Homeಮುಖಪುಟನೀಲಿ-ಕೆಂಪು ಒಂದಾಗಬೇಕೆಂಬುದು ಆಕೆಯ ಆಸೆಯಾಗಿತ್ತು

ನೀಲಿ-ಕೆಂಪು ಒಂದಾಗಬೇಕೆಂಬುದು ಆಕೆಯ ಆಸೆಯಾಗಿತ್ತು

- Advertisement -
- Advertisement -

 

ಡಿ.ಉಮಾಪತಿ

ಚಿತ್ರದುರ್ಗದ ಡಿ.ಉಮಾಪತಿಯವರು ದೀರ್ಘಕಾಲ ದೆಹಲಿಯಿಂದ ಕನ್ನಡದ ಮೂರು ಪ್ರಮುಖ ದಿನಪತ್ರಿಕೆಗಳಿಗೆ (ಕನ್ನಡಪ್ರಭ, ವಿಜಯ ಕರ್ನಾಟಕ, ಪ್ರಜಾವಾಣಿ) ವರದಿ ಮಾಡಿದ್ದಾರೆ. ದೇಶದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಬಿಡಿ ಘಟನೆಗಳನ್ನು ವಿಶಾಲ ಭಿತ್ತಿಯಲ್ಲಿಟ್ಟು ನೋಡುವ ಅವರ ಸಾಂದ್ರವಾದ ಬರಹಗಳು ಓದುಗರನ್ನು ಆಳವಾಗಿ ಕಲಕುತ್ತವೆ. ಅವರ `ಡೆಲ್ಲಿ ಡೈರಿ’ ಮತ್ತು `ದೆಹಲಿ ನೋಟ’ ಅಂಕಣಗಳು ಹೆಚ್ಚು ಓದುಗರನ್ನು ಸೆಳೆದಿದ್ದವು. ಪ್ರಸ್ತುತ `ನ್ಯಾಯಪಥ’ ಪತ್ರಿಕೆಯ ಕನ್ಸಲ್ಟಿಂಗ್ ಎಡಿಟರ್ ಆಗಿದ್ದಾರೆ ಮತ್ತು ಪ್ರತಿಧ್ವನಿ ಅಂತರ್ಜಾಲ ಪತ್ರಿಕೆ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಅವರ ಬರಹಗಳು ಮುಂದುವರೆದಿವೆ.

ಮೂವತ್ತೆರಡು ವರ್ಷಗಳಷ್ಟು ಕಾಲದ ವರದಿಗಾರನ ಕಸುಬಿನಲ್ಲಿ ಇಪ್ಪತ್ತು ವರ್ಷಗಳನ್ನು ದಿಲ್ಲಿಯಲ್ಲೇ ಸವೆಸಿದ ಕಾರಣ ಗೌರಿ ಲಂಕೇಶ್ ಅವರ ಸಂಪರ್ಕ ನನಗೆ ಕೆಲಕಾಲ ಹತ್ತಿರದ್ದು ಮತ್ತು ಬಹುಕಾಲ ದೂರದ್ದೂ ಆಗಿ ಉಳಿಯಿತು.

1996ರಲ್ಲಿ ‘ಕನ್ನಡಪ್ರಭ’ ನನ್ನನ್ನು ದಿಲ್ಲಿಗೆ ಕಳಿಸುವ ತನಕ ಹನ್ನೆರಡು ವರ್ಷಗಳ ಕಾಲ ಬೆಂಗಳೂರಲ್ಲಿ ಕೆಲಸ. ಇಂಗ್ಲಿಷ್ ಪತ್ರಕರ್ತರು ಅದರಲ್ಲಿಯೂ ಹೆಣ್ಣುಮಕ್ಕಳು ಕನ್ನಡ ಪತ್ರಕರ್ತರೊಂದಿಗೆ ದೂರ ಕಾಯ್ದುಕೊಳ್ಳುತ್ತಿದ್ದರು. ಕೃತಕ ಗೋಡೆಗಳನ್ನು ಎಬ್ಬಿಸಿ ನಿಲ್ಲಿಸುತ್ತಿದ್ದರು. ಈ ಮಾತಿಗೆ ಅಪವಾದದಂತೆ ನಡೆದುಕೊಳ್ಳುತ್ತಿದ್ದ ವಿರಳರಲ್ಲಿ ಗೌರಿಯೂ ಒಬ್ಬರು. ಹೌದು, ಗೌರಿ ಇಂಗ್ಲಿಷ್ ಪತ್ರಕರ್ತೆಯಾಗಿದ್ದರು. ನಿತ್ಯದ ವರದಿಗಾರಿಕೆಯಲ್ಲಿ ಆಗಾಗ ಸಿಗುತ್ತಿದ್ದರು. ನಿಗರ್ವಿಯೂ ಸ್ನೇಹಪರರೂ ಹಾಗೂ ಸರಳ ಸ್ವಭಾವದವರೂ ಆಗಿರುತ್ತಿದ್ದರು. ಕನ್ನಡ ಇಂಗ್ಲಿಷಿನ ದೂರದಲ್ಲಿ ಅವರಿಗೆ ನಂಬಿಕೆ ಇರಲಿಲ್ಲ. ಎಂಬತ್ತರ ದಶಕ. ಆ ವೇಳೆಗಾಗಲೆ ಅವರು ದೆಹಲಿಯ ಪ್ರತಿಷ್ಠಿತ ಇಂಡಿಯನ್ ಇನ್ಸ್‍ಟಿಟ್ಯೂಟ್ ಆಫ್ ಮಾಸ್ ಕಮ್ಯೂನಿಕೇಷನ್ ಸಂಸ್ಥೆಯಲ್ಲಿ ಓದಿ ಪದವಿ ಪಡೆದವರಾಗಿದ್ದರು. ಅವರ ಮೇಲೆ ತಂದೆ ಲಂಕೇಶರ ಪ್ರಭಾವವಿತ್ತು. ದೆಹಲಿಯ ಜೆ.ಎನ್.ಯು.ವಿನ ಸಮ ಸಮಾಜದ ಆಶಯದ ವಾತಾವರಣ ಅದನ್ನು ಗಟ್ಟಿಗೊಳಿಸಿತ್ತು.

ಲಂಕೇಶ್ ಪತ್ರಿಕೆಯ ಯಶಸ್ಸಿನ ನೆರಳಿನಿಂದ ಪ್ರಜ್ಞಾಪೂರ್ವಕವಾಗಿ ದೂರ ಉಳಿಯಬಯಸಿದ್ದರು. ಹೀಗಾಗಿ ಇಂಗ್ಲಿಷ್ ಪತ್ರಿಕೋದ್ಯಮ ಅವರ ಆಯ್ಕೆಯಾಗಿತ್ತು. Mid Day, Sunday ಆಗ ರಭಸದ ಪತ್ರಿಕೋದ್ಯಮ ನಡೆಸಿದ ಪತ್ರಿಕೆಗಳು. ಆನಂತರ Times of India, ಇಂಗ್ಲಿಷ್ ದೈನಿಕ, ETV, News Timeಗೆ ವರದಿ ಮಾಡಿದರು. ಇಂಡಿಯಾ ಟುಡೇ ಸಮೂಹದ Headlines Todayಯಲ್ಲೂ ಕೆಲಸ ಅವರ ವರದಿಗಾರಿಕೆಗೆ ಸಾಣೆ ಹಿಡಿದಿತ್ತು. ಹೊಳಪು ಹರಿತ ಎರಡೂ ದಕ್ಕಿದ್ದವು.

