Homeಕರ್ನಾಟಕ'ಇಷ್ಟೊಂದು ಮಂದಿ ಶೇ.100 ಅಂಕ ಗಳಿಸುವುದು ಅಸಾಧ್ಯ..'; ನೀಟ್ ಫಲಿತಾಂಶದ ಕುರಿತು ಆಶ್ಚರ್ಯ ವ್ಯಕ್ತಪಡಿಸಿದ ಸಿದ್ದರಾಮಯ್ಯ

‘ಇಷ್ಟೊಂದು ಮಂದಿ ಶೇ.100 ಅಂಕ ಗಳಿಸುವುದು ಅಸಾಧ್ಯ..’; ನೀಟ್ ಫಲಿತಾಂಶದ ಕುರಿತು ಆಶ್ಚರ್ಯ ವ್ಯಕ್ತಪಡಿಸಿದ ಸಿದ್ದರಾಮಯ್ಯ

- Advertisement -
- Advertisement -

ಹರಿಯಾಣದ 67 ಅಭ್ಯರ್ಥಿಗಳಿಗೆ 720ಕ್ಕೆ 720 ಅಂಕ ಗಳಿಸಿರುವ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ವಿರೋಧ ವ್ಯಕ್ತಪಡಿಸಿದ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಫಲಿತಾಂಶದ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ನೀಟ್‌ ಫಲಿತಾಂಶದಲ್ಲಿ ಭಾರಿ ಅಕ್ರಮದ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು, ಅವರ ಪೋಷಕರಲ್ಲಿ ಮೂಡಿರುವ ಆತಂಕಕ್ಕೆ, ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಎನ್‌ಟಿಎ ಆಗಲಿ, ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರವಾಗಲೀ ಉತ್ತರಿಸದೆ ಲಕ್ಷಾಂತರ ಯುವಜನರ ಭವಿಷ್ಯವನ್ನು ಮಣ್ಣುಪಾಲು ಮಾಡಲು ಹೊರಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನೀಟ್ (NEET) ಪರೀಕ್ಷೆಯಲ್ಲಿ 67 ಅಭ್ಯರ್ಥಿಗಳಿಗೆ 720ಕ್ಕೆ 720 ಅಂಕಗಳು ಬಂದಿವೆ. ಅಂದರೆ 100% ಅಂಕಗಳು‌ ಬಂದಿದೆ. ಆದರೆ, ಈ ಹಿಂದೆ ಬಂದ ಟಾಪರ್‌ಗಳ ಸಂಖ್ಯೆ ಎಷ್ಟು? ಎಂಬುದನ್ನು ಹೋಲಿಕೆ ಮಾಡಿ ನೋಡಿದರೆ ಈ ಬಾರಿಯ ಫಲಿತಾಂಶದಲ್ಲಿ ಅಕ್ರಮದ ವಾಸನೆ ಬಡಿಯುತ್ತದೆ. 2019ರಲ್ಲಿ ಒಬ್ಬ ವಿದ್ಯಾರ್ಥಿ, 2020ರಲ್ಲಿ ಒಬ್ಬ, 2021ರಲ್ಲಿ ಮೂವರು, 2022ರಲ್ಲಿ ಒಬ್ಬ, 2023ರಲ್ಲಿ ಇಬ್ಬರು ವಿದ್ಯಾರ್ಥಿಗಳು ನೂರಕ್ಕೆ ನೂರು ಪ್ರತಿಶತ ಅಂಕ ಪಡೆದಿದ್ದರೆ ಈ ವರ್ಷ 67 ವಿದ್ಯಾರ್ಥಿಗಳು ಟಾಪರ್‌ಗಳಾಗಿ ಹೊರಹೊಮ್ಮಿದ್ದಾರೆ” ಎಂದು ವಿವರಿಸಿದ್ದಾರೆ.

