ಸಿದ್ದರಾಮಯ್ಯ ಸರ್ಕಾರ ಹುಟ್ಟುಹಾಕಿದ್ದ ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದ್ದು, ಲೋಕಾಯುಕ್ತಕ್ಕೆ ಮರುಜೀವ ನೀಡಿದೆ.
ಎಸಿಬಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವರ್ಗಾಯಿಸಲು ಕೋರ್ಟ್ ಆದೇಶಿಸಿದೆ.
2016 ರಲ್ಲಿ ಲೋಕಾಯುಕ್ತ ಅಧಿಕಾರವನ್ನು ಮೊಟಕುಗೊಳಿಸಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎಸಿಬಿ ರಚನೆ ಮಾಡಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಅರ್ಜಿಗಳು ದಾಖಲಾಗಿದ್ದವು. ವಿಚಾರಣೆ ನಡೆಸಿದ ಜಸ್ಟೀಸ್ ಬಿ ವೀರಪ್ಪ ಹಾಗೂ ಜಸ್ಟೀಸ್ ಕೆ.ಎಸ್. ಹೇಮಲೇಖ ಅವರಿದ್ದ ಪೀಠ ತೀರ್ಪು ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಎಸಿಬಿಯ ರಚನೆಯನ್ನು ಪ್ರಶ್ನಿಸಿ ವಕೀಲ ಚಿದಾನಂದ ಅರಸ್, ವಕೀಲರ ಸಂಘ ಮತ್ತು ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ ಅವರ ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಸಂಬಂಧಿಸಿದಂತೆ ಈ ಆದೇಶ ನೀಡಲಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, “ಕೋರ್ಟ್ ಆದೇಶವನ್ನು ನಾನು ಗಮನಿಸಿಲ್ಲ. ನೋಡಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ” ಎಂದಿದ್ದಾರೆ.
“ಲೋಕಾಯುಕ್ತದ ಬೇರ್ಪಡಿಸಿ ಎಸಿಬಿ ರಚಿಸಿದ್ದೆವು. ಹೈಕೋರ್ಟ್ ತೀರ್ಮಾನ ಗೌರವಿಸುತ್ತೇವೆ. ಆದೇಶ ಏನಿದೆ ಎನ್ನುವುದನ್ನು ನೋಡಿಲ್ಲ. ಆದೇಶ ನೋಡಿದ ನಂತರ ಪ್ರತಿಕ್ರಿಯಿಸುತ್ತೇನೆ” ಎಂದಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರತಿಕ್ರಿಯೆ ನೀಡಿದ್ದು, “ಎಸಿಬಿ ರದ್ದುಗೊಳಿಸಿರುವ ಮಾಹಿತಿ ಬಂದಿದೆ. ತೀರ್ಪಿನ ಸಮಗ್ರ ಅಂಶದ ಬಗ್ಗೆ ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್ ಜತೆ ಚರ್ಚೆ ನಡೆಸಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ” ಎಂದಿದ್ದಾರೆ.
ಭ್ರಷ್ಟಾಚಾರ ನಿಲ್ಲುತ್ತದೆ ಎಂಬ ಭರವಸೆ ಇಲ್ಲ: ಎಚ್.ಡಿ.ಕೆ.
“ಎಸಿಬಿ ರದ್ದು ಮಾಡಿ ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ನಿಲ್ಲಿಸುತ್ತಾರೆ ಎಂಬ ನಂಬಿಕೆ ನನಗೆ ಇಲ್ಲ” ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
“ಕುರಿ ಕಾಯುವುದಕ್ಕೆ ತೋಳ ಬಿಡುತ್ತಾರೆ ಎನ್ನುತ್ತಾರಲ್ಲ ಹಾಗೆ ಇದು. ಲೋಕಾಯುಕ್ತದಿಂದ ಶುದ್ಧ ಆಗುತ್ತದೆ ಎಂದು ಭಾವಿಸಿಲ್ಲ. ಮೊದಲು ವಿಧಾನಸೌಧದ ಮೂರನೇ ಮಹಡಿ ಶುದ್ಧವಾಗಬೇಕು” ಎಂದು ಸರಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.
ಇದನ್ನೂ ಓದಿರಿ: ಯುಪಿ: ಮಹಿಳೆ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಬಿಜೆಪಿ ಮುಖಂಡ ಕೊನೆಗೂ ಅರೆಸ್ಟ್
“ಕಾಂಗ್ರೆಸ್ ಸರಕಾರದ ಕಾಲದಲ್ಲಿ ಎಸಿಬಿ ರಚನೆ ಮಾಡಲಾಗಿತ್ತು. ಆ ಸರಕಾರದ ವಿರುದ್ಧ ಬಂದಿದ್ದ ಅನೇಕ ಆರೋಪಗಳನ್ನು ಮೂಲೆಗುಂಪು ಮಾಡುವ ನಿಟ್ಟಿನಲ್ಲಿ ಎಸಿಬಿ ರಚನೆಯಾಗಿತ್ತು. ವಿಧಾನ ಮಂಡಲದಲ್ಲಿ ಕಾಯಿದೆ ತಂದು ಎಸಿಬಿಯನ್ನು ರಚನೆ ಮಾಡಿದ್ದಲ್ಲ ಅದು. ಆ ಸರಕಾರ ಮುಖಭಂಗದಿಂದ ಪಾರಾಗಲು ಎಸಿಬಿ ರಚನೆ ಮಾಡಿತ್ತು” ಎಂದು ಕುಮಾರಸ್ವಾಮಿ ಅವರು ಟೀಕಿಸಿದರು.
“ಐದು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಸರಕಾರ ತರಾತುರಿಯಲ್ಲಿ ಮಾಡಿದ ಆಗಿನ ಲೋಪದೋಷ ಮುಚ್ಚಿಕೊಳ್ಳಲು ಮಾಡಿದ ತನಿಖಾ ಸಂಸ್ಥೆಯೇ ಎಸಿಬಿ. ನಾನು ಮುಖ್ಯಮಂತ್ರಿ ಆಗಿದ್ದಾಗ ಮತ್ತೊಬ್ಬರ ಮರ್ಜಿನಲ್ಲಿ ಇದ್ದೆ. ಹೀಗಾಗಿ ಎಸಿಬಿಯನ್ನು ರದ್ದು ಮಾಡಲು ನನ್ನಿಂದ ಆಗಲಿಲ್ಲ. ನನ್ನ ಸರಕಾರ ತೆಗೆದು ಅಧಿಕಾರಕ್ಕೆ ಬಂದ ಬಿಜೆಪಿಯು ಎಸಿಬಿಯನ್ನು ರದ್ದು ಮಾಡಲು ಮೂರು ವರ್ಷಗಳಿಂದ ಆಸಕ್ತಿಯನ್ನೆ ತೋರಲಿಲ್ಲ. ಈಗ ರಾಜ್ಯ ಹೈಕೋರ್ಟ್ ಎಸಿಬಿಯನ್ನು ರದ್ದುಗೊಳಿಸುವ ಆದೇಶ ಮಾಡಿದೆ. ಎಸಿಬಿಗೆ ನೀಡಲಾಗಿದ್ದ ಪೊಲೀಸ್ ಠಾಣೆ ಸ್ಥಾನಮಾನವನ್ನು ಮರಳಿ ಲೋಕಾಯುಕ್ತ ಸಂಸ್ಥೆಗೆ ನೀಡಿದೆ” ಎಂದು ತಿಳಿಸಿದ್ದಾರೆ.
