Homeಕರ್ನಾಟಕಮೈಸೂರು ಸೀಮೆಗೆ ಬಿಜೆಪಿ ಲಗ್ಗೆ

ಮೈಸೂರು ಸೀಮೆಗೆ ಬಿಜೆಪಿ ಲಗ್ಗೆ

- Advertisement -
- Advertisement -

’ಮೆಗಾ ಡೈರಿ’ಯ ಹೆಸರಿನಲ್ಲಿ ಮಂಡ್ಯದಲ್ಲಿ ಅಮಿತ್ ಶಾ ಮೆಗಾ ರಾಜಕೀಯ ಶೋ ನಡೆಸಿ 2023ರ ಮೆಗಾ ರಾಜಕೀಯ ಕಸರತ್ತಿಗೆ ನಾಂದಿ ಹಾಡಿದ್ದಾರೆ. ಮೆಗಾ ಡೈರಿ ಹೆಸರಿನ ಈ ಶೋನಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಗೂ ಸೂಕ್ತ ಸ್ಥಾನಮಾನ ಕಲ್ಪಿಸಲಾಗಿತ್ತು. ಆ ಮೂಲಕ ಒಕ್ಕಲಿಗ ಮತದಾರರನ್ನು ಸೆಳೆಯುವ ತಂತ್ರವೂ ಇಲ್ಲಿ ಕೆಲಸ ಮಾಡಿದೆ. ಅಮಿತ್ ಶಾ ಅವರನ್ನು ಸ್ವಾಗತಿಸಿ ಬಿಜೆಪಿಯವರು ಹಾಕಿದ ಫ್ಲೆಕ್ಸ್‌ಗಳಲ್ಲಿ ಮಂಡ್ಯದ ಹಾಲಿ ಸಂಸದೆ ಸುಮಲತಾ ಅವರೂ ಕೂಡ ರಾರಾಜಿಸಿದ್ದು ಒಂದಷ್ಟು ಚರ್ಚೆಗೆ ಗ್ರಾಸವಾಗಿತ್ತು. ಹಲವು ಊಹಾಪೋಹಗಳಿಗೆ ಇಂಬು ನೀಡುವಂತೆ ಮಾನ್ಯ ದೇವೇಗೌಡರು ಅಮಿತ್ ಶಾರನ್ನು ಕಂಠಪೂರ್ತಿ ಹೊಗಳಿದರು. “ಸಹಕಾರ ಕ್ಷೇತ್ರದ ಅಕ್ರಮಗಳ ಬಗ್ಗೆ ಗಮನಹರಿಸಲು ಅಮಿತ್ ಶಾ ಬಂದಿದ್ದಾರೆ. ಅವರದು ಬಹಳ ದೊಡ್ಡ ವ್ಯಕ್ತಿತ್ವ. ಅವರ ಬಗ್ಗೆ ನನಗೆ ಬಹಳ ಗೌರವವಿದೆ”, ಇವು ನಮ್ಮ ಹೆಮ್ಮೆಯ ಮಾಜಿ ಪ್ರಧಾನಿಗಳ ಅಣಿಮುತ್ತುಗಳು.

ಈ ಮೆಗಾ ಶೋ ನಡೆಸಿದ್ದರ ಹಿಂದೆ ಬಿಜೆಪಿಗೆ ಹಲವು ಉದ್ದೇಶಗಳಿದ್ದಂತೆ ಕಾಣುತ್ತದೆ. ಕರ್ನಾಟಕದ ರೈತರಿಗೆ ಬಹಳ ದೊಡ್ಡದಾದ ಕೊಡುಗೆ ಕೊಡುತ್ತಿದ್ದೇವೆ ಎಂಬಂತೆ ಪ್ರಚಾರ ಗಿಟ್ಟಿಸುವುದು ಒಂದಾದರೆ, ದೀರ್ಘಕಾಲೀನ ದೃಷ್ಟಿಯಿಂದ ತಮ್ಮ ದುರ್ಬಲ ನೆಲೆಯಾದ ಹಳೇ ಮೈಸೂರು ಪ್ರಾಂತ್ಯವನ್ನು ರಾಜಕೀಯವಾಗಿ ಗಟ್ಟಿಗೊಳಿಸಿಕೊಳ್ಳುವುದು ಮತ್ತೊಂದು.

