Homeದಲಿತ್ ಫೈಲ್ಸ್ಯುಪಿ: ದಲಿತ ಬಾಲಕಿಯ ಮೇಲೆ ಬಿಸಿಯೂಟ ಎರಚಿದ ಶಿಕ್ಷಕ

ಯುಪಿ: ದಲಿತ ಬಾಲಕಿಯ ಮೇಲೆ ಬಿಸಿಯೂಟ ಎರಚಿದ ಶಿಕ್ಷಕ

- Advertisement -
- Advertisement -

ದಲಿತ ಮಕ್ಕಳ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿದ್ದು, ಇತ್ತೀಚಿನ ದಿನಗಳಲ್ಲಿ ನಾಲ್ಕು ಪ್ರಮುಖ ಘಟನೆಗಳು ವರದಿಯಾಗಿವೆ. ಉತ್ತರಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ ರಾಜ್ಯಗಳಲ್ಲಿ ವರದಿಯಾಗಿರುವ ನಾಲ್ಕು ಪ್ರಕರಣಗಳ ವಿವರ ಇಲ್ಲಿದೆ.

ಪ್ರಕರಣ- 1

ಯುಪಿ: ದಲಿತ ಬಾಲಕಿಯ ಮೇಲೆ ಬಿಸಿಯೂಟ ಎರಚಿದ ಶಿಕ್ಷಕ

ಲಖನೌ: ಬಾರಾಬಂಕಿಯ ಟಿಕೈಟ್‌ನಗರದ ಇಚೋಲಿ ಗ್ರಾಮದಲ್ಲಿ 2ನೇ ತರಗತಿಯ ದಲಿತ ವಿದ್ಯಾರ್ಥಿನಿಯ ಮೇಲೆ ಬಿಸಿಯೂಟವನ್ನು ಶಾಲೆಯ ಪ್ರಾಂಶುಪಾಲ ಎಸೆದಿರುವ ಘಟನೆ ನಡೆದಿದೆ.

ಮಗುವಿನ ಮಣಿಕಟ್ಟು ಮತ್ತು ಕೈಗೆ ತೀವ್ರ ಸುಟ್ಟ ಗಾಯಗಳಾಗಿವೆ ಎಂಬ ಆರೋಪದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.

ಬಾರಾಬಂಕಿಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಆದರ್ಶ್ ಸಿಂಗ್ ಅವರು ತನಿಖೆಗೆ ಆದೇಶಿಸಿದ್ದಾರೆ. ವಿಕಲಚೇತನ ಬಾಲಕಿ ಈ ವಿಷಯವನ್ನು ಅಧಿಕಾರಿಗಳಿಗೆ ತಿಳಿಸಿದ್ದು, ನಂತರ ಜಿಲ್ಲಾಧಿಕಾರಿಯವರು ಬಾರಾಬಂಕಿಯ ಮೂಲ ಶಿಕ್ಷಾ ಅಧಿಕಾರಿ (ಬಿಎಸ್‌ಎ) ಸಂತೋಷ್ ಪಾಂಡೆ ಅವರಿಗೆ ಸೂಚನೆ ನೀಡಿ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.

ಬಾರಾಬಂಕಿಯ ಹೆಚ್ಚುವರಿ ಎಸ್ಪಿ ಪೂರ್ಣೇಂದು ಸಿಂಗ್ ಪ್ರತಿಕ್ರಿಯಿಸಿದ್ದು, ಬಿಎಸ್ಎ ಸಿದ್ಧಪಡಿಸಿದ ವರದಿ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್‌ ನಿರ್ದೇಶನದ ಮೇರೆಗೆ ಪೊಲೀಸರು ಕಾರ್ಯನಿರ್ವಹಿಸುತ್ತಾರೆ ಎಂದಿದ್ದಾರೆ.

ಆಗಸ್ಟ್ 29 ರಂದು ಈ ಘಟನೆ ನಡೆದಿದೆ ಎಂದು ತನಿಖೆ ನಡೆಸುತ್ತಿರುವ ಬಿಎಸ್‌ಎ ಸಂತೋಷ್ ಪಾಂಡೆ ತಿಳಿಸಿದ್ದಾರೆ.

“ನಾವು ಊಟದ ಸಮಯದಲ್ಲಿದ್ದ 800 ವಿದ್ಯಾರ್ಥಿಗಳ ಹೇಳಿಕೆಗಳನ್ನು ತೆಗೆದುಕೊಂಡಿದ್ದೇವೆ. ಅದರ ವಿವರವಾದ ವರದಿಯನ್ನು ಮ್ಯಾಜಿಸ್ಟ್ರೇಟ್‌ಗೆ ಹಸ್ತಾಂತರಿಸಲಾಗುವುದು” ಎಂದು ಪಾಂಡೆ ಹೇಳಿದರು.