ಹೈಕೋರ್ಟ್ನಿಂದ ಎಸಿಬಿ ರದ್ದು: ಪೃಥ್ವಿ ರೆಡ್ಡಿ ಸ್ವಾಗತ
ಎಸಿಬಿಯನ್ನು ರದ್ದುಪಡಿಸುವ ಹೈಕೋರ್ಟ್ ಆದೇಶವನ್ನು ಆಮ್ ಆದ್ಮಿ ಪಾರ್ಟಿ ಸ್ವಾಗತಿಸಿದ್ದು, ಆರು ವರ್ಷಗಳ ಸುದೀರ್ಘ ಹೋರಾಟಕ್ಕೆ ಕೊನೆಗೂ ಯಶಸ್ಸು ಸಿಕ್ಕಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪೃಥ್ವಿ ರೆಡ್ಡಿ, “ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು 2016ರಲ್ಲಿ ಲೋಕಾಯುಕ್ತದ ಅಧಿಕಾರವನ್ನು ಮೊಟಕುಗೊಳಿಸಿ ಎಸಿಬಿ ರಚಿಸಿದಾಗ, ಸರ್ಕಾರದ ವಿರುದ್ಧ ಆಮ್ ಆದ್ಮಿ ಪಾರ್ಟಿ ನಾಯಕರು ಎಂಟು ದಿನಗಳ ಉಪವಾಸ ಸತ್ಯಾಗ್ರಹ ಮಾಡಿದ್ದೆವು. ನಂತರ ಸಿದ್ದರಾಮಯ್ಯ ಜೊತೆ ಎಎಪಿ ನಿಯೋಗವು ಚರ್ಚಿಸಿದ್ದರೂ ಮಾತುಕತೆ ಫಲಪ್ರದವಾಗಿರಲಿಲ್ಲ. ಕಳೆದ ಆರು ವರ್ಷಗಳಲ್ಲಿ ಎಸಿಬಿ ರದ್ದು ಪಡಿಸಬೇಕೆಂದು ಆಗ್ರಹಿಸಿ ಎಎಪಿ ನಾನಾ ರೀತಿಯ ಹೋರಾಟ ಮಾಡಿದೆ. ಈಗ ಹೈಕೋರ್ಟ್ ಮಧ್ಯಪ್ರವೇಶಿಸಿ ಎಸಿಬಿಯನ್ನು ವಜಾ ಮಾಡಿ, ಅಲ್ಲಿನ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸಿರುವುದು ಸಂತಸ ತಂದಿದೆ” ಎಂದಿದ್ದಾರೆ.
ಇದನ್ನೂ ಓದಿರಿ: ಸಚಿವ ಬಿಸಿ ನಾಗೇಶ್ ನೇತೃತ್ವದ ಮೆರವಣಿಗೆಯಲ್ಲಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಎಬಿವಿಪಿ ಧ್ವಜ ಹಾರಾಟ!
“ಕೇವಲ ಎಸಿಬಿಯನ್ನು ವಜಾ ಮಾಡಿದರೆ ಸಾಲದು. ಲೋಕಾಯುಕ್ತ ಸಂಸ್ಥೆಗೆ ಹಿಂದೆ ಇದ್ದಂತಹ ಪರಮಾಧಿಕಾರ ಮರಳಿ ಸಿಗಬೇಕು. ಆದರೆ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಸರ್ಕಾರವು ಲೋಕಾಯುಕ್ತಕ್ಕೆ ಹೆಚ್ಚಿನ ಅಧಿಕಾರ ನೀಡಲಿದೆ ಎಂದು ನಿರೀಕ್ಷಿಸುವುದು ಕೂಡ ಅಸಾಧ್ಯ. ಅಧಿಕಾರ ಸಿಕ್ಕರೆ ಮೊದಲ ಸಚಿವ ಸಂಪುಟದಲ್ಲೇ ಲೋಕಾಯುಕ್ತಕ್ಕೆ ಹೆಚ್ಚಿನ ಅಧಿಕಾರ ನೀಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಿದ್ದ ಬಿಜೆಪಿಯು ಮೂರು ವರ್ಷವಾದರೂ ಈ ಕುರಿತು ಕ್ರಮ ಕೈಗೊಂಡಿಲ್ಲ. ಲೋಕಾಯುಕ್ತವು ಸರ್ಕಾರದ ಕೈಗೊಂಬೆಯಾಗಿರಬೇಕೆಂದು ಬಿಜೆಪಿ ಸರ್ಕಾರ ಬಯಸುತ್ತಿದೆ” ಎಂದು ಪೃಥ್ವಿ ರೆಡ್ಡಿ ಎಚ್ಚರಿಸಿದ್ದಾರೆ.


