Homeಮುಖಪುಟಪ್ರತಿಕ್ರಿಯೆ; ಅಳದ ಕಂದನಿಗೆ ಯಾವ ತಾಯಿಯೂ ಹಾಲೂಡಳು!

ಪ್ರತಿಕ್ರಿಯೆ; ಅಳದ ಕಂದನಿಗೆ ಯಾವ ತಾಯಿಯೂ ಹಾಲೂಡಳು!

- Advertisement -
- Advertisement -

’ನ್ಯಾಯಪಥ’ 18 ಮೇ 2022ರ ಸಂಚಿಕೆಯಲ್ಲಿ ಡಾ. ರಮೇಶ.ವಿ ರವರ ’ರಾಷ್ಟ್ರೀಯತೆ ಮತ್ತು ಕನ್ನಡದ ಅಸ್ಮಿತೆ’ (ಇಲ್ಲಿ ಓದಿ) ಎಂಬ ಲೇಖನ ಭಾಷಾ ವಿಜ್ಞಾನದ ನೆಲೆಯಲ್ಲಿ ಒಳ್ಳೆಯ ಬರಹವಾಗಿದೆ. ಇಂಡೋ ಆರ್ಯನ್ ಭಾಷೆಗಳು ಹಾಗು ದ್ರಾವಿಡ ಭಾಷೆಗಳು ಕಾಲಕ್ರಮದಲ್ಲಿ ಹೇಗೆ ಕವಲೊಡೆದು ಬೆಳೆದವು ಎಂಬುದನ್ನು ಸುಪ್ರೀಂಕೋರ್ಟು ಒಳಗೊಂಡಂತೆ ಸದ್ಯ ನಮ್ಮ ರಾಷ್ಟ್ರದ ಹಿಂದಿ ರಾಜಕಾರಣ ದ್ರಾವಿಡ ಭಾಷೆಗಳ ಬುಡಕ್ಕೆ ಬಿಸಿನೀರು ಚೆಲ್ಲುತ್ತಿರುವ ಹಿನ್ನೆಲೆಯಲ್ಲಿ ಅತ್ಯಂತ ಸೂಕ್ಷ್ಮವಾಗಿ, ಸೌಮ್ಯವಾಗಿ ವಿಸ್ತರಿಸಿ, ಬಿಡಿಸಿ ಹೇಳಿದ್ದಾರೆ.

