್ನ ದೇಶ ವಿಭಜನೆಗೆ ಬಹಳಷ್ಟು ಮುಂದೆಯೇ ನಡೆದಿತ್ತು. ಒಂದಲ್ಲ, ಎರಡಲ್ಲ. ಮೂರು ಬಾರಿ ನಡೆದಿತ್ತು. ಮೊದಲ ಪ್ರಯತ್ನ ನಡೆದದ್ದು 1934ರಲ್ಲಿ. ಆಗ ವಿಭಜನೆ ನಡೆದಿರಲಿಲ್ಲ. ಆ ಮೊದಲ ಪ್ರಯತ್ನವೂ ನಡೆದದ್ದು ಗೋಡ್ಸೆ ಹುಟ್ಟಿದ ಪೂನಾದಲ್ಲಿಯೇ. ಆಗ ಅಲ್ಲಿ ಗಾಂಧೀಜಿ ಅಸ್ಪೃಶ್ಯತೆಯ ವಿರುದ್ಧ ಹೋರಾಡುತ್ತಿದ್ದರು!

ಸಾಮಾನ್ಯವಾಗಿ ರಾಜಕೀಯ ನಾಯಕರ ವಿರುದ್ಧ ಪ್ರತಿಭಟಿಸುವವರು “ಮುರ್ದಾಬಾದ್, “ಡೌನ್, ಡೌನ್ ಇತ್ಯಾದಿ ಘೋಷಣೆ ಕೂಗುತ್ತಾರೆ. ಆದರೆ ಗಾಂಧೀಜಿಯವರ ವಿರುದ್ಧ ಆ ಕಾಲದಲ್ಲಿ ಪ್ರತಿಭಟಿಸುವವರೆಲ್ಲಾ “ಗಾಂಧೀಜಿಯನ್ನು ಕೊಂದುಬಿಡಿ (death to Gandhiji)” ಎನ್ನುವ ಘೋಷಣೆಯನ್ನು ಮತ್ತೆ ಮತ್ತೆ ಕೂಗುತಿದ್ದರು.. ಅಂದಿಗೂ ಇಂದಿಗೂ ಇಂತಹದ್ದೊಂದು ಘೋಷಣೆಯ ದಾಳಿಗೆ ಒಳಗಾದವರಿಲ್ಲ ಎನ್ನಿಸುತ್ತದೆ. ಇದನ್ನು ಕೇಳಿ ಬೇಸತ್ತುಕೊಳ್ಳದ ಗಾಂಧೀಜಿ ಕೊನೆಗೆ ಅದನ್ನು ಒಪ್ಪಿಕೊಂಡು “ಆಗಲಿ ಕೊಂದುಬಿಡಿ” ಎನ್ನುವ ನಿರ್ಧಾರಕ್ಕೆ ಬಂದಿದ್ದರು. ಗಾಂಧೀಜಿಯವರ ಮೇಲೆ ಭಾರಿ ಭಾರಿ ದಾಳಿಯಾಗುತ್ತಿದ್ದರೂ ಅದರ ಬಗ್ಗೆ ಯಾರಿಗೂ ಕಾಳಜಿ ಇರಲಿಲ್ಲ.

ಅಂದಿನ ಪೊಲೀಸರ ಮನಸ್ಥಿತಿ ಗೋಡ್ಸೆಯ ಮನಸ್ಥಿತಿಗಿಂತ ಭಿನ್ನವಾಗಿರಲಿಲ್ಲ. ಅವರಲ್ಲಿ ಹಲವರಿಗೆ ಹಿಂದೂ-ಮುಸ್ಲಿಂ ಸಂಘರ್ಷದ ಸಮಯದಲ್ಲಿ ಗಾಂಧೀಜಿ ಪಠಿಸುತಿದ್ದ ಶಾಂತಿ ಮಂತ್ರ ನಪುಂಸಕವಾದದಂತೆ ಕೇಳಿಸುತಿತ್ತು.. ಅವರೆಲ್ಲಾ ಹೇಳಿಕೇಳಿ ಬ್ರಿಟಿಷರ ಕೈಕೆಳಗೆ ಗಾಂಧೀಜಿಯ ವಿರುದ್ಧ ಕೆಲಸ ಮಾಡುತಿದ್ದವರು. ಸಾಲದ್ದಕ್ಕೆ ಹೆಚ್ಚಿನವರು ಯುದ್ಧಾಕಾಂಕ್ಷಿ ಕ್ಷತ್ರಿಯ ಜಾತಿಗಳಿಗೆ ಸೇರಿದವರು. ಗಾಂಧೀಜಿಯ ಕೊಲೆ ಸಂಚಿನ ಬಗ್ಗೆ ಬಂದ ಎಲ್ಲಾ ಗುಪ್ತ ಮಾಹಿತಿಗಳನ್ನೂ ಪೋಲಿಸರು ಕಡೆಗಣಿಸಿದ್ದರು. ಮುದುಕ ಬದುಕಿದರೆಷ್ಟು-ಸತ್ತರೆಷ್ಟು ಎನ್ನುವಂತಿತ್ತು ಅವರ ಮನೋಭಾವ. ಪೊಲೀಸರನ್ನು ನಿಯಂತ್ರಿಸುತಿದ್ದ ಅಂದಿನ ಕೇಂದ್ರ ಗೃಹಮಂತ್ರಿ ಸರ್ದಾರ್ ವಲ್ಲಬಾಯಿ ಪಟೇಲರು ಗಾಂಧೀಜಿಯವರ ಆಪ್ತ ಶಿಷ್ಯ. ಉಕ್ಕಿನ ಮನುಷ್ಯ.

