Homeಕರ್ನಾಟಕನಮ್ಮ ಸಚಿವರಿವರು; ಮಗ್ಗಲು ಬದಲಿಸಿದ ಮಧು ಬಂಗಾರಪ್ಪನವರ ರಾಜಕೀಯ ಬದುಕು

ನಮ್ಮ ಸಚಿವರಿವರು; ಮಗ್ಗಲು ಬದಲಿಸಿದ ಮಧು ಬಂಗಾರಪ್ಪನವರ ರಾಜಕೀಯ ಬದುಕು

- Advertisement -
- Advertisement -

ಕರ್ನಾಟಕ ರಾಜಕಾರಣದ ದಿಕ್ಕುದೆಸೆಯನ್ನೇ ಬದಲಿಸುವ ತಾಕತ್ತಿನ ಮಾಸ್‌ಲೀಡರ್ ಎನಿಸಿದ್ದ ಸಾರೆಕೊಪ್ಪ ಬಂಗಾರಪ್ಪನವರ ಮುದ್ದಿನ ಮಗ ಮಧು ಬಂಗಾರಪ್ಪರ ಎರಡು ದಶಕದ ಹೊಯ್ದಾಟದ ರಾಜಕಾರಣ ಅಂತೂ ಹಳಿಗೇರಿದೆ; ಮಹತ್ವದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಮಂತ್ರಿಯಾಗುವ ಮೂಲಕ ಮಧು ರಾಜ್ಯ ರಾಜಕಾರಣದ ಮುನ್ನಲೆಗೆ ಬಂದಿದ್ದಾರೆ. ತನ್ಮೂಲಕ ಶಿವಮೊಗ್ಗ ಜಿಲ್ಲೆಯ ರಾಜಕೀಯವೂ ದೀರ್ಘ ಹೊರಳಾಟದ ಬಳಿಕ ಮಗ್ಗಲು ಬದಲಿಸಿದೆ. ಮತೀಯ ಮಸಲತ್ತಿನ ವಿರುದ್ಧ ಗಟ್ಟಿ ಧ್ವನಿಯಲ್ಲಿ ಮಾತಾಡಬಲ್ಲ ಮಧು ಮೇಲ್ವರ್ಗದ ಲಿಂಗಾಯತ ತಂತ್ರಗಾರಿಕೆ ಎದುರಿಸುತ್ತಲೇ ಶಿವಮೊಗ್ಗ ಜಿಲ್ಲೆಯನ್ನು ಕೋಮು ರಾಜಕಾರಣದ ಗುಂಗಿನಿಂದ ಅದು ಹೇಗೆ ಹೊರತರುತ್ತಾರೆಂಬ ಕುತೂಹಲವೀಗ ಮೂಡಿದೆ.

ಹಠ-ಛಲಗಳ ಬಂಗಾರಪ್ಪನವರ ಕೌಟುಂಬಿಕ ಬಿಕ್ಕಟ್ಟಿನ ಕುಲುಮೆಯಲ್ಲಿ ರಾಜಕಾರಣಿಯಾಗಿ ರೂಪುಗೊಂಡ ಮಧು ಮೊದಲು ಸಿನೆಮಾ, ಆಡಿಯೋ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು. ಅಣ್ಣ ಕುಮಾರ್ ಬಂಗಾರಪ್ಪನವರಿಗೆ ಅಪ್ಪ ರಾಜಕೀಯ ದೀಕ್ಷೆ ಕೊಟ್ಟಾಗಲೂ ಮಧು ರಾಜಕೀಯದತ್ತ ಆಕರ್ಷಿತರಾದವರಲ್ಲ. ಯಾವಾಗ ಹಿರಿಯ ಮಗ ಮತ್ತು ಬಂಗಾರಪ್ಪರ ನಡುವೆ ಸಾಂಸಾರಿಕ ವೈಷಮ್ಯ ಬೆಳೆಯಿತೋ ಆಗ ಅನಿವಾರ್ಯವಾಗಿ ಮಧು ಅಪ್ಪನ ಆಣತಿಯಂತೆ ರಾಜಕಾರಣ ಮಾಡಬೇಕಾಗಿ ಬಂತು. ಕುಮಾರ್ ನಟ್ಟಿರುಳಿನಲಿ ತನ್ನನ್ನು ಮನೆಯಿಂದ ಹೊರಗಟ್ಟಿದ್ದಾನೆ ಎಂದು ಸೊರಬದ ನೆಲದಲ್ಲಿ ನಿಂತು ಕಣ್ಣೀರುಗರೆಯುತ್ತ ಬಂಗಾರಪ್ಪ ಮಧುರನ್ನು ಉತ್ತರಾಧಿಕಾರಿ ಎಂದು ಘೋಷಿಸಿದ್ದರು.

