Homeಕರ್ನಾಟಕಉತ್ತರ ಕನ್ನಡ: ಬದಲಾದ ರಾಜಕೀಯ ಭೂಮಿಕೆ; ಸಂಸದ ಯಾರಾಗಬಹುದೆಂಬ ಲೆಕ್ಕಾಚಾರ

ಉತ್ತರ ಕನ್ನಡ: ಬದಲಾದ ರಾಜಕೀಯ ಭೂಮಿಕೆ; ಸಂಸದ ಯಾರಾಗಬಹುದೆಂಬ ಲೆಕ್ಕಾಚಾರ

- Advertisement -
- Advertisement -

ಉತ್ತರ ಕನ್ನಡದ ರಾಜಕಾರಣ ಮಗ್ಗಲು ಬದಲಿಸಿದೆ. ವಿಧಾನಸಭಾ ಚುನಾವಣೆ-2023ರ ಫಲಿತಾಂಶದ ಒತ್ತಡಕ್ಕೆ ಜಿಲ್ಲೆಯ ರಾಜಕೀಯ ಭೂಮಿಕೆಯಲ್ಲಿ ಅದಲುಬದಲಾಗಿದೆ. ಆಡಳಿತ ವಿರೋಧಿ ಪ್ರಚಂಡಮಾರುತ ಅಪ್ಪಳಿಸುವ ಆತಂಕದಲ್ಲಿದ್ದ ಬಿಜೆಪಿ ಮತೀಯ ಧ್ರುವೀಕರಣ ಅಥವಾ ಹಿಂದುತ್ವದ ಪವಾಡದ ಪ್ರತೀಕ್ಷೆಯಲ್ಲಿತ್ತು. ಆದರೆ ಬಿಜೆಪಿಯ ಧರ್ಮಕಾರಣದ ಅಸ್ತ್ರಗಳೆಲ್ಲವೂ ಮೊಂಡಾಗಿದ್ದವು; ಸಾಕ್ಷಾತ್ ಹಿಂದುತ್ವದ ಹರಿಕಾರ ಪ್ರಧಾನಿ ಮೋದಿಯವರೇ ಅಂಕೋಲೆಗೆ ಬಂದು ಪ್ರಚಾರ ಮಾಡಿದರೂ ಬಿಜೆಪಿಗೆ ಪ್ರಯೋಜನವಾಗಲಿಲ್ಲ. ಜನಾಕ್ರೋಶದ ಸುನಾಮಿಗೆ ಬಿಜೆಪಿ ತತ್ತರಿಸಿ ನೆಲಕಚ್ಚಿದೆ. ಸಂಘಟನಾತ್ಮಕ ಶಕ್ತಿ ಮತ್ತು ಸೈದ್ಧಾಂತಿಕ ಬದ್ಧತೆಗಳಿಲ್ಲದಿದ್ದರೂ ಕಮಲ ಪಡೆಯೊಳಗಿನ ಗುಂಪುಗಾರಿಕೆ ಹಾಗು ಆ ಪಕ್ಷದ ಶಾಸಕರು, ಸಂಸದ ಮತ್ತು ಸಚಿವರ ಬಗೆಗಿನ ಬೇಸರವೇ, ದುರ್ಬಲ ಕಾಂಗ್ರೆಸ್ ಪಾರ್ಟಿಗೆ ವರವಾಗಿದೆ. ಚುನಾವಣೆ ಮುಗಿದು ತಿಂಗಳು ಕಳೆದರೂ ಕಾಂಗ್ರೆಸ್ಸಿಗರಿಗೆ ಅನಿರೀಕ್ಷಿತ “ವಿಜಯಾಘಾತ”ದಿಂದ ಹೊರಬರಲಾಗುತ್ತಿಲ್ಲ; ಜನರಿಂದ ಸಾರಾಸಗಟಾಗಿ ತಿರಸ್ಕೃತವಾಗಿರುವ ಬಿಜೆಪಿಯ ಘಟಾನುಘಟಿಗಳ ಹಳಹಳಿಕೆ-ಒಳ ಶತ್ರುಗಳ ಮೇಲಿನ ಸಿಟ್ಟಿನ್ನೂ ತಣಿದಿಲ್ಲ.