ಈ ಭಾಗದಲ್ಲಿ ಜೆಡಿಎಸ್-ಕಾಂಗ್ರೆಸ್ ಪಕ್ಷಗಳ ನಡುವೆ ನೇರ ಹಣಾಹಣಿ ಇದ್ದು ಈ ಬಾರಿ ಕಾಂಗ್ರೆಸ್ ಒಂದಿಷ್ಟು ಹೆಚ್ಚಿನ ಸ್ಥಾನಗಳನ್ನು ಗಳಿಸುವ ಅವಕಾಶಗಳಿವೆ. ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗಳಿಸಿದಷ್ಟೂ ಬಿಜೆಪಿ ಗದ್ದುಗೆಯ ಕನಸು ಇನ್ನಷ್ಟು ದೂರದೂರ. ಚುನಾವಣಾ ಪೂರ್ವ ತೆರೆಮರೆಯ ಹೊಂದಾಣಿಕೆ ಅಥವಾ ಚುನಾವಣೋತ್ತರ ಮೈತ್ರಿಯ ಸಾಧ್ಯತೆ ಇರುವುದೂ ಕೂಡ ಕೇವಲ ಜೆಡಿಎಸ್‌ನೊಂದಿಗೆ ಮಾತ್ರ. ತ್ರಿಕೋನ ಸ್ಪರ್ಧೆ ಏರ್ಪಡುವ ಮೂಲಕ ಸಾಧ್ಯವಾದಷ್ಟೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿಹಾಕುವುದು ತಕ್ಷಣದ ಗುರಿಯಾಗಿದ್ದಂತೆ ಕಾಣುತ್ತದೆ.

ದೇಶಮಟ್ಟದಲ್ಲಿ ಬಿಜೆಪಿ ಪಕ್ಷಕ್ಕೆ, ’ಹಿಂದುತ್ವ’ ಎಂಬ ಹೆಸರಿನ ರಾಜಕಾರಣವು, 85% ಮತದಾರರನ್ನು ಟಾರ್ಗೆಟ್ ಮಾಡಲು ಇರುವ ಒಂದು ಪ್ರಮುಖ ರಾಜಕೀಯ ವ್ಯೂಹತಂತ್ರ ಎಂಬುದು ತಿಳಿದ ಸಂಗತಿ. ಆದರೆ ತಳಮಟ್ಟದಲ್ಲಿ ಅದರ ಅಸಲಿ ರಾಜಕಾರಣ ನಿಂತಿರುವುದು ಸೋಷಿಯಲ್ ಇಂಜನಿಯರಿಂಗ್ ಎಂಬ ಜಾತಿ ಸಮೀಕರಣದ ಮೇಲೆ. ಮೇಲ್ಜಾತಿಗಳು ಎನಿಸಿಕೊಂಡಿರುವ ಬ್ರಾಹ್ಮಣ, ಬನಿಯಾ ಮತ್ತು ಕ್ಷತ್ರಿಯ ಜಾತಿಗಳು ಅನಾದಿಯಿಂದಲೂ ಬಿಜೆಪಿಯ ಭದ್ರವಾದ ವೋಟ್ ಬ್ಯಾಂಕ್. ಈ ನಿಗದಿತ ವೋಟ್ ಬ್ಯಾಂಕ್ ಜೊತೆಗೆ ಆಯಾ ರಾಜ್ಯಗಳಲ್ಲಿ ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ಬಲಾಢ್ಯವಾಗಿರುವ ಜಾತಿಗಳನ್ನು ತನ್ನತ್ತ ಸೆಳೆದುಕೊಂಡು ತನ್ನ ರಾಜಕೀಯಕ್ಕೆ ಭದ್ರ ಬುನಾದಿ ಏರ್ಪಡಿಸಿಕೊಳ್ಳುವುದು ಅದರ ಯಶಸ್ವಿ ಕಾರ್ಯತಂತ್ರ. ಅಸಲಿಗೆ ಆರೆಸ್ಸೆಸ್ ಮೆಚ್ಚುವ ಮನುಧರ್ಮಶಾಸ್ತ್ರದ ಶ್ರೇಣೀಕರಣ ನೀತಿಗೂ ಈ ತಂತ್ರ ಸರಿಹೊಂದುತ್ತದೆ.