ಎಸ್ ಬಂಗಾರಪ್ಪ

ಬಂಗಾರಪ್ಪ ಮೂರು ಬಾರಿ ಕುಮಾರ್‌ರನ್ನು ಸೊರಬದ ಶಾಸಕನಾಗಿ ಮಾಡಿದ್ದರು; ಅಲ್ಲೇ ಕುಮಾರ್ ಅವರ ರಾಜಕೀಯಕ್ಕೆ ಇತಿಶ್ರೀ ಹಾಡಲು ಮಧು ಪಟ್ಟಾಭಿಷೇಕಕ್ಕೆ ಶತಾಯಗತಾಯ ಪ್ರಯತ್ನಿಸಿದ್ದರು. ಆದರೆ ಬಂಗಾರಪ್ಪರ ಜೀವಿತಾವಧಿವರೆಗಿದು ಸಾಧ್ಯವಾಗಿರಲಿಲ್ಲ. 2004ರಲ್ಲಿ ಬಂಗಾರಪ್ಪ ಬಿಜೆಪಿ ಸೇರಿದಾಗ ಎಸ್.ಎಂ.ಕೃಷ್ಣ ಸರಕಾರದಲ್ಲಿ ಮಂತ್ರಿಯಾಗಿದ್ದ ಕುಮಾರ್ ತಾನು ಅಪ್ಪನನ್ನು ಹಿಂಬಾಲಿಸುತ್ತೇನೆ ಎನ್ನುತ್ತ ಮಂತ್ರಿಗಿರಿ ತೊರೆದು ಬಿಜೆಪಿ ಬಾಗಿಲಿಗೆ ಹೋಗಿನಿಂತಿದ್ದರು. ಆದರೆ ಬಂಗಾರಪ್ಪ ಕುಮಾರ್‌ಗೆ ಪ್ರವೇಶ ಸಿಗದಂತೆ ಮಾಡಿದರು; ವಾಪಸ್ ಕಾಂಗ್ರೆಸ್ ಸೇರಿಕೊಂಡ ಕುಮಾರ್‌ಗೆ ಎದುರಾಳಿಯಾಗಿ ಮಧುವನ್ನು ಬಿಜೆಪಿ ಅಭ್ಯರ್ಥಿಯಾಗಿ ಬಂಗಾರಪ್ಪ ನಿಲ್ಲಿಸಿದರು. ಪಾರ್ಲಿಮೆಂಟ್ ಮತ್ತು ಅಸೆಂಬ್ಲಿಗೆ ಜತೆಯಾಗಿ ಚುನಾವಣೆ ನಡೆದ ಆ ಸಂದರ್ಭದಲ್ಲಿ ಬಂಗಾರಪ್ಪ ಸಂಸದರಾದರೂ ಮಧುರವರಿಗೆ ಮಾತ್ರ ಗೆಲುವು ದಕ್ಕಲಿಲ್ಲ; ಅಪ್ಪನ ದೈತ್ಯ ಶಕ್ತಿ ಎದುರಿಸಿ ಗೆದ್ದು ಕುಮಾರ್ ಅಚ್ಚರಿ ಮೂಡಿಸಿದ್ದರು.

