Homeಮುಖಪುಟಬೀಳಗಿಯಲ್ಲಿ ನಿರಾಣಿಯ ಹಣದ ಹೊಳೆ; ಕೈ-ಕಮಲದ ನಡುವೆ ತೀವ್ರ ಪೈಪೋಟಿ

ಬೀಳಗಿಯಲ್ಲಿ ನಿರಾಣಿಯ ಹಣದ ಹೊಳೆ; ಕೈ-ಕಮಲದ ನಡುವೆ ತೀವ್ರ ಪೈಪೋಟಿ

- Advertisement -
- Advertisement -

ಆಲಮಟ್ಟಿ ಮುಳುಗಡೆಯ ಸಂತ್ರಸ್ತರ ಕ್ಷೇತ್ರ ಎನಿಸಿಕೊಂಡಿರುವ ಬೀಳಗಿ ಮತಕ್ಷೇತ್ರ, ಬಾಗಲಕೋಟೆ ಜಿಲ್ಲೆಯ ಪ್ರಮುಖ ವಿಧಾನಸಭಾ ಕ್ಷೇತ್ರಗಳಲ್ಲಿ ಒಂದಾಗಿದೆ. ಈ ಹಿಂದೆ ಜಮಖಂಡಿಯ ಉಪತಾಲ್ಲೂಕಾಗಿದ್ದ ಬೀಳಗಿ, 1959ರಲ್ಲಿ ಪ್ರತ್ಯೇಕ ತಾಲ್ಲೂಕಾಗಿ ರಚನೆಯಾಗಿದೆ. ಕಂಬಳಿ ತಯಾರಿಕೆಗೆ ಬೀಳಗಿ ತಾಲೂಕಿನ ಕುಂದರಗಿ ಗ್ರಾಮ ಬಹಳ ಖ್ಯಾತಿ ಪಡೆದಿದೆ.

ಘಟಪ್ರಭಾ ನದಿ ದಡದಲ್ಲಿರುವ ಬೀಳಗಿ ಕ್ಷೇತ್ರದಲ್ಲಿ ಚಾಲುಕ್ಯ ಶಿಲ್ಪ ಶೈಲಿಯಲ್ಲಿರುವ ರಾಮಲಿಂಗೇಶ್ವರ, ಕಲ್ಮೇಶ್ವರ ಹಾಗೂ ರಾಮಲಿಂಗಪ್ಪ ದೇವಾಲಯಗಳಿವೆ. ಇಲ್ಲಿ ಕ್ರಿ.ಶ.12ನೇ ಶತಮಾನದ ಜೋಪರಾರ ಎಂಬುವವನಿಗೆ ಸಂಬಂಧಿಸಿದ ಶಿಲಾ ಶಾಸನವೊಂದು ದೊರೆತಿದೆ. ಈ ಕ್ಷೇತ್ರದ ವ್ಯಾಪ್ತಿಗೆ ಬರುವ ತುಳಸಿಗಿರಿಯ ಹನಮಂತ ದೇವರ ದೇವಸ್ಥಾನ ಬಹಳ ಪ್ರಸಿದ್ಧಿ ಪಡೆದಿದೆ. ಇಲ್ಲಿಗೆ ರಾಜ್ಯ ಹಾಗೂ ಹೊರ ರಾಜ್ಯದಿಂದಲೂ ಭಕ್ತರು ಬರುತ್ತಾರೆ.

ಇನ್ನು ಈ ಬೀಳಗಿ ತಾಲೂಕಿನ ಹೆಚ್ಚಿನ ಭೂಪ್ರದೇಶ ಎರೆಮಣ್ಣಿನಿಂದ ಕೂಡಿದೆ. ನೀರಾವರಿ ಸೌಲಭ್ಯ ಹೇರಳವಾಗಿರುವುದರಿಂದ ತಾಲ್ಲೂಕಿನ ಬಹಳಷ್ಟು ಜನರು ವ್ಯವಸಾಯವನ್ನೇ ನಂಬಿಕೊಂಡಿದ್ದಾರೆ. ಅದರಲ್ಲೂ ಈ ತಾಲೂಕಿನಾದ್ಯಂತ ಕಬ್ಬು ಬೆಳೆಗಾರರು ಹೆಚ್ಚಿದ್ದಾರೆ. ಅದೇ ರೀತಿ ತಾಲ್ಲೂಕಿನಲ್ಲಿ ಹಲವು ಸಕ್ಕರೆ ಕಾರ್ಖಾನೆಗಳು ಇವೆ.

