Homeಕರ್ನಾಟಕಮೀಸಲಾತಿ ಮಿತಿ ಶೇ.75ಕ್ಕೆ ಏರಿಸಲು ಕಾಂಗ್ರೆಸ್ ಬದ್ಧ: ಸಿದ್ದರಾಮಯ್ಯ ಘೋಷಣೆ

ಮೀಸಲಾತಿ ಮಿತಿ ಶೇ.75ಕ್ಕೆ ಏರಿಸಲು ಕಾಂಗ್ರೆಸ್ ಬದ್ಧ: ಸಿದ್ದರಾಮಯ್ಯ ಘೋಷಣೆ

ಜನಸಂಖ್ಯೆಯ ಆಧಾರದಲ್ಲಿ ಎಲ್ಲಾ ಜಾತಿಗಳಿಗೆ ಮೀಸಲಾತಿ ನೀಡಲಾಗುವುದು ಎಂದಿರುವ ಅವರು ಅಮಿತ್ ಶಾ ಆರೋಪಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ

- Advertisement -
- Advertisement -

ಮೀಸಲಾತಿ ಮಿತಿಯನ್ನು ಶೇ.50ರಿಂದ ಶೇ. 75ಕ್ಕೆ  ಹೆಚ್ಚಿಸಲು ಕಾಂಗ್ರೆಸ್ ಬದ್ಧವಾಗಿದೆ. ಜನಸಂಖ್ಯೆಯ ಆಧಾರದಲ್ಲಿ ಎಲ್ಲಾ ಜಾತಿಗಳಿಗೆ ಮೀಸಲಾತಿ ನೀಡಲಾಗುವುದು ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಗೊಂದಲಗಳನ್ನು ಸೃಷ್ಟಿಸಿ, ಮುಸ್ಲಿಮರಿಗಿದ್ದ 4% ಮೀಸಲಾತಿಯನ್ನು ಕಿತ್ತುಹಾಕಿ ಲಿಂಗಾಯತರು ಮತ್ತು ಒಕ್ಕಲಿಗರಿಗೆ ಹಂಚಿಕೆ ಮಾಡಿದ್ದೇವೆಂದು ರಾಜಕಾರಣ ಮಾಡುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯನವರು ಕಾಂಗ್ರೆಸ್ ಪಕ್ಷದ ಮುಂದಿನ ನಡೆಯನ್ನು ತಿಳಿಸಿದ್ದಾರೆ.

“ಒಕ್ಕಲಿಗರು, ಲಿಂಗಾಯತರು ಅಥವಾ ಇತರ ಯಾವುದೇ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವುದಕ್ಕೆ ನಮ್ಮ ವಿರೋಧ ಇಲ್ಲ. ಪ್ರತಿಯೊಬ್ಬರಿಗೂ ಅವರ ಜನಸಂಖ್ಯೆಯ ಆಧಾರದ ಮೇಲೆ ಮೀಸಲಾತಿ ಹೆಚ್ಚಿಸಬೇಕೆಂಬುದನ್ನು ನಾವು ಬೆಂಬಲಿಸುತ್ತೇವೆ” ಎಂದಿದ್ದಾರೆ.

“ಒಕ್ಕಲಿಗರು ಮತ್ತು ಲಿಂಗಾಯತರಿಗೆ ಮೀಸಲಾತಿ ಹೆಚ್ಚಿಸಲು ಮುಸ್ಲಿಮರಿಗೆ ನೀಡಲಾಗಿರುವ ಮೀಸಲಾತಿಯನ್ನು ರದ್ದುಪಡಿಸುವ ಅಗತ್ಯವಿಲ್ಲ. ಮೀಸಲಾತಿ ಮಿತಿ ಶೇ.50 ತೆಗೆದರೆ ಪ್ರತಿ ಅರ್ಹ ಸಮುದಾಯಕ್ಕೂ ಅವರ ಜನಸಂಖ್ಯೆ ಆಧರಿಸಿ ಮೀಸಲಾತಿ ನೀಡಬಹುದು” ಎಂದು ತಿಳಿಸಿದ್ದಾರೆ.

“ಬಿಜೆಪಿ ಎಂದಿಗೂ ಒಕ್ಕಲಿಗರು ಮತ್ತು ಲಿಂಗಾಯತರಿಗೆ ಮೀಸಲಾತಿ ನೀಡುವ ಉದ್ದೇಶವನ್ನು ಹೊಂದಿರಲಿಲ್ಲ, ಆದರೆ ಮುಸ್ಲಿಮರಿಗೆ ಮೀಸಲಾತಿಯನ್ನು ತೆಗೆದುಹಾಕುವಲ್ಲಿ ಮಾತ್ರ ಆಸಕ್ತಿ ಹೊಂದಿತ್ತು” ಎಂದು ಟೀಕಿಸಿದ್ದಾರೆ.

