Homeಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆಮೇಲುಕೋಟೆ ವಿಧಾನಸಭಾ ಕ್ಷೇತ್ರ: ದರ್ಶನ್ ಪುಟ್ಟಣ್ಣಯ್ಯನವರಿಗೆ ಬೆಂಬಲ ಘೋಷಿಸಿದ ಕಾಂಗ್ರೆಸ್

ಮೇಲುಕೋಟೆ ವಿಧಾನಸಭಾ ಕ್ಷೇತ್ರ: ದರ್ಶನ್ ಪುಟ್ಟಣ್ಣಯ್ಯನವರಿಗೆ ಬೆಂಬಲ ಘೋಷಿಸಿದ ಕಾಂಗ್ರೆಸ್

ಕ್ಷೇತ್ರದಲ್ಲಿ ರೈತಸಂಘದ್ದು ಎನ್ನುವ 40,000ದಷ್ಟು ಖಾಯಂ ಓಟುಗಳಿವೆ. ಅವು ಎಂದಿಗೂ ಬದಲಾಗುವುದಿಲ್ಲ ಎನ್ನಲಾಗುತ್ತದೆ. ಒಮ್ಮೆ ಸೋತಿರುವ ಅನುಕಂಪ ದರ್ಶನ್ ಅವರ ಪರವಾಗಿದೆ.

- Advertisement -
- Advertisement -

ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಎರಡನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ಮಂಡ್ಯ ಜಿಲ್ಲೆಯ ಮೇಲುಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಕಣಕ್ಕಿಳಿಸದೇ, ಅಲ್ಲಿನ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯನವರಿಗೆ ಬೆಂಬಲ ಘೋಷಿಸಿದೆ. ದಿಟ್ಟ ರೈತ ಹೋರಾಟಗಾರ ಕೆ.ಎಸ್ ಪುಟ್ಟಣ್ಣಯ್ಯನವರ ಗೌರವಾರ್ಥ ಕಳೆದ 2018ರ ಚುನಾವಣೆಯಲ್ಲಿಯೂ ಸಹ ಕಾಂಗ್ರೆಸ್ ಪಕ್ಷ ಅಭ್ಯರ್ಥಿಯನ್ನು ನಿಲ್ಲಿಸದೆ ದರ್ಶನ್ ಪುಟ್ಟಣ್ಣಯ್ಯನವರಿಗೆ ಬೆಂಬಲ ಘೋಷಿಸಿತ್ತು. ಆದರೂ ಅವರು ಗೆಲ್ಲಲಾಗಲಿಲ್ಲ. ಈ ಬಾರಿ ಕ್ಷೇತ್ರದ ಸ್ಥಿತಿಗತಿ ಹೇಗಿದೆ ಎಂದು ನೋಡೋಣ.

ಕರ್ನಾಟಕ ರಾಜ್ಯ ರೈತ ಸಂಘದ ಹೋರಾಟ ಆಳವಾಗಿ ಬೇರೂರಿರುವ ವಿಧಾನಸಭಾ ಕ್ಷೇತ್ರಗಳಲ್ಲಿ ಮೇಲುಕೋಟೆಗೆ ವಿಶಿಷ್ಟ ಸ್ಥಾನವಿದೆ. ಈ ಮೊದಲು ಪಾಂಡವಪುರ ವಿಧಾನಸಭಾ ಕ್ಷೇತ್ರವೆಂದು ಕರೆಸಿಕೊಳ್ಳುತ್ತಿದ್ದ ಈ ಕ್ಷೇತ್ರವು 2008ರ ಕ್ಷೇತ್ರ ಪುನರ್‌ವಿಂಗಡಣೆಯ ನಂತರ ಮೇಲುಕೋಟೆ ಸಾಮಾನ್ಯ ವಿಧಾನಸಭಾ ಕ್ಷೇತ್ರವಾಗಿದೆ. ಹಿಂದೆ ಇದ್ದ ಶೀಳನೆರೆ ಹೋಬಳಿಯು ಸದ್ಯ ಕೆ.ಆರ್ ಪೇಟೆ ಕ್ಷೇತ್ರದ ಪಾಲಾದರೆ, ಕೆರಗೋಡು ವಿಧಾನಸಭಾ ಕ್ಷೇತ್ರದಲ್ಲಿದ್ದ (ಈ ಕ್ಷೇತ್ರ ಈಗ ಇಲ್ಲ) ದುದ್ದ ಹೋಬಳಿಯು ಮೇಲುಕೋಟೆಗೆ ಸೇರಿಕೊಂಡಿದೆ.