ಆಲಮಟ್ಟಿ ಜಲಾಶಯದ ಹಿನ್ನೀರಿನಿಂದ 2 ಟಿಎಂಸಿ ನೀರನ್ನು ಬಳಸಿಕೊಂಡು ಏತ ನೀರಾವರಿ ಯೋಜನೆ ಮೂಲಕ ನೀರಾವರಿ ಸೌಲಭ್ಯ ಒದಗಿಸಲಾಗುತ್ತಿರುವುದರಿಂದ ಇಲ್ಲಿಯ ರೈತಾಪಿ ವರ್ಗದ ಜನರಿಗೆ ಅನಕೂಲವಾಗಲಿದೆ.

ರಾಜಕೀಯ ಇತಿಹಾಸ:

ಬೀಳಗಿ ಮತಕ್ಷೇತ್ರದಲ್ಲಿ 1957ರಿಂದ 2018ರವರೆಗೆ ಒಟ್ಟು 14 ವಿಧಾನಸಭೆಯ ಚುನಾವಣೆಗಳು ನಡೆದಿವೆ. ಇದರಲ್ಲಿ 9 ಬಾರಿ ಕಾಂಗ್ರೆಸ್‌ ಗೆಲುವು ಸಾಧಿಸಿದೆ. ಉಳಿದಂತೆ ಬಿಜೆಪಿ ಮೂರು ಬಾರಿ, ಜನತಾ ಪಕ್ಷ ಮತ್ತು ಜನತಾ ದಳ ತಲಾ ಒಂದೊಂದು ಬಾರಿ ಗೆದ್ದಿವೆ.

ಬೀಳಗಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 1957ರಿಂದ 1983ರ ವರೆಗೂ ಸತತವಾಗಿ ತನ್ನ ಅಧಿಪತ್ಯ ಸ್ಥಾಪಿಸಿತ್ತು. ಕ್ಷೇತ್ರದಲ್ಲಿ ದೇಸಾಯಿ ಕುಟುಂಬದ ಹೆಸರು ಅಂದಿನಿಂದ ಇಂದಿನವರೆಗೂ ಜನಮಾನಸದಲ್ಲಿ ಉಳಿದಿದೆ. ಈ ಕುಟುಂಬದ ರಾಚಪ್ಪ ಮಲ್ಲಪ್ಪ ದೇಸಾಯಿ ಅವರು 1957, 1962, ಹಾಗೂ 1967ರ ಚುನಾವಣೆಗಳಲ್ಲಿ ಹ್ಯಾಟ್ರಿಕ್‌ ಗೆಲುವು ಕಂಡಿದ್ದಾರೆ. 1972ರ ಚುನಾವಣೆಯಲ್ಲಿ ಬಿಜೆ ಮರಿಸಿದ್ದಪ್ಪ ಎನ್ನುವವರು ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿದರು. 1978 ಮತ್ತು 1983 ರಲ್ಲಿ ಸಿದ್ದನಗೌಡ ಸೋಮನಗೌಡ ಪಾಟೀಲ ಎಂಬುವವರು ಸತತ ಎರಡು ಬಾರಿ ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿದರು.

ಕಾಂಗ್ರೆಸ್‌ನ ಈ ಗೆಲುವಿಗೆ ಮೊದಲ ಬ್ರೇಕ್ ಬಿದ್ದದ್ದು 1985ರ ಚುನಾವಣೆಯಲ್ಲಿ. ಅದೇ ರೀತಿ ಸಿದ್ದನಗೌಡ ಸೋಮನಗೌಡ ಪಾಟೀಲ ಅವರ ಹ್ಯಾಟ್ರಿಕ್ ಗೆಲುವನ್ನು ತಪ್ಪಿಸಿದ ಚುನಾವಣೆ ಇದಾಗಿತ್ತು. ಕಾಂಗ್ರೆಸ್‌ ಮೊದಲ ಬಾರಿಗೆ ಈ ಕ್ಷೇತ್ರದಲ್ಲಿ ಸೋಲು ಅನುಭವಿಸುತ್ತದೆ. ಜನತಾ ಪಕ್ಷದಿಂದ ಅಭ್ಯಥಿಯಾಗಿದ್ದ ವೆಂಕಪ್ಪ ಬಾಬುರೆಡ್ಡಿ ತುಂಗಳ ಅವರು ಗೆಲುವು ಸಾಧಿಸಿದರು.

