Homeಕವನಮರೆವಿಗೆ ಎದುರಾಗಿ.. ಯುದ್ಧ ವಿರೋಧಿ ಪದ್ಯಗಳು

ಮರೆವಿಗೆ ಎದುರಾಗಿ.. ಯುದ್ಧ ವಿರೋಧಿ ಪದ್ಯಗಳು

- Advertisement -
- Advertisement -

1.

ನನ್ನ ಮಗಳು,
ಅವಳ ಸೈಕಲ್‌ನ ಹ್ಯಾಂಡಲ್ ನಡುವೆ ಕಟ್ಟಿದ್ದ
ಜೇಡರ ಬಲೆಯನ್ನು ಕತ್ತರಿಸಿ
ಆ ಜೇಡರ ಹುಳುವನ್ನು ಘಾಸಿ ಮಾಡಲು
ಸುತರಾಂ ಸಿದ್ಧಳಾಗಲಿಲ್ಲ.

ಎರಡು ವಾರ ಕಾಯ್ದಳು
ಜೇಡ ತಾನೇತಾನಾಗಿ
ಆ ಜಾಗ ಖಾಲೀ ಮಾಡುವ ತನಕ.

ನಾನು ಅವಳಿಗೆ ಬುದ್ಧಿ ಹೇಳಿದೆ.
ಅಲ್ಲ ಮಗಳೇ,
ನೀನು ಆ ಬಲೆಯನ್ನು ಕತ್ತರಿಸಿಬಿಟ್ಟಿದ್ದರೆ
ಜೇಡಕ್ಕೆ ಗೊತ್ತಾಗುತ್ತಿತ್ತು
ಆ ಜಾಗ ಅದರ ಮನೆಯಲ್ಲವೆಂದು,
ಮತ್ತು ನೀನು ಸೈಕಲ್ ಕೂಡ ಓಡಾಡಿಸಬಹುದಿತ್ತು.
ಮಗಳು ಕಣ್ಣು ಪಿಳುಕಿಸುತ್ತ….

ಅಪ್ಪಾ
ಹೀಗೆ ಮಾಡುವುದರಿಂದಲೇ ಅಲ್ವಾ
ಜನ, ರೆಫ್ಯೂಜಿಗಳಾಗೋದು?

ಫಾಡಿ ಜೂಡ,
ಪ್ಯಾಲೆಸ್ತೇನಿಯನ್-ಅಮೆರಿಕನ್ ಕವಿ

******

2.

“ನಾವು ರಿಯಲಿಸ್ಟಿಕ್ ಆಗಿ ಯೋಚಿಸಬೇಕು”
ಎಂದು ರಾಜಕಾರಣಿಗಳು ಎಚ್ಚರಿಕೆಯಿಂದ
ಗಂಭೀರವಾಗಿ ಮಾತಾಡುವಾಗ,
ಬಹುತೇಕ ಅವರು, ಸೋತು ಸುಣ್ಣವಾಗಿದ್ದಾರೆ
ಆದ್ದರಿಂದಲೇ ಅವರು ’ಸಮಾಧಾನ ಪ್ರಿಯರು’

ಆದರೆ, ಇದೇ ರಾಜಕಾರಣಿಗಳು
ಮೌಲ್ಯ, ಹೆಮ್ಮೆ ಮುಂತಾದವುಗಳ ಬಗ್ಗೆ
ಮಾತನಾಡಲು ಶುರು ಮಾಡಿದರೆಂದರೆ,
ಗಮನಿಸಿ,
ಈಗಾಗಲೇ ಅವರ ಜನರಲ್‌ಗಳು
ನಕ್ಷೆಯ ಮೇಲೆ
ಏನೋ ಗುರುತು ಮಾಡುತ್ತಿದ್ದಾರೆ.