ಪಾಂಡವಪುರ/ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ 15 ಚುನಾವಣೆಗಳು ನಡೆದಿದ್ದು, ಕಾಂಗ್ರೆಸ್ 5 ಬಾರಿ, ಜೆಡಿಎಸ್: 3 ಬಾರಿ, ರೈತಸಂಘ : 02 ಬಾರಿ, ಜನತಾಪಕ್ಷ: 02 ಸ್ವತಂತ್ರ ಅಭ್ಯರ್ಥಿ ಮತ್ತು ಪಿಎಸ್‌ಪಿ ಪಕ್ಷ ತಲಾ ಒಮ್ಮೊಮ್ಮೆ ಜಯ ಸಾಧಿಸಿವೆ.

1999ರಲ್ಲಿ ಕಾಂಗ್ರೆಸ್ ಪಕ್ಷವು ಮಾಜಿ ಶಾಸಕ ಕೆ.ಕೆಂಪೇಗೌಡರಿಗೆ ಟಿಕೆಟ್ ನೀಡುತ್ತದೆ. ಅವರ ಅಣ್ಣನ ಮಗ ಸಿ.ಎಸ್ ಪುಟ್ಟರಾಜು ಜನತಾದಳದಿಂದ ಕಣಕ್ಕಿಳಿಯುತ್ತಾರೆ. ಹಾಲಿ ಶಾಸಕ ಕೆ.ಎಸ್ ಪುಟ್ಟಣ್ಣಯ್ಯ ಮರು ಆಯ್ಕೆ ಬಯಸಿ ರೈತಸಂಘದಿಂದ ಕಣಕ್ಕಿಳಿಯುತ್ತಾರೆ. ಮೂರು ಜನರ ಕಾಳಗದಲ್ಲಿ ಕೆ.ಕೆಂಪೇಗೌಡರು 7,858 ಮತಗಳ ಅಂತರದಿಂದ ಜಯ ಕಾಣುತ್ತಾರೆ. ನಂತರದ 2004ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಮತ್ತೆ ಹಾಲಿ ಶಾಸಕರಿಗೆ ಮಣೆ ಹಾಕದೆ ಎಲ್.ಡಿ ರವಿಯವರಿಗೆ ಟಿಕೆಟ್ ನೀಡುತ್ತದೆ. ಅಲ್ಲಿಂದಲೇ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಅಂತ್ಯ ಆರಂಭವಾಗುತ್ತದೆ. ಜೆಡಿಎಸ್‌ನಿಂದ ಸಿ.ಎಸ್ ಪುಟ್ಟರಾಜುರವರು ಕಣಕ್ಕಿಳಿದು ಸರ್ವೋದಯ ಕರ್ನಾಟಕ ಪಕ್ಷದಿಂದ ಕಣಕ್ಕಿಳಿದಿದ್ದ ಕೆ.ಎಸ್ ಪುಟ್ಟಣ್ಣಯ್ಯನವರನ್ನು ಸೋಲಿಸಿ ಮೊದಲ ಬಾರಿಗೆ ಶಾಸಕರೆನಿಸಿಕೊಳ್ಳುತ್ತಾರೆ.