1989ರ ಚುನಾವಣೆಯಲ್ಲಿ ಯಳ್ಳಿಗುತ್ತಿ ಗಂಗಾಧರಪ್ಪ ಗುರುಸಿದ್ದಪ್ಪ ಅವರು ಜನತಾ ದಳದಿಂದ ಸ್ಪರ್ಧಿಸಿ ಗೆದ್ದರು. ಆ ಬಳಿಕ 1994ರ ಚುನಾವಣೆಯಲ್ಲಿ ಜೆ ಟಿ ಪಾಟೀಲ ಅವರ ಗೆಲುವಿನ ಮೂಲಕ ಕಾಂಗ್ರೆಸ್‌ ಪಕ್ಷ ಬೀಳಗಿಯನ್ನು ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಂಡಿತು. 1999ರ ಚುನಾವಣೆಯಲ್ಲೂ ಅವರು ಕಾಂಗ್ರೆಸ್‌ ಗೆಲುವನ್ನು ಮುಂದುವರಿಸಿದರು. ಈ ವೇಳೆಗೆ ಕ್ಷೇತ್ರದಲ್ಲಿ ಬಿಜೆಪಿ ತನ್ನ ಸಂಘಟನೆಯನ್ನು ಚೆನ್ನಾಗಿಯೇ ಕಟ್ಟಿತ್ತು. ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶ್ರೀಕಾಂತ್‌ ಕುಲಕರ್ಣಿ ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟರು. ಮುಂದೆ 2004ರ ಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿದ ಮುರಗೇಶ ನಿರಾಣಿ, ಕಾಂಗ್ರೆಸ್ ಹುರಿಯಾಳು ಜೆಟಿ ಪಾಟೀಲ್ ಅವರ ಹ್ಯಾಟ್ರಿಕ್ ಗೆಲುವಿಗೆ ಬ್ರೇಕ್ ಹಾಕಿದರು. ಮೊದಲ ಬಾರಿಗೆ ಬಿಜೆಪಿ ಬಾವುಟ ಹಾರಿಸಿದ ನಿರಾಣಿ, ಜೆಟಿ ಪಾಟೀಲ್ ವಿರುದ್ಧ 17,325 ಮತಗಳ ಅಂತರಿಂದ ಗೆಲುವು ಕಂಡರು.

2008ರ ಚುನಾವಣೆಯಲ್ಲಿ ಮತ್ತೆ ಮುರುಗೇಶ ನಿರಾಣಿ ಬಿಜೆಪಿ ಪಕ್ಷದಿಂದ ಗೆಲುವು ಕಂಡರು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯಥಿಯಾಗಿದ್ದ ಅಜಯ್‌ ಕುಮಾರ್‌ ಸರನಾಯಕ ಅವರು ಪ್ರಬಲ ಪೈಪೋಟಿ ನೀಡಿ ಕೇವಲ 3,124 ಮತಗಳ ಅಂತರದಿಂದ ನಿರಾಣಿ ವಿರುದ್ಧ ಸೋಲುಣಬೇಕಾಯಿತು. ಗೆದ್ದ ನಿರಾಣಿ ಮಂತ್ರಿಯಾದರು. 2013ರ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಮತ್ತೆ ಜೆ.ಟಿ ಪಾಟೀಲ ಅವರನ್ನು ಕಣಕ್ಕಿಳಿಸಿದರು. ಈ ವೇಳೆ ನಿರಾಣಿಯ ಹ್ಯಾಟ್ರಿಕ್‌ ಗೆಲುವಿಗೆ ಜೆ.ಟಿ ಪಾಟೀಲ ಬ್ರೇಕ್ ಹಾಕಿದರು. ನಿರಾಣಿ ವಿರುದ್ಧ 11,238 ಮತಗಳ ಅಂತರದಿಂದ ಗೆದ್ದ ಜೆಟಿ ಪಾಟೀಲ್ ಅವರು ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾದರು.