ಗಾಂಧೀಜಿಯ ಕೊನೆಯ ದಿನಗಳಲ್ಲಿ ನಡೆದ ಘಟನಾವಳಿಗಳನ್ನು ಗಮನಿಸಿದಾಗ ಆಯಕಟ್ಟಿನ ಜಾಗದಲ್ಲಿ ಇದ್ದವರೆಲ್ಲಾ ಸೇರಿ ಗಾಂಧೀಜಿಯನ್ನು ಎತ್ತಿಕೊಂಡು ಗೋಡ್ಸೆಯೆದುರು ನಿಲ್ಲಿಸಿದ್ದರೇನೋ ಎಂಬಂತೆ ಭಾಸವಾಗುತ್ತದೆ. ಗಾಂಧಿ ಅಂದಿಗೂ ಇಂದಿಗೂ ಒಬ್ಬಂಟಿ. ಗೋಡ್ಸೆ ಅಂದಿಗೂ ಒಬ್ಬಂಟಿಯಲ್ಲ. ಇಂದಿಗೂ ಒಬ್ಬಂಟಿಯಲ್ಲ. ನೆಹರೂ ಗೋಡ್ಸೆಯನ್ನು ಹುಚ್ಚ ಅಂತ ಕರೆದರು. ಗೋಡ್ಸೆಗೆ ಗಾಂಧಿ ಹುಚ್ಚ ಅಂತ ಅನ್ನಿಸಿರಬೇಕು. ನಾವು ನಂಬಿದ್ದೇ ಸತ್ಯ ಅಂತ ಯೋಚಿಸುವುದೇ ಒಂದು ರೀತಿಯ ಹುಚ್ಚು. ನಮ್ಮ ಕಾಲದ ಶ್ರೇಷ್ಠ ರಾಜಕೀಯ ಮನಶಾಸ್ತ್ರಜ್ಞ ಅಶೀಶ್ ನಂದಿ ಹೇಳುವಂತೆ ಯಾವುದೇ ರಾಜಕೀಯ ಹತ್ಯೆ ನಡೆಸುವ ಒಬ್ಬಾತ ತಾನು ಎಂದೂ ಒಬ್ಬಂಟಿಯಾಗಿರುವುದಿಲ್ಲ. ಆತ ಸಮಾಜದ ಒಂದಷ್ಟು ಮಂದಿಯ ಯಾವುದೋ ರೀತಿಯ ಹುಚ್ಚನ್ನು ಪ್ರತಿನಿಧಿಸುತ್ತಾನೆ.