“ಮುಸ್ಲಿಮರಿಗೆ ಮೀಸಲಾತಿ ನೀಡಲು ಒಕ್ಕಲಿಗರ ಇಲ್ಲವೇ ಲಿಂಗಾಯತರ ಮೀಸಲಾತಿಯನ್ನು ಕಡಿತಗೊಳಿಸುತ್ತೀರಾ?” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಶ್ನಿಸಿರುವುದಕ್ಕೆ ಸರಣಿ ಟ್ವೀಟ್‌ಗಳ ಮೂಲಕ ಸಿದ್ದರಾಮಯ್ಯ ಕಟುವಾಗಿ ಪ್ರತಿಕ್ರಿಯಿಸಿದ್ದಾರೆ.

“ಈ ಪ್ರಶ್ನೆಯಲ್ಲಿಯೇ ಜಾತಿ-ಜಾತಿಗಳ ಮತ್ತು ಧರ್ಮ-ಧರ್ಮದ ನಡುವೆ ಜಗಳ ಹಚ್ಚುವ ದುಷ್ಟ ಆಲೋಚನೆ ಇದೆ ಎನ್ನುವುದನ್ನು ಅರ್ಥಮಾಡಿಕೊಳ್ಳದಷ್ಟು ಕರ್ನಾಟಕದ ಜನತೆ ದಡ್ಡರಲ್ಲ. ಒಕ್ಕಲಿಗರು ಮತ್ತು ಲಿಂಗಾಯತರು ಸೇರಿದಂತೆ ಈ ರಾಜ್ಯದ ಮಹಾ ಜನತೆ ‘ಕಿತ್ತು ತಿನ್ನುವ ದುಷ್ಟರಲ್ಲ’, ‘ಹಂಚಿ ತಿನ್ನುವ ಔದಾರ್ಯ ಸಜ್ಜನರು’ ಎನ್ನುವುದನ್ನು ಅಮಿತ್ ಶಾ ಅವರಿಗೆ ವಿನಮ್ರವಾಗಿ ತಿಳಿಸಬಯಸುತ್ತೇನೆ” ಎಂದಿದ್ದಾರೆ.

“ಒಕ್ಕಲಿಗ, ಲಿಂಗಾಯತ ಇಲ್ಲವೇ ಇತರ ಅರ್ಹ ಜಾತಿಗಳಿಗೆ ಮೀಸಲಾತಿ ನೀಡುವುದಕ್ಕೆ ನಮ್ಮ ಪಕ್ಷದ ವಿರೋಧ ಇಲ್ಲ. ನಮ್ಮ ಪಕ್ಷ ಮೀಸಲಾತಿ ಹೆಚ್ಚಳದ ಪರವಾಗಿದೆ. ಬಿಜೆಪಿ ಕನ್ನಡಿಯೊಳಗಿನ ಗಂಟು ತೋರಿಸಿ ಜನರನ್ನು ತಪ್ಪು ದಾರಿಗೆಳೆಯುತ್ತಿರುವುದನ್ನಷ್ಟೇ ವಿರೋಧಿಸುತ್ತಿದ್ದೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಒಟ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವುದೊಂದೇ ಈಗಿನ ಮೀಸಲಾತಿಯ ಗೊಂದಲ-ವಿವಾದವನ್ನು ಪರಿಹರಿಸಲು ಇರುವ ಸರಿಯಾದ ಮಾರ್ಗ. ಮೀಸಲಾತಿಗೆ ಈಗ ವಿಧಿಸಲಾಗಿರುವ ಶೇಕಡಾ 50ರ ಮಿತಿ ಸಂವಿಧಾನದಲ್ಲಿ ಹೇರಲಾದ ಮಿತಿ ಅಲ್ಲ, ಅದು ಇಂದಿರಾ ಸಹಾನಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶದ ಭಾಗ” ಎಂದು ನೆನಪಿಸಿದ್ದಾರೆ.

“ಈಗಾಗಲೇ ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ ಶೇಕಡಾ ಹತ್ತರಷ್ಟು ಮೀಸಲಾತಿ ನೀಡಿ ಶೇಕಡಾ 50ರ ಮಿತಿಯನ್ನು ಉಲ್ಲಂಘಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಒಟ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ಅನುಕೂಲವಾಗುವಂತೆ ಸಂವಿಧಾನಕ್ಕೆ ತಿದ್ದುಪಡಿ ತರಬೇಕು” ಎಂದು ಆಗ್ರಹಿಸಿದ್ದಾರೆ.

