ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರ ಲೋಕಾಯುಕ್ತ ದಾಳಿಗೆ ತುತ್ತಾಗಿ, ಅವರ ಮನೆ ಮತ್ತು ಕಚೇರಿಗಳಲ್ಲಿ ಕಂತೆ ಕಂತೆ ಹಣ ಸಿಕ್ಕಿರುವ ಬಗ್ಗೆ ಬಿಜೆಪಿಗೆ ತರಾಟೆಗೆ ತೆಗೆದುಕೊಂಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, “ರಾಮರಾಜ್ಯವಾಗಿದ್ದ ಕರ್ನಾಟಕ ಈಗ ಕಮಿಷನ್ ರಾಜ್ಯವಾಗಿದೆ” ಎಂದು ಟೀಕಿಸಿದ್ದಾರೆ.
ಸದ್ಯ ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಪ್ರಶ್ನಿಸಿ ಸರಣಿ ಟ್ವೀಟ್ಗಳನ್ನು ಮಾಡಿರುವ ಅವರು, “ರಾಜ್ಯಕ್ಕೆ ಮತ್ತೆ ಇಂದು ಹಾರಿ ಬಂದ ಅಮಿತ್ ಶಾ ಅವರಿಗೆ ಹಾರ್ದಿಕ ಸ್ವಾಗತ, ಸುಸ್ವಾಗತ. ನಿಮ್ಮ ಡಬಲ್ ಎಂಜಿನ್ ಬಿಜೆಪಿ ಸರಕಾರ ಭರ್ತಿ 40% ಕಮಿಷನ್ ಉಡಾಯಿಸುತ್ತಿದೆ ಎನ್ನುವುಕ್ಕೆ ನಿಮ್ಮ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರನ ಕಂತೆ ಕಂತೆಗಳ ಪುರಾಣವೇ ದೊಡ್ಡ ಪುರಾವೆ” ಎಂದಿದ್ದಾರೆ.
“ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹಾಗೂ ಸರ್ ಎಂ.ವಿಶ್ವೇಶ್ವರಯ್ಯನವರ ಕನಸಿನ ಕೂಸಾದ ಸಾಬೂನು ಕಾರ್ಖಾನೆಯನ್ನು ಸ್ವಚ್ಚಗೊಳಿಸುವುದು ಎಂದರೆ ಇದೇನಾ? ನಿಮ್ಮ ʼಸ್ವಚ್ಚ ಭಾರತ್ʼ ಪರಿಕಲ್ಪನೆಯೇ ಅದ್ಭುತ! ವಾರೆವ್ಹಾ” ಎಂದು ವ್ಯಂಗ್ಯವಾಡಿದ್ದಾರೆ.
“ಅಮಿತ್ ಶಾ ಅವರೇ ಈಗ ಹೇಳಿ. ಕರ್ನಾಟಕ ಯಾರ ಎಟಿಎಂ? ರಾಜ್ಯವನ್ನು ಭ್ರಷ್ಟಾಚಾರ ಮುಕ್ತ ಮಾಡುತ್ತೇವೆ ಎಂದು ನೀವು ಹೇಳಿದ್ದು ಈ ಅರ್ಥದಲ್ಲಿಯಾ? ಭ್ರಷ್ಟಾಚಾರ ಮುಕ್ತ ಮಾಡುವುದು ಎಂದರೆ ಅಪ್ಪನ ಪರವಾಗಿ ಪುತ್ರರತ್ನ ಕಂತೆ ಕಂತೆ ಕಟ್ಟುಗಳನ್ನು ಸ್ವಂತ ಎಟಿಎಂಗೆ ಇಳಿಸುವುದಾ? ಸಾಬೂನು ಕಾರ್ಖಾನೆಯನ್ನು ಸಖತ್ತಾಗಿ ಸಾರಿಸಿ ಗಂಡಾಂತರ ಮಾಡುವುದಾ?” ಎಂದು ಪ್ರಶ್ನಿಸಿದ್ದಾರೆ.
“ನಿಮ್ಮ ಡಬಲ್ ಎಂಜಿನ್ ಬಿಜೆಪಿ ಸರಕಾರ 40% ಕೊಚ್ಚೆಯಲ್ಲಿ ಉರುಳಾಡುತ್ತಿದೆ ಎನ್ನುವುದಕ್ಕೆ ಇದಕ್ಕಿಂತ ತಾಜಾ ಉದಾಹರಣೆ ಬೇಕಾ? ಕನ್ನಡಿಗರ ಹೆಮ್ಮೆಯ ಪ್ರತೀಕ ಸಾಬೂನು ಕಾರ್ಖಾನೆಯನ್ನು 40% ಕಮಿಷನ್ ಸೋಪಿನಿಂದ ಭರ್ಜರಿಯಾಗಿ ತೊಳೆಯುತ್ತಿರುವ ಬಿಜೆಪಿ ಶಾಸಕರ ಬೆನ್ನು ತಟ್ಟುವಿರೋ ಅಥವಾ ಪಕ್ಷದಿಂದ ಹೊರಗಟ್ಟುವಿರೋ?” ಎಂದು ಅಮಿತ್ ಶಾ ಅವರನ್ನು ಕೇಳಿದ್ದಾರೆ.