ಡಬ್ಲ್ಯು ಎಚ್ ಆಡೆನ್ (1907-1973),
ಬ್ರಿಟಿಷ್-ಅಮೆರಿಕನ್ ಕವಿ

******

3

ಕ್ರೂರಿಯೊಬ್ಬನ ಗೋರಿಯ ಮೇಲಿನ ಬರಹ

ಕೆಲಸದಲ್ಲಿ ಭಾರೀ ಅಚ್ಚುಕಟ್ಟು
ಒಂದು ಕೆಲಸ ಹಿಡಿದರೆ, ಮುಗಿಸುವವರೆಗೂ
ವಿಶ್ರಾಂತಿ ತೆಗೆದುಕೊಳ್ಳುವುದಿಲ್ಲ.
ಪದ್ಯ ಅಂತೂ ಅದ್ಭುತ
ಎಂಥ ಸಾಮಾನ್ಯರೂ ಮೈಮರೆತು ತಲೆದೂಗುತ್ತಾರೆ.
ಮನುಷ್ಯ ಜಾತಿಯ ಅವಿವೇಕದ ಇತಿಹಾಸವನ್ನು
ಅರೆದು ಕುಡಿದವರಂತೆ ಮಾತನಾಡುತ್ತಾನೆ.
ಸೈನ್ಯ, ಯುದ್ಧನೌಕೆಗಳ ಬಗ್ಗೆ ಅಪಾರ ತಿಳಿವಳಿಕೆ.
ಪಾರ್ಲಿಮೆಂಟಲ್ಲಿ ತಮಾಷೆ ಮಾಡಿದಾಗ
ಗೌರವಾನ್ವಿತ ಸದಸ್ಯರು
ಬೆಂಚು ಕುಟ್ಟಿ, ಗಹಗಹಿಸಿ ನಗುತ್ತಾರೆ.
ಹಾಗು
ಇವನು ಕಣ್ಣೀರು ಹಾಕಿದಾಗ
ಪುಟ್ಟ ಮಕ್ಕಳು
ರಸ್ತೆಯಲ್ಲಿ ಬಿದ್ದು ಸಾಯುತ್ತಾರೆ.

ಡಬ್ಲ್ಯು ಎಚ್ ಆಡೆನ್ (1907-1973), ಬ್ರಿಟಿಷ್-ಅಮೆರಿಕನ್ ಕವಿ

*********

4

ತಾವೋ ಮಾರ್ಗದಲ್ಲಿ
ಹತೋಟಿಗೆ ಬಲಪ್ರಯೋಗ,
ಗೆಲುವಿಗೆ ಆಯುಧ ನಿಷಿದ್ಧ.
ಸೈನಿಕರು ಓಡಾಡಿದಲ್ಲೆಲ್ಲ

ಬೆಳೆದು ನಿಂತಿವೆ ಮುಳ್ಳಿನ ಪೊದೆಗಳು.
ಹಿಂಸೆ ಅಂಟು ರೋಗ
ಉದ್ದೇಶ ಎಷ್ಟೇ ಒಳ್ಳೆಯದಾದರೂ.

ನಿಜದ ನಾಯಕ
ಯುದ್ಧದ ನಂತರ ನೆಲೆಗೊಳ್ಳುವ
ಶಾಂತಿಯ ಬುಡದಲ್ಲಿ ಜ್ವಾಲಾಮುಖಿ ಕಾಣಬಲ್ಲ.
ಅದಕ್ಕೇ ಅವನಿಗೆ ಯುದ್ಧದ ಬಗ್ಗೆ ಹೆಮ್ಮೆಯಿಲ್ಲ.

ಅವನಿಗೆ ತನ್ನ ಬಗ್ಗೆ ನಂಬಿಕೆ
ಆದ್ದರಿಂದ ಬೇರೆಯವರ ಮನ ಒಲಿಸುವುದಿಲ್ಲ,

ಅವನಿಗೆ ತನ್ನ ಬಗ್ಗೆ ಸಮಾಧಾನ
ಆದ್ದರಿಂದ ಬೇರೆಯವರ ಒಪ್ಪಿಗೆ ಬೇಕಿಲ್ಲ,

ಅವನು ತನ್ನನ್ನು ಒಪ್ಪಿಕೊಂಡಿರುವದರಿಂದ
ಜಗತ್ತು ಅವನನ್ನು ಒಪ್ಪಿಕೊಂಡಿದೆ.

