Homeಮುಖಪುಟವಿರೋಧಾಭಾಸಗಳ ಜಗತ್ತಿನಲ್ಲಿ ಧಿಕ್ಕರಿಸಬೇಕಿದೆ ಶ್ರೇಷ್ಠತೆಯ ವ್ಯಸನ : ನಟರಾಜು ವಿ.

ವಿರೋಧಾಭಾಸಗಳ ಜಗತ್ತಿನಲ್ಲಿ ಧಿಕ್ಕರಿಸಬೇಕಿದೆ ಶ್ರೇಷ್ಠತೆಯ ವ್ಯಸನ : ನಟರಾಜು ವಿ.

- Advertisement -
- Advertisement -

ಕನ್ನಡದ ಪ್ರತಿಭಾನ್ವಿತ ಪತ್ರಕರ್ತರು -ಅಂಕಣಕಾರರಲ್ಲೊಬ್ಬರಾದ ನಟರಾಜು.ವಿ ಅವರು ತಣ್ಣನೆಯ ಶೈಲಿಯಲ್ಲೇ ಕಟುಸತ್ಯಗಳನ್ನು ಬಿಡಿಸಿಡುವ ಬರಹಗಾರರು. ಸಾಮಾಜಿಕ ರಾಜಕೀಯ ವಿಶ್ಲೇಷಣೆ, ಸಮಕಾಲೀನ ವಿದ್ಯಮಾನಗಳ ಕುರಿತ ಅವರ ಅಂಕಣ ‘ಪಠ್ಯ – ಪ್ರಮಾಣ’ ಕನ್ನಡಪ್ರಭದಲ್ಲಿ ಪ್ರಕಟವಾಗಿತ್ತು. ಟೈಮ್ಸ್ ಆಫ್ ಇಂಡಿಯಾ, ವಿಜಯನೆಕ್ಸ್ಟ್ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಕಳೆದ 15 ವರ್ಷಗಳಿಂದ ಕೆಲಸ ಮಾಡಿದ ಅನುಭವವಿರುವ ಇವರು ‘ದಿ ಸ್ಟೇಟ್’ ನಲ್ಲಿ ಸೀನಿಯರ್ ಅಸಿಸ್ಟೆಂಟ್ ಎಡಿಟರ್ ಆಗಿ ಕೆಲಸ ಮಾಡಿದ್ದಾರೆ. ಪ್ರಸ್ತುತ ಟೆಕ್ ಕನ್ನಡ ವೆಬ್‍ಜಾಲದ ‘ತಂತ್ರ ತಾಂಡವ’ ಅಂಕಣದ ಜೊತೆಗೆ, ನಟರಾಜುರವರು ನ್ಯಾಯಪಥ ಪತ್ರಿಕೆಯಲ್ಲಿ ಪ್ರಮುಖ ವಿಶ್ಲೇಷಕ ಬರಹಗಳನ್ನು ಬರೆಯುತ್ತಿದ್ದಾರೆ.