“ನೀಟ್‌ ಪರೀಕ್ಷೆಯಲ್ಲಿ ಪ್ರತಿ ತಪ್ಪು ಉತ್ತರಕ್ಕೆ ಋಣಾತ್ಮಕ ಅಂಕಗಳಿರುವ ಕಾರಣ ಇಷ್ಟೊಂದು ಮಂದಿ ನೂರು ಪ್ರತಿಶತ ಅಂಕ ಗಳಿಸುವುದು ಅಸಾಧ್ಯವೇ ಸರಿ. ಇದು ಕಾಕತಾಳೀಯವೋ ಅಥವಾ ಹೊಸ ಪ್ರಯೋಗವೋ? ಇದನ್ನು ಮೋದಿ ಸರ್ಕಾರವೇ ಸ್ಪಷ್ಟಪಡಿಸಬೇಕು” ಎಂದು ಆಗ್ರಹಿಸಿದ್ದಾರೆ.

“ನೀಟ್‌ನ 67 ಟಾಪರ್‌ಗಳಲ್ಲಿ 44 ಮಂದಿ ‘ಗ್ರೇಸ್‌ಮಾರ್ಕ್‌’ ಆಧಾರದ ಮೇಲೆ ಟಾಪರ್‌ಗಳಾಗಿದ್ದಾರೆ. ಗ್ರೇಸ್ ಅಂಕಗಳ ಆಧಾರದ ಮೇಲೆ ಇಷ್ಟೊಂದು ಪರೀಕ್ಷಾರ್ಥಿಗಳು ಟಾಪರ್‌ಗಳಾದಾಗ, ‘ಮಾರ್ಕಿಂಗ್ ಪ್ರಕ್ರಿಯೆ’ ಮತ್ತು ‘ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆ ಮತ್ತು ಸಿಂಧುತ್ವ’ದ ಮೇಲೆ ಪ್ರಶ್ನೆ ಹುಟ್ಟುಹಾಕುವುದಿಲ್ಲವೆ? ಇನ್ನೊಂದು ಅಚ್ಚರಿಯ ವಿಷಯವೇನೆಂದರೆ 62 ರಿಂದ 69 ರವರೆಗಿನ ಸರಣಿ ಸಂಖ್ಯೆಗಳೊಂದಿಗೆ ನೀಟ್‌ ಟಾಪರ್‌ಗಳು ಹರಿಯಾಣದ ಫರಿದಾಬಾದ್‌ನಲ್ಲಿರುವ ಒಂದೇ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದವರು. ಈ ಪೈಕಿ 6 ಜನರು 720/720 ಅಂಕಗಳೊಂದಿಗೆ ನೀಟ್‌ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ ಮತ್ತು 718 ಮತ್ತು 719 ಅಂಕಗಳನ್ನು 2 ಮಂದಿ ಪಡೆದಿದ್ದಾರೆ” ಎಂದು ಹೇಳಿದ್ದಾರೆ.

“ಮೇಲ್ನೋಟಕ್ಕೆ ಪರೀಕ್ಷಾ ಅಕ್ರಮ ನಡೆದಿರುವುದು ಕಂಡುಬಂದರೂ ಎನ್‌ಟಿಎ ಮತ್ತು ಮೋದಿ ಸರ್ಕಾರ ಈ ಫಲಿತಾಂಶವನ್ನು ಸಮರ್ಥಿಸುತ್ತಿದೆ. ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡಲು ಹೊರಟಿರುವ ಕೇಂದ್ರ ಬಿಜೆಪಿ ಸರ್ಕಾರವು ಚುನಾವಣಾ ಸೋಲಿನಿಂದಲೂ ಪಾಠ ಕಲಿತಂತೆ ಕಾಣುತ್ತಿಲ್ಲ” ಎಂದಿದ್ದಾರೆ.

“ಫರಿದಾಬಾದ್‌ನ ನೀಟ್‌ ಪರೀಕ್ಷಾ ಕೇಂದ್ರದಲ್ಲಿ ತಪ್ಪು ಪತ್ರಿಕೆಯನ್ನು ವಿತರಿಸಲಾಗಿತ್ತು. ಇದರಿಂದಾಗಿ ಅಭ್ಯರ್ಥಿಗಳು 45 ನಿಮಿಷಗಳನ್ನು ಕಳೆದುಕೊಳ್ಳವಂತಾಯಿತು. ಹಾಗಾಗಿ ಈ ಸಮಯಕ್ಕೆ ಪ್ರತಿಯಾಗಿ ಎನ್‌ಟಿಎ ಈ ಕೇಂದ್ರದ ಅಭ್ಯರ್ಥಿಗಳಿಗೆ ‘ಗ್ರೇಸ್‌ಮಾರ್ಕ್‌’ ನೀಡಿದೆ. ಇದು ನೂರು ಪ್ರತಿಶತ ಅಂಕ ಗಳಿಕೆಗೆ ಕಾರಣ ಎಂದು ಕೇಂದ್ರ ಸರ್ಕಾರ ಸಮಜಾಯಿಷಿ ನೀಡುತ್ತಿದೆ” ಎಂದು ಹೇಳಿದ್ದಾರೆ.