ಲಾವೋತ್ಸೆ (ಚೀನಾದ ಪ್ರಾಚೀನ ಕವಿ)

*******

5

ರೆಫ್ಯೂಜಿ ಕ್ಯಾಂಪಿನ ನಾಲ್ಕು ಕವಿತೆಗಳು
(ಅ)
ಅವಳ ಹೆಸರು ಯಾರಿಗೂ ಗೊತ್ತಿಲ್ಲ,
ಮರದ ದಿಣ್ಣೆಯ ಮೇಲೆ ಕುಳಿತಿರುವ
ಆ ಹೆಂಗಸನ್ನು ಯಾರೂ
ಅವಳ ಹೆಸರಿನಿಂದ ಕೂಗುವುದೇ ಇಲ್ಲ.

ಗರಗಸದಿಂದ ಕತ್ತರಿಸಲ್ಪಟ್ಟ
ಮಗುವಿನ ತಾಯಿ ಎಂದೇ

ಗುರುತಿಸುತ್ತಾರೆ ಅವಳನ್ನು ಇಲ್ಲಿ ಎಲ್ಲ
ಈ ರೆಫ್ಯೂಜಿ ಕ್ಯಾಂಪ್‌ನಲ್ಲಿ.

———

(ಆ)

ಅವರು, ತಮ್ಮ ಹಳ್ಳಿ, ಮನೆ, ಒಲೆ,
ಒಲೆ ಮೇಲಿನ ರೊಟ್ಟಿ ಎಲ್ಲವನ್ನೂ
ಇದ್ದಕ್ಕಿದ್ದ ಹಾಗೆಯೇ ಬಿಟ್ಟು
ಓಡಿ ಬಂದ ರಾತ್ರಿಯ

ಹಿಂದಿನ ರಾತ್ರಿ
ಯಾರು ತಟ್ಟಿದ್ದರು ಅವರ ಮನೆಯ ಬಾಗಿಲನ್ನ?

ಯಾಕೆ ಅವರು ತಮ್ಮ ಮನೆಯ
ಬಾಗಿಲು, ಕಿಟಕಿಗಳನ್ನ
ಆಮೇಲೆ ಯಾರಿಗೂ ತೆರೆಯಲೇ ಇಲ್ಲ?

ಯಾಕೆ ಅವರು ಆಮೇಲೆ
ತಮ್ಮ ಮನೆಯ ಹೆಣ್ಣುಮಕ್ಕಳ ಕಣ್ಣಲ್ಲಿ
ಕಣ್ಣಿಟ್ಟು ನೋಡಲೇ ಇಲ್ಲ
ಎನ್ನುವುದನ್ನ ಹೇಳುವುದಕ್ಕಿಂತ ಮೊದಲೇ….

ಭಾರಿ ಚಿನಾರ್ ಮರ
ಕರ್ಕಶವಾಗಿ ಸದ್ದು ಮಾಡುತ್ತಾ
ನೆಲಕ್ಕುರುಳಿತು.
ಅವರಿಗೆ ಹೇಳಬೇಕಾದ್ದನ್ನು ಹೇಳಲಿಕ್ಕಾಗಲೇ ಇಲ್ಲ.

——-

(ಇ)

ತನ್ನ ಟೆಂಟ್ ಹೊರಗೆ
ಆಟ ಆಡುತ್ತಿದ್ದ
ಆ ಪುಟ್ಟ ಹುಡುಗಿ
ಹತ್ತಾರು ಬಾರಿ ಕರೆದರೂ
ನಮ್ಮತ್ತ ಕಣ್ಣೆತ್ತಿ ನೋಡಲಿಲ್ಲ.

