ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಮನೆ ಮತ್ತು ಕಾಲೇಜುಗಳ ಮೇಲೆ ಐಟಿ ದಾಳಿ ನಡೆದಿತ್ತು. ನಂತರ ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಮನೆ ಮೇಲೂ ಐಟಿ ತಂಡ ರೇಡ್ ನಡೆಸಿ, ವಿಚಾರಣೆ ನಡೆಸಿತ್ತು. ಇದರ ಬೆನ್ನಲ್ಲೇ ಇಂದು ಬೆಳಗ್ಗೆ ರಮೇಶ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ತುಮಕೂರು ಜಿಲ್ಲೆಯ ಕುಣಿಗಲ್ ಮೂಲದ ರಮೇಶ್, ಕಾಂಗ್ರೆಸ್ ನಾಯಕ, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರ ಆಪ್ತ ಸಹಾಯಕರಾಗಿದ್ದರು ಎಂದು ತಿಳಿದು ಬಂದಿದೆ. ಬೆಂಗಳೂರಿನ ಜ್ಞಾನಭಾರತಿ ಆವರಣದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡು ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐಟಿ ದಾಳಿಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
‘ನಾನು ಬಡವನಾಗಿದ್ದು, ನಿಯತ್ತಿನಿಂದ ಬದುಕುತ್ತಿದ್ದೇನೆ. ಈಗಷ್ಟೇ ಹೊಸ ಮನೆ ನಿರ್ಮಾಣ ಮಾಡುತ್ತಿದ್ದೆ. ಆದರೆ ನನ್ನ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅವರು ಕೇಳುತ್ತಿರುವ ಪ್ರಶ್ನೆಗಳನ್ನು ಎದುರಿಸಲು ಆಗುತ್ತಿಲ್ಲ. ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂದು ಆಪ್ತರೊಬ್ಬರಿಗೆ ಹೇಳಿದ್ದಾರೆ. ನಂತರ ಮೊಬೈಲ್ ಸ್ವಿಚ್ಛ್ ಆಫ್ ಮಾಡಿಕೊಂಡಿದ್ದಾರೆ ಎಂದು ಖಾಸಗಿ ಸುದ್ದಿವಾಹಿನಿಯೊಂದು ವರದಿ ಮಾಡಿದೆ. ಈ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ರಾಜಕೀಯ ನಾಯಕರು ಅಕ್ರಮವಾಗಿ ಹಣ ಪೇರಿಸಿಟ್ಟುಕೊಂಡ ಪರಿಣಾಮ, ಅವರ ಬಳಿ ಕೂಲಿ ಮಾಡುತ್ತಿದ್ದ ಬಡವರ ಬಲಿ.