ಈ ವಿಶೇಷ ಸಂಚಿಕೆಯನ್ನು ಕೈಯಲ್ಲಿ ಹಿಡಿದು ಕಣ್ಣಾಡಿಸುತ್ತಿರುವ ಈ ಹೊತ್ತಿನಲ್ಲಿ ಬಹುಶಃ ನಿಮಗೆ ಮೇಲುನೋಟಕ್ಕೇ ಸಮಕಾಲೀನ ಭಾರತೀಯ ಸಮಾಜ ಎದುರಿಸುತ್ತಿರುವ ಹತ್ತು ಹಲವು ತಲ್ಲಣಗಳು, ಪ್ರಜಾಪ್ರಭುತ್ವ, ಸಂವಿಧಾನಗಳಿಗೆ ಎದುರಾಗಿರುವ ಗಂಭೀರ ಸವಾಲುಗಳ ಕುರಿತಾದ ತೀವ್ರ ಕಾಳಜಿ ಈ ಬರಹಗಳಲ್ಲಿ ಕಾಣಬಹುದು. ಇದಾಗಲೇ ಜಾತಿವ್ಯವಸ್ಥೆಯಲ್ಲಿ ಸಿಲುಕಿ ಶತಶತಮಾನಗಳಿಂದ ಹೈರಾಣಾಗಿಹೋಗಿರುವ ಭಾರತೀಯ ಸಮಾಜದ ಸೂಕ್ಷ್ಮ ನೇಯ್ಗೆಗಳು ಇಂದು ಮೂಲಭೂತವಾದದ ತೀವ್ರ ಹೆಚ್ಚಳದೊಂದಿಗೆ ಮತ್ತೂ ಗಂಭೀರವಾಗಿ ಘಾಸಿಗೊಂಡಿವೆ. ನಮ್ಮ ಸುತ್ತಣ ಸಮಾಜದ ಆಲೋಚನೆಗಳನ್ನು ಮೂಲಭೂತವಾದವು ವ್ಯಾಪಿಸಿಕೊಳ್ಳುತ್ತಿರುವ ಪರಿ, ಪಡೆಯುತ್ತಿರುವ ರೂಪ, ಭಾಷೆ ಎಲ್ಲ ಪ್ರಜ್ಞಾವಂತರ ಆತಂಕಕ್ಕೆ ಕಾರಣವಾಗಿದೆ. ಇಲ್ಲಿನ ಬಹುತೇಕ ಲೇಖನಗಳು ವಿವಿಧ ಆಯಾಮಗಳಿಂದ ಈ ಸವಾಲುಗಳನ್ನು ಸಂಕೀರ್ಣವಾಗಿಯೂ, ಚಿಕಿತ್ಸಕವಾಗಿಯೂ ಎದುರುಗೊಂಡಿವೆ. ಪ್ರಸಕ್ತ ಲೇಖನ ಇದರಾಚೆಗಿನ ಕೆಲ ಸಂದಿಗ್ಧಗಳು, ಸವಾಲುಗಳ ಬಗ್ಗೆ ಗಮನ ಹರಿಸಲಿದೆ. ಆದರ್ಶ, ವಾಸ್ತವ, ಬೂಟಾಟಿಕೆ, ನೈತಿಕ ವಿರೋಧಾಭಾಸಗಳ ಗೋಜಲುಗಳ ಸುತ್ತಲಿನ ಚರ್ಚೆ ಈ ಲೇಖನದ ತಿರುಳು.

ಇಂದು ಸಾಮಾಜಿಕ ಕಾರ್ಯಕರ್ತರು, ಸಮಾಜಮುಖಿ ಚಿಂತಕರು, ಪ್ರಜ್ಞಾವಂತರು, ಪತ್ರಕರ್ತರೆಲ್ಲರನ್ನೂ ಒಂದಿಲ್ಲೊಂದು ಬಗೆಯಲ್ಲಿ ನೈತಿಕ ತಳಮಳಗಳು ಬಾಧಿಸುತ್ತಿವೆ. ಮೌಲ್ಯಗಳ ಹೆಸರಿನಲ್ಲಿ ತಾವು ಕಟ್ಟಿಕೊಂಡಿದ್ದ ಕೋಟೆ ಎಲ್ಲ ದಿಕ್ಕಿನಲ್ಲಿಯೂ ಕುಸಿದು ಬೀಳುತ್ತಿರುವುದು ಕಣ್ಣುಮುಚ್ಚಿದರೂ ಗೋಚರಿಸುತ್ತಿದೆ. ಈ ಸತ್ಯಕ್ಕೆ ಮುಖಾಮುಖಿಯಾಗುವುದೋ ಅಥವಾ ಕೋಟೆ ಕುಸಿದರೇನು ನಮ್ಮ ಸುತ್ತ ನಾವೇ ಒಂದು ಗೂಡು ಕಟ್ಟಿಕೊಂಡು ಚಿಟ್ಟೆಯಾಗಿ ಪರಿವರ್ತನೆ ಹೊಂದೋಣ, ಯಾರ ಜಪ್ತಿಗೂ ಸಿಗದೆ ಹಾರಿಬಿಡೋಣ ಎಂದು ರಮ್ಯವಾಗಿ ಉತ್ತರಿಸುವುದೋ ತಿಳಿಯುತ್ತಿಲ್ಲ. ನಾವು ನಿಂತಿರುವ ನೆಲದ ಮೇಲೆಯೇ ಸಂಶಯವೇಳುತ್ತಿರುವ ಈ ಹೊತ್ತಿನಲ್ಲಿ ತಲೆಯನ್ನು ನೆಲದಲ್ಲಿ ಹುದುಗಿಸಿಕೊಂಡು ಎಲ್ಲದಕ್ಕೂ ಕಣ್ಣುಮುಚ್ಚಿಕೊಂಡು ಬಿಡುವುದು ಸಂವೇದನಾಶೀಲರ ಆಯ್ಕೆಯೂ ಅಲ್ಲ.