ಆಕೆ ಓಡಿ ಹೋಗಿ
ತನ್ನ ಟೆಂಟ್‌ನ ಬಾಗಿಲಲ್ಲಿ
ಎರಡೂ ಬದಿಯ ಹಗ್ಗ ಜಗ್ಗಿ ಹಿಡಿದು
ಅಡ್ಡ ನಿಂತುಕೊಂಡಳು,
ಇನ್ನು ಮುಂದೆ
ಯಾರನ್ನೂ ಒಳಗೆ ಬಿಡಲಾರೆ ಎಂಬಂತೆ.

ಅವಳು ಗುರುತಿಸದ
ಯಾವ ಮುಖಕ್ಕೂ
ಇನ್ನು ಅವಳ ಹೊಸಮನೆಯಲ್ಲಿ
ಜಾಗವಿಲ್ಲ.

———-

(ಈ)

ಒಂದು ಟೆಂಟ್‌ನಿಂದ
ಇನ್ನೊಂದು ಟೆಂಟ್‌ಗೆ,
ಎರಡೇ ಎರಡು ಹೆಜ್ಜೆ ದಾಟಿ
ನವ ವಧು
ಗಂಡನ ಮನೆಗೆ ಬಂದಿದ್ದಾಳೆ.

ನಿನ್ನೆಯತನಕ
ಗುರುತು ಪರಿಚಯವೇ ಇಲ್ಲದ
ಎರಡು ಪರಿವಾರಗಳು
ಇಂದು
ಮದುವೆಯ ಹಾಡು ಹಾಡುತ್ತಾ
ಜೋರಾಗಿ ಗದ್ದಲ ಮಾಡುತ್ತಿವೆ,
ಗುಂಡಿನ ಸದ್ದಿನ ಸುದ್ದಿ
ಒಂದಿಷ್ಟು ಹೊತ್ತಾದರೂ
ಕಿವಿ ಮೇಲೆ ಬೀಳದಂತೆ.

ಚಹಾದ ಪಾತ್ರೆಯಲ್ಲಿ ವಿಧಿಯಿಲ್ಲದೇ

ಕುದಿಯುತ್ತಿರುವ ಬಣ್ಣ ಬಣ್ಣದ ಮಸಾಲೆ.
ವಧುವಿನ ಮೊದಲರಾತ್ರಿ.

ಕಲ್ಪನಾ ಸಿಂಗ್ ಚಿಟ್ನಿಸ್,
ಭಾರತೀಯ-ಅಮೆರಿಕನ ಕವಿ

***********

6

ಮರಿ,
ತೊಗೋ ಈ ಕಿತ್ತಳೆ ಹಣ್ಣು
ಗಫೂರ್‌ನ ಕೊಲ್ಲಬೇಡ
ಅವ ನನ್ನ ಮೊಮ್ಮಗ.

ಮರಿ,
ತೊಗೋ ಈ ಸೇಬು
ಇಸ್ಮಾಯಿಲ್‌ನ ಬಿಟ್ಟುಬಿಡು

ಆವಾ ನನ್ನ ಸಂಬಂಧಿ.

ಮರಿ,
ಈ ಆಲಿವ್ಸ್ ತೊಗೋ
ನಿಸ್ಸಾರ್‌ಗೆ ಏನು ಮಾಡಬೇಡ
ಅವನು ಒಳ್ಳೆಯ ಹುಡುಗ.

ಕೊಲ್ಲಲೇಬೇಕಾದರೆ
ಈ ಮುದುಕಿಯನ್ನು ಕೊಲ್ಲು
ಮಾತು ಸತ್ತ ಊರಿನಲ್ಲಿ
ಈ ಬಾಯ್ಬಡುಕಿಗೇನು ಕೆಲಸ?

ದೇವರನ್ನೂ ಕೊಲ್ಲು
ಅವನಿಗೂ ಬಂದೂಕಿನ ಹೊಗೆ
ಆಗಿ ಬರುವುದಿಲ್ಲ.