“ಎನ್‌ಟಿಎ ಪ್ರಾಸ್ಪೆಕ್ಟಸ್, ನೀಟ್ ಬ್ರೋಷರ್ ಮತ್ತು ಸರ್ಕಾರಿ ಸೂಚನೆಗಳಲ್ಲಿ ಈ ರೀತಿಯಲ್ಲಿ ಗ್ರೇಸ್ ಅಂಕಗಳನ್ನು ನೀಡುವ ಅವಕಾಶ ಇರುವ ಕುರಿತು ಯಾವುದೇ ಮಾಹಿತಿ ಇಲ್ಲ. ಹಾಗಾದರೆ ಈ ಗ್ರೇಸ್ ಮಾರ್ಕ್‌ಗಳನ್ನು ಯಾವ ಆಧಾರದ ಮೇಲೆ ನೀಡಲಾಗಿದೆ? ಈ ಬಗ್ಗೆ ಮೋದಿ ಸರ್ಕಾರದಿಂದ ಸಾರ್ವಜನಿಕ ಸೂಚನೆ ಅಥವಾ ಜಾಹೀರಾತು ನೀಡಲಾಗಿದೆಯೇ? ಬೇರೆ ಯಾವುದಾದರೂ ಕೇಂದ್ರದಲ್ಲಿ ಇದೇ ರೀತಿ ಗ್ರೇಸ್ ಮಾರ್ಕ್ಸ್ ನೀಡಲಾಗಿದೆಯೇ? ಎಂಬಿತ್ಯಾದಿ ಮಾಹಿತಿಯನ್ನು ಆತಂಕದಲ್ಲಿರುವ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ನೀಡಬೇಕು” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

“2019 ರಿಂದ 2023 ರವರೆಗೆ, ನೀಟ್‌ ಪರೀಕ್ಷೆಯಲ್ಲಿ 600 ಅಂಕಗಳನ್ನು ಗಳಿಸಿದವರು ಕೈಗೆಟುಕುವ ಶುಲ್ಕದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಸುಲಭವಾಗಿ ಪ್ರವೇಶ ಪಡೆದಿದ್ದರು. ಈ ವರ್ಷ ನೀಟ್ ಪರೀಕ್ಷೆಯ ಅಂಕಮಿತಿಯು 137 ಅಂಕಗಳಿಂದ 164 ಕ್ಕೆ ಏರಿಕೆಯಾಗಿದೆ. ಈ ಬಾರಿ 660 ಅಂಕ ಗಳಿಸಿದ ಅಭ್ಯರ್ಥಿಗಳು ಮಾತ್ರ ಕೈಗೆಟಕುವ ಶುಲ್ಕದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪಡೆಯಬಹುದು. ನೀಟ್ ಪರೀಕ್ಷೆಗೆ ಹಾಜರಾಗಿರುವ 24 ಲಕ್ಷಕ್ಕೂ ಹೆಚ್ಚು ಯುವಕರು ಬಹುತೇಕ ಬಡ-ಮಧ್ಯಮ ವರ್ಗದ ಕುಟುಂಬಗಳಿಂದ ಬಂದವರು. ವೈದ್ಯರಾಗುವ ಹಂಬಲ ಹೊಂದಿದವರು. ಆದರೆ ಈ ಪರೀಕ್ಷಾ ಗೊಂದಲದಿಂದಾಗಿ ಲಕ್ಷಾಂತರ ಯುವಕರ ಕನಸುಗಳು ನುಚ್ಚುನೂರಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಿಗದಿತ ವೇಳಾಪಟ್ಟಿಯಂತೆ ನೀಟ್ ಪರೀಕ್ಷೆಯನ್ನು ಮೇ 5, 2024 ರಂದು ನಡೆಸಲಾಯಿತು ಮತ್ತು ಅದರ ಫಲಿತಾಂಶವನ್ನು ಜೂನ್ 14, 2024 ರಂದು ಪ್ರಕಟವಾಗಬೇಕಿತ್ತು. ಆದರೆ, ಇದ್ದಕ್ಕಿದ್ದಂತೆ ಫಲಿತಾಂಶವನ್ನು ಜೂನ್ 4, 2024 ರಂದು ಪ್ರಕಟಿಸಲಾಯಿತು. ಇದೇ ದಿನ ದೇಶದ ಸಂಸತ್ ಚುನಾವಣೆಯ ಫಲಿತಾಂಶ ಬಂದಿದ್ದು, ಇಡೀ ದೇಶವೇ ಲೋಕಸಭೆ ಚುನಾವಣೆಯ ಫಲಿತಾಂಶವನ್ನು ಕೇಳುವುದರಲ್ಲಿ ನಿರತವಾಗಿತ್ತು. ಈ ಗದ್ದಲದಲ್ಲಿ ನೀಟ್‌ ಫಲಿತಾಂಶವನ್ನು ತರಾತುರಿಯಲ್ಲಿ ಬಿಡುಗಡೆ ಮಾಡಿದ್ದು, ಪರೀಕ್ಷೆಯ ಅಕ್ರಮಗಳನ್ನು ಮುಚ್ಚಿಹಾಕಬಹುದು ಎಂಬ ಕಾರಣಕ್ಕಾಗಿಯೇ? ಅಲ್ಲದಿದ್ದರೆ ತರಾತುರಿಯಲ್ಲಿ ಫಲಿತಾಂಶ ಬಿಡುಗಡೆ ಮಾಡಿದ್ದು ಯಾಕೆ” ಎಂದು ಅವರು ಪ್ರಶ್ನಿಸಿದ್ದಾರೆ.