ಸೆಪ್ಟೆಂಬರ್ 3 ರಂದು ಮಹಿಳೆಯೊಬ್ಬರು ದೂರು ನೀಡಿದ್ದು, “ಮಧ್ಯಾಹ್ನದ ಊಟವನ್ನು ಬಡಿಸುವಾಗ ಸರ್ಕಾರಿ ಶಾಲೆಯ ಪ್ರಾಂಶುಪಾಲರು ನನ್ನ ಮಗಳ ಕೈಗಳನ್ನು ಸುಟ್ಟುಹಾಕಿದ್ದಾರೆ” ಎಂದು ಆರೋಪಿಸಿದ್ದಾರೆ.

***

ಪ್ರಕರಣ- 2

ರಾಜಸ್ಥಾನ: ದಲಿತ ಬಾಲಕನ ಶವ ಗಣಿಗಾರಿಕೆಯ ಹೊಂಡದಲ್ಲಿ ಪತ್ತೆ

17 ವರ್ಷದ ದಲಿತ ಬಾಲಕ ನಾಪತ್ತೆಯಾದ ಒಂದು ದಿನದ ನಂತರ ಶವವಾಗಿ ಸಿಕ್ಕಿದ್ದಾನೆ. ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ ಮಳೆ ನೀರಿನಿಂದ ತುಂಬಿದ ಗಣಿಗಾರಿಕೆಯ ಹೊಂಡದಲ್ಲಿ ಆತನ ಶವ ಸೆಪ್ಟೆಂಬರ್ 9ರಂದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶವವಾಗಿ ಪತ್ತೆಯಾಗಿರುವ ಬಾಲಕನ ಸಹಪಾಠಿಯ ತಂದೆ ಶಾಲಾ ಅಧಿಕಾರಿಗಳಿಗೆ ದೂರು ನೀಡಿದ್ದರು ಎಂದು ತಿಳಿದುಬಂದಿದೆ. ತನ್ನ ಮಗಳಿಗೆ ಈ ಹುಡುಗ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಶಾಲೆಗೆ ದೂರು ನೀಡಿದ ಬಳಿಕ ಈ ಘಟನೆಯಾಗಿದೆ.

ಶುಕ್ರವಾರ ಶವ ಪತ್ತೆಯಾದ ನಂತರ, ಕುಟುಂಬ ಸದಸ್ಯರು ಆತನ ಶವವನ್ನು ಶಾಲೆಯ ಹೊರಗೆ ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಈ ಬಾಲಕನಿಗೆ ಶಾಲಾ ಸಿಬ್ಬಂದಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ ಎಂದು ಸರ್ಕಲ್ ಆಫೀಸರ್, ಬೀವರ್ ಸುಮಿತ್ ಮೆಹ್ರೇದಾ ತಿಳಿಸಿದ್ದಾರೆ.

ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಬಾಲಕನ ಶವವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

***

ಪ್ರಕರಣ- 3

ಮಧ್ಯಪ್ರದೇಶ: ದಲಿತ ಬಾಲಕನನ್ನು ಥಳಿಸಿದ ಜೈನ ಪಂಡಿತ

ಮಧ್ಯಪ್ರದೇಶದ ಸಾಗರ್‌ನಲ್ಲಿ ಜೈನ ದೇವಾಲಯದ ಪಂಡಿತರೊಬ್ಬರು 11 ವರ್ಷದ ದಲಿತ ಬಾಲಕನನ್ನು ಥಳಿಸಿರುವ ಘಟನೆ ನಡೆದಿದೆ.

ಟ್ವಿಟ್ಟರ್ ಬಳಕೆದಾರರು ಈ ಘಟನೆಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ದಲಿತ ಬಾಲಕ ಸಾಗರದ ಜೈನ ದೇವಾಲಯದ ಹೊರಗೆ ನಿಂತಿದ್ದಾಗ ಕಳ್ಳತನದ ಆರೋಪ ಹೊರಿಸಲಾಗಿದೆ. ಪಂಡಿತ್ ರಾಜೇಶ್ ಜೈನ್ ಬಾಲಕನನ್ನು ಥಳಿಸಿ, ನಂತರ ಕಟ್ಟಿಹಾಕಿದ್ದಾರೆ. ಪೂಜೆಯ ತಟ್ಟೆಯಲ್ಲಿದ್ದ ಬಾದಾಮಿಯನ್ನು ತೆಗೆದು ಜೇಬಿನಲ್ಲಿ ಇಟ್ಟುಕೊಂಡಿದ್ದಾಗಿ ರಾಜೇಶ್ ಜೈನ್‌ ಆರೋಪಿಸಿದ್ದಾರೆ.