ಸೋಲಿನ ಹೊಡೆತದಿಂದ ಜರ್ಜರಿತವಾಗಿರುವ ಬಿಜೆಪಿಯಲ್ಲಿ ಸಂಘನಿಷ್ಠ ಮೂಲ ನಿವಾಸಿಗಳು-ವಲಸಿಗರು ಮತ್ತು ನಿರಂತರವಾಗಿ ಅಧಿಕಾರ ಅನುಭವಿಸಿದ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯಂಥವರು-ಲಾಗಾಯ್ತಿನಿಂದ ಪೋಸ್ಟರ್ ಅಂಟಿಸುವ-ಬ್ಯಾನರ್ ಏರಿಸುವ ಮಟ್ಟದಲ್ಲೇ ಇರುವ “ಹಿರಿಯ”ರ ಸಂಘರ್ಷ ತಾರಕಕ್ಕೇರಿದೆ. ಇತ್ತ ಕಾಂಗ್ರೆಸ್ಸಿನಲ್ಲಿ ಒಂಭತ್ತನೇ ಬಾರಿ ಶಾಸಕನಾಗಿರುವ ಆರ್.ವಿ.ದೇಶಪಾಂಡೆ ಮಂತ್ರಿಗಿರಿ ಪಡೆಯಲು ವಿಫಲವಾಗಿರುವುದು ನಾನಾ ನಮೂನೆಯ ವ್ಯಾಖ್ಯಾನ ಹುಟ್ಟುಹಾಕಿದೆ. ಶೂದ್ರರ ದಿಕ್ಕುತಪ್ಪಿಸುವ ಮೇಲ್ವರ್ಗದ ತಂತ್ರಗಾರಿಕೆಯಿಂದ ಸತತ ಆರು ಬಾರಿ ಆಯ್ಕೆಯಾಗಿದ್ದ ಕಾಗೇರಿಯವರ ಹೀನಾಯ ಸೋಲು ಮತ್ತು ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲ ಮಂತ್ರಿ ಮಾಂಡಲೀಕರಾಗುತ್ತಿದ್ದ ಆರ್.ವಿ.ದೇಶಪಾಂಡೆಯವರಿಗೆ ಸಿದ್ದು ಸರಕಾರದಲ್ಲಿ ಈ ಸಲ ಸ್ಥಾನ ಸಿಗದಿರುವುದು ಜಿಲ್ಲೆಯ ರಾಜಕೀಯ ವಲಯದಲ್ಲಿ ರೋಚಕ ಚರ್ಚೆಗಳನ್ನು ಹುಟ್ಟುಹಾಕಿದೆ.

ವಿಶ್ವೇಶ್ವರ ಹೆಗಡೆ ಕಾಗೇರಿ

ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯುವುದು ಪಕ್ಕಾ ಆಗುತ್ತಿದ್ದಂತೆಯೆ ಉತ್ತರ ಕನ್ನಡದ ಜನರಲ್ಲಷ್ಟೇ ಅಲ್ಲ, ರಾಜಕೀಯ ಪಂಡಿತರಲ್ಲೂ ನಾಲ್ಕು ದಶಕದ ಪವರ್ ಪಾಲಿಟಿಕ್ಸ್‌ನಲ್ಲಿ ಪಳಗಿರುವ ದೇಶಪಾಂಡೆ ಮಂತ್ರಿಯಾಗುವುದು ಗ್ಯಾರಂಟಿ ಎಂಬ ಲೆಕ್ಕಾಚಾರ ಶುರುವಾಗಿತ್ತು. ದೇಶಪಾಂಡೆ ಇದು ತನ್ನ ಕಟ್ಟಕಡೆಯ ರಾಜಕೀಯ ಇನ್ನಿಂಗ್ಸ್ ಎನ್ನುತ್ತಾ ದಿಲ್ಲಿ ಮಟ್ಟದಲ್ಲಿಯೂ ಜೋರು ಲಾಬಿ ಮಾಡಿದ್ದರು. ಆದರೆ ದೇಶಪಾಂಡೆಗೆ ಮಂತ್ರಿಗಿರಿ ಕೊಡುವುದರಿಂದ ಕಾಂಗ್ರೆಸ್ಸಿಗೆ ರಾಜ್ಯದಲ್ಲಾಗಲಿ ಅಥವಾ ಉತ್ತರ ಕನ್ನಡದಲ್ಲಾಗಲಿ ಪೈಸೆ ಪ್ರಯೋಜನವಾಗದೆಂಬ ತರ್ಕವನ್ನು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮಂಡಿಸಿದ್ದರೆನ್ನಲಾಗುತ್ತಿದೆ. ಬಿಜೆಪಿಯ ಕಾಗೇರಿಯಂಥವರೊಂದಿಗೆ “ಹೊಂದಾಣಿಕೆ ರಾಜಕಾರಣ” ಮಾಡುತ್ತಾರೆಂದು ಆರೋಪಿತರಾಗಿರುವ ದೇಶಪಾಂಡೆಗೆ ಎಪ್ಪತ್ತರಾಚೆಯ ಇಳಿವಯಸ್ಸಿನಲ್ಲಿ ಪಕ್ಷಕಟ್ಟುವ ಚೈತನ್ಯವಿಲ್ಲ; ಸಂಘ ಸಿದ್ಧಾಂತಕ್ಕೆ ಸದಾ ಬದ್ಧರಾಗಿರುವ ಕೊಂಕಣಿಗರ ಮತಗಳನ್ನು ಕಾಂಗ್ರೆಸ್ಸಿಗೆ ತರುವ ಶಕ್ತಿಯೂ ಇಲ್ಲ; ಯುವ-ಉತ್ಸಾಹಿ ಶಾಸಕನೊಬ್ಬನಿಗೆ ಅವಕಾಶ ಕೊಟ್ಟರೆ ಪಕ್ಷ ಪ್ರಬಲ ಬಿಜೆಪಿಯನ್ನು ಎದುರಿಸಬಹುದೆಂಬುದು ಕಾಂಗ್ರಸ್ಸಿನ ನಿಷ್ಠಾವಂತ ಕಾರ್ಯಕರ್ತರ ಅಭಿಪ್ರಾಯವೂ ಆಗಿತ್ತು. ಇದೇ ಹೊತ್ತಿಗೆ, ಉತ್ತರ ಕನ್ನಡ ರಾಜಕೀಯದಲ್ಲಿ ತನ್ನ ಅಸ್ತಿತ್ವ ಕಳೆದುಕೊಳ್ಳುವಂತೆ ಮಾಡಿರುವ “ಹಳೆ ಹುಲಿ” ದೇಶಪಾಂಡೆಯವರನ್ನು ಬೋನಿಗೆ ಕೆಡವಲು ಮಾಜಿ ಸಂಸದೆ ಮಾರ್ಗರೆಟ್ ಆಳ್ವ ಹೈಕಮಾಂಡ್ ಸಂಪರ್ಕವನ್ನು ಬಳಸಿ “ಆಟ” ಆಡಿದ್ದರೆಂಬ ಮಾತುಗಳು ಕೇಳಿಬರುತ್ತಿವೆ.