“ಎಲ್ಲ ಜಾತಿಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಪ್ರಾತಿನಿಧ್ಯ ಸಿಗುವಂತೆ ಮೀಸಲಾತಿಯನ್ನು ಪರಿಷ್ಕರಿಸಿ ಜಾರಿಗೆ ತರಬೇಕು ಮತ್ತು ಈ ಮೀಸಲಾತಿಯನ್ನು ಸಂವಿಧಾನದ ಒಂಭತ್ತನೇ ಶೆಡ್ಯೂಲ್ ಗೆ ಸೇರಿಸಬೇಕು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇಕಡಾ 50ರಿಂದ ಶೇಕಡಾ 75ರ ವರೆಗೆ ಹೆಚ್ಚಿಸಿ ಎಲ್ಲ ಸಮುದಾಯಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಯನ್ನು ನೀಡುತ್ತೇವೆ” ಎಂದು ಭರವಸೆ ನೀಡಿದ್ದಾರೆ.

“ಮೀಸಲಾತಿ ಪರಿಷ್ಕರಣೆಗೆ ಕರ್ನಾಟಕ ರಾಜ್ಯಕ್ಕೆ ಹೆಚ್ಚು ಅನುಕೂಲ ಇದೆ. ಯಾಕೆಂದರೆ ನಮ್ಮಲ್ಲಿ ನ್ಯಾಯವಾದಿ ಕಾಂತರಾಜ್ ಅಧ್ಯಕ್ಷತೆಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಮನೆ ಮನೆಗೆ ತೆರಳಿ ವೈಜ್ಞಾನಿಕವಾಗಿ ಗಣತಿ ಮಾಡಿರುವ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿ ಸಿದ್ಧ ಇದೆ. ಅದರ ಆಧಾರದಲ್ಲಿ ಮೀಸಲಾತಿ ರೂಪಿಸಿದರೆ ಸುಪ್ರೀಂ ಕೋರ್ಟ್ ಕೂಡಾ ಒಪ್ಪಿಕೊಳ್ಳಬಹುದು ಎಂಬ ಭರವಸೆ ನನಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“1994ರಲ್ಲಿ ಎಂ.ವೀರಪ್ಪ ಮೊಯಿಲಿ ಸರ್ಕಾರ ರಾಜ್ಯದ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇಕಡಾ 73ಕ್ಕೆ ಹೆಚ್ಚಿಸಿ ಆದೇಶ ಮಾಡಿತ್ತು. ಅದಿನ್ನು ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿದೆ. ಅಲ್ಲಿಯೂ ರಾಜ್ಯ ಸರ್ಕಾರ ಜಾತಿಗಣತಿಯ ವರದಿಯನ್ನು ಮುಂದಿಟ್ಟು ಮೀಸಲಾತಿ ಹೆಚ್ಚಳಕ್ಕೆ ಅನುಮತಿ ಕೋರಿದರೆ ನ್ಯಾಯಾಲಯ ಖಂಡಿತ ಒಪ್ಪಿಗೆ ನೀಡಬಹುದು” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಸಾಮಾಜಿಕ ಅನ್ಯಾಯವನ್ನೇ ರಾಜಕೀಯದ ಅಸ್ತ್ರವನ್ನಾಗಿ ಮಾಡಿಕೊಂಡು ಬಂದ ಭಾರತೀಯ ಜನತಾ ಪಕ್ಷಕ್ಕಾಗಲಿ, ಅದರ ಅಧ್ಯಕ್ಷರಿಗಾಗಲಿ ಸಾಮಾಜಿಕ ನ್ಯಾಯ ಅರ್ಥವಾಗಲಾರದು. ನಮ್ಮದು ಕೋಮುವಾದವನ್ನು ಉಸಿರಾಡುವ ಗುಜರಾತ್ ಅಲ್ಲ, ಬಸವವಾದವನ್ನು ಮೈಗೂಡಿಸಿಕೊಂಡಿರುವ ಕರ್ನಾಟಕ ಎನ್ನುವುದನ್ನು ನೆನಪಿಸಬಯಸುತ್ತೇನೆ” ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