2008ರ ಚುನಾವಣೆ ಹೊತ್ತಲ್ಲಿ ಬಂಗಾರಪ್ಪ ಜೆಡಿಎಸ್‌ನಲ್ಲಿ ಇದ್ದರು. ಮಧು ಜೆಡಿಎಸ್ ಹುರಿಯಾಳಾದರೆ, ಕುಮಾರ್ ಕಾಂಗ್ರೆಸ್ ಅಭ್ಯರ್ಥಿ; ಬಂಗಾರಪ್ಪರಿಂದಲೆ ಹೊಸನಗರದ ಬಿಜೆಪಿ ಶಾಸಕನಾಗಿದ್ದ ಹರತಾಳು ಹಾಲಪ್ಪ ಗುರುವಿಗೆ ತಿರುಮಂತ್ರ ಹಾಕಿ ಬಿಜೆಪಿಯಿಂದ ಸ್ಪರ್ಧೆಗಿಳಿದಿದ್ದರು. ಅಣ್ಣ-ತಮ್ಮರ ಕಾಳಗದಲ್ಲಿ ದಾಯಾದಿ ಹಾಲಪ್ಪ ಸುಲಭವಾಗಿ ಶಾಸಕನಾದರು. 2013ರ ಚುನಾವಣೆ ವೇಳೆ ಬಂಗಾರಪ್ಪ ಇರಲಿಲ್ಲ; ತಂದೆಯ ಸಾವಿನ ಸಿಂಪಥಿಯಲ್ಲಿ ಮಧು ಜೆಡಿಎಸ್ ಶಾಸಕನಾಗಿ ಚುನಾಯಿತರಾದರು. ಅರಣ್ಯ ಸಾಗುವಳಿ ಮಾಡಿಕೊಂಡು ಬದುಕು ಕಟ್ಟಿಕೊಂಡಿರುವ ರೈತರಿಗೆ ಹಕ್ಕುಪತ್ರ ಕೊಡಿಸಲು ಪಾದಯಾತ್ರೆ ಮಾಡಿದ್ದ ಮಧು ಶಾಸಕನಾಗುತ್ತಲೆ ರಾಜ್ಯ ನಾಯಕನಾಗುವ ಅವಸರಕ್ಕೆ ಬಿದ್ದರು; ರಾಜ್ಯದಾದ್ಯಂತ ಓಡಾಡುತ್ತ ಈಡಿಗರ ಮುಂದಾಳಾಗುವ ಪ್ರಯತ್ನದಲ್ಲಿ ಕ್ಷೇತ್ರದ ಮೇಲಿನ ಹಿಡಿತ ಕಳೆದುಕೊಂಡರು. ಹೀಗಾಗಿ ಮಧು 2018ರಲ್ಲಿ ಪರಾಭವ ಅನುಭವಿಸಬೇಕಾಯಿತು ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ.

ಇದನ್ನೂ ಓದಿ: ನಮ್ಮ ಸಚಿವರಿವರು; ನೇರ ನಿಷ್ಠುರಿ, ಅಹಿಂದದ ಮುಂಚೂಣಿ ರಾಜಕಾರಣಿ ಕ್ಯಾತ್ಸಂದ್ರ ಎನ್. ರಾಜಣ್ಣ