ಈ ವಯೋಸಹಜ ಅಸಹಾಯಕತೆ ಮತ್ತು ಅಹಮ್ಮದ್ ಪಟೇಲ್ ನಂತರ ಹೈಕಮಾಂಡ್ ವಲಯದಲ್ಲಿ ಶಕ್ತಿಶಾಲಿ ಆಶ್ರಯದಾತರನ್ನು ಕಂಡುಕೊಳ್ಳಲಾಗದ ದೇಶಪಾಂಡೆಯವರಿಗೆ ಮಂತ್ರಿ ಸ್ಥಾನ ಗಿಟ್ಟಿಸಿಕೊಳ್ಳಲಾಗಿಲ್ಲ; ಇದರ ಸಂಪೂರ್ಣ ಅನುಕೂಲತೆ ಭಟ್ಕಳದ ಮಂಕಾಳು ವೈದ್ಯರಿಗಾಗಿ ಮೀನುಗಾರಿಕೆ ಮತ್ತು ಬಂದರು ಸಚಿವರಾದರು ಎಂದು ವಿಶ್ಲೇಷಿಸಲಾಗುತ್ತಿದೆ. ಮಂತ್ರಿ ಮಾಡಿಲ್ಲವೆಂದು ಬಂಡೇಳುವ ಇಲ್ಲವೇ ಮುನಿಸಿಕೊಂಡು ಕೂರುವ ಸ್ಥಿತಿಯಲ್ಲಿ ಈಗ ದೇಶಪಾಂಡೆಯವರಿಲ್ಲ. ಮತ್ತೆ ತವರು ಕ್ಷೇತ್ರ ಹಳಿಯಾಳದಲ್ಲಿ ಸ್ಪರ್ಧಿಸುವ ಯೋಚನೆಯೂ ಅವರಿಗಿಲ್ಲ. ಈಗವರ ಅಂತಿಮ ಆದ್ಯತೆಯೆಂದರೆ ಮಗ ಪ್ರಶಾಂತ ದೇಶಪಾಂಡೆಗೆ ರಾಜಕೀಯ ನೆಲೆ ಕಲ್ಪಿಸುವುದೊಂದೆ. ಹಳಿಯಾಳದಲ್ಲಿ ಮಗ ಪ್ರಶಾಂತ ಶಾಸಕನಾಗುತ್ತಾನೆಂಬ ಭರವಸೆ ದೇಶಪಾಂಡೆಯವರಿಗಿಲ್ಲ. ರಾಜಕಾರಣದ ಸಕಲ ಪಟ್ಟುಗಳನ್ನು ಬಲ್ಲ ದೇಶಪಾಂಡೆಯವರೇ ಹಳಿಯಾಳದಲ್ಲಿ ಕಳೆದ ಮೂರ್ನಾಲ್ಕು ಚುನಾವಣೆಯಲ್ಲಿ ಮೂರರಿಂದ ಐದು ಸಾವಿರ ಮತದಂತರದಿಂದ ದಡಸೇರಿ ನಿಟ್ಟುಸಿರುಬಿಡುತ್ತಿದ್ದಾರೆ. ಇಂಥದ್ದರಲ್ಲಿ ಹಳಿಯಾಳದ ಜನರ ನಂಬಿಕೆ-ಪ್ರೀತಿ ಗಳಿಸಲಾಗದ ಪ್ರಶಾಂತ್ ದೇಶಪಾಂಡೆಗೆ ಗೆಲುವು ಬಿಸಿಲ್ಗುದುರೆ ಎಂಬುದು ತಂತ್ರಗಾರಿಕೆಯ ರಾಜಕೀಯದ ಸುದೀರ್ಘ ದಾರಿ ಕ್ರಮಿಸಿರುವ ದೇಶಪಾಂಡೆಯವರಿಗೆ ಅರ್ಥವಾಗದ್ದೇನಲ್ಲ ಎಂಬ ಮಾತಗಳು ಜಿಲ್ಲೆಯ ರಾಜಕೀಯ ಕಟ್ಟೆಯಲ್ಲಿ ಸಾಮಾನ್ಯವಾಗಿದೆ.