ಕಪ್ಪುಬಿಳುಪು ಇವೆರಡನ್ನು ಮಾತ್ರವೇ ಗುರುತಿಸಲು, ಬೇರ್ಪಡಿಸಲಷ್ಟೇ ಕಲಿತಿರುವವರಿಗೆ ಜಗವೆಲ್ಲಾ ಕಂದು ಬಣ್ಣದಲ್ಲೇ ಇರುವಾಗ ಅದನ್ನು ಹೇಗೆ ವರ್ಗೀಕರಿಸುವುದು ತಿಳಿಯದಾಗಿದೆ. ಮಾಧ್ಯಮವೂ ಸೇರಿದಂತೆ ಇಂದು ಎಲ್ಲ ಉದ್ಯಮಗಳೂ ಬಂಡವಾಳಶಾಹಿಗಳ ಹಿಡಿತದಲ್ಲಿವೆ. ಒಂದಿಲ್ಲೊಂದು ರೀತಿಯಲ್ಲಿ ಸರ್ಕಾರ, ಅಧಿಕಾರಸ್ಥರ ಸಹಾಯ, ಸಹಕಾರಗಳನ್ನು ಅವಲಂಬಿಸಿವೆ. ಈ ಅವಲಂಬನೆ ಕೆಲವೆಡೆ ಅಲ್ಪವೇ ಇರಬಹುದು ಮತ್ತೆ ಹಲವೆಡೆ ಅವಕಾಶವಾದಿತನ, ವಶೀಲಿಬಾಜಿಗಾಗಿಯೇ ಈ ಉದ್ಯಮಗಳು ಆರಂಭವಾಗಿಯೂ ಇರಬಹುದು.

ಮೌಲ್ಯಗಳೆನ್ನುವುದು ಇಂದು ತುಲನಾತ್ಮಕವಾಗಿ ನೋಡಬಹುದಾದ ವಿಷಯವಾಗಿದೆಯೇ ಹೊರತು ಪಾವಿತ್ರ್ಯದ ವಿಷಯವಾಗಿ ಉಳಿದಿಲ್ಲ. ಅವರಿಗಿಂತ ಇವರು ಉತ್ತಮ, ಆ ಸಂಸ್ಥೆಗಿಂತ ಈ ಸಂಸ್ಥೆ ಉತ್ತಮ ಎನ್ನಬಹುದೇ ಹೊರತು ಪರಮಪವಿತ್ರವೂ, ಅಗ್ನಿದಿವ್ಯವೂ ಆದ ಸಾಂಸ್ಥಿಕ ರಚನೆಗಳು ಸಾರ್ವಜನಿಕವಾಗಿ ಕಾಣೆಯಾಗಿವೆ. ಇದಕ್ಕೆ ಸರ್ಕಾರಿ, ಖಾಸಗಿ ಎನ್ನುವ ಭೇದಭಾವವಿಲ್ಲ. ಪ್ರಾಮಾಣಿಕತೆಯಿಂದ, ಶ್ರದ್ಧೆಯಿಂದ ತಾನು ದುಡಿದು ತಿಂದಿರುವುದಾಗಿ ಯಾರೇ ಹೇಳಿದರೂ ಆ ದುಡಿಮೆಯನ್ನು ಬಳಸಿಕೊಂಡ ಸಂಸ್ಥೆಗಳು ಸಂಬಳಕ್ಕಾಗಿ ತೆತ್ತ ಹಣದ ಹರಿವು ಎಲ್ಲಿಯದು, ಆ ಸಂಸ್ಥೆಗಳ ವ್ಯಾವಹಾರಿಕ ಚೌಕಟ್ಟಿನ ಸ್ವರೂಪವೇನು ಎನ್ನುವುದನ್ನು ಅರಿತರೆ ಭ್ರಷ್ಟತೆ ಎನ್ನುವುದು ನಮ್ಮೆಲ್ಲರನ್ನೂ ಒಂದಿಲ್ಲೊಂದು ಹಂತದಲ್ಲಿ ತಾಕಿಯೂ ಅರಿವಿಗೇ ಬಾರದೆ ಉಳಿದಿರುವುದು ಗಮನಕ್ಕೆ ಬರುತ್ತದೆ.