ನಗರದ ಮೋತಿ ನಗರ ಪೊಲೀಸ್ ಠಾಣೆಯಲ್ಲಿ ಎಸ್‌ಸಿ-ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

***

ಪ್ರಕರಣ- 4

ಮಧ್ಯಪ್ರದೇಶ: ಅತ್ಯಾಚಾರಕ್ಕೆ ಒಳಗಾದ ದಲಿತ ಬಾಲಕಿಗೆ ಕಿರುಕುಳ; ಮೂವರು ಪೊಲೀಸ್ ಅಧಿಕಾರಿಗಳ ಅಮಾನತು

ಮಧ್ಯಪ್ರದೇಶದ ಛತ್ತರ್‌ಪುರ ನಗರದಲ್ಲಿ 13 ವರ್ಷದ ದಲಿತ ಬಾಲಕಿಯನ್ನು ಇಡೀ ರಾತ್ರಿ ಪೊಲೀಸ್ ಠಾಣೆಯಲ್ಲಿ ಇರಿಸಿಕೊಂಡು ಥಳಿಸಿದ ಘಟನೆ ನಡೆದಿದೆ. ಆಗಸ್ಟ್ 30 ರಂದು ನಡೆದ ಘಟನೆಗೆ ಸಂಬಂಧಿಸಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನು ಬುಧವಾರ ಅಮಾನತುಗೊಳಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿ ಬಾಬು ಖಾನ್ ಎಂಬಾತನನ್ನು ಭಾರತೀಯ ದಂಡ ಸಂಹಿತೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಸೆಪ್ಟೆಂಬರ್ 3 ರಂದು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

Dalit Teen Went To File Rape Case, Allegedly Detained Overnight, Beaten

ಅತ್ಯಾಚಾರ ಸಂತ್ರಸ್ತೆಯನ್ನು ಪೊಲೀಸ್ ಠಾಣೆಯಲ್ಲಿ ಇರಿಸಿದ್ದಕ್ಕಾಗಿ ನಗರ ಕೊತ್ವಾಲಿ ಪೊಲೀಸ್ ಠಾಣೆಯ ಗೃಹ ಅಧಿಕಾರಿ (ಎಸ್‌ಎಚ್‌ಒ) ಅನೂಪ್ ಯಾದವ್, ಸಬ್ ಇನ್‌ಸ್ಪೆಕ್ಟರ್ ಮೋಹಿನಿ ಶರ್ಮಾ ಮತ್ತು ಸಹಾಯಕ ಸಬ್ ಇನ್‌ಸ್ಪೆಕ್ಟರ್ ಗುರುದತ್ ಶೇಷಾ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಛತ್ತರ್‌ಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಚಿನ್ ಶರ್ಮಾ ಗುರುವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬಾಲಕಿಯ ಮೇಲಿನ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯಿಂದ (ಸಿಡಬ್ಲ್ಯುಸಿ) ದೂರು ಬಂದಿದ್ದು, ನಂತರ ಪ್ರಕರಣ ದಾಖಲಿಸಲಾಗಿದೆ ಎಂದು ಜಂಟಿ ಜಿಲ್ಲಾಧಿಕಾರಿ ಪ್ರತಾಪ್ ಸಿಂಗ್ ಚೌಹಾಣ್ ಮಾಹಿತಿ ನೀಡಿದ್ದಾರೆ.

ಬಾಲಕಿಯ ತಾಯಿಯ ಪ್ರಕಾರ, ಮಗಳು ಆಗಸ್ಟ್ 27 ರಂದು ಆಟವಾಡಲು ಮನೆಯಿಂದ ಹೊರಗೆ ಹೋಗಿದ್ದಳು. ಆದರೆ ಹಿಂತಿರುಗಲಿಲ್ಲ. ಆದ್ದರಿಂದ ಬಾಲಕಿಯ ತಂದೆ ಮರುದಿನ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಆಗಸ್ಟ್ 30 ರಂದು ಹಿಂತಿರುಗಿದ ಬಾಲಕಿ ತನ್ನ ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಬಾಬು ಖಾನ್ ಎಂಬಾತ ಬಲವಂತವಾಗಿ ಬಾಲಕಿಯನ್ನು ಎಳೆದೊಯ್ದು, ಅಲ್ಲಿಯೇ ಬಂಧಿಸಿ ಮೂರು ದಿನಗಳ ಕಾಲ ಅತ್ಯಾಚಾರವೆಸಗಿರುವ ಸಂಗತಿ ಹೊರಬಿದ್ದಿದೆ.

“ನಾವು ದೂರು ದಾಖಲಿಸಲು ಪೊಲೀಸ್ ಠಾಣೆಗೆ ಹೋಗಿದ್ದೆವು. ಇಬ್ಬರು ಪೊಲೀಸರು ನನ್ನ ಮಗಳ ಹೇಳಿಕೆಯನ್ನು ಬದಲಾಯಿಸುವಂತೆ ಒತ್ತಡ ಹೇರಿದರು.ಜೊತೆಗೆ ನನ್ನ ಮಗಳನ್ನು ಥಳಿಸಿದರು. ಮತ್ತೊಬ್ಬ ಪೊಲೀಸ್ ಅಧಿಕಾರಿ ನನ್ನನ್ನು ಹೊರಗೆ ಕರೆದೊಯ್ದರು. ಒಳಗೆ ನನ್ನ ಮಗಳಿಗೆ ಒದ್ದು ಬೆಲ್ಟ್‌ಗಳಿಂದ ಹೊಡೆದರು” ಎಂದು ಸಂತ್ರಸ್ತ ಹೆಣ್ಣುಮಗಳ ತಾಯಿ ಆರೋಪಿಸಿದ್ದಾರೆ.

ಆಗಸ್ಟ್ 31ರಂದು ಮತ್ತೆ ಪೊಲೀಸ್ ಠಾಣೆಗೆ ತೆರಳಿ ಕೇಸು ದಾಖಲಿಸುವಂತೆ ಇನ್ಸ್‌ಪೆಕ್ಟರ್ ಯಾದವ್ ಅವರಲ್ಲಿ ಕೇಳಿದಾಗಲೂ ಯಾವುದೇ ಸ್ಪಂದನೆ ದೊರಯಲಿಲ್ಲ ಎಂದು ಅವರು ದೂರಿದ್ದಾರೆ.

ಅಂತಿಮವಾಗಿ, ಸೆಪ್ಟೆಂಬರ್ 1 ರ ಸಂಜೆ ಪೊಲೀಸರು ಆರೋಪಿಯ ವಿರುದ್ಧ ಅತ್ಯಾಚಾರದ ಪ್ರಕರಣವನ್ನು ದಾಖಲಿಸಿದ್ದಾರೆ. ಆದರೆ ಅಪಹರಣದ ಆರೋಪವನ್ನು ಸೇರಿಸಿಲ್ಲ ಎನ್ನಲಾಗಿದೆ.

ಎಫ್‌ಐಆರ್‌ನಲ್ಲಿ ಬಾಲಕಿಯ ವಯಸ್ಸನ್ನು 17 ವರ್ಷ ಎಂದು ನಮೂದಿಸಲಾಗಿದ್ದು, ಅಪಹರಣದ ಆರೋಪವನ್ನು ಸೇರಿಸಿಲ್ಲ.

ಸಿಡಬ್ಲ್ಯೂಸಿ ಸದಸ್ಯ ಅಫ್ಸರ್ ಜಹಾನ್ ಮಾತನಾಡಿ, “ಪೊಲೀಸರು ಅಪರಾಧಿಯನ್ನು ರಕ್ಷಿಸಲು ಮತ್ತು ಸಂತ್ರಸ್ತ ಬಾಲಕಿಯ ಹೇಳಿಕೆಯನ್ನು ಬದಲಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ದೂರಿದ್ದಾರೆ.

ಮತ್ತೊಬ್ಬ ಸಿಡಬ್ಲ್ಯೂಸಿ ಸದಸ್ಯ ಸೌರಭ್ ಭಟ್ನಾಗರ್, “13ರ ಬದಲಿಗೆ 17 ವರ್ಷ ಎಂದು ಪೊಲೀಸರು ನಮೂದಿಸಿರುವ ಕುರಿತು ಮಕ್ಕಳ ಕಲ್ಯಾಣ ಸಮಿತಿಯು ಪೊಲೀಸರಿಂದ ಸ್ಪಷ್ಟನೆ ಕೇಳಿದೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...