Homeಕರ್ನಾಟಕನಮ್ಮ ತಾಲೂಕಾಫೀಸು ಏನಾಗಿದೆ ಗೊತ್ತೆ!

ನಮ್ಮ ತಾಲೂಕಾಫೀಸು ಏನಾಗಿದೆ ಗೊತ್ತೆ!

- Advertisement -
- Advertisement -

ನನಗೆ ಪಿತ್ರಾರ್ಜಿತವಾಗಿ ಬಂದ ಎರಡೆಕರೆ ಬಾರೆ ಜಮೀನಿನ ನಡುವೆ ಒಂದು ಕೋಳಿ ಫಾರಂ ಮಾಡಿದೆ. ಇದು ಸ್ವಂತ ತೀರ್ಮಾನವಲ್ಲ; ಯಾರೂ ಮನೆಹಾಳರು ಕೊಟ್ಟ ಸಲಹೆ. ಕೋಳಿ ಫಾರಂ ತಯಾರಾಗುತ್ತಿದ್ದಂತೆ ಜನಗಳು ನನ್ನ ಈ ಸ್ಥಿತಿಗೆ ಮರುಗಿದರು. ಶಿವಮೊಗ್ಗದಲ್ಲಿದ್ದುಕೊಂಡು ಮನೆ ಸೈಟು ಏನೇನೊ ಮಾಡಿಕೊಂಡು ಜೋರಾಗಿದ್ದಾನೆಂದು ಭಾವಿಸಿದ್ದ ಜನಕ್ಕೆ ಕೋಳಿ ಸಾಕಿ ಜೀವನ ಮಾಡಲು ಬಂದ ನನ್ನನ್ನು, ಬೆನ್ನಹಿಂದೆ ಆಡಿಕೊಂಡು ಕನಿಕರದಿಂದ ನಗುವುದು ಕ್ರಮೇಣ ನನ್ನ ಗಮನಕ್ಕೆ ಬಂತು. ಆಗ ನಾನು ಈ ಕೋಳಿ ಸಾಕುವುದು ತುಂಬ ಹೀನಾಯವಾದ ವೃತ್ತಿಯೇನಲ್ಲ ಎಂಬುದಕ್ಕೆ ಉದಾಹರಣೆಗಳನ್ನು ನೆನಪಿಸಿಕೊಳ್ಳುತ್ತಿದ್ದೆ.

ನಮ್ಮ ದೇಶದ ಶ್ರೇಷ್ಠ ಸರೋದ್ ವಾದಕ್‌ರಲ್ಲಿ ರಾಜೀವ ತಾರಾನಾಥರೂ ಒಬ್ಬರು. ಅವರು ಬರೀ ಸರೋದ್ ವಾದಕರಲ್ಲ, ಇಂಗ್ಲಿಷ್ ಫ್ರೊಫೆಸರ್ ಕೂಡ. ಅಂತಹ ವ್ಯಕ್ತಿ ಮದರಾಸಿನ ಯೂನಿವರ್ಸಿಟಿಯಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿದ್ದು, ಕೋಳಿ ಸಾಕಿ ಅಂಗಡಿಗೆ ಮೊಟ್ಟೆ ಕೊಡುತ್ತಿದ್ದರು. ತಮಿಳಿನ ಪ್ರಖ್ಯಾತ ನಟಿ ಕೆ.ಆರ್. ವಿಜಯ ತಮ್ಮ ಮನೆ ಮೇಲೆ ಕೋಳಿ ಸಾಕಿದ್ದರು. ಅಷ್ಟಕ್ಕೂ ಕೋಳಿ ಸಾಕುವುದು ನನಗೇನು ಹೊಸದಲ್ಲ. ಶಿವಮೊಗ್ಗದ ಪ್ರತಿಷ್ಠಿತ ಬಡಾವಣೆಯಲ್ಲಿದ್ದ ನನ್ನ ಮನೆಯಲ್ಲಿ ಕೋಳಿ ಸಾಕಿದ್ದೆ; ನನ್ನ ಈ ಕಸುಬು ನೋಡಿ ಅಕ್ಕಪಕ್ಕದ ಮನೆಯವರೂ ಸಾಕಿದ್ದರು. ನನ್ನ ಮಗನ ಜೊತೆ ಬಂದ ಸಹಪಾಠಿಗಳು ಕೋಳಿ ಕಸ ನೋಡಿ ಹೇಸಿಕೊಂಡಿದ್ದರಿಂದ ಅನಿವಾರ್ಯವಾಗಿ ವಾರಕ್ಕೊಂದರಂತೆ ಕೊಂದು ಖಾಲಿ ಮಾಡಿದೆ. ಆದರೂ ಜನಕ್ಕೆ, ಇವೆಲ್ಲ ಸಂಗತಿಗಳು ನಾನು ಹಾಳಾಗಿ ಬಂದಿರುವುದಕ್ಕೆ ಕೊಡುತ್ತಿರುವ ಸಬೂಬುಗಳಂತೆ ಕಂಡವೇ ಹೊರತು, ಬದುಕಿನ ಪ್ರಯೋಗಶೀಲತೆಯಾಗಿ ಕಾಣಲಿಲ್ಲ.