ಮಾರುಕಟ್ಟೆ ಎನ್ನುವುದು ಸರ್ವವ್ಯಾಪಿಯಾಗಿರುವ ಈ ಯುಗದಲ್ಲಿ ಅರ್ಥವ್ಯವಸ್ಥೆಯ ಸ್ವರೂಪ ಸಂಕೀರ್ಣವೂ, ಪರಸ್ಪರ ವ್ಯಾಪಕವಾಗಿ ಅವಲಂಬಿತವೂ ಆಗಿರುವಂಥದ್ದು. ಮಾರುಕಟ್ಟೆ ಆಧರಿತ ಜೀವನ ವಿಧಾನದ ಈ ದಿನಗಳಲ್ಲಿ ಹಣವೆನ್ನುವುದು ಎಲ್ಲರ ಬದುಕಿನ ಕೇಂದ್ರದಲ್ಲಿದೆ. ಇದಕ್ಕೆ ನಗರ ಹಾಗೂ ಗ್ರಾಮೀಣ ಎನ್ನುವ ವ್ಯತ್ಯಾಸಗಳಿಲ್ಲ, ಪ್ರಮಾಣದಲ್ಲಿ ಕೊಂಚಮಟ್ಟಿಗಿನ ಅಂತರವಿರಬಹುದು ಅಷ್ಟೇ. ಹೀಗೆ ಹಣದ ಹರಿವು ಮತ್ತು ಅದರ ಅವಲಂಬನೆಗಳು ಹೆಚ್ಚಾದಂತೆಲ್ಲಾ ವ್ಯವಸ್ಥೆಯಲ್ಲಿ ಕಪ್ಪುಬಿಳುಪು ಎನ್ನುವ ವರ್ಗೀಕರಣವೇ ಕ್ರಮೇಣ ಅಪ್ರಸ್ತುತವೂ, ಗೊಂದಲಮಯವೂ ಆಗತೊಡಗುತ್ತದೆ. ಹಣದ ಮೌಲ್ಯವು ಪೂರ್ವನಿರ್ಧರಿತವಾಗಿದ್ದು ಅದು ತನ್ನ ಮೌಲ್ಯವನ್ನು ತನ್ನನ್ನು ಗಳಿಸಿದ, ದುಡಿದ ಮಾರ್ಗದಿಂದಾಗಿ ಪಡೆಯುವುದಿಲ್ಲ. ಶ್ರಮಿಕರು, ಜ್ಞಾನಿಗಳು, ಪ್ರತಿಭಾವಂತರು, ವಯೋವೃದ್ಧರು, ವಿಶೇಷಚೇತನರು ಕಷ್ಟಪಟ್ಟು ದುಡಿದ ಹಣಕ್ಕೂ, ಭ್ರಷ್ಟವೂ, ಅನೈತಿಕವೂ, ವಾಮಮಾರ್ಗದಿಂದಲೂ ಗಳಿಸಿದ ಹಣಕ್ಕೂ ಮೌಲ್ಯದಲ್ಲಿ ಯಾವುದೇ ವ್ಯತ್ಯಾಸಗಳಿರುವುದಿಲ್ಲ. ಇದು ಆಧುನಿಕ ಅರ್ಥವ್ಯವಸ್ಥೆಯಲ್ಲಿನ ದೊಡ್ಡ ನ್ಯೂನತೆ. ಹಣವೆನ್ನುವುದು ಗುಣಗ್ರಾಹಿಯಾಗಿಲ್ಲ. ಜಾತಿ, ಧರ್ಮ, ಜನಾಂಗ, ಬಣ್ಣಗಳ ಆಧಾರದಲ್ಲಿ ಶ್ರೇಷ್ಠತೆಯ ವ್ಯಸನ ಮೆರೆಯುವ ನಮ್ಮ ನಾಗರಿಕತೆಗಳು, ಇದಕ್ಕೆ ಬದಲಾಗಿ ಮೌಲ್ಯ, ನೈತಿಕತೆಯ ಹೆಸರಿನಲ್ಲಿ ಶ್ರೇಷ್ಠತೆಯ ವ್ಯಸನ ಬೆಳೆಸಿಕೊಂಡಿದ್ದರೆ ಹಣಕ್ಕೆ ಗುಣಗ್ರಾಹಿಯಾಗುವ ಅಗತ್ಯ ಖಂಡಿತ ಬರುತ್ತಿತ್ತು. ಆದರೆ, ವಾಸ್ತವ ಹಾಗಿಲ್ಲ. ಹಣ ಇಂದು ನಮ್ಮೆಲ್ಲರ ಬದುಕಿನ ಕೇಂದ್ರದಲ್ಲಿದೆ, ನಮ್ಮೆಲ್ಲರ ಜೀವನಾವಶ್ಯಕತೆಗಳನ್ನು, ಬದುಕು, ಭವಿಷ್ಯವನ್ನು ನಿರ್ಧರಿಸುವ ಪ್ರಖರ ಮಾಧ್ಯಮವಾಗಿದೆ. ಹೀಗೆ ನಮ್ಮೆಲ್ಲರ ಬದುಕನ್ನು ನಿಯಂತ್ರಿಸುವ, ನಿರ್ಧರಿಸುವ ಹಣಕ್ಕೆ ನ್ಯಾಯನೀತಿಯ ಪರಿವೆಯೇ ಇಲ್ಲ! ಗುಣಕ್ಕೆ, ಮೌಲ್ಯಗಳಿಗೆ ಕುರುಡಾಗಿರುವ ಇಂತಹ ಹಣವನ್ನು ಕೇಂದ್ರದಲ್ಲಿರಿಸಿಕೊಂಡೇ ನವ ನಾಗರಿಕತೆಗಳು ಅಸ್ತಿತ್ವ ಕಟ್ಟಿಕೊಂಡಿವೆ. ದೇಶ, ಮಾರುಕಟ್ಟೆಗಳು ಉಸಿರಾಡುತ್ತಿವೆ. ಇಂದು ಇಡೀ ಜಾಗತಿಕ ಅರ್ಥವ್ಯವಸ್ಥೆಯವೆನ್ನುವುದು ಹೃದಯಹೀನವೂ, ಅಮಾನವೀಯವೂ ಆಗಿ ಪರಿವರ್ತಿತವಾಗಲು ಈ ಲೋಪವೇ ಕಾರಣ. ಈ ಸಂಕೀರ್ಣತೆಗಳನ್ನು ಅರಿಯದೆ ಭ್ರಷ್ಟಾಚಾರದ ಬಗ್ಗೆ ತೆಳುಗ್ರಹಿಕೆಯಲ್ಲಿ ಮಾತನಾಡುವುದು ಯಾವತ್ತೂ ಅಪಾಯಕಾರಿ.