2008ರ ಚುನಾವಣೆಗೆ ಮೇಲುಕೋಟೆ ವಿಧಾನಸಭಾ ಕ್ಷೇತ್ರ ಎಂದು ಹೆಸರು ಪಡೆದುಕೊಂಡಿರುತ್ತದೆ. ಸಿ.ಎಸ್ ಪುಟ್ಟರಾಜು ಜೆಡಿಎಸ್ ಪಕ್ಷದಿಂದ ಮರುಆಯ್ಕೆ ಬಯಸಿ ಕಣಕ್ಕಿಳಿಯುತ್ತಾರೆ. ಸರ್ವೋದಯ ಕರ್ನಾಟಕದಿಂದ ಕೆ.ಎಸ್ ಪುಟ್ಟಣ್ಣಯ್ಯನವರು ಸ್ಪರ್ಧಿಸುತ್ತಾರೆ. ಕೆ.ಕೆಂಪೇಗೌಡರು ಬಿಜೆಪಿ ಸೇರಿ ಕಣಕ್ಕಿಳಿಯುತ್ತಾರೆ. ಕಾಂಗ್ರೆಸ್ ಮತ್ತೆ ಟಿಕೆಟ್ ಬದಲಾವಣೆ ಮಾಡಿ ಸಿ.ಅಣ್ಣೇಗೌಡರಿಗೆ ನೀಡುತ್ತದೆ. ಇದರಿಂದ ಕಾಂಗ್ರೆಸ್ ಪಕ್ಷದಲ್ಲಿ ಬಂಡಾಯ, ಒಳೇಟು ಆರಂಭವಾಗುತ್ತದೆ. ಹೊಸದಾಗಿ ಸೇರ್ಪಡೆಯಾಗಿದ್ದ ದುದ್ದ ಹೋಬಳಿಯ ಅಭೂತಪೂರ್ವ ಬೆಂಬಲದೊಂದಿಗೆ ಆ ಚುನಾವಣೆಯಲ್ಲಿ ಮತ್ತೆ ಸಿ.ಎಸ್ ಪುಟ್ಟರಾಜುರವರು 11,945 ಮತಗಳ ಅಂತರದಿಂದ ಗೆದ್ದು ಸತತ ಎರಡನೇ ಬಾರಿಗೆ ಶಾಸಕರಾಗುತ್ತಾರೆ. ಸಿ.ಎಸ್ ಪುಟ್ಟರಾಜುರವರು 66,626 ಮತಗಳನ್ನು ಪಡೆದರೆ ಕೆ.ಎಸ್ ಪುಟ್ಟಣ್ಣಯ್ಯ 54,681 ಮತಗಳನ್ನು ಪಡೆಯುತ್ತಾರೆ. ಬಿಜೆಪಿಯ ಕೆ.ಕೆಂಪೇಗೌಡರು 4,265 ಮತಗಳಿಗೆ ಸೀಮಿತಗೊಂಡರೆ ಕಾಂಗ್ರೆಸ್‌ನ ಅಣ್ಣೇಗೌಡರು ಕೇವಲ 4,600 ಮತಗಳಿಗೆ ಕುಸಿಯುತ್ತಾರೆ.

2013ರ ಚುನಾವಣೆ ವೇಳೆಗೆ ಸಿ.ಎಸ್ ಪುಟ್ಟರಾಜು ಹ್ಯಾಟ್ರಿಕ್ ಗೆಲುವಿನ ಕನಸಿನಲ್ಲಿರುತ್ತಾರೆ. ಆದರೆ, ಅದಕ್ಕೆ ಸರ್ವೋದಯ ಕರ್ನಾಟಕದ ಕೆ.ಎಸ್ ಪುಟ್ಟಣ್ಣಯ್ಯನವರು ಬ್ರೇಕ್ ಹಾಕಿ 80,041 ಮತಗಳನ್ನು ಪಡೆದು ಗೆಲುವನ್ನು ತನ್ನದಾಗಿಸಿಕೊಳ್ಳುತ್ತಾರೆ. ಸಿ.ಎಸ್ ಪುಟ್ಟರಾಜುರವರು 70,193 ಮತಗಳನ್ನು ಪಡೆದು ತೀವ್ರ ಪೈಪೋಟಿ ನೀಡಿ ಸೋಲೊಪ್ಪಿಕೊಳ್ಳುತ್ತಾರೆ. ಕಾಂಗ್ರೆಸ್ ಅಭ್ಯರ್ಥಿ ಎಲ್.ಡಿ ರವಿ ಕೇವಲ 2,314 ಮತಗಳನ್ನು ಪಡೆದರೆ, ಬಿಜೆಪಿಯ ಜಿ.ಎಂ ರವೀಂದ್ರ 827 ಮತಗಳನ್ನು ಪಡೆದು ಮುಖಭಂಗ ಅನುಭವಿಸುತ್ತಾರೆ. ಪುಟ್ಟಣ್ಣಯ್ಯನವರು ಎರಡನೇ ಬಾರಿ ವಿಧಾನಸಭೆ ಪ್ರವೇಶಿಸಿ ರಾಜ್ಯದ ಗಮನ ಸೆಳೆಯುತ್ತಾರೆ. ಮೇಲುಕೋಟೆಯಲ್ಲಿ ಸರ್ವೋದಯ ಕರ್ನಾಟಕ ಪಕ್ಷ ಮತ್ತು ಜೆಡಿಎಸ್ ಹೊರತುಪಡಿಸಿ ಉಳಿದ ಪಕ್ಷಗಳಿಗೆ ನೆಲೆಯಿಲ್ಲ ಎಂಬುದು ಈ ಚುನಾವಣೆಯಲ್ಲಿ ಸಾಬೀತಾಗುತ್ತದೆ.