“ಶಾಸಕರ ಪುತ್ರರತ್ನ ಪಸಂದಾಗಿರಿಸಿದ್ದ ಕಂತೆಗಳು ಯಾರ ಹುಂಡಿಗೆ? ಶಾಸಕರ ಮನೆಯಲ್ಲೇ 6 ಕೋಟಿ ಸಿಕ್ಕರೆ, ಇನ್ನು 40% ಪರ್ಸಂಟ್ ಚರಂಡಿಯಲ್ಲಿ ತೆವಳುತಿರುವ ಸಚಿವರ ಮನೆಗಳಲ್ಲಿ ಇನ್ನೆಷ್ಟು ಸಿಗಬಹುದು? ರಾಮರಾಜ್ಯ ಮಾಡುತ್ತೇವೆಂದು ಹೇಳಿ ಕರ್ನಾಟಕವನ್ನು ʼಕಮಿಷನ್ ರಾಜ್ಯʼ ಮಾಡಿದ್ದೀರಿ. ಹೌದಲ್ಲವೇ ಅಮಿತ್ ಶಾ ಅವರೇ?” ಎಂದು ಕುಟುಕಿದ್ದಾರೆ.
“ಮೈಸೂರಿನಲ್ಲಿ ನಿನ್ನೆ ನಾನು ಹೇಳಿದ್ದೆ. ಈ ರೀತಿ ಪರ್ಸಂಟೇಜ್ ವ್ಯವಹಾರ ಮುಂದುವರಿದರೆ ಮುಂದೆ 10 ಪರಪ್ಪನ ಅಗ್ರಹಾರ ಜೈಲುಗಳಾನ್ನಾದರೂ ಕಟ್ಟಿಸಬೇಕಾಗುತ್ತದೆ ಎಂದು. ಕಳೆದ ಮೂರೂವರೆ ವರ್ಷದಿಂದ ಕಮಿಷನ್ ಕೊಚ್ಚೆಯಲ್ಲಿ ಉರುಳಾಡಿದ್ದ ಬಿಜೆಪಿ ಸರಕಾರ, ಈಗ ನೋಟಿನ ಕಂತೆಗಳೊಂದಿಗೆ ಆ ಅಸಹ್ಯದ ಪರಾಕಾಷ್ಠೆಯನ್ನು ದರ್ಶನ ಮಾಡಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿರಿ: 40 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಬಿಜೆಪಿ ಶಾಸಕರ ಪುತ್ರನ ಬಂಧನ: ಮನೆಯಲ್ಲಿ 6 ಕೋಟಿ ರೂ. ಪತ್ತೆ
“ಕಾಂಗ್ರೆಸ್ 20%, ಬಿಜೆಪಿ 40%. ಕರ್ನಾಟಕವನ್ನು ‘ಕಮಿಷನ್ ರಾಜ್ಯ’ ಮಾಡಿದ ಪಾಪ ಈ ರಾಷ್ಟ್ರೀಯ ಪಕ್ಷಗಳದ್ದು, ಇಂಥ ಪಾಪದ ದುಡ್ಡಿನಿಂದಲೇ ಚುನಾವಣೆ ನಡೆಸುವ ಕಮಿಷನ್ʼಗೇಡಿ ಪಕ್ಷಗಳ ಅಸಲಿ ಮುಖವನ್ನು ಕನ್ನಡಿಗರು ಅರ್ಥ ಮಾಡಿಕೊಳ್ಳಬೇಕು. ಇಲ್ಲವಾದರೆ ಕರ್ನಾಟಕಕ್ಕೆ ʼಕಮಿಷನ್ ರಾಜ್ಯʼ ಎಂಬ ಹಣೆಪಟ್ಟಿ ಶಾಶ್ವತವಾಗುವ ಅಪಾಯವಿದೆ” ಎಂದು ಎಚ್ಚರಿಕೆ ನೀಡಿದ್ದಾರೆ.
“ಇಂಥ ಪ್ರಕರಣಗಳೆಲ್ಲ ಕೊನೆಗೆ ಏನಾದವು ಎನ್ನುವುದು ಜನರಿಗೆ ಚೆನ್ನಾಗಿ ಗೊತ್ತು. ಸಾಂವಿಧಾನಿಕ ಸಂಸ್ಥೆಗಳನ್ನು ಹೇಗೆಲ್ಲಾ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ, ಅವು ತನಿಖೆ ನಡೆಸುತ್ತಿರುವ ಪ್ರಕರಣಗಳು ಯಾವ ರೀತಿ ಹಳ್ಳ ಹಿಡಿದು ಹೋಗಿವೆ ಎನ್ನುವುದು ಈಗಾಗಲೇ ಜಗಜ್ಜಾಹೀರಾಗಿರುವ ಸತ್ಯ” ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
“ಜನತಾ ನ್ಯಾಯಾಲಯದಲ್ಲೇ ಇಂಥ ನಿರ್ಲಜ್ಜ ಪ್ರಕರಣಗಳಿಗೆ ಮುಕ್ತಿ ಕಾಣಿಸಬೇಕು. ಜನರದ್ದೇ ಅಂತಿಮ ತೀರ್ಪು ಹಾಗೂ ಜನರೇ ಪ್ರಜಾಪ್ರಭುತ್ವ ಉಳಿಸಬೇಕು ಎನ್ನುವುದು ನನ್ನ ಅಭಿಪ್ರಾಯ. 2023ಕ್ಕೆ ಆರೂವರೆ ಕೋಟಿ ಕನ್ನಡಿಗರು ನೀಡುವ ಜನಾದೇಶ ಈ ದಿಕ್ಕಿನಲ್ಲೇ ಇರುತ್ತದೆ ಎಂಬ ವಿಶ್ವಾಸ ನನ್ನದು” ಎಂದು ತಿಳಿಸಿದ್ದಾರೆ.