ಕರ್ನಾಟಕದ ಹಾಲಿ ರಾಜಕೀಯ ಸಮೀಕರಣವನ್ನು ನೋಡೋಣ. ಬೆರಳೆಣಿಕೆಯ ಸೀಟುಗಳಿಗೆ ಸೀಮಿತವಾಗಿದ್ದ ಬಿಜೆಪಿ ಉತ್ತರ ಕರ್ನಾಟಕ ಭಾಗದ ಬಲಾಢ್ಯ ಜಾತಿಯಾದ ಲಿಂಗಾಯತರನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ನಂತರ ಕರ್ನಾಟಕದ ರಾಜಕೀಯ ಚಿತ್ರಣವೇ ಬದಲಾಗಿದೆ. ಲಿಂಗಾಯತರ ಪ್ರಶ್ನಾತೀತ ನಾಯಕರಂತಿದ್ದ ಯಡಿಯೂರಪ್ಪನವರ ಪ್ರಯತ್ನ ಮತ್ತು ಪರಿಶ್ರಮದಿಂದಾಗಿ ಲಿಂಗಾಯತ ಪ್ರಾಬಲ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗಳಿಸಿ ಬಿಜೆಪಿ ನೂರರ ಗಡಿ ದಾಟುತ್ತಿದ್ದರೂ ಅಧಿಕಾರದ ಗದ್ದುಗೆ ಹಿಡಿಯಲು ಸಾಧ್ಯವಾಗಲೇ ಇಲ್ಲ. ಆಪರೇಷನ್ ಕಮಲ ಹೆಸರಿನ ಅನೈತಿಕ ಕಾರ್ಯಾಚರಣೆಯ ಮೂಲಕವಷ್ಟೇ ಬಿಜೆಪಿ ಗದ್ದುಗೆ ವಶಪಡಿಸಿಕೊಂಡಿದ್ದು.

ಕರ್ನಾಟಕದ ರಾಜಕಾರಣದಲ್ಲಿ ಅತ್ಯಂತ ಪ್ರಬಲವಾಗಿರುವ ಎರಡು ಜಾತಿಗಳೆಂದರೆ ಲಿಂಗಾಯತ ಮತ್ತು ಒಕ್ಕಲಿಗ ಜಾತಿಗಳು. ಹೀಗಾಗಿ ಲಿಂಗಾಯತರ ನಂತರ ಬಿಜೆಪಿಯ ಟಾರ್ಗೆಟ್ ಒಕ್ಕಲಿಗರು. ಒಕ್ಕಲಿಗರ ಪ್ರಾಬಲ್ಯವಿರುವ ಹಳೇ ಮೈಸೂರು ಪ್ರದೇಶದಲ್ಲಿ ಇಂದಿಗೂ ಬಿಜೆಪಿಗೆ ಹೇಳಿಕೊಳ್ಳುವಂಥ ಯಾವ ನೆಲೆಯೂ ಇಲ್ಲ. ಉತ್ತರ ಕರ್ನಾಟಕ ಹಾಗೂ ಕರಾವಳಿ ಪ್ರದೇಶಗಳಲ್ಲಿ ನೇರ ಹಣಾಹಣಿ ಇರುವುದು ಬಿಜೆಪಿ ಮತ್ತು ಕಾಂಗ್ರೆಸ್‌ಗಳ ನಡುವೆ. ಆದರೆ ಮೈಸೂರು ಪ್ರಾಂತ್ಯದಲ್ಲಿ ನೇರ ಹಣಾಹಣಿ ಇಂದಿಗೂ ಜೆಡಿಎಸ್ ಮತ್ತು ಕಾಂಗ್ರೆಸ್‌ಗಳ ನಡುವೆ. ಈ ಭಾಗದಲ್ಲಿ ಬಿಜೆಪಿಯ ಪ್ರದರ್ಶನ ತೀರಾ ಕಳಪೆ. ಇಲ್ಲಿ ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ ಮೂರನೇ ಸ್ಥಾನದಲ್ಲಿದ್ದರೂ ಮತಗಳಿಕೆ ಕೇವಲ 1500ರಿಂದ 10,000ದವರೆಗೆ ಮಾತ್ರ. ಇತರೆ ಪಕ್ಷಗಳಲ್ಲಿದ್ದು ಸ್ವಂತ ವರ್ಚಸ್ಸಿನಿಂದ ನಾಯಕರಾಗಿರುವ ಸಿ.ಪಿ.ಯೋಗೇಶ್ವರ್ ತರದ ಒಬ್ಬಿಬ್ಬರು ಒಂದಷ್ಟು ಹೆಚ್ಚಿನ ಮತ ಗಳಿಸಿರುವುದು ಮತ್ತು ಗೆದ್ದಿರುವುದು ಅಪವಾದವಷ್ಟೆ.