ಈ ನಡುವೆ ಎರಡು ಬಾರಿ ಯಡಿಯೂರಪ್ಪರ ಮಗ ರಾಘವೇಂದ್ರ ವಿರುದ್ಧ ಲೋಕಸಭೆಗೆ ಜೆಡಿಎಸ್‌ನಿಂದ ಸ್ಪರ್ಧಿಸಿದ ಮಧು ಸೋಲು ಕಂಡರು. 2018ರಲ್ಲಿ ಕಾಂಗ್ರೆಸ್-ಜೆಡಿಎಸ್ ಸರಕಾರ ಅಧಿಕಾರಕ್ಕೆ ಬಂದಾಗ ಸಿಎಂ ಕುಮಾರಸ್ವಾಮಿ ತನಗೆ ಪುನರ್‌ವಸತಿ ಕಲ್ಪಿಸಲಿಲ್ಲವೆಂದು ಬೇಜಾರು ಮಾಡಿಕೊಂಡ ಮಧು ಅವರಿಗೆ ಆ ಪಕ್ಷದಲ್ಲಿ ಭವಿಷ್ಯವಿಲ್ಲವೆಂಬುದು ಖಾತ್ರಿಯಾಗಿತ್ತು. ಪದೇಪದೇ ತಾನು ಬಂಗಾರಪ್ಪನವರ ಶಿಷ್ಯನೆಂದು ಹೇಳಿಕೊಳ್ಳುವ ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗುತ್ತಲೆ ಕಾಂಗ್ರೆಸ್ ಸೇರಿದ ಮಧುರವರಿಗೆ ಅಲ್ಲಿ ಮಹತ್ವವೂ ದೊರೆಯಿತು. ರಾಜ್ಯ ಕಾಂಗ್ರೆಸ್‌ನ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷರಾಗಿ ರಾಜ್ಯ ಸುತ್ತಿದ ಮಧು ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷರಾಗಿದ್ದರು. ಈ ಬಾರಿ ಅಣ್ಣ ಕುಮಾರ್‌ರನ್ನು ಭರ್ಜರಿ 44,352 ಮತದಂತರದಿಂದ ಮಣಿಸಿ ಎಮ್ಮೆಲ್ಲೆಯಾದರು. ಭಾವ (ಅಕ್ಕ ಗೀತಾ ಪತಿ), ಸ್ಯಾಂಡಲ್‌ವುಡ್ ಸೆಲೆಬ್ರಿಟಿ ಶಿವರಾಜ್‌ಕುಮಾರ್‌ರನ್ನು ಕಾಂಗ್ರೆಸ್ ಪ್ರಚಾರಕ್ಕೆ ಬರುವಂತೆ ಮಾಡಿ ಪಕ್ಷದಲ್ಲಿ ವರ್ಚಸ್ಸು ಹೆಚ್ಚಿಸಿಕೊಂಡಿದ್ದ ಮಧು ಪಕ್ಕದ ಶಿರಸಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಸ್ಪೀಕರ್ ಕಾಗೇರಿ ಎದುರಾಳಿಯಾಗಿದ್ದ ಸೋದರ ಮಾವ ಭೀಮಣ್ಣ ನಾಯ್ಕ್ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಸತತ ಐದಾರು ಚುನಾವಣೆಯಲ್ಲಿ ಸೋತಿದ್ದ ಭೀಮಣ್ಣ ಈ ಬಾರಿ ಗೆಲ್ಲಲು, ಮಧು ಕ್ಷೇತ್ರದ ಬಹುಸಂಖ್ಯಾತ ದೀವರ ನಾಯಕರಲ್ಲಿ ಒಗ್ಗಟ್ಟು ಮೂಡಿಸಿದ್ದೇ ಕಾರಣವೆಂಬ ಮಾತು ಸಾಮಾನ್ಯವಾಗಿದೆ.

