‘ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನೀ ಕನ್ನಡವಾಗಿರು’ ಎಂಬ ರಾಷ್ಟ್ರಕವಿ ಕುವೆಂಪು ಅವರ ಗೀತೆಯನ್ನು ಕೆನಡಾದ ಸಂಸತ್ತಿನಲ್ಲಿ ಮೊಳಗಿಸಲಾಗಿದೆ. ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಂದ್ರ ಆರ್ಯ ಅವರು ಕೆನಡಾದಲ್ಲಿ ಸಂಸತ್ ಸದಸ್ಯರಾಗಿದ್ದು, ಅವರು ಗುರುವಾರ ಸಂಸತ್ತಿನಲ್ಲಿ ತಮ್ಮ ಮಾತೃಭಾಷೆ ಕನ್ನಡದಲ್ಲಿ ಮಾತನಾಡಿದ್ದಾರೆ.
ಹೌಸ್ ಆಫ್ ಕಾಮನ್ಸ್ನಲ್ಲಿ ನೇಪಿಯನ್ ಚುನಾವಣಾ ಜಿಲ್ಲೆಯನ್ನು ಪ್ರತಿನಿಧಿಸುವ ಆರ್ಯ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. “ನಾನು ಕೆನಡಾದ ಸಂಸತ್ತಿನಲ್ಲಿ ನನ್ನ ಮಾತೃಭಾಷೆ (ಮೊದಲ ಭಾಷೆ) ಕನ್ನಡದಲ್ಲಿ ಮಾತನಾಡಿದ್ದೇನೆ. ಈ ಸುಂದರ ಭಾಷೆ ಸುದೀರ್ಘ ಇತಿಹಾಸವನ್ನು ಹೊಂದಿದೆ ಮತ್ತು ಸುಮಾರು 50 ಮಿಲಿಯನ್ ಜನರು ಮಾತನಾಡುತ್ತಾರೆ. ಭಾರತದ ಹೊರಗೆ ಜಗತ್ತಿನ ಯಾವುದೇ ಸಂಸತ್ತಿನಲ್ಲಿ ಕನ್ನಡ ಮಾತನಾಡುತ್ತಿರುವುದು ಇದೇ ಮೊದಲು” ಎಂದು ಅವರು ಬರೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಟ್ವೀಟ್ ಮಾಡಿದ ವಿಡಿಯೊದಲ್ಲಿ ಅವರು, “ಮಾನ್ಯ ಸಭಾಪತಿ ಕೆನಡಾ ಸಂಸತ್ತಿನಲ್ಲಿ ನನ್ನ ಮಾತೃಭಾಷೆಯಾದ ಕನ್ನಡದಲ್ಲಿ ಮಾತನಾಡಲು ಅವಕಾಶ ಸಿಕ್ಕಿರುವುದಕ್ಕೆ ನನಗೆ ಸಂತೋಷವಾಗುತ್ತಿದೆ. ಭಾರತ ದೇಶದ ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ವ್ಯಕ್ತಿಯೊಬ್ಬ ಕೆನಾಡದ ಸಂಸತ್ ಸದಸ್ಯನಾಗಿ ಆಯ್ಕೆಯಾಗಿ ಮತ್ತು ಕನ್ನಡದಲ್ಲಿ ಮಾತನಾಡುವುದು ಸುಮಾರು ಐದು ಕೋಟಿ ಕನ್ನಡಿಗರಿಗೆ ಹೆಮ್ಮೆಯ ಕ್ಷಣವಾಗಿದೆ” ಎಂದು ಅವರು ಹೇಳಿದ್ದಾರೆ.
“ಕೆನಡಾ ದೇಶದ ಕನ್ನಡಿಗರು 2018 ನೇ ಇಸವಿಯಲ್ಲಿ ಕೆನಡಾದ ಈ ಸಂಸತ್ತಿನಲ್ಲಿ ‘ಕನ್ನಡ ರಾಜ್ಯೋತ್ಸವವನ್ನು ಆಚರಿಸಿದರು. ರಾಷ್ಟ್ರ ಕವಿ ಕುವೆಂಪು ಬರೆದಿರುವ ಮತ್ತು ನಟಸಾರ್ವಭೌಮ ಡಾ. ರಾಜ್ಕುಮಾರ್ ಹಾಡಿರುವ ಭಾವಗೀತೆಯ ಕೆಲವು ಪದಗಳೊಂದಿಗೆ ನನ್ನ ಹೇಳಿಕೆಯನ್ನು ಮುಗಿಸುತ್ತಿದ್ದೇನೆ. ‘ಎಲ್ಲಾದರೂ ಇರು ಎಂತಾದರೂ ಇರು, ಎಂದೆಂದಿಗೂ ನೀ ಕನ್ನಡವಾಗಿರು’. ಧನ್ಯವಾದಗಳು ಸಭಾಪತಿಗಳೇ” ಎಂದು ಅವರು ತಮ್ಮ ಮಾತನ್ನು ಮುಗಿಸಿದ್ದಾರೆ.
I spoke in my mother tongue (first language) Kannada in Canadian parliament.
This beautiful language has long history and is spoken by about 50 million people.
This is the first time Kannada is spoken in any parliament in the world outside of India. pic.twitter.com/AUanNlkETT— Chandra Arya (@AryaCanada) May 19, 2022
ಇದನ್ನೂ ಓದಿ: ರಾಷ್ಟ್ರೀಯ ಭಾಷೆಯ ಕಲ್ಪನೆ ಮತ್ತು ಕನ್ನಡದ ಅಸ್ಮಿತೆ
ಕರ್ನಾಟಕದ ತುಮಕೂರು ಜಿಲ್ಲೆಯವರಾದ ಆರ್ಯ ಅವರು 2019 ರ ಫೆಡರಲ್ ಚುನಾವಣೆಯಲ್ಲಿ ಕೆನಡಾದ ಲಿಬರಲ್ ಪಾರ್ಟಿಯಿಂದ ಮರು ಆಯ್ಕೆಯಾಗಿದ್ದಾರೆ. ಅವರು ರಾಮನಗರದಿಂದ ಎಂಜಿನಿಯರಿಂಗ್ನಲ್ಲಿ ಸ್ನಾತಕೋತ್ತರ ಪದವಿ ಮತ್ತು ಕರ್ನಾಟಕದ ಧಾರವಾಡದಿಂದ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
ಅವರು ರಾಜಕೀಯ ಪ್ರವೇಶಿಸುವ ಮೊದಲು ಅವರು ಉನ್ನತ ತಂತ್ರಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಒಟ್ಟಾವಾ ಕ್ಯಾಥೋಲಿಕ್ ಸ್ಕೂಲ್ ಬೋರ್ಡ್ನಲ್ಲಿ ಕೆಲಸ ಮಾಡುತ್ತಿದ್ದ ಅವರ ಪತ್ನಿ ಸಂಗೀತಾ ಅವರೊಂದಿಗೆ ಅವರು ನೇಪಿಯನ್ನಲ್ಲಿ ವಾಸಿಸುತ್ತಿದ್ದಾರೆ.