ಅಂತೂ ಕೋಳಿ ಶೆಡ್ ಮುಗಿಯಿತು. ನೂರೈವತ್ತಡಿ ಉದ್ದದ ಅದರಲ್ಲಿ ಮೂರುಸಾವಿರ ಕೋಳಿ ಸಾಕಬಹುದಿತ್ತು. ಕೋಳಿಗಳಿಗೇನೋ ಜಾಗವಾಯ್ತು. ನಾನಿರಲು ಒಂದು ಕುಟೀರ ಬೇಡವೆ? ಅದಕ್ಕಾಗಿ ಯೋಚಿಸುತ್ತಿದ್ದಾಗ, ಕೋಳಿ ಫಾರಂ ಕಟ್ಟಿದವನು, ’ಅಣ್ಣ ನೀವು ಸಾಹಿತಿ ಅಂತೀರಿ, ನಿಮಗಿಷ್ಟವಾದ ಕುಟೀರ ರೆಡಿ ಮಾಡುತ್ತೇನೆ. ಸಾಮಾನುಗಳು ಇಲ್ಲೇ ಇವೆ. ಕಟ್ಟುವ ಖರ್ಚಿಗಾಗಿ ಇನ್ನ ಐವತ್ತೈದು ಸಾವಿರ ಕೊಡಿ. ಋಷಿಗಳ ಕುಟೀರದಂತೆ ಮನೆ ಮಾಡಿಕೊಡ್ತೀನಿ’ ಅಂದ. ಅವನ ಮಾತಿಗೆ, ನಾನು ಇನ್ನ ಗಡ್ಡ ಮೀಸೆ ಬೆಳೆಸಿಕೊಳ್ಳುವುದು ಬಾಕಿ ಎಂದುಕೊಂಡು ಐವತ್ತೈದು ಸಾವಿರ ತೆಗೆದುಕೊಟ್ಟು ಕೊಟ್ಟಿಗೆಹಾರದಲ್ಲಿ ನಡೆವ ತೇಜಸ್ವಿಯವರ ಸೆಮಿನಾರ್‌ಗೆ ಹೋದೆ. ಅಲ್ಲಿಂದ ಬರುವಷ್ಟರಲ್ಲಿ ಕೋಳಿ ಶೆಡ್ ನಿರ್ಮಾಣದ ಮಂಜನ ಟೀಮು ಪರಾರಿಯಾಗಿತ್ತು. ಫೋನ್ ಮಾಡಿದರೆ ಸ್ವಿಚ್ ಆಫ್ ಮಾಡಿಕೊಂಡಿದ್ದ. ಅವನ ನಂಬಿಕೆದ್ರೋಹಕ್ಕೆ ಆಘಾತಗೊಂಡ ನಾನು ಕೋಳಿ ಫಾರಂನ ಸಹವಾಸ ತೊರೆದು ಸುಮ್ಮನಾದೆ. ಆದರೆ ನನಗೆ ಗೊತ್ತಿಲ್ಲದಂತೆ ಕೋಳಿ ಫಾರಂ ಚಾಲನೆಗೊಂಡು ರಾತ್ರಿಯಲ್ಲಾ ಬಾರ್&ರೆಸ್ಟ್ಟೊರೆಂಟಿನ ರೂಪ ಪಡೆದು ವಿಜೃಂಭಿಸತೊಡಗಿತು. ಆ ಪ್ರಾಂತ್ಯದ ಪಡ್ಡೆ ಹುಡುಗರಿಗೆ ಬಾರಲ್ಲಿ ಕುಳಿತು ಪಾರ್ಟಿ ಮಾಡುವುದು ದುಬಾರಿಯಾಗಿ ಕಂಡಿದ್ದರಿಂದ, ಅವರೆಲ್ಲ ಸುಸಜ್ಜಿತವಾದ ನೂರೈವತ್ತು ಅಡಿ ಫಾರಂ ಒಳಗೆ ಕುಡಿದುಕೊಂಡು ರಾತ್ರಿಯಲ್ಲಾ ಕಾರ್ಡ್ಸ್ ಆಡಿ ಹೋಗತೊಡಗಿದರು. ಜನರ ದೂರು ಕೇಳಿ ನಾನೊಮ್ಮೆ ಹೋಗಿ ನೋಡಿದರೆ ಚಾಪೆ, ದಿಂಬು, ಕಾರ್ಡ್ಸ್ ಜೊತೆಗೆ ನೂರಾರು ಬಾಟಲಿಗಳು ಅಲ್ಲಿ ಉರುಳಾಡುತ್ತಿದ್ದವು. ಈಚೆಗೆ ಬಾಟಲಿಗಳಿಗೆ ಬೆಲೆಯಿಲ್ಲದ್ದರಿಂದ ಅವು ಕುಡಿದ ಜಾಗದಲ್ಲೇ ಬಿದ್ದಿರುತ್ತವೆ. ಪೋಲಿ ಹುಡುಗರಾದರೆ ಅವನ್ನ ಪುಡಿಮಾಡಿ ಹೋಗಿರುತ್ತವೆ. ಬಾಟಲಿಯನ್ನು ಜೋಡಿಸಿದೆ. ಪಡ್ಡೆ ಹುಡುಗರು ಬೆಂಕಿ ಹಾಕಿಕೊಳ್ಳಲು ನಮ್ಮ ರಿಪೀಸ್ ಪಟ್ಟಿಗಳನ್ನ ಖಾಲಿ ಮಾಡಿದ್ದರು. ಅವರೆಲ್ಲಾ ಸೇರುವ ಗೇಟಿನ ಬಳಿ ಬಂದು, ’ಪಾಪ ಆ ಹುಡುಗರು ಅಲ್ಲಿ ಇಲ್ಲಿ ಕುಳಿತುಕೊಂಡು ಕುಡಿಯುವುದರ ಬದಲು ನನ್ನ ಫಾರಂನಲ್ಲಿ ಕುಡಿಯಲಿ ಬಿಡಿ, ಅದನ್ನ ಕಟ್ಟಿಸಿರುವುದೇ ಅದಕ್ಕಾಗಿ’ ಎಂದು ಜನರ ಮುಂದೆ ಅಂದೆ.

ನನ್ನ ಮಾತಿನ ನಂತರ ಈ ಸಮಾಜಕ್ಕೆ ಸವಾಲಾಗಿರುವ ಹುಡುಗರೆಲ್ಲಾ ಸೇರಿಕೊಂಡು ಅಲ್ಲಿ ಪಾರ್ಟಿ ಮಾಡತೊಡಗಿದವು. ಹಣ ಸಾಲದ್ದಕ್ಕೋ ಏನೂ ಬೋರ್‌ವೆಲ್ ಮಿಷನ್ನಿನ ಸ್ಟಾರ್ಟರ್ ಬಿಚ್ಚಿಕೊಂಡು ಹೋಗಿ ಮಾರಿಕೊಂಡಿದ್ದರು; ನಂತರ ಪೈಪು, ಹೀಗೆ ಕೋಳಿ ಶೆಡ್ಡಿನಲ್ಲಿದ್ದ ಮರ ಮುಟ್ಟು ಸ್ಟಾರ್ಟರ್ ಪೈಪು ಎಲ್ಲ ಖಾಲಿಯಾದವು. ಸಮಾಜದ ಹೊಸ ತಲೆಮಾರು ಯಕ್ಕುಟ್ಟಿ ಹೋಗಿರುವಾಗ ಇದನ್ನೆಲ್ಲಾ ಸಹಿಸಿಕೊಳ್ಳಬೇಕು ಅನಿಸಿತು. ಮತ್ತೊಂದು ದಿನ ಶೆಡ್ಡಿನೊಳಗೆ ಶಿವರಾಮೇಗೌಡರ ಹುಟ್ಟುಹಬ್ಬದ ಪ್ಲೆಕ್ಸ್ ಕಟ್ಟಿ ಭೀಕರವಾಗಿ ತಿಂದು ಕುಡಿದು ಕುಣಿದಾಡಿ ಹೋಗಿದ್ದರು. ಮತ್ತೊಬ್ಬ ಪೋನ್ ಮಾಡಿ, “ಅಣ್ಣಾ ಸುರೇಶ್ ಗೌಡ್ರು ನಮ್ಮ ಹುಡುಗರಿಗ್ಯಲ್ಲ ಪಾರ್ಟಿ ಕೊಡ್ತರಂತೆ. ಅದ್ಕೆ ನಿಮ್ಮ ಫಾರಂ ಜಾಗ ಚನ್ನಗ್ಯದೆ ಅಂತ ಹೇಳಿದ್ದೀವಿ, ಮಾಡಲೇನಣ್ಣ” ಅಂದ; ಅದಕ್ಕೆ ’ಮಾಡ್ರಪ್ಪ, ಅಂಗೆ ಶಿವರಾಮೇಗೌಡರ ಕಡಿಯೋರು ಮಾಡಿರೊ ಪಾರ್ಟಿ ಗಲೀಜನ್ಯಲ್ಲ ತೆಗೆದು ಕ್ಲೀನ್ ಮಾಡಿ. ನಿಮ್ಮ ಪಾರ್ಟಿನು ಚನ್ನಾಗಿ ನ್ಯಡಿಲಿ; ಅಂದೆ. ಕ್ರಮೇಣ ಆ ಕೋಳಿ ಫಾರಂ ಕಂಟ್ರಿ ಕ್ಲಬ್ಬಾಗಿ ಕಂಗೊಳಿಸತೊಡಗಿತು. ಈಚೆಗೆ ಉತ್ಸಾಹಿ ತರುಣನೊಬ್ಬ ಬಂದು, “ನಿಮ್ಮ ಕೋಳಿ ಫಾರಂನ ನಾನು ನಡೆಸಿಕೊಂಡು ಹೋಗುತ್ತೇನೆ, ಪಂಚಾಯ್ತಿಯಿಂದ ಪರಮಿಷನ್ ಕೊಡಿಸಿ” ಎಂದ. ಆತನ ಹಿನ್ನೆಲೆ ಕೆದಕಿದಾಗ ಕೋಳಿ ಫಾರಂ ನಡೆಸಿದ ಅನುಭವವಿತ್ತು; ಜೊತೆಗೆ ಶ್ರಮಜೀವಿ ಎಂದು ತಿಳಿಯಿತು. ಆ ಕೂಡಲೆ ನಾನು ನಮ್ಮ ಗ್ರಾಮ ಪಂಚಾಯ್ತಿ ಆಫೀಸಿಗೆ ಹೋಗಿ ಕಂಪ್ಯೂಟರ್ ಮುಂದೆ ಕುಳಿತ್ತಿದ್ದ ಪಿ.ಡಿ.ಒಗೆ ಕೋಳಿ ಫಾರಂಗೆ ಪರವಾನಗಿ ಬೇಕೆಂದು ಕೇಳಿದೆ. ಕಂಪ್ಯೂಟರ್‌ನಿಂದ ಈಕಡೆ ತಿರುಗಿಯೂ ನೋಡದ ಆತ, ’ಮಂಡ್ಯದ ಪರಿಸರ ಮಾಲಿನ್ಯ ತಡೆ ಇಲಾಖೆಯಿಂದ ಪರವಾನಗಿ ತನ್ನಿ’ ಎಂದ. ಇದೊಂದು ಅನಿವಾರ್ಯ ಕೆಲಸವಾದ್ದರಿಂದ ವಿಪರೀತ ದನ ಸಾಕಿರುವ ಧನಂಜಯ ಎಂಬ ಗೆಳೆಯನ ಕಾರಿಗೆ ಪೆಟ್ರೋಲ್ ತುಂಬಿಸಿಕೊಂಡು ಮಂಡ್ಯಕ್ಕೆ ಹೋದೆ. ಅಲ್ಲಿನ ಮಹಿಳಾ ಆಫೀಸರ್ ಒಬ್ಬರ ಎದುರು ನಿಂತು, “ನಾನು ಕೂಡ ಅಧಿಕಾರಿಯಾಗಿದ್ದವನು. ಮುಂದಿನ ದಿನಗಳನ್ನ ದೂಡಲು ಕೋಳಿ ಫಾರಂ ಮಾಡಿದ್ದೇನೆ, ಪರವಾನಗಿ ಕೊಡಿ ಮೇಡಂ” ಎಂದೆ. ಆಕೆಗೆ ಲಂಚ ಕೊಡಬೇಕಾಗುತ್ತದೇನೋ ಎಂದು ಹೆದರಿ ವಿಪರೀತ ಮಾತನಾಡಿದೆ. ಆಕೆ “ಎಷ್ಟು ಕೋಳಿ ಸಾಕ್ತಿರಿ” ಎಂದರು. “ಮೂರು ಸಾವುರ ಮೇಡಂ” ಎಂದೆ. “ಮೂರು ಸಾವಿರಕ್ಕೆ ನಮ್ಮ ಪರವಾನಗಿ ಬೇಕಿಲ್ಲ, ಅದಕ್ಕಿಂತ ಜಾಸ್ತಿ ಸಾಕಿದ್ರೆ ಬೇಕಾಗುತ್ತೆ. ಈ ಕಂಡೀಷನ್‌ಗಳ ಸುತ್ತೋಲೆ ತಗೊಳಿ, ಇದು ಆ ಪಿ.ಡಿ.ಓಗೆ ಗೊತ್ತಿರಬೇಕಿತ್ತು” ಎಂದು ಆ ಕಂಡೀಷನ್ ಪತ್ರವನ್ನ ಕೊಟ್ಟು ಕಳಿಸಿದರು.