ದೆಹಲಿಯಲ್ಲಿ ಹಲವು ವರ್ಷ ಕೆಲಸ ಮಾಡಿದ ಅವರಿಗೆ ರಾಜಧಾನಿಯ ರಾಜಕಾರಣದ ಒಳಸುಳಿಗಳ ಮೇಲೆ ಹಿಡಿತ ಸಿಕ್ಕಿತ್ತು. ಇಲ್ಲಿ ಕೂಡ ನನ್ನ ಪಾಲಿಗೆ ಅವರು ಅದೇ ಬೆಂಗಳೂರಿನ ನಿಗರ್ವಿ ಸಹೋದ್ಯೋಗಿ. ದೆಹಲಿಯಲ್ಲಿ ಕನ್ನಡ ಮೂಲದ ಮತ್ತೊಬ್ಬ ಯಶಸ್ವೀ ಇಂಗ್ಲಿಷ್ ಪತ್ರಕರ್ತ ಗಿರೀಶ್ ನಿಕ್ಕಮ್, ಗೌರಿ, ಔಟ್‍ಲುಕ್ ನಿಯತಕಾಲಿಕದ ವರದಿಗಾರ್ತಿ ಭಾವದೀಪ್ ಕಾಂಗ್ ಹೆಚ್ಚಾಗಿ ಕಲೆತು ಹರಟೆ ಹೊಡೆಯುತ್ತಿದ್ದೆವು. ದೈನಿಕ್ ಜಾಗರಣ್‍ನ ಹಿರಿಯ ವರದಿಗಾರ ನಿರ್ಮಲ್ ಪಾಠಕ್ ಒಂದು ಗುಂಪಾಗಿ ಸುದ್ದಿ ಸಂಗ್ರಹಕ್ಕೆಂದು ಅಲೆಯುತ್ತಿದ್ದೆವು. ಅನುಕೂಲಸ್ಥ ತಂದೆಯಿದ್ದಾರೆ ಎಂಬ ಭಾವದಿಂದ ಗೌರಿ ಯಾವೊತ್ತೂ ಕೆಲಸ ಕದಿಯಲಿಲ್ಲ. ಕಠಿಣ ಪರಿಶ್ರಮಕ್ಕೆ ಅಳುಕಲಿಲ್ಲ. ಅದಾಗಲೇ ಲಂಕೇಶರು ಅನಾರೋಗ್ಯಕ್ಕೆ ಒಳಗಾಗಿದ್ದರು. ತಂದೆ ಮಗಳು ಒಬ್ಬರನ್ನೊಬ್ಬರು ಬಹಳ ಹಚ್ಚಿಕೊಂಡಿದ್ದವರು. ತಂದೆಯ ಅನಾರೋಗ್ಯ ನೆನೆಸಿಕೊಂಡು ಗೌರಿ ಆಗಾಗ ಹನಿಗಣ್ಣಾಗುತ್ತಿದ್ದರು. ಬೆಂಗಳೂರಿಗೆ ತೆರಳಿ ಕೆಲ ದಿನ ಇದ್ದು ಬರುತ್ತಿದ್ದರು. ಯಾವ ಸುದ್ದಿಯನ್ನು ಕೇಳುವ ದಿನದ ಹೆದರಿಕೆಯಿತ್ತೋ ಆ ಕೆಟ್ಟ ಸುದ್ದಿ ಬಂದೇ ಬಿಟ್ಟಿತು. ಲಂಕೇಶರ ಆರೋಗ್ಯ ಬಿಗಡಾಯಿಸಿತ್ತು. ಒಮ್ಮೆ ಹೀಗೆ ಅಳುತ್ತಲೇ ಬೆಂಗಳೂರಿಗೆ ತೆರಳಿದ ಗೌರಿ ಮತ್ತೆ ದೆಹಲಿಗೆ ವಾಪಸು ಬರಲಿಲ್ಲ.