ನಾನೀಗ ರಮೇಶ ಅವರೊಂದಿಗೆ ಕೂಡಿಕೊಂಡು ಕೊಂಚ ಗಟ್ಟಿಯಾಗಿ ಹೇಳಬೇಕಾದ ಮಾತೊಂದಿದೆ. ಅದೇನೆಂದರೆ ಕೂಸು ಅಳದಿದ್ದರೆ ಯಾವ ತಾಯಿಯೂ ಹಾಲೂಡಿಸುವುದಿಲ್ಲವಷ್ಟೆ? ಹಾಗೆ ಯಾವುದೇ ಭಾಷಾ ಸಮುದಾಯವು ಸಹ ಕೂಡುರಾಷ್ಟ್ರದ ರಾಜ್ಯಾಂಗಬದ್ಧ ತನ್ನ ಹಕ್ಕನ್ನು ಚಲಾಯಿಸದಿದ್ದರೆ, ಪಾರ್ಲಿಮೆಂಟಿನಲ್ಲಿ ನಿಂತು ಗಟ್ಟಿಯಾಗಿ ಮಾತನಾಡಿ ಪ್ರಶ್ನಿಸದಿದ್ದರೆ ಇದು ಪ್ರಜಾತಂತ್ರ ಅನ್ನಿಸಿಕೊಳ್ಳುವುದೆ? ಇಲ್ಲ. ಈ ನಿಟ್ಟಿನಲ್ಲಿ ರಾಷ್ಟ್ರಕವಿ ಕುವೆಂಪು ಕಳೆದ ಶತಮಾನದ ಮೂರನೆ ದಶಕದಿಂದ ಬಿಟ್ಟೂಬಿಡದಂತೆ ಒಂದೇಸಮನೆ ’ಕನ್ನಡ ಅಸ್ಮಿತೆ’ಯ ಬಗ್ಗೆ ಕವನ ಬರೆದಿದ್ದಾರೆ; ಭಾಷಣ ಮಾಡಿದ್ದಾರೆ, ಸಂದರ್ಶನದಲ್ಲಿ ಹೇಳಿದ್ದಾರೆ. ಕುವೆಂಪು ಅವರ ವೈಜ್ಞಾನಿಕ ದೃಷ್ಟಿ, ವೈಚಾರಿಕ ತಿಳಿವು, ಒಕ್ಕೂಟರಾಷ್ಟ್ರದ ನಿಲುವು ಅಖಂಡ ಎಂಬುದನ್ನು ಹೆಚ್ಚು ವಿಸ್ತರಿಸಬೇಕಾಗಿಲ್ಲ. 1928ರಲ್ಲಿ ಅವರು ಇನ್ನೂ 24ರ ಹರೆಯದ ಕಾಲೇಜು ವಿದ್ಯಾರ್ಥಿ. ಕನ್ನಡದ ಅಸ್ಮಿತೆಯನ್ನು ಕುರಿತು ಆಗಲೇ ಚಿಂತನಮಂಥನ ನಡೆಸಿದ್ದಾರೆ. ಆಗ ಬರೆದದ್ದು ’ಭಾರತ ಜನನಿಗೆ’ ಎಂಬ ಕವನ. ಅಲ್ಲಿಂದ ಮೊದಲುಗೊಂಡು ’ಜಯಹೇ ಕರ್ನಾಟಕ ಮಾತೆ (1928), ಸಾಯುತಿದೆ ನಿಮ್ಮ ನುಡಿ ಓ ಕನ್ನಡದ ಕಂದರಿರ (1935), ಕಂದ ಕನ್ನಡನಿವನು ಕೈಬಿಡದಿರಮ್ಮಾ (1938), ಮೆಟ್ಟುವ ನೆಲ ಅದು ಕರ್ನಾಟಕ (1949), ಕರ್ನಾಟಕ ಮಂತ್ರದೀಕ್ಷೆ (1949), ಕನ್ನಡ ಡಿಂಡಿಮ(1960), ಸಾಕು ಈ ಬಲಾತ್ಕಾರ(1963), ಬಲಾತ್ಕಾರದ ಭಾಷಾ ತ್ರಿಶೂಲ(1963)’ ಹೀಗೆ ಕುವೆಂಪು ಕನ್ನಡ ತಾಯಿಯ ಸೇವೆಯ ಮಾಡಲು ಜೀವಮಾನ ಪರ್ಯಂತ ಹಾತೊರೆದರು; ಬರೆದರು, ಮಾತಾಡಿ ಕನ್ನಡದ ಅಸ್ಮಿತೆಯನ್ನು ಎತ್ತಿಹಿಡಿದರು. ಸಂಸ್ಕೃತ, ಹಿಂದಿ, ಇಂಗ್ಲಿಷ್ ಯಜಮಾನ್ಯದ ’ಕೊಲ್ವಮುನ್ನ ಸೊಲ್ಲಡಗಿಸುವ ಹುನ್ನಾರ’ವನ್ನು ಕಂಡು ಮರುಗಿದರು;

ಸಾಯುತಿದೆ ನಿಮ್ಮನುಡಿ, ಓ ಕನ್ನಡದ ಕಂದರಿರ
ಹೊರನುಡಿಯ ಹೊರೆಯಿಂದ ಕುಸಿದು ಕುಗ್ಗಿ!
ರಾಜನುಡಿಯೆಂದೊಂದು, ರಾಷ್ಟ್ರನುಡಿಯೆಂದೊಂದು,
ದೇವನುಡಿಯೆಂದೊಂದು ಹತ್ತಿ ಜಗ್ಗಿ