ಕಳೆದ ಬಾರಿಯ 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಮುರುಗೇಶ ನಿರಾಣಿ 85,135 ಮತ ಪಡೆಯುವ ಮೂಲಕ ಗೆಲುವಿನ ನಗೆ ಬೀರಿದರು. ಕಾಂಗ್ರೆಸ್‌ ಅಭ್ಯರ್ಥಿ ಜೆ.ಟಿ ಪಾಟೀಲ್ ತೀವ್ರ ಪೈಪೋಟಿ ನೀಡಿ ಕೇವಲ 4,811 ಮತಗಳ ಅಂತರದಿಂದ ಸೋಲುಂಡರು. ಬಿಜೆಪಿ ಸರ್ಕಾರದಲ್ಲಿ ನಿರಾಣಿ ಎರಡನೇ ಬಾರಿ ಮಂತ್ರಿಯಾದರು. ಈ ಇಬ್ಬರು ಅಭ್ಯರ್ಥಿಗಳು ಈಗಾಗಲೇ ಮೂರು ಬಾರಿ ಶಾಸಕರಾಗಿದ್ದು, ಮತ್ತೆ ಈ ಬಾರಿಯೂ ಕಣದಲ್ಲಿದ್ದಾರೆ. ಮತ್ತೆ ಇಬ್ಬರ ನಡುವೆ ಪ್ರಬಲ ಸ್ಪರ್ಧೆ ಏರ್ಪಡಲಿದೆ.

ಜಾತಿ ಲೆಕ್ಕಾಚಾರ:

ಬೀಳಗಿ ಮತ ಕ್ಷೇತ್ರದಲ್ಲಿ ಒಟ್ಟು 2,23,560 ಮತದಾರರಿದ್ದಾರೆ. ಪುರುಷ ಮತದಾರರು- 1,11,025, ಮಹಿಳೆಯರು-1,12,520 ಹಾಗೂ ಇತರೆ 15 ಮತದಾರರಿದ್ದಾರೆ.

ಬೀಳಗಿ ಮತಕ್ಷೇತ್ರದಲ್ಲಿ 2,23,560 ಮತದಾರರಿದ್ದು, ಲಿಂಗಾಯತ, ರಡ್ಡಿ, ಕುರುಬ, ಗಾಣಿಗ ಸಮುದಾಯದ ಮತಗಳೇ ನಿರ್ಣಾಯಕವಾಗಿವೆ. ಈವರೆಗಿನ ಚುನಾವಣೆಗಳಲ್ಲಿ ಬಹುತೇಕರು ಲಿಂಗಾಯತ ಹಾಗೂ ರಡ್ಡಿ ಸಮುದಾಯದವರೇ ಗೆಲುವು ಸಾಧಿಸಿದ್ದಾರೆ. ಇನ್ನು ಪರಿಶಿಷ್ಟ ಜಾತಿ, ಪಂಗಡ, ವಾಲ್ಮೀಕಿ, ಲಂಬಾಣಿ, ಮರಾಠ ಸಮುದಾಯದ ಮತಗಳೂ ಚುನಾವಣೆಯ ಫಲಿತಾಂಶದ ಮೇಲೆ ಪ್ರಭಾವ ಬೀರುತ್ತವೆ.

ಸಾಂಪ್ರದಾಯಕ ಎದುರಾಳಿಗಳ ನಡುವೆಯೇ ಮತ್ತೊಂದು ಬಿಗ್ ಫೈಟ್

ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ಎಲ್ಲ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿವೆ. ಈ ಬಾರಿಯೂ ಬಿಜೆಪಿಯಿಂದ ಮುರಗೇಶ್ ನಿರಾಣಿಗೆ ಟಿಕೆಟ್ ನೀಡಿದ್ದು, ಕಾಂಗ್ರೆಸ್‌ನಲ್ಲಿ ಜೆಟಿ ಪಾಟೀಲ್, ಹಾಗೂ ಎಸ್‌ಆರ್‌ ಪಾಟೀಲ್ ನಡುವೆ ಟಿಕೆಟ್‌ಗಾಗಿ ಪೈಪೋಟಿ ಏರ್ಪಟ್ಟಿತ್ತು. ಆದರೆ ಅಂತಿಮವಾಗಿ ಜೆಟಿ ಪಾಟೀಲ್‌ಗೆ ಟಿಕೆಟ್ ನೀಡಲಾಗಿದೆ. ಇನ್ನು ಜೆಡಿಎಸ್ ಪಕ್ಷದಿಂದ ರುಕ್ಮುದ್ದೀನ್‌ ಸೌದಗಲ್‌ ಎನ್ನುವವರಿಗೆ ಟಿಕೆಟ್ ನೀಡಲಾಗಿದೆ.