ಮಗನಿಗೆ ಶಾಸಕನಾಗಿಸುವುದಕ್ಕಿಂತ ಸಂಸದನಾಗಿಸುವುದೇ ಸುಲಭ ಎಂಬ ಲೆಕ್ಕಾಚಾರ ದೇಶಪಾಂಡೆ ಹಾಕಿದ್ದಾರೆನ್ನಲಾಗುತ್ತಿದೆ. ಮುಂಬರುವ ಪಾರ್ಲಿಮೆಂಟ್ ಚುನಾವಣೆಯಲ್ಲಿ ಉತ್ತರಕನ್ನಡ ಕಾಂಗ್ರೆಸ್ ಟಿಕೆಟ್ ಮಗ ಪ್ರಶಾಂತರಿಗೆ ಕೊಡಿಸುವ ಪ್ಲಾನು ದೇಶಪಾಂಡೆ ಹಾಕಿದ್ದಾರೆ ಎನ್ನುವ ಗುಸುಗುಸು ಕಾಂಗ್ರೆಸ್ ಬಿಡಾರದಲ್ಲಿ ಬಿರುಸಾಗಿದೆ. 2014ರಲ್ಲಿ ಪಾರ್ಲಿಮೆಂಟಿಗೆ ಸ್ಪರ್ಧಿಸಿದ್ದ ಪ್ರಶಾಂತಗೆ ತನ್ನಪ್ಪ ಸಲುಹಿದವರೆ ಕೈಕೊಟ್ಟಿದ್ದರಿಂದ ದೊಡ್ಡ ಅಂತರದ ಮುಖಭಂಗ ಅನುಭವಿಸಬೇಕಾಗಿ ಬಂದಿತ್ತು. 2019ರಲ್ಲಿ ಮತ್ತೆ ಮಗನನ್ನು ಅಖಾಡಕ್ಕಿಳಿಸುವ ಧೈರ್ಯ ದೇಶಪಾಂಡೆ ಮಾಡಲಿಲ್ಲ. ಆಗ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 8 ಅಸೆಂಬ್ಲಿ ಕ್ಷೇತ್ರಗಳಲ್ಲಿ ಹಳಿಯಾಳದ ದೇಶಪಾಂಡೆ, ಯಲ್ಲಾಪುರದ ಹೆಬ್ಬಾರ್ ಮತ್ತು ಖಾನಾಪುರದ ಅಂಜಲಿ ನಿಂಬಾಳ್ಕರ್ ಮಾತ್ರ ಕಾಂಗ್ರೆಸ್ ಶಾಸಕರಾಗಿದ್ದರು; ಹೆಬ್ಬಾರ್ ಕಾಂಗ್ರೆಸ್‌ನಲ್ಲಿದ್ದರೂ ದೇಶಪಾಂಡೆಯವರ ಕಡುವಿರೋಧಿಯಾಗಿದ್ದರು.

ಪ್ರಶಾಂತ್ ದೇಶಪಾಂಡೆ

ಈ ಬಾರಿಯ ಪರಿಸ್ಥಿತಿ ದೇಶಪಾಂಡೆ ಪರಿವಾರಕ್ಕೆ ಕೊಂಚ ಆಶಾದಾಯಕವಾಗಿದೆ. ಕುಮಟಾ, ಖಾನಾಪುರ ಮತ್ತು ಯಲ್ಲಾಪುರ ಬಿಟ್ಟರೆ ಉಳಿದೈದು ಕಡೆ ಕಾಂಗ್ರೆಸ್ ಶಾಸಕರೇ ಇದ್ದಾರೆ. ಸಂಘಪರಿವಾದ ಕೆಂಗಣ್ಣಿಗೆ ತುತ್ತಾಗಿರುವ ಶಾಸಕ ದಿನಕರ ಶೆಟ್ಟಿ ಬಿಜೆಪಿಯಲ್ಲಿ ಇದ್ದೂ ಇಲ್ಲದಂತಿದ್ದಾರೆ. ಕೇವಲ 673 ಮತದಿಂದ ಎಮ್ಮೆಲ್ಲೆಯಾಗಿರುವ ದಿನಕರ ಶೆಟ್ಟಿ ಗೆಲುವಿನಲ್ಲಿ ದೆಶಪಾಂಡೆ ನಿರ್ಣಾಯಕ ಪಾತ್ರವಾಗಿದ್ದರೆನ್ನಲಾಗುತ್ತಿದೆ. ದಿನಕರ ಶೆಟ್ಟಿಯನ್ನು ಮನೆಗಟ್ಟುವ ಹಠದಲ್ಲಿದ್ದ ಬಿಜೆಪಿಯ ಜೀವಜೀವಾಳವಾಗಿರುವ ಕೊಂಕಣಿಗರು ಕೊನೆ ಕ್ಷಣದಲ್ಲಿ ಸ್ವಜಾತಿ ನಾಯಕಾಗ್ರೇಸ ದೇಶಪಾಂಡೆಯವರ ಫರ್ಮಾನಿಗೆ ಕಟ್ಟುಬಿದ್ದು ಮತ ಚಲಾಯಿಸಿದ್ದರಿಂದ ಅವರು ಬಚಾವಾದರೆಂದು ರಾಜಕೀಯ ಪಂಡಿತರ ಅಭಿಪ್ರಾಯ. ಈ ಅಂಶಗಳೆಲ್ಲ ದೇಶಪಾಂಡೆಯವರ ಮಗನನ್ನು ಲೋಕಸಭೆ ಅಖಾಡಕ್ಕಿಳಸಲು ಅನುಕೂಲಕರವಾಗಿವೆ ಎಂಬಂತೆ ಮೇಲ್ನೋಟದ ಲೆಕ್ಕಾಚಾರ ತೋರಿಸುತ್ತದೆ.

ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ-ವಿಧಾನಪರಿಷತ್ ಸದಸ್ಯ ಹರಿಪ್ರಸಾದ್ ತವರು ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದ ಮೇಲೆ ಒಂದೊಂದು ಕಣ್ಣಿಟ್ಟು ಕೂತಿದ್ದಾರೆಂದು ಕಾಂಗ್ರೆಸ್ಸಿಗರು ಹೇಳುತ್ತಾರೆ. ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬುಡಕಟ್ಟು ಹಾಲಕ್ಕಿ ಒಕ್ಕಲಿಗರು ಪ್ರಥಮ ಬಹುಸಂಖ್ಯಾತರಾದರೆ, ದ್ವಿತೀಯ ಬಹುಸಂಖ್ಯಾತರು ಮುಸ್ಲಿಮರು; ಆನಂತರದ ಸ್ಥಾನದಲ್ಲಿ ದೀವರ(ಈಡಿಗರು) ಮತ್ತು ಹವ್ಯಕರು(ಬ್ರಾಹ್ಮಣರು) ಇದ್ದಾರೆನ್ನಲಾಗುತ್ತಿದೆ. ಹಿಂದುತ್ವದ ಪ್ರಯೋಗಶಾಲೆಯಾದ ದಕ್ಷಿಣ ಕನ್ನಡದ ಅಸೆಂಬ್ಲಿ ಚುನಾವಣಾ ಫಲಿತಾಂಶ ನೋಡಿದರೆ ಈಡಿಗ (ಬಿಲ್ಲವ) ಸಮುದಾಯದ ಹರಿಪ್ರಸಾದ್‌ರಿಗೆ ದ.ಕ.ಕ್ಕಿಂತ ಉ.ಕ. ಬೆಟರ್ ಅಂಡ್ ಸೇಫ್ ಎಂದು ಭಾವಿಸುವ ಸಾಧ್ಯತೆಯೇ ಜಾಸ್ತಿ ಎನ್ನುವ ಮಾತು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಅರಣ್ಯ ಅತಿಕ್ರಮಣದಾರರಿಗೆ ಉಳುಮೆ ಹಕ್ಕು ಕೊಡಿಸಲು ಕಳೆದ ಮೂವ್ವತ್ತು ವರ್ಷದಿಂದ ಹೋರಾಟ ಕಟ್ಟಿರುವ ದೀವರ ಜಾತಿಯ ರವೀಂದ್ರ ನಾಯ್ಕ್, ಮೊನ್ನೆ ಮುಗಿದಿರುವ ವಿಧಾನಸಭೆ ಚುನಾವಣೆಯಲ್ಲಿ ಖಾನಾಪುರ ಕ್ಷೇತ್ರದಲ್ಲಿ ಆಗಾಧ ಅಂತರದಲ್ಲಿ ಸೋತಿರುವ ಮರಾಠ ಸಮುದಾಯದ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್, ಕಾರವಾರದ ಕೊಂಕಣಿ (ಜಿಎಸ್‌ಬಿ)ಗ-ಸುಪ್ರೀಮ್ ಕೋರ್ಟ್ ವಕೀಲ ದೇವದತ್ತ ಕಾಮತ್ ಮತ್ತು 2008ರ ಮೊಟ್ಟಮೊದಲ ಆಪರೇಷನ್ ಕಮಲಕ್ಕೆ ಒಳಗಾಗಿ ತನ್ನ ರಾಜಕೀಯ ಭವಿಷ್ಯವನ್ನೇ ಬರ್ಬಾದ್ ಮಾಡಿಕೊಂಡಿರುವ ಮಾಜಿ ಮಂತ್ರಿ ಕಾರವಾರದ ಆನಂದ ಅಸ್ನೋಟಿಕರ್ ಕಾಂಗ್ರೆಸ್ ಟಿಕೆಟ್ ಕನಸು ಕಾಣುತ್ತಿದ್ದಾರೆಂಬ ಸುದ್ದಿ ಸದ್ದು ಮಾಡುತ್ತಿರುವುದು ಜಿಲ್ಲೆಯಲ್ಲಿ ಕುತೂಹಲ ಕೆರಳಿಸುತ್ತಿದೆ.

ಇದನ್ನೂ ಓದಿ: ಶಾಲಾ ಮಕ್ಕಳಿಗೆ ಸೈಕಲ್ ನೀಡಿ, ಡೊನೇಶನ್ ಹಾವಳಿ ತಪ್ಪಿಸಿ: ಸಚಿವರಿಗೆ ಎಸ್‌ಎಫ್‌ಐ ಹಕ್ಕೊತ್ತಾಯ