ನನ್ನ ಭಾಷೆ
ಅವಳ ರಕ್ತದೊಂದಿಗೆ ಚಿಮ್ಮಿದೆ,
ಸಿಡಿದ ಗುಂಡಿನ ಚೂರುಗಳು

ನನ್ನ ಅಕ್ಷರಗಳನ್ನು ಘಾಸಿ ಮಾಡಿವೆ.
ನನ್ನ ಕವಿತೆಯಿಂದ ರಕ್ತ ಸೋರುತ್ತಿದೆ.

ಕಟಕಟೆಯಲ್ಲಿ ನಿಂತ ಕವಿತೆ
ವಿಷದ ಗಾಳಿಯನ್ನು
ಸಹಿಸಿಕೊಳ್ಳದೆ ಹೋದರೆ ಹೇಗೆ?

ಕೆ. ಸಚ್ಚಿದಾನಂದನ್, ಕೇರಳ ಮೂಲದ ಕವಿ

7

ವಿಯೆಟ್ನಾಂ
“ಮಗಳೇ, ನಿನ್ನ ಹೆಸರೇನು”
“ನನಗೆ ಗೊತ್ತಿಲ್ಲ”

“ಎಷ್ಟು ವಯಸ್ಸು? ಯಾವೂರು?”
“ನನಗೆ ಗೊತ್ತಿಲ್ಲ”

“ಯಾಕೆ ಆ ಬಿಲವನ್ನ ಮತ್ತೆ ಅಗೆಯುತ್ತಿದ್ದೀಯ?”
“ನನಗೆ ಗೊತ್ತಿಲ್ಲ”

“ಎಷ್ಟು ದಿನಗಳಾಯ್ತು ಹೀಗೆ ಅಡಗಿಕೊಂಡು?”
“ನನಗೆ ಗೊತ್ತಿಲ್ಲ”

“ನನ್ನ ಬೆರಳನ್ನ ಯಾಕೆ ಕಚ್ಚಿದೆ?”
“ನನಗೆ ಗೊತ್ತಿಲ್ಲ”

“ನಮ್ಮಿಂದ ಅಪಾಯ ಇಲ್ಲದಿರುವುದು ನಿನಗೆ ಗೊತ್ತಿಲ್ಲವೆ?”
“ನನಗೆ ಗೊತ್ತಿಲ್ಲ”

“ನೀನು ಯಾರ ಪರವಾಗಿರುವೆ?”
“ನನಗೆ ಗೊತ್ತಿಲ್ಲ”

“ಇದು ಯುದ್ಧ, ನೀನು ಯಾರನ್ನಾದರೂ ಆಯ್ಕೆ ಮಾಡಲೇ ಬೇಕು”
“ನನಗೆ ಗೊತ್ತಿಲ್ಲ”

“ನಿನ್ನ ಹಳ್ಳಿ ಇನ್ನೂ ಇದೆಯಾ?”
“ನನಗೆ ಗೊತ್ತಿಲ್ಲ”

“ಈ ಹುಡುಗ, ಹುಡುಗಿ ನಿನ್ನ ಮಕ್ಕಳಾ?”
“ಹೌದು”

ವಿಸ್ವಾವಾ ಸಿಂಬೋರ್‍ಸ್‌ಕ, ಪೋಲಿಶ್ ಕವಿ

ಸಂಗ್ರಹ ಮತ್ತು ಕನ್ನಡ ಅನುವಾದ: ಚಿದಂಬರ ನರೇಂದ್ರ


ಇದನ್ನೂ ಓದಿ: ಪ್ರತಿರೋಧವೊಡ್ಡದೆ ನನ್ನೊಳಗಿನ ಕವಿತೆ ಪೂರ್ಣವಾಗುವುದೇ ಇಲ್ಲ: ಮಿಸ್ರಿಯಾ. ಐ.ಪಜೀರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...