ಇಷ್ಟೆಲ್ಲಾ ಹೇಳಲು ಕಾರಣ, ಇಂದು ಮಾನವೀಯ, ಜನಪರ, ಜನಮುಖಿ ಚಿಂತನೆಗಳುಳ್ಳವರಲ್ಲಿ ಯಾವ ವಿಚಾರಗಳಲ್ಲಿ ಒಮ್ಮತ ಮೂಡಬೇಕಿತ್ತೋ ಅದು ಸಾಧ್ಯವಾಗದೆ ಹೋಗಿರುವುದರಿಂದಾಗಿ. ಬಹುತೇಕ ಸಂದರ್ಭಗಳಲ್ಲಿ ಹಣದ ವಿಚಾರದಲ್ಲಿ ಕೆಲವೊಂದು ಸೀಮಿತ ಕಲ್ಪನೆಗಳಿಂದ ನಾವು ವ್ಯವಹರಿಸುವುದು ಇದಕ್ಕೆಲ್ಲಾ ಕಾರಣವಾಗುತ್ತದೆ. ಇಂದು ಸಮಾಜದ ಕೇಂದ್ರಕ್ಕೆ ಮತ್ತೆ ಮಾನವೀಯ ಮೌಲ್ಯಗಳನ್ನು ತರಬೇಕೆಂದರೆ ಗುಣಗ್ರಾಹಿಯಾಗಿಲ್ಲದ ಹಣದ ವಿಚಾರವಾಗಿ ಅತಿ ಎನಿಸುವಷ್ಟು ಪ್ರಾಮಾಣಿಕವಾಗಿಯೂ, ಕಟುವಾಗಿಯೂ ವರ್ತಿಸುವಂತೆ ಮಾಡಿರುವ ಸ್ಥಾಪಿತ ಮೌಲ್ಯಗಳ ಬಗ್ಗೆಯೇ ನಾವು ಸಂಶಯವನ್ನಿರಿಸಿಕೊಳ್ಳಬೇಕಿದೆ. ಈ ವಿಚಾರದಲ್ಲಿ ನಮ್ಮ ಚಿಂತನೆಗಳು ಹೆಚ್ಚು ಉದಾರವಾಗಬೇಕಿದೆ. ಉತ್ತಮ ಉದ್ದೇಶಗಳು, ಕೆಲಸಕ್ಕಾಗಿ ಹಣ ಹಾಗೂ ಶ್ರಮವನ್ನು ಹೇಗೆ ಒಗ್ಗೂಡಬೇಕು ಎನ್ನುವ ವಿಚಾರದಲ್ಲಿ ಶ್ರೇಷ್ಠತೆಯ ವ್ಯಸನಗಳಿಂದ ನಾವಿಂದು ಹೊರಬರಬೇಕಿದೆ. ಉತ್ತಮ ಉದ್ದೇಶ, ದೂರದರ್ಶಿತ್ವ, ಸಮತೆಯಲ್ಲಿ ನಂಬಿಕೆಯಿಟ್ಟವರನ್ನು ಅಧಿಕಾರದ ಕೇಂದ್ರಕ್ಕೆ ತರಲು ಲಾಬಿ ಮಾಡುವುದು, ಉತ್ತಮ ಧ್ಯೇಯೋದ್ದೇಶಗಳ ಸಾಕಾರಕ್ಕಾಗಿ ಸಂಪನ್ಮೂಲ ಸಂಗ್ರಹದ ವಿಚಾರದಲ್ಲಿ ಅವಾಸ್ತವವೂ, ಅಪ್ರಾಯೋಗಿಕವೂ ಆಗಿರದೆ ಸಮಾಜಕಂಟಕವಲ್ಲದ ಮಾರ್ಗಗಳ ಬಗ್ಗೆ ಪುನರ್ ಪರಿಶೀಲಿಸುವುದು ಇಂದಿನ ಅಗತ್ಯವಾಗಿದೆ. ಒಳಿತನ್ನು ಕೆಟ್ಟದ್ದರಿಂದ ಗೆಲ್ಲಿಸಲು ಸಾಧ್ಯವಿಲ್ಲ ಎನ್ನುವುದು ದಿಟ. ಹಾಗೆಂದು, ಒಳಿತನ್ನು ಒಳಿತಿನಿಂದಲೇ ಸೋಲಿಸಬಾರದು ಕೂಡ. ವಿಚಾರಶೀಲರಿಗೆ ಇವೆರಡರ ನಡುವೆ ಸಮತೋಲನ ಸಾಧಿಸುವುದು ಕಷ್ಟವಾಗಲಾರದು.