“ಸಾಧನೆಯ ಬಲದಿಂದಾಗಲಿ, ಸವಕಲುಗೊಂಡಿರುವ ಕೋಮುವಾದದಿಂದಾಗಲಿ ಚುನಾವಣೆಯನ್ನು ಎದುರಿಸಲು ಅಸಾಧ್ಯವೆಂದು ಗೊತ್ತಾದಾಗ ಅವಸರದಲ್ಲಿ ಈ ಅಡ್ಡಕಸುಬಿ ಮೀಸಲಾತಿ ನೀತಿಯನ್ನು ರಾಜ್ಯ ಸರ್ಕಾರ ಘೋಷಿಸಿತ್ತು. ಈ ಮೀಸಲಾತಿಯನ್ನು ಒಕ್ಕಲಿಗ ಇಲ್ಲವೇ ಲಿಂಗಾಯತರ ಮೇಲಿನ ಪ್ರೀತಿ ಇಲ್ಲವೇ ಕಾಳಜಿಯಿಂದ ಘೋಷಿಸಿದ್ದಲ್ಲ, ಇದರ ಹಿಂದಿನ ದುರುದ್ದೇಶ ಮುಸ್ಲಿಂ ಮತ್ತು ಒಕ್ಕಲಿಗ-ಲಿಂಗಾಯತರ ನಡುವೆ ದ್ವೇಷ ಹುಟ್ಟಿಸುವುದೇ ಆಗಿದೆ” ಎಂದು ಎಚ್ಚರಿಸಿದ್ದಾರೆ.

“ಅಮಿತ್ ಶಾ ಅವರ ಪ್ರಶ್ನೆಯಲ್ಲಿಯೇ ಬಿಜೆಪಿಯ ದುಷ್ಟ ಆಲೋಚನೆ ಸ್ಪಷ್ಟವಾಗಿದೆ. ಆದರೆ ನ್ಯಾಯಾಲಯದ ಮೇಲೆ ನಂಬಿಕೆ ಇಟ್ಟಿರುವ ಮುಸ್ಲಿಮರು ಮೀಸಲಾತಿ ರದ್ದತಿಯಿಂದ ಅಧೀರರಾಗಲಿಲ್ಲ, ಪ್ರಚೋದನೆಗೂ ಒಳಗಾಗಲಿಲ್ಲ. ಅದೇ ರೀತಿ ಇದು ಕನ್ನಡಿಯೊಳಗಿನ ಗಂಟು ಎನ್ನುವುದನ್ನು ಅರ್ಥಮಾಡಿಕೊಂಡಿರುವ ಜಾಗೃತ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳು ಕೂಡಾ ಹೊಸ ಮೀಸಲಾತಿ ಘೋಷಣೆಯಿಂದ ಸಂಭ್ರಮಗೊಳ್ಳಲಿಲ್ಲ. ಇದು ನಮ್ಮ ಕರ್ನಾಟಕ” ಎಂದು ಬಣ್ಣಿಸಿದ್ದಾರೆ.

“ಈಗ ನಿರೀಕ್ಷೆಯಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಕಪಾಳಮೋಕ್ಷ ಮಾಡಿದೆ. ಹೊಸ ಮೀಸಲಾತಿಯನ್ನು ಜಾರಿಗೆ ತರುವುದಿಲ್ಲ ಎಂದು ಸಾಲಿಸಿಟರ್ ಜನರಲ್ ಮೂಲಕ ನ್ಯಾಯಾಲಯಕ್ಕೆ ಭರವಸೆ ನೀಡಿರುವ ಕೇಂದ್ರ ಸರ್ಕಾರದ ಗೃಹಸಚಿವರು ಚುನಾವಣಾ ಭಾಷಣದಲ್ಲಿ ಅದರ ವಿರುದ್ಧವಾಗಿ ಮಾತನಾಡುತ್ತಿದ್ದಾರೆ. ಗೃಹಸಚಿವ ಅಮಿತ್ ಶಾ ಅವರೇ, ಇದು ಕರ್ನಾಟಕ, ಇಲ್ಲಿ ಹೊಡೆಯುವ, ಬಡಿಯುವ, ಮುರಿಯುವ, ಸುಡುವ ‘ಗುಜರಾತ್ ಮಾದರಿ’ ನಡೆಯುವುದಿಲ್ಲ. ಇಲ್ಲಿ ಏನಿದ್ದರೂ ಪ್ರೀತಿಸುವ, ಪೊರೆಯುವ ಮತ್ತು ಕಟ್ಟುವ ‘ಕರ್ನಾಟಕ ಮಾದರಿ’ಯೇ ನಡೆಯುವುದು” ಎಂದು ಕಿವಿಮಾತು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...