ಬೌದ್ಧ ಧರ್ಮಕ್ಕೆ ಅಲ್ಪಸಂಖ್ಯಾತರ ಆಯೋಗದಲ್ಲಿ ಪ್ರಾತಿನಿಧ್ಯ ಕಲ್ಪಿಸಲಾಗುವುದು ಎಂದು ಬೌದ್ಧ ಗುರುಗಳ ನಿಯೋಗಕ್ಕೆ ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಭರವಸೆ ನೀಡಿದ್ದಾರೆ.
ಬೌದ್ಧ ಗುರುಗಳ ನಿಯೋಗವು ಬುಧವಾರ ಸಚಿವರನ್ನು ಭೇಟಿ ಮಾಡಿ ಅಲ್ಪಸಂಖ್ಯಾತರ ಆಯೋಗದಲ್ಲಿ ಪ್ರಾತಿನಿಧ್ಯ ನೀಡಬೇಕು ಎಂದು ಮನವಿ ಮಾಡಿದರು. ಮನವಿ ಸ್ವೀಕರಿಸಿದ ಬಳಿಕ ಮಾತನಾಡಿದ ಜಮೀರ್, ‘ಬೌದ್ಧ ಸಮುದಾಯದ ವಿದ್ಯಾರ್ಥಿಗಳು ಜಾತಿ ಪ್ರಮಾಣಪತ್ರ ಮತ್ತು ಮತದಾರರ ಗುರುತಿನ ಚೀಟಿ ಪಡೆಯಲು ಎದುರಿಸುತ್ತಿರುವ ಸಮಸ್ಯೆ ಬಗೆಹರಿಸಲು ಸಂಬಂಧಪಟ್ಟ ಸಚಿವರ ಜತೆ ಚರ್ಚಿಸಲಾಗುವುದು’ ಎಂದು ತಿಳಿಸಿದರು.
”ಬೌದ್ಧ ಧರ್ಮದ ವಿದ್ಯಾರ್ಥಿಗಳಿಗೆ ಹುಣಸೂರಿನ ಬೈಲುಕುಪ್ಪೆಯಲ್ಲಿ ಸಮುದಾಯ ನಡೆಸುತ್ತಿರುವ ಶಿಕ್ಷಣ ಸಂಸ್ಥೆಗೆ ಕಾಲೇಜು ಹಾಗೂ ಉನ್ನತ ಶಿಕ್ಷಣ ಆರಂಭಿಸಲು ಅನುಮತಿ ದೊರಕಿಸಿಕೊಡಲಾಗುವುದು. ಅಲ್ಪಸಂಖ್ಯಾತ ಆಯೋಗ, ನಿರ್ದೇಶನಾಲಯ, ಅಭಿವೃದ್ಧಿ ನಿಗಮ ಹೀಗೆ ಎಲ್ಲ ಕಡೆ ಸಮುದಾಯಕ್ಕೆ ಪ್ರಾತಿನಿಧ್ಯ ಕಲ್ಪಿಸಿದರೆ ಸಮಸ್ಯೆ ಪರಿಹರಿಸಲು ಅನುಕೂಲವಾಗಲಿದೆ. ಒಂದು ವರ್ಷದಲ್ಲಿ ಎಲ್ಲ ಬೇಡಿಕೆಗಳನ್ನು ಈಡೇರಿಸುತ್ತೇವೆ ಎಂದು ಸಚಿವರು ನಿಯೋಗಕ್ಕೆ ಆಶ್ವಾಸನೆ ನೀಡಿದ್ದಾರೆ.
ಇನ್ನು, ಇದೇ ವೇಳೆ ನಿಯೋಗವು, ಮೈಸೂರಿನ ಮುಡಾದಲ್ಲಿ ಶೈಕ್ಷಣಿಕ ಉದ್ದೇಶಕ್ಕೆ ನಿವೇಶನ ನೀಡಬೇಕು ಮತ್ತು ದಲೈ ಲಾಮಾ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುತ್ತಿರುವ ಚೋದ್ದಿ ತಾಶಿ ಲುಮೋ ಸಾಂಸ್ಕೃತಿಕ ಸೊಸೈಟಿಗೆ ಅನುದಾನ ನೀಡಬೇಕು ಎಂದು ಮನವಿ ಮಾಡಿತು. ಇದಕ್ಕೆ ಸ್ಪಂದಿಸಿದ ಸಚಿವರು ತಕ್ಷಣ ಅನುದಾನ ನೀಡುವುದಾಗಿ ಭರವಸೆ ನೀಡಿದರು.