ವಿಧಾನಸಭಾ ಚುನಾವಣೆಯಲ್ಲಿ ಸೋತ ಪುಟ್ಟರಾಜುರವರು 2013ರಲ್ಲಿ ನಡೆದ ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಿ ನಟಿ ರಮ್ಯಾ ದಿವ್ಯಸ್ಪಂದನರವರ ಎದುರು ಮತ್ತೆ ಸೋಲು ಕಾಣುತ್ತಾರೆ. ಆದರೆ 2014ರಲ್ಲಿನ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ 5 ಸಾವಿರ ಮತಗಳ ಅಂತರದಿಂದ ರಮ್ಯಾರನ್ನು ಸೋಲಿಸಿ ಸಂಸದರಾಗುತ್ತಾರೆ.

2018ರ ಫೆಬ್ರವರಿಯಲ್ಲಿ ಶಾಸಕರಾಗಿದ್ದ ಕೆ.ಎಸ್ ಪುಟ್ಟಣ್ಣಯ್ಯನವರು ಹೃದಯಾಘಾತದಿಂದ ಮರಣ ಹೊಂದುತ್ತಾರೆ. ಆ ವರ್ಷದ ಮೇ ತಿಂಗಳಿನಲ್ಲಿ ನಡೆಯುವ ಚುನಾವಣೆಯಲ್ಲಿ, ಅವರ ಪುತ್ರ ದರ್ಶನ್ ಪುಟ್ಟಣ್ಣಯ್ಯನವರು ಅಮೆರಿಕದಿಂದ ಬಂದು ಸ್ವರಾಜ್ ಇಂಡಿಯಾ ಪಕ್ಷದಿಂದ ಸ್ಪರ್ಧಿಸುತ್ತಾರೆ. ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಯನ್ನು ಹಾಕದೆ ಅವರನ್ನು ಬೆಂಬಲಿಸುತ್ತದೆ. ಜೆಡಿಎಸ್‌ನಿಂದ ಸಿ.ಎಸ್ ಪುಟ್ಟರಾಜುರವರು ಕಣಕ್ಕಿಳಿಯುತ್ತಾರೆ. ಪುಟ್ಟಣ್ಣಯ್ಯನವರ ಸಾವಿನ ಅನುಕಂಪದ ಅಲೆಯ ನಡುವೆಯೂ, ಜೆಡಿಎಸ್ ಪರವಾಗಿನ ಒಕ್ಕಲಿಗರ ಅಲೆಯಲ್ಲಿ ಸಿ.ಎಸ್ ಪುಟ್ಟರಾಜುರವರು 22,224 ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ. ಎಚ್.ಡಿ ಕುಮಾರಸ್ವಾಮಿಯವರು ಸಿಎಂ ಆಗಬೇಕೆಂಬ ಒಕ್ಕಲಿಗರ ಹಂಬಲ ಮತ್ತು ಸಾಲ ಮನ್ನಾ ಮಾಡುತ್ತಾರೆಂಬ ಬಯಕೆಗಳು ಜೆಡಿಎಸ್ ಅಭ್ಯರ್ಥಿಯನ್ನು ಗೆಲುವಿನ ದಡ ಮುಟ್ಟಿಸುತ್ತವೆ. ಪುಟ್ಟರಾಜು 96,003 ಮತಗಳನ್ನು ಪಡೆದರೆ, ದರ್ಶನ್ ಪುಟ್ಟಣ್ಣಯ್ಯ 73,779 ಮತಗಳನ್ನು ಪಡೆಯುತ್ತಾರೆ. ಬಿಜೆಪಿಯಿಂದ ಸುಂಡಹಳ್ಳಿ ಸೋಮಶೇಖರ್ ನಾಮಕಾವಸ್ಥೆ ಸ್ಪರ್ಧೆ ಮಾಡಿ 1,595 ಮತಗಳಿಗೆ ಸೀಮಿತಗೊಳ್ಳುತ್ತಾರೆ.

ಅಂದಾಜು ಜಾತಿವಾರು ಮತಗಳು

ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಮತಗಳು ಅಂದಾಜು 2,10,000. ಒಕ್ಕಲಿಗ ಮತಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಇದುವರೆಗೂ ಗೆದ್ದವರು, ಬಿದ್ದವರು ಎಲ್ಲರೂ ಅದೇ ಸಮುದಾಯಕ್ಕೆ ಸೇರಿದ್ದಾರೆ. 90,000ದಷ್ಟು ಒಕ್ಕಲಿಗ ಮತಗಳಿದ್ದರೆ, 30,000 ಪರಿಶಿಷ್ಟ ಜಾತಿ ಮತಗಳಿವೆ. ಲಿಂಗಾಯಿತರು 21,000ದಷ್ಟಿದ್ದರೆ, ಕುರುಬ ಸಮುದಾಯದ್ದು 13,000ದಷ್ಟು ಮತಗಳಿವೆ. ಮುಸ್ಲಿಮರದ್ದು 8,000 ಮತಗಳಿವೆ. ಗಾಣಿಗರ 7000, ಬೆಸ್ತರ 6000 ಮತಗಳಿದ್ದರೆ, ಇತರ ಸಮುದಾಯಗಳ 35,000ದಷ್ಟು ಅಂದಾಜು ಮತಗಳಿವೆ.