ಇದಾದನಂತರ ತಹಸೀಲ್ದಾರರಿಂದ ಎನ್.ಓ.ಸಿ ಪಡೆದುಕೊಳ್ಳಬೇಕು. ಅವರು ಅದನ್ನ ಕೊಡಬೇಕಾದರೆ ವಿಲೇಜ್ ಅಕೌಂಟೆಂಟು ಸ್ಥಳ ಪರಿಶೀಲಿಸಿ ವಿವರ ಕೊಡಬೇಕು ಎಂದರು. ಪರಿಚಯವಿದ್ದ ವಿ.ಎ ಬಳಿ ಹೇಳಿದಾಗ ಆತ ಕೂಡಲೇ ಬರೆದುಕೊಟ್ಟರು. ಇನ್ನ ಅದನ್ನು ಪರಿಶೀಲಿಸಿ ರೆವಿನ್ಯೂ ಇನ್ಸ್‌ಸ್ಪೆಕ್ಟರ್ ಸಹಿಮಾಡಬೇಕು. ಆನಂತರ ತಹಸೀಲ್ದಾರ್ ಸಹಿ ಮಾಡಿದ ಮೇಲೆ ಅದು ಪಂಚಾಯ್ತಿ ಪರಿಶೀಲನೆಗೆ ಒಳಪಟ್ಟು ಪಂಚಾಯ್ತಿ ಮೀಟಿಂಗ್‌ನಲ್ಲಿ ಆ ಅರ್ಜಿಯ ಬಗ್ಗೆ ಚರ್ಚೆ ನಡೆದು ಪರವಾನಗಿ ಹೊರಬೀಳಬೇಕು ಎಂಬುದು ಗೊತ್ತಾಯಿತು. ಇಂತಹ ಕೆಲಸಗಳ ಜಾಲದೊಳಗೆ ಸಿಕ್ಕಿದ ಜನ ತಾಲ್ಲೂಕ್ ಆಫೀಸಿನ ತುಂಬ ಜಮಾಯಿಸಿದ್ದರು. ಕೆಲವರು ಅಲ್ಲಲ್ಲೇ ಕುಳಿತು ತಬರನ ಸಂಬಂಧಿಗಳಂತೆ ಕಣ್ಣುಬಿಡುತ್ತಿದ್ದರು. ಇಡೀ ತಾಲೂಕಾಫೀಸನ್ನು ಸುತ್ತಿ ಒಂದು ರವುಂಡ ಬಂದಾಗ ಯಾರೂ ತಮ್ಮತಮ್ಮ ಕರ್ತವ್ಯದ ಜಾಗದಲ್ಲಿರಲಿಲ್ಲ, ಎಲ್ಲೆಲ್ಲೋ ಹೋಗಿದ್ದರು. ರೆವಿನ್ಯೂ ಇನ್ಸ್‌ಪೆಕ್ಟರ್ ಮಿನಿ ವಿಧಾನಸೌಧದ ಎದುರಿಗಿರುವ ಟೀ ಸ್ಟಾಲಿನ ಗಾಡಿಯ ಟೈರಿಗೆ ತನ್ನ ಕಾಲನ್ನ ಒದೆದಿಟ್ಟುಕೊಟ್ಟುಕೊಂಡು ಬೀಡಿ ಸೇದುತ್ತಿದ್ದ. ಆತನ ಬಳಿಗೆ ಹೋದ ಗೆಳೆಯನೊಬ್ಬ ನನ್ನ ಪರಿಚಯವನ್ನ ವಿಶೇಷವಾಗಿ ಮಾಡಿದ. ಆದರೆ ಆ ರೆವಿನ್ಯೂ ಇನ್ಸ್‌ಪೆಕ್ಟರ್ ಮುಖದಲ್ಲಿ ಯಾವ ಬದಲಾವಣೆಯೂ ಕಾಣಲಿಲ್ಲ. ಬದಲಿಗೆ ಯಾವ ಸಂಕೋಚವು ಇಲ್ಲದೆ “ಎನ್.ಒ.ಸಿ ಸುಮ್ಮನೆ ಸಿಗಿತ್ತೇನ್ರಿ? ಕೋಳಿ ಫಾರಂನಲ್ಲಿ ಎಷ್ಟು ದುಡಿತೀರಿ ನೀವೆ ನೋಡಿಕೊಡಿ” ಎಂದ. ಒದ್ದುಬಿಡಬೇಕೆನಿಸಿತು, ಆದರೆ ಏನು ಮಾಡುವುದು? ಈಗ ನಂಜುಂಡಸ್ವಾಮಿಯವರೂ ಇಲ್ಲ, ರೈತ ಸಂಘವೂ ಛಿದ್ರವಾಗಿದೆ. ಅಂತೂ ನನ್ನನ್ನು ನಾನು ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತಿರುವಾಗ ಗೆಳೆಯ ಚೌಕಾಸಿ ಮಾಡಿ ಎರಡು ಸಾವಿರಕ್ಕೆ ಇಳಿಸಿದ. ಆ ನಂತರ ವಿ.ಎ ಕೊಟ್ಟಿದ್ದ ಅರ್ಜಿ ನೋಡಿ, ’ಯಾವ ಸೀಮೆ ವಿ.ಎ ಅವುನು? ತಲೆನೆ ಇಲವಲ್ರಿ. ನೋಡಿ ಇಲ್ಲಿ ಸಯಿನು ಮಾಡಿಸಿಕೊಂಡು ಬನ್ನಿ’ ಎಂದು ಅರ್ಜಿ ಎಸೆದ. ಅಲ್ಲಿಗೆ ವಿ.ಎ.ಗೆ ಮತ್ತು ಈತನಿಗೆ ’ತಿನ್ನುವುದರಲ್ಲಿ’ ಜಗಳವಿದೆ ಎಂಬುದು ತಿಳಿಯಿತು.