ಪ್ರಶಾಂತ್ ದೇಶಪಾಂಡೆಗೆ ತಮ್ಮ ತಂದೆಯವರ ಬೆಂಗಳೂರು-ದಿಲ್ಲಿ ಹೈ-ಕಾಂಟಾಕ್ಟ್‌ಗಳೆ ಬಲವಾದರೆ, ಹರಿಪ್ರಸಾದ್‌ಗೆ ದಿಲ್ಲಿ ಹೈಕಮಾಂಡ್ ಜತೆ ನೇರ ಸಂಪರ್ಕವಿದೆ; ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮಡದಿ ಅಂಜಲಿಯವರ ಬೆನ್ನಿಗೆ ಮರಾಠರ ಲಾಬಿಯಿದೆ ಎಂಬ ಮಾತಿದೆ. ಹಿಜಾಬ್ ಪರ ಸುಪ್ರೀಮ್ ಕೋರ್ಟ್‌ನಲ್ಲಿ ವಾದಿಸಿದ್ದ ದೇವದತ್ತ ಕಾಮತ್ ಎಐಸಿಸಿಯ ಲೀಗಲ್ ಮ್ಯಾಟರ್ ನೋಡಿಕೊಳ್ಳುವುದರಿಂದ ನೇರ ರಾಹುಲ್ ಗಾಂಧಿಯವರ ನಂಟಿದೆ. ದೇಶಪಾಂಡೆ ಕೆಂಗಣ್ಣಿಗೆ ತುತ್ತಾಗಿ ಕಾಂಗ್ರೆಸ್ ಪ್ರವೇಶ ಸಾಧ್ಯವಾಗದೆ ತ್ರಿಶಂಕು”ಸ್ವರ್ಗ”ದಲ್ಲಿರುವ ಜೆಡಿಎಸ್ ಪಕ್ಷದ ಆನಂದ್ ಅಸ್ನೋಟಿಕರ್ ಮುಗಿದ ಅಸೆಂಬ್ಲಿ ಚುನಾವಣೆಯಲ್ಲಿ ತನ್ನ ಪ್ರಭಾವವಿರುವ ಜೋಯಿಡಾದಲ್ಲಿ ದೇಶಪಾಂಡೆ ಪರ ಪ್ರಚಾರ ಮಾಡಿದ್ದರು. ಈ “ಪಾಪ ಪ್ರಯಶ್ಚಿತ್ತ”ದಿಂದ ಕಾಂಗ್ರೆಸ್ ಪ್ರವೇಶ ಮತ್ತು ಟಿಕೆಟ್ ಎರಡನ್ನೂ ದೇಶಪಾಂಡೆ ಕೊಡಿಸುತ್ತಾರೆಂಬ ನಂಬಿಕೆಯಲ್ಲಿ ಅಸ್ನೋಟಿಕರ್ ಇದ್ದಾರೆಂಬ ಮಾತು ಕಾರವಾರದಲ್ಲಿ ಕೇಳಿಬರುತ್ತಿದೆ.

ಬಿಜೆಪಿ ಟಿಕೆಟಿಗಾಗಿ ಅರ್ಧ ಡಜನ್ ಆಕಾಂಕ್ಷಿಗಳು ಸರತಿ ಸಾಲು ಕಟ್ಟಿ ನಿಂತಿದ್ದಾರೆಂಬ ರೋಚಕ ಚರ್ಚೆ ಜಿಲ್ಲೆಯ ರಾಜಕೀಯ ಪಡಸಾಲೆಯಲ್ಲಾಗುತ್ತಿದೆ. ಒಂದು ಕಾಲದಲ್ಲಿ ಸಂಘ ಪರಿವಾರದ ಬೆಂಕಿ ಚೆಂಡು ಎನ್ನಲಾಗುತ್ತಿದ್ದ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಬಿಜೆಪಿಯಲ್ಲಿ ನೆಲೆ-ಬೆಲೆ ಇಲ್ಲದಂತಾಗಿದ್ದಾರೆ; ಬ್ರಾಹ್ಮಣ ಸಮುದಾಯದ ಕೇಂದ್ರ ಮಂತ್ರಿ ಪ್ರಹ್ಲಾದ್ ಜೋಶಿ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಬಿಜೆಪಿ ಮೇಲೆ ಹಿಡಿತ ಸಾಧಿಸುತ್ತಿದ್ದಂತೆಯೇ, ಅದೇ ಸಮುದಾಯದ ಅನಂತ್ ಹೆಗಡೆ ಸಾವಕಾಶವಾಗಿ ಮೂಲೆಗುಂಪಾದರೆನ್ನಲಾಗುತ್ತಿದೆ. ಮೋದಿ ಸರಕಾರದಲ್ಲಿ ಸಚಿವನಾಗಿದ್ದಾಗ, ನಾವು ಸಂವಿಧಾನ ಬದಲಿಸಲೆಂದೇ ಅಧಿಕಾರಕ್ಕೆ ಬಂದಿರುವುದು ಎಂಬ ವಿವಾದಾತ್ಮಕ ಭಾಷಣ ಬಿಗಿದು ಪಾರ್ಲಿಮೆಂಟಿನಲ್ಲಿ ಕ್ಷಮೆ ಕೇಳಿ ಕೇಸರಿ ಪಡೆಯ ನಾಯಕತ್ವವನ್ನು ಮುಜುಗರಕ್ಕೀಡುಮಾಡಿದ ನಂತರ ಅನಂತ್ ಬಿಜೆಪಿಯಲ್ಲಿ ಅವಜ್ಞೆ-ಅವಮಾನಕ್ಕೆ ಈಡಾಗುವಂತಾಯಿತೆಂದು ವ್ಯಾಖ್ಯಾನಿಸಲಾಗುತ್ತಿದೆ. ಇದರ ಬೆನ್ನಿಗೆ ಅನಂತ್ ಹೆಗಡೆಗೆ ಗಂಭೀರ ಆರೋಗ್ಯ ಸಮಸ್ಯೆಯೂ ಬಾಧಿಸತೊಡಗಿತು. ಪಾರ್ಟಿಯಲ್ಲಾಗುತ್ತಿರುವ ತಿರಸ್ಕಾರ ಮತ್ತು ಅನಾರೋಗ್ಯದಿಂದ ಹೈರಾಣಾದ ಅನಂತ್ ಹೆಚ್ಚು ಕಮ್ಮಿ ಒಂದೂವರೆ ವರ್ಷದಿಂದ ಬಿಜೆಪಿಯ ಮುಖ್ಯಭೂಮಿಕೆಯಿಂದ ಕಣ್ಮರೆಯಾಗಿದ್ದಾರೆ.