ಸದ್ಯದ ಪರಿಸ್ಥಿತಿ

ಮೂರನೇ ಬಾರಿಗೆ ಶಾಸಕರಾದ ಸಿ.ಎಸ್ ಪುಟ್ಟರಾಜುರವರು ಕಾಂಗ್ರೆಸ್-ಜೆಡಿಎಸ್ ಸರ್ಕಾರದಲ್ಲಿ ಸಣ್ಣ ನೀರಾವರಿ ಸಚಿವರಾಗಿದ್ದರು. ಆ ಮೂಲಕ ಕ್ಷೇತ್ರದಿಂದ ಸಚಿವರಾದ ಮೊದಲಿಗರೆನಿಸಿಕೊಂಡಿದ್ದರು. ರಸ್ತೆ, ನೀರಾವರಿ ಕೆಲಸಗಳನ್ನು ಮಾಡಿದ್ದಾರೆ, ಕ್ಷೇತ್ರದ ಜನರ ಕೈಗೆ ಸಿಗುತ್ತಾರೆ, ಕ್ಷೇತ್ರವ್ಯಾಪ್ತಿಯ ಎಲ್ಲಾ ಊರುಗಳಿಗೂ ಖುದ್ದು ಭೇಟಿ ಕೊಡುತ್ತಾರೆ, ಕೋವಿಡ್ ಸಂದರ್ಭದಲ್ಲಿ ಜನರಿಗೆ ಸಹಾಯ ಮಾಡಿದ್ದಾರೆ ಎಂಬುದು ಅವರ ಹೆಗ್ಗಳಿಕೆಯಾಗಿದೆ.

ಆದರೆ ಜೆಡಿಎಸ್ ಕಾರ್ಯಕರ್ತರ ಕೆಲಸಗಳನ್ನು ಮಾತ್ರ ಮಾಡಿಸಿಕೊಡುತ್ತಾರೆ, ಇತರ ಜನರ ಕಷ್ಟ ಕೇಳುವುದಿಲ್ಲ, ತನ್ನ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಬೆಳೆಸುತ್ತಾರೆಯೇ ಹೊರತು ಸರ್ಕಾರಿ ಶಾಲೆ-ಕಾಲೇಜುಗಳ ಅಭಿವೃದ್ಧಿಯ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ ಎಂಬ ದೂರುಗಳು ಅವರ ಬಗ್ಗೆ ಕೇಳಿಬರುತ್ತಿವೆ.

ಕೆಆರ್‌ಎಸ್ ನದಿ ಬುಡದಲ್ಲಿಯೇ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದಾರೆ; ತಾಲ್ಲೂಕಿನಾದ್ಯಂತ 170ಕ್ಕೂ ಹೆಚ್ಚು ಅಕ್ರಮ ಗಣಿಗಾರಿಕೆಗಳು ಈ ಭಾಗದಲ್ಲಿ ನಡೆಯುತ್ತಿವೆ; ಬೇಬಿ ಬೆಟ್ಟವೊಂದರಲ್ಲೇ 44 ಜೆಲ್ಲಿ ಕ್ರಶರ್‌ಗಳು ನಿಂತಿವೆ; ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಿಲ್ಲ; ಇದರಿಂದ ಕ್ಷೇತ್ರದ ಪರಿಸರ ಮತ್ತು ಜನಜೀನವದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂಬುದು ಪುಟ್ಟರಾಜುರವರ ಮೇಲಿನ ಆರೋಪಗಳಾಗಿವೆ.

