86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ದಿನಾಂಕವನ್ನು ಇಂದು ನಿಗದಿ ಮಾಡಲಾಗಿದ್ದು, 2021ರ ಫೆ.26 ರಿಂದ ಫೆ.28 ರವರೆಗೆ ಸಾಹಿತ್ಯ ಸಮ್ಮೇಳನ ನಡೆಸಲು ಕನ್ನಡ ಸಾಹಿತ್ಯ ಪರಿಷತ್ತು ನಿರ್ಧರಿಸಿದೆ. ಈ ಬಾರಿ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಜಾತ್ರೆ ನಡೆಯಲಿದೆ.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಸಭೆಗೂ ಮೊದಲು ದಿನಾಂಕ ನಿಗದಿ ಕುರಿತು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ, ಕೃಷಿ ಸಚಿವ ಬಿ.ಸಿ. ಪಾಟೀಲ ಹಾಗೂ ಹಾವೇರಿ ಶಾಸಕ ನೆಹರೂ ಓಲೇಕಾರ್ ಅವರೊಂದಿಗೆ ಚರ್ಚಿಸಲಾಗಿದೆ ಎಂದು ಮನು ಬಳಿಗಾರ್ ತಿಳಿಸಿದ್ದಾರೆ.
ಇದನ್ನೂ ಓದಿ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ನೂತನ ಅಧ್ಯಕ್ಷರಾಗಿ ಕೆ ಜಯಪ್ರಕಾಶ್ ಹೆಗ್ಡೆ ನೇಮಕ
‘ಕೊರೊನಾ ಪ್ರಕರಣಗಳ ಸಂಖ್ಯೆಯ ಇಳಿಮುಖ ಕಾಣುತ್ತಿದೆ. ಹೀಗಾಗಿ ಮಾರ್ಗಸೂಚಿಗಳನ್ನು ಸಡಿಲಗೊಳಿಸಿ, ಅಕ್ಷರ ಜಾತ್ರೆ ನಡೆಸಲು ಅನುವು ಮಾಡಿಕೊಡಬೇಕೆಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ’ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಕೊರೊನಾ ಪರಿಸ್ಥಿತಿಯನ್ನು ನೋಡಿಕೊಂಡು ಸಮ್ಮೇಳನ ನಡೆಸಲು ಅನುಮತಿ ನೀಡಲಿದೆ. ಜೊತೆಗೆ ಅಗತ್ಯ ಅನುದಾನವನ್ನು ನೀಡಲಿದೆ. ಸರ್ಕಾರದ ಒಪ್ಪಿಗೆ ಬಳಿಕ ಸಾಹಿತ್ಯ ಸಮ್ಮೇಳನದ ದಿನಾಂಕ ಅಂತಿಮವಾಗಲಿದೆ.
85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲೇ ಹಾವೇರಿಯಲ್ಲಿ ಅಕ್ಷರ ಜಾತ್ರೆ ನಡೆಸಲು ನಿರ್ಧರಿಸಲಾಗಿತ್ತು. ಈ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೂಡ ಇತ್ತಿಚೆಗೆ ಖಚಿತಪಡಿಸಿದ್ದರು.