ಹರಿಪ್ರಸಾದ್

ಈ ಸಲದ ಅಸೆಂಬ್ಲಿ ಚುನಾವಣೆಯ ಅಖಾಡದಲ್ಲೆಲ್ಲೂ ಅನಂತ್ ಅಪ್ಪಿತಪ್ಪಿಯೂ ಕಾಣಿಸಲಿಲ್ಲ; ಬಿಜೆಪಿಯ ಸರ್ವೋಚ್ಚ ನಾಯಕ ಮೋದಿ, ಜಿಲ್ಲೆಯ ಅಂಕೋಲೆಗೆ ಬಂದರೂ ಮನೆಯಿಂದ ಹೊರಬರಲಿಲ್ಲ. ಪಕ್ಷದ ಹಿರಿಯರ ತಾತ್ಸಾರಕ್ಕೆ ತುತ್ತಾಗಿರುವಂತೆಯೇ, ಐದು ಬಾರಿ ಸಂಸದನಾಗಿ ಆಯ್ಕೆ ಮಾಡಿದರೂ ಐದು ಬಿಲ್ಲೆ ಪ್ರಯೋಜನ ಅನಂತ್ ಹೆಗಡೆಯಿಂದಾಗಿಲ್ಲ ಎಂಬ ಅಸಮಾಧಾನ ಕ್ಷೇತ್ರದಲ್ಲಿ ಮಡುಗಟ್ಟಿದೆ. ಈ ಎಂಟಿ-ಇನ್‌ಕಂಬೆನ್ಸ್ ಮತ್ತು ಅನಾರೋಗ್ಯ ಮುಂದಿಟ್ಟು ಅನಂತ್ ಹೆಗಡೆಗೆ 2024ರ ಚುನಾವಣೆಯಲ್ಲಿ ಕೇಸರಿ ಟಿಕೆಟ್ ಕಟ್ ಮಾಡಲಾಗುತ್ತದೆಂಬ ಸುದ್ದಿಗಳು ಪುಂಖಾನುಪುಂಖವಾಗಿ ಬಿತ್ತರವಾಗುತ್ತಿವೆ. ಹೆಗಡೆಯ ರಾಜಕೀಯ ಮತ್ತು ಖಾಸಗಿ ಚಟುವಟಿಕೆಗಳನ್ನು ಆಪ್ತವಾಗಿ ಬಲ್ಲವರೂ ಸಹ, ಈ ಬಾರಿ ಬಿಜೆಪಿ ಟಿಕೆಟ್ ಕೊಟ್ಟರೂ ಅವರು ಸ್ಪರ್ಧೆಗೆ ಸಿದ್ಧರಿಲ್ಲ ಎನ್ನುತ್ತಿದ್ದಾರೆ. ಆದರೆ ಹಿಂದಿನ ಎರಡು ಚುನಾವಣೆಯಲ್ಲೂ ಹೆಗಡೆ ಹೀಗೇ ತನಗೆ ಮತ್ತೆ ಎಂಪಿಯಾಗುವ ಇರಾದೆಯಿಲ್ಲ ಎಂದು ಸುದ್ದಿ ತೇಲಿಬಿಟ್ಟಿದ್ದರು; ಇದವರ ಟಿಕೆಟ್ ಪಡೆಯುವ ಟ್ಯಾಕ್ಟಿಕ್ ಎನ್ನುವವರೂ ಇದ್ದಾರೆ.

ಮೊನ್ನೆಯ ಚುನಾವಣೆಯಲ್ಲಿ ಶಿರಸಿ ಕ್ಷೇತ್ರದಲ್ಲಿ ಹೀನಾಯವಾಗಿ ಸೋತಿರುವ ಮಾಜಿ ಸ್ಪೀಕರ್ ಕಾಗೇರಿ, ಮಾಜಿ ಸಿ.ಎಂ ದಿವಂಗತ ರಾಮಕೃಷ್ಣ ಹೆಗಡೆ ದಾಯಾದಿ ಮೊಮ್ಮಗ ಸಿದ್ದಾಪುರದ ಶಶಿಭೂಷಣ ಹೆಗಡೆ, ಕಾರವಾರದ ಮಾಜಿ ಶಾಸಕಿ ರೂಪಾಲಿ ನಾಯ್ಕ್, ಯಲ್ಲಾಪುರ ಮೂಲದ ಪತ್ರಕರ್ತ ಹರಿಪ್ರಕಾಶ್ ಕೋಣೆಮನೆ ಮತ್ತು ಹಿಂದುತ್ವದ ಅಡಗೂಲಜ್ಜಿ ಕತೆಗಳ ಮೂಲಕ ಹೆಂಗ್ ಪುಂಗ್ ಲೀ ಎನ್ನಲಾಗುತ್ತಿರುವ ಹೊನ್ನಾವರ ಮೂಲದ ಚಕ್ರವರ್ತಿ ಸೂಲಿಬೆಲೆ ಕೇಸರಿ ಟಿಕೆಟ್ ಕಟಿಪಿಟಿಯಲ್ಲಿದ್ದಾರೆಂಬ ಮಾತುಗಳು ಜಿಲ್ಲೆಯಲ್ಲಿ ಕೇಳಿಬರುತ್ತವೆ.