ಇದನ್ನೂ ಓದಿ: ನಂದಿನಿ ತಂಟೆಗೆ ಬಂದರೆ ಬಿಜೆಪಿ ಭಸ್ಮವಾಗುತ್ತೆ: ಕೆಎಂಎಫ್‌-ಅಮುಲ್ ವಿಲೀನ ಪ್ರಸ್ತಾಪಕ್ಕೆ ಎಚ್‌ಡಿಕೆ ಆಕ್ರೋಶ

ಉದಾಹರಣೆಗೆ 2018ರ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಏಳಕ್ಕೆ ಏಳೂ ಸ್ಥಾನಗಳನ್ನು ಜೆಡಿಎಸ್ ಗೆದ್ದುಕೊಂಡಿತ್ತು. ಅನೈತಿಕ ಕಾರ್ಯಾಚರಣೆಯ ಮೂಲಕ ಕೆಆರ್‌ಪೇಟೆ ಶಾಸಕ ನಾರಾಯಣ ಗೌಡರನ್ನು ತನ್ನ ತೆಕ್ಕೆಗೆ ತೆಗೆದುಕೊಂಡು ಉಪ ಚುನಾವಣೆಯಲ್ಲಿ ಗೆಲ್ಲಿಸಿಕೊಂಡು ಬಿಜೆಪಿ ಜಿಲ್ಲೆಯಲ್ಲಿ ಖಾತೆ ತೆರೆದಿದೆ. ಇನ್ನು ಹಾಸನ ಜಿಲ್ಲೆಯಲ್ಲೂ ಕೂಡ ಇತ್ತೀಚೆಗೆ ಪ್ರವರ್ಧಮಾನಕ್ಕೆ ಬಂದಿರುವ ಪ್ರೀತಂ ಗೌಡ ಒಬ್ಬರನ್ನು ಬಿಟ್ಟರೆ ಉಳಿದ ಆರು ಕ್ಷೇತ್ರಗಳು ಜೆಡಿಎಸ್ ಕೈಯ್ಯಲ್ಲಿವೆ. ರಾಮನಗರ ಜಿಲ್ಲೆಯ ನಾಲ್ಕು ಕ್ಷೇತ್ರಗಳ ಪೈಕಿ ಮೂರು ಜೆಡಿಎಸ್ ಮತ್ತೊಂದು ಕಾಂಗ್ರೆಸ್ ಜತೆಗಿದೆ. ಮೈಸೂರು ಜಿಲ್ಲೆಯ 11 ಕ್ಷೇತ್ರಗಳ ಪೈಕಿ ಬಿಜೆಪಿ ಗೆದ್ದಿರುವುದು ಕೇವಲ ಮೂರು ಮಾತ್ರ. ಉಳಿದ ಕ್ಷೇತ್ರಗಳನ್ನು ಜೆಡಿಎಸ್ ಮತ್ತು ಕಾಂಗ್ರೆಸ್ ಹಂಚಿಕೊಂಡಿವೆ. ಚಾಮರಾಜನಗರದಲ್ಲಿ ಬಿಜೆಪಿ ಗೆದ್ದದ್ದು ಒಂದೇ ಕ್ಷೇತ್ರದಲ್ಲಿ. ಬಿಎಸ್‌ಪಿಯಿಂದ ಗೆದ್ದ ಕೊಳ್ಳೇಗಾಲ ಶಾಸಕ ಮಹೇಶ್‌ರನ್ನು ಸೆಳೆದುಕೊಂಡಿದ್ದರಿಂದಾಗಿ ಈಗ 2 ಸ್ಥಾನಗಳಿಗೆ ಏರಿದೆ.

ನಾರಾಯಣ ಗೌಡ

ಈ ಪ್ರದೇಶದಲ್ಲಿ ಪ್ರಾಬಲ್ಯ ಸಾಧಿಸಲು ದಶಕಗಟ್ಟಲೆ ನಡೆಸಿರುವ ಕಸರತ್ತು ಅಷ್ಟಾಗಿ ಫಲ ಕೊಟ್ಟಿಲ್ಲ. ಹೀಗಾಗಿ ಬಿಜೆಪಿ ಇಲ್ಲಿ ’ವಿಶೇಷ’ ಕ್ರಮ ಕೈಗೊಳ್ಳುವ ಪ್ರಯತ್ನದಲ್ಲಿದೆ.

