ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ಹಳ್ಳಿಯೊಂದರ ಬಳಿ ಶನಿವಾರ ಟ್ರ್ಯಾಕ್ಟರ್-ಟ್ರಾಲಿ ಪಲ್ಟಿಯಾಗಿ ಕೊಳಕ್ಕೆ ಬಿದ್ದ ಪರಿಣಾಮ ಕನಿಷ್ಠ 26 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ವಿಶಾಕ್ ಜಿ.ಅಯ್ಯರ್ ತಿಳಿಸಿದ್ದಾರೆ.
ಸಾವಿಗೀಡಾದವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಸಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಭದೇನಾ ಗ್ರಾಮದ ಬಳಿ ಸಂಜೆ ಈ ಘಟನೆ ನಡೆದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಫೋನ್ ಮೂಲಕ ಪಿಟಿಐ ಜೊತೆ ಮಾತನಾಡಿದ ಜಿಲ್ಲಾಧಿಕಾರಿ ಅಯ್ಯರ್, ಸಾವಿನ ಸಂಖ್ಯೆ 26ಕ್ಕೆ ಏರಿದೆ ಎಂದಿದ್ದಾರೆ.
ಟ್ರಾಕ್ಟರ್-ಟ್ರಾಲಿಯಲ್ಲಿ ಸುಮಾರು 50 ಜನರಿದ್ದರು. ಇವರು ಫತೇಪುರ್ನ ಚಂದ್ರಿಕಾ ದೇವಿ ದೇವಸ್ಥಾನದಲ್ಲಿ “ಮುಂಡನ್” ಸಮಾರಂಭದಲ್ಲಿ ಭಾಗವಹಿಸಿದ ನಂತರ ಘಟಂಪುರಕ್ಕೆ ತೆರಳುತ್ತಿದ್ದರು. ಆಗ ಅವಘಡ ನಡೆದಿದ್ದು ಹತ್ತಕ್ಕೂ ಹೆಚ್ಚು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವಿವರಿಸಿದ್ದಾರೆ.
ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ.
“ಕಾನ್ಪುರದಲ್ಲಿ ನಡೆದ ಟ್ರಾಕ್ಟರ್-ಟ್ರಾಲಿ ಅಪಘಾತದಿಂದ ದುಃಖಿತನಾಗಿರುವೆ. ಗಾಯಗೊಂಡವರ ಉಳಿವಿಗಾಗಿ ಪ್ರಾರ್ಥಿಸುವೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದೆ” ಎಂದು ಮೋದಿ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಮೃತರ ಸಂಬಂಧಿಕರಿಗೆ ತಲಾ 2 ಲಕ್ಷ ರೂ.ಗಳನ್ನು ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್ಆರ್ಎಫ್) ನೀಡಲಾಗುವುದು ಎಂದು ಪ್ರಧಾನಮಂತ್ರಿ ಕಚೇರಿಯು (ಪಿಎಂಒ) ತಿಳಿಸಿದೆ. ಗಾಯಗೊಂಡವರಿಗೆ 50,000 ರೂಪಾಯಿ ನೀಡಲಾಗುವುದು ಎಂದು ಪ್ರಧಾನಿ ಪ್ರತಿಕ್ರಿಯಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸಲು ಆದಿತ್ಯನಾಥ್ ಅವರು ಸಚಿವರಾದ ರಾಕೇಶ್ ಸಚನ್ ಮತ್ತು ಅಜಿತ್ ಪಾಲ್ ಅವರನ್ನು ಅಪಘಾತ ಸ್ಥಳಕ್ಕೆ ಕಳುಹಿಸಿದ್ದಾರೆ.
ಟ್ರಾಕ್ಟರ್-ಟ್ರಾಲಿಗಳನ್ನು ಕೃಷಿ ಹಾಗೂ ಸರಕುಗಳನ್ನು ಸಾಗಿಸುವ ಉದ್ದೇಶಗಳಿಗಾಗಿ ಮಾತ್ರ ಬಳಸಬೇಕೇ ಹೊರತು ಜನರನ್ನು ಸಾಗಿಸಲು ಅಲ್ಲ ಎಂದು ಸರ್ಕಾರದ ಅಧಿಕೃತ ಪ್ರಕಟಣೆ ಸ್ಪಷ್ಟಪಡಿಸಿದೆ.
ಘಟನೆ ನಡೆದ ತಕ್ಷಣ ಸ್ಥಳೀಯರು ನೀರಿಗೆ ಹಾರಿ ಸಂತ್ರಸ್ತರನ್ನು ಹೊರಗೆ ತರುವ ಪ್ರಯತ್ನ ಮಾಡಿದರು. ಅಷ್ಟು ವೇಳೆಗಾಗಲೇ ಕೆಲವರು ಸಾವನ್ನಪ್ಪಿದ್ದರು. ಗಾಯಾಳುಗಳನ್ನು ಭೀಟರ್ಗಾಂವ್ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ (ಸಿಎಚ್ಸಿ) ಕರೆದೊಯ್ಯಲಾಯಿತು. ಅಲ್ಲಿ ಕೆಲವರು ಕೊನೆಯುಸಿರೆಳೆದಿರುವುದಾಗಿ ವೈದ್ಯರು ಹೇಳಿದರು.