ತಂದೆ ತೊರೆದು ಹೋದ ಹೊಸ ರೂಹಿನ ಪತ್ರಿಕೋದ್ಯಮದ ‘ಬೃಹತ್ ಪಾದರಕ್ಷೆ’ಗಳಲ್ಲಿ ಗೌರಿ ತಮ್ಮ ಪುಟ್ಟ ಪಾದಗಳನ್ನು ಅಳುಕದೆ ಇರಿಸಿದ ದಿಟ್ಟ ಹೆಣ್ಣುಮಗಳು. ಪತ್ರಿಕೆಯೊಂದರ ಸಂಪಾದಕಿ ಆಗುವಷ್ಟು, ಪರಿಣಾಮಕಾರಿಯಾಗಿ ಬರೆಯುವಷ್ಟು ಕನ್ನಡ ಕಲಿತರು. ಅಲ್ಲಲ್ಲಿ ನ್ಯೂನತೆಗಳನ್ನು ಎಣಿಸಲು ಬಂದೀತು, ಆದರೆ ಒಟ್ಟಾರೆ ಲಂಕೇಶರು ನಡೆಸಿದ್ದು ಕೇವಲ ಪತ್ರಿಕೋದ್ಯಮ ಮಾತ್ರ ಆಗಿರಲಿಲ್ಲ. ಸಾಮಾಜಿಕ ಎಚ್ಚರದ ಹೊಸ ಪೀಳಿಗೆಯನ್ನೇ ರೂಪಿಸಿದರು. ತಂದೆಯ ಪ್ರಖರ ಪ್ರತಿಭೆ, ಭಾಷೆಯೊಂದಿಗಿನ ಮಾಂತ್ರಿಕ ಸ್ಪರ್ಶ, ಅಪಾರ ಓದು, ಆಳದ ಸಾಮಾಜಿಕ ರಾಜಕೀಯ ಒಳನೋಟಗಳು ಮಗಳಿಗಿರಲಿಲ್ಲ ನಿಜ. ಆದರೆ ತಂದೆ ಹಾಕಿಕೊಂಡಿದ್ದ ಗೆರೆಯನ್ನು ದಾಟಿ ಮುಂದೆ ಹೋದ ಮಗಳು ಪತ್ರಿಕೆಯನ್ನು ತುಳಿಸಿಕೊಂಡ ಜನರ ನೋವಿನ ದನಿಯಾಗಿಸಲು, ಕೋಮುವಾದಿಗಳ ವಿರುದ್ಧದ ಹತಾರು ಆಗಿಸಲು ಶ್ರಮಿಸಿದರು. ಹೋರಾಟಗಾರ್ತಿ ಪತ್ರಕರ್ತೆ ಆದರು.

ತಂದೆ ಆರಂಭಿಸಿದ ಪತ್ರಿಕೆ ತಮ್ಮನ ಪಾಲಾದಾಗಲೂ ಧೃತಿಗೆಡದೆ ಮತ್ತೊಂದನ್ನು ಶುರು ಮಾಡಿದರು. ಕಾಲಾನುಕ್ರಮದಲ್ಲಿ ಬರೆಯಲು ಮಾತ್ರವೇ ಅಲ್ಲ, ಕನ್ನಡದಲ್ಲಿ ಆಲೋಚಿಸಲೂ ಕಲಿತರು. ‘ಕಂಡ ಹಾಗೆ’ ಶೀರ್ಷಿಕೆಯಡಿ ಅವರು ಬರೆದ ಸಂಪಾದಕೀಯ ಸರಳ ಸಂವಹನಕ್ಕೆ ಮಾದರಿಯಾಗಿ ರೂಪುಗೊಂಡಿತು. ಹೊಸ ಪತ್ರಿಕೆ ಪತ್ರಿಕೆಯಷ್ಟೇ ಆಗಿ ಉಳಿಯಲಿಲ್ಲ. ಅದೊಂದು ಚಳವಳಿಯಾಗಿ ಬೆಳೆಯಿತು. ಗೌರಿಯವರನ್ನೂ ಬೆಳೆಸಿತು. ಅವರ ಅಂತರಂಗವನ್ನು ಅರಳಿಸಿತು.

ತುಂಟುತನ, ಜೀವಕಾರುಣ್ಯ, ಜೀವನಪ್ರೀತಿ ಅವರನ್ನು ಸುತ್ತಮುತ್ತಲ ಕನ್ನಡ ಸಮಾಜದೊಂದಿಗೆ ಮತ್ತಷ್ಟು ಗಟ್ಟಿಯಾಗಿ ಬೆಸೆಯಿತು. ಯುವಪೀಳಿಗೆಯೊಂದಿಗೆ ಸಂವಾದಕ್ಕೆ ಅವರಷ್ಟು ತೆರೆದುಕೊಂಡ ಅವರ ಓರಗೆಯ ಮತ್ತೊಬ್ಬ ಪತ್ರಕರ್ತರನ್ನು ನಾನು ಕಂಡಿಲ್ಲ. ಅಮ್ಮನ- ಅಕ್ಕನ ವಾತ್ಸಲ್ಯ ಅವರದು.