ವಿ.ಎ ಹುಡುಕುತ್ತ ಹೊರಟರೆ, ಆತ ಮಿನಿ ವಿಧಾನಸೌಧದ ಮೂರನೆ ಮಹಡಿಯಲ್ಲಿದ್ದ. ಯಾರಿಗೋ ಕಾಯುತ್ತಿರುವಂತೆ ಕಂಡ. ಅಷ್ಟರಲ್ಲಾಗಲೆ ತಾಲ್ಲೂಕು ಆಫೀಸು ಹಳ್ಳಿಗರಿಂದ ತುಂಬಿ ಹೋಗಿತ್ತು. ಕಾರಣ ಕೇಳಲಾಗಿ ಬಗರ್‌ಹುಕುಂ ಸಾಗುವಳಿ ಜಾಗವನ್ನ ಸಕ್ರಮ ಮಾಡಿಕೊಡುವ ಸುದ್ದಿಯನ್ನ ಒತ್ತುವರಿದಾರರಿಗೆ ತಿಳಿಸಲಾಗಿತ್ತು. ಅದರಲ್ಲಿ ಕೆಲವರು ಹಣದ ಸಮೇತ ತಾಲ್ಲೂಕು ಆಫೀಸಿಗೆ ದಾಳಿಯಿಟ್ಟಿದ್ದರು. ಭೂಮಿ ಅನುಭವಿಸಿದ ಆಧಾರದ ಮೇಲೆ ಒಂದು ಸಣ್ಣ ಮೊತ್ತ ವಿಧಿಸಿ ಸಕ್ರಮ ಮಾಡಿಕೊಡಬಹುದಾದ ಕೆಲಸಕ್ಕೆ ತಹಸೀಲ್ದಾರ ಎಕರೆಗೆ ಲಕ್ಷ ನಿಗದಿ ಮಾಡಿದ್ದ. ಇದು ಎಮ್ಮೆಲ್ಲೆ, ತಹಸೀಲ್ದಾರ, ರೆವುನ್ಯೂ ಇನ್ಸ್‌ಪೆಕ್ಟರ್ ಹಾಗೂ ವಿ.ಎ.ವರೆಗೆ ಶ್ರೇಣೀಕರಣದಲ್ಲಿ ಹಂಚಿಕೆಯಾಗಬೇಕಾದ ರೈತರ ಹಣ. ನಾವು ಹಾಗೇ ಲೆಕ್ಕಹಾಕಿದಾಗ ಶಾಸಕನಿಗೆ ಕೋಟ್ಯಂತರ ಸಂದಾಯವಾಗುವಂತೆ ಕಂಡಿತು.