ನಿರಾಣಿಯ ಹಣದ ಹೊಳೆಗೆ ಮರುಳಾಗುವರೇ ಮತದಾರರು?

ಬೀಳಗಿ ಮತಕ್ಷೇತ್ರದಿಂದ ಮುರಗೇಶ್ ನಿರಾಣಿ ಅವರು ಈಗಾಗಲೇ ನಾಲ್ಕು ಬಾರಿ ಸ್ಪರ್ಧೆ ಮಾಡಿ ಮೂರು ಬಾರಿ ಗೆಲುವು ಸಾಧಿಸಿದ್ದಾರೆ. ಮುಂದಿನ ಮುಖ್ಯಮಂತ್ರಿ ರೇಸ್‌ನಲ್ಲೂ ನಿರಾಣಿ ಹೆಸರು ಮುಂಚೂಣಿಯಲ್ಲಿದೆ. ಆದರೆ ಅವರು ಈ ಬಾರಿ ಬೀಳಗಿ ಕ್ಷೇತ್ರದಿಂದ ಗೆಲುವು ಸಾಧಿಸುವುದು ಅಷ್ಟು ಸುಲಭವಿಲ್ಲ. ಏಕೆಂದರೆ, ಕ್ಷೇತ್ರದಲ್ಲಿ ಆಡಳೀತ ವಿರೋಧಿ ಅಲೆ ಜೋರಾಗಿಯೇ ಇದೆ.

ಕ್ಷೇತ್ರದ ಬಹಳಷ್ಟು ಹಳ್ಳಿಗಳ ಮತದಾರರು ಹೇಳುವುದೊಂದೇ ಮಾತು, ‘ನಿರಾಣಿ ಸಾಹೇಬ್ ಓಟ್ ಕೇಳಾಕ್ ಅಷ್ಟೇ ನಮ್ಮೂರಿಗೆ ಬರ್ತಾನ ರೀ, ಆರಿಸಿ ಬಂದ್ಮೇಲೆ ಇತ್ಲಾಗ ತಲೆನೇ ಹಾಕಲ್ಲ, ಇನ್ನ ನಮ್ಮ ಕಷ್ಟ ಯಾವಾಗ ಕೇಳತಾನ್ರೀ ಅಂವಾ” ಎನ್ನುತ್ತಾರೆ. ಇನ್ನು ನಿರಾಣಿ ರಾಜಕಾರಣಿ ಮಾತ್ರ ಅಲ್ಲ ಉದ್ಯಮಿಯೂ ಹೌದು. ಬಾಗಲಕೋಟೆ ಸೇರಿದಂತೆ ರಾಜ್ಯದ ಹಲವೆಡೆ ಅನೇಕ ಕಾರ್ಖಾನೆಗಳಿವೆ. ಕ್ಷೇತ್ರದ ರೈತರೊಂದಿಗೆ ಒಳ್ಳೆಯ ಸಂಬಂಧ ಹೊಂದಿರಬೇಕಾಗಿದ್ದ ಉದ್ಯಮಿ ನಿರಾಣಿ, ಸ್ಥಳಿಯ ರೈತ ಮುಖಂಡರ ವಿರೋಧ ಕಟ್ಟಿಕೊಂಡಿದ್ದಾರೆ.

ರಾಜ್ಯದಲ್ಲಿ ಪಂಚಮಸಾಲಿ ಲಿಂಗಾಯತ ಸಮುದಾಯದವರು 2ಎ ಮೀಸಲಾತಿಗಾಗಿ ಹೋರಾಟ ನಡೆಸಿದರು. ಆದರೆ ನಿರಾಣಿ ಅವರು ಮಂತ್ರಿ ಸ್ಥಾನಕ್ಕಾಗಿ ಸಮುದಾಯವನ್ನು ಹಾಗೂ ಸಮುದಾಯದ ಸ್ವಾಮೀಜಿಗಳನ್ನು ಬಳಸಿಕೊಂಡರೆ ಹೊರತು, ಸಮುದಾಯದ ಮೀಸಲಾತಿ ಹೋರಾಟದಲ್ಲಿ ಭಾಗಿಯಾಗಲಿಲ್ಲ ಎನ್ನುವ ಆರೋಪ ಅವರ ಮೇಲಿದೆ. ಕೂಡಲಸಂಗಮದ ಗುರುಪೀಠಾಧ್ಯಕ್ಷ ಜಯಮೃತ್ಯುಂಜಯ ಸ್ವಾಮೀಜಿ ಜೊತೆಗಿನ ಗುದ್ದಾಟದಲ್ಲಿ ಸ್ವಾಮೀಜಿಗೆ ಅವಮಾನವಾಗುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಸಮುದಾಯ ಅವರ ಮೇಲೆ ಕೋಪಗೊಂಡಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