ಎಂದು ಎಚ್ಚರಿಸಿದರು. ಆದರೆ ಇವತ್ತಿಗೂ ಕನ್ನಡಿಗರು ಎಚ್ಚರಗೊಳ್ಳಲಾಗಿಲ್ಲ. ಇಂಗ್ಲಿಷ್, ಹಿಂದಿ, ಸಂಸ್ಕೃತದ ಹೊರೆ ಕನ್ನಡದ ಮಕ್ಕಳಿಗೆ ತಪ್ಪಿಲ್ಲ. ’ಕರ್ನಾಟಕ ಎಂಬುದು ಬರಿಯ ಹೆಸರೆ ಮಣ್ಣಿಗೆ?’ ಎಂದು ಕೇಳಲಾಗಿಲ್ಲ! ಸ್ವಾತಂತ್ರ್ಯವೂ ಬಂತು; ಸ್ವರಾಜ್ಯವೂ ಆಯಿತು; ಭಾಷಾವಾರು ಪ್ರಾಂತ್ಯಗಳೂ ಉದಯವಾದವು; ’ಉದಯವಾಯಿತು ನಮ್ಮ ಚೆಲುವ ಕನ್ನಡ ನಾಡು’ ಎಂದು ಕವಿಗಳು, ಗಮಕಿಗಳು ಹಾಡಿ ದಣಿದರು. ಆದರೆ ಚೆಲುವ ಕನ್ನಡ ನಾಡು ಎಲ್ಲಿ? ಎಲ್ಲವೂ ಜಾತಿಯಲ್ಲಿ, ಸ್ವಜನಪಕ್ಷಪಾತದಲ್ಲಿ, ಭ್ರಷ್ಟಾಚಾರದಲ್ಲಿ, ಮಂತ್ರಿ ಮಹೋದಯರ ಕುರ್ಚಿ ಹರಾಜಿನಲ್ಲಿ, ಹೈಕಮಾಂಡ್ ಎದುರು ಡೊಗ್ಗು ಸಲಾಮು ಹೊಡೆಯುವಲ್ಲಿ ಕನ್ನಡ, ಕರ್ನಾಟಕ, ಕನ್ನಡಿಗರ ಅಸ್ಮಿತೆಯೇ ಮರೆತು ಹೋಗುತ್ತಿದೆ. ’ಮಾತು ಮರೆತ’ ಜನಾಂಗ ಬದುಕಿದ್ದರೂ ಸತ್ತಂತೆ ತಾನೆ? ’ಬಾರಿಸು ಕನ್ನಡ ಡಿಂಡಿಮವ ಓ ಕರ್ನಾಟಕ ಹೃದಯಶಿವ’ ಎಂದು ಸತ್ತಂತಿರುವ ಕನ್ನಡಿಗರನ್ನು ಬಡಿದೆಬ್ಬಿಸುವ ದಾತಾರರೇ ಈಗ ಇಲ್ಲ. ನೆರೆಯ ತಮಿಳರು ನಾಡು-ನುಡಿಯ ’ಅಸ್ಮಿತೆ’ಗೆ ಕುಂದು ಬಂದಾಗಲೆಲ್ಲಾ ದಂಗೆಯೆದ್ದು ದ್ರಾವಿಡತನವನ್ನು ಮೆರೆದಿದ್ದಾರೆ. ಕನ್ನಡಿಗರರಿಗೆ ಆ ಭಾಷಾಭಿಮಾನವಾಗಲೀ, ಸ್ವಾಭಿಮಾನವಾಗಲೀ ಇಲ್ಲ. ಲಾಗಾಯ್ತಿನಿಂದ ಒಬ್ಬ ಮಂತ್ರಿಯನ್ನು ಕೈಬಿಡುವುದಕ್ಕೂ ಇನ್ನೊಬ್ಬರನ್ನು
ಸೇರಿಸಿಕೊಳ್ಳುವುದಕ್ಕೂ ಸಹ ಮುಖ್ಯಮಂತ್ರಿಯವರು ದೆಹಲಿ ದರ್ಬಾರ್‌ಗೆ ಹೋಗಿ ಹೈಕಮಾಂಡಿನ ಬಾಗಿಲು ಕಾಯುವ ಪರಿಸ್ಥಿತಿ ಉದ್ಭವಿಸಿದೆ. ಇದಕ್ಕೆಲ್ಲಾ ಕಾರಣ ಕರ್ನಾಟಕದ ಶಾಸಕರು, ಸಂಸದರು ಮತ್ತು ರಾಜ್ಯಸರ್ಕಾರದ ದೌರ್ಬಲ್ಯ. ಬಗ್ಗಿದಷ್ಟೂ ಉತ್ತರದವರ ಪಾರುಪತ್ಯ ಎದ್ದು ಕಾಣುತ್ತದೆ. ಹಾಗಾದರೆ ಏನು ಮಾಡಬೇಕು?