ಇಲ್ಲಿ ಬಿಜೆಪಿ ಸ್ಟ್ರಾಟೆಜಿ ಏನು?

ಈ ಪ್ರದೇಶದಲ್ಲಿ ಪ್ರಬಲವಾಗಿರುವ ಒಕ್ಕಲಿಗ ಜಾತಿಯನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳದೆ ಬಿಜೆಪಿ ಈ ಭಾಗದಲ್ಲಿ ಭದ್ರವಾಗಿ ನೆಲೆಯೂರುವುದು ಅಸಾಧ್ಯ ಎಂಬುದು ನಿಚ್ಚಳವಾಗಿದೆ. ಓಬಿಸಿ ಮತ್ತು ದಲಿತ ಜಾತಿಗಳು ಕಾಂಗ್ರೆಸ್‌ನ ಪಾರಂಪರಿಕ ಮತಬ್ಯಾಂಕ್ ಎನಿಸಿಕೊಂಡಿವೆ. ಒಕ್ಕಲಿಗರು ಜೆಡಿಎಸ್‌ನ ಅಭೇದ್ಯ ಕೋಟೆಯಂತಿದ್ದಾರೆ. ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿ ಪ್ರಧಾನಿ ಕೈಯ್ಯಿಂದಲೇ ಉದ್ಘಾಟನೆ ಮಾಡಿಸುವುದು, ಒಕ್ಕಲಿಗರ ಸ್ವಾಮೀಜಿಯ ಸಖ್ಯ ಬೆಳೆಸಿ ಒಕ್ಕಲಿಗರನ್ನು ಓಲೈಸುವ ತಂತ್ರಗಳು ನಿರಂತರ ನಡೆಯುತ್ತಲೇ ಇವೆ. ಕಳೆದ ಜೂನ್‌ನಲ್ಲಿ ಪ್ರಧಾನಿ ಮೋದಿ ಯೋಗ ದಿನಾಚರಣೆಯ ಹೆಸರಿನಲ್ಲಿ ಶೋ ನಡೆಸಲು ಮೈಸೂರನ್ನು ಆಯ್ಕೆ ಮಾಡಿಕೊಂಡಿದ್ದು ಕೂಡ ಈ ತಂತ್ರದ ಭಾಗವೇ. ಆರ್.ಅಶೋಕ್, ಅಶ್ವತ್ಥನಾರಾಯಣ, ಸಿಟಿ ರವಿ, ಎಸ್.ಟಿ ಸೋಮಶೇಖರ್, ಗೋಪಾಲಯ್ಯ ಮುಂತಾದವರನ್ನು ಒಕ್ಕಲಿಗ ನಾಯಕರೆಂಬಂತೆ ಬಿಂಬಿಸುವ ಕಸರತ್ತು ಕೂಡ ನಡೆದಿದೆ.

ಆದರೂ ಇವೆಲ್ಲ ಹೆಚ್ಚಿನ ಫಲ ಕೊಡಲಾರವು. ಹೀಗಾಗಿ ಬೆಜೆಪಿ ಬೆಳೆಯಬೇಕೆಂದರೆ ಈ ಪ್ರದೇಶದಲ್ಲಿ ಹಿಂದು-ಮುಸ್ಲಿಂ ರಾಜಕಾರಣವನ್ನು ಮುನ್ನೆಲೆಗೆ ತರಲೇಬೇಕೆಂಬುದು ಅವರ ದೀರ್ಘಕಾಲಿಕ ಯೋಜನೆ. ಇದರ ಭಾಗವಾಗಿ ಆರೆಸ್ಸೆಸ್ ಕೂಟದ ಹತ್ತಾರು ಸಂಘಟನೆಗಳು ಚಾಪೆಯ ಕೆಳಗಿನ ನೀರಿನಂತೆ ಈ ಪ್ರದೇಶದಲ್ಲಿ ದಶಕಗಳಿಂದಲೂ ಕಾರ್ಯನಿರ್ವಹಿಸುತ್ತಿವೆ. ಕ್ರಮೇಣ ಅವರ ಪ್ರಭಾವ ವಿಸ್ತರಿಸುತ್ತಿದೆ. ಇಲ್ಲಿ ಒಂದು ವಿಷಯವನ್ನು ನೆನಪಿಸುವುದು ಒಳ್ಳೆಯದು. ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಕೇಸಿನಲ್ಲಿ ಬಂಧಿತನಾಗಿ ಈಗ ಐದು ವರ್ಷದಿಂದ ಜೈಲಿನಲ್ಲಿರುವ ನವೀನ್ ಕುಮಾರ್ ಅಲಿಯಾಸ್ ಹೊಟ್ಟೆ ಮಂಜ ಎಂಬಾತ ಇದೇ ಮಂಡ್ಯ ಜಿಲ್ಲೆಯ ಒಕ್ಕಲಿಗರ ಹುಡುಗ.