ಇನ್ನು ಕ್ಷೇತ್ರದಲ್ಲಿ ಕುರುಬ ಸಮುದಾಯ ಅತಿ ಹೆಚ್ಚು ಮತದಾರರನ್ನು ಹೊಂದಿದ್ದು, ಈ ಸಮುದಾಯದ ಅತಿಹೆಚ್ಚು ಮತಗಳನ್ನು ಸೆಳೆದರೆ ಮಾತ್ರ ನಿರಾಣಿಗೆ ಗೆಲುವಿನ ಸಾಧ್ಯತೆ ಇದೆ. ಪ್ರತಿಸ್ಪರ್ಧಿ ಅಭ್ಯರ್ಥಿ ರೆಡ್ಡಿ ಸಮುದಾಯಕ್ಕೆ ಸೇರಿರುವುದರಿಂದ ಆ ಜಾತಿಯ ಮತಗಳು ಹೆಚ್ಚು ಸೆಳೆಯಲು ಸಾಧ್ಯವಾಗದೇ ಹೋಗಬಹುದು.

ಒಳ ಮೀಸಲಾತಿ ವಿಚಾರವಾಗಿ ರಾಜ್ಯದಲ್ಲಿ ಬಂಜಾರ ಸಮುದಾಯ ಬಿಜೆಪಿ ವಿರುದ್ಧ ತಿರುಗಿ ಬಿದ್ದಿದ್ದು, ಬೀಳಗಿ ಕ್ಷೇತ್ರದಲ್ಲೂ ಅದರ ಪ್ರಭಾವ ಬೀರುವ ಸಾಧ್ಯತೆ ಹೆಚ್ಚಿದೆ. ಉಳಿದಂತೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮುಸ್ಲಿ ಸಮುದಾಯಗಳ ಮತಗಳನ್ನಾದರೂ ಅತಿಹೆಚ್ಚಿನ ಪ್ರಮಾಣದಲ್ಲಿ ಪಡೆಯಬೇಕಾಗುತ್ತದೆ.

ಇಷ್ಟೆಲ್ಲಾ ಸೋಲಿನ ಭೀತಿ ಎದುರಿಸುತ್ತಿರುವ ಮುರಗೇಶ್ ನಿರಾಣಿ ಅವರು ಗೆಲ್ಲಲೇ ಬೇಕು ಎನ್ನುವ ಹಠದಿಂದ ಹಣದ ಹೊಳೆ ಹರಿಸಲು ಸಿದ್ದರಾಗಿದ್ದಾರೆ. ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ಖಾನೆ ಸಿಬ್ಬಂದಿ ಕ್ವಾರ್ಟರ್ಸ್‌ನಲ್ಲಿ ನಿರಾಣಿಗೆ ಸಂಬಂಧಿಸಿದ 21.45 ಲಕ್ಷ ಮೌಲ್ಯದ 963 ಸಾಂಪ್ರದಾಯಿಕ ಬೆಳ್ಳಿ ದೀಪಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ವಿಚಾರವಾಗಿ ಮುರುಗೇಶ್ ನಿರಾಣಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇನ್ನು ಕೆಲವಡೆ ಆಮಿಷ ಒಡ್ಡುವ ಮೂಲಕ ಮತ ಗಳಿಸಲು ನಿರಾಣಿ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಎದುರಾಳಿಯ ತಂತ್ರಕ್ಕೆ ಪ್ರತಿತಂತ್ರ; ಜೆ.ಟಿ ಪಾಟೀಲ್ ಗೆಲುವು ಸಾಧ್ಯವೇ?

