ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಕುಮಾರಸ್ವಾಮಿ ಅವರು, ಪ್ರಹ್ಲಾದ್ ಜೋಶಿಯವರ ಬಗ್ಗೆ ಮಾತನಾಡುತ್ತ ಬ್ರಾಹ್ಮಣ ಸಮುದಾಯದ ಬಗ್ಗೆ ಮಾತನಾಡಿದ್ದರು. ಇದನ್ನು ಬಿಜೆಪಿ ನಾಯಕರು, ಕುಮಾರಸ್ವಾಮಿ ಬ್ರಾಹ್ಮಣರ ವಿರೋಧಿ ಎಂದು ಆರೋಪಿಸಿದ್ದರು. ಅದಕ್ಕೆ ಇದೀಗ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡುವ ಮೂಲಕ ಬಿಜೆಪಿ ವಿರುದ್ದ ಕಿಡಿಕಾರಿದ್ದಾರೆ.
ಕುಮಾರಸ್ವಾಮಿ ಅವರು ಮಾತನಾಡುವ ವೇಳೆ, ”ಪ್ರಹ್ಲಾದ್ ಜೋಶಿಯವರು ನಮ್ಮ ದಕ್ಷಿಣ ಕರ್ನಾಟಕದ ಬ್ರಾಹ್ಮಣರಿದ್ದರಲ್ಲ, ಆ ಸಂಸ್ಕೃತಿಯ ಬ್ರಾಹ್ಮಣರಲ್ಲ. ಬ್ರಾಹ್ಮಣರ ಸಂಸ್ಕಾರದಲ್ಲಿಯೂ ಎರಡು ಮೂರು ಥರ ಇವೆ. ಇವರು ಶೃಂಗೇರಿಯ ಮಠ ಒಡೆದ, ಅಲ್ಲಿನ ವಿಗ್ರಹ ಕೆಡವಿದ ದೇಶಸ್ಥ ಬ್ರಾಹ್ಮಣರ ಗುಂಪಿಗೆ ಸೇರಿದವರು. ಮಹಾತ್ಮ ಗಾಂಧಿಯನ್ನು ಕೊಂದಂತಹ ವರ್ಗಕ್ಕೆ ಸೇರಿದವರು” ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದರು.
ಬಿಜೆಪಿಯು ಹೆಚ್ಡಿಕೆ ಅವರನ್ನು ಬ್ರಾಹ್ಮಣ ವಿರೋಧಿ ಎಂದು ಬಿಂಬಿಸಿತ್ತು. ಈ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಕುಮಾರಸ್ವಾಮಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
”ಪೇಶ್ವೆಗಳ ವಂಶಾವಳಿಗೆ ಸಂಬಂಧಪಟ್ಟ ವ್ಯಕ್ತಿಯನ್ನು ಬಿಜೆಪಿ ಪಕ್ಷ ಮುಂದಿನ ಮುಖ್ಯಮಂತ್ರಿ ಮಾಡಲು ಹುನ್ನಾರ ನಡೆಸಿದೆ ಎಂಬುದು ನನ್ನ ಹೇಳಿಕೆ ಆಗಿತ್ತು. ನನ್ನ ಹೇಳಿಕೆಯಲ್ಲಿ ಗೊಂದಲ ಇಲ್ಲ, ಸ್ಪಷ್ಟತೆ ಇತ್ತು” ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಗಾಂಧಿ ಕೊಂದ, ಶೃಂಗೇರಿ ಮಠ ಒಡೆದ ಬ್ರಾಹ್ಮಣರ ಬಗ್ಗೆ ಎಚ್ಚರಿಕೆಯಿಂದಿರಿ: ಪ್ರಹ್ಲಾದ್ ಜೋಶಿ ವಿರುದ್ಧ ಹೆಚ್ಡಿಕೆ ಆಕ್ರೋಶ
”ಕರ್ನಾಟಕ ರಾಜ್ಯದ ಮೇಲೆ, ಅದರಲ್ಲೂ ನಾವೆಲ್ಲರೂ ಶ್ರದ್ಧೆ, ಭಕ್ತಿಯಿಂದ ನಡೆದುಕೊಳ್ಳುವ ಶ್ರೀ ಶೃಂಗೇರಿ ಪೀಠ, ಮತ್ತೂ ಅಲ್ಲಿನ ದೇವಾಲಯಗಳ ಮೇಲೆ ಪೇಶ್ವೆಗಳಿಂದ ಪೈಶಾಚಿಕ ದಾಳಿ ನಡೆದಿತ್ತು. ಇದು ಇತಿಹಾಸ, ಈ ಇತಿಹಾಸವನ್ನು ತಿರುಚಿ ಹೇಳುವ ಅಗತ್ಯ ನನಗಿಲ್ಲ” ಎಂದಿದ್ದಾರೆ.
”ನಾನು ಹೇಳಿದ್ದೇ ಒಂದು, ಕೆಲವರು ತಿರುಚಿ ಅಪಪ್ರಚಾರ ನಡೆಸುತ್ತಿರುವುದೇ ಇನ್ನೊಂದು. ಈ ಒಂದು ಇನ್ನೊಂದರ ನಡುವೆ ಅಜಗಜಾಂತರ ವ್ಯತ್ಯಾಸವಿದೆ. ಸತ್ಯಕ್ಕೂ ಸುಳ್ಳಿಗೂ ಇರುವಷ್ಟೇ ದೂರವಿದೆ. ಪಾಪ.. ಕೆಲವರಿಗೆ ತಿರುಚುವುದೇ ಕೆಲಸ, ಅದೇ ಅವರಿಗೆ ಸರ್ವಸ್ವ. ನಾನು ಏನು ಮಾಡಲಿ? ಸತ್ಯ ಹೇಳಿದ್ದೇನೆ, ಚರ್ಚೆಯಾಗಲಿ” ಎಂದು ಅವರು ಹೇಳಿದ್ದಾರೆ.