ವಿ.ಎ ಸಹಿ ಪಡೆದು ಕೆಳಗಿಳಿದು ಬರುವಾಗ ತಹಸೀಲ್ದಾರ ರೈತನೊಬ್ಬನಿಗೆ ಉಪಕಾರ ಮಾಡುವ ದನಿಯಲ್ಲಿ, ’ಒಂದು ಲಕ್ಷ ತಗಂಬಾ, ಯಾರನೂ ಕರಕೊಂಡು ಬರಬ್ಯಾಡ, ಈಗ್ಲೆ ಹೇಳಿದ್ದಿನಿ’ ಎಂದು ಮೆಟ್ಟಲು ಹತ್ತಿ ತನ್ನ ಆಫೀಸು ಕಡೆ ಹೊರಟ. ವಿಚಾರಿಸಲಾಗಿ ಆತ ಪ್ರಭಾರ ತಹಸೀಲ್ದಾರ, ಹೊಸಬರು ಬರಬೇಕಿದೆ ಎಂದರು. ಭೂಮಿಗೆ ಬೆಲೆ ಬಂದಿರುವ ಈ ಸಮಯದಲ್ಲಿ ಒಂದು ಎಕರೆಗೆ ಲಕ್ಷ ಕೊಡುವುದು ದುಬಾರಿಯಾಗಿ ಕಾಣತ್ತಿರಲಿಲ್ಲ. ಅದಕ್ಕಾಗಿ ರೈತರು ಲಂಚಕೊಡಲು ನೂಕು ನುಗ್ಗಲಾದರು. ಇಂತಹ ಜಾತ್ರೆಯಲ್ಲಿ ತಹಸೀಲ್ದಾರ ನಮ್ಮ ಎನ್.ಒ.ಸಿ.ಗೆ ಸಹಿಮಾಡಲಾರ ಎಂದು ಅವರ ಪಿ.ಎ ಬಳಿ ಹೋದೆವು. ಆತ, ’ಸಹಿ ಮಾಡಿಸಿಟ್ಟಿರುತ್ತೇನೆ ನಾಳೆ ಬನ್ನಿ’ ಎಂದ. ವೈಯಕ್ತಿಕ ವಿಷಯ ಕೆದಕಲಾಗಿ, ಊರು ಹೂವಿನ ಹಡಗಲಿ ಎಂದು ಗೊತ್ತಾಯಿತು. ಎಂ.ಪಿ. ಪ್ರಕಾಶ್ ಮತ್ತು ನನ್ನ ಸಂಬಂಧ ಹೇಳಿದ್ದಲ್ಲದೆ, ’ಒಂದು ಪೋನ್ ಕರೆಗೆ ಓಗೊಟ್ಟು ಬಂದು, ನಮ್ಮೊಡನೆ ನಾಟಕ ಮಾಡಿ ಹೋದ ಅಪರೂಪದ ರಾಜಕಾರಣಿ; ಅಂತಹ ಒಬ್ಬನೇ ಒಬ್ಬ ರಾಜಕಾರಣಿ ಈಗಿಲ್ಲ, ಎಂದು ಮನಮುಟ್ಟುವಂತೆ ಕೊರೆದೆ’. ಆತನೂ ಮೆಚ್ಚುಗೆ ವ್ಯಕ್ತಪಡಿಸಿದ. ಆದರೆ ಗೆಳೆಯ ಧನಂಜಯ, ’ಗೌಡ್ರೇ ನಿಮ್ಮ ಇಂತಹ ಅನುಭವ ಈ ತಾಲ್ಲೂಕಾಫೀಸಲ್ಲಿ ನ್ಯಡಿಯಲ್ಲ, ಅದೇನು ಮಾತಾಡಿ’ ಎಂದ.

ನನಗೆ ಲಂಚಾವತಾರ ಅರಿವಿಗೆ ಬಂದು, “ನೋಡಿ ಇವರೆ ನಮ್ಮ ಪಕ್ಕದ ಕೋಳಿ ಫಾರಂನವುನು ಐದು ಸಾವಿರ ಕೊಟ್ಟು ಎನ್.ಒ.ಸಿ ತಂದವುನೆ. ನಮಿಗೂ ಅಂಗೆ ಮಾಡಿ’ ಎಂದೆ. ಆತ ಕೂಡಲೇ ಅರ್ಜಿ ಹಿಡಿದು ತಹಸೀಲ್ದಾರ ಛೇಂಬರಿಗೆ ಹೋಗಿ, ಹತ್ತೇ ನಿಮಿಷದಲ್ಲಿ ಸಹಿ ಮಾಡಿಸಿಕೊಂಡು ಬಂದ. ಆಗ ನಾನು ಮತ್ತೆ, ’ನೀವು ಎಂ.ಪಿ. ಪ್ರಕಾಶರ ಕ್ಷೇತ್ರದಿಂದ ಬಂದಿದ್ದೀರಿ. ಅವರ ಹೆಸರು ಹೇಳಿದ್ರೆ ಸಾಕು ಈ ನಾಡಲ್ಲಿ ನಿಮಗೆ ಗೌರವ ಸಿಗುತ್ತೆ. ಇಂತ ಜಾಗದಲ್ಲಿರದ್ದಕ್ಕಿಂತ ಅವರ ಕ್ಷೇತ್ರದ ಕಡೆ ಹೋಗಿ. ಬರ್ಲಾ ಸಾರ್ ಥ್ಯಾಂಕ್ಸ್” ಎಂದು ಹೇಳಿ ಎನ್.ಒ.ಸಿ ಹಿಡಿದು ಹೊರಟುಬಿಟ್ಟೆವು. ಆತ ಇನ್ನ ಮುಂದೆ ತಹಸೀಲ್ದಾರರ ಸಹಿಗೂ ಮೊದಲೇ ಬರಬೇಕಾದ ಬಾಕಿ ವಸೂಲಿ ಮಾಡಬೇಕೆಂದು ಆಲೋಚಿಸುತ್ತ ನಿಂತಂತೆ ಕಾಣಿಸಿತು.