ಕುಮಾರ್ ಬಂಗಾರಪ್ಪ

ಸಿದ್ದರಾಮಯ್ಯ ಮತ್ತು ಡಿಕೆಶಿ ಇಬ್ಬರ ಜತೆಗೂ ಸಮಾನ ಸಂಬಂಧ ಕಾಯ್ದುಕೊಂಡಿದ್ದ ಮಧು ಈಡಿಗ ಸಮುದಾಯದ ಕೋಟಾದಲ್ಲಿ ಬಿ.ಕೆ.ಹರಿಪ್ರಸಾದ್‌ರಂಥ ಹಿರಿಯ ಮತ್ತು ದಿಲ್ಲಿ ದರ್ಬಾರಿನಲ್ಲಿ ಶ್ರಮದಾತರಿದ್ದ ಪ್ರಭಾವಿಯನ್ನು ಹಿಂದಿಕ್ಕಿ ಮಂತ್ರಿಗಿರಿ ಗಳಿಸಲು ಸಫಲರಾಗಿದ್ದಾರೆ. ಒಂದು ಹಂತದಲ್ಲಿ ಸಿದ್ದು ವಿರೋಧಿ ಹರಿ ಪರವಾಗಿ ಡಿಕೆಶಿ ವಕಾಲತ್ತು ಮಾಡಿದ್ದರೆನ್ನಲಾಗುತ್ತಿದೆ; ಆದರೆ ಮಲೆನಾಡು ಮತ್ತು ಉತ್ತರ ಕರಾವಳಿಯಲ್ಲಿ ಗಣನೀಯವಾಗಿರುವ ದೀವರ ಮೇಲೆ ಪ್ರಭಾವ ಬೀರಬಲ್ಲ ಯುವ ನಾಯಕ ಮಧು ಮಂತ್ರಿಯಾದರೆ ಫಾಯ್ದೆ ಜಾಸ್ತಿಯೆಂಬ ಲೆಕ್ಕಾಚಾರ ಸಿದ್ದು ಅವರದಾಗಿತ್ತೆಂಬ ಮಾತು ಕಾಂಗ್ರೆಸ್ ಬಿಡಾರದಿಂದ ಹೊರಬರುತ್ತಿದೆ. ಸ್ವಜಾತಿಗಳವರನ್ನು ಪ್ರಭಾವಿಸುವ ಸಾಮರ್ಥ್ಯ ಹರಿಗಿಂತಲೂ ಮಧುಗೆ ಜಾಸ್ತಿ ಎಂಬ ತರ್ಕ ಕರಾವಳಿ ಮತ್ತು ಮಲೆನಾಡಿನ ರಾಜಕೀಯ ಪಡಸಾಲೆಯಲ್ಲಿದೆ. ಜನಾರ್ದನ ಪೂಜಾರಿ, ಕಾಗೋಡು ತಿಮ್ಮಪ್ಪರಂಥ ಮುತ್ಸದ್ಧಿಗಳ ವಯೋ ಸಹಜ ನಿವೃತ್ತಿ, ಗೋಪಾಲ ಪೂಜಾರಿ, ವಿನಯ್‌ಕುಮಾರ್ ಸೊರಕೆ ಸೋಲು, ಮಾಲಿಕಯ್ಯ ಗುತ್ತೇದಾರ್ ಪಕ್ಷಾಂತರ ಮತ್ತು ಬೇಳೂರು ಗೋಪಾಲಕೃಷ್ಣ ಮತ್ತು ಭೀಮಣ್ಣ ನಾಯ್ಕ್‌ರಿಗೆ ಕ್ಷೇತ್ರದಾಚೆ ಪ್ರಭಾವ ಬೆಳೆಸಿಕೊಳ್ಳಲಾಗದ ನಿರ್ವಾತ ಸಂದರ್ಭದಲ್ಲಿ ಮಧು ಈಡಿಗ ಸಮುದಾಯದ ವರ್ಚಸ್ವಿ ಮುಂದಾಳಾಗಿ ಬೆಳೆಯುವ ಸೂಚನೆಗಳು ಗೋಚರಿಸುತ್ತಿವೆ.