ಇಲ್ಲಿ ಹಿಂದು-ಮುಸ್ಲಿಂ ರಾಜಕಾರಣ ಅಂದರೆ ಬೇರೇನಲ್ಲ; ಒಕ್ಕಲಿಗರನ್ನು ಮುಸ್ಲಿಮರ ವಿರುದ್ಧ ಎತ್ತಿಕಟ್ಟುವುದು. ಹಾಗಾಗಿ ನಿರಂತರವಾಗಿ ಟಿಪ್ಪು ಸುಲ್ತಾನ್ ವಿರುದ್ಧ ಸಲ್ಲದ ಅಪಪ್ರಚಾರಗಳನ್ನು ನಡೆಲಾಗುತ್ತಿದೆ. ಟಿಪ್ಪು ಒಕ್ಕಲಿಗರಿಗೆ ಕಿರುಕುಳ ನೀಡಿದನೆಂದೂ, ಟಿಪ್ಪುವನ್ನು ಕೊಂದಿದ್ದು ಉರಿಗೌಡ ಮತ್ತು ನಂಜೇಗೌಡ ಎಂಬ ಇಬ್ಬರು ಒಕ್ಕಲಿಗ ಯೋಧರೆಂದೂ ಕಲ್ಪಿತ ಕತೆಗಳನ್ನು ಸೃಷ್ಟಿಸಿ ಒಕ್ಕಲಿಗರ ಮನಸ್ಸಿನಲ್ಲಿ ವಿಷ ಬಿತ್ತುವ ಕೆಲಸ ದಶಕಗಳಿಂದ ಅವ್ಯಾಹತವಾಗಿ ನಡೆಯುತ್ತಿದೆ. ಮುಂಬರುವ ದಿನಗಳಲ್ಲಿ ಶ್ರೀರಂಗಪಟ್ಟಣದ ಸುತ್ತಲೂ ಅಗ್ನಿಕುಂಡವೊಂದನ್ನು ಸೃಷ್ಟಿಸಲು ಸಕಲ ಸಿದ್ಧತೆಗಳೂ ನಡೆದಿವೆ. ಅದರಲ್ಲಿ ಬಲಿಯಾಗುವುದು ಮಾತ್ರ ಅಮಾಯಕ ಮುಸ್ಲಿಮರು ಹಾಗೂ ಒಕ್ಕಲಿಗ ಹುಡುಗರು. ಹೀಗೆ ಮೈಸೂರು ಪ್ರದೇಶ ಹೆಚ್ಚೆಚ್ಚು ಕೋಮು ಧ್ರುವೀಕರಣ ಆದಂತೆಲ್ಲಾ ಬಿಜೆಪಿಯ ಸೀಟುಗಳ ಸಂಖ್ಯೆ ಹೆಚ್ಚುತ್ತದೆ. ಅಲ್ಲದೆ, ರಾಮನಗರದ ರಾಮದೇವರಬೆಟ್ಟದಲ್ಲಿ ದಕ್ಷಿಣದ ಅಯೋಧ್ಯೆಯನ್ನು ನಿರ್ಮಿಸುತ್ತೇವೆ ಎಂದು ಬಾಯಿಬಡಿದುಕೊಳ್ಳುತ್ತಿದ್ದಾರೆ. ಇದಕ್ಕೆ ಯುಪಿಯಿಂದ ಯೋಗಿ ಆದಿತ್ಯನಾಥರನ್ನೂ ಕರೆಸುವುದಾಗಿ ಅಶ್ವಥ್ ನಾರಾಯಣ ಹೇಳಿದ್ದಾರೆ.