ಕಳೆದ ವರ್ಷ ದೇವೇಗೌಡರ ಕುಟುಂಬದೊಂದಿಗೆ ಮುನಿಸಿಕೊಂಡಿದ್ದ ಸಿ.ಎಸ್ ಪುಟ್ಟರಾಜುರವರು ಪಕ್ಷ ತ್ಯಜಿಸುವ ಸೂಚನೆ ನೀಡಿದ್ದರು. ಆದರೆ ವೈಮನಸ್ಸು ತೊರೆದು ಸದ್ಯ ಜೆಡಿಎಸ್ ಪಕ್ಷದಿಂದಲೇ ಸ್ಪರ್ಧಿಸುವ ನಿರ್ಧಾರ ಮಾಡಿದ್ದಾರೆ. ಜೆಡಿಎಸ್ ಟಿಕೆಟ್ ಪಕ್ಕಾ ಆಗಿದ್ದು ಅವರು ಮತ್ತೊಂದು ಜಯ ಸಾಧಿಸಲು ಭರ್ಜರಿ ತಯಾರಿ ನಡೆಸಿದ್ದಾರೆ.

ಮತ್ತೆ ಕಣಕ್ಕಿಳಿದ ದರ್ಶನ್ ಪುಟ್ಟಣ್ಣಯ್ಯ

ಕಳೆದ ಚುನಾವಣೆಯ ಸೋಲಿನ ನಂತರ ಮತ್ತೆ ಅಮೆರಿಕಕ್ಕೆ ಮರಳಿದ್ದ ದರ್ಶನ್ ಪುಟ್ಟಣ್ಣಯ್ಯನವರು ಆಗಾಗ್ಗೆ ಕ್ಷೇತ್ರಕ್ಕೆ ಭೇಟಿ ನೀಡಿ ರೈತರ ಹೋರಾಟಗಳನ್ನು ಸಂಘಟಿಸುತ್ತಿದ್ದರು. ಸದ್ಯ ಅಲ್ಲಿನ ತಮ್ಮ ಕಂಪನಿಯನ್ನು ಮಾರಿ ಸ್ವಗ್ರಾಮಕ್ಕೆ ಮರಳಿದ್ದಾರೆ. ಕಳೆದ ಐದು ತಿಂಗಳುಗಳಿಂದ ಕ್ಷೇತ್ರದ ಪ್ರತಿ ಗ್ರಾಮಕ್ಕೂ ಭೇಟಿ ನೀಡುತ್ತಿರುವ ಅವರಿಗೆ ಸರ್ವೋದಯ ಕರ್ನಾಟಕ ಪಕ್ಷ ಟಿಕೆಟ್ ಘೋಷಿಸಿದೆ.

ಫೆಬ್ರವರಿ 15ರಿಂದ ಇಡೀ ಕ್ಷೇತ್ರದಲ್ಲಿ ಪಾದಯಾತ್ರೆ ನಡೆಸಿದ ದರ್ಶನ್ ಪುಟ್ಟಣ್ಣಯ್ಯನವರಿಗೆ ಭರ್ಜರಿ ಬೆಂಬಲ ವ್ಯಕ್ತವಾಗಿತ್ತು. ಈ ಸಂದರ್ಭದಲ್ಲಿ ರಾತ್ರಿ ವೇಳೆ ಗ್ರಾಮ ವಾಸ್ತವ್ಯ ಮಾಡಿ ಗಮನ ಸೆಳೆದಿದ್ದರು. ಆ ಊರಿನ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ ಹೋರಾಟ ರೂಪಿಸುವುದಾಗಿ ಭರವಸೆ ನೀಡಿದ್ದಾರೆ. ನೂರಾರು ಯುವಜನರು ದರ್ಶನ್ ಗೆಲುವಿಗಾಗಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದಾರೆ.

ಪುಟ್ಟಣ್ಣಯ್ಯನವರಿಗೆ ಬೆಂಬಲ ಘೋಷಿಸಿದ ಕಾಂಗ್ರೆಸ್‌

2004ರ ನಂತರದ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು ಕ್ಷೇತ್ರದಲ್ಲಿ ದಯನೀಯ ಸೋಲು ಕಂಡಿದೆ. ಕಳೆದ ಬಾರಿ ಅಭ್ಯರ್ಥಿ ಹಾಕದೇ ದರ್ಶನ್ ಪುಟ್ಟಣ್ಣಯ್ಯನವರಿಗೆ ಬೆಂಬಲ ಘೋಷಿಸಿತ್ತು; ಈ ಬಾರಿಯೂ ಅದನ್ನೆ ಪುನಾರಾವರ್ತನೆ ಮಾಡಿದೆ.  ಕೆ.ಪಿ.ಸಿ.ಸಿ ಕಾರ್ಯದರ್ಶಿಯಾಗಿರುವ, ವೈದ್ಯಕೀಯ ಸಂಘದ ಮಾಜಿ ಅಧ್ಯಕ್ಷರು ಆದ ಡಾ. ಎಚ್.ಎನ್ ರವೀಂದ್ರರವರು, ಮಾಜಿ ಶಾಸಕ ಡಿ.ಹಲಗೇಗೌಡರ ಪುತ್ರ, ಮಾಜಿ ಜಿಪಂ ಸದಸ್ಯ ಎಚ್.ತ್ಯಾಗರಾಜ್ ಮತ್ತು ಕಾಗೇಪುರ ಆನಂದಕುಮಾರ್ ಕಾಂಗ್ರೆಸ್ ಟಿಕೆಟ್‌ಗೆ ಅರ್ಜಿ ಸಲ್ಲಿಸಿದ್ದರು. ಪಕ್ಷ ಬೇರೆಯದೇ ನಿರ್ಧಾರ ಮಾಡಿದೆ.