ಎಬಿವಿಪಿ ಮತ್ತು ಯುವ ಮೋರ್ಚಾ (ಯೂತ್ ಬಿಜೆಪಿ) ಕೇಡರಿನ ಕಾಗೇರಿಗೆ ಕೇಶವ ಕೃಪಾದಲ್ಲಿ ಪ್ರಬಲ ಆಶ್ರಯದಾತರಿದ್ದಾರೆ. ಕಾಗೇರಿಯನ್ನೇ ನಂಬಿ ಬಿಜೆಪಿ ಸೇರಿದ್ದ ಶಶಿಭೂಷಣ ಹೆಗಡೆ ಈಗ ಸಂದಿಗ್ಧಕ್ಕೆ ಸಿಲುಕಿದ್ದಾರೆ. ಹಿಂದೆ ಕಾಗೇರಿ ಕಿರಿಕಿರಿ ತಾಳಲಾಗದೆ ಜೆಡಿಎಸ್ ಸೇರಿದ್ದರೆನ್ನಲಾದ ಶಶಿಭೂಷಣ ಹೆಗಡೆ ಎರಡು ಬಾರಿ ಕಾಗೇರಿ ವಿರದ್ಧ ಸ್ಪರ್ಧಿಸಿ ಸಣ್ಣ ಅಂತರದಲ್ಲಿ ಸೋತವರು. ಕಳೆದ ಚುನಾವಣೆ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಅದೇ ಕಾಗೇರಿ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದ ಶಶಿಭೂಷಣ್ ಹೆಗಡೆಗೆ ಎಂಪಿ ಟಿಕೆಟ್ ಖಾತ್ರಿ ಮಾಡಲಾಗಿದೆ ಎನ್ನಲಾಗಿತ್ತು. ಹಿಂದೆ ಹಿರಿಯ ಬಿಜೆಪಿ ಮುಂದಾಳು ಡಾ.ಎಂ.ಪಿ.ಕರ್ಕಿಯನ್ನು ಹಿಮ್ಮೆಟ್ಟಿಸಲು ಶಶಿಭೂಷಣ ಹೆಗಡೆಯನ್ನು ಬಳಸಿಕೊಂಡು ಕಾಗೇರಿ ಬಿಸಾಕಿದ್ದರು ಎಂಬ ಮಾತು ಜಿಲ್ಲೆಯ ರಾಜಕೀಯ ರಂಗದಲ್ಲಿ ಕೇಳಿಬಂದಿತ್ತು. ಈಗ ಮತ್ತೆ ಅಂಥದ್ಧೇ ಪರಿಸ್ಥಿತಿ ಬಿಜೆಪಿಯಲ್ಲಿ ನಿರ್ಮಾಣವಾಗುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಪತ್ರಕರ್ತ ಹರಿಪ್ರಕಾಶ್ ಕೋಣೆಮನೆ ಮತ್ತು ಮತೀಯ ಮಸಲತ್ತಿನ ಮಾತುಗಾರ ಮಿಥುನ್ ಶೇಟ್ ಯಾನೆ ಸೂಲಿಬೆಲೆ ಚಕ್ರವರ್ತಿ ಸಂಘ ಪರಿವಾರದ ಕಣ್ಮಣಿಗಳು. ತುಂಬ ಹಿಂದಿನಿಂದ ಉತ್ತರ ಕನ್ನಡದ ಸಂಸದನಾಗುವ ಆಸೆಯಲ್ಲಿದ್ದಾರೆ ಎನ್ನಲಾಗಿರುವ ಸೂಲಿಬೆಲೆ, ಅನಂತ್ ಹೆಗಡೆ ಕೆಲಸಕ್ಕೆ ಬಾರದ ಎಂಪಿ ಎಂಬರ್ಥ ಹೊರಹೊಮ್ಮುವ ಮೂದಲಿಕೆ ಮಾಡಿದ್ದೂ ಇದೆ; ತನ್ನ ಅಂಕಣದಲ್ಲೂ ಉತ್ತರ ಕನ್ನಡದ ಪ್ರಗತಿಯ ಪ್ರಸ್ತಾಪಮಾಡಿ ಅಣಕವಾಡಿದ್ದೂ ಇದೆ. ಮಾಜಿ ಶಾಸಕಿ ರೂಪಾಲಿ ನಾಯ್ಕ್ ಯಡಿಯೂರಪ್ಪರ ಬಲ ನೆಚ್ಚಿ ಕೂತಿದ್ದಾರೆ.

ಒಟ್ಟಿನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯ ಎಂಪಿ ಟಿಕೆಟ್ ಪೈಪೋಟಿ ವರ್ಷದ ಮೊದಲೇ ರೋಚಕತೆ ಸೃಷ್ಟಿಸಿಬಿಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...