ಸಚ್ಚಿದಾನಂದ ಶೆಟ್ಟಿ

ಕೋಮು ಧ್ರುವೀಕರಣದ ಜೊತೆಜೊತೆಗೆ ಇತರೆ ಪಕ್ಷಗಳ (ಮುಖ್ಯವಾಗಿ ಒಕ್ಕಲಿಗ ಜಾತಿಯ) ನಾಯಕರನ್ನು, ವಿವಿಧ ಹಂತದ ಕಾರ್ಯಕರ್ತರನ್ನು ನಾನಾ ಆಮಿಷ, ಬೆದರಿಕೆಗಳ ಮೂಲಕ ತನ್ನ ತೆಕ್ಕೆಗೆ ತೆಗೆದುಕೊಂಡು ತನ್ನ ತಳಹದಿಯನ್ನು ವಿಸ್ತರಿಸಿಕೊಳ್ಳುವುದು ಮಾಮೂಲಿಯಂತೆ ನಡೆಯುತ್ತಿದೆ. ಇತ್ತೀಚೆಗೆ ಕಾಂಗ್ರೆಸ್‌ನ ಪ್ರಭಾವಿ ಯುವ ನಾಯಕ ಸಚ್ಚಿದಾನಂದ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇವರು ಶ್ರೀರಂಗಪಟ್ಟಣದಿಂದ ಬಿಜೆಪಿ ಅಭ್ಯರ್ಥಿಯಾಗುವುದು ಬಹುತೇಕ ಖಚಿತವಾಗಿದೆ. ಮಂಡ್ಯ ನಗರದಲ್ಲಿ ಕಾಂಗ್ರೆಸ್ ಟಿಕೆಟ್ ವಂಚಿತ ಅಭ್ಯರ್ಥಿ ಚಂದಗಾಲು ಶಿವಣ್ಣ ಎಂಬುವವರು ಬಿಜೆಪಿ ಸೇರಿ 33 ಸಾವಿರಕ್ಕೂ ಹೆಚ್ಚಿನ ಮತ ಗಳಿಸಿ ಅಚ್ಚರಿ ಮೂಡಿಸಿದ್ದರು. ಇದರಲ್ಲಿ ಅಭ್ಯರ್ಥಿಯ ವರ್ಚಸ್ಸು ಮಾತ್ರ ಕೆಲಸ ಮಾಡಿದ್ದು ಬಿಜೆಪಿಯ ಹೆಗ್ಗಳಿಕೆ ಏನೂ ಇಲ್ಲದಿದ್ದರೂ ಕ್ರಮೇಣವಾಗಿ ಇವು ಬಿಜೆಪಿ ಮತಗಳಾಗಿ ಸಧೃಡಗೊಳ್ಳುವುದು ಖಚಿತ. ಫೈಟರ್ ರವಿ ಎಂಬ ರೌಡಿ ಹಿನ್ನೆಲೆಯ ವ್ಯಕ್ತಿಯನ್ನು ನಾಗಮಂಗಲದಿಂದ ಕಣಕ್ಕಿಳಿಸುವ ತಯಾರಿ ನಡೆದಿದೆ. “ಪಕ್ಷೇತರ ಸಂಸದೆ ಸುಮಲತಾ ತಮ್ಮ ವರಿಷ್ಠರೊಂದಿಗೆ ಮಾತುಕತೆಯಲ್ಲಿದ್ದಾರೆ, ಸದ್ಯದಲ್ಲೇ ನಮ್ಮ ಪಕ್ಷ ಸೇರಲಿದ್ದಾರೆ” ಎಂದು ಸಿಪಿ ಯೋಗೇಶ್ವರ್ ಬಹಿರಂಗಪಡಿಸಿದ್ದಾರೆ. ಮೈಸೂರಿನಲ್ಲಿ ಜಿಟಿ ದೇವೇಗೌಡರನ್ನು ಸೆಳೆಯುವ ಪ್ರಯತ್ನಗಳೂ ನಡೆದಿವೆ.