ನೆಲೆಯಿಲ್ಲದ ಬಿಜೆಪಿ

ಇನ್ನು ಬಿಜೆಪಿಗೆ ಈ ಕ್ಷೇತ್ರದಲ್ಲಿ ನೆಲೆ ಇಲ್ಲ. ಆದರೂ ಒಂದಷ್ಟು ಸಂಖ್ಯೆಯ ಓಟುಗಳನ್ನು ಪಡೆದು ತಾವೂ ನೆಲೆ ಕಂಡು, ಪಕ್ಷಕ್ಕೂ ನೆಲೆ ಕಾಣಿಸಲು ಕೆಲವರು ಯತ್ನಿಸುತ್ತಿದ್ದಾರೆ. ಅದರಲ್ಲಿ ಪ್ರಮುಖವಾಗಿ ಕೇಳಿ ಬರುತ್ತಿರುವ ಹೆಸರು ಡಾ.ಇಂದ್ರೇಶ್‌ರವರದಾಗಿದೆ. ಸಮಾಜ ಸೇವೆ ಹೆಸರಿನಲ್ಲಿ ಇತರ ಪಕ್ಷಗಳ ಮುಖಂಡರನ್ನು ಬಿಜೆಪಿಗೆ ಸೆಳೆಯುವ ಕೆಲಸದಲ್ಲಿ ನಿರತರಾಗಿದ್ದಾರೆ. ಬಹುತೇಕ ಅವರೇ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ ಎನ್ನಲಾಗುತ್ತಿದೆ.

2023ರ ಸಾಧ್ಯತೆಗಳು

ಸದ್ಯದ ಮಟ್ಟಿಗೆ ಜೆಡಿಎಸ್ ಪಕ್ಷದ ಸಿ.ಎಸ್ ಪುಟ್ಟರಾಜುರವರು ಆಡಳಿತ ವಿರೋಧಿ ಅಲೆಯ ನಡುವೆಯೂ ಕ್ಷೇತ್ರದಲ್ಲಿ ಹಿಡಿತ ಹೊಂದಿದ್ದಾರೆ. ಆದರೆ ಕಳೆದ ಬಾರಿ ಇದ್ದ ಜೆಡಿಎಸ್ ಪರವಾಗಿನ ಒಕ್ಕಲಿಗರ ಅಲೆ ಈ ಬಾರಿ ಕಂಡುಬರುತ್ತಿಲ್ಲ. ಹಾಗಾಗಿ ಅವರಿಗೆ ನೇರ ಪೈಪೋಟಿ ಕೊಡಲು ಸಜ್ಜಾಗಿದ್ದಾರೆ ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯ. ಅವರು ಕಳೆದ ಚುನಾವಣೆ ಸೋತ ಬಳಿಕ ವಾಪಸ್ ಅಮೆರಿಕಕ್ಕೆ ಹೋಗದಿದ್ದರೆ ಅಥವಾ ಒಂದು ವರ್ಷ ಮೊದಲೇ ಕ್ಷೇತ್ರದಲ್ಲಿ ಬೇರೂರಿದ್ದರೆ ಗೆಲುವು ಅವರಾದ್ದಾಗುತ್ತಿತ್ತು ಎಂದು ಜನ ಮಾತಾಡಿಕೊಳ್ಳುತ್ತಿದ್ದಾರೆ. ಆದರೂ ಅವರೀಗ ತಮ್ಮ ಅಮೆರಿಕದ ಕಂಪನಿ ಮಾರಿ ಕ್ಷೇತ್ರದಲ್ಲಿ ನೆಲೆಸಿರುವ ನಡೆ ಜನರಿಗೆ ಭರವಸೆ ಮೂಡಿಸಲು ಸಫಲವಾಗಿ ರೈತಸಂಘಕ್ಕೆ ಬಲ ಬಂದಿದೆ ಎನ್ನಲಾಗುತ್ತಿದೆ.