“ಕೇಂದ್ರ ಸರ್ಕಾರ ಮತ್ತು ಎನ್‌ಟಿಎ ಮಾಡಿರುವ ಯಡವಟ್ಟಿನಿಂದಾಗಿ ನೀಟ್ ಫಲಿತಾಂಶ ಪ್ರಕಟವಾದ ನಂತರ ದೌಸಾದಲ್ಲಿ ಅಜಿತ್ ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಧ್ಯಪ್ರದೇಶದ ರೇವಾ ಯುವತಿ ಬಗೀಶಾ ತಿವಾರಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬರೀ ವಿವಾದಗಳಿಂದಲೇ ತುಂಬಿರುವ ಮತ್ತು ಯುವಜನರು ಆತ್ಮಹತ್ಯೆಗೆ ಶರಣಾಗುವಂತೆ ಮಾಡಿರುವ ಎನ್‌ಟಿಎಯ ನೀಟ್ ಪರೀಕ್ಷಾ ವ್ಯವಸ್ಥೆ ನಿಜಕ್ಕೂ ಎಂತಹದ್ದು ಎಂಬ ಪ್ರಶ್ನೆ ಕಾಡಲಾರಂಭಿಸಿದೆ” ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

“ನರೇಂದ್ರ ಮೋದಿಯವರ ಸರ್ಕಾರ ರಚನೆ ಮತ್ತು ಸಂಸದರ ಖರೀದಿಯ ಕಸರತ್ತು ಮುಗಿದಿದ್ದರೆ ಮತ್ತಷ್ಟು ಯುವಜನರು ಪ್ರಾಣ ಕಳೆದುಕೊಳ್ಳುವ ಮುನ್ನ ಪರೀಕ್ಷಾ ಅಕ್ರಮದ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಮತ್ತು ನೊಂದ ಪರೀಕ್ಷಾರ್ಥಿಗಳ ಅಹವಾಲು ಆಲಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸುತ್ತೇನೆ” ಎಂದು ಸಿಎಂ ಒತ್ತಾಯಿಸಿದ್ದಾರೆ.

ಇದನ್ನೂ ಓದಿ; ‘ತಮಿಳುನಾಡಿನಲ್ಲಿ ನೀಟ್ ಪರೀಕ್ಷೆ ರದ್ದುಗೊಳಿಸಿ..’; ಡಿಎಂಕೆ, ಎಐಎಡಿಎಂಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...