ಒಳಿತಿನ ಬೇರುಗಳು ಸಮಾಜದಲ್ಲಿ ಆಳವಾಗಬೇಕೆಂದರೆ, ಮೊದಲು ಉತ್ತಮರ ಪರವಾಗಿ ಪ್ರಜ್ಞಾವಂತರೆಲ್ಲರೂ ಸಕಾರಾತ್ಮಕವಾಗಿ ಲಾಬಿ ಮಾಡಬೇಕಿದೆ. ಸಜ್ಜನರ ಒಳ್ಳೆಯತನಕ್ಕೆ ಪ್ರಾಮಾಣಿಕತೆಯ ಬೇಡಿ, ಸಲಾಕೆಗಳನ್ನು ಹಾಕಿ, ವಸ್ತುನಿಷ್ಠತೆಯ ಲಕ್ಷ್ಮಣರೇಖೆಯನ್ನೆಳೆದು ಪಂಜರದಲ್ಲಿರಿಸಿ ಆ ಮೂಲಕ ಅಧಿಕಾರ ಕೇಂದ್ರಗಳಿಗೆ, ಆಯಕಟ್ಟಿನ ಸ್ಥಳಗಳಿಗೆ ಒತ್ತರಿಸಿಕೊಳ್ಳುವ ದುಷ್ಟರು, ಧನದಾಹಿಗಳು, ಅಯೋಗ್ಯರನ್ನು ದೂರವಿರಿಸಬೇಕಿದೆ. ಉತ್ತಮರು, ಪ್ರತಿಭಾವಂತರು, ಮಾನವೀಯ ಮೌಲ್ಯಗಳುಳ್ಳವರನ್ನು ಅಧಿಕಾರ ಹಾಗೂ ಸಂಪನ್ಮೂಲಗಳಿರುವೆಡೆ ಕೂರಿಸಿ ರಚನಾತ್ಮಕ ಹಾಗೂ ಮಾನವೀಯ ಕೆಲಸಗಳಿಗೆ ಹೆಚ್ಚೆಚ್ಚು ಶಕ್ತಿ, ಸಂಪನ್ಮೂಲಗಳನ್ನು ಹರಿಸಬೇಕಿದೆ. ಇದು ಸಾಧ್ಯವಾಗಬೇಕೆಂದರೆ ನಾವುಗಳು ಅವಾಸ್ತವ ನೆಲೆಗಳಲ್ಲಿ ರೂಢಿಸಿಕೊಂಡಿರುವ ಶ್ರೇಷ್ಠತೆಯ ವ್ಯಸನವನ್ನು ಬದಿಗಿರಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...