ಕ್ಷೇತ್ರದಲ್ಲಿ ರೈತಸಂಘದ್ದು ಎನ್ನುವ 40,000ದಷ್ಟು ಖಾಯಂ ಓಟುಗಳಿವೆ. ಅವು ಎಂದಿಗೂ ಬದಲಾಗುವುದಿಲ್ಲ ಎನ್ನಲಾಗುತ್ತದೆ. ಒಮ್ಮೆ ಸೋತಿರುವ ಅನುಕಂಪ ದರ್ಶನ್ ಅವರ ಪರವಾಗಿದೆ. ಅಲ್ಲದೆ ಸಿ.ಎಸ್ ಪುಟ್ಟರಾಜುರವರ ವಿರುದ್ಧ ಹಗೆತನ ಸಾಧಿಸುತ್ತಿರುವ ಸುಮಲತಾ ಅಂಬರೀಶ್‌ರವರು ಚುನಾವಣೆ ವೇಳೆಗೆ ತನಗೆ ಬೆಂಬಲ ಘೋಷಿಸುತ್ತಾರೆ ಎಂದು ದರ್ಶನ್ ಪುಟ್ಟಣ್ಣಯ್ಯ ನಂಬಿದ್ದಾರೆ. ಇನ್ನು ಬಿಜೆಪಿಯ ಡಾ.ಇಂದ್ರೇಶ್ ಸದ್ಯಕ್ಕೆ ಕೆಲವು ಜೆಡಿಎಸ್ ಮುಖಂಡರನ್ನು, ಕಾರ್ಯಕರ್ತರನ್ನು ತನ್ನತ್ತ ಸೆಳೆದುಕೊಳ್ಳುತ್ತಿದ್ದಾರೆ. ಹಾಗಾಗಿ ಇಂದ್ರೇಶ್ ಗೆಲ್ಲದಿದ್ದರೂ ಅವರು ಜೆಡಿಎಸ್ ಮತಗಳನ್ನು ಕಿತ್ತುಕೊಳ್ಳುತ್ತಾರೆ ಎಂಬ ಲೆಕ್ಕಾಚಾರದಲ್ಲಿದ್ದಾರೆ ದರ್ಶನ್ ಪುಟ್ಟಣ್ಣಯ್ಯ.

ಈ ಎಲ್ಲಾ ದೃಷ್ಟಿಕೋನಗಳಿಂದ ನೋಡಿದರೆ ಸದ್ಯಕ್ಕೆ ಮೇಲುಕೋಟೆ ಕ್ಷೇತ್ರದಲ್ಲಿ ಜೆಡಿಎಸ್‌ನ ಸಿ.ಎಸ್ ಪುಟ್ಟರಾಜು ಮತ್ತು ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯನವರ ನಡುವೆ ನೇರ ಹಣಾಹಣಿ ನಡೆಯುವಂತೆ ಗೋಚರವಾಗುತ್ತಿದೆ. ಬಿಜೆಪಿ ಪಕ್ಷ ಒಂದಷ್ಟು ಮತ ಪಡೆದರೂ ಅದು ಗೆಲುವಿನ ಸನಿಹಕ್ಕೂ ಬರುವ ಸ್ಥಿತಿಯಲ್ಲಿಲ್ಲ. ಹಾಗಾಗಿ ದರ್ಶನ್ ಪುಟ್ಟಣ್ಣಯ್ಯ ಗೆದ್ದು ವಿಧಾನಸಭೆ ಪ್ರವೇಶಿಸುತ್ತಾರ ಅಥವಾ ಅಡೆತಡೆ ದಾಟಿ ಸಿ.ಎಸ್ ಪುಟ್ಟರಾಜು ಮತ್ತೆ ವಿಜಯಪತಾಕೆ ಹಾರಿಸುತ್ತಾರಾ ಎಂಬುದಷ್ಟೆ ಪ್ರಶ್ನೆಯಾಗಿದೆ.

ಇದನ್ನೂ ಓದಿ: ಮಂಡ್ಯ: ಪಿ.ಗಣಿಗ ರವಿಕುಮಾರ್ ಕಾಂಗ್ರೆಸ್ ಅಭ್ಯರ್ಥಿ – ಜೆಡಿಎಸ್‌ನೊಂದಿಗೆ ನೇರ ಪೈಪೋಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...