ಕಾಂಗ್ರೆಸ್‌ನ ಹಿರಿಯ ಹುರಿಯಾಳು ಜೆಟಿ ಪಾಟೀಲ್ ಅವರು ಈ ಕ್ಷೇತ್ರದಿಂದ ಐದು ಬಾರಿ ಸ್ಪರ್ಧಿಸಿ, ಮೂರು ಬಾರಿ ಗೆಲುವು ಸಾಧಿಸಿದ್ದಾರೆ. 1994ರಲ್ಲಿಯೇ ಚುನಾವಣೆಯಲ್ಲಿ ಗೆದ್ದು ಶಾಸಕರಾಗಿದ್ದ ಜೆಟಿ ಪಾಟೀಲ್ ಆ ಬಳಿಕ ಮತ್ತೆ ಎರಡು ಬಾರಿ ಶಾಸಕರಾದರು. ಎದುರಾಳಿಯ ಹಣಬಲದ ಎದುರು ಅವರು ಎರಡು ಬಾರಿ ಸೋಲುಣಬೇಕಾಯಿತು. ಈ ಬಾರಿಯೂ ಎದುರಾಳಿ ಅಭ್ಯರ್ಥಿ ಹಣದ ಹೊಳೆ ಹರಿಸುತ್ತಿದ್ದಾರೆ. ಆದರೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿರುವುದರಿಂದ ಗೆಲ್ಲಲು ಜೆ.ಟಿ ಪಾಟೀಲ್ ಏನೇನು ಕಾರ್ಯತಂತ್ರ ಮಾಡುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

ಜೆ.ಟಿ ಪಾಟೀಲ್ ಅವರು ಕ್ಷೇತ್ರದ ಜನರೊಟ್ಟಿಗೆ ಬೆರೆಯುವ ರೀತಿ ವಿಶಿಷ್ಟವಾದದು. ಒಬ್ಬ ಜನನಾಯಕ ಜನರೊಟ್ಟಿಗೆ ಹೇಗೆ ಬೆರೆಯಬೇಕು ಎನ್ನುವುದನ್ನು ಅವರು ಮೈಗೂಡಿಸಿಕೊಂಡಿದ್ದಾರೆ. ಕ್ಷೇತ್ರದ ಪ್ರತಿ ಹಳ್ಳಿಗಳಲ್ಲೂ ಜನರು ಅವರನ್ನು ಊರ ಮಗನಂತೆ ಕಾಣುತ್ತಾರೆ. ಪ್ರತಿಹಳ್ಳಿಗಳಲ್ಲೂ ಅವರು ಅಧಿಕಾರದಲ್ಲಿದ್ದಾಗ ಮಾಡಿದ ಕೆಲಸಗಳ ಬಗ್ಗೆ ನೆನೆಯುತ್ತಾರೆ. ಇದು ಅವರಿಗೆ ಪ್ಲಸ್ ಪಾಯಿಂಟ್ ಆಗುವ ಸಾಧ್ಯತೆ ಇದೆ.

ಇನ್ನು ಜಾತಿಯಿಂದ ಜೆ.ಟಿ ಪಾಟೀಲ್ ಅವರು ರೆಡ್ಡಿ ಸಮುದಾಯಕ್ಕೆ ಸೇರಿದ್ದಾರೆ. ಕ್ಷೇತ್ರದಲ್ಲಿ ರೆಡ್ಡಿ ಸಮುದಾಯದ ಮತಗಳನ್ನು ಕ್ರೂಡೀಕರಿಸುವಲ್ಲಿ ಅವರ ಜೊತೆ ಕಾಂಗ್ರೆಸ್ ಹಿರಿಯ ಮುಖಂಡ ಎಸ್‌.ಆರ್ ಪಾಟೀಲ್ ಅವರು ಕೈಜೋಡಿಸಲಿದ್ದಾರೆ. ಪಂಚಮಸಾಲಿ ಲಿಂಗಾಯತ ಮತಗಳನ್ನು ಸೆಳೆಯುವದರಲ್ಲಿ ಎಸ್ ಆರ್ ಪಾಟೀಲ್ ಅವರಿಗೆ ಕಾಂಗ್ರೆಸ್‌ನ ಯುವ ಮುಖಂಡ ಬಸವಪ್ರಭು ಸರನಾಡಗೌಡ ಸಹಾಯವಾಗಬಲ್ಲರು. ಇನ್ನು ಕ್ಷೇತ್ರದಲ್ಲಿ ಅತಿಹೆಚ್ಚು ಕುರುಬ ಸಮುದಾಯದ ಮತಗಳಿರುವುದರಿಂದ ಆ ಸಮುದಾಯದ ಮತಗಳು ಯಾರ ಕಡೆ ವಾಲುತ್ತವೆ ಎನ್ನುವುದಿನ್ನು ಅಸ್ಪಷ್ಟ. ಇನ್ನುಳಿದ ಸಮುದಾಯಗಳು ಕಾಂಗ್ರೆಸ್‌ನತ್ತ ಒಲವು ಹೊಂದಿವೆ ಎನ್ನುವ ಮಾತುಗಳಿದ್ದರೂ, ಆ ಮತಗಳನ್ನು ತನ್ನ ಬುಟ್ಟಿಗೆ ಬೀಳಿಸಿಕೊಳ್ಳಲು ಮುಂದಿನ ಕೆಲವು ದಿನಗಳಲ್ಲಿ ಜೆಟಿ ಪಾಟೀಲ್ ಯಾವ ತಂತ್ರ ರೂಪಿಸುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.