ಮಧು ಉತ್ಸಾಹಿ ತರುಣ; ತಂದೆಯಂತೆ ಹಿಂದುಳಿದವರ ಮುಂದಾಳಾಗಬೇಕೆಂಬ ಒಳ ತುಡಿತದವರು. ಆದರೆ ಸ್ವಪಕ್ಷ ಮತ್ತು ವಿರೋಧ ಪಕ್ಷದಲ್ಲಿ ಘಟಾನುಘಟಿಗಳಿರುವ ಶಿವಮೊಗ್ಗ ರಾಜಕಾರಣದಲ್ಲಿ ಎಚ್ಚರಿಕೆಯ ಹೆಜ್ಜೆಗಳನ್ನಿಡಬೇಕಾದ ಪರಿಸ್ಥಿತಿಯಿದೆ. ಶಿವಮೊಗ್ಗ ಮತೀಯವಾಗಷ್ಟೇ ಅಲ್ಲ, ರಾಜಕೀಯವಾಗಿಯೂ ಸೂಕ್ಷ್ಮವೇ. ಹಿಂದು-ಮುಸ್ಲಿಮ್ ಎರಡೂ ಕಡೆ ಅತಿರೇಕಿಗಳಿರುವ ಶಿವಮೊಗ್ಗ ನಗರದಲ್ಲಿ ಕೋಮು ಸೌಹಾರ್ದ ಬೆಳೆಸುವ ಹೊಣೆಗಾರಿಕೆ ಮಧು ಮೇಲಿದೆ. ಯಾರದೋ ರಾಜಕೀಯ ತೆವಲಿಗೆ ಅಮಾಯಕರ ಬದುಕು ಬರ್ಬಾದ್ ಆಗಬಾರದು. ಅರಣ್ಯ ಸಾಗುವಳಿ ಮಾಡಿ ಬದುಕು ಕಟ್ಟಿಕೊಂಡಿರುವ ರೈತರ ಸಮಸ್ಯೆ ಶಾಶ್ವತ ಪರಿಹಾರ ಕಾಣಬೇಕಾಗಿದೆ. ಜಿಲ್ಲೆಯ ಆರ್ಥಿಕ ಮೂಲವಾದ ಅಡಿಕೆ ತೋಟಗಳಿಗೆ ತಗಲುತ್ತಿರುವ ನಾನಾ ನಮೂನೆಯ ರೋಗ, ಅಡಿಕೆ ನಿಷೇಧ ಭಯ, ವಿದೇಶಿ ಅಡಿಕೆ ಹಾವಳಿ ಮತ್ತು ಅಸ್ಥಿರ ಧಾರಣೆಯಿಂದ ತೋಟ ಮಾಡುವವರು ಕಂಗೆಟ್ಟಿದ್ದಾರೆ. ಕಸ್ತೂರಿರಂಗನ್ ವರದಿ ತೂಗುಗತ್ತಿ ಮಲೆನಾಡಿಗರನ್ನು ಸತಾಯಿಸುತ್ತಿದೆ. ಈ ಸವಾಲುಗಳನ್ನೆಲ್ಲ ಮಧು ಗಂಭೀರವಾಗಿ ಪರಿಗಣಿಸಿ ಜನಪರವಾಗಿ ಉತ್ತರಿಸಿದರಷ್ಟೇ ಶಿವಮೊಗ್ಗದ ರಾಜಕಾರಣದಲ್ಲಿ “ಸ್ಥಿರ”ವಾಗಲು ಸಾಧ್ಯ ಎಂಬ ಮಾತು ಕೇಳಿಬರುತ್ತಿದೆ.

ಭೀಮಣ್ಣ ನಾಯ್ಕ್

ಸಚಿವ ಮಧುರವರಿಗೆ ಸಿಕ್ಕಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯೂ ಸಹ ಗಂಭೀರ ಹೋಮ್ ವರ್ಕ್‌ನ ಅನಿವಾರ್ಯತೆಯದ್ದಾಗಿದೆ. ಹಿಜಾಬ್‌ನಂಥ ಅನವಶ್ಯಕ ವಿವಾದವನ್ನು ಹಿಂದಿನ ಬಿಜೆಪಿ ಸರಕಾರ ಸೃಷ್ಟಿಸಿಹೋಗಿದೆ; ಎಳೆಯರ ಮನಸ್ಸು ಕೆಡಿಸುವ ಕೇಸರಿ ಕೆಸರನ್ನು ಪಠ್ಯಪುಸ್ತಕದಲ್ಲಿ ತುಂಬಲಾಗಿದೆ. ಈ ಸಿಕ್ಕುಗಳನ್ನೆಲ್ಲ ಮಧು ಸೂಕ್ಷ್ಮವಾಗಿ ಬಿಡಿಸಬೇಕಾಗಿದೆ. ಸರಕಾರಿ ಶಾಲೆಗಳು ದುಬಾರಿ ಖಾಸಗಿ ಕಾನ್ವೆಂಟ್‌ಗಳ ಜತೆ ಪೈಪೋಟಿ ನಡೆಸಲಾಗದೆ ಸೋಲುತ್ತಿವೆ. ಕನ್ನಡ ಮಾಧ್ಯಮದಲ್ಲಿ ಕಲಿತರೆ ಹೊಟ್ಟೆಪಾಡಿನ ಉದ್ಯೋಗಕ್ಕೆ ತೊಂದರೆ ಇಲ್ಲ ಎಂಬಂಥ ವಾತಾವರಣ ಸೃಷ್ಟಿ ಆಗಬೇಕಿದೆ.