ಏನು ಮಾಡಬೇಕು ಎಂಬುದನ್ನು ಕುವೆಂಪು 1965ರಲ್ಲೇ ’ರಾಷ್ಟ್ರಕವಿ ಪ್ರಶಸ್ತಿ’ ಸ್ವೀಕಾರ ಮಾಡಿದ ಸಂದರ್ಭದಲ್ಲಿ ಹೀಗೆ ಹೇಳಿದ್ದಾರೆ: “ಮಹನೀಯರೆ, ಕೊನೆಯದಾಗಿ ಅಧಿಕೃತ ಶಾಸನಕರ್ತರಾದ ನಿಮ್ಮಲ್ಲಿ ಅನಧಿಕೃತ ಶಾಸನಕರ್ತನಾದ ನನ್ನ ಒಂದು ಅಹವಾಲು; ಅದು ಇಂಗ್ಲಿಷ್ ಭಾಷೆಗೂ ಶಿಕ್ಷಣ ಮಾಧ್ಯಮಕ್ಕೂ ಸಂಬಂಧಪಟ್ಟಿದ್ದು. ವಿವರಕ್ಕಾಗಲಿ ವಾದಕ್ಕಾಗಲಿ ಜಿಜ್ಞಾಸೆಗಾಗಲಿ ನಾನೀಗ ಕೈ ಹಾಕುವುದಿಲ್ಲ. ಅದು ತತ್ಸಮಯ ಸಾಧ್ಯವು ಅಲ್ಲ; ಅದಕ್ಕಿಲ್ಲಿ ಕಾಲಾವಕಾಶವೂ ಇಲ್ಲ. ತಮ್ಮ ಗಮನವನ್ನು ಅತ್ತಕಡೆ ಎಳೆದು, ಅದು ತಮ್ಮ ಶೀಘ್ರ ಪರಿಶೀಲನೆಗೂ ಇತ್ಯರ್ಥಕ್ಕೂ ಒಳಗಾಗುವಂತೆ ಮಾಡುವುದೆ ನನ್ನ ಸದ್ಯ ಪ್ರಯತ್ನದ ಮುಖ್ಯ ಉದ್ದೇಶ. ಆ ವಿಚಾರವಾಗಿ ನಮ್ಮ ರಾಷ್ಟ್ರಪಿತನಾದಿಯಾಗಿ ಸಾವಿರಾರು ದೇಶಭಕ್ತರೂ ನೂರಾರು ಸ್ವದೇಶೀಯ ಮತ್ತು ವಿದೇಶೀಯ ವಿದ್ಯಾತಜ್ಞರೂ ಹೇಳಿದ್ದಾರೆ, ಮಾತನಾಡಿದ್ದಾರೆ, ಬರೆದಿದ್ದಾರೆ. ಹೊತ್ತಗೆಗಳನ್ನೆ ಪ್ರಕಟಿಸಿಯೂ ಇದ್ದಾರೆ. ಆದರೆ ನಮ್ಮ ದೇಶದ ಪ್ರಚ್ಛನ್ನ ಶತ್ರುಗಳಾದ ಸ್ವಾರ್ಥಸಾಧಕ ಪಟ್ಟಭದ್ರ ಹಿತಾಸಕ್ತ ಪ್ರತಿಗಾಮಿ ಶಕ್ತಿಗಳು, ಮಕ್ಕಳಿಗೆ ಹಾಲುಣಿಸುವ ನೆವದಿಂದ ಅವರನ್ನು ಕೊಲ್ಲುತ್ತಿದ್ದ ಭಾಗವತ ಪುರಾಣದ ಪೂತನಿಯಂತೆ, ಬಲಾತ್ಕಾರದ ಇಂಗ್ಲಿಷ್ ಭಾಷೆಯಿಂದಲೂ ಇಂಗ್ಲಿಷ್ ಮಾಧ್ಯಮದಿಂದಲೂ ವರ್ಷವರ್ಷವೂ ಪರೀಕ್ಷೆಯ ಜಿಲೊಟಿನ್ನಿಗೆ ಕೋಟ್ಯಾಂತರ ಬಾಲಕರ ಮತ್ತು ತರುಣರ ತಲೆಗಳನ್ನು ಬಲಿಕೊಡುತ್ತಿದ್ದಾರೆ. ಆ ನಷ್ಟದ ಪರಿಮಾಣವನ್ನು ಊಹಿಸಲೂ ಸಾಧ್ಯವಿಲ್ಲ. ಬಹುಶಃ ಸರಿಯಾಗಿ ಲೆಕ್ಕ ಹಾಕಿದರೆ, ನಾಲ್ಕಾರು ಪಂಚವಾರ್ಷಿಕ ಯೋಜನೆಗಳ ಮೊತ್ತವೆ ಆದರೂ ಆಗಬಹುದೇನೊ!”

“ಇಂಗ್ಲಿಷ್ ಭಾಷೆ ಬಲಾತ್ಕಾರದ ಸ್ಥಾನದಿಂದ ಐಚ್ಛಿಕ ಸ್ಥಾನಕ್ಕೆ ನಿಯಂತ್ರಣಗೊಳ್ಳದಿದ್ದರೆ, ಇಂಗ್ಲಿಷ್ ಶಿಕ್ಷಣ ಮಾಧ್ಯಮ ತೊಲಗಿ ಪ್ರಾದೇಶಿಕ ಭಾಷೆಗೆ ಆ ಸ್ಥಾನ ಲಭಿಸದಿದ್ದರೆ, ನಮ್ಮ ದೇಶ ಹತ್ತೇ ವರ್ಷಗಳಲ್ಲಿ ಸಾಧಿಸಬೇಕಾದುದನ್ನು ಇನ್ನೊಂದು ನೂರು ವರ್ಷಗಳಲ್ಲಿಯೂ ಸಾಧಿಸಲಾರದೆ ನಿತ್ಯ ರೋಗಿಯಂತಿರಬೇಕಾಗುತ್ತದೆ.”