ಲಂಕೇಶರು ನಂಬಿದ್ದ ಲೋಹಿಯಾವಾದಿ-ಸಮಾಜವಾದ ಮತ್ತು ಗಾಂಧೀವಾದದ ಆಚೆಗೂ ಸರಿದ ಗೌರಿ, ಎಡಪಂಥೀಯ ವಿಚಾರಧಾರೆಯನ್ನು ದೂರ ಇರಿಸಲಿಲ್ಲ. ದಲಿತರು ಮತ್ತು ಎಡಪಂಥೀಯರನ್ನು ತಾವು ನಡೆಸಿದ ಪತ್ರಿಕೆಯಲ್ಲಿ ತಂದೆಗಿಂತ ಹೆಚ್ಚು ಹತ್ತಿರವಿಟ್ಟುಕೊಂಡರು. ಜನಾಂದೋಲನಗಳ ಜೊತೆ ಸಕ್ರಿಯವಾಗಿ ಬೆರೆತು ಗುರುತಿಸಿಕೊಂಡರು. ತಮ್ಮನ್ನು ‘ಆ್ಯಕ್ಟಿವಿಸ್ಟ್ ಜರ್ನಲಿಸ್ಟ್’ ಎಂದು ಹೆಮ್ಮೆಯಿಂದ ಕರೆದುಕೊಂಡರು.

ಪ್ರಚಂಡ ಕೋಮುವಾದಿ ಫ್ಯಾಸಿಸ್ಟ್ ರಾಜಕೀಯ ಎದುರಾಳಿಯ ಎದುರು ದಲಿತರ ನೀಲಿ ಮತ್ತು ಎಡಪಂಥೀಯರ ಕೆಂಪು ರಂಗುಗಳು ಎಲ್ಲ ಮತಭೇದವನ್ನೂ ಬದಿಗಿಟ್ಟು ಒಂದಾಗಬೇಕೆಂಬುದು ಅವರ ಅಚಲ ಆಶಯವಾಗಿತ್ತು. ನೀಲಿ ಮತ್ತು ಕೆಂಪು ಎರಡರ ಗೌರವವನ್ನೂ ಸಂಪಾದಿಸಿಕೊಂಡ ಪ್ರೀತಿ ವಾತ್ಸಲ್ಯದ ‘ಅಮ್ಮ’ನಾಗಿ ಹೊರಹೊಮ್ಮಿದ್ದರು. ಈ ಎರಡೂ ರಂಗುಗಳ ನಡುವೆ ನಡೆದ ವೈಚಾರಿಕ ಕದನಗಳು ಆಕೆಯ ಮನಸ್ಸನ್ನು ಘಾಸಿಗೊಳಿಸಿತ್ತು. ಅಲ್ಪಸಂಖ್ಯಾತರು, ಲೈಂಗಿಕ ಅಲ್ಪಸಂಖ್ಯಾತರ ಕುರಿತು ತಂದೆಯದೇ ಬದ್ಧತೆ, ಪ್ರೀತಿ ಅವರಿಗಿತ್ತು. ಕನ್ಹಯ್ಯಕುಮಾರ್ ಮತ್ತು ಜಿಗ್ನೇಶ್ ಮೇವಾನಿ, ಶೆಹ್ಲಾ ರಷೀದ್ ಅವರನ್ನು ತಮ್ಮ ದತ್ತುಮಕ್ಕಳೆಂದು ಬಹಿರಂಗವಾಗಿ ಕರೆದುಕೊಂಡಿದ್ದರು. ಹಂತಕರ ಗುಂಡು ಆಕೆಯನ್ನು ಬಲಿ ತೆಗೆದುಕೊಳ್ಳುವ ಕೆಲ ತಿಂಗಳುಗಳ ಹಿಂದೆ ದೆಹಲಿಗೆ ಬಂದಿದ್ದಾಗ ಕನ್ಹಯ್ಯನಿಗೆ ಹೊಸ ಉಡುಪುಗಳ ಉಡುಗೊರೆ ತಂದಿದ್ದುಂಟು.