ಬಂಗಾರಪ್ಪ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ಬಂದಿರುವ ಗ್ರಾಮೀಣ ಕೃಪಾಂಕ-ಗ್ರಾಮೀಣ ಮೀಸಲಾತಿಯಲ್ಲಿನ ನ್ಯೂನತೆಯನ್ನು ಶಿಕ್ಷಣ ಸಚಿವ ಮಧು ಸರಿಪಡಿಸಬೇಕಾಗಿದೆ. ಬಂಗಾರಪ್ಪ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಈ ಕ್ರಾಂತಿಕಾರಿ ನಿಯಮ ರೂಪಿಸಿದ್ದರು. ಆದರೆ ಗ್ರಾಮೀಣ ಮೀಸಲಾತಿಯನ್ನು ಆಧುನಿಕ ಸಕಲ ಸೌಲಭ್ಯದ ಶಿಕ್ಷಣ ಪೂರೈಸಿರುವ ಅನರ್ಹ ನಗರವಾಸಿಗಳು ಕೂಡ ಲಪಟಾಯಿಸುತ್ತಿದ್ದಾರೆ. ಹಾಸ್ಟೆಲ್ ಮತ್ತಿತರ ಶೈಕ್ಷಣಿಕ ಸೌಲಭ್ಯದ ಕೊರತೆಯಿಂದಾಗಿ ಅನಿವಾರ್ಯವಾಗಿ ಪಟ್ಟಣದ ಶಾಲೆಯಲ್ಲಿ ಕಲಿತ ಅಸಹಾಯಕ ಹಳ್ಳಿಗಾಡಿನ ಅಭ್ಯರ್ಥಿಗಳಿಗೆ ಗ್ರಾಮೀಣ ಮೀಸಲಾತಿ ಸಿಗುತ್ತಿಲ್ಲ; ಗ್ರಾಮೀಣ ಸಮಸ್ಯೆ-ಸಂಕಷ್ಟ ಒಂಚೂರೂ ಗೊತ್ತಿಲ್ಲದ, ನಗರದ ಸಕಲ ಸವಲತ್ತಲ್ಲಿ ಬೆಳೆದ ವಿದ್ಯಾರ್ಥಿಗಳು, ನಗರದ ಅಂಚಿನ ಹೈ-ಫೈ ಶಾಲೆಯಲ್ಲಿ ವಿದ್ಯಾರ್ಜನೆ ಮಾಡಿದರೂ ಅಂಥವರಿಗೆ ಗ್ರಾಮೀಣ ಮೀಸಲಾತಿ ಸಿಗುತ್ತಿದೆ. ಶಾಲಾ ಕಟ್ಟಡ ಗ್ರಾಮೀಣ ಪ್ರದೇಶದಲ್ಲಿರುವ ಸಂಗತಿಯಷ್ಟೇ ಗ್ರಾಮೀಣ ಮೀಸಲಾತಿ ಮಾನದಂಡ ಆಗಿರುವುದು ಸಾಮಾಜಿಕ ಅನ್ಯಾಯವೇ ಸರಿ. ವಿದ್ಯಾರ್ಥಿಗಳ ಗ್ರಾಮೀಣ ಹಿನ್ನೆಲೆ ಮಾನದಂಡ ಆಗಬೇಕೇ ಹೊರತು ಶಾಲೆಯ ಭೌತಿಕ ಇರುವಿಕೆ ಅಲ್ಲ. ಈ ವಿಪರ್ಯಾಸ ಶಿಕ್ಷಣ ಮಂತ್ರಿ ಮಧು ಬಂಗಾರಪ್ಪಗೆ ಅರ್ಥವಾದೀತು ಎಂಬ ನಂಬಿಕೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...