ನೇಣುಗಂಬದಿಂದ ಹೆಣವಾಗಿ ಇಳಿದ ಗೋಡ್ಸೆಯ ಅಂತ್ಯಕ್ರಿಯೆ ಅಂಬಾಲ ಜೈಲಿನ ಆವರಣದ ಹೊರಗೆ ನಡೆಯುತ್ತದೆ. ಅದು ಮುಗಿದ ತತ್‌ಕ್ಷಣ ಸರಕಾರ ಆ ಜಾಗವನ್ನು ನಿಷೇಧಿತ ಪ್ರದೇಶವನ್ನಾಗಿ ಮಾಡಿ ಸ್ಥಳವನ್ನು ಉತ್ತು ಇಡೀ ಪರಿಸರದಲ್ಲಿ ಹಸಿರು ಹುಲ್ಲು ನೆಡಿಸುತ್ತದೆ. ಆ ಜಾಗವನ್ನು ಯಾರೂ ಗುರುತಿಸದಂತೆ ಮಾರ್ಪಡಿಸುತ್ತದೆ. ಯಾರಾದರೂ ಗೋಡ್ಸೆಗೊಂದು ಗೋರಿ ಕಟ್ಟಿ ಅದನ್ನೊಂದು ಪವಿತ್ರ ಸ್ಥಳವನ್ನಾಗಿ ಮಾಡದಿರಲಿ ಎನ್ನುವ ಉದ್ದೇಶದಿಂದ ಸರಕಾರ ಹಾಗೆ ಮಾಡಿತ್ತು. ಗೋಡ್ಸೆ ಕೊಂದ ಗಾಂಧಿ ಮರಣಾನಂತರ ಉತ್ಕಟವಾಗಿ ಬದುಕಿದರು. ಗಾಂಧಿಯನ್ನು ಕೊಂದ ಗೋಡ್ಸೆಯೂ ಹಾಗೆಯೇ. ಅನಾಮಧೇಯನಾಗಿ ಅಳಿದು ಹೋಗುತಿದ್ದ ಗೋಡ್ಸೆ ಎಂಬ ಅಂಚೆ ಇಲಾಖೆ ನೌಕರನ ಮಗ ಚರಿತ್ರೆಯಲ್ಲಿ ಶಾಶ್ವತ ಸ್ಥಾನ ಪಡೆದುಬಿಟ್ಟ. ಗಾಂಧೀಜಿಯವರನ್ನು ಅರಿಯುವ ಪ್ರಯತ್ನದ ಜತೆಜತೆಗೆ ಗೋಡ್ಸೆಯನ್ನು ಅರಿಯುವ ಪ್ರಯತ್ನವೂ ನಡೆಯುತ್ತಲೇ ಇದೆ.

ಗಾಂಧೀಜಿಯವರನ್ನು ಸಾರ್ವಜನಿಕವಾಗಿ ಒಪ್ಪಿ ಅಂತರಂಗದಲ್ಲಿ ದ್ವೇಷಿಸುವರು ಹಲವರಿದ್ದಾರೆ. ಗೋಡ್ಸೆಯನ್ನು ಬಹಿರಂಗವಾಗಿ ಬಹಿಷ್ಕರಿಸಿ ಅಂತರಂಗದ ಅತಿಥಿಯನ್ನಾಗಿ ಮಾಡಿಕೊಂಡವರು ಅದಕ್ಕಿಂತ ಹೆಚ್ಚಿದ್ದಾರೆ. ಭಾರತದಲ್ಲಿ ಎಲ್ಲಾ ರೀತಿಯಲ್ಲೂ ಮುಕ್ತವಾಗಿ ಟೀಕಿಸಬಹುದಾದ ಒಬ್ಬ ರಾಜಕೀಯ ನಾಯಕ ಅಂತ ಇದ್ದರೆ ಅದು ಗಾಂಧೀಜಿ ಮಾತ್ರ. ಆದರೂ ಗಾಂಧೀಜಿಯವರ ಬಗ್ಗೆ ಬಾಲಿಶವಾಗಿ ಮಾತನಾಡುವವರು ಗಾಂಧೀಜಿ ಅವರನ್ನು ದ್ವೇಷಿಸುವರ ದೃಷ್ಟಿಯಲ್ಲೂ ತೀರ ಅಲ್ಪರಂತೆ ಕಾಣಿಸುತ್ತಾರೆ.

ಎ ನಾರಾಯಣ

ಎ ನಾರಾಯಣ
ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ ರಾಜಕೀಯ ತತ್ವಶಾಸ್ತ್ರ, ಭಾರತದ ರಾಜಕೀಯ, ಕಾನೂನು ಮತ್ತು ಆಡಳಿತ ಹಾಗೂ ಭಾರತದಲ್ಲಿ ಆಡಳಿತದ ಸವಾಲುಗಳು ವಿಷಯವನ್ನು ಬೋಧಿಸುವ ನಾರಾಯಣ ಅವರು ಕನ್ನಡದ ಹಲವು ಪತ್ರಿಕೆಗಳಲ್ಲಿ ಸಕ್ರಿಯವಾಗಿ ಪ್ರಚಲಿತ ವಿದ್ಯಮಾನಗಳ ಬಗ್ಗೆ ಲೇಖನಗಳನ್ನು ಬರೆಯುತ್ತಿರುವ ಸ್ವತಂತ್ರ ಚಿಂತಕ.


ಇದನ್ನೂ ಓದಿ: ಸಂಪಿಗೆ ಬನದ ಹಾಡು ಹೇಳೋರು ಯಾರು? ಚಂಪಾರಣ ಸತ್ಯಾಗ್ರಹ ಮತ್ತು ರೈತ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...