ಮಥುರಾದ ಶಾಹಿ ಈದ್ಗಾ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
ಶಾಹಿ ಈದ್ಗಾ ಮಸೀದಿ ಸಂಕೀರ್ಣದ ಸಮೀಕ್ಷೆಗೆ ಅಡ್ವೋಕೇಟ್ ಕಮಿಷನರ್ ನೇಮಕ ಮಾಡಿ ಆದೇಶಿಸಿರುವ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ತಡೆಹಿಡಿಯುವಂತೆ ಕೋರಿ ಮುಸ್ಲಿಂ ಪರ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಸುಪ್ರೀಂ ಕೋರ್ಟ್ ಮುಸ್ಲಿಂ ಪರ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದೆ. ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದೆ ಎಂದು ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಹೇಳಿದ್ದಾರೆ.
ಮಥುರಾದ ಕೃಷ್ಣ ಜನ್ಮ ಭೂಮಿಯಲ್ಲಿರುವ ಶಾಹಿ ಈದ್ಗಾ ಮಸೀದಿಯ ಆವರಣದಲ್ಲಿ ಸಮೀಕ್ಷೆ ಮಾಡುವಂತೆ ಕೋರಿದ್ದ ಅರ್ಜಿಯನ್ನು ಗುರುವಾರ(ಡಿ.14) ಅಲಹಾಬಾದ್ ಹೈಕೋರ್ಟ್ ಮಾನ್ಯ ಮಾಡಿದೆ. ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಮೀಕ್ಷೆ ನಡೆಸಲು ಅನುಮತಿ ನೀಡಿದೆ.
ಮಥುರಾದ ಕೃಷ್ಣ ಜನ್ಮಭೂಮಿಯಲ್ಲಿದ್ದ ದೇವಸ್ಥಾನವನ್ನು ಕೆಡವಿ ಮೊಗಲ್ ದೊರೆ ಔರಂಗಜೇಬ್ ನಿರ್ದೇಶನದಂತೆ ಅಲ್ಲಿ ಶಾಹಿ ಈದ್ಗಾ ಮಸೀದಿ ನಿರ್ಮಿಸಲಾಗಿದೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಸುಮಾರು 12ರಷ್ಟು ಅರ್ಜಿಗಳು ಈಗಾಗಲೇ ಅಲಹಾಬಾದ್ ಹೈಕೋರ್ಟ್ಗೆ ಸಲ್ಲಿಕೆಯಾಗಿದ್ದು, ಎಲ್ಲಾ ಅರ್ಜಿಗಳು ಕತ್ರಾ ಕೇಶವ್ ದೇವಸ್ಥಾನಕ್ಕೆ ಹೊಂದಿಕೊಂಡಿರುವ 13.17 ಎಕರೆ ಜಾಗದಲ್ಲಿರುವ ಶಾಹಿ ಈದ್ಗಾ ಮಸೀದಿಯನ್ನು ತೆರವುಗೊಳಿಸುವಂತೆ ಕೋರಿವೆ.
ಇದನ್ನೂ ಓದಿ: ಕೃಷ್ಣ ಜನ್ಮಭೂಮಿ ಪ್ರಕರಣ: ಶಾಹಿ ಈದ್ಗಾ ಮಸೀದಿ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