ಉತ್ತರಪ್ರದೇಶದ ಗಾಜಿಯಾಬಾದ್ನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಾಂಶುಪಾಲರ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಕಾಲೇಜು ವಿದ್ಯಾರ್ಥಿನಿಯರು ಸಿಎಂ ಯೋಗಿ ಆದಿತ್ಯನಾಥ್ಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಪ್ರಾಂಶುಪಾಲ ಡಾ.ರಾಜೀವ್ ಪಾಂಡೆ ಅವರು ವಿದ್ಯಾರ್ಥಿನಿಯರನ್ನು ಪದೇ ಪದೇ ತಮ್ಮ ಕಚೇರಿಗೆ ಕರೆಸಿ ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು ಆರೋಪಿಸಲಾಗಿದೆ. 12 ರಿಂದ 15 ವರ್ಷದೊಳಗಿನ ಬಾಲಕಿಯರು ಮೊದಲಿಗೆ ದೌರ್ಜನ್ಯದ ಬಗ್ಗೆ ಮಾತನಾಡಲು ಹಿಂದೇಟು ಹಾಕುತ್ತಿದ್ದರು. ಕೊನೆಗೆ ಪ್ರಾಂಶುಪಾಲರ ಕೃತ್ಯದ ಬಗ್ಗೆ ತಮ್ಮ ಪೋಷಕರಿಗೆ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಪ್ರಾಂಶುಪಾಲರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಬಾಲಕಿಯರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಸಂತ್ರಸ್ತ ವಿದ್ಯಾರ್ಥಿನಿಯರು ಪ್ರಾಂಶುಪಾಲರ ಕೃತ್ಯದ ಬಗ್ಗೆ ತಮ್ಮ ಕುಟುಂಬದ ಸದಸ್ಯರಿಗೆ ತಿಳಿಸಿದ ನಂತರ ಕುಟುಂಬಸ್ಥರು ಶಾಲೆಗೆ ತೆರಳಿ ಪ್ರಾಂಶುಪಾಲರಿಗೆ ಪ್ರಶ್ನಿಸಿದ್ದಾರೆ. ಈ ವೇಳೆ ಪ್ರಾಂಶುಪಾಲರು ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳನ್ನು ಅವಾಚ್ಯವಾಗಿ ನಿಂದಿಸಿದ್ದಾರೆ. ಇದರಿಂದ ಕೋಪಗೊಂಡ ಪೋಷಕರು ಪ್ರಾಂಶುಪಾಲರನ್ನು ಸ್ಥಳದಲ್ಲೇ ಥಳಿಸಿದ್ದಾರೆ.
ಶಾಲೆಗೆ ಅತಿಕ್ರಮವಾಗಿ ಪ್ರವೇಶ ಮಾಡಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳ ಪೋಷಕರ ವಿರುದ್ಧ ಶಾಲಾ ಮುಖ್ಯೋಪಾಧ್ಯಾಯರು ಪ್ರತಿದೂರು ದಾಖಲಿಸಿದ್ದಾರೆ. ಪೊಲೀಸರು ತಮ್ಮನ್ನು ಬೆದರಿಸಿ ಹಲವು ಗಂಟೆಗಳ ಕಾಲ ಠಾಣೆಯಲ್ಲಿ ಕುಳಿತುಕೊಳ್ಳುವಂತೆ ಮಾಡಿದ್ದರು ಎಂದು ವಿದ್ಯಾರ್ಥಿಗಳ ಪೋಷಕರು ಆರೋಪಿಸಿದ್ದಾರೆ.
ನಮ್ಮನ್ನು ನಾಲ್ಕು ಗಂಟೆಗಳ ಕಾಲ ಪೊಲೀಸ್ ಠಾಣೆಯಲ್ಲಿ ಕುಳಿತುಕೊಳ್ಳುವಂತೆ ಬಲವಂತ ಮಾಡಲಾಗಿದೆ ಮತ್ತು ಇನ್ನು ಮುಂದೆ ತರಗತಿಗಳಿಗೆ ಹಾಜರಾಗದಂತೆ ಶಾಲಾ ಆಡಳಿತ ಮಂಡಳಿ ಆದೇಶಿಸಿದೆ ಎಂದು ರಕ್ತದಲ್ಲಿ ಬರೆದ ಪತ್ರದಲ್ಲಿ ಹೇಳಲಾಗಿದೆ.
ಪ್ರಾಂಶುಪಾಲರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸದಸ್ಯರಾಗಿದ್ದು ಆದ್ದರಿಂದ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಪತ್ರದಲ್ಲಿ ಹೇಳಲಾಗಿದೆ. ಶಾಲೆಯಲ್ಲಿ ಪೋಷಕರು ಗಲಾಟೆ ಮಾಡಿದ ನಂತರ ಪಾಂಡೆಯನ್ನು ಅಂತಿಮವಾಗಿ ಬಂಧಿಸಲಾಗಿದೆ ಎಂದು ಹೇಳಿದ್ದಾರೆ.
ಪ್ರಾಂಶುಪಾಲರಿಂದ ದೌರ್ಜನ್ಯಕ್ಕೆ ಒಳಗಾದ ನಮಗೆ ನಿಮ್ಮನ್ನು ವೈಯಕ್ತಿಕವಾಗಿ ಭೇಟಿಯಾಗಬೇಕಿದೆ. ನಮಗೆ ಮತ್ತು ನಮ್ಮ ಕುಟುಂಬಸ್ಥರಿಗೆ ನಿಮ್ಮನ್ನು ಭೇಟಿ ಮಾಡಲು ಅವಕಾಶ ಮಾಡಿಕೊಡಬೇಕೆಂದು ಸಿಎಂ ಯೋಗಿ ಆದಿತ್ಯನಾಥ್ಗೆ ಬರೆದ ಪತ್ರದಲ್ಲಿ ವಿದ್ಯಾರ್ಥಿನಿಯರು ಆಗ್ರಹಿಸಿದ್ದಾರೆ.
ಇದನ್ನು ಓದಿ: ಕುಟುಂಬದ ಒಡತಿಗೆ 2 ಸಾವಿರ ರೂ. ನೀಡುವ ಗೃಹಲಕ್ಷ್ಮಿ ಯೋಜನೆಗೆ ನಾಳೆಯೇ ಚಾಲನೆ