ಹೀಗೆ ಒಂದೆಡೆ ಕೋಮು ಧ್ರುವೀಕರಣ ಮತ್ತೊಂದೆಡೆ ಸಾಲುಸಾಲು ಒಕ್ಕಲಿಗ ನಾಯಕರನ್ನು, ಕಾರ್ಯಕರ್ತರನ್ನು ಕಬಳಿಸಿಕೊಂಡು ಬಿಜೆಪಿ ಶಕ್ತಿ ಸಂಚಯ ಮಾಡಿಕೊಳ್ಳುತ್ತಿರುವುದು ನಿಚ್ಚಳವಾಗಿ ಕಾಣುತ್ತಿದೆ. ಬಿಜೆಪಿ ಪ್ರಾಬಲ್ಯ ಹೆಚ್ಚಾದಷ್ಟೂ ಅದರ ನೇರ ಮತ್ತು ಅಂತಿಮ ರಾಜಕೀಯ ಪರಿಣಾಮ ಉಂಟಾಗುವುದು ಇದೇ ಪ್ರದೇಶದಲ್ಲಿ ನೆಲೆ ಹೊಂದಿರುವ ಪ್ರಾದೇಶಿಕ ಪಕ್ಷ ಜೆಡಿಎಸ್ ಮೇಲೆ. ಕಾಂಗ್ರೆಸ್ ಪಕ್ಷ ತನ್ನದೇ ಆದ ರಾಜಕೀಯ ನೆಲೆ ಮತ್ತು ನಿಷ್ಠಾವಂತ ಸಮುದಾಯಗಳ ಮತಗಳನ್ನು ಹೊಂದಿರುವುದರಿಂದ ಅದರ ಅಸ್ತಿತ್ವಕ್ಕೆ ಅಂಥಾ ಅಪಾಯವೇನಿಲ್ಲ.

ಇದನ್ನೂ ಓದಿ: ಅಮುಲ್‌ ಜೊತೆ ಕೆಎಂಎಫ್‌ ವಿಲೀನ ಮಾಡುವುದಿಲ್ಲ: ಬೊಮ್ಮಾಯಿ ಸ್ಪಷ್ಟನೆ

ಕೊನೆಯಲ್ಲಿ ಒಂದು ಮಾತು. ಬಿಜೆಪಿಯೊಂದಿಗೆ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿದೆ ಎಂಬ ಗುಸುಗುಸು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಲೇ ಇದೆ. ಕೆಲವು ಕಾಂಗ್ರೆಸ್ ಮುಖಂಡರು ಈ ಬಗ್ಗೆ ನೇರವಾಗಿ ಆರೋಪಿಸಿರುವುದೂ ಆಗಿದೆ. ಆದರೆ ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸುತ್ತಿರುವ ಕುಮಾರಣ್ಣನವರು ಬಿಜೆಪಿ ವಿರುದ್ಧ, ಅಮಿತಾ ಶಾ ವಿರುದ್ಧ ಕೆಂಡದಂತ ಟೀಕೆಗಳನ್ನು ಹರಿಸುತ್ತಿದ್ದಾರೆ. ಈ ಟೀಕಾ ಪ್ರಹಾರದಾಚೆಗೆ ಸತ್ಯಾಸತ್ಯತೆ ಹೊರಬರಬೇಕೆಂದರೆ ಇನ್ನೂ ಒಂದೆರಡು ತಿಂಗಳುಗಳು ಕಾಯಬೇಕಾಗುತ್ತದೆ. ಟಿಕೆಟ್ ಹಂಚಿಕೆಯ ಕಸರತ್ತು ಆರಂಭವಾದಂತೆಲ್ಲಾ ಎಲ್ಲವೂ ನಿಚ್ಚಳವಾಗುತ್ತದೆ. ಅಲ್ಲಿಯವರೆಗೂ ಇಂತಹ ಪ್ರಹಸನಗಳು ಮುಂದುವರಿದಿರುತ್ತವೆ.

ಇದೆಲ್ಲಾ ಏನೇ ಇರಲಿ, ಕೋಮು ಧ್ರುವೀಕರಣವೆಂಬ ರಾಕ್ಷಸ ರಾಜಕಾರಣದ ಅಪಾಯವನ್ನು ಜೆಡಿಎಸ್ ಪಕ್ಷದ ಕಾರ್ಯಕರ್ತರು ಮತ್ತು ಅದರ ನಾಯಕರು ಎಷ್ಟು ಬೇಗ ಅರ್ಥ ಮಾಡಿಕೊಂಡರೆ ಅಷ್ಟೇ ಅವರಿಗೆ ಒಳ್ಳೆಯದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...