”ಶಿವಾಜಿ ಮಹಾರಾಜರು, ಜಗಜ್ಯೋತಿ ಬಸವೇಶ್ವರರು, ಗೌತಮ ಬುದ್ಧ, ಮಹಾತ್ಮ ಗಾಂಧೀಜಿ ಮತ್ತು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನೇ ಬಿಡದವರು ಇವರು. ಇನ್ನು ನನ್ನನ್ನು ಬಿಟ್ಟಾರೆಯೇ? ಕೀಳು ನಿಂದನೆ, ಚಿತಾವಣೆಯಷ್ಟೇ ಇವರ ಆಯುಧಗಳು. ನಿಂದನೆ ಮತ್ತು ನಿಂದಕರ ಬಗ್ಗೆ ನಾನು ಅಂಜುವ ಪೈಕಿ ಅಲ್ಲ” ಎಂದಿದ್ದಾರೆ.
”ನಾನು ಎತ್ತಿದ ವಿಚಾರಕ್ಕೆ ಸಂಬಂಧವೇ ಇಲ್ಲದಂತೆ ಬಿಜೆಪಿಯವರು ಅವೇಶಭರಿತರಾಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಆದರೆ, ವಿಧಾನಸೌಧದಲ್ಲಿ ಬಿಜೆಪಿಯು ಪೇಶ್ವೆಗಳ ವಂಶಾವಳಿಯ ನಾಯಕನ ಪ್ರತಿಷ್ಠಾಪನೆ ಮಾಡಲು ಹೊರಟಿರುವ ನನ್ನ ಪ್ರಶ್ನೆಗೆ ಉತ್ತರ ಕೊಡುವ ದಮ್ಮು ತಾಕತ್ತು ತೋರಿಸುತ್ತಿಲ್ಲ, ಯಾಕೆ? ಇಂಥ ವಿಕೃತಿಗಳಿಗೆ ನಾನು ಸೊಪ್ಪು ಹಾಕುವುದಿಲ್ಲ.”
”ಯಾರೋ ಮಾಡಿದ ಆದೇಶ, ಕಟ್ಟಪ್ಪಣೆಗೆ ಅಂಜಿ ನನ್ನ ಬಗ್ಗೆ ಬಿಜೆಪಿ ನಾಯಕರು ಸರಣಿ ಹೇಳಿಕೆ ನೀಡಬಹುದು. ಜಾಲತಾಣಗಳಲ್ಲಿ ಅಪಪ್ರಚಾರ ಮಾಡಿಸಬಹುದು. ಆದರೆ, ಅವರೆಲ್ಲ ತಮ್ಮ ಆತ್ಮಸಾಕ್ಷಿಯನ್ನು ಒಮ್ಮೆ ಪ್ರಶ್ನೆ ಮಾಡಿಕೊಳ್ಳಲಿ. ಪೇಶ್ವೆ ವಂಶಾವಳಿ ನಾಯಕನ ಸರಣಿ ಹುನ್ನಾರಗಳ ಬಗ್ಗೆ ಮಾತನಾಡುವ ಧೈರ್ಯ ಅವರು ತೋರುತ್ತಾರೆಯೇ?” ಎಂದು ಪ್ರಶ್ನಿಸಿದ್ದಾರೆ.
”ನನಗೆ ಸೋಲುವ ಭಯವಂತೆ, ಹತಾಶೆಯಂತೆ ಎಂದು ಬೊಗಳೆ ಬಿಟ್ಟುಕೊಂಡು ಕೇಕೆ ಹಾಕಿದರೆ ಜನ ನಂಬುವುದಿಲ್ಲ, ಅವರಿಗೂ ಗರ್ಭಗುಡಿಯಲ್ಲಿ ಏನು ನಡೆಯುತ್ತಿದೆ ಎಂಬುದು ಚೆನ್ನಾಗಿ ಗೊತ್ತು. ಸತ್ಯ ಸಾಯುವುದೂ ಇಲ್ಲ… ಅಲ್ಲವೇ?”
”ಜಗಜ್ಯೋತಿ ಬಸವೇಶ್ವರರು, ಗೌತಮ ಬುದ್ಧ, ಮಹಾತ್ಮ ಗಾಂಧೀಜಿ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದನ್ನೇ ನಾನು ಹೇಳಿದ್ದೇನೆ. ಇನ್ನು, ಬ್ರಾಹ್ಮಣ ಸಮೂಹವನ್ನು ನಿಂದಿಸುವ ಪ್ರಶ್ನೆ ಎಲ್ಲಿ? ನಾನು ನಿಂದಿಸಿಲ್ಲ, ನಿಂದಿಸುವುದೂ ಇಲ್ಲ. ಮತ್ತೆ ಮತ್ತೆ ಸ್ಪಷ್ಟನೆ ಅನಗತ್ಯ” ಎಂದು ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮೂಲಕ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.