ಕೈ-ಕಮಲದ ನಡುವಿನ ಜಿದ್ದಜಿದ್ದಿನಲ್ಲಿ ಸ್ಪರ್ಧೆಗಿಳಿದವರು..

ಈ ಕ್ಷೇತ್ರದಲ್ಲಿ ಪ್ರಬಲ ಸ್ಪರ್ಧಿಗಳು ಎದುರಾಳಿಯ ಮತ ವಿಂಗಡನೆ ಮಾಡಲು ಪಕ್ಷೇತರ ಅಭ್ಯರ್ಥಿಯನ್ನು ಕಣಕ್ಕಿಸುವುದು ಮೊದಲಿನಿಂದಲೂ ವಾಡಿಕೆ ಇದೆ. ಈ ಬಾರಿಯೂ ಅದು ಮುಂದುವರೆಯಲಿದೆ. ಜೆಡಿಎಸ್ ಅಭ್ಯರ್ಥಿ ಮುಸ್ಲಿಂ ಸಮುದಾಯದ ರುಕ್ಮುದ್ದೀನ್‌ ಸೌದಗಲ್‌ ಎನ್ನುವವರು ಕಣದಲ್ಲಿದ್ದಾರೆ. ಆದರೆ ಈ ಕ್ಷೇತ್ರದಲ್ಲಿ ಈ ಬಾರಿ ಜೆಡಿಎಸ್ ಪಕ್ಷದಿಂದ ಯಾರೇ ಸ್ಪರ್ಧಿಸಿದರೂ 2 ಸಾವಿರಕ್ಕಿಂತ ಹೆಚ್ಚು ಮತಗಳನ್ನು ಪಡೆಯಲು ಸಾಧ್ಯವಾಗದೇ ಹೋಗಬಹುದು.

ರೈತ ಸಂಘಟನೆ ಬೆಂಬಲಿತ ಪಕ್ಷೇತರ ಅಭ್ಯರ್ಥಿಯಾಗಿ ವಕೀಲ ಯಲ್ಲಪ್ಪ ನಿಂಗಪ್ಪ ಹೆಗಡೆ ಸ್ಪರ್ಧಾಳುವಾಗಿ ಕಣದಲ್ಲಿದ್ದಾರೆ. ಇವರು ಸಚಿವ ಮುರಗೇಶ್ ನಿರಾಣಿ ಅವರ ವಿರುದ್ಧ ಭ್ರಷ್ಟಾಚಾರ ಹಾಗೂ ಅವರ ದೌರ್ಜನ್ಯದ ವಿರುದ್ಧ ಪ್ರತಿಭಟನೆ ಮಾಡಿ ಗಮನ ಸೆಳೆದಿದ್ದಾರೆ. ಇದೀಗ ಈ ಭ್ರಷ್ಟಾಚಾರದ ವಿರುದ್ಧ ಮತ ಚಲಾಯಿಸಿ ಎಂದು ಬಿಜೆಪಿ ಅಭ್ಯರ್ಥಿ ವಿರುದ್ಧ ಆರೋಪ ಮಾಡುತ್ತ ಮತ ಸೆಳೆಯುತ್ತಿದ್ದಾರೆ.

ಇದನ್ನೂ ಓದಿ: ಈ ಡಬಲ್‌ ಇಂಜಿನ್‌ ಸಂಘಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಬೇಕಾಗಿದೆ: ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...