ಬಿಜೆಪಿ ಸರ್ಕಾರದ ನೂತನ ಪಠ್ಯ ಪರಿಷ್ಕರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ತಮ್ಮ ಪಠ್ಯ ಸೇರ್ಪಡೆಗೆ ಅನುಮತಿ ನಿರಾಕರಿಸಿದ್ದ ನಾಡಿನ ಹಿರಿಯ ಸಾಹಿತಿಗಳಾದ ದೇವನೂರ ಮಹಾದೇವರವರು ಶಿಕ್ಷಣ ಸಚಿವರಿಗೆ ಮತ್ತೊಂದು ಪತ್ರ ಬರೆದು ದಬ್ಬಾಳಿಕೆ ಬಿಡಿ, ಇದು ಮುಂದುವರಿಯಬಾರದು ಎಂದು ಮನವಿ ಮಾಡಿದ್ದಾರೆ.
“ಈ ಹಿಂದೆ, ಹತ್ತನೇ ತರಗತಿಯ ಪಠ್ಯ ಪುಸ್ತಕದಲ್ಲಿರುವ ನನ್ನ ಪಠ್ಯವನ್ನು ಕೈ ಬಿಡಬೇಕೆಂದು ತಮಗೆ ವಿನಂತಿಸಿ ದಿನಾಂಕ 26.05.2022ರಂದು ಪತ್ರ ಬರೆದು ಕೊರಿಯರ್ ಮುಖಾಂತರ ರವಾನಿಸಿದ್ದೆ. ಅದನ್ನು ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೂ, ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರವರಿಗೂ ಕಳಿಸಿದ್ದೆ. ಆ ಪತ್ರದಲ್ಲಿ ನಾನು ಒಪ್ಪಿಗೆ ಇಲ್ಲದಿರುವುದಕ್ಕೆ ಸ್ಪಷ್ಟನೆ ನೀಡಿದ್ದೇನೆ. ಹೀಗಿದ್ದೂ ನನ್ನ ಮನವಿಯನ್ನು ತಾವು ಪರಿಗಣಿಸದೆ, ಇತ್ತೀಚಿನ ತಮ್ಮ ಹೇಳಿಕೆಯಲ್ಲಿ “ಪರಿಷ್ಕೃತ ಮುದ್ರಣವೇ ಜಾರಿಗೆ ಬರುತ್ತದೆ” ಎಂದಿದ್ದೀರಿ. ಕ್ಷಮಿಸಿ, ನಿಮ್ಮ ಈ ಧೋರಣೆ ನನಗೆ ದಬ್ಬಾಳಿಕೆ ಅನ್ನಿಸಿಬಿಟ್ಟಿತು” ಎಂದು ದೇವನೂರು ಬರೆದಿದ್ದಾರೆ.
ಚತುರ್ವರ್ಣ ವಿರೋಧಿ ಬಸವಣ್ಣನವರ ಪಾಠವನ್ನು ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಕತ್ತು ಹಿಚುಕಿರುವುದು, ಕುವೆಂಪು, ಅಂಬೇಡ್ಕರ್ ಅವರನ್ನು ಗೇಲಿ ಮಾಡುವ ಮನಸ್ಥಿತಿಯ ವ್ಯಕ್ತಿಯನ್ನೇ ಪಠ್ಯಮಸ್ತಕ ಪರಿಷ್ಕರಣೆಗೆ ಅಧ್ಯಕ್ಷನನ್ನಾಗಿಸಿರುವುದು ಹಾಗೂ ಒಂದು ಒಕ್ಕೂಟ ಸರ್ಕಾರದಲ್ಲಿ ಆ ಒಕ್ಕೂಟದ ಅಂಗವಾಗಿರುವ ಕರ್ನಾಟಕ ರಾಜ್ಯವು ತನಗೂ ಒಂದು ಧ್ವಜವೂ ಬೇಕು ಎಂದು ದನಿ ಎತ್ತಿದ ಸಂದರ್ಭದಲ್ಲಿ ಆ ಪರಿಕಲ್ಪನೆಯನ್ನು ತನ್ನ ಲಂಗೋಟಿಗೆ ಹೋಲಿಕೆ ಮಾಡಿದ ಹೀನ ಅಭಿರುಚಿಯ ವ್ಯಕ್ತಿಯನ್ನು ಮಕ್ಕಳ ಪಠ್ಯ ಪರಿಷ್ಕರಣೆ ಮಾಡಲು ಅಧ್ಯಕ್ಷನನ್ನಾಗಿಸಿರುವುದು ಮತ್ತು ಸಮರ್ಥಿಸುತ್ತಿರುವುದು, ಭಿನ್ನಾಭಿಪ್ರಾಯಗಳನ್ನು ಟೂಲ್ಕಿಟ್ ಎಂದು ರಾಜಕೀಯಗೊಳಿಸಿ ಪರಾರಿಯಾಗಲು ನೋಡುವುದು ಇವೆಲ್ಲ ಹಾಗೂ ನಾಡಿನ ಗಣ್ಯರು, ಮಠಾಧಿಪತಿಗಳು, ಲೇಖಕರು, ಪ್ರಜ್ಞಾವಂತರು ತಮ್ಮ ನೋವನ್ನು ವ್ಯಕ್ತಪಡಿಸಿ ಹಿಂದಿನ ಪಠ್ಯಪುಸ್ತಕವನ್ನೇ ಮುಂದುವರಿಸಿ ಎಂದು ಕೇಳಿಕೊಂಡರೂ ತಾವು ಅದನ್ನು ಕಾಲುಕಸ ಮಾಡಿ, ಲೆಕ್ಕಿಸದಿರುವುದನ್ನು ನೋಡಿದಾಗ ಇದು ನಾಡಿಗೆ ಕೇಡಿನ ಲಕ್ಷಣಗಳು ಎಂದೆನ್ನಿಸುತ್ತದೆ ಎಂದು ದೇವನೂರುರವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೊನೆಯದಾಗಿ ತಮ್ಮಲ್ಲಿ ಒಂದು ವಿನಂತಿ. ಇದು ಮುಂದುವರಿಯಬಾರದು. ದಯವಿಟ್ಟು ಮುಂದುವರಿಯಬಾರದು ಎಂದು ಮನವಿ ಮಾಡಿರುವ ಅವರು ಹಿಂದೆ ಶಿಕ್ಷಣ ಸಚಿವರಿಗೆ ಕಳಿಸಿದ್ದ ಪತ್ರವನ್ನು ಲಗತ್ತಿಸಿದ್ದಾರೆ.
ಇದನ್ನೂ ಓದಿ ; RSS, ಬಿಜೆಪಿಯ ಪಠ್ಯ ಪರಿಷ್ಕರಣೆಗೆ ವಿರೋಧ: ತನ್ನ ಪಠ್ಯ ಕೈಬಿಡಲು ದೇವನೂರ ಮಹಾದೇವ ಪತ್ರ