ಇಂದಿಗೂ ಪರಿಸ್ಥಿತಿ ಕುವೆಂಪು ಅಂದು ಹೇಳಿದ ಹಾಗೇ ಇದೆ. ಬದಲಾಗಿರುವುದೇನೆಂದರೆ ಇಂಗ್ಲಿಷಿನ ಸ್ಥಾನಕ್ಕೆ ಹಿಂದಿಯನ್ನು ತರಲಾಗುತ್ತಿದೆ ಅಷ್ಟೇ! ಇದು ವಿದ್ಯಾರ್ಥಿಗಳ, ರೈತರ, ದಲಿತರ ಮಕ್ಕಳ ದನಿಯನ್ನು ಹತ್ತಿಕ್ಕುತ್ತದೆ. ಅಳದ ಕಂದನಿಗೆ ಯಾವ ತಾಯಿಯೂ ಹಾಲೂಡುವುದಿಲ್ಲ! ಮುಖ್ಯ ನಮ್ಮ ಜನಪ್ರತಿನಿಧಿಗಳು ಹೈಕಮಾಂಡ್ ಹೇಳಿದ ಮಾತಿಗೆಲ್ಲಾ ’ಕೌಲೆ ಬಸವಣ್ಣನಂತೆ ತಲೆ ಹಾಕದೆ’ ಲೋಕಸಭೆಯಲ್ಲಿ ವಿಧಾನಸಭೆಯಲ್ಲಿ ಎದ್ದುನಿಂತು ಪ್ರಾದೇಶಿಕ ಭಾಷೆಗಳ ಪರವಾಗಿ ದನಿ ಎತ್ತಬೇಕು. ಬಂಗಾಳಿ, ತಮಿಳು ಮುಂತಾದ ಭಾಷೆಗಳಂತೆ ಕನ್ನಡದ ’ಅಸ್ಮಿತೆ’ಯನ್ನು ನಾವು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯತತ್ಪರರಾಗಬೇಕು. ಇಲ್ಲವಾದರೆ ಕನ್ನಡ ಭಾಷೆಯೊಂದಿಗೆ ಕನ್ನಡ ಜನಾಂಗವೂ ಕಣ್ಮರೆಯಾಗುವ ಕಾಲ ದೂರವಿಲ್ಲ! ಈ ನಿಟ್ಟಿನಲ್ಲಿ ನಮ್ಮ ಮಾಧ್ಯಮಗಳ ಜವಾಬ್ದಾರಿ ಎಷ್ಟಿದೆಯೆಂಬುದನ್ನು ಒತ್ತಿ ಹೇಳಬೇಕಾಗಿಲ್ಲ.

ಪ್ರೊ. ಶಿವರಾಮಯ್ಯ

ಪ್ರೊ. ಶಿವರಾಮಯ್ಯ
ಕನ್ನಡ ಪ್ರಾಧ್ಯಾಪಕರಾಗಿ ನಿವೃತ್ತರಾಗಿರುವ ಶಿವರಾಮಯ್ಯನವರು ತಮ್ಮ ಅಧ್ಯಾಪನ ಮತ್ತು ಸಂಶೋಧನಾ ಕಾರ್ಯಗಳ ಜೊತೆಗೆ ಜನಪರ ಹೋರಾಟಗಳಲ್ಲಿ ಗುರುತಿಸಿಕೊಂಡವರು. ಸ್ವಪ್ನ ಸಂಚಯ (ಕವನ ಸಂಕಲನ), ಉರಿಯ ಉಯಾಲೆ (ವಿಮರ್ಶಾ ಬರಹಗಳ ಸಂಕಲನ), ದನಿ ಇಲ್ಲದವರ ದನಿ, ಪಂಪಭಾರತ ಭಾಗ-1 &2 (ಸಂಪಾದನೆ ಮತ್ತು ಗದ್ಯಾನುವಾದ) ಅವರ ಪುಸ್ತಕಗಳಲ್ಲಿ ಕೆಲವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ರಾಷ್ಟ್ರೀಯ ಭಾಷೆಯ ಕಲ್ಪನೆ ಮತ್ತು ಕನ್ನಡದ ಅಸ್ಮಿತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...