ಇಡೀ ತಾಲ್ಲೂಕು ಆಫೀಸುಗಳ ಲಂಚಮಯವಾಗಿ ಅಮೇಧ್ಯದ ವಾಸನೆ ಬೀರತೊಡಗಿವೆ. ಇವುಗಳನ್ನ ಸರಿ ಮಾಡುವ ಶಕ್ತಿ ಶಾಸಕರಿಗಿದೆ. ಅವರು ವಾರಕ್ಕೊಮ್ಮೆ ತಾಲ್ಲೂಕಾಫೀಸಿನ ಆವರಣದಲ್ಲಿ ಬಂದು ಕುಳಿತರೆ ಸಾಕು ಜನರ ಕೆಲಸಗಳಾಗುತ್ತವೆ. ಸರಕಾರದ ಸಹವಾಸವೇ ಇಲ್ಲದೆ ಬದುಕುತ್ತಿದ್ದ ಕಾಲ ಹೋಯ್ತು; ಈಗ ಹಳ್ಳಿಗರಿಗಾಗಿ ಬಲೆ ಹೆಣೆದುಕೊಂಡು ಕುಳಿತ ಸರಕಾರಿ ಜೇಡಗಳು ಅಮಾನುಷವಾಗಿವೆ.

ನಾನು ಸರಕಾರದಿಂದ ಎನ್.ಒ.ಸಿ ಪಡೆದು ಅದನ್ನು ಪಂಚಾಯ್ತಿ ಆಫೀಸಿನಿಂದ ಪರವಾನಗಿಗೆ ಒಪ್ಪಿಸಿ ಕಾಯುತ್ತಿರುವಾಗಲೇ ಕೋಳಿ ಫಾರಂಗೆ ಮುಂದಾಲೋಚನೆಯಿಂದ ಬಹುದೊಡ್ಡ ನಾಗರಹಾವೊಂದು ಬಂದು ಸೇರಿಕೊಂಡಿತು. ನಮ್ಮನ್ನ ನೋಡಿ ಅದು ಯಾವ ಗಡಿಬಿಡಿಯನ್ನೂ ತೋರಲಿಲ್ಲ. ತಾನೇ 130 ಅಡಿ ಮನೆಕಟ್ಟಿಸಿಕೊಂಡ ಮಾಲೀಕನ ಗತ್ತಿನಲ್ಲಿ ವಿಹರಿಸುತ್ತಿದೆ. ತನ್ನಲ್ಲಿ ವಿಷವಿರುವ ಬಗ್ಗೆ ಅದಕ್ಕೆಷ್ಟು ಧಿಮಾಕಿದೆಯೆಂದರೆ ನನ್ನನ್ನು ಕೆಣಕಿದರೆ ಹುಷಾರು ಎಂಬಂತೆ ಬುಸುಗರಿದು ಫಾರಂ ಒಳಗಿರುವ ಕಲ್ಲಿನ ಪೊಟರೆಗೆ ಸಾವಧಾನವಾಗಿ ಹೋಗುತ್ತದೆ. ಇದನ್ನ ಕಂಡ ಉತ್ಸಾಹಿ ತರುಣ, ಕೋಳಿ ಫಾರಂ ನಡೆಸುತ್ತೇನೆ ಎಂದು ಮತ್ತೆ ಹೇಳಲಿಲ್ಲ. ಅವನು ಈಚೆಗೆ ನನಗೆ ಕಾಣಿಸುತ್ತಿಲ್ಲ!

ಬಿ. ಚಂದ್ರೇಗೌಡ

ಬಿ. ಚಂದ್ರೇಗೌಡ
ಲಂಕೇಶ್‌ರ ಪತ್ರಿಕೆಯಲ್ಲಿ ಬಯಲುಸೀಮೆಯ ಕಟ್ಟೆ ಪುರಾಣದ ಮೂಲಕ ಕನ್ನಡಿಗರೆಲ್ಲರ ಗಮನಕ್ಕೆ ಬಂದ ಚಂದ್ರೇಗೌಡರು ನಾಟಕಕಾರರು, ನಟರಷ್ಟೇ ಅಲ್ಲ ವಿಶಿಷ್ಟ ರಾಜಕೀಯ ನೋಟವುಳ್ಳವರೂ ಸಹಾ.
ಕರ್ನಾಟಕದ ಸಾಂಸ್ಕೃತಿಕ ಹಾಗೂ ರಾಜಕೀಯ ಇತಿಹಾಸದ ಆಗುಹೋಗುಗಳು ಅವರಲ್ಲಿ ದಾಖಲಾಗಿರುವ ಬಗೆಯೂ ವಿಶಿಷ್ಟವೇ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...