ಪತ್ರಿಕೆ ನಡೆಸಲು ಆಕೆ ತನ್ನ ಕಟಿಬದ್ಧ ತಂಡದೊಂದಿಗೆ ಪಡುತ್ತಿದ್ದ ಪಡಿಪಾಟಲಿನ ಕಲ್ಪನೆಯೇ ನನಗಿರಲಿಲ್ಲ. ದೆಹಲಿ ರಾಜಕಾರಣದ ದಿಕ್ಕು ದೆಸೆಗಳನ್ನು ತಿಳಿದುಕೊಳ್ಳಲು ಆಗಾಗ ಫೋನ್ ಮಾಡುತ್ತಿದ್ದರು. ಚುನಾವಣೆಗಳ ಸಂದರ್ಭದಲ್ಲಿ ಕರ್ನಾಟಕದ ಚುನಾವಣಾ ರಾಜಕಾರಣದ ಸ್ಥಿತಿಗತಿಗಳ ವ್ಯಾಖ್ಯಾನಕಾರ್ತಿಯಾಗಿ ದೆಹಲಿಯಲ್ಲಿ ಖ್ಯಾತ ಟೀವಿ ಚಾನೆಲ್ಲುಗಳ ಪ್ಯಾನೆಲ್ ಡಿಸ್ಕಷನ್‍ಗಳಲ್ಲಿ ವಾರಗಟ್ಟಲೆ ಕುಳಿತುಕೊಳ್ಳುತ್ತಿದ್ದರು. ಅದರಿಂದ ಬಂದ ಲಕ್ಷ ರುಪಾಯಿಗೂ ಹೆಚ್ಚು ಹಣವನ್ನು ಪತ್ರಿಕೆ ನಡೆಸಲು ಬಳಸುತ್ತಿದ್ದ ವಿಚಾರ ನನಗೆ ತಿಳಿದದ್ದು ಆಕೆ ಗತಿಸಿದ ನಂತರವೇ. ಈ ದಿನಗಳಲ್ಲಿ ಊಟಕ್ಕೆ ಕುಳಿತಾಗಲೂ ಈ ಕಷ್ಟವನ್ನು ಹೇಳಿಕೊಳ್ಳದೆ ನಗುತ್ತಿದ್ದ ದೊಡ್ಡ ಹೃದಯದ ಹೆಣ್ಣುಮಗಳು ಗೌರಿ.

ಸಾಮಾಜಿಕ-ರಾಜಕೀಯ-ಧಾರ್ಮಿಕ-ವೈಚಾರಿಕ ಅಸಹಿಷ್ಣುತೆ ಅತ್ಯುಗ್ರ ರೀತಿಯಲ್ಲಿ ಪ್ರಕಟವಾದಾಗ ಪತ್ರಿಕೆಯ ಕಚೇರಿಯಲ್ಲಿ ಕುಳಿತುಕೊಳ್ಳದೆ ಬಯಲಿಗಿಳಿದು ಪ್ರವಾಸ ನಡೆಸಿ ಅದನ್ನು ಮುಖಾಮುಖಿಯಾದ ಅಪರೂಪದ ಪತ್ರಕರ್ತೆ ಆಕೆ.

ತಾವು ಗುಂಡಿಟ್ಟದ್ದು ಗೌರಿಯ ದೇಹಕ್ಕೇ ವಿನಾ ವಿಚಾರಕ್ಕಲ್ಲ ಎಂಬುದನ್ನು ದುರುಳರೂ ಮೂರ್ಖರೂ ಆದ ಹಂತಕರಿಗೆ ಈಗಲೂ ತಿಳಿದಿಲ್ಲ, ಮುಂದೆಯೂ ತಿಳಿಯುವುದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...