ಪ.ಬಂಗಾಳವನ್ನು ಗುರಿಯಾಗಿಸಲಾಗುತ್ತಿದೆ, ಅಸ್ಸಾಂನಲ್ಲಿ ಎಸ್‌ಐಆರ್‌ ಏಕಿಲ್ಲ? : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಗುರಿಯಾಗಿಸಲಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಫೆ.4) ಆರೋಪಿಸಿದ್ದು, ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿ ಏಕೆ ಎಸ್‌ಐಆರ್ ನಡೆಸುತ್ತಿಲ್ಲ ಎಂಬುವುದಾಗಿ...

ತಮಿಳುನಾಡು| ದಲಿತ ಯುವಕನನ್ನು ಪ್ರೀತಿಸುತ್ತಿದ್ದ ಯುವತಿ ಅನುಮಾನಾಸ್ಪದ ಸಾವು; ಮರ್ಯಾದೆಗೇಡು ಹತ್ಯೆ ಶಂಕೆ

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಸಾವು ಮರ್ಯಾದಾ ಹತ್ಯೆಯ ಗಂಭೀರ ಆರೋಪಗಳನ್ನು ಹುಟ್ಟುಹಾಕಿದೆ. ಸಾವಿನ ಆರಂಭಿಕ ತನಿಖೆಯು ಆತ್ಮಹತ್ಯೆಯತ್ತ ಬೊಟ್ಟು ಮಾಡುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ಸಾವಿಗೆ ಅಂತಿಮ ಕಾರಣ...

‘ರಾಜ್ಯವನ್ನು ನಿರ್ಲಕ್ಷಿಸಲಾಗಿದೆ’ : ಕೇಂದ್ರ ಬಜೆಟ್‌ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ವಿರುದ್ದ ಕೇರಳ ವಿಧಾನಸಭೆ ನಿರ್ಣಯ ಅಂಗೀಕರಿಸಿದ್ದು, ರಾಜ್ಯವನ್ನು 'ನಿರ್ಲಕ್ಷಿಸಲಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದೆ. ಬಜೆಟ್‌ನಲ್ಲಿ ಕೇರಳದ ದೀರ್ಘಕಾಲದ ಬೇಡಿಕೆಗಳನ್ನು ಪರಿಗಣಿಸದೆ ಇರುವುದು ಮತ್ತು ರಾಜ್ಯಕ್ಕೆ ನೀಡಬೇಕಾದ ನ್ಯಾಯಯುತ...