ಗಾಯಾಳುಗಳನ್ನು ಲಾಲಾ ಲಜಪತ್ ರಾಯ್ (ಎಲ್ಎಲ್ಆರ್) ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಎಸ್ವಿಎಂ ವೈದ್ಯಕೀಯ ಕಾಲೇಜು ಪ್ರಾಂಶುಪಾಲ ಸಂಜಯ್ ಕಲಾ ಸುದ್ದಿಗಾರರಿಗೆ ತಿಳಿಸಿದ್ದಾರೆ.
“ಮುಖ್ಯಮಂತ್ರಿಯವರು ರಕ್ಷಣಾ ಕಾರ್ಯಾಚರಣೆಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಮತ್ತು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡವರಿಗೆ ತಲಾ 50,000 ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ” ಎಂದು ಲಕ್ನೋದಲ್ಲಿ ಸರ್ಕಾರದ ವಕ್ತಾರರು ತಿಳಿಸಿದ್ದಾರೆ.
“ಅಪಘಾತದ ಹಿಂದಿನ ಕಾರಣಗಳನ್ನು ಪತ್ತೆ ಹಚ್ಚಲು ತನಿಖೆ ನಡೆಯುತ್ತಿದೆ. ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲು ಮತ್ತು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವನ್ನು ನೀಡಲು ಜಿಲ್ಲಾಡಳಿತಕ್ಕೆ ತಿಳಿಸಲಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಆದಿತ್ಯನಾಥ್, “ಕಾನ್ಪುರ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತ ಹೃದಯ ವಿದ್ರಾವಕವಾಗಿದೆ. ಜಿಲ್ಲಾಧಿಕಾರಿಗಳು ಮತ್ತು ಇತರ ಹಿರಿಯ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಯುದ್ಧೋಪಾದಿಯಲ್ಲಿ ನಡೆಸಬೇಕು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ” ಎಂದಿದ್ದಾರೆ.
“ಅಪಘಾತದಲ್ಲಾದ ಜೀವಹಾನಿ ಬಹಳ ದುಃಖ ತಂದಿದೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಮೃತರ ಕುಟುಂಬಗಳಿಗೆ ಈ ತುಂಬಲಾರದ ನಷ್ಟವನ್ನು ಭರಿಸುವ ಧೈರ್ಯವನ್ನು ನೀಡಲೆಂದು ಭಗವಾನ್ ಶ್ರೀರಾಮನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿರಿ: ಉತ್ತರ ಪ್ರದೇಶ: ದಲಿತ ಬಾಲಕನನ್ನು ಹೊಡೆದು ಕೊಂದ ಸವರ್ಣೀಯ ಶಿಕ್ಷಕ
ಸಮಾಜವಾದಿ ಪಕ್ಷದ (ಎಸ್ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಮತ್ತು ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಅಧ್ಯಕ್ಷೆ ಮಾಯಾವತಿ ಅವರು ಘಟನೆಗೆ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಯಾದವ್, “ಉತ್ತರ ಪ್ರದೇಶದಲ್ಲಿ ಟ್ರ್ಯಾಕ್ಟರ್ ಟ್ರಾಲಿಗಳಲ್ಲಿ ಸಾಗಾಟ ನಿರಂತರವಾಗಿ ನಡೆಯುತ್ತಿದೆ. ಸಾರಿಗೆ ಇಲಾಖೆ ನಿರ್ಲಕ್ಷ್ಯ ವಹಿಸಿದ್ದು, ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಬಿಜೆಪಿ ಸರಕಾರ ಎಚ್ಚೆತ್ತುಕೊಂಡು ರಕ್ಷಣಾ ಕಾರ್ಯಾಚರಣೆ ನಡೆಸಬೇಕು. ಮೃತರಿಗೆ ಸಂತಾಪ. ಮೃತರ ಸಂಬಂಧಿಕರಿಗೆ 50 ಲಕ್ಷ ರೂ., ಗಾಯಾಳುಗಳಿಗೆ 5 ಲಕ್ಷ ರೂ.ಗಳ ಪರಿಹಾರವನ್ನು ಸರ್ಕಾರ ನೀಡಬೇಕು. ಅವರ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.
ಸಂತ್ರಸ್ತ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಮಾಯಾವತಿಯವರು, ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವನ್ನು ನೀಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.