ಬೌದ್ಧ ಗುರುಗಳ ನಿಯೋಗವು ಸಚಿವರಿಗೆ ಟಿಬೆಟಿಯನ್ ಸಾಂಪ್ರದಾಯಿಕ ಗೌರವ ನೀಡಿ ಸನ್ಮಾನಿಸಿತು. ಬೆಂಗಳೂರಿನ ಗಾಂಧಿ ನಗರದಲ್ಲಿರುವ ಮಹಾಬೋಧಿ ಸೊಸೈಟಿಗೆ ಭೇಟಿ ನೀಡುವಂತೆ ಆಹ್ವಾನಿಸಿತು. ದಕ್ಷಿಣ ಭಾರತದ ಸೆಂಟ್ರಲ್ ಟಿಬೆಟಿಯನ್ ಆಡಳಿತ ವಿಭಾಗದ ಪ್ರತಿನಿಧಿಗಳು ನಿಯೋಗದಲ್ಲಿದ್ದರು.
ದರ್ಗಾ ಮಸೀದಿಗಳಿಗೆ ಕಾಣಿಕೆ ಸಲ್ಲಿಸಲು ಇ-ಹುಂಡಿ ಸೇವೆ ಆರಂಭ
ದರ್ಗಾ ಹಾಗೂ ಮಸೀದಿಗಳಲ್ಲಿ ಭಕ್ತರ ಕಾಣಿಕೆ ಹಣ ಸಂಗ್ರಹಿಸಲು ಸರ್ಕಾರ ಈಗ ಇ ಹುಂಡಿ ಸೇವೆಯನ್ನು ಜಾರಿಗೆ ತಂದಿದೆ. ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಈ ಸೇವೆಗೆ ಚಾಲನೆ ನೀಡಿದ್ದಾರೆ.
ಮಂಗಳವಾರ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಬೋರ್ಡ್ ಸಭೆಯಲ್ಲಿ ನೂತನ ಆಪ್ಗೆ ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಅವರು ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ”ದರ್ಗಾ ಹಾಗೂ ಮಸೀದಿಗಳಿಗೆ ಸಮುದಾಯ ನೀಡುವ ಕಾಣಿಕೆ ಹಾಗೂ ದೇಣಿಗೆ ದುರುಪಯೋಗ ಆಗದಂತೆ ಜತೆಗೆ ನಿಗದಿತ ಉದ್ದೇಶಕ್ಕೆ ಬಳಕೆ ಆಗುವಂತೆ ನೋಡಿಕೊಳ್ಳಲು ಆಪ್ ಸಿದ್ದಪಡಿಸಲಾಗಿದೆ. ಮೊದಲಿಗೆ ಬೆಂಗಳೂರಿನ ಹಜರತ್ ತವಕ್ಕಲ್ ಮಸ್ತಾನ್ ಶಾ ದರ್ಗಾ ದಲ್ಲಿ ಈ ಹುಂಡಿ ವ್ಯವಸ್ಥೆ ಪ್ರಾಯೋಗಿಕವಾಗಿ ಜಾರಿಗೆ ಬರಲಿದೆ” ಎಂದು ತಿಳಿಸಿದರು.
”ಈ ಸೇವೆಯು ಮುಂದಿನ ದಿನಗಳಲ್ಲಿ ವಖ್ಫ್ ವ್ಯಾಪ್ತಿಗೆ ಬರುವ 3,131 ದರ್ಗಾ, 10,398 ಮಸೀದಿಗಳಲ್ಲೂ ಜಾರಿಗೊಳಿಸಲಾಗುವುದು. ಸಮುದಾಯ ಎಲ್ಲಿಂದ ಯಾವುದೇ ಸಮಯದಲ್ಲಿ ಫೋನ್ ಪೇ, ಗೂಗಲ್ ಪೇ ಮೂಲಕ ದೇಣಿಗೆ, ಕಾಣಿಕೆ ನೀಡಬಹುದಾಗಿದೆ” ಎಂದು ತಿಳಿಸಿದರು.
ವಕ್ಪ್ ಬೋರ್ಡ್ನಲ್ಲಿ 45 ಕೋಟಿ ರೂ. ಅನುದಾನ ಲಭ್ಯವಿದ್ದು, ಅದನ್ನು ಶಾಲಾ ಕಾಲೇಜು ಕಟ್ಟಡ ನಿರ್ಮಾಣ, ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಬಳಕೆ ಮಾಡಲು ತೀರ್ಮಾನಿಸಲಾಯಿತು. ಈ ನಿಟ್ಟಿನಲ್ಲಿ ತ್ವರಿತ ಕ್ರಮಕ್ಕೆ ಸಚಿವರು ಸೂಚಿಸಿದ್ದಾರೆ.