ದೇವಾಲಯ-ಶಾಲೆಗಳ ಬಳಿ ಇರುವ ಮಾಂಸ ಮಳಿಗೆಗಳ ಕುರಿತು ಏಕರೂಪ ನೀತಿ ರೂಪಿಸಿ: ತೆಲಂಗಾಣ ಹೈಕೋರ್ಟ್

ಸಾರ್ವಜನಿಕ ಭಾವನೆ, ನೈರ್ಮಲ್ಯ, ಸಂಚಾರ ನಿರ್ವಹಣೆ, ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಕಳವಳಗಳನ್ನು ಉಲ್ಲೇಖಿಸಿ, ದೇವಾಲಯಗಳು, ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳಿಂದ 100 ಮೀಟರ್ ಒಳಗೆ ಮಾಂಸ ಮತ್ತು ಮಾಂಸಾಹಾರಿ ಆಹಾರ ಮಾರಾಟವನ್ನು...

ಎಸ್‌ಐಆರ್ ಅರ್ಜಿ ವಿಚಾರಣೆ : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ದ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬುಧವಾರ (ಫೆ.4) ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ ಮಾಡುತ್ತಿದ್ದಾರೆ....

ಆರ್‌ಕಾಮ್ ಬ್ಯಾಂಕ್ ವಂಚನೆ ತನಿಖೆ: ಇಡಿ, ಸಿಬಿಐಗೆ ಸುಪ್ರೀಂ ಕೋರ್ಟ್ ಛೀಮಾರಿ; ದೇಶ ಬಿಟ್ಟು ಹೋಗದಂತೆ ಅನಿಲ್ ಅಂಬಾನಿಗೆ ತಾಕೀತು 

ರಿಲಯನ್ಸ್ ಕಮ್ಯುನಿಕೇಷನ್ಸ್, ಅದರ ಸಮೂಹ ಕಂಪನಿಗಳು ಮತ್ತು ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಒಳಗೊಂಡ ಬೃಹತ್ ಪ್ರಮಾಣದ ಬ್ಯಾಂಕ್ ವಂಚನೆ ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಜಾರಿ...

ಅಸ್ಸಾಂ ಮುಖ್ಯಮಂತ್ರಿಯಿಂದ ‘100 ಪ್ರಕರಣಗಳ ಬೆದರಿಕೆ’: ‘ಇದು ಮಾನವ ಹಕ್ಕುಗಳ ರಕ್ಷಕರನ್ನು ಮೌನಗೊಳಿಸುವ ಪ್ರಯತ್ನ’ ಎಂದ ಹರ್ಷ್ ಮಂದರ್ 

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಾನವ ಹಕ್ಕುಗಳ ಹೋರಾಟಗಾರ ಹರ್ಷ್ ಮಂದರ್ ಅವರ ವಿರುದ್ಧ "ಕನಿಷ್ಠ 100 ಪ್ರಕರಣಗಳು" ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಾನವ ಹಕ್ಕುಗಳ...

ಅದಾನಿ–ಲಿಯೊನಾರ್ಡೊ ಒಪ್ಪಂದ| ಹೊಸ ರೂಪದಲ್ಲಿ ಭಾರತಕ್ಕೆ ಮರಳಿದ ಕಪ್ಪುಪಟ್ಟಿಗೆ ಸೇರಿದ್ದ ಅಗಸ್ಟಾ ವೆಸ್ಟ್‌ಲ್ಯಾಂಡ್!

ಅದಾನಿ ಡಿಫೆನ್ಸ್ ಆಂಡ್ ಏರೋಸ್ಪೇಸ್ ಮತ್ತು ಇಟಲಿಯ ಲಿಯೊನಾರ್ಡೊ ಕಂಪನಿಗಳು ಮಂಗಳವಾರ (ಫೆ.3) ಕಾರ್ಯತಂತ್ರದ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದು, ಭಾರತದ ಹೆಲಿಕಾಪ್ಟರ್ ಉತ್ಪಾದನಾ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಅಭಿವೃದ್ಧಿಪಡಿಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ...